Home Blog

20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು; ಪತ್ನಿಯಿಂದ ಆಸ್ಪತ್ರೆ ಆಡಳಿತಕ್ಕೆ ಎಚ್ಚರಿಕೆ

0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ (59) ಅವರನ್ನು ದೆಹಲಿ ಪೊಲೀಸರು ಶನಿವಾರ ಸಫ್ದರ್ಜಂಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಆಸ್ಪತ್ರೆ ಆಡಳಿತಕ್ಕೆ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿ, ಕುಟುಂಬದ ಅನುಮತಿಯಿಲ್ಲದೆ ಯಾವುದೇ ಚಿಕಿತ್ಸೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗೀತಾಂಜಲಿ, ತಾವು ಸಫ್ದರ್ಜಂಗ್ ಆಸ್ಪತ್ರೆಯಲ್ಲೇ ಇರುವುದಾಗಿ ತಿಳಿಸಿದ್ದು, ಕಳೆದ 20 ದಿನಗಳಿಂದ ವಾಂಗ್ಚುಕ್ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡುತ್ತಿರುವ ವೈದ್ಯರು ಹಾಗೂ ಕುಟುಂಬದ ಲಿಖಿತ ಒಪ್ಪಿಗೆಯಿಲ್ಲದೆ ಮಾತ್ರೆ, ಡ್ರಿಪ್ಸ್ ಅಥವಾ ಯಾವುದೇ ಔಷಧ ನೀಡಬಾರದು ಎಂದು ಹೇಳಿದ್ದಾರೆ.

“ನನ್ನ ಗಮನಕ್ಕೆ ತರದೆ ಯಾವುದೇ ರೀತಿಯ ಚಿಕಿತ್ಸೆ ನೀಡಬಾರದು. ಸಂವಿಧಾನದ ಆರ್ಟಿಕಲ್ 32 ಅಡಿಯಲ್ಲಿ ನನ್ನ ಪತಿಯ ಆರೋಗ್ಯ ಹಕ್ಕನ್ನು ರಕ್ಷಿಸುವ ಅಧಿಕಾರ ನನಗಿದೆ” ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, “ನಿನ್ನೆ ರಾತ್ರಿವರೆಗೂ ನನ್ನ ಪತಿ ಆರೋಗ್ಯವಾಗಿಯೇ ಇದ್ದರು. ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತಹ ಯಾವುದೇ ತುರ್ತು ಪರಿಸ್ಥಿತಿ ಇರಲಿಲ್ಲ” ಎಂದು ಗೀತಾಂಜಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮತ್ತು ನ್ಯಾಯಾಲಯದ ನಿರ್ದೇಶನದಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಕರಣ ಇದೀಗ ವೈದ್ಯಕೀಯ ಚಿಕಿತ್ಸೆ, ಪ್ರತಿಭಟನೆ ಮತ್ತು ವ್ಯಕ್ತಿಯ ಹಕ್ಕುಗಳ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಕೆ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಚೆನ್ನಮ್ಮ ಅವರ ಆರೋಗ್ಯವನ್ನು ತಜ್ಞ ವೈದ್ಯರ ತಂಡ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

ಜುಲೈ 17ರಂದು ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ ಕಂಡುಬಂದ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಆರೋಗ್ಯದ ಮಾಹಿತಿ ಪಡೆದುಕೊಂಡರು. ಈ ಬೆಳವಣಿಗೆಯಿಂದ ಕುಟುಂಬಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಚೆನ್ನಮ್ಮ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಸೊಸೆ ಭವಾನಿ ರೇವಣ್ಣ ರಾತ್ರಿಯಿಡೀ ಆಸ್ಪತ್ರೆಯಲ್ಲೇ ಉಳಿದು ಆರೋಗ್ಯದ ಆರೈಕೆ ಮಾಡಿದ್ದಾರೆ.

ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಚೆನ್ನಮ್ಮ ಅವರು ಶೀಘ್ರ ಚೇತರಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ಕುಟುಂಬ ಸದಸ್ಯರು ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ವೈದ್ಯರ ತಂಡ ಮತ್ತೊಮ್ಮೆ ಆರೋಗ್ಯ ತಪಾಸಣೆ ನಡೆಸಿದ್ದು, ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

SIR ಕರ್ತವ್ಯದಿಂದ ಶಿಕ್ಷಕರನ್ನು ಬಿಡುಗಡೆ ಮಾಡಿ: ಚುನಾವಣಾ ಆಯೋಗಕ್ಕೆ ಸೈಯದ್ ಖಾಲಿದ್ ಕೊಪ್ಪಳ ಪತ್ರ

