Home Blog

7 ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ TMC ನಾಯಕ: ತಲೆಮರೆಸಿಕೊಂಡಿದ್ದ ಆರೋಪಿ ನೇಪಾಳ ಗಡಿಯಲ್ಲಿ ಅರೆಸ್ಟ್

ಕೋಲ್ಕತ್ತಾ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಜಹಾಂಗೀರ್ ಖಾನ್ ಅವರನ್ನು ಪಶ್ಚಿಮ ಬಂಗಾಳ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಅಧಿಕಾರಿಗಳು ಬಂಧಿಸಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಜಹಾಂಗೀರ್ ಖಾನ್ ಅವರನ್ನು ಸೋಮವಾರ ಮುಂಜಾನೆ ನೇಪಾಳ ಗಡಿ ಸಮೀಪ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಕಳೆದ ಕೆಲವು ದಿನಗಳಿಂದ ಅವರ ಚಲನವಲನಗಳ ಕುರಿತು ನಿಗಾ ವಹಿಸಿದ್ದ ಎಸ್ಟಿಎಫ್ ತಂಡ, ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆ ವ್ಯಾಪ್ತಿಯ ಫಾಲ್ಟಾ ಪೊಲೀಸ್ ಠಾಣೆಯಲ್ಲಿ ಜಹಾಂಗೀರ್ ಖಾನ್ ವಿರುದ್ಧ ಒಟ್ಟು ಏಳು ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣಗಳು ದಾಖಲಾಗಿದ ಬಳಿಕ ಪೊಲೀಸರು ಹುಡುಕಾಟ ಆರಂಭಿಸಿದ್ದರೂ, ಅವರು ತಲೆಮರೆಸಿಕೊಂಡು ಓಡಾಡುತ್ತಿದ್ದರು ಎಂದು ತಿಳಿದುಬಂದಿದೆ.

ಖಾನ್ ಅವರ ಇರುವಿಕೆ ಕುರಿತು ದೊರೆತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ವಿಶೇಷ ಕಾರ್ಯಪಡೆ ನಿರಂತರ ನಿಗಾ ವಹಿಸಿತ್ತು. ಅಂತಿಮವಾಗಿ ನೇಪಾಳ ಗಡಿ ಪ್ರದೇಶದಲ್ಲಿ ಅವರನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬಂಧಿತ ನಾಯಕನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೋಕ್ಸೋ ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆಯುವಾದ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ, ಕಾನ್‌ಸ್ಟೇಬಲ್

ಕಲಬುರಗಿ:  ಪೋಕ್ಸೋ ಸಂತ್ರಸ್ತೆಯ ಕುಟುಂಬಕ್ಕೆ ನೆರವು ನೀಡಬೇಕಿದ್ದ ಪೊಲೀಸ್ ಸಿಬ್ಬಂದಿಯೇ ಲಂಚಕ್ಕಾಗಿ ಕಿರುಕುಳ ನೀಡಿದ ಘಟನೆ ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಎಎಸ್‌ಐ ಶಿವಶರಣಪ್ಪ ಮತ್ತು ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆಯ ತಾಯಿಗೆ ಕಾನೂನು ನೆರವು ಮತ್ತು ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಸಹಾಯ ಮಾಡುವುದಾಗಿ ಹೇಳಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಇವರ ಮೇಲಿದೆ. ಜೊತೆಗೆ ಸರ್ಕಾರಿ ಅಭಿಯೋಜಕರ ಶುಲ್ಕ ಎಂದು ಹೇಳಿ ಈಗಾಗಲೇ 1 ಸಾವಿರ ರೂಪಾಯಿ ಪಡೆದಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ದೂರಿನ ಮೇರೆಗೆ ಬಲೆ ಬೀಸಿದ ಲೋಕಾಯುಕ್ತ ಅಧಿಕಾರಿಗಳು, ಮಹಿಳಾ ಕಾನ್‌ಸ್ಟೆಬಲ್ ಜ್ಯೋತಿ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಬಂಧಿಸಿದರು. ಮತ್ತೊಂದೆಡೆ ಎಎಸ್‌ಐ ಶಿವಶರಣಪ್ಪ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಅಧಿಕಾರಿಗಳ ತಂಡ ಆತನನ್ನು ಬೆನ್ನಟ್ಟಿ ಹಿಡಿದಿದೆ.

