Home Blog

Bangalore Power Cut: ಆನೇಕಲ್ ಭಾಗದ ಜನರಿಗೆ ಬೆಸ್ಕಾಂನಿಂದ ಮಹತ್ವದ ಮಾಹಿತಿ; ನಾಳೆ ಇರಲ್ಲ ಪವರ್!

ಆನೇಕಲ್: ಬೆಸ್ಕಾಂ ಚಂದಾಪುರ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಮಂದೂರು ಹಾಗೂ ಆನೇಕಲ್ ವಿದ್ಯುತ್ ಉಪ-ಕೇಂದ್ರಗಳಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಜುಲೈ 22ರಂದು ಬುಧವಾರ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

ಸಮಂದೂರು ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಗೆ ಬರುವ ಸಮಂದೂರು, ರಾಜಾಪುರಹಳ್ಳಿ, ಗುಡ್ಡನಹಳ್ಳಿ, ಅರವಂಟಿಗೇಪುರ, ಪಿ. ಗೊಲ್ಲಹಳ್ಳಿ, ತೆಲಗರಹಳ್ಳಿ, ವಾಣಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ.

ಇನ್ನು ಆನೇಕಲ್ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯ ಆನೇಕಲ್ ಪಟ್ಟಣ, ಕಾವಲುಹೊಸಹಳ್ಳಿ, ಗೋರೇನಹಳ್ಳಿ, ಹಾಳೇನಹಳ್ಳಿ, ಹೊಂಪಲಾಘಟ್ಟ, ಚೂಡೇನಹಳ್ಳಿ, ಹೊನ್ನಕಳಶಾಪುರ, ಕರ್ಮೂರು, ಬ್ಯಾಗದದೇನಹಳ್ಳಿ, ವಿ.ಬಿ.ಎಚ್.ಸಿ ಅಪಾರ್ಟ್‌ಮೆಂಟ್, ಕಾಡ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಕಡಿತವಾಗಲಿದೆ.

ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಕೆಲಸಗಳನ್ನು ಮುಂಚಿತವಾಗಿ ಪೂರ್ಣಗೊಳಿಸಿಕೊಳ್ಳಬೇಕು ಹಾಗೂ ಬೆಸ್ಕಾಂಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಯಚೂರಿನಲ್ಲಿ ಬೀದಿ ನಾಯಿಗಳ ಅಟ್ಟಹಾಸ: 4 ವರ್ಷದ ಬಾಲಕನಿಗೆ ನಾಯಿ ಕಡಿತ!

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.

ಮಲಿಯಾಬಾದ್ ಗ್ರಾಮದ ವೇಣುಗೋಪಾಲ್ ಎಂಬ ಬಾಲಕ ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದಾನೆ.

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಬಂದ ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿವೆ. ದಾಳಿಯಲ್ಲಿ ಬಾಲಕನ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

ತಕ್ಷಣ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೀದಿ ನಾಯಿಗಳ ಹಾವಳಿಯಿಂದ ಮಕ್ಕಳನ್ನು ಹೊರಗೆ ಬಿಡಲು ಪೋಷಕರು ಭಯಪಡುತ್ತಿದ್ದಾರೆ.

ಈ ಘಟನೆ ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Sikkim Tunnel Collapse: ನಿರ್ಮಾಣ ಹಂತದ ಸುರಂಗ ಕುಸಿತ, 7 ಕಾರ್ಮಿಕರು ಸಾವು!

0

ಗ್ಯಾಂಗ್ಟಾಕ್: ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಭೀಕರ ದುರಂತ ಸಂಭವಿಸಿದೆ.

ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದಲ್ಲಿ ಭೂಕುಸಿತ ಹಾಗೂ ಮೀಥೇನ್ ಅನಿಲ ಸ್ಫೋಟ ಸಂಭವಿಸಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟಿದ್ದಾರೆ.

ಸಮರ್ಡುಂಗ್ (ಜೋಲುಂಗೆ) ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರೀಯ ಜಲವಿದ್ಯುತ್ ನಿಗಮದ ತೀಸ್ತಾ ಸ್ಟೇಜ್-6 ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗ ಇದಾಗಿದೆ.

ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಇದುವರೆಗೆ 7 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತದೇಹಗಳನ್ನು ಸಿಂಗ್ತಾಮ್, ಗ್ಯಾಂಗ್ಟಾಕ್ ಹಾಗೂ ನಾಮ್ಚಿ ಜಿಲ್ಲಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಸುರಂಗದೊಳಗೆ ಇನ್ನೂ 18ರಿಂದ 27 ಕಾರ್ಮಿಕರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಸುರಂಗದೊಳಗೆ ಸುಮಾರು 1.5 ಕಿಲೋಮೀಟರ್ ಆಳದಲ್ಲಿ ನೈಸರ್ಗಿಕವಾಗಿ ಸಂಗ್ರಹವಾಗಿದ್ದ ಮೀಥೇನ್ ಅನಿಲವನ್ನು ಹೊರಹಾಕುವ ವೇಳೆ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಇದರಿಂದ ಭೂಕುಸಿತ ಉಂಟಾಗಿ ಸುರಂಗದ ಪ್ರವೇಶ ದ್ವಾರ ಮುಚ್ಚಿಕೊಂಡಿದೆ.

ರಕ್ಷಣಾ ಕಾರ್ಯಾಚರಣೆ ವೇಳೆ ಸುರಂಗದೊಳಗೆ ಆಮ್ಲಜನಕದ ಕೊರತೆ, ದಟ್ಟ ಹೊಗೆ ಹಾಗೂ ವಿಷಕಾರಿ ಅನಿಲದ ಪ್ರಮಾಣ ಹೆಚ್ಚಿರುವುದು ಸವಾಲಾಗಿ ಪರಿಣಮಿಸಿದೆ. ರಕ್ಷಣಾ ಸಿಬ್ಬಂದಿ ಗ್ಯಾಸ್ ಮಾಸ್ಕ್ ಹಾಗೂ ವಿಶೇಷ ಉಪಕರಣಗಳ ಸಹಾಯದಿಂದ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಸುರಂಗದೊಳಗೆ ಅನಿಲ ಸೋರಿಕೆಯಾದ ಬಳಿಕ ಈ ಘಟನೆ ವರದಿಯಾಗಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Mysuru Crime: ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್!

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ಬಂಧಿತ ಯುವಕನನ್ನು 23 ವರ್ಷದ ಸುರೇಶ್ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಬಾಲಕಿ ಕೂಗಾಡಿದ್ದು, ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಯುವಕನನ್ನು ಹಿಡಿದು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಘಟನೆ ಕುರಿತು ಹುಲ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Bengaluru Metro Delay: ಪಿಂಕ್ ಲೈನ್ ಮೆಟ್ರೋ ಕಾಮಗಾರಿ ವಿಳಂಬ, ಆಗಸ್ಟ್ 15 ಉದ್ಘಾಟನೆ ಅನುಮಾನ?

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ನೀಡಬೇಕಿದ್ದ ನಮ್ಮ ಮೆಟ್ರೋ ಯೋಜನೆಗಳ ಕಾಮಗಾರಿ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ಬನ್ನೇರುಘಟ್ಟ ರಸ್ತೆಯನ್ನು ಸಂಪರ್ಕಿಸುವ ಮೆಟ್ರೋ ಪಿಂಕ್ ಲೈನ್ ಮೊದಲ ಹಂತದ ಸಂಚಾರವನ್ನು ಆಗಸ್ಟ್ 15ರಂದು ಆರಂಭಿಸುವ ಗುರಿಯನ್ನು ಬಿಎಂಆರ್‌ಸಿಎಲ್ ಹೊಂದಿತ್ತು. ಆದರೆ ಪ್ರಸ್ತುತ ಕಾಮಗಾರಿಯ ವೇಗವನ್ನು ಗಮನಿಸಿದರೆ ಈ ಗಡುವು ತಲುಪುವುದು ಅನುಮಾನವಾಗಿದೆ.

ಪಿಂಕ್ ಲೈನ್ ಯೋಜನೆಯಡಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿಲೋಮೀಟರ್ ಮೇಲ್ಸೇತುವೆ ಮಾರ್ಗವನ್ನು ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿತ್ತು.

ಆದರೆ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದರೂ, ರೈಲು ಸೆಟ್‌ಗಳ ಪೂರೈಕೆ, ಸಿಗ್ನಲಿಂಗ್ ವ್ಯವಸ್ಥೆ ಹಾಗೂ ಸುರಕ್ಷತಾ ಪರೀಕ್ಷೆಗಳು ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಯೋಜನೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.

ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಪ್ರಮಾಣದ ಕಾರ್ಮಿಕರ ಕೊರತೆ ಹಾಗೂ ಸಣ್ಣಪುಟ್ಟ ನಾಗರಿಕ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವುದು ವಿಳಂಬಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಬನ್ನೇರುಘಟ್ಟ ರಸ್ತೆಯ ಭಾರಿ ಸಂಚಾರ ದಟ್ಟಣೆಯಿಂದ ಮುಕ್ತಿ ಸಿಗಲಿದೆ ಎಂದು ಕಾಯುತ್ತಿದ್ದ ಸಾವಿರಾರು ಪ್ರಯಾಣಿಕರಿಗೆ ಮತ್ತಷ್ಟು ಕಾಯುವ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.

ಇನ್ನು ಪಿಂಕ್ ಲೈನ್‌ನ ಡೈರಿ ಸರ್ಕಲ್‌ನಿಂದ ನಾಗವಾರದವರೆಗಿನ 13.75 ಕಿಲೋಮೀಟರ್ ಭೂಗತ ಮಾರ್ಗದ ಕಾಮಗಾರಿಯೂ ನಿಧಾನಗತಿಯಲ್ಲಿ ಸಾಗುತ್ತಿದೆ. ಮೇಲ್ಸೇತುವೆ ಮಾರ್ಗದ ಸಂಚಾರ ಆರಂಭ 2026ರ ಕೊನೆಯ ಹಂತಕ್ಕೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.

ಅದೇ ರೀತಿ ಪಿಂಕ್ ಲೈನ್ ಭೂಗತ ಮಾರ್ಗವು 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸಿಲ್ಕ್ ಬೋರ್ಡ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ಬ್ಲೂ ಲೈನ್ ಕಾಮಗಾರಿಯೂ ವಿಳಂಬವಾಗುತ್ತಿದ್ದು, 2027ರ ಮಧ್ಯಭಾಗದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

0

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಘಟನೆಗೆ ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೃತ ಬಾಲಕಿಯನ್ನು ಪೆರೇಸಂದ್ರ ಗ್ರಾಮದ ಚಂದ್ರಿಕಾ ಮತ್ತು ನವೀನ್ ದಂಪತಿಯ ಪುತ್ರಿ ಶಶಿಕಲಾ (8) ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ ಶಶಿಕಲಾ ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಳು. ಕೂಡಲೇ ಆಕೆಯನ್ನು ಸಮೀಪದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಇರಲಿಲ್ಲ. ಅಗತ್ಯ ವೈದ್ಯಕೀಯ ಸೌಲಭ್ಯಗಳೂ ಲಭ್ಯವಿರಲಿಲ್ಲ. ಕರ್ತವ್ಯದಲ್ಲಿದ್ದ ನರ್ಸ್ ಚಿಕಿತ್ಸೆ ನೀಡಿದರೂ ಬಾಲಕಿಯನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಯ ನಂತರ ಗ್ರಾಮಸ್ಥರು ಆಸ್ಪತ್ರೆ ಎದುರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ವೈದ್ಯರನ್ನು ನೇಮಿಸಬೇಕು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಮಾಹಿತಿ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ಬಾಲಕಿಯನ್ನು ಆಸ್ಪತ್ರೆಗೆ ಕರೆತಂದಾಗಲೇ ನಾಡಿ ಮಿಡಿತ ಇರಲಿಲ್ಲ. ಉಸಿರಾಟವೂ ತುಂಬಾ ಕಡಿಮೆಯಾಗಿತ್ತು. ಕರ್ತವ್ಯದಲ್ಲಿದ್ದ ಸಿಬ್ಬಂದಿ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲ್ದರ್ಜೆಯ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ. ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದೆ,” ಎಂದು ಹೇಳಿದರು.

ಕುಟುಂಬಸ್ಥರು ಆಸ್ಪತ್ರೆಯ ನಿರ್ಲಕ್ಷ್ಯವೇ ಬಾಲಕಿಯ ಸಾವಿಗೆ ಕಾರಣ ಎಂದು ಆರೋಪಿಸುತ್ತಿದ್ದರೆ, ಕರ್ತವ್ಯದಲ್ಲಿದ್ದ ಸಿಬ್ಬಂದಿ ನಿಯಮದಂತೆ ಚಿಕಿತ್ಸೆ ನೀಡಿದ್ದಾರೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಪೆರೇಸಂದ್ರ ಗ್ರಾಮವು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ತವರು ಗ್ರಾಮವಾಗಿದೆ. ಅಂತಹ ಗ್ರಾಮದಲ್ಲಿಯೇ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ಉಚಿತ ಭಾಗ್ಯಗಳು ರಾಜ್ಯಕ್ಕೆ ಹೊರೆಯಾಗುತ್ತಿವೆ: ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಕಾಶೀ ಜಂಗಮವಾಡಿ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, “ಉಚಿತ ಗ್ಯಾರಂಟಿ ಭಾಗ್ಯಗಳನ್ನು ನಿಲ್ಲಿಸಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಹಾಗೂ ಯುವಕರಿಗೆ ಉದ್ಯೋಗ ನೀಡಿ. ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು” ಎಂದು ಅಭಿಪ್ರಾಯಪಟ್ಟರು.

