Home Blog

ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಅರಗ ಜ್ಞಾನೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯಂತಹ ಶಿಸ್ತಿನ ಪಕ್ಷದಲ್ಲಿ ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ಮಾಡಿದ ದ್ರೋಹ. ಇಂತಹ ಘಟನೆ ನಡೆಯಬಾರದು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

ಅಡ್ಡ ಮತದಾನದ ಬೆಳವಣಿಗೆಯಿಂದ ಪಕ್ಷದ ರಾಜ್ಯಾಧ್ಯಕ್ಷರು ವಿಚಲಿತರಾಗಿದ್ದಾರೆ. ಭಾವೋದ್ವೇಗದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳಕ್ಕೆ ಹೋಗುವ ಅಗತ್ಯವಿಲ್ಲ. ಬೇರೆ ಮಾರ್ಗಗಳ ಮೂಲಕ ಸತ್ಯಾಸತ್ಯತೆ ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಅಡ್ಡ ಮತದಾನ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬಾರದು ಎಂದು ಹೇಳಿದ ಅವರು, ಈ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಬಂದ ಬಳಿಕ ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಅದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದರು.

ಪಕ್ಷ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರನ್ನು ದೆಹಲಿಗೆ ಕರೆಯಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ!

0

ಉಡುಪಿ: ಉದ್ಯಾವರ ಸಮೀಪದ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಪಿತ್ರೋಡಿ ನಿವಾಸಿ ಹರ್ಷಿತ್ ಶೆಟ್ಟಿ (28) ಮೃತ ಯುವಕನಾಗಿದ್ದು, ಬೆಳಗ್ಗೆ ಕ್ರಿಕೆಟ್ ಆಡಲು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದನು. ಆದರೆ, ಸಂಜೆವರೆಗೂ ಮನೆಗೆ ವಾಪಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ಆರಂಭಿಸಿದ್ದರು.

ಈ ವೇಳೆ ಪಾಪನಾಶಿನಿ ಸೇತುವೆ ಮೇಲೆಯೇ ಹರ್ಷಿತ್ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಜೊತೆಗೆ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಅನುಮಾನ ಮತ್ತಷ್ಟು ಬಲವಾಗಿತ್ತು. ತಕ್ಷಣ ಸ್ಥಳೀಯರು ಹಾಗೂ ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ನದಿಯಲ್ಲಿ ಶೋಧ ಕಾರ್ಯ ಕೈಗೊಳ್ಳಲಾಯಿತು.

ಸಂಜೆಯ ವೇಳೆಗೆ ನದಿಯಲ್ಲಿ ಹರ್ಷಿತ್ ಮೃತದೇಹ ಪತ್ತೆಯಾಗಿದ್ದು, ಬಳಿಕ ಅದನ್ನು ಮೇಲಕ್ಕೆತ್ತಲಾಯಿತು. ಹರ್ಷಿತ್ ಮಲ್ಪೆಯಲ್ಲಿರುವ ಸೊಸೈಟಿಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್ʼಗೆ ಪದ್ಮವಿಭೂಷಣ ಗೌರವ: ಕ್ರಿಕೆಟಿಗ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರದಾನ

0

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ನಡೆದ ಎರಡನೇ ಸುತ್ತಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೆನಿಸ್ ದಂತಕಥೆ ವಿಜಯ್ ಅಮೃತರಾಜ್, ಮಲಯಾಳಂ ಚಿತ್ರರಂಗದ ಹಿರಿಯ ನಟ ಮಮ್ಮುಟ್ಟಿ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.

ಚಿತ್ರರಂಗ, ಸಂಗೀತ, ಕ್ರೀಡೆ, ಸಾರ್ವಜನಿಕ ಸೇವೆ ಹಾಗೂ ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಹಲವಾರು ಗಣ್ಯರನ್ನು ಈ ಸಂದರ್ಭದಲ್ಲಿ ರಾಷ್ಟ್ರಪತಿಗಳು ಸನ್ಮಾನಿಸಿದರು.