0

ಗದಗ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ನಿಯೋಜಿಸಲಾಗಿರುವ ಸರ್ಕಾರಿ ಶಾಲಾ ಶಿಕ್ಷಕರನ್ನು ಆದಷ್ಟು ಬೇಗ ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಿ, ತಮ್ಮ ಮೂಲ ಶಾಲೆಗಳಿಗೆ ಮರಳಿಸುವಂತೆ ಸಾಮಾಜಿಕ ಕಾರ್ಯಕರ್ತ ಸೈಯದ್ ಖಾಲಿದ್ ಕೊಪ್ಪಳ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ತಿಳಿಸಿರುವ ಅವರು, ರಾಜ್ಯದ ಅನೇಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ಅಡಚಣೆ ಉಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಶಾಲೆಗಳು ಆರಂಭವಾಗಿ ಸುಮಾರು ಒಂದು ತಿಂಗಳು ಕಳೆದಿದ್ದರೂ ಸಾವಿರಾರು ಸರ್ಕಾರಿ ಶಾಲೆಗಳ ಮಕ್ಕಳು ಸಮರ್ಪಕ ಬೋಧನೆಯಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ನೆಪದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಣ ವ್ಯವಸ್ಥೆಗೆ ಧಕ್ಕೆಯಾಗಬಾರದು. ಶಿಕ್ಷಕರನ್ನು ದೀರ್ಘಾವಧಿಯವರೆಗೆ ಚುನಾವಣಾ ಕರ್ತವ್ಯಕ್ಕೆ ಬಳಸುವುದರಿಂದ ಸರ್ಕಾರಿ ಶಾಲೆಗಳ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕರ ಸಂಖ್ಯೆ ಸಾಕಷ್ಟಿದ್ದು, ಅಗತ್ಯವಿದ್ದಲ್ಲಿ ಚುನಾವಣಾ ಆಯೋಗವು ಅಂತಹ ಯುವಕರ ಸೇವೆಯನ್ನು ಬಳಸಿಕೊಂಡು ಚುನಾವಣಾ ಕಾರ್ಯಗಳನ್ನು ನಿರ್ವಹಿಸಬಹುದು. ಇದರಿಂದ ಸರ್ಕಾರಿ ಶಾಲೆಗಳ ಶಿಕ್ಷಣಕ್ಕೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.

ಇದೇ ವೇಳೆ ರಾಜ್ಯದ ಎಲ್ಲ ಮತದಾರರಿಗೂ ಮನವಿ ಮಾಡಿರುವ ಅವರು, ಎಸ್‌ಐಆರ್ ಎನ್ಯುಮರೇಷನ್ ಫಾರ್ಮ್‌ಗಳ ಸಲ್ಲಿಕೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ವಿಳಂಬ ಮಾಡದೆ ತಮ್ಮ ಬಳಿ ಇರುವ ಫಾರ್ಮ್‌ಗಳನ್ನು ಸಂಬಂಧಿಸಿದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಗಳಿಗೆ ಶೀಘ್ರ ಸಲ್ಲಿಸುವಂತೆ ಕೋರಿದ್ದಾರೆ.

ಪ್ರಸ್ತುತ ಬಿಎಲ್‌ಒಗಳಾಗಿ ಕಾರ್ಯನಿರ್ವಹಿಸುತ್ತಿರುವವರು ಹೆಚ್ಚಾಗಿ ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಿಬ್ಬಂದಿಯಾಗಿದ್ದು, ಹಲವು ದಿನಗಳಿಂದ ಶಿಕ್ಷಕರು ಶಾಲೆಗಳಿಂದ ದೂರವಿರುವುದರಿಂದ ವಿದ್ಯಾರ್ಥಿಗಳ ಬೋಧನೆಗೆ ಅಡಚಣೆ ಉಂಟಾಗಿದೆ. ಇದೇ ರೀತಿ ಅನೇಕ ಸರ್ಕಾರಿ ಕಚೇರಿಗಳಲ್ಲಿಯೂ ಸಾರ್ವಜನಿಕ ಸೇವೆಗಳು ವಿಳಂಬವಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಮತದಾರರು ತಮ್ಮ ಜವಾಬ್ದಾರಿಯನ್ನು ಅರಿತು ಎನ್ಯುಮರೇಷನ್ ಫಾರ್ಮ್‌ಗಳನ್ನು ಶೀಘ್ರ ಸಲ್ಲಿಸಿದರೆ ಶಿಕ್ಷಕರು ಶಾಲೆಗಳಿಗೆ ಹಾಗೂ ಸರ್ಕಾರಿ ಸಿಬ್ಬಂದಿ ತಮ್ಮ ಮೂಲ ಕರ್ತವ್ಯಗಳಿಗೆ ಮರಳಲು ಅನುಕೂಲವಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಣಕ್ಕೂ ಮತದಾರರ ಪಟ್ಟಿಯ ಪರಿಷ್ಕರಣೆಯಷ್ಟೇ ಮಹತ್ವವಿದ್ದು, ಎಲ್ಲರೂ ಈ ಕಾರ್ಯಕ್ಕೆ ಸಹಕರಿಸಬೇಕು ಎಂದು ಸೈಯದ್ ಖಾಲಿದ್ ಕೊಪ್ಪಳ ಮನವಿ ಮಾಡಿದ್ದಾರೆ.

