Home Blog

ಆಗಸ್ಟ್ 29 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ನಟ ಚಿಕ್ಕಣ್ಣ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಇದೀಗ ತಮ್ಮ ಜೀವನದ ಹೊಸ ಪಯಣ ಆರಂಭಿಸಲು ಸಜ್ಜಾಗಿದ್ದಾರೆ. ಮಂಡ್ಯ ಮೂಲದ ಪಾವನಾ ಅವರೊಂದಿಗೆ ಚಿಕ್ಕಣ್ಣ ಅವರ ವಿವಾಹ ನಿಶ್ಚಯವಾಗಿದ್ದು, ಮದುವೆ ದಿನಾಂಕವೂ ಅಂತಿಮವಾಗಿದೆ.

ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಆಗಸ್ಟ್ 29 ಮತ್ತು 30ರಂದು ಅದ್ಧೂರಿ ವಿವಾಹ ಸಮಾರಂಭ ನಡೆಯಲಿದೆ. ಈ ಮದುವೆ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ನಟ-ನಟಿಯರು, ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು ಸೇರಿದಂತೆ ಹಲವು ಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಪಾವನಾ ಅವರು ಚಿಕ್ಕಣ್ಣ ಅವರ ಬಾಳ ಸಂಗಾತಿಯಾಗಲಿದ್ದಾರೆ. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ ಅವರೊಂದಿಗೆ ಚಿಕ್ಕಣ್ಣ ಹೊಸ ಜೀವನ ಆರಂಭಿಸಲಿದ್ದಾರೆ. 2025ರ ಆಗಸ್ಟ್‌ನಲ್ಲೇ ಇವರ ವಿವಾಹ ನಿಶ್ಚಯವಾಗಿತ್ತು.

ಹೋರಾಟದ ಹಾದಿಯಲ್ಲಿ ಬೆಳೆದ ನಟ

ಮೈಸೂರಿನ ಬಲ್ಲಹಳ್ಳಿಯಲ್ಲಿ ಜನಿಸಿದ ಚಿಕ್ಕಣ್ಣ ಅವರ ಸಿನಿ ಪಯಣ ಸಾಮಾನ್ಯವಾಗಿರಲಿಲ್ಲ. ಎಸ್‌ಎಸ್‌ಎಲ್‌ಸಿ ಶಿಕ್ಷಣದ ಬಳಿಕ ಜೀವನ ನಿರ್ವಹಣೆಗಾಗಿ ಗಾರೆ ಕೆಲಸ ಮಾಡುತ್ತಿದ್ದ ಅವರು, ಬಾಲ್ಯದಿಂದಲೇ ನಾಟಕಗಳಲ್ಲಿ ಅಭಿನಯಿಸುವ ಆಸಕ್ತಿ ಹೊಂದಿದ್ದರು.

ನಂತರ ಆರ್ಕೆಸ್ಟ್ರಾಗಳಲ್ಲಿ ಹಾಸ್ಯ ಪಾತ್ರಗಳ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದ ಚಿಕ್ಕಣ್ಣ ಕಿರುತೆರೆಗೆ ಕಾಲಿಟ್ಟರು. ಬಳಿಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿ ತಮ್ಮದೇ ಆದ ಛಾಪು ಮೂಡಿಸಿದರು.

ನಟ ಯಶ್ ಅಭಿನಯದ ‘ಕಿರಾತಕ’ ಸಿನಿಮಾ ಚಿಕ್ಕಣ್ಣ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಿತು. ಆ ಬಳಿಕ ಕನ್ನಡದ ಬಹುತೇಕ ಸ್ಟಾರ್ ನಟರ ಸಿನಿಮಾಗಳಲ್ಲಿ ಕಾಣಿಸಿಕೊಂಡ ಅವರು, ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಇದೀಗ ಹಾಸ್ಯ ನಟನಾಗಿ ಮಾತ್ರವಲ್ಲದೆ ನಾಯಕ ನಟನಾಗಿಯೂ ಗುರುತಿಸಿಕೊಂಡಿರುವ ಚಿಕ್ಕಣ್ಣ, ವೈವಾಹಿಕ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿದ್ದಾರೆ. ಅವರ ಹೊಸ ಬದುಕಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ಹಾಕಿ ಜೆರ್ಸಿ ಬದಲಾವಣೆ ವಿವಾದ: ಕೇಸರಿ ಬಣ್ಣದ ನಿರ್ಧಾರಕ್ಕೆ ಪ್ರಿಯಾಂಕಾ ಗಾಂಧಿ ತೀವ್ರ ವಿರೋಧ

0

ನವದೆಹಲಿ: ಭಾರತೀಯ ಹಾಕಿ ತಂಡದ ಸಾಂಪ್ರದಾಯಿಕ ನೀಲಿ ಜೆರ್ಸಿಯನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವ ಹಾಕಿ ಇಂಡಿಯಾದ ನಿರ್ಧಾರಕ್ಕೆ ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ Priyanka Gandhi Vadra ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಂಡದ ಸಮವಸ್ತ್ರ ಬದಲಾವಣೆ ದೇಶದ ಇತಿಹಾಸ ಮತ್ತು ಪರಂಪರೆಯನ್ನು ಬದಲಾಯಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, “ತಂಡದ ಜೆರ್ಸಿಯನ್ನೇ ಬದಲಾಯಿಸುವುದಾಗಲಿ ಅಥವಾ ಶಿಕ್ಷಣ ನೀತಿಯ ಮೂಲಕ ಇತಿಹಾಸವನ್ನು ತಿರುಚಲು ಪ್ರಯತ್ನಿಸುವುದಾಗಲಿ, ಇವೆಲ್ಲದರ ಬಗ್ಗೆ ದೇಶದ ಯುವಜನರು ಏನು ಯೋಚಿಸುತ್ತಿದ್ದಾರೆ ಎಂಬುದನ್ನು ನೋಡಿದ್ದೀರಿ. ಜಂತರ್ ಮಂತರ್‌ನಲ್ಲಿ ಯುವಕರು ವ್ಯಕ್ತಪಡಿಸಿದ ಅಭಿಪ್ರಾಯವೇ ದೇಶದ ನಿಜವಾದ ಧ್ವನಿ” ಎಂದು ಹೇಳಿದರು.

