Home Blog

ಆಪರೇಷನ್ ಸಿಂಧೂರ್ ವರ್ಷಾಚರಣೆ: ಎಕ್ಸ್ ಡಿಪಿ ಬದಲಿಸಿ ಸೇನೆಗೆ ಗೌರವ ಸಲ್ಲಿಸಿದ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ್ದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ ಮತ್ತು ಶೌರ್ಯಕ್ಕೆ ಗೌರವ ಸಲ್ಲಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯ ಡಿಪಿಯನ್ನು ‘ಆಪರೇಷನ್ ಸಿಂಧೂರ್’ ಚಿತ್ರದಿಂದ ಬದಲಿಸಿಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ ಬಳಿಕ, ಭಾರತೀಯ ಸೇನೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತ್ತು.

ಈ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ, ಜೈಶ್-ಎ-ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳಿಗೆ ಸೇರಿದ ತಾಣಗಳ ಮೇಲೆ ನಿಖರ ದಾಳಿ ನಡೆಸಲಾಗಿತ್ತು. ಭಾರತೀಯ ಸೇನೆಯ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದರು ಎಂದು ತಿಳಿದುಬಂದಿತ್ತು.

ಭಾರತದ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಡ್ರೋನ್ ಹಾಗೂ ಶೆಲ್ ದಾಳಿಗಳನ್ನು ನಡೆಸಿದ್ದು, ಎರಡು ರಾಷ್ಟ್ರಗಳ ನಡುವೆ ನಾಲ್ಕು ದಿನಗಳ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಭಾರತೀಯ ಸೇನೆ ದೃಢ ಪ್ರತಿರೋಧ ತೋರಿಸಿ ಶತ್ರುಗಳ ದಾಳಿಯನ್ನು ತಡೆಯುವಲ್ಲಿ ಯಶಸ್ವಿಯಾಯಿತು.

ನಂತರ ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಹಾಗೂ ಭಾರತೀಯ ಸೇನೆಯ ಮಹಾನಿರ್ದೇಶಕರ ನಡುವೆ ಮಾತುಕತೆ ನಡೆದಿದ್ದು, ಮೇ 10ರಂದು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಇದರೊಂದಿಗೆ ಉಭಯ ರಾಷ್ಟ್ರಗಳ ನಡುವಿನ ಸಂಘರ್ಷ ಅಂತ್ಯಗೊಂಡಿತ್ತು.

ಕಾರ್ಯಾಚರಣೆಯ ವಾರ್ಷಿಕೋತ್ಸವದ ಅಂಗವಾಗಿ ಮಾತನಾಡಿದ ಪ್ರಧಾನಿ ಮೋದಿ, “ಆಪರೇಷನ್ ಸಿಂಧೂರ್ ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವು ಹಾಗೂ ರಾಷ್ಟ್ರೀಯ ಭದ್ರತೆಯತ್ತ ನಮ್ಮ ಅಚಲ ಬದ್ಧತೆಯ ಪ್ರತೀಕವಾಗಿದೆ” ಎಂದು ಹೇಳಿದ್ದಾರೆ.

“ಈ ಕಾರ್ಯಾಚರಣೆ ಭಾರತೀಯ ಸಶಸ್ತ್ರ ಪಡೆಗಳ ವೃತ್ತಿಪರತೆ, ಸನ್ನದ್ಧತೆ ಮತ್ತು ಸಂಘಟಿತ ಶಕ್ತಿಯನ್ನು ಜಗತ್ತಿಗೆ ತೋರಿಸಿತು. ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಾವಲಂಬನೆ ದೇಶದ ಭದ್ರತೆಯನ್ನು ಮತ್ತಷ್ಟು ಬಲಪಡಿಸಿದೆ,” ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