ಸಮಾರಂಭದಲ್ಲಿ ನಟ ಮಮ್ಮುಟ್ಟಿ ಅವರ ಪತ್ನಿ ಸಲ್ಫತ್, ಪುತ್ರ ಹಾಗೂ ನಟ ದುಲ್ಕರ್ ಸಲ್ಮಾನ್ ಮತ್ತು ಪುತ್ರಿ ಸುರುಮಿ ಉಪಸ್ಥಿತರಿದ್ದರು.

ರೋಹಿತ್ ಶರ್ಮಾ, ಆರ್. ಮಾಧವನ್‌ಗೆ ಪದ್ಮಶ್ರೀ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಬಾಲಿವುಡ್ ನಟ ಆರ್. ಮಾಧವನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ರಂಗ ಕಲಾವಿದ ನೂರುದ್ದೀನ್ ಅಹ್ಮದ್ ಅವರಿಗೂ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಬು ಸೊರೆನ್‌ಗೆ ಮರಣೋತ್ತರ ಪದ್ಮಭೂಷಣ

ಸಾರ್ವಜನಿಕ ವ್ಯವಹಾರಗಳ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಜೆಎಂಎಂ ಸಂಸ್ಥಾಪಕ ಹಾಗೂ ಬುಡಕಟ್ಟು ನಾಯಕ ಶಿಬು ಸೊರೆನ್ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪರವಾಗಿ ಪತ್ನಿ ರೂಪಿ ಸೊರೆನ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮೊದಲ ಸಮಾರಂಭದಲ್ಲಿ 66 ಪದ್ಮ ಪ್ರಶಸ್ತಿಗಳ ಪ್ರದಾನ

ಇದಕ್ಕೂ ಮುನ್ನ ಮೇ 26ರಂದು ನಡೆದ ಮೊದಲ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಟ್ಟು 66 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರು.

ಆ ಸಮಾರಂಭದಲ್ಲಿ ದಿವಂಗತ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರ ಪರವಾಗಿ ಪತ್ನಿ ಹಾಗೂ ನಟಿ-ರಾಜಕಾರಣಿ ಹೇಮಾ ಮಾಲಿನಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ದರ್ಶನ್ ಹೊಸ ಕಾನೂನು ತಂತ್ರ: ಸುಪ್ರೀಂ ಕೋರ್ಟ್‌ನಲ್ಲಿ ಗಡುವು ಸಡಿಲಿಕೆಗೆ ಮನವಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ತಮ್ಮ ಕಾನೂನು ಹೋರಾಟಕ್ಕೆ ಹೊಸ ದಿಕ್ಕು ನೀಡಿದ್ದಾರೆ. ಪ್ರಕರಣದಲ್ಲಿ ವಾದಿಸುತ್ತಿದ್ದ ವಕೀಲರನ್ನು ಬದಲಾಯಿಸಿರುವ ಅವರು, ಹೊಸ ವಕೀಲರ ಮೂಲಕ ಸುಪ್ರೀಂ ಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ವಿಚಾರಣೆಗೆ ಸಂಬಂಧಿಸಿ 60 ಸಾಕ್ಷಿಗಳ ಹೇಳಿಕೆಗಳನ್ನು ಒಂದು ವರ್ಷದೊಳಗೆ ದಾಖಲಿಸಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಇದೀಗ ಆ ಗಡುವು ಕಾರ್ಯಸಾಧ್ಯವಲ್ಲ ಎಂಬ ವಾದದೊಂದಿಗೆ ಅವಧಿಯನ್ನು ಮರುಪರಿಶೀಲಿಸಿ ಕಡಿಮೆ ಅಥವಾ ಪರಿಷ್ಕರಿಸುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ದರ್ಶನ್ ಸೇರಿದಂತೆ ಲಕ್ಷ್ಮಣ್ ಹಾಗೂ ನಾಗರಾಜ್ ಪರವಾಗಿ ವಾದಿಸುತ್ತಿದ್ದ ವಕೀಲ ಸುನೀಲ್ ಕುಮಾರ್ ಅವರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿರುವ ಅವರು, ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಚಾರಣೆ ವೇಳೆ ನ್ಯಾಯಾಲಯ, ಹಿರಿಯ ವಕೀಲ ಹಷ್ಮತ್ ಪಾಷಾ ಅವರು ದರ್ಶನ್ ಪರವಾಗಿ ಹೊಸದಾಗಿ ವಕಾಲತ್ತು ಸಲ್ಲಿಸಿರುವುದನ್ನು ಉಲ್ಲೇಖಿಸಿತು. ಪ್ರಕರಣದ ಎಲ್ಲಾ ದಾಖಲೆಗಳನ್ನು ನೂತನ ವಕೀಲರಿಗೆ ಹಸ್ತಾಂತರಿಸುವಂತೆ ಕೋರ್ಟ್ ಸೂಚನೆ ನೀಡಿದಾಗ, ದಾಖಲೆಗಳನ್ನು ಈಗಾಗಲೇ ಕುಟುಂಬಸ್ಥರ ಮೂಲಕ ಹಸ್ತಾಂತರಿಸಲಾಗಿದೆ ಎಂದು ಸುನೀಲ್ ಕುಮಾರ್ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ವಕೀಲರ ಬದಲಾವಣೆ, ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿ ಹಾಗೂ ವಿಚಾರಣಾ ಗಡುವಿನ ಪ್ರಶ್ನೆ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ.