ಭಾರತದ ಸ್ವಾತಂತ್ರ್ಯ ಹೋರಾಟವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ನಿರ್ಮಾಣವಾಗಿತ್ತು ಎಂದು ಹೇಳಿದ ಅವರು, ಈ ಹೋರಾಟದಲ್ಲಿ Rashtriya Swayamsevak Sangh ಯಾವುದೇ ಪಾತ್ರ ವಹಿಸಿಲ್ಲ ಎಂದು ಆರೋಪಿಸಿದರು.

“ಮಹಾತ್ಮ ಗಾಂಧಿಯವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿತ್ತು. ಭಾರತದ ಆತ್ಮ ಅಹಿಂಸೆ, ಸತ್ಯ ಮತ್ತು ಸಹೋದರತ್ವದಲ್ಲಿದೆ. ಅದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ದೇಶದಲ್ಲಿ ವಿಭಜನೆ, ಹಿಂಸಾಚಾರ ಮತ್ತು ದ್ವೇಷದ ವಾತಾವರಣ ಸೃಷ್ಟಿಸುವ ಯಾವುದೇ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಹೇಳಿದ ಅವರು, “ಪರಸ್ಪರ ಪ್ರೀತಿ, ಏಕತೆ ಮತ್ತು ಸಹೋದರತ್ವದಿಂದ ಕೂಡಿರುವ ಭಾರತದ ಆತ್ಮವನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಹಾಕಿ ಇಂಡಿಯಾ ಇತ್ತೀಚೆಗೆ ಮುಂಬರುವ ವಿಶ್ವಕಪ್‌ಗಾಗಿ ಭಾರತೀಯ ಪುರುಷ ಮತ್ತು ಮಹಿಳಾ ತಂಡಗಳ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿದ್ದು, ಸಾಂಪ್ರದಾಯಿಕ ನೀಲಿ ಬಣ್ಣದ ಬದಲಿಗೆ ಕೇಸರಿ ಬಣ್ಣದ ವಿನ್ಯಾಸ ಪರಿಚಯಿಸಿರುವುದು ಚರ್ಚೆಗೆ ಕಾರಣವಾಗಿದೆ. Hockey India ಈ ಬದಲಾವಣೆಗೆ ತಾಂತ್ರಿಕ ಕಾರಣಗಳನ್ನು ನೀಡಿದ್ದು, ನೀಲಿ ಬಣ್ಣದ ಟರ್ಫ್‌ನಲ್ಲಿ ಆಟಗಾರರ ಗೋಚರತೆ ಹೆಚ್ಚಿಸಲು ಹೊಸ ಬಣ್ಣ ಆಯ್ಕೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ನೀಲಿ ಜೆರ್ಸಿಗೆ ಗುಡ್‌ಬೈ ಹೇಳಿದ ಹಾಕಿ ಇಂಡಿಯಾ: ಕೇಸರಿ ಕಿಟ್‌ ಪರಿಚಯಕ್ಕೆ ಮಾಜಿ ನಾಯಕನ ಅಸಮಾಧಾನ

0

ನವದೆಹಲಿ: ಮುಂಬರುವ ಹಾಕಿ ವಿಶ್ವಕಪ್‌ಗೂ ಮುನ್ನ ಹಾಕಿ ಇಂಡಿಯಾ ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, ಭಾರತೀಯ ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಹಲವು ವರ್ಷಗಳಿಂದ ತಂಡದ ಗುರುತಾಗಿದ್ದ ಸಾಂಪ್ರದಾಯಿಕ ನೀಲಿ ಬಣ್ಣಕ್ಕೆ ಬದಲಾಗಿ ಇದೀಗ ಕೇಸರಿ ಬಣ್ಣದ ಜೆರ್ಸಿಯನ್ನು ಪರಿಚಯಿಸಲಾಗಿದ್ದು, ಈ ನಿರ್ಧಾರ ಭಾರಿ ಚರ್ಚೆಗೆ ಕಾರಣವಾಗಿದೆ.

ಹೊಸ ಕಿಟ್‌ನಲ್ಲಿ ಕೇಸರಿ ಬಣ್ಣದ ಜೆರ್ಸಿಯ ಜೊತೆಗೆ ಬಿಳಿ ಬಣ್ಣದ ಪರ್ಯಾಯ ಜೆರ್ಸಿಯನ್ನೂ ಸೇರಿಸಲಾಗಿದೆ. ಮುಂಬರುವ ಪುರುಷರ ಹಾಕಿ ವಿಶ್ವಕಪ್‌ ಆಗಸ್ಟ್‌ 14ರಿಂದ 30ರವರೆಗೆ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿದ್ದು, ಮಹಿಳೆಯರ ವಿಶ್ವಕಪ್‌ ಆಗಸ್ಟ್‌ 15ರಿಂದ 30ರವರೆಗೆ ಆಯೋಜನೆಗೊಳ್ಳಲಿದೆ.