ನಗರದ ಮಾಂಗಲ್ಯ ಮಂದಿರದಲ್ಲಿ ಗದಗ-ಬೆಟಗೇರಿ ಪಂಚಾಚಾರ್ಯ ಸೇವಾ ಸಂಘ ಆಯೋಜಿಸಿದ್ದ ಆಷಾಢ ಮಾಸದ ‘ಶ್ರೀ ಸಿದ್ಧಾಂತ ಶಿಖಾಮಣಿ’ ಆಧ್ಯಾತ್ಮಿಕ ಪ್ರವಚನ ಮಾಲಿಕೆಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಉಚಿತ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೆ ಭಾರೀ ಒತ್ತಡ ಉಂಟಾಗುತ್ತಿದೆ ಎಂದು ಹೇಳಿದ ಅವರು, “ಇಂದು ಕರ್ನಾಟಕದ ಮೇಲೆ ಲಕ್ಷಾಂತರ ಕೋಟಿ ರೂಪಾಯಿ ಸಾಲವಿದೆ. ಈ ಸಾಲ ತೀರಿಸಲು ತೆರಿಗೆ ಹಾಗೂ ವಿವಿಧ ಶುಲ್ಕಗಳನ್ನು ಹೆಚ್ಚಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರ ಹೊರೆ ಅಂತಿಮವಾಗಿ ಜನರ ಮೇಲೇ ಬೀಳುತ್ತದೆ” ಎಂದು ಎಚ್ಚರಿಸಿದರು.

“ರೈತರಿಗೆ ಉಚಿತ ಯೋಜನೆಗಳ ಅಗತ್ಯವಿಲ್ಲ. ಅವರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಹಾಗೂ ಕೃಷಿ ಅಭಿವೃದ್ಧಿಗೆ ಅಗತ್ಯ ನೆರವು ನೀಡಿದರೆ ಸಾಕು. ಗ್ಯಾರಂಟಿ ಹಣದಿಂದ ಮನೆ ನಡೆಯುವುದಿಲ್ಲ. ಸರ್ಕಾರ ಉಚಿತ ಯೋಜನೆಗಳಿಗಿಂತ ಉದ್ಯೋಗ ಸೃಷ್ಟಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಹೇಳಿದರು.

ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ವಿದ್ಯಾವಂತ ಯುವಕರು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದರು.

ಜನರ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನಿರ್ಧಾರಗಳ ಬಗ್ಗೆ ಮಾರ್ಗದರ್ಶನ ನೀಡುವುದು ಧರ್ಮಗುರುಗಳ ಜವಾಬ್ದಾರಿ ಎಂದು ಹೇಳಿದ ಶ್ರೀಗಳು, ಆಡಳಿತ ನಡೆಸುವ ಯಾವುದೇ ಪಕ್ಷ ಜನರ ಹಿತ ಕಾಪಾಡುವ ಕೆಲಸ ಮಾಡಬೇಕು. ಸರ್ಕಾರ ಸಾಲದ ಸುಳಿಗೆ ಸಿಲುಕದಂತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ತಾವು ಮೂಲತಃ ರೈತನ ಮಗ ಎಂದು ಹೇಳಿದ ಶ್ರೀಗಳು, ಸೊಲ್ಲಾಪುರದ ಬೃಹನ್ಮಠಕ್ಕೆ ಸೇರಿದ ಸುಮಾರು 200 ಎಕರೆ ಜಮೀನಿನಲ್ಲಿ ಸ್ವತಃ ಕೃಷಿ ಕೆಲಸ ಮಾಡಿದ ಅನುಭವ ಹಂಚಿಕೊಂಡರು. “ಹೊಲದಲ್ಲಿ ದುಡಿದಾಗಲೇ ರೈತನ ಶ್ರಮದ ಅರಿವಾಗುತ್ತದೆ” ಎಂದು ಹೇಳಿದರು.