ಸಾಮಾನ್ಯ ಭ್ರಷ್ಟಾಚಾರದ ಪ್ರಕರಣಗಳಿಗಿಂತ ಭಿನ್ನವಾಗಿ, ಪೋಕ್ಸೋ ಸಂತ್ರಸ್ತೆಯ ಕುಟುಂಬವನ್ನೇ ಗುರಿಯಾಗಿಸಿಕೊಂಡು ಲಂಚ ಕೇಳಿರುವ ಆರೋಪ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಪೆಟ್ರೋಲ್, ಗ್ಯಾಸ್ ಬಳಿಕ ಅಕ್ಕಿ ದರ ಶಾಕ್; ಬೇಡಿಕೆ ಹೆಚ್ಚಳ, ಪೂರೈಕೆ ಕೊರತೆಯಿಂದ ಬೆಲೆ ಜಿಗಿತ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಎದುರಿಸುತ್ತಿರುವ ಗ್ರಾಹಕರಿಗೆ ಮತ್ತೊಂದು ಆಘಾತ ಎದುರಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ದರ ಏರಿಕೆಯ ನಡುವೆಯೇ ಇದೀಗ ಅಕ್ಕಿ ಬೆಲೆಯೂ ಗಣನೀಯವಾಗಿ ಹೆಚ್ಚಳವಾಗಿದ್ದು, ಕುಟುಂಬಗಳ ಮಾಸಿಕ ಖರ್ಚಿನ ಮೇಲೆ ಹೆಚ್ಚುವರಿ ಹೊರೆ ಬೀಳುವಂತಾಗಿದೆ.

ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿಗಳ ದರದಲ್ಲಿ ಕೆಜಿಗೆ ₹10ರಿಂದ ₹20ರವರೆಗೆ ಏರಿಕೆ ದಾಖಲಾಗಿದ್ದು, ಗ್ರಾಹಕರು ಹೆಚ್ಚುವರಿ ಹಣ ಪಾವತಿಸಿ ಅಕ್ಕಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚಾಗಿರುವುದು ಮತ್ತು ಪೂರೈಕೆ ಪ್ರಮಾಣ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಇದರ ಜೊತೆಗೆ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿರುವ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕುಂಠಿತವಾಗಿದ್ದು, ದರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ಹೊಸ ಅಕ್ಕಿ ಬೆಳೆ ನವೆಂಬರ್ ತಿಂಗಳ ವೇಳೆಗೆ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದ್ದು, ಅಲ್ಲಿಯವರೆಗೆ ಪೂರೈಕೆ ಕೊರತೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಕ್ಕಿ ದರ ಮತ್ತಷ್ಟು ಏರಿಕೆಯಾಗುವ ಆತಂಕವೂ ವ್ಯಕ್ತವಾಗಿದೆ.

ವಿವಿಧ ತಳಿಯ ಅಕ್ಕಿ ಹೊಸ ದರಗಳು

  • ಸ್ಟೀಮ್ ರೈಸ್ – ಕೆಜಿಗೆ ₹42ರಿಂದ ₹56ಕ್ಕೆ ಏರಿಕೆ
  • ರಾ ರೈಸ್ – ಕೆಜಿಗೆ ₹50ರಿಂದ ₹62ಕ್ಕೆ ಹೆಚ್ಚಳ
  • ಕೋಲಂ ರೈಸ್ – ಕೆಜಿಗೆ ₹68ರಿಂದ ₹80ಕ್ಕೆ ಜಿಗಿತ
  • ಕೋಲಂ ಸ್ಟೀಮ್ ರೈಸ್ – ಕೆಜಿಗೆ ₹55ರಿಂದ ₹65ಕ್ಕೆ ಏರಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಆರ್ಥಿಕ ಒತ್ತಡ ಅನುಭವಿಸುತ್ತಿದ್ದು, ಅಕ್ಕಿ ದರ ಹೆಚ್ಚಳ ಮತ್ತಷ್ಟು ಸಂಕಷ್ಟ ಸೃಷ್ಟಿಸಿದೆ. ದಿನನಿತ್ಯದ ಜೀವನ ನಿರ್ವಹಣೆಯ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವುದರಿಂದ ಕುಟುಂಬದ ಬಜೆಟ್ ಸಮತೋಲನ ಕಾಯ್ದುಕೊಳ್ಳುವುದು ಕಷ್ಟಕರವಾಗಿದೆ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನೆ ಆವರಣದಲ್ಲಿ ಬ್ರಹ್ಮಕಮಲಗಳ ಮಹಾ ವೈಭವ!