ಆದರೆ ಜೆರ್ಸಿಯ ಬಣ್ಣ ಬದಲಾವಣೆಗೆ ಭಾರತದ ಮಾಜಿ ಹಾಕಿ ನಾಯಕ ವೀರೇನ್ ರಸ್ಕಿನ್ಹಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತೀಯ ಹಾಕಿ ತಂಡದ ಪರಂಪರೆ ಹಾಗೂ ಗುರುತು ಎಂದಿಗೂ ನೀಲಿ ಬಣ್ಣದೊಂದಿಗೆ ಬೆಸೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ವೀರೇನ್ ರಸ್ಕಿನ್ಹಾ, ಹಾಕಿ ಇಂಡಿಯಾ ಭಾರತೀಯ ಹಾಕಿಗಾಗಿ ಹಲವು ಉತ್ತಮ ಕೆಲಸಗಳನ್ನು ಮಾಡಿದೆ. ಆದರೆ ಈ ನಿರ್ಧಾರ ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ.

“ಭಾರತ ತಂಡದ ಗುರುತು ಯಾವಾಗಲೂ ನೀಲಿ ಬಣ್ಣವಾಗಿತ್ತು. ನಾನು ಹಲವು ವರ್ಷಗಳ ಕಾಲ ಹೆಮ್ಮೆಯಿಂದ ನೀಲಿ ಜೆರ್ಸಿ ಧರಿಸಿದ್ದೇನೆ. ಅಭಿಮಾನಿಗಳು ಕೂಡ ಭಾರತ ತಂಡವನ್ನು ನೀಲಿ ಬಣ್ಣದಲ್ಲೇ ನೋಡಲು ಬಯಸುತ್ತಾರೆ. ಏಕಾಏಕಿ ಕೇಸರಿ ಬಣ್ಣಕ್ಕೆ ಬದಲಾವಣೆ ಮಾಡುವ ಅಗತ್ಯ ಏನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇನ್ನು ಜೆರ್ಸಿ ಬದಲಾವಣೆಯ ಬಗ್ಗೆ ಸ್ಪಷ್ಟನೆ ನೀಡಿರುವ ಹಾಕಿ ಇಂಡಿಯಾ, ಇದು ಯಾವುದೇ ರಾಜಕೀಯ ಕಾರಣದಿಂದ ತೆಗೆದುಕೊಂಡ ನಿರ್ಧಾರವಲ್ಲ ಎಂದು ತಿಳಿಸಿದೆ.

ಅಂತಾರಾಷ್ಟ್ರೀಯ ಹಾಕಿ ಮೈದಾನಗಳ ಟರ್ಫ್‌ಗಳು ಸಾಮಾನ್ಯವಾಗಿ ನೀಲಿ ಬಣ್ಣದಲ್ಲಿರುವುದರಿಂದ ಆಟಗಾರರ ಗೋಚರತೆಗೆ ಸಮಸ್ಯೆಯಾಗುತ್ತಿತ್ತು. ನೀಲಿ ಜೆರ್ಸಿ ಮೈದಾನದ ಬಣ್ಣದೊಂದಿಗೆ ಬೆರೆತು ಕಾಣಿಸುತ್ತಿದ್ದ ಕಾರಣ ಹೊಸ ಬಣ್ಣದ ಆಯ್ಕೆ ಮಾಡಲಾಗಿದೆ ಎಂದು ಹಾಕಿ ಇಂಡಿಯಾ ಹೇಳಿದೆ.

ತರಬೇತುದಾರರು ಮತ್ತು ಆಟಗಾರರ ಸಲಹೆಯ ಬಳಿಕ ಹಳದಿ ಹಾಗೂ ಕೇಸರಿ ಬಣ್ಣಗಳನ್ನು ಪರಿಶೀಲಿಸಲಾಗಿದ್ದು, ಅಂತಿಮವಾಗಿ ಕೇಸರಿಯನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರಧ್ವಜದ ಪ್ರಮುಖ ಬಣ್ಣವಾಗಿರುವ ಕೇಸರಿ ಧೈರ್ಯ, ತ್ಯಾಗ ಮತ್ತು ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ ಎಂದು ಹಾಕಿ ಇಂಡಿಯಾ ಸಮರ್ಥಿಸಿಕೊಂಡಿದೆ.

ರಾಜ್ಯದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ, ರಾಹುಲ್ ಯಾಕೆ ಮೌನ? ಕಾಂಗ್ರೆಸ್ ವಿರುದ್ಧ ಗೋವಿಂದ ಕಾರಜೋಳ ವಾಗ್ದಾಳಿ

ನವದೆಹಲಿ: ಕರ್ನಾಟಕದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದರೂ, ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ‘ಮೂರ್ಖ ಮತ್ತು ಅಂಧಭಕ್ತ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

“ಲೋಕಸಭೆ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಘನತೆ ಹಾಗೂ ಗೌರವವನ್ನು ಕಾಪಾಡುವುದು ಎಲ್ಲರ ಕರ್ತವ್ಯ. ಆದರೆ ಕಳೆದ ಒಂದು ವಾರದಿಂದ ವಿಪಕ್ಷಗಳು ಸದನದಲ್ಲಿ ಗದ್ದಲ ಮಾಡುತ್ತಿವೆ. ರಾಹುಲ್ ಗಾಂಧಿ ಜೋಕರ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ” ಎಂದು ಕಾರಜೋಳ ಟೀಕಿಸಿದರು.

