Home Blog

ಕಳೆದ ವರ್ಷ ತುಂಬಿದ್ದ ಹೇಮಾವತಿ ಡ್ಯಾಂ ಈ ವರ್ಷ ಖಾಲಿ! ರೈತರು ಕಂಗಾಲು

ಹಾಸನ: ಮಲೆನಾಡು ಭಾಗದಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ.

ಗೊರೂರು ಸಮೀಪದ 37 ಟಿಎಂಸಿ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ ಕೇವಲ 14 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. ಅದರಲ್ಲಿ ಬಳಕೆಗೆ ಯೋಗ್ಯವಾದ ನೀರು ಸುಮಾರು 10 ಟಿಎಂಸಿ ಮಾತ್ರ ಉಳಿದಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ಸುಮಾರು 25 ಟಿಎಂಸಿ ನೀರು ಇದ್ದು, ಪರಿಸ್ಥಿತಿ ಬಹಳ ಉತ್ತಮವಾಗಿತ್ತು.

ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗಗಳಲ್ಲಿ ಮಳೆಯ ಕೊರತೆ ಉಂಟಾಗಿರುವುದರಿಂದ ಜಲಾಶಯಕ್ಕೆ ನೀರಿನ ಒಳಹರಿವು ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳ ಕೃಷಿಗೆ ನೀರು ಒದಗಿಸುವ ಹೇಮಾವತಿ ನದಿಯ ಹರಿವಿಗೂ ತೊಂದರೆ ಉಂಟಾಗಿದೆ.

ಮಳೆ ಕೊರತೆ ಹಾಗೂ ಜಲಾಶಯದ ನೀರಿನ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಪ ಮಳೆಯನ್ನು ನಂಬಿ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಭೀತಿಯಲ್ಲಿದ್ದು, ಬೋರ್‌ವೆಲ್‌ಗಳ ಮೇಲೂ ಒತ್ತಡ ಹೆಚ್ಚಾಗಿದೆ.

ಈ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿನ ಪೂರೈಕೆಗೂ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಸರ್ಕಾರಿ ಅಧಿಕಾರಿಗಳ ಕಿರುಕುಳ ಆರೋಪ: ಬೀದಿ ವ್ಯಾಪಾರಿಗಳಿಂದ ದೊಡ್ಡ ಮಟ್ಟದ ಮುಷ್ಕರ!

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಂದ ನಡೆಯುತ್ತಿರುವ ಕಿರುಕುಳವನ್ನು ಖಂಡಿಸಿ ಹಾಗೂ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಸುಮಾರು 58,000ಕ್ಕೂ ಹೆಚ್ಚು ಬೇಕರಿ, ಬೀಡಾ ಅಂಗಡಿ ಮಾಲೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಜೂನ್ 18ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯ ಅಧ್ಯಕ್ಷ ರವಿಶೆಟ್ಟಿ ಬೈಂದೂರು ಅವರು ಮಾತನಾಡಿ, ಸಣ್ಣ ವ್ಯಾಪಾರಿಗಳು ಕಾನೂನುಬದ್ಧವಾಗಿ ವ್ಯಾಪಾರ ನಡೆಸುತ್ತಾ ತೆರಿಗೆ ಪಾವತಿಸುತ್ತಿದ್ದರೂ ನಿರಂತರ ತಪಾಸಣೆ, ದಂಡ ಹಾಗೂ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬೇಕರಿಗಳು ಹಾಗೂ ಸಣ್ಣ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ. ರಾಜ್ಯದ ಇತರ ಭಾಗಗಳಲ್ಲಿ ಭಾಗಶಃ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದ್ದು, ಪ್ರತಿಭಟನೆ ವಿಸ್ತರಿಸುವ ಸೂಚನೆಗಳಿವೆ.

