Home Blog

40 ಕಿ.ಮೀ ಚೇಸ್ ಮಾಡಿ ದನಗಳ್ಳರ ಗ್ಯಾಂಗ್ ಬಂಧಿಸಿದ ಯಾದಗಿರಿ ಪೊಲೀಸರು!

0

ಯಾದಗಿರಿ: ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ರೈತರ ನಿದ್ದೆಗೆಡಿಸಿದ್ದ ಅಂತಾರಾಜ್ಯ ದನಗಳ್ಳರ ಗ್ಯಾಂಗ್‌ನ್ನು ಯಾದಗಿರಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ.

ದನಗಳನ್ನು ಕದ್ದು ಸ್ಕಾರ್ಪಿಯೋದಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಪೊಲೀಸರು ಸುಮಾರು 40 ಕಿ.ಮೀ ಬೆನ್ನಟ್ಟಿ ಹಿಡಿದಿದ್ದಾರೆ.

ವಡಗೇರ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಈ ಗ್ಯಾಂಗ್ ದನಗಳನ್ನು ಕಳ್ಳತನ ಮಾಡುತ್ತಿತ್ತು ಎನ್ನಲಾಗಿದೆ. ಮನೆಗಳ ಮುಂದೆ ಹಾಗೂ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನಗಳಿಗೆ ಅರಿವಳಿಕೆ ಇಂಜೆಕ್ಷನ್ ನೀಡಿ, ಅವು ಪ್ರಜ್ಞೆ ತಪ್ಪಿದ ಬಳಿಕ ಸ್ಕಾರ್ಪಿಯೋ ವಾಹನದಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ದ ದನಗಳನ್ನು ಕಸಾಯಿಖಾನೆಗಳಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಪೊಲೀಸರನ್ನು ಕಂಡು ವೇಗವಾಗಿ ಪರಾರಿ:

ಕಲಬುರಗಿಯಲ್ಲಿ ತಾತ್ಕಾಲಿಕವಾಗಿ ವಾಸವಿದ್ದ ಗ್ಯಾಂಗ್, ಮತ್ತೊಂದು ದನವನ್ನು ಕದ್ದು ಕಪ್ಪು ಬಣ್ಣದ ಸ್ಕಾರ್ಪಿಯೋದಲ್ಲಿ ಪರಾರಿಯಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ವಡಗೇರ ಹಾಗೂ ಯಾದಗಿರಿ ಗ್ರಾಮಾಂತರ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದರು.

ಪೊಲೀಸರು ವಾಹನವನ್ನು ಬೆನ್ನಟ್ಟಿದರೂ ಆರೋಪಿಗಳು ಸ್ಕಾರ್ಪಿಯೋ ನಿಲ್ಲಿಸದೆ ವೇಗವಾಗಿ ಸಾಗುತ್ತಿದ್ದರು. ಕೊನೆಗೆ ಯಾದಗಿರಿ ತಾಲೂಕಿನ ಯರಗೋಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ರಸ್ತೆಗೆ ಅಡ್ಡಲಾಗಿ ಜೆಸಿಬಿ ಹಾಗೂ ಟ್ರ್ಯಾಕ್ಟರ್ ನಿಲ್ಲಿಸಿದರು.

ವೇಗವಾಗಿ ಬಂದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಜೆಸಿಬಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ಜಖಂಗೊಂಡಿದ್ದು, ಆರೋಪಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಹರಿಯಾಣ ಮೂಲದ ಸಮೂನ್, ಅನಿಬ್, ಇರ್ಷಾದ್, ನಪೀಸ್, ಅಜೀಮ್ ಹಾಗೂ ರಾಜಸ್ಥಾನ ಮೂಲದ ನಿತಿನ್ ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ರೈತರಿಗೆ ತೊಂದರೆ ನೀಡುತ್ತಿದ್ದ ದನಗಳ್ಳರ ಗ್ಯಾಂಗ್‌ನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

“ರೂಮ್‌ಗೆ ಬಾ, ಇಲ್ಲ ಅಂದ್ರೆ ಮನೆಯ ಮರ್ಯಾದೆ ಹಾಳು ಮಾಡ್ತೀನಿ!” ಸಹಪಾಠಿ ಕಿರುಕುಳಕ್ಕೆ ಬೇಸತ್ತು ಯುವತಿ ಸೂಸೈಡ್

0

ಬೆಂಗಳೂರು: ಸಹಪಾಠಿಯೊಬ್ಬನ ಕಿರುಕುಳದಿಂದ ಬೇಸತ್ತು 22 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಮೂಲದ ವಾಣಿ (22) ಮೃತ ಯುವತಿ.