ಕರ್ನಾಟಕದಲ್ಲಿ ಈ ಹಿಂದೆ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ ಎಂದು ಉಲ್ಲೇಖಿಸಿದ ಅವರು, “2012ರಲ್ಲಿ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. 2014ರಲ್ಲಿ ಸಿಐಡಿ ವರದಿ ಬಂದಿತ್ತು. 2016ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಡೆದಿತ್ತು. ಆದರೆ ಈ ಬಗ್ಗೆ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರು ಏಕೆ ಮಾತನಾಡಲಿಲ್ಲ?” ಎಂದು ಪ್ರಶ್ನಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಾಂಗ್ರೆಸ್ ಸರ್ಕಾರ ಸರಿಯಾಗಿ ಕಾನೂನು ಹೋರಾಟ ನಡೆಸಲಿಲ್ಲ. ಇದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶವಾಯಿತು ಎಂದು ಆರೋಪಿಸಿದ ಅವರು, 2018-19ರಲ್ಲಿ ಅಂದಿನ ಸಚಿವ ಜಿ. ಪರಮೇಶ್ವರ್ ಅವರ ಆಪ್ತ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಬೇಕಿತ್ತು ಎಂದರು.

ನೀಟ್ ಪರೀಕ್ಷೆಯಿಂದ ವೈದ್ಯಕೀಯ ಸೀಟುಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಬಿದ್ದಿದೆ ಎಂದು ಹೇಳಿದ ಕಾರಜೋಳ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಟ್ ಪರೀಕ್ಷೆ ಜಾರಿಗೆ ತಂದ ಬಳಿಕ ದಲಿತರು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಕ್ಕಿದೆ ಎಂದು ಹೇಳಿದರು.

“ಇದನ್ನು ಶ್ಲಾಘಿಸುವ ಬದಲು ಕಾಂಗ್ರೆಸ್ ವಿರೋಧ ಮಾಡುತ್ತಿದೆ. ಸರ್ಕಾರ ತಪ್ಪು ಮಾಡಿದ್ದರೆ ಲೋಕಸಭೆಯ ವಿಪಕ್ಷ ನಾಯಕರಾಗಿ ಸದನದಲ್ಲಿ ವಿಚಾರ ಪ್ರಸ್ತಾಪಿಸಬೇಕು. ಅದರ ಬದಲು ಅಸಾಂವಿಧಾನಿಕವಾಗಿ ಮಾತನಾಡುವುದು ಸರಿಯಲ್ಲ” ಎಂದು ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಪಿಎ ಎಂದು ನಂಬಿಸಿ ₹15 ಲಕ್ಷ ವಂಚನೆ: ಶಿವಮೊಗ್ಗದಲ್ಲಿ ಆರೋಪಿ ಬಂಧನ

0

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಪರಿಚಯಿಸಿಕೊಂಡು ರಿಕ್ರಿಯೇಷನ್ ಕ್ಲಬ್‌ಗೆ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ (30) ಎಂದು ಗುರುತಿಸಲಾಗಿದೆ. ಮಂಜುನಾಥ್ ಹಂಜಿ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಹೇಮಂತ್ ಕುಮಾರ್ ಮೊದಲು ಮಂಜುನಾಥ್ ಹಂಜಿ ಅವರೊಂದಿಗೆ ಪರಿಚಯ ಬೆಳೆಸಿ ಆತ್ಮೀಯತೆ ಗಳಿಸಿದ್ದ. ಬಳಿಕ ತಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿಎ ಎಂದು ಹೇಳಿಕೊಂಡು, ವಾರದಲ್ಲಿ ನಾಲ್ಕು ದಿನ ಬೆಂಗಳೂರಿನಲ್ಲಿ ಹಾಗೂ ಎರಡು ದಿನ ಶಿವಮೊಗ್ಗದಲ್ಲಿ ಕೆಲಸ ನಿರ್ವಹಿಸುತ್ತೇನೆ ಎಂದು ನಂಬಿಸಿದ್ದಾನೆ.

ಇದರ ಜೊತೆಗೆ ತನ್ನೊಂದಿಗೆ ನಾಲ್ವರು ಸ್ನೇಹಿತರನ್ನು ಕರೆದುಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಯು, ತನ್ನ ಮಾತುಗಳಿಗೆ ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ನಂತರ ಸ್ನೇಹಿತರು ಸೇರಿ ರಿಕ್ರಿಯೇಷನ್ ಕ್ಲಬ್ ಆರಂಭಿಸೋಣ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸುಲಭವಾಗಿ ಲೈಸೆನ್ಸ್ ಪಡೆದುಕೊಡುತ್ತೇನೆ ಎಂದು ಮಂಜುನಾಥ್ ಹಂಜಿ ಅವರಿಗೆ ಭರವಸೆ ನೀಡಿದ್ದಾನೆ.