ಮಂಗಳೂರು ಮಾಜಿ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ: ಸಮಾಜಕ್ಕೆ ಅಪಾರ ನಷ್ಟ ಎಂದ ಯು.ಟಿ. ಖಾದರ್

0

ಮಂಗಳೂರು: ಮಂಗಳೂರಿನ ಮಾಜಿ ಖಾಝಿ ಹಾಗೂ ಹಿರಿಯ ಧಾರ್ಮಿಕ ವಿದ್ವಾಂಸ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನವು ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಮುಸ್ಲಿಯಾರ್ ಅವರು ಹಲವು ದಶಕಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಧಾರ್ಮಿಕ ಮಾರ್ಗದರ್ಶನ ನೀಡುವ ಮೂಲಕ ಗೌರವಾನ್ವಿತ ಸ್ಥಾನ ಗಳಿಸಿದ್ದರು. ಧರ್ಮ, ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ಸಾವಿರಾರು ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಅವರ ಜೀವನ ಪಯಣವು ಸರಳತೆ, ಜ್ಞಾನ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿತ್ತು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಅವರು ವಹಿಸಿದ್ದ ಪಾತ್ರ ಅಪ್ರತಿಮವಾಗಿದೆ ಎಂದು ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ಮುಸ್ಲಿಯಾರ್ ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬುವುದು ಕಷ್ಟ. ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿವೆ ಎಂದು ಹೇಳಿರುವ ಸಚಿವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಚರ್ಚೆಗೆ ಬಿಡದಿಗೆ ಯಾಕೆ ಹೋಗಬೇಕು? ವಿಧಾನಸೌಧಕ್ಕೆ ಬರಲಿ: HDKಗೆ ಶಾಸಕ ಹೆಚ್.ಸಿ. ಬಾಲಕೃಷ್ಣ ತಿರುಗೇಟು