ದಂಪತಿ ಕಲಹಕ್ಕೆ ಮಗು ಬಲಿಯಾಗಬಾರದು: ತಂದೆಯ ಒಪ್ಪಿಗೆ ಇಲ್ಲದೇ ಪಾಸ್ ಪೋರ್ಟ್ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ದಂಪತಿಗಳ ನಡುವಿನ ವೈಮನಸ್ಸು ಅಥವಾ ವೈವಾಹಿಕ ಕಲಹಕ್ಕೆ ಅಪ್ರಾಪ್ತ ಮಗು ಬಲಿಯಾಗಬಾರದು ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ತಂದೆಯ ಒಪ್ಪಿಗೆ ಇಲ್ಲದಿದ್ದರೂ ಐದು ವರ್ಷದ ಬಾಲಕಿಗೆ ಅಲ್ಪಾವಧಿಯ ಪಾಸ್‌ಪೋರ್ಟ್ ನೀಡುವಂತೆ ಪಾಸ್‌ಪೋರ್ಟ್ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಆದೇಶ ಹೊರಡಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದೂಮ್ ಅವರಿದ್ದ ಏಕಸದಸ್ಯ ಪೀಠ, ಬಾಲಕಿ ವಿದೇಶದಲ್ಲಿರುವ ಅಜ್ಜಿ-ಅಜ್ಜರನ್ನು ಭೇಟಿ ಮಾಡಿ ಪಾಸ್‌ಪೋರ್ಟ್ ಅವಧಿ ಮುಗಿಯುವ ಮೊದಲು ಭಾರತಕ್ಕೆ ಮರಳಬೇಕು ಎಂಬ ಷರತ್ತು ವಿಧಿಸಿದೆ. ಈ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿರುವ ನ್ಯಾಯಪೀಠ, ಒಂದು ವಾರದೊಳಗೆ ಪಾಸ್‌ಪೋರ್ಟ್ ನೀಡುವಂತೆ ಆದೇಶಿಸಿದೆ.

ತಂದೆಯ ಅನುಮತಿ ಇಲ್ಲದ ಕಾರಣ ಪಾಸ್‌ಪೋರ್ಟ್ ನೀಡಲಾಗುತ್ತಿಲ್ಲ ಎಂದು ಆರೋಪಿಸಿ ಮಗುವಿನ ತಾಯಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮಗುವಿನ ಹಿತಾಸಕ್ತಿಯೇ ಮುಖ್ಯ ಎಂದು ಸ್ಪಷ್ಟಪಡಿಸಿದೆ.

ತಂದೆ ಒಂದೇ ವಿಳಾಸದಲ್ಲಿ ವಾಸವಿದ್ದರೂ ನ್ಯಾಯಾಲಯದ ನೋಟಿಸ್ ಸ್ವೀಕರಿಸದೇ ಉದ್ದೇಶಪೂರ್ವಕವಾಗಿ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ ಎಂದು ನ್ಯಾಯಪೀಠ ಗಮನಿಸಿದೆ.

“ಒಬ್ಬ ಪೋಷಕರು ಅನಗತ್ಯವಾಗಿ ಅಡ್ಡಿಪಡಿಸಿದಾಗ, ಮಗುವಿನ ಹಿತದೃಷ್ಟಿಯಿಂದ ನಿಯಮಗಳನ್ನು ಸಡಿಲಿಸಬಹುದು. ಕುಟುಂಬ ಸದಸ್ಯರನ್ನು ಭೇಟಿ ಮಾಡುವುದು ಮಗುವಿನ ನ್ಯಾಯಸಮ್ಮತ ಹಕ್ಕು. ದಂಪತಿಗಳ ನಡುವಿನ ಹಳಸಿದ ಸಂಬಂಧವು ಮಗುವಿನ ಹಕ್ಕುಗಳನ್ನು ಕಸಿದುಕೊಳ್ಳಬಾರದು” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದೇ ವೇಳೆ, ತಂದೆಯ ಅನುಮತಿಯಿಲ್ಲದಿದ್ದರೂ ಬಾಲಕಿಗೆ ಎಂಟು ವಾರಗಳ ಅವಧಿಗೆ ವಿದೇಶ ಪ್ರವಾಸ ಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಪಾಸ್‌ಪೋರ್ಟ್ ನೀಡಲು ಸೂಚಿಸಿದೆ.