ಸ್ವಲ್ಪ ದಿನಗಳ ಬಳಿಕ, “ನನ್ನ ಸ್ನೇಹಿತರು ವಿಶ್ವಾಸಾರ್ಹರಲ್ಲ. ಅವರು ಕ್ಲಬ್‌ನಲ್ಲಿ ಇರಬಾರದು. ನಾವಿಬ್ಬರೇ ಸೇರಿ ಕ್ಲಬ್ ಆರಂಭಿಸೋಣ” ಎಂದು ಹೇಳಿ, ಲೈಸೆನ್ಸ್ ವ್ಯವಸ್ಥೆ ಮಾಡುವ ನೆಪದಲ್ಲಿ ಮಂಜುನಾಥ್ ಹಂಜಿ ಅವರಿಂದ ₹15 ಲಕ್ಷ ಪಡೆದುಕೊಂಡಿದ್ದಾನೆ ಎನ್ನಲಾಗಿದೆ.

ಹಣ ಪಡೆದ ಬಳಿಕ ಮೂರು ತಿಂಗಳಿಗೂ ಹೆಚ್ಚು ಕಾಲ ಲೈಸೆನ್ಸ್ ಕೊಡಿಸದೇ ಸತಾಯಿಸುತ್ತಿದ್ದ ಆರೋಪಿಯು, ಹಣ ವಾಪಸ್ ಕೇಳಿದಾಗಲೆಲ್ಲಾ ವಿವಿಧ ಕಾರಣಗಳನ್ನು ಹೇಳಿ ಕಾಲಹರಣ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಯ ವರ್ತನೆಯ ಬಗ್ಗೆ ಅನುಮಾನಗೊಂಡ ಮಂಜುನಾಥ್ ಹಂಜಿ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ತುಂಗಾನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಇದೇ ರೀತಿಯಲ್ಲಿ ಇನ್ನೂ ಯಾರನ್ನಾದರೂ ವಂಚಿಸಿರುವ ಸಾಧ್ಯತೆ ಇದೆಯೇ ಎಂಬ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ನಾರಾಯಣಪುರ ಡ್ಯಾಂನಿಂದ 1.11 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ರಾಯಚೂರು, ಯಾದಗಿರಿಯಲ್ಲಿ ಹೈ ಅಲರ್ಟ್ ಘೋಷಣೆ

ರಾಯಚೂರು/ಯಾದಗಿರಿ: ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಮೇಲ್ಭಾಗದ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಇದರ ಪರಿಣಾಮ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದ್ದು, ನದಿ ಮೈದುಂಬಿ ಹರಿಯುತ್ತಿದೆ.

ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ರೈತರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪ್ರಸ್ತುತ ನಾರಾಯಣಪುರ ಜಲಾಶಯದ 24 ಕ್ರಸ್ಟ್ ಗೇಟ್‌ಗಳ ಮೂಲಕ ಸುಮಾರು 1.11 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇದರಿಂದ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕಿನ ನದಿ ದಂಡೆಯ ಗ್ರಾಮಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯ ಹಂತಕ್ಕೆ ತಲುಪಿದ್ದು, ಸೇತುವೆ ಜಲಾವೃತವಾಗಲು ಕೆಲವೇ ಅಡಿಗಳ ಅಂತರ ಉಳಿದಿದೆ. ನೀರಿನ ಮಟ್ಟ ಮತ್ತಷ್ಟು ಏರಿಕೆಯಾದರೆ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಆಲಮಟ್ಟಿ ಜಲಾಶಯದಿಂದ ನಿರಂತರವಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನಾರಾಯಣಪುರ ಜಲಾಶಯದ ಒಳಹರಿವು ಹೆಚ್ಚುತ್ತಿದ್ದು, ಪರಿಸ್ಥಿತಿಗೆ ಅನುಗುಣವಾಗಿ ನೀರಿನ ಹೊರಹರಿವಿನ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.

ನದಿ ತೀರದ ನಿವಾಸಿಗಳು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ನದಿ ಹಾಗೂ ಜಲಾವೃತ ಪ್ರದೇಶಗಳ ಸಮೀಪ ಅನಗತ್ಯವಾಗಿ ತೆರಳದಂತೆ ಸೂಚನೆ ನೀಡಿದೆ.

ಬೆಂಗಳೂರಿನ ಖಾಲಿ ನಿವೇಶನದ ಮಾಲೀಕರಿಗೆ GBA ಬಿಗ್ ಶಾಕ್! ಸ್ವಚ್ಛಗೊಳಿಸದಿದ್ದರೆ 1 ಲಕ್ಷ ರೂ ವರೆಗೆ ದಂಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದು ಹಾಗೂ ತ್ಯಾಜ್ಯ ಸಂಗ್ರಹವಾಗುತ್ತಿರುವ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಕ್ರಮ ಕೈಗೊಂಡಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರ ಸೂಚನೆ ಮೇರೆಗೆ ಆಗಸ್ಟ್ ತಿಂಗಳಿನಿಂದ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ ಆರಂಭವಾಗಲಿದ್ದು, ನಗರದ ಸ್ವಚ್ಛತೆಗೆ ವಿಶೇಷ ಒತ್ತು ನೀಡಲಾಗುತ್ತಿದೆ.

ಅಭಿಯಾನದ ಭಾಗವಾಗಿ ನಗರದ ರಸ್ತೆಗಳಲ್ಲಿನ ಬ್ಲಾಕ್ ಸ್ಪಾಟ್‌ಗಳು, ಕಟ್ಟಡ ನಿರ್ಮಾಣ ತ್ಯಾಜ್ಯ, ರಸ್ತೆ ಬದಿಯ ಮರದ ಕೊಂಬೆಗಳು, ಬಿದ್ದಿರುವ ವಿದ್ಯುತ್ ಕಂಬಗಳು ಹಾಗೂ ಪೈಪ್‌ಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು ಪಾಲಿಕೆಗಳು ಮುಂದಾಗಿವೆ. ಜೊತೆಗೆ ನಗರದಲ್ಲಿರುವ ಎಲ್ಲಾ ಖಾಲಿ ನಿವೇಶನಗಳ ಮಾಲೀಕರಿಗೆ ಆಗಸ್ಟ್ 15ರವರೆಗೆ ಗಡುವು ನೀಡಲಾಗಿದೆ.