ಭಾರತ ಅಂಡರ್‌-19 ತಂಡದ ಮಾಜಿ ಆಟಗಾರ ಶ್ರೀಲಂಕಾದಲ್ಲಿ ಬಂಧನ! ಯಾಕೆ ಗೊತ್ತಾ..?

0

ಕೊಲಂಬೊ: ಲಂಕಾ ಪ್ರೀಮಿಯರ್ ಲೀಗ್‌ (ಎಲ್‌ಪಿಎಲ್) ವೇಳೆ ಆಟಗಾರನೊಬ್ಬನಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಭಾರತದ ಮಾಜಿ ಅಂಡರ್-19 ವಿಶ್ವಕಪ್ ವಿಜೇತ ಕ್ರಿಕೆಟಿಗ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾದ ಕ್ರೀಡಾ ಭ್ರಷ್ಟಾಚಾರ ವಿರೋಧಿ ತನಿಖಾಧಿಕಾರಿಗಳು ಬಂಧಿಸಿದ್ದಾರೆ.

ಕ್ರೀಡೆಗೆ ಸಂಬಂಧಿಸಿದ ಅಪರಾಧಗಳ ತನಿಖೆ ನಡೆಸುತ್ತಿರುವ ಶ್ರೀಲಂಕಾ ಪೊಲೀಸ್ ವಿಶೇಷ ತನಿಖಾ ಘಟಕವು ಶುಕ್ರವಾರ ಕಲ್ರಾ ಅವರನ್ನು ವಶಕ್ಕೆ ಪಡೆದಿದೆ. ಬಳಿಕ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ.

2018ರ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನ ಪ್ರಮುಖ ಪಾತ್ರ ವಹಿಸಿದ್ದ ಮಂಜೋತ್ ಕಲ್ರಾ, ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 101 ರನ್‌ಗಳ ಭರ್ಜರಿ ಶತಕ ಸಿಡಿಸಿ ಪಂದ್ಯದ ಹೀರೋ ಆಗಿದ್ದರು. ಪೃಥ್ವಿ ಶಾ ನಾಯಕತ್ವದ ಭಾರತ ತಂಡ ಆ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ವಿಶ್ವಕಪ್ ಪ್ರಶಸ್ತಿ ಗೆದ್ದಿತ್ತು.

ಆ ತಂಡದಲ್ಲಿ ಪ್ರಸ್ತುತ ಭಾರತ ತಂಡದ ಪ್ರಮುಖ ಆಟಗಾರರಾಗಿರುವ ಶುಭ್‌ಮನ್ ಗಿಲ್, ಅರ್ಷದೀಪ್ ಸಿಂಗ್ ಮತ್ತು ಶಿವಂ ಮಾವಿ ಕೂಡ ಇದ್ದರು.

ಲಂಕಾ ಪ್ರೀಮಿಯರ್ ಲೀಗ್‌ಗೆ ಸಂಬಂಧಿಸಿದಂತೆ ಆಟಗಾರನೊಬ್ಬನಿಗೆ ಹಣದ ಆಮಿಷ ಒಡ್ಡಲು ಕಲ್ರಾ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ ಎಂದು ಶ್ರೀಲಂಕಾ ಪೊಲೀಸರು ತಿಳಿಸಿದ್ದಾರೆ. ಪಂದ್ಯಾವಳಿ ಆರಂಭವಾಗುವ ಕೆಲವೇ ಗಂಟೆಗಳ ಮುನ್ನವೇ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಮಂಜೋತ್ ಕಲ್ರಾ ಜಾಫ್ನಾ ಕಿಂಗ್ಸ್ ಫ್ರಾಂಚೈಸಿಯ ಸಹ-ಮಾಲೀಕರಲ್ಲಿ ಒಬ್ಬರಾಗಿದ್ದಾರೆ. ಪ್ರಕರಣದ ಕುರಿತು ಶ್ರೀಲಂಕಾ ಕ್ರೀಡಾ ಭ್ರಷ್ಟಾಚಾರ ವಿರೋಧಿ ತನಿಖಾಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಆನ್‌ಲೈನ್ ಗೇಮಿಂಗ್ ಚಟಕ್ಕೆ ನರ್ಸಿಂಗ್ ವಿದ್ಯಾರ್ಥಿ ಸಾವು: ಮೂರು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