ಅಪ್ರಾಪ್ತ ಮಕ್ಕಳಿಗೆ ಪಾಸ್‌ಪೋರ್ಟ್ ನೀಡುವ ವೇಳೆ ಸಾಮಾನ್ಯವಾಗಿ ಇಬ್ಬರು ಪೋಷಕರ ಒಪ್ಪಿಗೆ ಕಡ್ಡಾಯವಾದರೂ, ಒಬ್ಬರು ಅನಗತ್ಯವಾಗಿ ನಿರಾಕರಿಸಿದರೆ ಮಗುವಿನ ಕಾನೂನುಬದ್ಧ ಹಕ್ಕುಗಳಿಗೆ ಧಕ್ಕೆ ತರುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ಹಿನ್ನೆಲೆ

ಬಾಲಕಿ ತನ್ನ ತಾಯಿ ಹಾಗೂ ಅಜ್ಜಿ-ಅಜ್ಜರೊಂದಿಗೆ ಬೇಸಿಗೆ ರಜೆ ಕಳೆಯಲು ಆಸ್ಟ್ರೇಲಿಯಾಗೆ ತೆರಳಲು ಉದ್ದೇಶಿಸಿದ್ದಳು. ಆದರೆ ತಂದೆ ಒಪ್ಪಿಗೆ ನೀಡದ ಕಾರಣ ಪಾಸ್‌ಪೋರ್ಟ್ ಪ್ರಾಧಿಕಾರ ಅರ್ಜಿಯನ್ನು ಬಾಕಿ ಇಟ್ಟಿತ್ತು.

ಈ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ್ದ ತಾಯಿ ಪರ ವಕೀಲರು, ದಂಪತಿಗಳ ವಿಚ್ಛೇದನ ಪ್ರಕರಣ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಆದರೆ ಬಾಲಕಿ ಆಸ್ಟ್ರೇಲಿಯಾದಲ್ಲಿರುವ ಅಜ್ಜಿ-ಅಜ್ಜರನ್ನು ಭೇಟಿ ಮಾಡಲು ಬಯಸುತ್ತಿದ್ದು, ಪಾಸ್‌ಪೋರ್ಟ್ ವಿಳಂಬವಾದರೆ ಮಗುವಿನ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ವಿಜಯನಗರ| ಮಾರಕಾಸ್ತ್ರ ಹಿಡಿದು ರಾತ್ರೋ ರಾತ್ರಿ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ! ಗ್ರಾಮಸ್ಥರಲ್ಲಿ ಆತಂಕ

ವಿಜಯನಗರ:- ಹರಪನಹಳ್ಳಿ ಪಟ್ಟಣದಲ್ಲಿ ಕಳೆದ ಕೆಲ ದಿನಗಳಿಂದ ಮುಸುಕುಧಾರಿ ಕಳ್ಳರ ಗ್ಯಾಂಗ್ ಓಡಾಟ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ರಾತ್ರಿ ವೇಳೆ ಮುಖ ಮುಚ್ಚಿಕೊಂಡು, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮೂವರು ಶಂಕಿತ ವ್ಯಕ್ತಿಗಳು ನಿರ್ಭಯವಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮತ್ತೊಬ್ಬ ಮುಸುಕುಧಾರಿ ಬೊಗಳುತ್ತಿರುವ ನಾಯಿಗಳನ್ನು ಕಲ್ಲಿನಿಂದ ಹೊಡೆದು ಓಡಿಸಲು ಯತ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಘಟನೆ ಬಳಿಕ ರಾತ್ರಿ ವೇಳೆ ನಾಯಿಗಳ ಬೊಗಳುವ ಶಬ್ದ ಕೇಳಿ ಎಚ್ಚರಗೊಂಡ ನಿವಾಸಿಗಳು ತಮ್ಮ ಮನೆಗಳ ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರ ಓಡಾಟ ಬೆಳಕಿಗೆ ಬಂದಿದೆ. ಈ ಘಟನೆ ಬೆನ್ನಲ್ಲೇ ಪಟ್ಟಣದಲ್ಲಿ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.

