Home Blog

ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಕಾರು ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು, ಮಹಿಳೆಗೆ ಗಾಯ!

ಚಿತ್ರದುರ್ಗ: ಫುಟ್‌ಪಾತ್‌ನಲ್ಲಿ ನಿಂತಿದ್ದವರ ಮೇಲೆ ನಿಯಂತ್ರಣ ತಪ್ಪಿದ ಕಾರು ಹರಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಫುಟ್‌ಪಾತ್‌ಗೆ ನುಗ್ಗಿದ್ದು, ಅಲ್ಲಿದ್ದವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ (30) ಎಂಬ ಯುವಕ ಮೃತಪಟ್ಟಿದ್ದಾರೆ.

ಇದೇ ವೇಳೆ ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Bengaluru Traffic: ಯಶವಂತಪುರ-ಮತ್ತಿಕೆರೆ ಟ್ರಾಫಿಕ್‌ಗೆ ಸಿಗುತ್ತಾ ಮುಕ್ತಿ? ಹೊಸ ಡಬಲ್ ಡೆಕ್ಕರ್ ಯೋಜನೆ!

ಬೆಂಗಳೂರು: ನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ ಅಡಿಯಲ್ಲಿ ಮತ್ತೊಂದು ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರಾಗಿಗುಡ್ಡ-ಸಿಲ್ಕ್ ಬೋರ್ಡ್ ನಡುವೆ ನಿರ್ಮಾಣವಾಗಿರುವ ಡಬಲ್ ಡೆಕ್ಕರ್ ಮಾದರಿಯಲ್ಲೇ ಈ ಯೋಜನೆ ಜಾರಿಯಾಗಲಿದೆ.

ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಕೆ-ರೈಡ್ (K-RIDE) ಸಂಸ್ಥೆಯು ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ಸಂಪರ್ಕಿಸುವ ‘ಮಲ್ಲಿಗೆ’ (ಕಾರಿಡಾರ್-2) ಮಾರ್ಗದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಮತ್ತಿಕೆರೆಯ ಶ್ಯಾಮ್ ಪ್ರಸಾದ್ ಮುಖರ್ಜಿ ಮೇಲ್ಸೇತುವೆ ರಸ್ತೆಯಲ್ಲಿ ಸುಮಾರು 1.2 ಕಿಲೋಮೀಟರ್ ಉದ್ದದಲ್ಲಿ ₹199 ಕೋಟಿ ವೆಚ್ಚದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲಾಗುತ್ತಿದೆ.

ಈ ಯೋಜನೆಯ ವಿಶೇಷವೆಂದರೆ ಮೂರು ಹಂತದ ಸಂಚಾರ ವ್ಯವಸ್ಥೆ. ಕೆಳಭಾಗದಲ್ಲಿ ಸಾಮಾನ್ಯ ರಸ್ತೆ ಸಂಚಾರ, ಮೊದಲ ಹಂತದಲ್ಲಿ ವಾಹನಗಳ ಸಂಚಾರಕ್ಕೆ ಮೇಲ್ಸೇತುವೆ ಹಾಗೂ ಎರಡನೇ ಹಂತದಲ್ಲಿ ಉಪನಗರ ರೈಲು ಸಂಚಾರಕ್ಕೆ ಎಲಿವೇಟೆಡ್ ಕಾರಿಡಾರ್ ನಿರ್ಮಾಣವಾಗಲಿದೆ.

ಬೈಯಪ್ಪನಹಳ್ಳಿ-ಚಿಕ್ಕಬಾಣಾವರ ನಡುವಿನ 24.86 ಕಿಲೋಮೀಟರ್ ಉದ್ದದ ‘ಮಲ್ಲಿಗೆ’ ಕಾರಿಡಾರ್‌ನಲ್ಲಿ ಒಟ್ಟು 14 ನಿಲ್ದಾಣಗಳು ಇರಲಿವೆ. ಚಿಕ್ಕಬಾಣಾವರ, ಮ್ಯಾದರಹಳ್ಳಿ, ಶೆಟ್ಟಿಹಳ್ಳಿ, ಜಾಲಹಳ್ಳಿ, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಹೆಬ್ಬಾಳ, ಕನಕನಗರ, ನಾಗವಾರ, ಕಾವೇರಿ ನಗರ, ಬಾಣಸವಾಡಿ, ಸೇವಾನಗರ, ಕಸ್ತೂರಿನಗರ ಹಾಗೂ ಬೈಯಪ್ಪನಹಳ್ಳಿ ಪ್ರಮುಖ ನಿಲ್ದಾಣಗಳಾಗಿವೆ.