0

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಮನೆಯ ಮೇಲ್ಮಹಡಿಯ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಪರಿಶೀಲನೆ ನಡೆಸಿದ ಕುಟುಂಬಸ್ಥರಿಗೆ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು 20 ವರ್ಷದ ಉದಯ್ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸದ ಜೊತೆಗೆ ಬಾಟಾ ಶೋರೂಂನಲ್ಲಿ ಪಾರ್ಟ್‌ಟೈಂ ಉದ್ಯೋಗವೂ ಮಾಡುತ್ತಿದ್ದರು. ಮಗನ ಅನುಕೂಲಕ್ಕಾಗಿ ಪೋಷಕರಾದ ಸುರೇಶ್ ಹಾಗೂ ಪ್ರೇಮಲತಾ ದಂಪತಿ ಮನೆಯ ಮೇಲ್ಮಹಡಿಯಲ್ಲಿ ಪ್ರತ್ಯೇಕ ಕೊಠಡಿ ನಿರ್ಮಿಸಿಕೊಟ್ಟಿದ್ದರು.

ಆದರೆ ಇದೇ ಕೊಠಡಿಯಲ್ಲಿ ಉದಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂರು ದಿನಗಳ ಕಾಲ ಯಾರಿಗೂ ಈ ಘಟನೆ ಗೊತ್ತಾಗಿರಲಿಲ್ಲ. ಬಳಿಕ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದುದನ್ನು ಗಮನಿಸಿದ ಕುಟುಂಬಸ್ಥರು ಪರಿಶೀಲಿಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಉದಯ್ ಆನ್‌ಲೈನ್ ಗೇಮಿಂಗ್ ಚಟಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಮಾಹಿತಿ ಪಡೆದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ನೆಲಮಂಗಲ ಶವಗಾರಕ್ಕೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ; ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

0

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಅಧ್ಯಾಯ ಆರಂಭವಾಗಿದೆ. ಹೈದರಾಬಾದ್ ಮೂಲದ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿರುವ ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಅನ್ನು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ ಡಾ. ವಿಕ್ರಮ್ ಸಾರಾಭಾಯಿ ಅವರ ಗೌರವಾರ್ಥವಾಗಿ ಈ ರಾಕೆಟ್‌ಗೆ ‘ವಿಕ್ರಮ್-1’ ಎಂದು ಹೆಸರಿಡಲಾಗಿದೆ. ಉಡಾವಣೆ ಯಶಸ್ವಿಯಾಗಿ ಪೂರ್ಣಗೊಂಡು ರಾಕೆಟ್ ಭೂಮಿಯ ಕಕ್ಷೆ ತಲುಪಿದರೆ, ಬಾಹ್ಯಾಕಾಶಕ್ಕೆ ರಾಕೆಟ್ ಕಳುಹಿಸಿದ ವಿಶ್ವದ ಕೆಲವೇ ಖಾಸಗಿ ಬಾಹ್ಯಾಕಾಶ ಕಂಪನಿಗಳ ಸಾಲಿಗೆ ಭಾರತದ ಸ್ಕೈರೂಟ್ ಏರೋಸ್ಪೇಸ್ ಸೇರ್ಪಡೆಯಾಗಲಿದೆ.

ಮೂರು ಹಂತದ ಅತ್ಯಾಧುನಿಕ ರಾಕೆಟ್

‘ವಿಕ್ರಮ್-1’ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಮೂರು ಹಂತದ ರಾಕೆಟ್ ಆಗಿದೆ. ಸುಮಾರು 23 ಮೀಟರ್ ಎತ್ತರ ಹಾಗೂ 1.7 ಮೀಟರ್ ವ್ಯಾಸ ಹೊಂದಿರುವ ಈ ರಾಕೆಟ್, ಸಣ್ಣ ಗಾತ್ರದ ವಾಣಿಜ್ಯ ಉಪಗ್ರಹಗಳನ್ನು ಭೂಮಿಯ ಕೆಳ ಕಕ್ಷೆಗೆ ತಲುಪಿಸುವ ಸಾಮರ್ಥ್ಯ ಹೊಂದಿದೆ. ಸುಮಾರು 300 ಕೆ.ಜಿ.ವರೆಗಿನ ಉಪಗ್ರಹಗಳನ್ನು ನಿಖರವಾಗಿ ಕಕ್ಷೆಗೆ ಸೇರಿಸುವುದು ಇದರ ಪ್ರಮುಖ ಸಾಮರ್ಥ್ಯವಾಗಿದೆ.