ಸಂಘಟನೆಗಳ ಪ್ರಕಾರ, ಅಧಿಕಾರಿಗಳು ವ್ಯಾಪಾರಿಗಳನ್ನು ಪೊಲೀಸ್ ಠಾಣೆ ಹಾಗೂ ಪಾಲಿಕೆ ಕಚೇರಿಗಳಿಗೆ ಅಲೆದಾಡಿಸಿ ವಿಚಾರಣೆ ನಡೆಸುತ್ತಿರುವುದು ಹಾಗೂ ಅನಗತ್ಯ ದಂಡ ವಿಧಿಸುತ್ತಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಂಘಟನೆಗಳು ಎಚ್ಚರಿಸಿದ್ದು, ತಮ್ಮ ಬೇಡಿಕೆಗಳು ಈಡೇರದವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿವೆ.

ನಟಿ ಸಂಚಿತಾ ಉಗಾಳೆ ಆತ್ಮಹತ್ಯೆಗೆ ಕಿರುಕುಳವೇ ಕಾರಣ’: ತಂದೆಯ ಗಂಭೀರ ಆರೋಪ

ಮುಂಬೈ: ಕಿರುತೆರೆ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಹೊರಬರುತ್ತಿವೆ. ಜೂನ್ 14ರಂದು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ನಟಿಯ ಸಾವಿನ ಹಿಂದೆ ಮಾನಸಿಕ ಕಿರುಕುಳ ಮತ್ತು ಹಣಕ್ಕಾಗಿ ಒತ್ತಡ ಹೇರಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನು ಅವರ ತಂದೆ ಮಚ್ಚೀಂದ್ರ ಉಗಾಳೆ ಮಾಡಿದ್ದಾರೆ.

ಸಂಚಿತಾ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಹೇಳಿರುವ ಅವರು, “ಹೊರಗೆ ಎಲ್ಲರೊಂದಿಗೆ ನಗುಮುಖದಿಂದ ವರ್ತಿಸುತ್ತಿದ್ದಳು. ಆದರೆ ಒಳಗೊಳಗೆ ಭಾರೀ ನೋವು ಅನುಭವಿಸುತ್ತಿದ್ದಳು. ಕೆಲವೊಮ್ಮೆ ಏಕಾಏಕಿ ಖಿನ್ನತೆಗೆ ಜಾರುತ್ತಿದ್ದಳು” ಎಂದು ತಿಳಿಸಿದ್ದಾರೆ.

ಕುಟುಂಬದವರು ಆಕೆಯ ಮಾನಸಿಕ ಸ್ಥಿತಿಯನ್ನು ಗಮನಿಸಿ ಸದಾ ಜೊತೆಗೇ ಇರುತ್ತಿದ್ದರು. “ನಾವು ಆಕೆಯನ್ನು ಒಬ್ಬಳೇ ಬಿಡುತ್ತಿರಲಿಲ್ಲ. ಆದರೆ ಘಟನೆ ನಡೆದ ದಿನ ಕೇವಲ ಅರ್ಧ ಗಂಟೆ ಮಾತ್ರ ಆಕೆ ಒಂಟಿಯಾಗಿದ್ದಳು. ಆ ಸಮಯದಲ್ಲೇ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾಳೆ ಎಂದು ಊಹಿಸಿರಲಿಲ್ಲ” ಎಂದು ತಂದೆ ಕಣ್ಣೀರಿಟ್ಟಿದ್ದಾರೆ.