ಪ್ರತಿದಿನ ಬೆಂಗಳೂರಿಗೆ ಸುಮಾರು 3 ಸಾವಿರಕ್ಕೂ ಹೆಚ್ಚು ಹೊಸ ವಾಹನಗಳು ಸೇರ್ಪಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಯಶವಂತಪುರ ಹಾಗೂ ಮತ್ತಿಕೆರೆ ಭಾಗದ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಲು ಈ ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆ ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

KPSC ನೇಮಕಾತಿ ಅಕ್ರಮ ಆರೋಪ: ರಾಜ್ಯ ಸರ್ಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಅಮಾನತುಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ಪುತ್ರಿಯರ ಆಯ್ಕೆ ಸೇರಿದಂತೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಜುಲೈ 29ರೊಳಗೆ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆ ಸೂಚಿಸಿದರು. ಇದೇ ವೇಳೆ, ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಪ್ರಕರಣವನ್ನು ವರ್ಗಾಯಿಸಲು ಮುಂದಾದರೆ, ಅರ್ಜಿದಾರರು ಮತ್ತೆ ನ್ಯಾಯಾಲಯದ ಮೊರೆ ಹೋಗಲು ಅವಕಾಶವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಅರ್ಜಿದಾರರ ಪರ ವಕೀಲರು, ಜುಲೈ 3ರಂದು ಸಲ್ಲಿಸಿದ್ದ ದೂರಿನ ಆಧಾರದಲ್ಲಿ ವಿಧಾನದೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅದು ಕೇವಲ ಮೇಲ್ನೋಟದ ಕ್ರಮವಾಗಿದ್ದು, ಮೂಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆದಿಲ್ಲ ಎಂದು ವಾದಿಸಿದರು. ಸಾರ್ವಜನಿಕರ ಆಕ್ರೋಶ ತಣಿಸಲು ಸರ್ಕಾರ ಎಸ್‌ಐಟಿ ರಚಿಸುವ ಸಾಧ್ಯತೆಯೂ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಅರ್ಜಿಯಲ್ಲಿ, ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರು ನೇಮಕಾತಿ ಪ್ರಕ್ರಿಯೆಯಲ್ಲಿ ಹಿತಾಸಕ್ತಿ ಸಂಘರ್ಷ ಉಂಟುಮಾಡುವ ರೀತಿಯಲ್ಲಿ ವರ್ತಿಸಿ, ತಮ್ಮ ಇಬ್ಬರು ಪುತ್ರಿಯರ ಆಯ್ಕೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, 3ಬಿ ಮೀಸಲಾತಿ ಪಡೆಯಲು ಅಗತ್ಯವಿರುವ ಆದಾಯ ಪ್ರಮಾಣಪತ್ರದಲ್ಲಿ ವಾರ್ಷಿಕ ಆದಾಯವನ್ನು ಕೇವಲ ₹40 ಸಾವಿರ ಎಂದು ತೋರಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಉಲ್ಲೇಖಿಸಲಾಗಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ದಾವಣಗೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 87 ಪ್ರಕರಣ ಭೇದಿಸಿ ₹3.91 ಕೋಟಿ ಮೌಲ್ಯದ ವಸ್ತು ವಾರಸುದಾರರಿಗೆ ಹಸ್ತಾಂತರ

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 87 ಕಳವು ಪ್ರಕರಣಗಳನ್ನು ಭೇದಿಸಿ, ₹3.91 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