ರಾಕೆಟ್‌ನ್ನು ಕಕ್ಷೆಗೆ ತಲುಪಿಸುವುದು ಅತ್ಯಂತ ಕಠಿಣ ಎಂಜಿನಿಯರಿಂಗ್ ಸಾಧನೆಯಾಗಿದೆ. ಇದಕ್ಕಾಗಿ ರಾಕೆಟ್ ಗಂಟೆಗೆ ಸುಮಾರು 28,000 ಕಿಲೋಮೀಟರ್ ವೇಗವನ್ನು ಸಾಧಿಸಬೇಕಾಗುತ್ತದೆ. ಇದರ ಜೊತೆಗೆ ನಿಖರ ಸಂಚರಣೆ ಹಾಗೂ ರಾಕೆಟ್‌ನ ವಿವಿಧ ಹಂತಗಳ ಬೇರ್ಪಡಿಕೆ ಪ್ರಕ್ರಿಯೆಗಳು ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ ನಡೆಯಬೇಕಾಗುತ್ತದೆ.

ಇಸ್ರೋ ಮಾಜಿ ವಿಜ್ಞಾನಿಗಳ ಕನಸಿನ ಫಲ

‘ವಿಕ್ರಮ್-1’ ಅಭಿವೃದ್ಧಿಯ ಹಿಂದೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾಜಿ ವಿಜ್ಞಾನಿಗಳ ಪರಿಶ್ರಮವಿದೆ. ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್ ಚಂದನ ಮತ್ತು ನಾಗಾ ಭರತ್ ಡಾಕಾ ಅವರು 2018ರಲ್ಲಿ ಸಂಸ್ಥೆಯಿಂದ ಹೊರಬಂದು ಸ್ಕೈರೂಟ್ ಏರೋಸ್ಪೇಸ್ ಕಂಪನಿಯನ್ನು ಸ್ಥಾಪಿಸಿದ್ದರು.

ಕಂಪನಿಯು ಈಗಾಗಲೇ 2022ರ ನವೆಂಬರ್‌ನಲ್ಲಿ ‘ವಿಕ್ರಮ್-ಎಸ್’ ಎಂಬ ಸಣ್ಣ ಉಪಕಕ್ಷಾ ರಾಕೆಟ್‌ನ ಪರೀಕ್ಷಾ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿತ್ತು. ಇದೀಗ ‘ವಿಕ್ರಮ್-1’ ಉಡಾವಣೆಯ ಮೂಲಕ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

ಈ ಯೋಜನೆಗೆ ಇಸ್ರೋ ತನ್ನ ಉಡಾವಣಾ ಕೇಂದ್ರ, ತಾಂತ್ರಿಕ ನೆರವು ಹಾಗೂ ಪರೀಕ್ಷಾ ಮೂಲಸೌಕರ್ಯಗಳ ಮೂಲಕ ಸಹಕಾರ ನೀಡಿದೆ. ಇದರಿಂದ ಸರ್ಕಾರಿ ಮತ್ತು ಖಾಸಗಿ ಬಾಹ್ಯಾಕಾಶ ಕ್ಷೇತ್ರಗಳ ನಡುವಿನ ಸಹಭಾಗಿತ್ವಕ್ಕೆ ಮತ್ತಷ್ಟು ಬಲ ಸಿಕ್ಕಿದೆ.

ಸಣ್ಣ ಉಪಗ್ರಹ ಮಾರುಕಟ್ಟೆಯಲ್ಲಿ ಭಾರತದ ಅವಕಾಶ

ಜಾಗತಿಕ ಮಟ್ಟದಲ್ಲಿ ಇಂಟರ್ನೆಟ್, ಕೃಷಿ, ಹವಾಮಾನ ಮುನ್ಸೂಚನೆ ಹಾಗೂ ಸಂವಹನ ಸೇರಿದಂತೆ ವಿವಿಧ ಕ್ಷೇತ್ರಗಳಿಗಾಗಿ ಸಣ್ಣ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಬೇಡಿಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕಡಿಮೆ ವೆಚ್ಚದಲ್ಲಿ ಹಾಗೂ ಕಡಿಮೆ ಸಮಯದಲ್ಲಿ ಉಪಗ್ರಹ ಉಡಾವಣೆ ನಡೆಸುವ ಸಾಮರ್ಥ್ಯ ಹೊಂದಿರುವ ಭಾರತದ ಖಾಸಗಿ ಬಾಹ್ಯಾಕಾಶ ಕಂಪನಿಗಳಿಗೆ ಭಾರಿ ಅವಕಾಶಗಳು ಎದುರಾಗಿವೆ.