ನಿಗದಿತ ಅವಧಿಯೊಳಗೆ ನಿವೇಶನಗಳನ್ನು ಮಾಲೀಕರು ಸ್ವಚ್ಛಗೊಳಿಸದಿದ್ದರೆ, ಪಾಲಿಕೆಯೇ ತ್ಯಾಜ್ಯ ತೆರವುಗೊಳಿಸಲಿದೆ. ಆದರೆ ಅದಕ್ಕೆ ತಗುಲುವ ಸಂಪೂರ್ಣ ವೆಚ್ಚವನ್ನು ನಿವೇಶನದ ವಿಸ್ತೀರ್ಣ ಹಾಗೂ ತೆರವುಗೊಳಿಸಿದ ತ್ಯಾಜ್ಯದ ಪ್ರಮಾಣದ ಆಧಾರದ ಮೇಲೆ ಸಂಬಂಧಿತ ಮಾಲೀಕರಿಂದಲೇ ವಸೂಲಿ ಮಾಡಲಾಗುತ್ತದೆ.

ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು–2020 ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ–2024ರ ಅನ್ವಯ ಈ ವೆಚ್ಚವನ್ನು ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲು ನಿರ್ಧರಿಸಲಾಗಿದೆ.

ಒಂದು ವೇಳೆ ಈ ಮೊತ್ತವನ್ನು ಪಾವತಿಸದಿದ್ದರೆ, ಕರ್ನಾಟಕ ಭೂಕಂದಾಯ ಕಾಯ್ದೆ–1964ರ ಅನ್ವಯ ಕಠಿಣ ವಸೂಲಾತಿ ಕ್ರಮ ಜರುಗಿಸಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನಿಯಮ ಉಲ್ಲಂಘಿಸುವ ನಿವೇಶನ ಮಾಲೀಕರಿಗೆ ದಂಡವೂ ವಿಧಿಸಲಾಗುತ್ತದೆ. ಮೊದಲ ಬಾರಿಗೆ ಉಲ್ಲಂಘನೆ ಕಂಡುಬಂದರೆ ₹25,000 ದಂಡ ವಿಧಿಸಲಾಗುತ್ತದೆ. ನಂತರವೂ ನಿಯಮ ಪಾಲಿಸದಿದ್ದರೆ ₹50,000 ರಿಂದ ₹1 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ.

ಇದರ ಜೊತೆಗೆ, ನಿವೇಶನ ಸ್ವಚ್ಛಗೊಳಿಸಿದ ಬಳಿಕ ಮತ್ತೆ ಕಸ ಸುರಿಯದಂತೆ ಸುತ್ತಲೂ ಬೇಲಿ ಅಥವಾ ಕಾಂಪೌಂಡ್ ಗೋಡೆ ನಿರ್ಮಿಸಿ ನಿರ್ವಹಿಸುವ ಜವಾಬ್ದಾರಿಯೂ ನಿವೇಶನ ಮಾಲೀಕರದ್ದೇ ಆಗಿರಲಿದೆ.

ಇನ್ನು ಸಾರ್ವಜನಿಕರಿಗೂ ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 15ರೊಳಗೆ ಖಾಲಿ ನಿವೇಶನವನ್ನು ಸ್ವಚ್ಛಗೊಳಿಸದಿದ್ದರೆ, ಸಾರ್ವಜನಿಕರು ಆ ನಿವೇಶನದ ಛಾಯಾಚಿತ್ರ ಹಾಗೂ GPS ಸ್ಥಳ ಮಾಹಿತಿಯೊಂದಿಗೆ 9448197197 ಸಂಖ್ಯೆಗೆ ವಾಟ್ಸ್‌ಆಪ್ ಮೂಲಕ ದೂರು ಸಲ್ಲಿಸಬಹುದು. ದೂರುದಾರರ ವಿವರವನ್ನು ಗೌಪ್ಯವಾಗಿಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ, ನಗರದಲ್ಲಿನ ಖಾಲಿ ನಿವೇಶನಗಳನ್ನು ಕಸದ ತಾಣವನ್ನಾಗಿ ಬಿಡುವ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದ್ದು, ನಿಯಮ ಪಾಲಿಸದಿದ್ದರೆ ದಂಡ ಹಾಗೂ ವೆಚ್ಚ ಎರಡನ್ನೂ ಭರಿಸಬೇಕಾಗುವ ಪರಿಸ್ಥಿತಿ ಎದುರಾಗಲಿದೆ.

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್: ಕೊನೆಗೂ DNA ಪರೀಕ್ಷೆಯಲ್ಲಿ ಬಯಲಾಯ್ತು ಮೂರು ಅಸ್ಥಿಪಂಜರಗಳ ರಹಸ್ಯ!