2025ರ ಡಿಸೆಂಬರ್ 20ರಿಂದ 2026ರ ಜುಲೈ 20ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು, ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ವಶಪಡಿಸಿಕೊಂಡ ವಸ್ತುಗಳಲ್ಲಿ 1.66 ಕೆಜಿ ಚಿನ್ನಾಭರಣ, 18.56 ಕೆಜಿ ಬೆಳ್ಳಿ, ₹56.55 ಲಕ್ಷ ಮೌಲ್ಯದ 377 ಮೊಬೈಲ್‌ಗಳು, ₹22.94 ಲಕ್ಷ ಮೌಲ್ಯದ 31 ವಾಹನಗಳು ಹಾಗೂ ₹4 ಲಕ್ಷ ಮೌಲ್ಯದ ಕೃಷಿ ಉಪಕರಣಗಳು ಸೇರಿವೆ.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ‘ಪ್ರಾಪರ್ಟಿ ಪರೇಡ್’ ಕಾರ್ಯಕ್ರಮದಲ್ಲಿ ಜಪ್ತಿ ಮಾಡಿದ್ದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶೇಖರ್ ಹೆಚ್.ಟಿ., ಕಳವು ಪ್ರಕರಣಗಳಲ್ಲಿ ಪತ್ತೆಯಾದ ಒಟ್ಟು ₹3,91,69,136 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟವರಿಗೆ ಮರಳಿ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸಂಚಾರ ನಿಯಮ ಉಲ್ಲಂಘಿಸಿ ವಾಹನಗಳಿಗೆ ಅಳವಡಿಸಿದ್ದ ಐಎಸ್‌ಐ ಗುರುತು ಇಲ್ಲದ ಸುಮಾರು 2 ಸಾವಿರಕ್ಕೂ ಹೆಚ್ಚು ಹೆಲ್ಮೆಟ್‌ಗಳು, ಕರ್ಕಶ ಶಬ್ದ ಮಾಡುವ 85 ಸೈಲೆನ್ಸರ್‌ಗಳು, 25 ಹಾರ್ನ್‌ಗಳು ಹಾಗೂ 10 ಸ್ಪೀಕರ್ ಡಕ್‌ಗಳನ್ನು ಪೊಲೀಸರು ಬುಲ್ಡೋಜರ್ ಮೂಲಕ ನಾಶಪಡಿಸಿದರು.

ಜಿಲ್ಲಾ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಎಸ್‌ಪಿ ಶೇಖರ್ ಹೆಚ್.ಟಿ., ಪ್ರಕರಣಗಳ ಪತ್ತೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ತೆರಿಗೆ ವಸೂಲಿಗೆ ಚುರುಕು; ನಿರ್ಲಕ್ಷ್ಯಕ್ಕೆ ಕ್ರಮದ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ನರಗುಂದ: ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ತೆರಿಗೆ ವಸೂಲಾತಿ ಹೆಚ್ಚಳ ಅತ್ಯಗತ್ಯ. ಕಡಿಮೆ ತೆರಿಗೆ ಸಂಗ್ರಹಿಸುವ ಕರವಸೂಲಿಗಾರರ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಸೂಲಾತಿಯಲ್ಲಿ ಹಿನ್ನಡೆ ಮುಂದುವರಿದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಎಚ್ಚರಿಕೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಕರವಸೂಲಿಗಾರರು ಹಾಗೂ ವಾಟರ್‌ಮನ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತೆರಿಗೆ ಬಾಕಿದಾರರ ಪಟ್ಟಿಯನ್ನು ಸಿದ್ಧಪಡಿಸಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಮೂಲಕ ಮುಂಚಿತವಾಗಿ ಮಾಹಿತಿ ನೀಡಿ ವಸೂಲಾತಿ ಕಾರ್ಯ ಚುರುಕುಗೊಳಿಸಬೇಕು. ಸಾರ್ವಜನಿಕರು ತಮ್ಮ ದೈನಂದಿನ ಕೆಲಸಗಳಿಗೆ ತೆರಳುವ ಮುನ್ನವೇ ಮನೆಗಳಿಗೆ ಭೇಟಿ ನೀಡಿ ತೆರಿಗೆ ವಸೂಲಿ ಮಾಡುವಂತೆ ಸೂಚಿಸಿದರು.