ಬೆಂಗಳೂರು: ಬಿಡದಿ ಟೌನ್‌ಶಿಪ್ ಎಐ ಸಿಟಿ ಯೋಜನೆ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಪತ್ರ ಸಮರದ ನಡುವೆ, ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಬಿಡದಿಗೆ ಹೋಗುವ ಅಗತ್ಯವೇ ಇಲ್ಲ. ಮುಖ್ಯಮಂತ್ರಿ ವಿಧಾನಸೌಧಕ್ಕೆ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಅಲ್ಲಿಗೆ ಬಂದು ಚರ್ಚೆ ನಡೆಸಲಿ. ಇಂತಹ ನಾಟಕಗಳನ್ನು ಅವರು ಬಿಡಬೇಕು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಯ ಮೂಲ ಕಲ್ಪನೆಯೇ ಹೆಚ್.ಡಿ. ಕುಮಾರಸ್ವಾಮಿ ಅವರದ್ದಾಗಿದೆ. ಅವರು ಮತ್ತು ಅವರ ತಂದೆ ಅಧಿಕಾರದಲ್ಲಿದ್ದಾಗ ಯೋಜನೆಯನ್ನು ರದ್ದುಪಡಿಸಲಿಲ್ಲ. ಈಗ ವಿರೋಧ ವ್ಯಕ್ತಪಡಿಸುವುದು ಕೇವಲ ರಾಜಕೀಯ ನಾಟಕ ಎಂದು ಬಾಲಕೃಷ್ಣ ಆರೋಪಿಸಿದರು.

ಮುಖ್ಯಮಂತ್ರಿ ಈಗಾಗಲೇ ಯೋಜನೆ ಕುರಿತು ನಿರ್ಧಾರ ಕೈಗೊಂಡಿದ್ದು, ಅದನ್ನು ಜಾರಿಗೊಳಿಸುವುದು ಖಚಿತ. ಯಾರೇ ಎಷ್ಟೇ ಹೋರಾಟ ಮಾಡಿದರೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದರು.

ರೈತರ ಸಮ್ಮುಖದಲ್ಲೇ ಚರ್ಚೆ ನಡೆಯಲಿ ಎಂಬ ಕುಮಾರಸ್ವಾಮಿ ಪತ್ರದ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಚರ್ಚೆಗೆ ಕರೆದಿದ್ದಾರೆ. ಅವರು ವಿಧಾನಸೌಧಕ್ಕೆ ಬರಲಿ. ಬರಲು ಇಷ್ಟವಿದ್ದರೆ ಬರಲಿ, ಇಲ್ಲದಿದ್ದರೆ ಬಿಡಲಿ ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ನಿಜವಾದ ರೈತರಲ್ಲ, ಹೊರಗಿನಿಂದ ಬಂದವರೇ ಹೆಚ್ಚಾಗಿದ್ದರು ಎಂದು ಆರೋಪಿಸಿದರು. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಎಐ ಸಿಟಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕುಮಾರಸ್ವಾಮಿ ನೀಡಿದ್ದಕ್ಕಿಂತ ಹೆಚ್ಚಿನ ಪರಿಹಾರವನ್ನು ಸರ್ಕಾರ ರೈತರಿಗೆ ನೀಡುತ್ತಿದೆ ಎಂದು ಬಾಲಕೃಷ್ಣ ಹೇಳಿದರು.

ಕೆರೆಗಳ ಶುದ್ಧೀಕರಣಕ್ಕಾಗಿ ಸರ್ಕಾರ ಹಣ ಮೀಸಲಿಟ್ಟಿದ್ದು, ರೈತರಿಗೆ ಪ್ರತಿದಿನ ಆರ್‌ಟಿಜಿಎಸ್ ಮೂಲಕ ಪರಿಹಾರ ಧನ ಪಾವತಿಸಲಾಗುತ್ತಿದೆ. ಸಾಲ ಪಡೆದ ರೈತರಿಗೆ ಒನ್‌ಟೈಮ್ ಸೆಟಲ್‌ಮೆಂಟ್ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂದು ವಿವರಿಸಿದರು.