ಘಟನೆ ಬಗ್ಗೆ ಬೇಸರ ಹೊರ ಹಾಕಿರುವ ಸ್ಥಳೀಯರು, ನಮ್ಮ ರಕ್ಷಣೆ ನಾವೇ ಮಾಡ್ಕೋಬೇಕು. ಮುಸುಕುಧಾರಿ ಕಳ್ಳರು ಬಂದಾಗ ಕಾರದಪುಡಿ ಎರಚಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಪಟ್ಟಣದಲ್ಲಿ ಸಾರ್ವಜನಿಕರ ಸಭೆ ನಡೆಸಿ ಜಾಗೃತಿ ಮಾಡಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸುವ ಭರವಸೆಯನ್ನು ಸಾರ್ವಜನಿಕರಿಗೆ ಪೊಲೀಸರು ನೀಡಿದ್ದಾರೆ.

ಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ! ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ ಆದೇಶ

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡ ಸುರಕ್ಷತೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಹಾಗೂ ಕಾಂಪೌಂಡ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಘಟನೆ ಬಳಿಕ ನಗರದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನರು ಸಾವನ್ನಪ್ಪಿದ್ದರು. ಈ ದುರ್ಘಟನೆಯ ನಂತರ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದೆ.

ಸಚಿವರ ಸೂಚನೆಯಂತೆ ಡಿಹೆಚ್‌ಒ, ಟಿಹೆಚ್‌ಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾವುದೇ ಕಟ್ಟಡ ಅಥವಾ ಕಾಂಪೌಂಡ್ ಅಪಾಯಕಾರಿ ಸ್ಥಿತಿಯಲ್ಲಿ ಕಂಡುಬಂದರೆ ತಕ್ಷಣ ದುರಸ್ತಿ ಅಥವಾ ತೆರವು ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

ಅಲ್ಲದೆ ಆಸ್ಪತ್ರೆ ಆವರಣದ ಫುಟ್‌ಪಾತ್‌ಗಳಲ್ಲಿ ನಡೆಯುವ ಬೀದಿ ವ್ಯಾಪಾರಕ್ಕೂ ಕಡಿವಾಣ ಹಾಕಲು ನಿರ್ದೇಶನ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ.

ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆಗಳು 20 ರಿಂದ 30 ವರ್ಷಗಳಷ್ಟು ಹಳೆಯದಾಗಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಪರಿಶೀಲನೆ ಅತ್ಯಂತ ಅಗತ್ಯವಾಗಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಮುಂಬರುವ ಮಳೆಗಾಲದಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

IPL 2026: ಇಂದು ಲಕ್ನೋ–ಆರ್‌ಸಿಬಿ ಹೈವೋಲ್ಟೇಜ್ ಮ್ಯಾಚ್; ಉಭಯ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ?

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 50ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ ಏಪ್ರಿಲ್ 15ರಂದು ನಡೆದ ಪಂದ್ಯದಲ್ಲಿ ಆರ್‌ಸಿಬಿ ರಜತ್ ಪಾಟಿದಾರ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಲಕ್ನೋ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ಮತ್ತೊಮ್ಮೆ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಪಂದ್ಯಕ್ಕೆ ಹೆಚ್ಚಿನ ಕುತೂಹಲ ಸೃಷ್ಟಿಯಾಗಿದೆ.

ಲಕ್ನೋ ಸೂಪರ್ ಜೈಂಟ್ಸ್ ಈ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಆಡಿದ 9 ಪಂದ್ಯಗಳಲ್ಲಿ 7ರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸತತ ಸೋಲುಗಳಿಂದ ತಂಡದ ಪ್ಲೇಆಫ್ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ.