ವಸೂಲಾದ ತೆರಿಗೆ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಗ್ರಾಮ ಪಂಚಾಯಿತಿಗಳು ಉತ್ತಮ ಮೂಲಸೌಕರ್ಯ ಹಾಗೂ ಸೇವೆಗಳನ್ನು ಒದಗಿಸಿದಾಗ ಜನರು ಸ್ವಯಂಪ್ರೇರಿತವಾಗಿ ತೆರಿಗೆ ಪಾವತಿಸುತ್ತಾರೆ. ಆದರೆ ಕಡಿಮೆ ತೆರಿಗೆ ವಸೂಲಾತಿಗೆ ಕರವಸೂಲಿಗಾರರನ್ನೇ ಹೊಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಡಿಮೆ ತೆರಿಗೆ ವಸೂಲಾತಿ ಮಾಡಿರುವ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರನ್ನು ಪ್ರಶ್ನಿಸಿದ ಅವರು, ವಸೂಲಾತಿ ಕುಂಠಿತವಾಗಲು ಕಾರಣವೇನು, ಈ ಕುರಿತು ಪಿಡಿಒಗಳ ಗಮನಕ್ಕೆ ತಂದಿದ್ದೀರಾ ಎಂದು ವಿಚಾರಿಸಿದರು. ಮುಂದೆಯೂ ಇದೇ ಪರಿಸ್ಥಿತಿ ಮುಂದುವರಿದರೆ ಶಿಸ್ತುಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.

ವಾಟರ್‌ಮನ್‌ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಮೂಲಗಳ ಸಂರಕ್ಷಣೆ ಹಾಗೂ ನೀರಿನ ಮಿತ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಸಂಬಂಧಿತ ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಕಚೇರಿಯ ಗಮನಕ್ಕೆ ತಂದು ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಉತ್ತಮ ಸಾಧಕರಿಗೆ ಗೌರವ

ಸಭೆಯಲ್ಲಿ ಜೂನ್ ತಿಂಗಳಲ್ಲಿ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕೊಣ್ಣೂರು, ಹುಣಶಿಕಟ್ಟಿ, ಶಿರೋಳ ಹಾಗೂ ವಾಸನ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರನ್ನು ತಾಲೂಕು ಪಂಚಾಯಿತಿ ವತಿಯಿಂದ ‘ಜನಾಭಿಪ್ರಾಯ ಚಪ್ಪಾಳೆ’ ಕಾರ್ಯಕ್ರಮದಡಿ ಶಾಲು ಹೊದಿಸಿ, ಮಾಲೆ ಹಾಕಿ ಸಭೆಯಲ್ಲಿ ಉಪಸ್ಥಿತರಿದ್ದವರಿಂದ ಚಪ್ಪಾಳೆ ತಟ್ಟಿಸುವ ಮೂಲಕ ಸನ್ಮಾನಿಸಲಾಯಿತು.

ಮುಂದಿನ ತಿಂಗಳುಗಳಲ್ಲಿಯೂ ಉತ್ತಮ ತೆರಿಗೆ ವಸೂಲಾತಿ ಸಾಧಿಸುವ ಕರವಸೂಲಿಗಾರರನ್ನು ಇದೇ ರೀತಿಯಲ್ಲಿ ಗೌರವಿಸಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಮಹಾಂತೇಶ್ ನಿಟ್ಟಾಲಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಕೃಷ್ಣಮ್ಮ ಹಾದಿಮನಿ ಹಾಗೂ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರು ಮತ್ತು ವಾಟರ್‌ಮನ್‌ಗಳು ಉಪಸ್ಥಿತರಿದ್ದರು.

“ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ತೆರಿಗೆ ವಸೂಲಾತಿ ಹೆಚ್ಚಳ ಅತ್ಯಗತ್ಯ. ಕಡಿಮೆ ತೆರಿಗೆ ಸಂಗ್ರಹಿಸುವ ಕರವಸೂಲಿಗಾರರ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಸೂಲಾತಿಯಲ್ಲಿ ಹಿನ್ನಡೆ ಮುಂದುವರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ.”

– ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ನರಗುಂದ

ಜುಲೈ 23ರಂದು ಡಾ. ಬಸವರಾಜ್ ಬಳ್ಳಾರಿ ಜನ್ಮದಿನ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಅಮ್ಮ ಫೌಂಡೇಶನ್‌ನ ಮಾರ್ಗದರ್ಶಕರೂ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಅಧ್ಯಕ್ಷರೂ ಆಗಿರುವ ಡಾ. ಬಸವರಾಜ್ ಬಳ್ಳಾರಿ ಅವರ 49ನೇ ಜನ್ಮದಿನದ ಅಂಗವಾಗಿ ಅಮ್ಮ ಫೌಂಡೇಶನ್ ವತಿಯಿಂದ ಜುಲೈ 23ರಂದು ಗದಗ ಜಿಲ್ಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ ಸುಮಾರು 1,000 ಬಡ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸಲಾಗುತ್ತದೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಗಳ ಕಿಟ್ ವಿತರಣೆ ಹಾಗೂ ‘ಹಸಿರೇ ಉಸಿರು’ ಧ್ಯೇಯದಡಿ 500 ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಅದೇ ದಿನ ಗದಗದ ನೌಕರರ ಭವನದಲ್ಲಿ ರಕ್ತದಾನ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ಅಮ್ಮ ಫೌಂಡೇಶನ್ ಅಧ್ಯಕ್ಷ ಹಾಗೂ ವಕೀಲ ಮೈಲಾರಪ್ಪ ಡಿ.ಎಚ್. ಮಾತನಾಡಿ, ಅಮ್ಮ ಫೌಂಡೇಶನ್ ಸಮಾಜಮುಖಿ ಕಾರ್ಯಗಳಿಗೆ ನಿರಂತರ ಆದ್ಯತೆ ನೀಡುತ್ತಿದ್ದು, ಈ ಬಾರಿ ಸರ್ಕಾರಿ ಶಾಲೆಗಳ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗೆ ವಿಶೇಷ ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳ ಆರ್ಥಿಕ ಹೊರೆ ಕಡಿಮೆ ಮಾಡಿ, ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಡಾ. ಬಸವರಾಜ್ ಬಳ್ಳಾರಿ ಅವರ ಜನ್ಮದಿನವನ್ನು ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಮುಂದೆಯೂ ಸಮಾಜಮುಖಿ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸಲು ಮಾರ್ಗದರ್ಶಕರ ಮಾರ್ಗದರ್ಶನ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಅಮ್ಮ ಫೌಂಡೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ.