‘ರೀಲ್ ಅಲ್ಲ, ರಿಯಲ್ ಪಕ್ಷ’: ವಿಪಕ್ಷಗಳಿಗೆ ವಿಜಯ್ ತಿರುಗೇಟು, ವೈರಲ್ ಸಂಜ್ಞೆಯ ಮೂಲಕ ರಾಜಕೀಯ ಸಂದೇಶ

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ದಳಪತಿ ವಿಜಯ್ ನೀಡಿದ ಭಾಷಣ ಹಾಗೂ ಅದರ ಕೊನೆಯಲ್ಲಿ ಪ್ರದರ್ಶಿಸಿದ ಸ್ಟೈಲ್ ಇದೀಗ ರಾಜಕೀಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ವಿಪಕ್ಷಗಳ ಟೀಕೆಗಳಿಗೆ ತಕ್ಕ ಉತ್ತರ ನೀಡಿದ ವಿಜಯ್, ತಮ್ಮ ಪಕ್ಷದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡು ಭ್ರಷ್ಟಾಚಾರದ ವಿರುದ್ಧ ಕಠಿಣ ಸಂದೇಶ ರವಾನಿಸಿದ್ದಾರೆ.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ವಿರೋಧ ಪಕ್ಷಗಳು ಸರ್ಕಾರ ಹಾಗೂ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಸಭಾತ್ಯಾಗ ಮಾಡಿದ್ದವು. ಬಳಿಕ ಉತ್ತರ ಭಾಷಣ ಮಾಡಿದ ವಿಜಯ್, ತಮ್ಮ ಪಕ್ಷವನ್ನು ಕೇವಲ ಸಿನಿಮಾ ಹಿನ್ನೆಲೆಯ ಪಕ್ಷ ಎಂದು ಟೀಕಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನ ಜನಪರ ಹೋರಾಟಗಳು, ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಪರ ನಡೆಸಿದ ಹೋರಾಟಗಳ ವಿವರ ನೀಡಿದ ಅವರು, “ನಮ್ಮದು ಜನರ ಮಧ್ಯೆ ಬೆಳೆದ ರಿಯಲ್ ಪಕ್ಷ” ಎಂದು ಸ್ಪಷ್ಟಪಡಿಸಿದರು.

ಭಾಷಣದ ಕೊನೆಯಲ್ಲಿ ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಈ ಹಿಂದೆ ಬಳಸಿದ್ದ ವೈರಲ್ ಸಂಜ್ಞೆಯನ್ನು ಮರುಕಳಿಸಿದ ವಿಜಯ್, ಪರೋಕ್ಷವಾಗಿ ರಾಜಕೀಯ ಎದುರಾಳಿಗಳಿಗೆ ಎಚ್ಚರಿಕೆ ನೀಡಿದರು. ವಿಶೇಷವಾಗಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮದ ಸಂದೇಶ ನೀಡಿದ ತಕ್ಷಣ ಆ ಸಂಜ್ಞೆ ಪ್ರದರ್ಶಿಸಿದ್ದರಿಂದ, ಇದು ಹಿಂದಿನ ಆಡಳಿತದ ವಿರುದ್ಧದ ರಾಜಕೀಯ ಸೂಚನೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ವಿಧಾನಸಭೆಯಲ್ಲಿನ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಂಬಲಿಗರು ವಿಜಯ್ ಅವರ ರಾಜಕೀಯ ಆತ್ಮವಿಶ್ವಾಸವನ್ನು ಪ್ರಶಂಸಿಸುತ್ತಿದ್ದರೆ, ವಿರೋಧಿಗಳು ಅದರ ಬಗ್ಗೆ ವಿಭಿನ್ನ ವ್ಯಾಖ್ಯಾನಗಳನ್ನು ಮಾಡುತ್ತಿದ್ದಾರೆ.

ಕೆ.ಆರ್.ಪುರ ತ್ರಿವಳಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ₹30 ಲಕ್ಷ ಸಾಲವೇ ಕೊಲೆಗೆ ಕಾರಣವಾಯ್ತಾ..?