ಸುಮಾರು ಒಂದು ವರ್ಷದ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ವಾಣಿ, ನಗರದ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಆಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ಮುನ್ನ ವಾಣಿ ಡೆತ್‌ನೋಟ್ ಬರೆದಿಟ್ಟಿದ್ದು, ಕಾಲೇಜಿನ ಸಹಪಾಠಿಯಾಗಿದ್ದ ಅಭಿಷೇಕ್ ಎ.ಎಸ್. ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.

ಡೆತ್‌ನೋಟ್‌ನಲ್ಲಿ, ಅಭಿಷೇಕ್ ಒಂದು ವರ್ಷದಿಂದ ವಾಟ್ಸ್‌ಆ್ಯಪ್ ಮೂಲಕ ವಿಡಿಯೋ ಹಾಗೂ ಫೋಟೋಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಅಲ್ಲದೆ, “ರೂಮ್‌ಗೆ ಬಾ, ಇಲ್ಲದಿದ್ದರೆ ನಿಮ್ಮ ಮನೆಯ ಮರ್ಯಾದೆ ಹಾಳು ಮಾಡುತ್ತೇನೆ” ಎಂದು ಬೆದರಿಕೆ ಹಾಕುತ್ತಿದ್ದ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

“ನನ್ನ ಕುಟುಂಬದ ಮರ್ಯಾದೆ ಉಳಿಯಬೇಕು ಎಂಬ ಕಾರಣಕ್ಕೆ ಈ ನಿರ್ಧಾರ ಮಾಡುತ್ತಿದ್ದೇನೆ. ನನ್ನ ಸಾವಿಗೆ ಅಭಿಷೇಕ್ ಕಾರಣ. ಅವನಿಗೆ ಶಿಕ್ಷೆ ಆಗಬೇಕು, ಅದೇ ನನ್ನ ಕೊನೆಯ ಆಸೆ” ಎಂದು ವಾಣಿ ಬರೆದಿದ್ದಾರೆ.

ಘಟನೆ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್‌ನಲ್ಲಿ ಹೆಸರು ಉಲ್ಲೇಖವಾಗಿರುವ ಅಭಿಷೇಕ್‌ನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

 

‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’: ಡಿಕೆ ಸುರೇಶ್‌ಗೆ ಹೆಚ್‌ಡಿಕೆ ತಿರುಗೇಟು

0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ಮುಂದುವರಿದಿದೆ.

ಡಿ.ಕೆ. ಸುರೇಶ್ ಮತ್ತು ಸಚಿವ ಎಚ್.ಸಿ. ಬಾಲಕೃಷ್ಣ ಅವರ ಟೀಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ’ ಎಂದು ಡಿ.ಕೆ. ಸುರೇಶ್ ಹಾಗೂ ಎಚ್.ಸಿ. ಬಾಲಕೃಷ್ಣ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’ ಎಂದು ವ್ಯಂಗ್ಯವಾಡಿದರು.

ರಾಮನಗರ ತಾಲೂಕಿನ ಅಕ್ಕೂರು ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ನೈಸ್ ರಸ್ತೆ ಟೋಲ್ ಸಂಗ್ರಹದ ವಿರುದ್ಧ ಆರೋಪ ಮಾಡಿದರು. 20 ವರ್ಷಗಳಿಂದ ರೈತರ ಭೂಮಿಯನ್ನು ಪಡೆದುಕೊಂಡರೂ, ಅವರಿಗೆ ಸರಿಯಾದ ಪರಿಹಾರ ನೀಡಿಲ್ಲ. ಸುಮಾರು 4 ಸಾವಿರ ಕುಟುಂಬಗಳಿಗೆ ನಿವೇಶನ ನೀಡುವುದಾಗಿ ಹೇಳಿದ್ದರೂ ಅದು ಇನ್ನೂ ಈಡೇರಿಲ್ಲ. ನೈಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಅಲ್ಲ, ಅದು ರಾಜ್ಯ ಸರ್ಕಾರಕ್ಕೆ ಸೇರಿದ ರಸ್ತೆ. ರೈತರಿಗೆ ಪರಿಹಾರ ನೀಡದೆ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಸಚಿವ ಎಚ್.ಸಿ. ಬಾಲಕೃಷ್ಣ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ₹600 ಕೋಟಿ ಕಾಮಗಾರಿಯ ಹಣದ ವಿಚಾರದಲ್ಲಿ ತಮ್ಮ ಬಳಿ ವ್ಯಕ್ತಿಯೊಬ್ಬರು ಬಂದು ವಿಷಯ ಪ್ರಸ್ತಾಪಿಸದಂತೆ ಮನವಿ ಮಾಡಿದ್ದರು. ‘ಇವನಿಂದ ನಾನು ಕಲಿಯಬೇಕಾ?’ ಎಂದು ಪ್ರಶ್ನಿಸಿದರು.