ಗದಗ: ನಗರದಲ್ಲಿ ಅಪರೂಪದ ಪ್ರಕೃತಿ ವೈಭವವೊಂದು ಜನರ ಗಮನ ಸೆಳೆದಿದೆ. ಎಸ್‌ಎಸ್‌ಕೆ ಸಮಾಜದ ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ ಅವರ ಮನೆ ಆವರಣದಲ್ಲಿ ಒಂದೇ ರಾತ್ರಿ ಬರೋಬ್ಬರಿ 55 ಬ್ರಹ್ಮಕಮಲ ಹೂಗಳು ಅರಳಿದ ಅಪರೂಪದ ದೃಶ್ಯ ಭಾನುವಾರ ರಾತ್ರಿ ನಡೆದಿದೆ.

ಸಾಮಾನ್ಯವಾಗಿ ರಾತ್ರಿ ವೇಳೆ ಅರಳಿ ಬೆಳಗ್ಗಿನೊಳಗೆ ಬಾಡುವ ಬ್ರಹ್ಮಕಮಲ ಹೂವು ಅಪರೂಪದ ಪುಷ್ಪವೆಂದೇ ಪ್ರಸಿದ್ಧಿ ಪಡೆದಿದೆ. ಅದರಲ್ಲೂ ಒಂದೇ ಸಮಯದಲ್ಲಿ ಇಷ್ಟು ಸಂಖ್ಯೆಯಲ್ಲಿ ಹೂಗಳು ಅರಳಿರುವುದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.

ಬಿಳಿ ಬಣ್ಣದ ಬ್ರಹ್ಮಕಮಲಗಳು ರಾತ್ರಿ ಹೊತ್ತಿನಲ್ಲಿ ಮತ್ತಷ್ಟು ಮನಮೋಹಕವಾಗಿ ಕಂಗೊಳಿಸಿದ್ದು, ಮನೆ ಆವರಣವೇ ಪುಷ್ಪ ಲೋಕದಂತೆ ಕಾಣಿಸುತ್ತಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು, ಪ್ರಕೃತಿ ಪ್ರೇಮಿಗಳು ಹಾಗೂ ಹೂವಿನ ಅಭಿಮಾನಿಗಳು ಸ್ಥಳಕ್ಕೆ ಆಗಮಿಸಿ ಈ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು.

ಇಂತಹ ದೃಶ್ಯವನ್ನು ಮೊದಲ ಬಾರಿಗೆ ನೋಡುತ್ತಿದ್ದೇವೆ. ಒಂದೇ ಮನೆಯಲ್ಲಿ ಇಷ್ಟು ಬ್ರಹ್ಮಕಮಲಗಳು ಅರಳಿರುವುದು ನಿಜಕ್ಕೂ ಆಶ್ಚರ್ಯಕರ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು. ಪ್ರಕೃತಿಯ ಈ ಅಪರೂಪದ ಕ್ಷಣವನ್ನು ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿಯಲು ಜನರು ಮುಗಿಬಿದ್ದ ದೃಶ್ಯ ವಿಶೇಷವಾಗಿತ್ತು.

ಇಂದು ಇಂಡಿಯಾ ಕೂಟದ ‘ಜನಬಂಧನ್’ ಮಹಾಸಭೆ; 23 ಪಕ್ಷಗಳ ಭಾಗಿ, ಭಿನ್ನಮತಗಳ ನಡುವೆಯೂ ಒಗ್ಗಟ್ಟಿನ ಸಂದೇಶ