0

ಬೆಂಗಳೂರು: ನಗರದ ಕೆ.ಆರ್.ಪುರದಲ್ಲಿ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಮುಖ ಆರೋಪಿ ಶ್ವೇತಾ ಸುಮಾರು 30 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದಳು ಎಂಬ ಮಾಹಿತಿ ಬೆಳಕಿಗೆ ಬಂದಿದ್ದು, ಇದೇ ಸಾಲದ ವಿಚಾರ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣದಲ್ಲಿ ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಮತ್ತು ಸುಪ್ರಿಯಾ (20) ಹತ್ಯೆಯಾಗಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಸದ್ಯ ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶ್ವೇತಾ ಮತ್ತು ಕೆನತ್ ಲಿವ್-ಇನ್ ಸಂಬಂಧದಲ್ಲಿದ್ದ ಸಂದರ್ಭದಲ್ಲಿ ಸುಮಾರು 30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲು ಹಣದ ಅಗತ್ಯವಿದ್ದ ಕಾರಣ, ಶ್ವೇತಾ ತನ್ನ ತಂದೆ-ತಾಯಿಯ ಬಳಿ ಆರ್ಥಿಕ ಸಹಾಯ ಕೇಳಿದ್ದಳು. ಆದರೆ ಪೋಷಕರು ಹಣ ನೀಡಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ.

ಇದಾದ ಬಳಿಕ ಕುಟುಂಬದ ಆಸ್ತಿಯಲ್ಲಿ ತನ್ನ ಪಾಲು ನೀಡುವಂತೆ ಶ್ವೇತಾ ಒತ್ತಾಯ ಮಾಡಿದ್ದಳು. ಈ ವಿಚಾರವಾಗಿ ಕುಟುಂಬದ ಸದಸ್ಯರ ನಡುವೆ ಹಲವು ಬಾರಿ ವಾಗ್ವಾದ ಮತ್ತು ಗಲಾಟೆಗಳು ನಡೆದಿದ್ದವು ಎನ್ನಲಾಗಿದೆ.

ಘಟನೆ ನಡೆದ ದಿನವೂ ಇದೇ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದ್ದು, ಬಳಿಕ ಶ್ವೇತಾ ಮತ್ತು ಕೆನತ್ ಸೇರಿ ತಂದೆ, ತಾಯಿ ಹಾಗೂ ತಂಗಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಲಭ್ಯವಾದ ಮಾಹಿತಿಯಂತೆ, ಶ್ವೇತಾ ಮತ್ತು ಕೆನತ್ ನಡುವಿನ ಲಿವ್-ಇನ್ ಸಂಬಂಧಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಮಗಳಿಗೆ ಬುದ್ಧಿವಾದ ಹೇಳಲು ಮುಂದಾದ ಸಂದರ್ಭದಲ್ಲಿ ಘಟನೆ ನಡೆದಿರಬಹುದು ಎಂದು ತನಿಖೆ ಸೂಚಿಸುತ್ತಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸೋಮಸುಂದರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಸಾವಿಗೂ ಮುನ್ನ, ತಮ್ಮ ಮೇಲೆ ಮಗಳು ಶ್ವೇತಾ ಮತ್ತು ಆಕೆಯ ಪ್ರಿಯಕರ ಕೆನತ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದು, ವಿವಿಧ ಕಡೆಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಹತ್ಯೆಯ ಹಿಂದಿನ ನಿಖರ ಕಾರಣಗಳ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ.

 

ರೀಲ್ಸ್‌ಗಾಗಿ ಧರಿಸಿದ ಉಡುಪೇ ಸಂಕಷ್ಟ ತಂದಿತೇ?: ಕಿಶನ್ ಬಿಳಗಲಿ-ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪ

ಬೆಂಗಳೂರು: ಹುಲಿ ಉಗುರು ಪ್ರಕರಣದ ಬಳಿಕ ಇದೀಗ ನವಿಲು ಗರಿ ವಿವಾದ ಕನ್ನಡ ಕಿರುತೆರೆ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಜನಪ್ರಿಯ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಗೆ ಅಧಿಕೃತ ದೂರು ಸಲ್ಲಿಕೆಯಾಗಿದೆ.