ಇದೇ ವೇಳೆ, ಯಾರೋ ವ್ಯಕ್ತಿ ಸಂಚಿತಾಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ. “ಹಣದ ಬೇಡಿಕೆ, ಒತ್ತಡ ಮತ್ತು ಮಾನಸಿಕ ಹಿಂಸೆ ನಿರಂತರವಾಗಿತ್ತು. ಆಕೆ ಎಲ್ಲವನ್ನೂ ಮನಸ್ಸಿನಲ್ಲೇ ಇಟ್ಟುಕೊಂಡು ನೋವು ಅನುಭವಿಸುತ್ತಿದ್ದಳು. ಈ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕು” ಎಂದು ಹೇಳಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಮೃತದೇಹ ಒಳಗಡೆಯಿಂದ ಲಾಕ್ ಮಾಡಲಾಗಿದ್ದ ಕೋಣೆಯಲ್ಲಿ ಪತ್ತೆಯಾಗಿತ್ತು. ಸದ್ಯ ಪೊಲೀಸರು ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದು, ಸಾವಿನ ಹಿಂದಿನ ನಿಜವಾದ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ದೊಡ್ಡಣ್ಣ ‘ಸತ್ತಿದ್ದಾರೆ’ ಎಂದು ಪೋಸ್ಟ್ ವೈರಲ್: ಕಿಡಿಗೇಡಿಗಳ ವಿರುದ್ಧ ಠಾಣೆ ಮೆಟ್ಟಿಲೇರಿದ ನಟ

ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಇದೀಗ ಕಾನೂನಿನ ಕ್ರಮ ಆರಂಭವಾಗಿದೆ. ಬದುಕಿರುವ ವ್ಯಕ್ತಿಯನ್ನು ಮೃತರೆಂದು ಘೋಷಿಸಿ ವೈರಲ್ ಪೋಸ್ಟ್‌ಗಳನ್ನು ಹರಿಬಿಟ್ಟ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ದೊಡ್ಡಣ್ಣ, ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ಸಲ್ಲಿಸಿದ್ದಾರೆ.

‘ಪಬ್ಲಿಕ್ ಫ್ರೆಂಡ್’ ಎಂಬ ಸಾಮಾಜಿಕ ಜಾಲತಾಣ ಖಾತೆಯಲ್ಲಿ ದೊಡ್ಡಣ್ಣ ಅವರ ನಿಧನದ ಸುದ್ದಿ ಹಾಗೂ ಶ್ರದ್ಧಾಂಜಲಿ ಪೋಸ್ಟ್ ಪ್ರಕಟವಾಗಿತ್ತು. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದಂತೆ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರು ಆತಂಕಕ್ಕೊಳಗಾಗಿದ್ದರು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ದೊಡ್ಡಣ್ಣ ಅವರು ಸ್ವತಃ ಸಾರ್ವಜನಿಕವಾಗಿ ಕಾಣಿಸಿಕೊಂಡು ತಾವು ಆರೋಗ್ಯವಾಗಿದ್ದೇನೆ ಎಂದು ಸ್ಪಷ್ಟನೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸತತವಾಗಿ ತಮ್ಮ ಸಾವಿನ ಕುರಿತು ನಕಲಿ ಸುದ್ದಿಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕಠಿಣ ಕಾನೂನು ಹೋರಾಟಕ್ಕೆ ಮುಂದಾಗಿರುವ ದೊಡ್ಡಣ್ಣ, ಎಐ ತಂತ್ರಜ್ಞಾನ ಬಳಸಿಕೊಂಡು ಸುಳ್ಳು ಮಾಹಿತಿ ಸೃಷ್ಟಿಸಿ ವೈರಲ್ ಮಾಡಿರುವುದು ಗಂಭೀರ ಅಪರಾಧ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಾನು ಬದುಕಿರುವಾಗಲೇ ನನ್ನನ್ನು ಸತ್ತಿದ್ದೇನೆ ಎಂದು ಘೋಷಿಸಿ ಪೋಸ್ಟ್ ಮಾಡಲಾಗಿದೆ. ಇದರಿಂದ ನನಗೆ ಮಾನಸಿಕ ಆಘಾತ ಉಂಟಾಗಿದ್ದು, ಕುಟುಂಬಸ್ಥರು ಹಾಗೂ ಅಭಿಮಾನಿಗಳು ತೀವ್ರ ಸಂಕಟ ಅನುಭವಿಸಿದ್ದಾರೆ” ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸುಳ್ಳು ಪೋಸ್ಟ್ ಪ್ರಕಟಿಸಿದ ಖಾತೆಯ ಐಪಿ ವಿಳಾಸ, ಅದರ ನಿರ್ವಹಣೆ ಹಾಗೂ ಮಾಹಿತಿ ಹರಡಿದ ಜಾಲದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