‘ವಿಕ್ರಮ್-1’ ಮಿಷನ್ ಯಶಸ್ವಿಯಾದರೆ, ಜಾಗತಿಕ ಸಣ್ಣ ಉಪಗ್ರಹ ಉಡಾವಣಾ ಮಾರುಕಟ್ಟೆಯಲ್ಲಿ ಭಾರತಕ್ಕೆ ಮತ್ತಷ್ಟು ಬಲ ದೊರೆಯಲಿದೆ. ಭವಿಷ್ಯದಲ್ಲಿ ಮರುಬಳಕೆ ಮಾಡಬಹುದಾದ ರಾಕೆಟ್‌ಗಳು ಹಾಗೂ ಮಾನವ ಸಹಿತ ಬಾಹ್ಯಾಕಾಶ ಯಾನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಸ್ಕೈರೂಟ್ ಏರೋಸ್ಪೇಸ್ ಹೊಂದಿದೆ.

ಭಾರತದ ಯುವ ಇಂಜಿನಿಯರ್‌ಗಳು ಹಾಗೂ ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶಗಳ ಬಾಗಿಲು ತೆರೆಯುವಲ್ಲಿ ಈ ಉಡಾವಣೆ ಮಹತ್ವದ ಮೈಲಿಗಲ್ಲಾಗುವ ನಿರೀಕ್ಷೆಯಿದೆ.

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಹೊಸ ಟ್ವಿಸ್ಟ್: ಹಿಟ್ ಮ್ಯಾನ್ ಅಭಿಮಾನಿಗಳಿಗೆ ಸಿಗುತ್ತಾ ಸಿಹಿಸುದ್ದಿ?

0

ಲಂಡನ್: ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಜುಲೈ 19ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯವೇ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಕೊನೆಯ ಪಂದ್ಯವಾಗಬಹುದು ಎಂಬ ವದಂತಿಗೆ ಇದೀಗ ಹೊಸ ತಿರುವು ಸಿಕ್ಕಿದೆ.

ರೋಹಿತ್ ಶರ್ಮಾ ಅವರು ತಮ್ಮ ನಿವೃತ್ತಿ ಕುರಿತು ಬಿಸಿಸಿಐ, ತಂಡದ ಆಡಳಿತ ಮಂಡಳಿ ಅಥವಾ ಆಯ್ಕೆ ಸಮಿತಿಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ಪಂದ್ಯ ಮುಗಿದ ಬಳಿಕ ಅವರು ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗೆ ಈವರೆಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, 2027ರ ಏಕದಿನ ವಿಶ್ವಕಪ್ ಯೋಜನೆಯಲ್ಲಿ ರೋಹಿತ್ ಶರ್ಮಾ ಅವರನ್ನು ಪರಿಗಣಿಸದಿರಲು ಆಯ್ಕೆ ಸಮಿತಿ ನಿರ್ಧರಿಸಿದ್ದು, ಈ ವಿಚಾರವನ್ನು ಅವರಿಗೆ ಈಗಾಗಲೇ ತಿಳಿಸಲಾಗಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ತಂಡದ ಆಡಳಿತ ಮತ್ತು ಆಯ್ಕೆ ಸಮಿತಿ ಭವಿಷ್ಯದ ಯೋಜನೆ ರೂಪಿಸುತ್ತಿದೆ ಎಂದು ವರದಿಗಳು ಹೇಳಿವೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಈ ಕುರಿತು ರೋಹಿತ್ ಶರ್ಮಾ ಅವರೊಂದಿಗೆ ಚರ್ಚೆ ನಡೆದಿತ್ತು ಎನ್ನಲಾಗುತ್ತಿದೆ. ಆದರೆ, ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ಬಿಸಿಸಿಐ ಅಥವಾ ಆಯ್ಕೆ ಸಮಿತಿಗೆ ತಿಳಿಸಿಲ್ಲ ಎಂದು ವರದಿಯಾಗಿದೆ.

ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕ್ರಮವಾಗಿ 11 ಮತ್ತು 26 ರನ್ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರದ ಹಿನ್ನೆಲೆಯಲ್ಲಿ, ಜುಲೈ 19ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ಅವರ ಕೊನೆಯ ಪಂದ್ಯವಾಗಬಹುದು ಎಂಬ ಊಹಾಪೋಹಗಳು ಮತ್ತಷ್ಟು ಜೋರಾಗಿವೆ.

ಆದಾಗ್ಯೂ, ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಹೀಗಾಗಿ ಲಾರ್ಡ್ಸ್ ಪಂದ್ಯಕ್ಕೂ ಮುನ್ನ ಅಥವಾ ಪಂದ್ಯದ ಬಳಿಕ ರೋಹಿತ್ ತಮ್ಮ ಭವಿಷ್ಯದ ಕುರಿತು ಯಾವುದೇ ನಿರ್ಧಾರ ಪ್ರಕಟಿಸುತ್ತಾರೆಯೇ ಎಂಬುದು ಸದ್ಯ ಕುತೂಹಲ ಮೂಡಿಸಿದೆ.