ನಟ-ನಟಿ ಜೋಡಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ರೀಲ್ಸ್‌ನಲ್ಲಿ ನವಿಲು ಗರಿಗಳಿಂದ ಅಲಂಕರಿಸಲಾದ ಉಡುಪು ಧರಿಸಿ ಕಾಣಿಸಿಕೊಂಡಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ನೈಜ ನವಿಲು ಗರಿಗಳನ್ನು ಬಳಸಿಕೊಂಡು ಉಡುಪು ತಯಾರಿಸಿ ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವುದು ವನ್ಯಜೀವಿ (ಸಂರಕ್ಷಣಾ) ಕಾಯ್ದೆಯ ಗಂಭೀರ ಉಲ್ಲಂಘನೆಯಾಗಬಹುದು ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವೈರಲ್ ವಿಡಿಯೋ ಮತ್ತು ಫೋಟೋಗಳ ವೈಜ್ಞಾನಿಕ ಪರಿಶೀಲನೆ ನಡೆಸಿ, ಬಳಸಿರುವ ಗರಿಗಳು ನೈಜವೋ ಅಥವಾ ಕೃತಕವೋ ಎಂಬುದನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಲಾಗಿದೆ. ನೈಜ ನವಿಲು ಗರಿಗಳಾಗಿರುವುದು ದೃಢಪಟ್ಟಲ್ಲಿ ಸಂಬಂಧಿತ ಉಡುಪುಗಳನ್ನು ವಶಕ್ಕೆ ಪಡೆದು ತನಿಖೆ ವಿಸ್ತರಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರ ಜೊತೆಗೆ ಗರಿಗಳ ಮೂಲ, ಖರೀದಿ, ಸಂಗ್ರಹಣೆ ಹಾಗೂ ಪೂರೈಕೆ ಸರಪಳಿಯ ಸಂಪೂರ್ಣ ತನಿಖೆ ನಡೆಸಬೇಕು. ನವಿಲು ಗರಿಗಳಿಗಾಗಿ ಅಕ್ರಮ ಬೇಟೆ, ಕಳ್ಳಸಾಗಣೆ ಅಥವಾ ಇತರೆ ವನ್ಯಜೀವಿ ಅಪರಾಧ ನಡೆದಿರುವ ಶಂಕೆ ಇದ್ದರೆ ವಿಶೇಷ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಸದ್ಯ ದೂರು ಅರಣ್ಯ ಇಲಾಖೆಯ ಗಮನಕ್ಕೆ ಬಂದಿದ್ದು, ಪ್ರಾಥಮಿಕ ಹಂತದ ಪರಿಶೀಲನೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

RSS ಟೀಕೆ ಬಿಟ್ಟು ರಾಜ್ಯದ ಗಂಭೀರ ಸಮಸ್ಯೆಗಳತ್ತ ಗಮನ ಕೊಡಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ಕಿಡಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಅನ್ನು ಪದೇ ಪದೇ ಟೀಕಿಸುತ್ತಿರುವ ವಿಚಾರಕ್ಕೆ ಬಿಜೆಪಿ ಮುಖಂಡ ಸಿ.ಟಿ. ರವಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಮಾಡಲು ಸಾಕಷ್ಟು ಕೆಲಸಗಳಿದ್ದು, ಆರ್‌ಎಸ್‌ಎಸ್‌ ಕುರಿತು ಹೇಳಿಕೆ ನೀಡುವುದಕ್ಕಿಂತ ರಾಜ್ಯದ ಗಂಭೀರ ಸಮಸ್ಯೆಗಳ ಕಡೆ ಗಮನಹರಿಸಬೇಕು ಎಂದು ಹೇಳಿದರು.