‘ಪ್ರಾಬ್ಲಂ ನಮ್ಮಲ್ಲಲ್ಲ, ನೆಗೆಟಿವಿಟಿ ಹುಡುಕುವ ಮನಸ್ಥಿತಿಯಲ್ಲಿದೆ’: ಟ್ರೋಲಿಗರ ವಿರುದ್ಧ ಗೀತಾ ಭಾರತಿ ಭಟ್ ವಾಗ್ದಾಳಿ

ಬೆಂಗಳೂರು: ‘ಜೋಡಿ ನಂ.1’ ರಿಯಾಲಿಟಿ ಶೋನಲ್ಲಿ ದಾಂಪತ್ಯ ಜೀವನದ ಕುರಿತ ತಮ್ಮ ಅನುಭವಗಳನ್ನು ಹಂಚಿಕೊಂಡ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಎದುರಾದ ಟೀಕೆಗಳಿಗೆ ನಟಿ ಗೀತಾ ಭಾರತಿ ಭಟ್ ಹಾಗೂ ಅವರ ಪತಿ ರಾಜಾರಾಮ್ ಭಟ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಸಂದೇಶದಲ್ಲಿ ದಂಪತಿ, ತಮ್ಮ ಹೇಳಿಕೆಗಳನ್ನು ತಿರುಚಿ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ನಾವು ಹೇಳಿದ ಸಂಪೂರ್ಣ ಮಾತುಗಳನ್ನು ಕೇಳದೇ, ಅದರಲ್ಲಿನ ಒಂದು ಭಾಗವನ್ನು ಮಾತ್ರ ತೆಗೆದುಕೊಂಡು ಜಗಳ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ವಾಸ್ತವದಲ್ಲಿ ಅದು ಗಂಡ-ಹೆಂಡತಿ ನಡುವಿನ ಮುಕ್ತ ಸಂಭಾಷಣೆ. ಜೀವನದಲ್ಲಿ ಎದುರಾಗುವ ಸವಾಲುಗಳ ಬಗ್ಗೆ ಮಾತನಾಡಿದ್ದೇವೆ ಅಷ್ಟೇ’ ಎಂದು ಗೀತಾ ಸ್ಪಷ್ಟಪಡಿಸಿದ್ದಾರೆ.

ಟಿಆರ್‌ಪಿ ಮತ್ತು ಪ್ರಚಾರಕ್ಕಾಗಿ ಕಾರ್ಯಕ್ರಮದಲ್ಲಿ ವೈಯಕ್ತಿಕ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ ಎಂಬ ಆರೋಪಗಳನ್ನು ತಳ್ಳಿ ಹಾಕಿದ ಅವರು, ‘ಎಲ್ಲರ ಮನೆಗಳಲ್ಲಿ ನಡೆಯುವ ಸಾಮಾನ್ಯ ಸಂಗತಿಗಳನ್ನೇ ಚರ್ಚೆ ಮಾಡಿದ್ದೇವೆ. ಅದನ್ನು ವಿವಾದ ಎಂದು ಬಿಂಬಿಸುವುದು ತಪ್ಪು’ ಎಂದು ಹೇಳಿದ್ದಾರೆ.