ನವದೆಹಲಿ: ವಿಪಕ್ಷಗಳ ಇಂಡಿಯಾ (INDIA) ಮೈತ್ರಿಕೂಟದಲ್ಲಿ ಕೆಲವು ಪಕ್ಷಗಳ ಅಸಮಾಧಾನ ಮತ್ತು ಭಿನ್ನಾಭಿಪ್ರಾಯಗಳ ಚರ್ಚೆ ನಡುವೆಯೇ, ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಸೋಮವಾರ ಇಂಡಿಯಾ ಜನಬಂಧನ್ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಒಟ್ಟು 23 ರಾಜಕೀಯ ಪಕ್ಷಗಳು ಭಾಗವಹಿಸುವ ನಿರೀಕ್ಷೆಯಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಇಂಡಿಯಾ ಕೂಟದ ಮಹತ್ವದ ಸಭೆಗೆ 23 ಪಕ್ಷಗಳು ಹಾಜರಾಗಲಿವೆ ಎಂದು ತಿಳಿಸಿದ್ದಾರೆ. ಕೆಲವು ಪಕ್ಷಗಳು ವೈಯಕ್ತಿಕ ಹಾಗೂ ರಾಜಕೀಯ ಕಾರಣಗಳಿಂದ ಸಭೆಗೆ ಗೈರಾಗಲು ನಿರ್ಧರಿಸಿದ್ದರೂ, ಮೈತ್ರಿಕೂಟದ ಒಗ್ಗಟ್ಟು ಅಚಲವಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹಲವು ನೀತಿಗಳು ಮತ್ತು ಕ್ರಮಗಳ ವಿರುದ್ಧ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆಯ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

“ಕೋಟ್ಯಂತರ ಭಾರತೀಯರ ಮತದಾನದ ಹಕ್ಕುಗಳ ಮೇಲೆ ಪರಿಣಾಮ ಬೀರುವ ಕ್ರಮಗಳು, ಸಂವಿಧಾನದ ಮೌಲ್ಯಗಳಿಗೆ ಧಕ್ಕೆಯುಂಟು ಮಾಡುವ ನಿರ್ಧಾರಗಳು ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ಹಣದುಬ್ಬರ, ನಿರುದ್ಯೋಗ ಮತ್ತು ವಿದೇಶಾಂಗ ನೀತಿಗೆ ಸಂಬಂಧಿಸಿದ ವಿಷಯಗಳ ಮೇಲೂ ಇಂಡಿಯಾ ಕೂಟ ತನ್ನ ನಿಲುವು ಸ್ಪಷ್ಟಪಡಿಸಲಿದೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇದೇ ವೇಳೆ, ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷಗಳಲ್ಲಿ ಒಂದಾದ ತಮಿಳುನಾಡಿನ ಡಿಎಂಕೆ ಪಕ್ಷ ಸಭೆಯನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದೆ. ತಮಿಳುನಾಡಿನ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿಎಂಕೆ, ಈ ಸಭೆಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದೆ.

ಡಿಎಂಕೆ ಪಕ್ಷ ಇಂಡಿಯಾ ಕೂಟಕ್ಕೆ ಬರೆದಿರುವ ಪತ್ರದಲ್ಲಿ, “ಕೆಲವು ರಾಜಕೀಯ ಬೆಳವಣಿಗೆಗಳ ಬಗ್ಗೆ ನಮಗೆ ಅಸಮಾಧಾನವಿದ್ದರೂ, ದೇಶದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ನಮ್ಮ ಧ್ವನಿಯನ್ನು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ತಿಳಿಸಿದೆ.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಅಧಿಸೂಚನೆ: ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯು ವಿವಿಧ ಜಿಲ್ಲಾ, ನಗರ ಹಾಗೂ ವಿಶೇಷ ಘಟಕಗಳಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನಾಂಕವಾಗಿದ್ದು, ಶುಲ್ಕ ಪಾವತಿಗೆ ಜುಲೈ 4ರವರೆಗೆ ಅವಕಾಶ ನೀಡಲಾಗಿದೆ. ಲಿಖಿತ ಪರೀಕ್ಷೆಯನ್ನು ಆಗಸ್ಟ್ 2, 2026ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಸಲಾಗುತ್ತದೆ.

ಅಭ್ಯರ್ಥಿಗಳು ಪಿಯುಸಿ, ಸಿಬಿಎಸ್‌ಇ, ಐಎಸ್‌ಸಿ, ಎನ್‌ಐಒಎಸ್ ಅಥವಾ ಮೂರು ವರ್ಷದ ಡಿಪ್ಲೊಮಾ ಸೇರಿದಂತೆ ಸರ್ಕಾರ ಮಾನ್ಯತೆ ನೀಡಿರುವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನಿಷ್ಠ 18 ವರ್ಷ ವಯಸ್ಸು ಕಡ್ಡಾಯವಾಗಿದ್ದು, ಸರ್ಕಾರವು ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷಗಳ ವಿಶೇಷ ಸಡಿಲಿಕೆಯನ್ನು ನೀಡಿದೆ.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಹಾಗೂ ಬುಡಕಟ್ಟು ಸಮುದಾಯದ ಅಭ್ಯರ್ಥಿಗಳಿಗೆ 38 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆಯ ಜೊತೆಗೆ ದೇಹದಾರ್ಢ್ಯ ಮತ್ತು ಸಹನಶಕ್ತಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ 168 ಸೆಂ.ಮೀ. ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 157 ಸೆಂ.ಮೀ. ಎತ್ತರ ಕಡ್ಡಾಯವಾಗಿದೆ.