ಇದಕ್ಕೆ ವಿರುದ್ಧವಾಗಿ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿ ಇದ್ದು, 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ಲೇಆಫ್ ಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳುವ ಗುರಿಯೊಂದಿಗೆ ಆರ್‌ಸಿಬಿ ಮೈದಾನಕ್ಕಿಳಿಯಲಿದೆ.

ಹೆಡ್-ಟು-ಹೆಡ್ ದಾಖಲೆಗಳಲ್ಲೂ ಆರ್‌ಸಿಬಿಗೆ ಮೇಲುಗೈ ಇದ್ದು, ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿದೆ.

ಎರಡೂ ತಂಡಗಳಿಗೂ ಪ್ರಮುಖ ಆಟಗಾರರ ಬಲವಿದ್ದು, ಇಂದು ನಡೆಯಲಿರುವ ಪಂದ್ಯ ಹೈವೋಲ್ಟೇಜ್ ಕಾದಾಟವಾಗುವ ನಿರೀಕ್ಷೆ ಇದೆ.

ಬೆಂಗಳೂರಿನ ವಾಹನ ಮಾಲೀಕರೇ ಎಚ್ಚರ: ರಸ್ತೆ ಪಕ್ಕ ಪಾರ್ಕ್ ಮಾಡಿದ ಕಾರುಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಪಕ್ಕ ಪಾರ್ಕ್ ಮಾಡಿದ್ದ ಕಾರಿನಿಂದ ಬೆಲೆಬಾಳುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಕಾರಿನ ಮಾಲೀಕರು ರಾತ್ರಿ ವೇಳೆ ಟಿವಿ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ ತೆರಳಿದ್ದರು. ಆದರೆ ಬೆಳಿಗ್ಗೆ ಸುಮಾರು 7 ಗಂಟೆಗೆ ಬಂದು ನೋಡಿದಾಗ ಕಾರಿನ ಗಾಜು ಒಡೆದಿದ್ದು, ಒಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಪತ್ತೆಯಾಗಿರುವುದು ಕಂಡುಬಂದಿದೆ.

ಘಟನೆಯ ಸಿಸಿಟಿವಿ ದೃಶ್ಯಗಳಲ್ಲಿ ಮತ್ತೊಂದು ಕಾರಿನಲ್ಲಿ ಬಂದ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿರುವುದು ಸ್ಪಷ್ಟವಾಗಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪತ್ನಿಗೆ ಚಾಕು ಇರಿಯಲು ಯತ್ನಿಸಿದ ಪತಿಗೆ ಸಾರ್ವಜನಿಕರಿಂದ ಧರ್ಮದೇಟು!

ಬೆಂಗಳೂರು: ಮಾದನಾಯಕನಹಳ್ಳಿ ಸಮೀಪದ ದಾಸನಪುರದಲ್ಲಿ ಪತ್ನಿಗೆ ಚಾಕು ಇರಿಯಲು ಯತ್ನಿಸಿದ ಪತಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ.

ಸಂಜಯ್ ಎಂಬಾತ ತನ್ನ ಎರಡನೇ ಪತ್ನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಏಕಾಏಕಿ ಚಾಕುವಿನಿಂದ ಇರಿಯಲು ಮುಂದಾದನೆಂದು ಆರೋಪಿಸಲಾಗಿದೆ. ಈ ವೇಳೆ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

ಘಟನೆಯ ನಂತರ ಆಕ್ರೋಶಗೊಂಡ ಸಾರ್ವಜನಿಕರು ಆರೋಪಿತನಿಗೆ ಧರ್ಮದೇಟು ನೀಡಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾಹಿತಿಯ ಪ್ರಕಾರ, ಸಂಜಯ್ ಕುಡಿತದ ಚಟದಿಂದಾಗಿ ಮೊದಲೇ ಕುಟುಂಬದಿಂದ ದೂರವಾಗಿದ್ದನೆಂದು ತಿಳಿದುಬಂದಿದೆ. ಘಟನೆ ನಡೆದ ಸಂದರ್ಭದಲ್ಲಿ ಪತ್ನಿ ನಡೆದುಕೊಂಡು ಹೋಗುತ್ತಿದ್ದಾಗ ಈ ದಾಳಿ ನಡೆದಿದೆ.