ಕರ್ನಾಟಕ ಡ್ರಗ್ಸ್ ಹಾವಳಿಯಿಂದ ತತ್ತರಿಸುತ್ತಿದ್ದು, ರಾಜ್ಯ ಡ್ರಗ್ಸ್ ಕ್ಯಾಪಿಟಲ್ ಆಗುವ ಆತಂಕ ಎದುರಾಗಿದೆ. ಇದರತ್ತ ಸರ್ಕಾರ ಗಮನಹರಿಸಬೇಕು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರು ದೊಡ್ಡ ಪ್ರಮಾಣದಲ್ಲಿ ಕರ್ನಾಟಕಕ್ಕೆ ಬರುತ್ತಿರುವ ಮಾಹಿತಿ ಇದೆ. ಇದು ದೇಶದ ಭದ್ರತೆಯ ದೃಷ್ಟಿಯಿಂದ ಗಂಭೀರ ವಿಷಯವಾಗಿದ್ದು, ಸರ್ಕಾರ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು.

ಭಯೋತ್ಪಾದಕರ ಸ್ಲೀಪರ್ ಸೆಲ್‌ಗಳ ಚಟುವಟಿಕೆಗಳಿಗೆ ಕರ್ನಾಟಕವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಇರುವುದಾಗಿ ಹೇಳಿದ ಅವರು, ಈ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಹಿತಿ ಸಂಗ್ರಹಿಸಿದ್ದು, ಉಗ್ರರ ಸಂಪರ್ಕ ಹೊಂದಿರುವ ಆರೋಪಿಗಳನ್ನು ಬಂಧಿಸಲಾಗಿದೆ. ಇಂತಹ ಗಂಭೀರ ವಿಷಯಗಳ ಬಗ್ಗೆ ಸರ್ಕಾರ ಹೆಚ್ಚಿನ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಗೆ ಸಂಬಂಧಿಸಿದ ಗೊಂದಲದ ಬಗ್ಗೆಯೂ ಮಾತನಾಡಿದ ಸಿ.ಟಿ. ರವಿ, ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ವೇಳಾಪಟ್ಟಿಯನ್ನು ಒಂದು ದಿನ ಮುಂದೂಡಿದ್ದರೆ ಅಥವಾ ಹಿಂದೂಡಿದ್ದರೆ, ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ ಎಂದು ಹೇಳಿದರು.

ಪರೀಕ್ಷೆಯಿಂದ ವಂಚಿತರಾಗಿ ಕಣ್ಣೀರು ಹಾಕಿದ ವಿದ್ಯಾರ್ಥಿಗಳ ನೋವಿನ ಬಗ್ಗೆ ಸರ್ಕಾರ ಯೋಚಿಸಬೇಕು. ಇದು ಅಧಿಕಾರದ ಅಹಂಕಾರದ ಪರಿಣಾಮ. ಅಧಿಕಾರದ ಮದವನ್ನು ಬಿಟ್ಟು ಜನರ ಹಿತದೃಷ್ಟಿಯಿಂದ ಆದ್ಯತೆಗಳನ್ನು ನಿರ್ಧರಿಸಬೇಕು ಎಂದು ಟೀಕಿಸಿದರು.

ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ. ಅಧಿಕಾರದ ಅಹಂಕಾರದಲ್ಲಿ ಬದುಕಿದವರು ಕೊನೆಯಲ್ಲಿ ಇತಿಹಾಸದಲ್ಲಿ ಉಳಿದಿಲ್ಲ. ಉತ್ತಮ ಕೆಲಸ ಮಾಡುವ ಅವಕಾಶ ಇದ್ದಾಗ ಅದನ್ನು ಬಿಟ್ಟು, ಉತ್ತಮ ಕೆಲಸ ಮಾಡುವವರ ವಿರುದ್ಧ ಅಪಪ್ರಚಾರ ನಡೆಸುವುದು ಸರಿಯಲ್ಲ. ಅಪಪ್ರಚಾರದಿಂದ ಪ್ರಚಾರ ಸಿಗಬಹುದು, ಆದರೆ ಅದು ಯಾವುದೇ ಘನ ಕಾರ್ಯವಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದರು.

error: Content is protected !!