ಶಿಷ್ಟಾಚಾರ ಪಾಲನೆಯಲ್ಲಿ ನಿರ್ಲಕ್ಷ್ಯ ಸಹಿಸುವುದಿಲ್ಲ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: “ರಾಜ್ಯಪಾಲರ ಪ್ರವಾಸದ ವೇಳೆ ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ನಡೆಯಬಾರದು. ಅಧಿಕಾರಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಅವ್ಯವಸ್ಥೆ ಅಥವಾ ಲೋಪ ಕಂಡುಬಂದರೆ ಸಹಿಸಲಾಗುವುದಿಲ್ಲ” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜುಲೈ 23ರಂದು ನಡೆಯಲಿರುವ ಕರ್ನಾಟಕ ರಾಜ್ಯಪಾಲರ ಗಜೇಂದ್ರಗಡ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಹಾಗೂ ಶಿಷ್ಟಾಚಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯಪಾಲರ ಪ್ರವಾಸಕ್ಕೆ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳು ಶಿಷ್ಟಾಚಾರದಂತೆ ಹಾಗೂ ಯಾವುದೇ ಲೋಪವಿಲ್ಲದಂತೆ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ರಾಜ್ಯಪಾಲರು ಸಂಚರಿಸುವ ಮಾರ್ಗದ ರಸ್ತೆಗಳು ಸಂಪೂರ್ಣ ಸುಸ್ಥಿತಿಯಲ್ಲಿರುವಂತೆ ಸಂಬಂಧಿಸಿದ ಇಲಾಖೆಗಳು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ರಸ್ತೆ ಮಾರ್ಗದಲ್ಲಿ ಯಾವುದೇ ಅಡಚಣೆ ಅಥವಾ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಗಜೇಂದ್ರಗಡ ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇರುವುದರಿಂದ ಜನಸಂದಣಿ ನಿಯಂತ್ರಣ, ವಾಹನ ನಿಲುಗಡೆ, ಕುಡಿಯುವ ನೀರು, ಆರೋಗ್ಯ ಸೇವೆ, ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ತಿಳಿಸಿದರು. ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ವೇದಿಕೆ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳು ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು. ಬ್ಯಾಕಪ್ ವ್ಯವಸ್ಥೆಯನ್ನೂ ಸಿದ್ಧವಾಗಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅದೇ ರೀತಿ, ರಾಜ್ಯಪಾಲರ ಭದ್ರತೆ, ಶಿಷ್ಟಾಚಾರ, ವೈದ್ಯಕೀಯ ನೆರವು, ಸ್ವಚ್ಛತೆ, ಕುಡಿಯುವ ನೀರು, ಅಗ್ನಿಶಾಮಕ, ಸಂಚಾರ ನಿಯಂತ್ರಣ ಸೇರಿದಂತೆ ಪ್ರತಿಯೊಂದು ವಿಭಾಗವೂ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಜ್ಯಪಾಲರ ಪ್ರವಾಸದ ವೇಳಾಪಟ್ಟಿಯ ವಿವರಗಳನ್ನೂ ನೀಡಲಾಯಿತು. ಜುಲೈ 23ರಂದು ಬೆಳಿಗ್ಗೆ 9.15ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ರಾಜ್ಯಪಾಲರು, ರಸ್ತೆ ಮಾರ್ಗವಾಗಿ ಬೆಳಿಗ್ಗೆ 10.50ಕ್ಕೆ ಗಜೇಂದ್ರಗಡ ಪ್ರವಾಸಿ ಮಂದಿರಕ್ಕೆ ತಲುಪಲಿದ್ದಾರೆ. ಬಳಿಕ ಬೆಳಿಗ್ಗೆ 11.15ಕ್ಕೆ ಟಿಟಿಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಭಗವಾನ್ ಮಹಾವೀರ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿಗಳಾದ ಮಹಾಂತೇಶ್ ಸಜ್ಜನರ ಹಾಗೂ ಮುರ್ತುಜಾ ಖಾದ್ರಿ, ಸಹಾಯಕ ಆಯುಕ್ತ ಗಂಗಪ್ಪ, ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಿ ರಾಜ್ಯಪಾಲರ ಪ್ರವಾಸವನ್ನು ಯಶಸ್ವಿಗೊಳಿಸಬೇಕು.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಕರ್ನಾಟಕದಲ್ಲಿ ಮಳೆ ಕೊರತೆ: 25 ಜಿಲ್ಲೆಗಳಲ್ಲಿ ಬರದ ಆತಂಕ, ರೈತರಿಗೆ ಸಂಕಷ್ಟ!

ಬೆಂಗಳೂರು: ಎಲ್‌ನಿನೋ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಮಂಡ್ಯ ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಬರದ ಆತಂಕ ಎದುರಾಗಿದೆ. ರಾಜ್ಯದ ಕೇವಲ ಐದು ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಯಷ್ಟು ಮಳೆಯಾಗಿದೆ ಎನ್ನಲಾಗಿದೆ. ಬೆಳಗಾವಿಯಲ್ಲೂ ಕಡಿಮೆ ಮಳೆಯ ಪರಿಣಾಮ ರೈತರು ಕೃಷಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಅಲ್ಪ ಪ್ರಮಾಣದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ತಾತ್ಕಾಲಿಕವಾಗಿ ಕಡಿಮೆಯಾಗಿದ್ದರೂ, ಕೃಷಿಗೆ ಅಗತ್ಯವಾದ ನೀರಿನ ಕೊರತೆ ಮುಂದುವರಿದಿದೆ. ಜಲಾಶಯಗಳ ನೀರನ್ನು ಕೃಷಿಗೆ ಬಳಸಲು ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಇದರ ನಡುವೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಸುರಿದ ಮಳೆಯಿಂದ ಜಲಾಶಯದ ನೀರಿನ ಮಟ್ಟದಲ್ಲಿ 17 ಅಡಿ ಏರಿಕೆಯಾಗಿದೆ.