ಆರೋಪಿತನನ್ನು ನಂತರ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದು, ಮಾದನಾಯಕನಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

ರಾಜ್ಯದಲ್ಲಿ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಲಿಕಲ್ಲು ಮಳೆಯ ಸಾಧ್ಯತೆ!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಕೆಲವೆಡೆ ಆಲಿಕಲ್ಲು ಮಳೆಯ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ.

ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ.

ಮೇ 7 ಮತ್ತು 8 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ರೈಲ್ವೆ ಮುಂಬಡ್ತಿ ಪರೀಕ್ಷೆ ವಿವಾದ: ಕನ್ನಡ ಭಾಷೆ ನಿರಾಕರಣೆ ವಿರುದ್ಧ ಕರವೇ ಆಕ್ರೋಶ

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆ ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ರೈಲ್ವೆ ಮಂಡಳಿ ಈ ಬಾರಿ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸಲು ಮುಂದಾಗಿದ್ದು, ಕನ್ನಡ ಭಾಷೆಗೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪರೀಕ್ಷೆಗಳು ಆಫೀಸ್ ಸೂಪರಿಂಟೆಂಡೆಂಟ್ (39 ಹುದ್ದೆ), ಸೀನಿಯರ್ ಕ್ಲರ್ಕ್ (25 ಹುದ್ದೆ) ಮತ್ತು ಇಂಟರ್ಮೀಡಿಯೆಟ್ ಅಪ್ರೆಂಟಿಸ್ ಮೆಕ್ಯಾನಿಕ್ಸ್ (9 ಹುದ್ದೆ) ಸೇರಿದಂತೆ ಒಟ್ಟು 73 ಹುದ್ದೆಗಳಿಗೆ ನಡೆಯುತ್ತಿದೆ.

ಈ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, “ತ್ರಿಭಾಷಾ ಸೂತ್ರದಡಿ ಕನ್ನಡಕ್ಕೂ ಅವಕಾಶ ನೀಡಬೇಕು. ತಕ್ಷಣ ಸುತ್ತೋಲೆ ಸರಿಪಡಿಸಿ ಕನ್ನಡದಲ್ಲಿ ಪರೀಕ್ಷೆ ನಡೆಸುವಂತೆ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ವಿಷಯವನ್ನು ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಕೂಡ ಇದೇ ವಿಷಯದ ಕುರಿತು ನಡೆದ ಪ್ರತಿಭಟನೆ ವೇಳೆ ಪರೀಕ್ಷೆ ಮುಂದೂಡಲಾಗಿತ್ತು. ಆದರೆ ಇದೀಗ ಮತ್ತೆ ಅದೇ ವಿವಾದ ಪುನರಾವರ್ತನೆಯಾಗಿರುವುದರಿಂದ ಕನ್ನಡಪರ ಸಂಘಟನೆಗಳು ಉಗ್ರ ಹೋರಾಟದ ಎಚ್ಚರಿಕೆ ನೀಡಿವೆ.

ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ರೈಲ್ವೆ ಇಲಾಖೆ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದರ ಮೇಲೆ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

ನೆಲಮಂಗಲದಲ್ಲಿ ಭೀಕರ ಸರಣಿ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!

ನೆಲಮಂಗಲ: ತಾಲೂಕಿನ ಡಾಬಸ್‌ಪೇಟೆ ಅಂಚೆಮನೆ ಗೇಟ್ ಬಳಿ ಇರುವ ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸರಣಿ ಅಪಘಾತ ಸಂಭವಿಸಿದೆ.

ಬೈಕ್, ಎರಡು ಕಾರು, ಲಾರಿ, ಬಸ್ ಹಾಗೂ ಪಿಕಪ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಪಿಕಪ್ ವಾಹನ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ಭಾರೀ ಹಾನಿಗೊಳಗಾಗಿವೆ.

ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

 

error: Content is protected !!