ಕಾರ್ಯಕ್ರಮದ ಬಳಿಕ ತಮ್ಮ ಅನುಭವಗಳಿಗೆ ಸಂಬಂಧಿಸಿ ಅನೇಕ ಕುಟುಂಬಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಗೀತಾ ಹೇಳಿದ್ದಾರೆ. ‘ನಿಮ್ಮ ಮಾತು ಕೇಳಿದ ಬಳಿಕ ನಮ್ಮ ಕುಟುಂಬದಲ್ಲೂ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚೆ ಮಾಡಿದ್ದೇವೆ’ ಎಂಬ ಪ್ರತಿಕ್ರಿಯೆಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣದ ಕೆಲವು ಇನ್ಫ್ಲುಯೆನ್ಸರ್‌ಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಗೀತಾ, ‘ವೈರಲ್ ಆಗಿರುವ ವಿಡಿಯೋಗಳನ್ನು ಮರುಬಳಕೆ ಮಾಡಿಕೊಂಡು ನೆಗೆಟಿವ್ ಅಭಿಪ್ರಾಯಗಳ ಮೂಲಕ ಜನರನ್ನು ದಿಕ್ಕು ತಪ್ಪಿಸಲಾಗುತ್ತಿದೆ. ಇದು ಸಮಾಜಕ್ಕೆ ಯಾವುದೇ ರೀತಿಯ ಸಕಾರಾತ್ಮಕ ಕೊಡುಗೆ ನೀಡುವುದಿಲ್ಲ’ ಎಂದು ಹೇಳಿದ್ದಾರೆ.

ರಾಜಾರಾಮ್ ಭಟ್ ಮಾತನಾಡಿ, ‘ಬೇರೆಯವರ ಕಷ್ಟವನ್ನು ಮನರಂಜನೆ ಅಥವಾ ಜನಪ್ರಿಯತೆಗಾಗಿ ಬಳಸಿಕೊಳ್ಳುವ ಸಂಸ್ಕೃತಿ ಹೆಚ್ಚುತ್ತಿದೆ. ಸಮಾಜಕ್ಕೆ ಉಪಯುಕ್ತವಾಗುವ ವಿಚಾರಗಳ ಬಗ್ಗೆ ಮಾತನಾಡುವುದು ಮುಖ್ಯ’ ಎಂದು ಹೇಳಿದರು.

ಕೊನೆಯಲ್ಲಿ ದಂಪತಿ, ‘ನೆಗೆಟಿವಿಟಿಯನ್ನು ಹುಡುಕುವ ಬದಲು ವಿಷಯದ ಸಂಪೂರ್ಣ ಅರ್ಥವನ್ನು ತಿಳಿದು ಪ್ರತಿಕ್ರಿಯಿಸಿ. ಸಾಮಾಜಿಕ ಜಾಲತಾಣಗಳು ಜವಾಬ್ದಾರಿಯುತ ಸಂವಾದದ ವೇದಿಕೆಯಾಗಬೇಕು’ ಎಂದು ಮನವಿ ಮಾಡಿದ್ದಾರೆ.

ಆರಾಧ್ಯದೈವದ ದೇವಸ್ಥಾನಕ್ಕೂ ಕಳ್ಳರ ಕಾಟ! ಒಂದೇ ತಿಂಗಳಲ್ಲಿ ನಾಲ್ಕು ಬಾರಿ ಕಳ್ಳತನ; ಪೊಲೀಸರ ನಿರ್ಲಕ್ಷ್ಯ ಆರೋಪ?

0

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸಾಸರವಾಡ ಗ್ರಾಮದಲ್ಲಿರುವ ಸುತ್ತಮುತ್ತಲಿನ ಗ್ರಾಮಗಳ ಆರಾಧ್ಯದೈವಗಳಾದ ಶ್ರೀ ವೀರಭದ್ರೇಶ್ವರ, ಶ್ರೀ ಗಡ್ಡಿಬಸವೇಶ್ವರ ಹಾಗೂ ಶಂಕರಲಿಂಗ ದೇವಸ್ಥಾನಗಳು ಕಳ್ಳರ ಕಾಟದಿಂದ ತತ್ತರಿಸಿವೆ.