2,859 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನೂ 8 ಅಡಿ ಬಾಕಿ ಉಳಿದಿದೆ. ಸದ್ಯ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಶೀಘ್ರದಲ್ಲೇ ಜಲಾಶಯ ತುಂಬುವ ಸಾಧ್ಯತೆ ಇದೆ.

ದೇವಸ್ಥಾನಕ್ಕಿಂತ ಶಾಲೆ ಕಟ್ಟಿದರೆ ಸಮಾಜ ಬೆಳೆಯುತ್ತದೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: “ಒಂದು ದೊಡ್ಡ ದೇವಸ್ಥಾನ ಕಟ್ಟುವುದಕ್ಕಿಂತ 10 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ನಿರ್ಮಿಸಿ. ಮಕ್ಕಳಿಗೆ ನೀಡುವ ಉತ್ತಮ ಶಿಕ್ಷಣವೇ ಸಮಾಜಕ್ಕೆ ನೀಡಬಹುದಾದ ಅತ್ಯುತ್ತಮ ಕೊಡುಗೆ” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಉದ್ಯಮಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಮನವಿ ಮಾಡಿದರು.

ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಿ, ಖಾಸಗಿ ಶಾಲೆಗಳಿಗೆ ಸಮಾನವಾಗಿ ರೂಪಿಸುವ ಉದ್ದೇಶದಿಂದ ಜಿಲ್ಲೆಯ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (KPS) ಅಭಿವೃದ್ಧಿಪಡಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಅವರು ಕರೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಿಎಸ್‌ಆರ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವುದು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ 20 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ ಸುಮಾರು 700ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸಂಯೋಜಿಸಿ 37 ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಖಾಸಗಿ ಶಾಲೆಗಳಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಸಾವಿರಾರು ರೂಪಾಯಿ ವೆಚ್ಚ ಮಾಡಲು ಸಾಧ್ಯವಾಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಗುಣಮಟ್ಟದ ಶಿಕ್ಷಣ ಉಚಿತವಾಗಿ ದೊರೆಯುವಂತೆ ಮಾಡುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಪೊರೇಟ್ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯನ್ನು ಕೇವಲ ಸಣ್ಣಪುಟ್ಟ ಕಾಮಗಾರಿಗಳಿಗೆ ಸೀಮಿತಗೊಳಿಸದೆ, ಶಾಲಾ ಕಟ್ಟಡ, ಸ್ಮಾರ್ಟ್ ಕ್ಲಾಸ್‌ರೂಮ್‌, ಕಂಪ್ಯೂಟರ್ ಲ್ಯಾಬ್‌, ಗ್ರಂಥಾಲಯ, ಬಸ್ ಸೌಲಭ್ಯ, ಶೌಚಾಲಯ ನಿರ್ಮಾಣ ಹಾಗೂ ಶಿಕ್ಷಕರ ವೇತನ ಸೇರಿದಂತೆ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿನಿಯೋಗಿಸಬೇಕು ಎಂದು ಮನವಿ ಮಾಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಜಿಲ್ಲೆಯ ಕೆಪಿಎಸ್ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಶೇ. 80ರಿಂದ ಶೇ. 90ಕ್ಕೂ ಅಧಿಕ ದಾಖಲಾಗುತ್ತಿದ್ದು, ಇನ್ನೂ 37 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯದ ವಿವರಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಪ್ರತಿಯೊಂದು ಶಾಲೆಗೆ ಅಗತ್ಯವಿರುವ ಕೊಠಡಿಗಳು, ಸ್ಮಾರ್ಟ್ ಕ್ಲಾಸ್‌ರೂಮ್‌, ಪ್ರಯೋಗಾಲಯ, ಸಾರಿಗೆ ಸೇರಿದಂತೆ ವಿವಿಧ ಸೌಲಭ್ಯಗಳ ಪಟ್ಟಿಯನ್ನು ಸಿದ್ಧಪಡಿಸಿ, ಕಂಪನಿಗಳಿಗೆ ಕಳುಹಿಸಿ ಸಿಎಸ್‌ಆರ್ ನೆರವು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಾ. ಶರಣು ಗೊಗೇರಿ, ವಿವಿಧ ಉದ್ಯಮಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

