ಕೋಲ್ಕತ್ತಾ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಜಹಾಂಗೀರ್ ಖಾನ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಅಧಿಕಾರಿಗಳು ಬಂಧಿಸಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಜಹಾಂಗೀರ್ ಖಾನ್ ಅವರನ್ನು ಸೋಮವಾರ ಮುಂಜಾನೆ ನೇಪಾಳ ಗಡಿ ಸಮೀಪ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಕಳೆದ ಕೆಲವು ದಿನಗಳಿಂದ ಅವರ ಚಲನವಲನಗಳ ಕುರಿತು ನಿಗಾ ವಹಿಸಿದ್ದ ಎಸ್ಟಿಎಫ್ ತಂಡ, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.
ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆ ವ್ಯಾಪ್ತಿಯ ಫಾಲ್ಟಾ ಪೊಲೀಸ್ ಠಾಣೆಯಲ್ಲಿ ಜಹಾಂಗೀರ್ ಖಾನ್ ವಿರುದ್ಧ ಒಟ್ಟು ಏಳು ಎಫ್ಐಆರ್ಗಳು ದಾಖಲಾಗಿವೆ. ಪ್ರಕರಣಗಳು ದಾಖಲಾಗಿದ ಬಳಿಕ ಪೊಲೀಸರು ಹುಡುಕಾಟ ಆರಂಭಿಸಿದ್ದರೂ, ಅವರು ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ತಿಳಿದುಬಂದಿದೆ.
ಖಾನ್ ಅವರ ಇರುವಿಕೆ ಕುರಿತು ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ವಿಶೇಷ ಕಾರ್ಯಪಡೆ ನಿರಂತರ ನಿಗಾ ವಹಿಸಿತ್ತು. ಅಂತಿಮವಾಗಿ ನೇಪಾಳ ಗಡಿ ಪ್ರದೇಶದಲ್ಲಿ ಅವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬಂಧಿತ ನಾಯಕನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