ಒಂದೇ ತಿಂಗಳ ಅವಧಿಯಲ್ಲಿ ನಾಲ್ಕು ಬಾರಿ ಕಳ್ಳತನ ನಡೆದಿರುವುದು ಭಕ್ತರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ದೇವಸ್ಥಾನದ ಕಾಣಿಕೆ ಹುಂಡಿ ಹಾಗೂ ಇನ್ನಿತರೆ ವಸ್ತುಗಳನ್ನು ಗುರಿಯಾಗಿಸಿಕೊಂಡಿರುವ ಖದೀಮರು, ರಾತ್ರಿ ವೇಳೆ ದೇವಸ್ಥಾನ ಪ್ರವೇಶಿಸಿ ಕಳ್ಳತನ ನಡೆಸುತ್ತಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಸರಣಿ ಕಳ್ಳತನಗಳಲ್ಲಿ ಸುಮಾರು ಎರಡು ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಕಾಣಿಕೆ ಹಣ ದೋಚಿರುವ ಶಂಕೆ ವ್ಯಕ್ತವಾಗಿದೆ.

ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದಂತೆ ದೇವಸ್ಥಾನ ಆಡಳಿತ ಮಂಡಳಿ ದೇವಸ್ಥಾನದ ಸುತ್ತಮುತ್ತ ಸಿಸಿ ಕ್ಯಾಮರಾಗಳನ್ನು ಅಳವಡಿಸಿತ್ತು. ಆದರೆ ಕ್ಯಾಮರಾಗಳಿದ್ದರೂ ಖದೀಮರು ಹಿಂದೆ ಸರಿಯದೆ, ಕಳ್ಳತನಕ್ಕೂ ಮುನ್ನ ಸಿಸಿ ಕ್ಯಾಮರಾಗಳನ್ನೇ ಧ್ವಂಸಗೊಳಿಸಿ ತಮ್ಮ ಕೃತ್ಯ ಎಸಗಿದ್ದಾರೆ.

ಆದರೆ ಕಳ್ಳರ ಈ ಕರಾಮತ್ತು ಸಂಪೂರ್ಣವಾಗಿ ತಪ್ಪಿಸಿಕೊಳ್ಳಲಿಲ್ಲ. ದೇವಸ್ಥಾನದ ಸಮೀಪದ ಗಿಡದಲ್ಲಿ ಅಳವಡಿಸಲಾಗಿದ್ದ ಮತ್ತೊಂದು ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಲನವಲನಗಳು ಸೆರೆಯಾಗಿದ್ದು, ಪ್ರಕರಣಕ್ಕೆ ಮಹತ್ವದ ಸುಳಿವು ದೊರೆತಿದೆ ಎಂದು ತಿಳಿದುಬಂದಿದೆ.

ಗ್ರಾಮಸ್ಥರು ಹಾಗೂ ದೇವಸ್ಥಾನದ ಭಕ್ತರು ಕಳ್ಳರ ಹಾವಳಿಗೆ ಕಡಿವಾಣ ಹಾಕುವಂತೆ ಹಲವು ಬಾರಿ ಶಿರಹಟ್ಟಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಇದುವರೆಗೆ ನಾಲ್ಕು ಬಾರಿ ಕಳ್ಳತನ ನಡೆದಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸು ಕಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಕಳ್ಳತನಗಳ ಸರಣಿ ಘಟನೆಗಳಿಂದ ಭಕ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, “ಆರಾಧ್ಯದೈವದ ದೇವಸ್ಥಾನಗಳೇ ಸುರಕ್ಷಿತವಾಗಿಲ್ಲದಿದ್ದರೆ ಸಾಮಾನ್ಯ ಜನರ ಸ್ಥಿತಿ ಏನು?” ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಲಿವ್-ಇನ್ ಸಂಬಂಧ ದುರಂತ ಅಂತ್ಯ… ಯುವತಿ ಕತ್ತು ಹಿಸುಕಿ ಕೊಲೆ!