ಮಂಗಳೂರು: ಧರ್ಮಸ್ಥಳದ ಆಸುಪಾಸಿನಲ್ಲಿ ನಡೆದ ಉತ್ಖನನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ ಪತ್ತೆಹಚ್ಚಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಎಸ್‌ಐಟಿ ಅಧಿಕಾರಿಗಳು ಸಂಬಂಧಿತ ಕುಟುಂಬಸ್ಥರಿಂದ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಅಸ್ಥಿಪಂಜರಗಳ ಮಾದರಿಗಳೊಂದಿಗೆ ಹೋಲಿಕೆ ನಡೆಸಿದ್ದರು. ಈ ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಡಿಎನ್‌ಎ ಕುಟುಂಬಸ್ಥರ ಮಾದರಿಗಳೊಂದಿಗೆ ಹೊಂದಾಣಿಕೆಯಾಗಿರುವುದು ದೃಢಪಟ್ಟಿದೆ.

ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ಪತ್ತೆಯಾದವರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ ನಾರಾಯಣ (27) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಸೇರಿದ್ದಾರೆ. ಮೂವರೂ ಪುರುಷರಾಗಿದ್ದು, ಅವರ ಗುರುತು ಅಧಿಕೃತವಾಗಿ ದೃಢಪಟ್ಟಿದೆ.

ಧರ್ಮಸ್ಥಳದ ಸುತ್ತಮುತ್ತ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳ ನಡುವೆಯೇ ನಡೆದ ಉತ್ಖನನದಲ್ಲಿ ಪತ್ತೆಯಾದ ಅಸ್ಥಿಪಂಜರಗಳ ಪೈಕಿ ಡಿಎನ್‌ಎ ಪರೀಕ್ಷೆಯಲ್ಲಿ ಗುರುತಾದ ಮೂವರೂ ಪುರುಷರು ಎಂಬುದು ಪ್ರಕರಣದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

ಜುಲೈ 15ರಂದು ಎಸ್‌ಐಟಿ ಸಲ್ಲಿಸಿದ್ದ ವರದಿಯಲ್ಲಿ ಅಸ್ಥಿಪಂಜರಗಳ ಗುರುತು ಪತ್ತೆ ಹಾಗೂ ಡಿಎನ್‌ಎ ಪರೀಕ್ಷೆಯ ವಿವರಗಳನ್ನು ಉಲ್ಲೇಖಿಸಲಾಗಿತ್ತು. ಸಂಬಂಧಿತ ಕುಟುಂಬಸ್ಥರು ಎಸ್‌ಐಟಿಗೆ ಮನವಿ ಸಲ್ಲಿಸಿದರೆ, ನಿಯಮಾನುಸಾರ ಅಸ್ಥಿಪಂಜರಗಳನ್ನು ಅವರಿಗೆ ಹಸ್ತಾಂತರಿಸುವ ಅವಕಾಶವಿದೆ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ಯು.ಬಿ. ಅಯ್ಯಪ್ಪ ಅವರು 2017ರ ಜೂನ್ 25ರಂದು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ತುಮಕೂರು ಜಿಲ್ಲೆಯ ಆದಿಶೇಷ ನಾರಾಯಣ ಅವರು ಬೆಂಗಳೂರಿನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದು, 2013ರ ಅಕ್ಟೋಬರ್ 2ರಂದು ಮನೆಗೆ ಬಂದು ಮೊಬೈಲ್ ಇಟ್ಟು ಹೊರಹೋದ ಬಳಿಕ ನಾಪತ್ತೆಯಾಗಿದ್ದರು. ಆರಂಭದಲ್ಲಿ ಅವರು ಪದೇಪದೆ ಮನೆ ಬಿಟ್ಟು ಹೋಗುತ್ತಿದ್ದ ಕಾರಣ ಕುಟುಂಬಸ್ಥರು ದೂರು ದಾಖಲಿಸಿರಲಿಲ್ಲ. ಬಳಿಕ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಕೋಲಾರ ಜಿಲ್ಲೆಯ ಕೃಷ್ಣಪ್ಪ ಅವರು 2024ರ ಅಕ್ಟೋಬರ್ 22ರಂದು ಮನೆಯಿಂದ ಹೊರಹೋಗಿ ಮರಳಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಈ ಮೂರು ನಾಪತ್ತೆ ಪ್ರಕರಣಗಳಲ್ಲಿನ ವ್ಯಕ್ತಿಗಳ ಡಿಎನ್‌ಎ ಮಾದರಿಗಳು ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರಗಳೊಂದಿಗೆ ಹೊಂದಾಣಿಕೆಯಾಗಿರುವುದು ಎಸ್‌ಐಟಿ ತನಿಖೆಗೆ ಮಹತ್ವದ ಸಾಕ್ಷ್ಯವಾಗಿ ಪರಿಣಮಿಸಿದ್ದು, ಪ್ರಕರಣದ ತನಿಖೆ ಹೊಸ ಹಂತಕ್ಕೆ ಪ್ರವೇಶಿಸಿದೆ.

ಶಾಲೆಗೆ ತೆರಳುವಾಗ ಭೀಕರ ಅಪಘಾತ: 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು!