ಮಳೆಗಾಗಿ ದೇವರ ಮೊರೆ : ಪಾದಯಾತ್ರೆಯಲ್ಲೇ ಸುರಿದ ಧಾರಾಕಾರ ಮಳೆ, ರೈತರ ಸಂಭ್ರಮ

0

ರಾಯಚೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಮಳೆಯಾಗಲೆಂದು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ನಡೆಸಿದ ಪಾದಯಾತ್ರೆಗೆ ವರುಣ ತಕ್ಷಣವೇ ಸ್ಪಂದಿಸಿದಂತೆ ಮಾನ್ವಿಯಲ್ಲಿ ಅಪರೂಪದ ದೃಶ್ಯ ಕಂಡುಬಂದಿದೆ. ಪಾದಯಾತ್ರೆ ಸಾಗುತ್ತಿದ್ದ ಸಂದರ್ಭವೇ ಧಾರಾಕಾರ ಮಳೆ ಸುರಿದ ಪರಿಣಾಮ ರೈತರು ಹಾಗೂ ಕಾರ್ಯಕರ್ತರು ಮಳೆಯಲ್ಲೇ ಸಂಭ್ರಮಾಚರಣೆ ನಡೆಸಿದರು.

ಮಾನ್ವಿ ಪಟ್ಟಣದ ಮಾರಿಕಾಂಬಾ ದೇವಿ ದೇವಸ್ಥಾನದಿಂದ ನೀರಮಾನ್ವಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನವರೆಗೆ ನಡೆದ ಪಾದಯಾತ್ರೆಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮತ್ತು ಮಾಜಿ ಶಾಸಕ ವೆಂಕಟಪ್ಪ ನಾಯಕ್ ನೇತೃತ್ವ ವಹಿಸಿದ್ದರು. ಜೆಡಿಎಸ್ ಕಾರ್ಯಕರ್ತರು, ಮುಖಂಡರು, ರೈತರು ಹಾಗೂ ಕಲಾತಂಡದ ಸದಸ್ಯರು ಈ ಧಾರ್ಮಿಕ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಪಾದಯಾತ್ರೆ ನಡೆಯುತ್ತಿದ್ದ ವೇಳೆ ಸುರಿದ ಭಾರೀ ಮಳೆ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿತು. ಮಳೆಯಲ್ಲೇ ಕುಣಿದು ಕುಪ್ಪಳಿಸಿದ ರೈತರು ಮತ್ತು ಕಾರ್ಯಕರ್ತರು ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ರೈತ ಸಮುದಾಯದ ಕಲ್ಯಾಣಕ್ಕಾಗಿ ಬೇಡಿಕೊಂಡರು.

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ವಿವಿಧ ಆಯಾಮಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆಯಲ್ಲೂ ಸಂಪುಟ ವಿಸ್ತರಣೆ ಪ್ರಮುಖ ವಿಚಾರವಾಗಿದ್ದು, ಆ ಬಳಿಕ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದರು.

ಮೂಲಗಳ ಪ್ರಕಾರ, ಸಚಿವ ಸ್ಥಾನಕ್ಕೆ ಪರಿಗಣಿಸಲಾದ ಹಿರಿಯ ಮಾಜಿ ಸಚಿವರ ಪಟ್ಟಿಗೆ ಹೈಕಮಾಂಡ್ ಕೆಲವು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಆ ಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆದಿದೆ. ಹಿರಿಯ ನಾಯಕರ ಪಟ್ಟಿಯಲ್ಲಿ ಯಾರಿಗೆ ಅವಕಾಶ ನೀಡಬೇಕು ಮತ್ತು ಯಾರ ಹೆಸರನ್ನು ಕೈಬಿಡಬೇಕು ಎಂಬ ವಿಚಾರದ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ.

ಸಿಎಂ ಹಾಗೂ ಪಕ್ಷದ ಹಿರಿಯ ನಾಯಕರು ಸಿದ್ಧಪಡಿಸಿದ್ದ ಪಟ್ಟಿಯಲ್ಲಿ 11 ಮಂದಿ ಹಿರಿಯ ಮಾಜಿ ಸಚಿವರ ಹೆಸರುಗಳಿದ್ದು, ಅದರಲ್ಲಿ ಶೇಕಡಾ 50ರಷ್ಟು ಹೆಸರುಗಳನ್ನು ಕೈಬಿಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಪಟ್ಟಿಯ ರೂಪುರೇಷೆಗಳನ್ನು ನಿರ್ಧರಿಸುವ ಜವಾಬ್ದಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲಿದೆ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ ಅವರೊಂದಿಗೆ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದರ ನಡುವೆ, ಸಚಿವ ಸ್ಥಾನಕ್ಕಾಗಿ ಲಾಬಿ ಕೂಡ ಜೋರಾಗಿದ್ದು, ಶಾಸಕ ಅಜಯ್ ಸಿಂಗ್ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ತಮ್ಮ ಹೆಸರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಶಾಸಕ ಎಂ. ಕೃಷ್ಣಪ್ಪ ಕೂಡ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಸಚಿವ ಸಂಪುಟದಲ್ಲಿ ಅವಕಾಶ ನೀಡುವಂತೆ ಕೋರಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಅಂತಿಮ ತೀರ್ಮಾನ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೇ ಕೈಗೊಳ್ಳಲಾಗುವ ಸಾಧ್ಯತೆ ಇದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಸುಫಾರಿ ಹೆಸರಿನಲ್ಲಿ ₹40 ಲಕ್ಷ ಬೇಡಿಕೆ: ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ ₹16 ಲಕ್ಷ ವಸೂಲಿ

