ಬೆಂಗಳೂರು: ನಗರದಲ್ಲಿ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸಲು ಇಂದು ಅಂತಿಮ ಗಡುವು ನೀಡಲಾಗಿದ್ದು, ಜುಲೈ 1ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಕಾರ್ಯಾಚರಣೆ ಆರಂಭವಾಗಲಿದೆ.
ಸಚಿವ ಕೃಷ್ಣ ಭೈರೇಗೌಡ ಅವರು ಈಗಾಗಲೇ ಎರಡು ಸುತ್ತಿನ ಸಭೆಗಳನ್ನು ನಡೆಸಿ, ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೈಸೆನ್ಸ್ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
ಫುಟ್ಪಾತ್ಗಳು ಪಾದಚಾರಿಗಳ ಸಂಚಾರಕ್ಕೆ ಮಾತ್ರ ಮೀಸಲಾಗಿರಬೇಕು ಎಂದು ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯನ್ನು ಸಹ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಪಾರ್ಕಿಂಗ್, ಬೀದಿಬದಿ ವ್ಯಾಪಾರ, ಕಟ್ಟಡ ಸಾಮಗ್ರಿಗಳ ಸಂಗ್ರಹ ಹಾಗೂ ಬಿಡಾಡಿ ವಾಹನ ನಿಲುಗಡೆ ಸೇರಿದಂತೆ ವಿವಿಧ ಅತಿಕ್ರಮಣಗಳ ತೆರವಿಗೆ ಸಿದ್ಧತೆ ನಡೆದಿದೆ.
ಇದಕ್ಕೆ ವಿರುದ್ಧವಾಗಿ ಬೀದಿಬದಿ ವ್ಯಾಪಾರಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಜಿಬಿಎ ಯಾವುದೇ ರಾಜಿ ಇಲ್ಲದೆ ನಗರದಲ್ಲಿ ಸುಮಾರು 2,000 ಕಿಲೋಮೀಟರ್ ಪ್ರಮುಖ ರಸ್ತೆಗಳಲ್ಲಿ ಫುಟ್ಪಾತ್ಗಳನ್ನು ಮುಕ್ತಗೊಳಿಸಲು ನಿರ್ಧರಿಸಿದೆ.