0

ನೆಲಮಂಗಲ: ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಲಿಖಿತಾ (10) ಎಂದು ಗುರುತಿಸಲಾಗಿದೆ. ಲಿಖಿತಾ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮಾಹಿತಿಯ ಪ್ರಕಾರ, ಬೆಳಗ್ಗೆ ತಾಯಿ ಕೆಲಸಕ್ಕೆ ತೆರಳಿದ ಬಳಿಕ ಲಿಖಿತಾ ತನ್ನ ದೊಡ್ಡಮ್ಮನೊಂದಿಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನೆಲಮಂಗಲದಿಂದ ಕುಣಿಗಲ್ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ದೊಡ್ಡಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದೇ ಬೀರವಾರ ಗ್ರಾಮದ ಸಮೀಪ ಪದೇ ಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಭಾಗದಲ್ಲಿ ತಕ್ಷಣ ಸ್ಕೈವಾಕ್ ಅಥವಾ ಸುರಕ್ಷಿತ ಪಾದಚಾರಿ ದಾಟುವ ವ್ಯವಸ್ಥೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನಿವೃತ್ತ ಬಸ್ ಚಾಲಕನ ಮನೆಯಲ್ಲಿ ₹48 ಕೋಟಿ ಖಜಾನೆ! ದಾಳಿಯಲ್ಲಿ ₹28.5 ಕೋಟಿ ನಗದು, ₹20 ಕೋಟಿ ಚಿನ್ನ ಜಪ್ತಿ

0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ಮರಳು ಮಾಫಿಯಾ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರಿಗೆ ಬೆಚ್ಚಿಬೀಳಿಸುವ ಅಕ್ರಮ ಆಸ್ತಿ ಪತ್ತೆಯಾಗಿದೆ. ನಿವೃತ್ತ ಸರ್ಕಾರಿ ಬಸ್ ಚಾಲಕನ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ₹28.5 ಕೋಟಿ ನಗದು ಹಾಗೂ ₹20 ಕೋಟಿಗೂ ಅಧಿಕ ಮೌಲ್ಯದ 15 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ದಾಳಿಯ ಬಳಿಕ ಆರೋಪಿಯನ್ನು ಹಾಗೂ ಆತನ ಮಗನನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

ಮರಳು ಮಾಫಿಯಾ ವಿರುದ್ಧ ನಡೆಯುತ್ತಿದ್ದ ವಿಶೇಷ ಕಾರ್ಯಾಚರಣೆಯ ಭಾಗವಾಗಿ ಬಿರ್ಭಮ್‌ನಲ್ಲಿ ನಿವೃತ್ತ ಸರ್ಕಾರಿ ಬಸ್ ಚಾಲಕ ಮಿನಾರ್ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಿವೃತ್ತಿಯ ನಂತರ ಕಲ್ಲು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಮಿನಾರ್ ಅವರ ಮನೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದ್ದು, ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.

ದಾಳಿಯ ವೇಳೆ ₹28.5 ಕೋಟಿ ನಗದು ಹಾಗೂ ಸುಮಾರು 15 ಕೆಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಲಾದ ಚಿನ್ನದ ಮೌಲ್ಯ ₹20 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಾರ್ ಹಾಗೂ ಅವರ ಪುತ್ರನನ್ನು ಬಂಧಿಸಲಾಗಿದ್ದು, ಇನ್ನಿತರ ಸ್ಥಳಗಳಲ್ಲೂ ಹಣ ಮತ್ತು ಆಸ್ತಿ ಅಡಗಿಸಿಟ್ಟಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದುವರಿದಿದೆ.

ಪ್ರಾಥಮಿಕ ತನಿಖೆಯಲ್ಲಿ ಮಿನಾರ್, ತಲೆಮರೆಸಿಕೊಂಡಿರುವ ಟಿಲ್ಲು ಮಂಡಲ್ ಅಲಿಯಾಸ್ ಮೊಹಮ್ಮದ್ ನಜೀಬುದ್ದೀನ್ ಅವರ ಸೋದರ ಮಾವ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಟಿಲ್ಲು ಮಂಡಲ್ ಬಿರ್ಭಮ್ ತೃಣಮೂಲ ಕಾಂಗ್ರೆಸ್‌ನ ಪ್ರಭಾವಿ ನಾಯಕ ಅನುಬ್ರತಾ ಮಂಡಲ್ ಅವರ ಆಪ್ತನಾಗಿದ್ದಾನೆ ಎನ್ನಲಾಗಿದ್ದು, ಪ್ರಕರಣಕ್ಕೆ ರಾಜಕೀಯ ಆಯಾಮವೂ ಸಿಕ್ಕಿದೆ.

ಇದೇ ಮಿನಾರ್ ವಿರುದ್ಧ ಈ ಹಿಂದೆ ಬಹುಕೋಟಿ ದನ ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೂಡ ವಿಚಾರಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಭಾರೀ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿರುವುದು ತನಿಖಾ ಸಂಸ್ಥೆಗಳ ಗಮನ ಸೆಳೆದಿದೆ.

ಈ ಕಾರ್ಯಾಚರಣೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಶ್ಲಾಘಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, ಮರಳು ಮಾಫಿಯಾ ವಿರುದ್ಧ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬಿರ್ಭಮ್ ಪೊಲೀಸ್, ಜಿಲ್ಲಾ ಎಸ್‌ಪಿ, ಡಿಜಿಪಿ ಸೇರಿದಂತೆ ಎಲ್ಲಾ ಪೊಲೀಸ್ ಸಿಬ್ಬಂದಿಯ ತ್ವರಿತ ಹಾಗೂ ವೃತ್ತಿಪರ ಕಾರ್ಯವನ್ನು ಪ್ರಶಂಸಿಸಿದ್ದಾರೆ.

ಇದೇ ವೇಳೆ, “ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ನಮ್ಮ ಸರ್ಕಾರದ ಬದ್ಧತೆ. ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಮಾಫಿಯಾ ಜಾಲ ಹಾಗೂ ಅಕ್ರಮ ಸಂಪತ್ತು ವಿರುದ್ಧದ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳ್ಳಲಿದೆ” ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.