ಒಟ್ಟು 3,395 ಹುದ್ದೆಗಳಲ್ಲಿ 2,266 ಹುದ್ದೆಗಳು ಪುರುಷರಿಗೆ, 755 ಮಹಿಳೆಯರಿಗೆ, 257 ಸೇವಾನಿರತ ಪುರುಷರಿಗೆ, 82 ಸೇವಾನಿರತ ಮಹಿಳೆಯರಿಗೆ ಹಾಗೂ 35 ಹುದ್ದೆಗಳು ತೃತೀಯಲಿಂಗಿ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ನೇಮಕಗೊಂಡ ಅಭ್ಯರ್ಥಿಗಳಿಗೆ ಎರಡು ವರ್ಷಗಳ ತರಬೇತಿ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ಬಳಿಕ ಖಾಯಂ ನೇಮಕಾತಿ ಮಾಡಲಾಗುತ್ತಿದ್ದು, ₹37,500 ರಿಂದ ₹76,100ರವರೆಗೆ ವೇತನ ಶ್ರೇಣಿ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಸೌಲಭ್ಯ ದೊರೆಯಲಿದೆ.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪೊಲೀಸ್ ಇಲಾಖೆಯ ಈ ನೇಮಕಾತಿ ಅಧಿಸೂಚನೆಯು ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿ ಪರಿಣಮಿಸಿದೆ.

‘ಜಮೀರ್ ಇಲ್ಲದ ಸರ್ಕಾರ ಸರ್ಕಾರವೇ ಅಲ್ಲ’: ಕೋಡಿಮಠ ಶ್ರೀಗಳ ಭವಿಷ್ಯ!

ಹಾಸನ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಮತ್ತೆ ಸಚಿವರಾಗಲಿದ್ದಾರೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆಯ ಅಲ್ ಅಮೀನ್ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಮೀರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ಹೊರಗಿಡಲು ಸಾಧ್ಯವಿಲ್ಲ. ಅವರು ಮತ್ತೆ ಸಚಿವ ಸಂಪುಟ ಸೇರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಮೀರ್ ಅವರ ವಿರುದ್ಧ ಕೇಳಿಬಂದಿರುವ ಆಡಿಯೋ ಹಾಗೂ ಇತರ ವಿವಾದಗಳು ಅಪಪ್ರಚಾರದ ಭಾಗವಾಗಿದ್ದು, ಇದರಿಂದ ಅವರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು. ಜೊತೆಗೆ ಶಾಸಕ ಶಿವಲಿಂಗೇಗೌಡ ಅವರಿಗೂ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಜಮೀರ್ ಅಹಮ್ಮದ್ ಖಾನ್ ಸಮಾಜ ಸೇವೆ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಎಲ್ಲರೂ ಬೆಂಬಲ ನೀಡಬೇಕು. ಸಚಿವ ಸ್ಥಾನ ದೊರೆತ ಬಳಿಕ ಜಮೀರ್ ಮತ್ತು ಶಿವಲಿಂಗೇಗೌಡ ಅವರನ್ನು ಮಠದಲ್ಲಿ ಸನ್ಮಾನಿಸುವುದಾಗಿ ಸ್ವಾಮೀಜಿ ತಿಳಿಸಿದರು.

ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಈ ಹಿಂದೆ ನೀಡಿದ್ದ ತಮ್ಮ ಭವಿಷ್ಯ ನಿಜವಾಗಿರುವುದನ್ನೂ ಉಲ್ಲೇಖಿಸಿದ ಅವರು, ಈ ಬಾರಿಯೂ ಜಮೀರ್ ಸಚಿವರಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಬೇಕಿದ್ದು, ಕೋಡಿಮಠ ಶ್ರೀಗಳ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬಳ್ಳಾರಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು: ಹಳ್ಳದ ಬಳಿ ಮೃತದೇಹ ಪತ್ತೆ, ತನಿಖೆ ಚುರುಕು

ಬಳ್ಳಾರಿ: ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಪಾರ್ಟಿಗೆ ತೆರಳಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಹಂದ್ರಾಳ್ ಹಳ್ಳದ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಹಲವು ಅನುಮಾನಗಳು ಮೂಡಿವೆ.

ಮೃತರನ್ನು ಕೌಲ್ ಬಜಾರ್ ನಿವಾಸಿ ಹಾಗೂ ಪ್ರಗತಿ ಬ್ಯಾಂಕ್ ಉದ್ಯೋಗಿ ಅನಿಷಾ ಫಾತೀಮಾ (38) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಬ್ಯಾಂಕ್ ಸಿಬ್ಬಂದಿಯೊಂದಿಗೆ ಪಾರ್ಟಿಗೆ ತೆರಳಿದ್ದ ಅವರು ನಂತರ ರಾತ್ರಿ 11 ಗಂಟೆ ಸುಮಾರಿಗೆ ಪತಿಗೆ ಕರೆ ಮಾಡಿದ್ದರು ಎಂದು ತಿಳಿದುಬಂದಿದೆ. ಬಳಿಕ ಅವರ ಸಂಪರ್ಕ ಕಡಿತಗೊಂಡಿತ್ತು.

ಭಾನುವಾರ ಬೆಳಗ್ಗೆ ಹಳ್ಳದ ಪಕ್ಕದ ಜಾಲಿಬೇಲಿಯಲ್ಲಿ ಅನಿಷಾ ಫಾತೀಮಾ ಅವರ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಹಂದ್ರಾಳ್ ಹಳ್ಳ ಉಕ್ಕಿ ಹರಿಯುತ್ತಿದ್ದು, ಸ್ಕೂಟಿ ಸಮೇತ ಮಹಿಳೆ ನೀರಿನಲ್ಲಿ ಕೊಚ್ಚಿಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಸ್ಕೂಟಿ ಒಂದೆಡೆ ಹಾಗೂ ಮೃತದೇಹ ಮತ್ತೊಂದೆಡೆ ಪತ್ತೆಯಾಗಿರುವುದು ಪ್ರಕರಣವನ್ನು ಗಂಭೀರಗೊಳಿಸಿದೆ.

ಮೃತರ ಕುಟುಂಬಸ್ಥರು ಈ ಸಾವಿನ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದು, “ನಮ್ಮ ಮನೆ ಮಗಳಂತೆ ಇನ್ನೊಬ್ಬರಿಗೆ ಆಗಬಾರದು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಹೋಮಿಯೋಪತಿ ಪರ ಹೇಳಿಕೆ ನೀಡಿದ ಅನುಷ್ಕಾ ಶರ್ಮಾ: ನಟಿಯ ಪೋಸ್ಟ್‌ಗೆ ವೈದ್ಯರ ಆಕ್ರೋಶ