ಬೆಂಗಳೂರು: ಲಿವ್-ಇನ್ ಸಂಬಂಧದ ಜಗಳ ದುರಂತ ಅಂತ್ಯ ಕಂಡ ಘಟನೆ ಮಲ್ಲೇಶ್ವರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ನಡೆದ ಈ ಘಟನೆಯಲ್ಲಿ 20 ವರ್ಷದ ಅನುಷಾ ಮೃತಪಟ್ಟಿದ್ದು, ಆಕೆಯ ಲಿವ್-ಇನ್ ಸಂಗಾತಿ ಶರತ್ (25) ಬಂಧಿತನಾಗಿದ್ದಾನೆ.

ಮೂಲಗಳ ಪ್ರಕಾರ, ಅನುಷಾ ಮತ್ತು ಶರತ್ ಹಾಸನ ಮೂಲದವರು ಆಗಿದ್ದು, ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದರು. ನಂತರ ಇಬ್ಬರೂ ಬೆಂಗಳೂರಿಗೆ ಬಂದು ಕಳೆದ ಆರು ತಿಂಗಳಿನಿಂದ ಮಲ್ಲೇಶ್ವರದ ಮನೆಯಲ್ಲಿ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು.

ಘಟನೆಯ ದಿನ ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ತೀವ್ರ ಜಗಳ ನಡೆದಿದೆ. ಈ ವೇಳೆ ಶರತ್ ಅನುಷಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನಂತರ ಆರೋಪಿ ಈ ವಿಷಯವನ್ನು ತನ್ನ ವಕೀಲರಿಗೆ ತಿಳಿಸಿದ್ದಾನೆ. ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶರತ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಯುವ ಬಾಡಿಬಿಲ್ಡರ್ ಹಠಾತ್ ಸಾವು… ಲೋ BP, ಹೃದಯಾಘಾತ ಶಂಕೆ!?

ದಾವಣಗೆರೆ: ಜಿಮ್‌ ಮುಗಿಸಿ ಮನೆಗೆ ಮರಳಿದ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಯುವ ಬಾಡಿಬಿಲ್ಡರ್ ಒಬ್ಬರು ಮೃತಪಟ್ಟಿರುವ ದುರಂತ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ.

ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಹಾಗೂ ಅಂತರರಾಷ್ಟ್ರೀಯ ಬಾಡಿಬಿಲ್ಡಿಂಗ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ 26 ವರ್ಷದ ಸುಶೀಲ್ ಕುಮಾರ್ ಮೃತಪಟ್ಟವರು. ರಾತ್ರಿ ಸುಮಾರು 8:30ರ ವೇಳೆಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ ಸುಶೀಲ್, ತಲೆ ಸುತ್ತುವುದಾಗಿ ಹೇಳಿ ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಮಾರ್ಗ ಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಲೋ ಬಿಪಿ ಹಾಗೂ ಹೃದಯಾಘಾತದ ಕಾರಣದಿಂದ ಸಾವು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಬಾಡಿಬಿಲ್ಡಿಂಗ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಸುಶೀಲ್ ಕುಮಾರ್, ಯುವಕರಿಗೆ ತರಬೇತಿ ನೀಡುವ ಮೂಲಕವೂ ಪರಿಚಿತರಾಗಿದ್ದರು. ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ.

“ನನ್ನನ್ನು ಸತ್ತವನೆಂದು ಪೋಸ್ಟ್ ಮಾಡಿದ್ದಾರೆ”: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ನಟ ದೊಡ್ಡಣ್ಣ!

ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರ ನಿಧನವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಬದುಕಿರುವ ನಟನನ್ನು ‘ಮೃತರು’ ಎಂದು ಘೋಷಿಸಿ ನಕಲಿ ಶ್ರದ್ಧಾಂಜಲಿ ಪೋಸ್ಟ್ ಹಂಚಿದ ಕಿಡಿಗೇಡಿಗಳ ವಿರುದ್ಧ  ಸ್ವತಃ ದೊಡ್ಡಣ್ಣ ಅವರೇ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಇತ್ತೀಚೆಗೆ ‘ಪಬ್ಲಿಕ್ ಫ್ರೆಂಡ್’ ಎಂಬ ಸಾಮಾಜಿಕ ಜಾಲತಾಣ ಖಾತೆಯಲ್ಲಿ ದೊಡ್ಡಣ್ಣ ಅವರ ನಿಧನಕ್ಕೆ ಸಂಬಂಧಿಸಿದಂತೆ ಶ್ರದ್ಧಾಂಜಲಿ ಸಂದೇಶವನ್ನು ಹಂಚಲಾಗಿತ್ತು. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದವರಲ್ಲಿ ಆತಂಕ ಸೃಷ್ಟಿಸಿತ್ತು. ಬಳಿಕ ದೊಡ್ಡಣ್ಣ ಅವರೇ ಮಾಧ್ಯಮಗಳ ಮುಂದೆ ಬಂದು ತಾವು ಆರೋಗ್ಯವಾಗಿದ್ದು, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು.

ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿ ದೊಡ್ಡಣ್ಣ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಮಾನಸಿಕವಾಗಿ ತೊಂದರೆ ನೀಡಲಾಗಿದೆ ಎಂದು ಆರೋಪಿಸಿರುವ ಅವರು, ಕಿಡಿಗೇಡಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸೈಬರ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ‘ಪಬ್ಲಿಕ್ ಫ್ರೆಂಡ್’ ಖಾತೆಯ ಐಪಿ ವಿಳಾಸ ಹಾಗೂ ಸಂಬಂಧಿಸಿದವರ ಗುರುತಿಗಾಗಿ ತನಿಖೆ ಆರಂಭಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾವೇರಿ ಬಿಕ್ಕಟ್ಟು ತೀವ್ರ: KRS‌ನಲ್ಲಿ ಇನ್ನಿರೋದು ಕೇವಲ 11 ಟಿಎಂಸಿ ನೀರು!

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಆರಂಭದಲ್ಲೇ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಮಂಡ್ಯ–ಮೈಸೂರು ಭಾಗದ ರೈತರಲ್ಲಿ ಆತಂಕ ಹೆಚ್ಚಾಗಿದೆ.

ಈ ನಡುವೆ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಸದ್ಯಕ್ಕೆ ಕೇವಲ 11 ಟಿಎಂಸಿ ನೀರು ಮಾತ್ರ ಉಳಿದಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವುದರಿಂದ ಬಳಕೆಗೆ ಲಭ್ಯವಿರುವುದು ಕೇವಲ 6 ಟಿಎಂಸಿ ನೀರು ಮಾತ್ರ.

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವ ಉದ್ದೇಶದಿಂದ ಮುಂದಿನ ಮೂರು ತಿಂಗಳುಗಳ ಕಾಲ ನಾಲೆಗಳಿಗೆ ನೀರು ಹರಿಸುವ ಸಾಧ್ಯತೆ ಬಹುತೇಕ ಇಲ್ಲ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದ ಮಂಡ್ಯ, ಮೈಸೂರು ಹಾಗೂ ಕೊಡಗು ಭಾಗದ ರೈತರಿಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಮಳೆ ಕೊರತೆಯಿಂದ ಕಬ್ಬು ಸೇರಿದಂತೆ ಬೆಳೆಗಳು ಒಣಗುವ ಹಂತಕ್ಕೆ ತಲುಪಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾವೇರಿ ನೀರನ್ನೇ ನಂಬಿಕೊಂಡು ಕೃಷಿ ಮಾಡುತ್ತಿದ್ದ ಸಾವಿರಾರು ರೈತರ ಬದುಕು ಇದೀಗ ಅನಿಶ್ಚಿತತೆಯತ್ತ ಸಾಗುತ್ತಿದೆ.

ಇನ್ನು ಮಳೆಯಾಗದೆ ಇದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ಕೆಆರ್‌ಎಸ್ ಜಲಾಶಯ ಶೀಘ್ರ ಭರ್ತಿಯಾಗಲಿ ಎಂಬುದು ರೈತರ ಆಶೆಯಾಗಿದೆ.

error: Content is protected !!