0

ಮೈಸೂರು: ನಗರದಲ್ಲಿ ಗುತ್ತಿಗೆದಾರನನ್ನು ಗುರಿಯಾಗಿಸಿಕೊಂಡು ನಡೆದ ಸಂಘಟಿತ ಅಪಹರಣ ಪ್ರಕರಣ ಭಾರೀ ಆತಂಕ ಮೂಡಿಸಿದೆ. ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿ ರಾತ್ರಿಯಿಡೀ ಕಾರಿನಲ್ಲಿ ಬಂಧಿಯಾಗಿರಿಸಿ, “ಕೊಲೆ ಸುಫಾರಿ” ಹೆಸರಿನಲ್ಲಿ ₹40 ಲಕ್ಷಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು, ಕೊನೆಗೆ ₹16 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣದ ಬೆನ್ನತ್ತಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಜುಲೈ 15ರಂದು ಮೈಸೂರು ತಾಲೂಕಿನ ಮುದೇಗೌಡನ ದೊಡ್ಡಿ ಗ್ರಾಮದ ಗುತ್ತಿಗೆದಾರ ರಾಮು ತಮ್ಮ ತೋಟದಿಂದ ಮನೆಗೆ ಮರಳುತ್ತಿದ್ದ ವೇಳೆ ನಾಲ್ವರು ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಕಾರಿನೊಳಗೆ ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿ ವಿವಿಧ ಪ್ರದೇಶಗಳಲ್ಲಿ ಸುತ್ತಾಡಿಸಿದ್ದು, ಅವರ ಮೊಬೈಲ್‌ನಿಂದಲೇ ಕುಟುಂಬದವರಿಗೆ ಕರೆ ಮಾಡಿಸಿ ಅನುಮಾನ ಬಾರದಂತೆ ನೋಡಿಕೊಂಡಿದ್ದಾರೆ.

ಅಪಹರಣದ ವೇಳೆ ರಾಮು ಅವರ ಬಳಿಯಿದ್ದ 30 ಗ್ರಾಂ ಚಿನ್ನದ ಸರ, 20 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ₹50 ಸಾವಿರ ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ “ನಿನ್ನ ಹತ್ಯೆಗೆ ₹9 ಲಕ್ಷ ಸುಫಾರಿ ನೀಡಲಾಗಿದೆ. ಬದುಕಬೇಕಾದರೆ ₹40 ಲಕ್ಷ ಕೊಡಬೇಕು” ಎಂದು ಬೆದರಿಸಿ ಹಲ್ಲೆ ನಡೆಸಿದ್ದಾರೆ.

ಹಣ ಇಲ್ಲ ಎಂದು ರಾಮು ಹೇಳಿದ ಬಳಿಕ, ₹16 ಲಕ್ಷ ಇರುವುದಾಗಿ ತಿಳಿಸಿದ್ದು, ಆ ಹಣವನ್ನು ಪತ್ನಿಯಿಂದ ತರಿಸುವಂತೆ ಒತ್ತಾಯಿಸಲಾಗಿದೆ. ರಾಮು ಅವರ ಬಾಮೈದ ಸುರೇಶ್, ನಂದಗುಂದ ಸೇತುವೆ ಬಳಿ ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಗೆ ₹16 ಲಕ್ಷ ಹಸ್ತಾಂತರಿಸಿದ್ದಾರೆ.

ಹಣ ಪಡೆದ ಬಳಿಕ ಆರೋಪಿಗಳು ರಾಮುವನ್ನು ಇನ್ನೂ ಕೆಲಕಾಲ ಕಾರಿನಲ್ಲಿ ಸುತ್ತಾಡಿಸಿ, ಅಜ್ಞಾತ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ವರುಣಾ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಸುಳಿವು ಪತ್ತೆ ಹಚ್ಚಲು ಮೂರು ವಿಶೇಷ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.