ಸಿನಿಮಾಗಳಿಂದ ದೂರವಿದ್ದು ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವ ನಟಿ ಅನುಷ್ಕಾ ಶರ್ಮಾ ಇದೀಗ ಆರೋಗ್ಯ ವಿಚಾರದಲ್ಲಿ ಮಾಡಿದ ಪೋಸ್ಟ್‌ನಿಂದ ಸುದ್ದಿಯಲ್ಲಿದ್ದಾರೆ. ಹೋಮಿಯೋಪತಿ ಚಿಕಿತ್ಸಾ ಪದ್ಧತಿಗೆ ಬೆಂಬಲ ಸೂಚಿಸಿದ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಅನುಷ್ಕಾ ಶರ್ಮಾ, ಹೋಮಿಯೋಪತಿ ವೈದ್ಯ ರಾಜನ್ ಸಂಕರನ್ ಅವರ ವಿಡಿಯೋವನ್ನು ಹಂಚಿಕೊಂಡು, ತಮ್ಮ ಆರೋಗ್ಯ ಜೀವನದಲ್ಲಿ ಹೋಮಿಯೋಪತಿಯ ಪಾತ್ರವನ್ನು ಶ್ಲಾಘಿಸಿದ್ದರು. ಆದರೆ ಈ ಹೇಳಿಕೆಗೆ ವೈದ್ಯಕೀಯ ಕ್ಷೇತ್ರದ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಖ್ಯಾತ ವೈದ್ಯ ಸಿರಿಯಾಕ್ ಅಬಿ ಫಿಲಿಪ್ಸ್, ಹೋಮಿಯೋಪತಿಯಲ್ಲಿ ಪರಿಣಾಮಕಾರಿ ಔಷಧೀಯ ಅಂಶಗಳಿಲ್ಲ ಎಂದು ವಾದಿಸಿದ್ದು, ಸಾರ್ವಜನಿಕ ವ್ಯಕ್ತಿಗಳು ವೈಜ್ಞಾನಿಕ ಆಧಾರವಿಲ್ಲದ ಚಿಕಿತ್ಸಾ ವಿಧಾನಗಳನ್ನು ಪ್ರಚಾರ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನೊಂದೆಡೆ, ಹೋಮಿಯೋಪತಿಯನ್ನು ನಂಬುವವರು ಅನುಷ್ಕಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಈ ಬೆಳವಣಿಗೆಯೊಂದಿಗೆ ಹೋಮಿಯೋಪತಿ ವಿರುದ್ಧ ಆಧುನಿಕ ವೈದ್ಯಕೀಯ ಪದ್ಧತಿ ಕುರಿತ ಚರ್ಚೆ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಮುನ್ನೆಲೆಗೆ ಬಂದಿದೆ.

ನಗುವಿನ ಸಾಮ್ರಾಟ, ರಾಷ್ಟ್ರ ಪ್ರಶಸ್ತಿ ವಿಜೇತ ಹಿರಿಯ ನಟ ಸಲೀಂ ಕುಮಾರ್ ನಿಧನ

ಕೊಚ್ಚಿ: ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕಲಾವಿದ ಸಲೀಂ ಕುಮಾರ್ ಅವರ ನಿಧನ ಚಿತ್ರರಂಗಕ್ಕೆ ಭಾರೀ ಆಘಾತ ಉಂಟುಮಾಡಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ.

ಹಾಸ್ಯ ಪಾತ್ರಗಳಿಂದ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದ ಸಲೀಂ ಕುಮಾರ್, ಬಳಿಕ ಭಾವನಾತ್ಮಕ ಹಾಗೂ ಗಂಭೀರ ಪಾತ್ರಗಳಲ್ಲೂ ಅದ್ಭುತ ಅಭಿನಯದ ಮೂಲಕ ತಮ್ಮ ಪ್ರತಿಭೆ ಸಾಬೀತುಪಡಿಸಿದ್ದರು. ಮಲಯಾಳಂ ಚಿತ್ರರಂಗದ ಅತ್ಯಂತ ಬಹುಮುಖ ನಟರಲ್ಲಿ ಒಬ್ಬರಾಗಿದ್ದ ಅವರು, ದಶಕಗಳ ಕಾಲ ಸಿನಿರಸಿಕರನ್ನು ರಂಜಿಸಿದ್ದರು.

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ನಟ ದಿಲೀಪ್ ಸೇರಿದಂತೆ ಹಲವರು ಕಣ್ಣೀರಿನ ನಮನ ಸಲ್ಲಿಸಿದ್ದಾರೆ.

ಸಲೀಂ ಕುಮಾರ್ ಅವರ ಕಲಾ ಬದುಕು ಹಲವು ಪ್ರಶಸ್ತಿಗಳಿಂದ ಅಲಂಕರಿತವಾಗಿತ್ತು. 2010ರಲ್ಲಿ ‘ಆದಾಮಿಂತೆ ಮಕನ್ ಅಬು’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಅವರು, ತಮ್ಮ ವೃತ್ತಿಜೀವನದಲ್ಲಿ ಹಾಸ್ಯ ಹಾಗೂ ಗಂಭೀರ ಪಾತ್ರಗಳ ನಡುವಿನ ಅಂತರವನ್ನು ಅಳಿಸಿ ಹಾಕಿದ ಅಪರೂಪದ ನಟರಾಗಿದ್ದರು.

ಅವರ ಅಗಲಿಕೆ ಮಲಯಾಳಂ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದ್ದು, ಅಭಿಮಾನಿಗಳು ಹಾಗೂ ಸಿನಿರಂಗದವರು ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

error: Content is protected !!