ಬೆಂಗಳೂರು–ಮೈಸೂರು ರಸ್ತೆ ನಿರ್ಮಾಣದ ಬಗ್ಗೆಯೂ ಮಾತನಾಡಿದ ಕುಮಾರಸ್ವಾಮಿ, ಮಾಯಗನಹಳ್ಳಿ ಬಳಿ ಬಸ್ ಅಪಘಾತದಲ್ಲಿ ಎಂಟು ಮಕ್ಕಳು ಮೃತಪಟ್ಟ ಬಳಿಕ ಎಚ್.ಡಿ. ದೇವೇಗೌಡರು ಉತ್ತಮ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದರು ಎಂದು ಹೇಳಿದರು.

‘ಕುಮಾರಸ್ವಾಮಿ ಪಾಪದ ಕೊಳೆ ತೊಳೆಯುತ್ತಿದ್ದಾರೆ’ ಎಂಬ ಡಿ.ಕೆ. ಸುರೇಶ್ ಹೇಳಿಕೆಗೂ ತಿರುಗೇಟು ನೀಡಿದ ಅವರು, ರಾಮನಗರ ಹಾಗೂ ಕನಕಪುರದ ಹಿಂದಿನ ಪರಿಸ್ಥಿತಿ, ದೇವೇಗೌಡರ ಕಾಲದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ದದೇಗಲ್ ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ; ತರಕಾರಿ ತರಲೂ ಹಣವಿಲ್ಲದೆ ವಿದ್ಯಾರ್ಥಿಗಳ ಪರದಾಟ

0

ಕೊಪ್ಪಳ: ತಾಲೂಕಿನ ದದೇಗಲ್ ಬಳಿ ಇರುವ ಡಾ. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.

ವಿದ್ಯಾರ್ಥಿಗಳಿಗೆ ಸಮರ್ಪಕ ಊಟ ನೀಡಲು ಅಗತ್ಯ ತರಕಾರಿಯನ್ನೂ ಖರೀದಿಸಲು ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ವಸತಿ ನಿಲಯದಲ್ಲಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಕಳೆದ ಮೂರು ತಿಂಗಳಿಂದ ವಾರ್ಡನ್ ಹಾಸ್ಟೆಲ್‌ಗೆ ಭೇಟಿ ನೀಡಿಲ್ಲ ಎಂದು ಆರೋಪಿಸಲಾಗಿದೆ. ಊಟಕ್ಕೆ ತರಕಾರಿ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಪಕ್ಕದ ವಸತಿ ನಿಲಯದಿಂದ ತರಕಾರಿ ತಂದು ಅಡುಗೆ ಮಾಡಲಾಗುತ್ತಿದೆ ಎನ್ನಲಾಗಿದೆ.