“ಒಂದು ದೊಡ್ಡ ದೇವಸ್ಥಾನ ಕಟ್ಟುವುದಕ್ಕಿಂತ 10 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು. ಮಕ್ಕಳಿಗೆ ನೀಡುವ ಉತ್ತಮ ಶಿಕ್ಷಣವೇ ಸಮಾಜಕ್ಕೆ ನೀಡಬಹುದಾದ ಅತ್ಯುತ್ತಮ ಕೊಡುಗೆ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಹೊಲಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದ ಡಿಸಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಬಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಂಗಳವಾರ ಹಗರಿಬೊಮ್ಮನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು.

ಹೊಸಪೇಟೆಯಿಂದ ಬೆಳಿಗ್ಗೆ ಪ್ರವಾಸ ಆರಂಭಿಸಿದ ಜಿಲ್ಲಾಧಿಕಾರಿಗಳು ನಂದಿಬಂಡಿ, ಹಂಪಾಪಟ್ಟಣ, ರಾರಾಳ ತಾಂಡಾ, ಆನೆಕಲ್ಲು ಹಾಗೂ ಮಾದೂರು ಗ್ರಾಮಗಳ ವ್ಯಾಪ್ತಿಯ ಮೆಕ್ಕೆಜೋಳ, ಹೈಬ್ರಿಡ್ ಜೋಳ, ಶೇಂಗಾ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿದರು. ಮಳೆ ಅಭಾವದಿಂದ ಬೆಳೆಗಳು ಒಣಗುತ್ತಿರುವುದು ಹಾಗೂ ಕೆಲ ರೈತರು ಇನ್ನೂ ಬಿತ್ತನೆ ಮಾಡದೆ ಬೀಜ ಮತ್ತು ಗೊಬ್ಬರವನ್ನು ಮನೆಯಲ್ಲೇ ಸಂಗ್ರಹಿಸಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬೆಳೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ಉದ್ದೇಶದಿಂದ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ವೇಳೆ ರೈತರು ತಮ್ಮ ಅಳಲು ತೋಡಿಕೊಂಡರು. ಸಾಲ ಮಾಡಿ ಬೀಜ ಹಾಗೂ ಗೊಬ್ಬರ ಖರೀದಿಸಿದ್ದರೂ ಮಳೆ ಇಲ್ಲದೆ ಬೆಳೆಗಳು ಬಾಡುತ್ತಿವೆ. ಈ ಬಾರಿ ಕೈಗೆ ಬೆಳೆ ಸಿಗುವ ನಿರೀಕ್ಷೆಯೇ ಇಲ್ಲದಂತಾಗಿದೆ. ಸರ್ಕಾರ ತಕ್ಷಣ ಪರಿಹಾರ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ರಮ್ ಪಾಷಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಉಪ ಕೃಷಿ ನಿರ್ದೇಶಕ ವಾಮದೇವ್, ತಹಶೀಲ್ದಾರ್ ಆರ್. ಕವಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪಿ. ವಿಶ್ವನಾಥ್, ಕೃಷಿ ಅಧಿಕಾರಿ ಎಸ್.ವಿ. ಪಾಟೀಲ್, ಅಧಿಕಾರಿಗಳಾದ ಭೋಜ ನಾಯ್ಕ್, ಶಶಿಕುಮಾರ, ರೈತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಕನ್ನಿಹಳ್ಳಿ ಗ್ರಾಮದಲ್ಲಿ ಈರುಳ್ಳಿ ಬೆಳೆ ಹಾನಿಗೊಳಗಾದ ಜಮೀನುಗಳನ್ನು ಪರಿಶೀಲಿಸಿದ್ದೇನೆ. ಬೆಳೆ ಹಾನಿಯ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.”

– ಕವಿತಾ ಮನ್ನಿಕೇರಿ, ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲೆ