ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರದ ಅಸಮತೋಲನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮನುಷ್ಯನ ಅತಿಯಾದ ದುರಾಸೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಆರೋಗ್ಯಕರ ಜೀವನಕ್ಕಾಗಿ ಪರಿಸರ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ನಗರದ ಲಿಂಗಾಯತ ಪ್ರಗತಿಶೀಲ ಸಂಘದಲ್ಲಿ ನಡೆದ 2801ನೇ ಶಿವಾನುಭವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು, ಅಭಿವೃದ್ಧಿಯ ಹೆಸರಿನಲ್ಲಿ ಸಹಜ ಪರಿಸರವನ್ನು ನಾಶಪಡಿಸಿ ಕಾಂಕ್ರೀಟ್ ಕಾಡುಗಳನ್ನು ನಿರ್ಮಿಸಲಾಗುತ್ತಿದೆ. ಇದರ ಪರಿಣಾಮವಾಗಿ ನೀರು, ಗಾಳಿ ಹಾಗೂ ಆಹಾರದಲ್ಲಿ ವಿಷಕಾರಿ ಅಂಶಗಳು ಸೇರಿ ಮಾನವ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಅಂತರಾಷ್ಟ್ರೀಯ ಪರಿಸರ ದಿನಾಚರಣೆ ಅಂಗವಾಗಿ ಉಪನ್ಯಾಸ ನೀಡಿದ ಪ್ರೊ. ಸಿ.ಎಸ್. ಅರಸನಾಳ, ಪ್ರಕೃತಿ ತನ್ನ ಸಮತೋಲನ ಕಾಪಾಡಿಕೊಳ್ಳಲು ಹಲವು ಸಂಕೇತಗಳನ್ನು ನೀಡುತ್ತಿದ್ದರೂ ಮನುಷ್ಯ ಅದನ್ನು ನಿರ್ಲಕ್ಷಿಸುತ್ತಿದ್ದಾನೆ. ಗಿಡಮರಗಳ ನಾಶದಿಂದ ಶುದ್ಧ ಗಾಳಿ, ನೀರು ಮತ್ತು ಆಹಾರಕ್ಕಾಗಿ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ಗಿಡ ನೆಟ್ಟು ಅವುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಣ್ಣಿಗೇರಿ ಶಾಲೆಯ ಶಿಕ್ಷಕ ವಿ.ಎಂ. ಹಿರೇಮಠ ಅವರನ್ನು ಪರಿಸರ ಸಂರಕ್ಷಣೆಯಲ್ಲಿ ಸಲ್ಲಿಸಿರುವ ಸೇವೆಗಾಗಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದರು. ಮನೆ, ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡಮರಗಳನ್ನು ಬೆಳೆಸಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುತ್ತಿರುವ ಅವರ ಕಾರ್ಯವನ್ನು ಪ್ರಶಂಸಿಸಲಾಯಿತು.
ಇದೇ ವೇಳೆ ಶ್ರೀಮಠದ ಆವರಣವನ್ನು ನಿತ್ಯ ಸ್ವಚ್ಛಗೊಳಿಸುತ್ತಿರುವ ಶ್ರೀಮತಿ ಚೌರಮ್ಮ ಕರಿಗಾರ ಹಾಗೂ ನಗರಸಭೆ ಮತ್ತು ಆಸ್ಪತ್ರೆಗಳ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುತ್ತಿರುವ ಸಿಬ್ಬಂದಿಯನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಉಮೇಶ ವಿ. ಪುರದ ಸ್ವಾಗತಿಸಿದರು. ಶ್ರೀಮತಿ ಸುರೇಖಾ ಪಿಳ್ಳಿ ಕಾರ್ಯಕ್ರಮ ನಿರೂಪಿಸಿದರು. ಮೃತ್ಯುಂಜಯ ಹಾಗೂ ಸುತಾರ ವಚನ ಸಂಗೀತ, ಭೂಮಿಕಾ ಕೆ. ತುಕ್ಕಪ್ಪನವರ ಧರ್ಮಗ್ರಂಥ ಪಠಣ, ಬಸವರಾಜ ಕೆ. ತುಕ್ಕಪ್ಪನವರ ವಚನ ಚಿಂತನೆ ನಡೆಸಿಕೊಟ್ಟರು. ಆರಂಭದಲ್ಲಿ ಡಾ. ನಿಂಗೂ ಸೊಲಗಿ ಪರಿಸರ ಗೀತೆಗಳನ್ನು ಪ್ರಸ್ತುತಪಡಿಸಿದರು.
ವೇದಿಕೆಯಲ್ಲಿ ಶ್ರೀಮತಿ ಪ್ರಭಾವತಿ ಕಲ್ಲನಗೌಡರ ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್ಮನ್ ಡಾ. ರಮೇಶ ಮ. ಕಲ್ಲನಗೌಡರ, ಉಪಾಧ್ಯಕ್ಷ ಪ್ರಭು ಗಂಜಿಹಾಳ, ಕಾರ್ಯದರ್ಶಿ ಸಿದ್ಧರಾಮ ಪಟ್ಟೇದ, ಸಹಕಾರ್ಯದರ್ಶಿ ಪ್ರತಿಭಾ ಬಡ್ನಿ, ಕೋಶಾಧ್ಯಕ್ಷ ವೀರಣ್ಣ ಗೋಟಡಕಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಿದ್ದರು.