ವಿದ್ಯಾರ್ಥಿಗಳ ಊಟಕ್ಕಾಗಿ ತರಕಾರಿ, ಮೊಟ್ಟೆ ಹಾಗೂ ಚಿಕನ್ ಖರೀದಿಸಲು ಸುಮಾರು ₹50 ಸಾವಿರ ಹಣವನ್ನು ನೈಟ್ ವಾಚ್‌ಮನ್ ಹಾಗೂ ಅಡುಗೆ ಸಹಾಯಕ ಸಿಬ್ಬಂದಿಯೇ ತಮ್ಮ ಸ್ವಂತ ಹಣದಿಂದ ಖರ್ಚು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ, ಪಕ್ಕದ ವಸತಿ ನಿಲಯದಿಂದ ಅಗತ್ಯ ವಸ್ತುಗಳನ್ನು ತಂದು ಅಡುಗೆ ಮಾಡುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಹಾಗೂ ಗುಣಮಟ್ಟದ ಆಹಾರ ಒದಗಿಸಬೇಕಾದ ವಸತಿ ನಿಲಯದಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕಲ್ಲಿಗೆ ಡಿಕ್ಕಿಯಾಗಿ ‘ಆಯಾನ್’ ಬೋಟ್ ಮುಳುಗಡೆ; ಮೀನುಗಾರರ ಸಮಯಪ್ರಜ್ಞೆಯಿಂದ 6 ಮಂದಿ ರಕ್ಷಣೆ

0

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ನೀರು ನುಗ್ಗಿದ ಪರಿಣಾಮ ಬೋಟ್ ಮುಳುಗಡೆಯಾದ ಘಟನೆ ಮಂಗಳೂರಿನ ಅಳಿವೆಬಾಗಿಲಿನಲ್ಲಿ ನಡೆದಿದೆ.

‘ಆಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಳಿವೆಬಾಗಿಲಿನಲ್ಲಿ ಬೋಟ್‌ನ ತಳಭಾಗ ಕಲ್ಲಿಗೆ ಬಡಿದಿದೆ. ಪರಿಣಾಮ ಬೋಟ್‌ಗೆ ನೀರು ನುಗ್ಗಿ ಕೆಲವೇ ಸಮಯದಲ್ಲಿ ಮುಳುಗಡೆಯಾಗಿದೆ.

ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದು, ಸಮೀಪದಲ್ಲಿದ್ದ ಇತರೆ ಮೀನುಗಾರಿಕಾ ಬೋಟ್‌ಗಳಲ್ಲಿದ್ದ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಈ ಬೋಟ್ ಇಬ್ರಾಹಿಂ ಖಲೀಲ್ ಎಂಬುವರಿಗೆ ಸೇರಿದ್ದು ಎನ್ನಲಾಗಿದ್ದು, ಬೋಟ್ ಮುಳುಗಡೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಯಾದಗಿರಿಯಲ್ಲಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ, ಮೂವರು ಕೂಲಿ ಕಾರ್ಮಿಕರ ಸಾವು!

0

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ.

ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬೊಲೆರೊದಲ್ಲಿದ್ದ ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಮೃತಪಟ್ಟಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಎಂಟು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ; ದೇವಿಮನೆ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ!

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಬರುವ ದೇವಿಮನೆ ಘಾಟ್ ಪ್ರದೇಶದಲ್ಲಿ ಭಾರಿ ಮಳೆಗೆ ಮತ್ತೆ ಗುಡ್ಡ ಕುಸಿದಿದೆ.

ರಾತ್ರಿಯಿಂದ ಮುಂಜಾನೆಯವರೆಗೆ ಸುರಿದ ಧಾರಾಕಾರ ಮಳೆಯಿಂದ ಹೆದ್ದಾರಿಯ ಒಂದು ಬದಿಯ ಗುಡ್ಡದ ಮಣ್ಣು ರಸ್ತೆಗೆ ಕುಸಿದುಬಿದ್ದಿದೆ.

ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರಲ್ಲಿ ಆತಂಕ ಮೂಡಿದೆ. ರಸ್ತೆಗೆ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಕೆಲವು ತಿಂಗಳ ಹಿಂದಷ್ಟೇ ಇದೇ ದೇವಿಮನೆ ಘಾಟ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಇದೀಗ ಮುಂಗಾರು ಮಳೆ ಮತ್ತೆ ಚುರುಕಾಗಿರುವ ಹಿನ್ನೆಲೆಯಲ್ಲಿ ಘಟ್ಟ ಪ್ರದೇಶದಲ್ಲಿ ಸರಣಿ ಭೂಕುಸಿತಗಳು ಸಂಭವಿಸುವ ಆತಂಕ ಎದುರಾಗಿದೆ.

ಸ್ಥಳೀಯ ಆಡಳಿತ ಹಾಗೂ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಸ್ತೆಗೆ ಬಿದ್ದಿರುವ ಮಣ್ಣು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ದೇವಿಮನೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕೋರಮಂಗಲದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

0

ಬೆಂಗಳೂರು: ನಡುರಸ್ತೆಯಲ್ಲೇ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಹೊತ್ತಿ ಉರಿದ ಘಟನೆ ನಗರದ ಕೋರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ನಡೆದಿದೆ.

ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ವಾಹನಕ್ಕೆ ವ್ಯಾಪಿಸಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾತ್ರಿ ಸುಮಾರು 11.30ರ ವೇಳೆಗೆ ಘಟನೆ ನಡೆದಿದ್ದು, ಕಾರು ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ. ಇದನ್ನು ಕಂಡ ಸ್ಥಳೀಯರು ಹಾಗೂ ವಾಹನ ಸವಾರರು ಆತಂಕಗೊಂಡಿದ್ದಾರೆ.

ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದ ಬಳಿಕ, ಸ್ಥಳದಲ್ಲಿದ್ದ ವಾಹನ ಸವಾರರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ.

ಘಟನೆಯಿಂದ ಆಗರ–ಸರ್ಜಾಪುರ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Gold Rate Today: ವಾರಾಂತ್ಯದಲ್ಲೂ ಏರಿದ ಚಿನ್ನದ ಬೆಲೆ; ಇಂದಿನ ರೇಟ್ ಇಲ್ಲಿದೆ ನೋಡಿ

0

ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಮುಂದುವರಿದಿದ್ದು, ವಾರಾಂತ್ಯದಲ್ಲೂ ಬಂಗಾರದ ದರ ಹೆಚ್ಚಾಗಿದೆ.

ಪ್ರತಿ ಗ್ರಾಂ ಚಿನ್ನದ ಬೆಲೆ ₹240 ಏರಿಕೆಯಾಗಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು ₹750ರಷ್ಟು ಹೆಚ್ಚಳ ಕಂಡಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ದಾಖಲಾಗಿದೆ. ಸ್ಪಾಟ್ ಗೋಲ್ಡ್ ದರ ಕೂಡ ಸುಮಾರು 2 ಡಾಲರ್ ಹೆಚ್ಚಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,49,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,309
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,950
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,232
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.

ಮಡಿವಾಳದಲ್ಲಿ ಮೆಡಿಕಲ್ ಶಾಪ್ ಮಾಲೀಕನ ಭೀಕರ ಕೊಲೆ: ಶಬ್ಬೀರ್ ಹತ್ಯೆಗೆ ಪ್ರತೀಕಾರದ ಶಂಕೆ!?

0

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸದ ಆರೋಪ ಕೇಳಿಬಂದಿದ್ದು, ಮಡಿವಾಳದ ಅಂಡರ್‌ಪಾಸ್‌ ಸಮೀಪ ಮೆಡಿಕಲ್ ಶಾಪ್ ನಡೆಸುತ್ತಿದ್ದ ವ್ಯಕ್ತಿಯನ್ನು ಜನರ ಎದುರಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಂಗಮ್ಮನ ಪಾಳ್ಯದ ನಿವಾಸಿ ಸುಹೇಲ್ ಮೃತ ವ್ಯಕ್ತಿ.

ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ಸುಹೇಲ್ ಮಡಿವಾಳದಿಂದ ಕೊರಮಂಗಲದ ಕಡೆಗೆ ತೆರಳುತ್ತಿದ್ದ ವೇಳೆ, ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಿಂದ ಬೈಕ್ ನಿಲ್ಲಿಸಿಕೊಂಡಿದ್ದರು. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಎರಡು ತಲ್ವಾರ್‌ಗಳಿಂದ ಸುಹೇಲ್ ಮೇಲೆ ದಾಳಿ ನಡೆಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಸುಹೇಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಹಂತಕರು ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಸಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸುಹೇಲ್ ಹತ್ಯೆ ಹಿಂದೆ ಜನವರಿ 13ರಂದು ಬಂಡೆಪಾಳ್ಯದಲ್ಲಿ ನಡೆದಿದ್ದ ರೌಡಿಶೀಟರ್ ಶಬ್ಬೀರ್ ಹತ್ಯೆಯ ಪ್ರತೀಕಾರದ ಶಂಕೆ ವ್ಯಕ್ತವಾಗಿದೆ. ಶಬ್ಬೀರ್ ಕೊಲೆ ಪ್ರಕರಣದಲ್ಲಿ ಸುಹೇಲ್ ಸಹೋದರರಾದ ಖಲೀಂ, ನಜೀರ್ ಸೇರಿದಂತೆ ಮೂವರು ಭಾಗಿಯಾಗಿದ್ದರು ಎನ್ನಲಾಗಿದೆ.

ಆದರೆ, ಶಬ್ಬೀರ್ ಕೊಲೆ ಪ್ರಕರಣಕ್ಕೂ ಸುಹೇಲ್‌ಗೂ ಯಾವುದೇ ಸಂಬಂಧವಿರಲಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ಸುಹೇಲ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಸಹೋದರರ ಮೇಲಿನ ದ್ವೇಷಕ್ಕೆ ಸುಹೇಲ್‌ನನ್ನೇ ಗುರಿಯಾಗಿಸಿ ಹತ್ಯೆ ಮಾಡಿರುವ ಸಾಧ್ಯತೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ಸುಜಿತಾ, ಸಿಸಿಬಿ ಡಿಸಿಪಿ ಹರಿಬಾಬು ಹಾಗೂ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಣ್ಣನ ಕೊಲೆಗೆ ತಮ್ಮನ ರಿವೇಂಜ್ ಪ್ರತಿಜ್ಞೆ:

ಅಣ್ಣ ಸುಹೇಲ್ ಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದಿದ್ದ ಸಹೋದರ ನಜೀರ್, ಹಂತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. “ಸುಹೇಲ್ ನನ್ನ ಅಣ್ಣ ಮಾತ್ರ ಆಗಿರಲಿಲ್ಲ, ಅಪ್ಪನ ರೀತಿಯಲ್ಲಿದ್ದ. ಆತನನ್ನು ಕೊಲೆ ಮಾಡಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ನಜೀರ್ ಪ್ರತೀಕಾರದ ಶಪಥ ಮಾಡಿದ್ದಾನೆ ಎನ್ನಲಾಗಿದೆ.

ಕಳೆದ ಕೆಲ ದಿನಗಳಿಂದಲೇ ಕೊಲೆಗೆ ಸ್ಕೆಚ್?

ಸುಹೇಲ್ ಹತ್ಯೆ ಪೂರ್ವಯೋಜಿತವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕಳೆದ ಕೆಲ ದಿನಗಳಿಂದಲೇ ಆರೋಪಿಗಳು ಆತನ ಚಲನವಲನಗಳನ್ನು ಗಮನಿಸುತ್ತಿದ್ದರು ಎನ್ನಲಾಗಿದೆ. ಹಾರ್ಲೆ ಡೇವಿಡ್‌ಸನ್ ಬೈಕ್‌ನಲ್ಲಿ ತೆರಳುತ್ತಿದ್ದ ಸುಹೇಲ್‌ನನ್ನು ಹಂತಕರು ಹಿಂಬಾಲಿಸಿ ದಾಳಿ ನಡೆಸಿರುವ ಸಾಧ್ಯತೆ ಇದೆ.

ಹತ್ಯೆ ಬಳಿಕ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಬಿಸಾಕಿ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರಕರಣದ ತನಿಖೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ಡಿವಿಆರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಸುಹೇಲ್ ಮಂಗಮ್ಮನ ಪಾಳ್ಯದಿಂದ ಮಡಿವಾಳ ಮುಖ್ಯರಸ್ತೆಗೆ ಬಂದಿದ್ದೇಕೆ? ಬೊಮ್ಮನಹಳ್ಳಿಯಲ್ಲಿರುವ ಮೆಡಿಕಲ್ ಶಾಪ್‌ನಿಂದ ಹೊರಡುವಾಗ ಕೊನೆಯದಾಗಿ ಸುಹೇಲ್‌ಗೆ ಕರೆ ಮಾಡಿದ್ದು ಯಾರು? ಹಂತಕರು ಆತನ ಚಲನವಲನಗಳನ್ನು ಹೇಗೆ ಗಮನಿಸಿದರು? ಎಂಬ ಹಲವು ಪ್ರಶ್ನೆಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಂತಕರ ಪತ್ತೆಗೆ ಮಡಿವಾಳ ಪೊಲೀಸರು ಹಾಗೂ ಸಿಸಿಬಿ ತಂಡಗಳು ಕಾರ್ಯಾಚರಣೆ ಮುಂದುವರಿಸಿವೆ.