ರೈತರು ಏಕಬೆಳೆ ಪದ್ಧತಿಯನ್ನು ಅವಲಂಬಿಸದೆ ಬಹುಬೆಳೆ ಪದ್ಧತಿ ಹಾಗೂ ಮೌಲ್ಯವರ್ಧಿತ ಕೃಷಿಯತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಸಂಸ್ಕಾರದ ಮಹತ್ವವನ್ನು ವಿವರಿಸಿದ ಅವರು, “ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಪ್ರತಿಯೊಂದು ಕುಟುಂಬವೂ ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು – ಒಂದು ಮನೆತನಕ್ಕೆ, ಒಂದು ದೇಶಕ್ಕೆ ಮತ್ತು ಒಂದು ಧರ್ಮ ರಕ್ಷಣೆಗೆ” ಎಂದು ಕರೆ ನೀಡಿದರು.

ಯುವಕರ ದೈಹಿಕ ಸಾಮರ್ಥ್ಯ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಸಮತೋಲನ ಆಹಾರ, ದೈಹಿಕ ಶ್ರಮ ಹಾಗೂ ದುಶ್ಚಟಗಳಿಂದ ದೂರವಿರುವ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

“ಗ್ಯಾರಂಟಿ ಯೋಜನೆಗಳಿಂದ ಬದುಕು ಕಟ್ಟಲಾಗುವುದಿಲ್ಲ. ರೈತನ ಬೆಳೆಗೆ ನ್ಯಾಯಯುತ ಬೆಲೆ ನೀಡಿ, ಯುವಕರಿಗೆ ಉದ್ಯೋಗ ಕೊಡಿ. ಉಚಿತ ಭಾಗ್ಯಗಳಿಗಿಂತ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು.”

– ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

0
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರಿಗೆ ವಿಶೇಷ ಪರಿಹಾರ, ಬೆಳೆ ವಿಮೆ, ಸಾಲಮನ್ನಾ ಹಾಗೂ ತುರ್ತು ನೆರವು ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಸೋಮವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಮುಖಂಡರು, ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ನೆರವಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ವೇಳೆ ಕರವೇ ತಾಲೂಕು ಅಧ್ಯಕ್ಷ ವೀರೇಶ ಪಸಾರದ, ಮುತ್ತುರಾಜ ಮುಂಡವಾಡ, ದೇವೇಂದ್ರ ಶಿಂಧೆ, ಇಮ್ರಾನ ಬಾವಿಕಟ್ಟಿ, ಸೊಹೈಲ್ ನದಾಫ್, ಮಂಜಣ್ಣ ದೇಸನಹಳ್ಳಿ, ತೌಶಿಫ ವಡ್ಡಟ್ಟಿ, ಮಲಿಕ್ ನಗಾರಿ, ಅನ್ವರ್ ಬರದ್ವಾಡ, ಮೋದಿನ್ ಪರೀಟ, ಇಮ್ರಾನ ಶಿಗ್ಲಿ, ಬುಡ್ಡೇಸಾಬ ಮುಳಗುಂದ, ಇಮಾಮ ಇಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚರಂಡಿ ನೀರಿಗೆ ಮುಳುಗಿದ 150 ಎಕರೆ ಕೃಷಿಭೂಮಿ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಚರಂಡಿ ನೀರು ಲಂಡಿಹಳ್ಳದ ಮೂಲಕ ಹರಿದು ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗುತ್ತಿರುವ ಪರಿಣಾಮ ಸುಮಾರು 150 ಎಕರೆ ಫಲವತ್ತಾದ ಕೃಷಿಭೂಮಿ ಹಾನಿಗೊಳಗಾಗಿದ್ದು, 300ಕ್ಕೂ ಹೆಚ್ಚು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ರೈತರು ಸೋಮವಾರ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರೈತ ಮುಖಂಡ ಹಾಗೂ ವಕೀಲ ರವಿಕಾಂತ ಅಂಗಡಿ, ಪಟ್ಟಣದ ಕಲುಷಿತ ಚರಂಡಿ ನೀರು ಕೃಷಿ ಭೂಮಿಗೆ ಹರಿಯುತ್ತಿರುವುದರಿಂದ ಉಳುಮೆ ನಡೆಸಲು ಸಾಧ್ಯವಾಗುತ್ತಿಲ್ಲ. ರೈತರ ಜೀವನಾಧಾರವಾಗಿರುವ ಫಲವತ್ತಾದ ಭೂಮಿ ಹಾಳಾಗುತ್ತಿದ್ದು, ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ಈ ಗಂಭೀರ ಸಮಸ್ಯೆಯನ್ನು ತುರ್ತಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಒಂದು ವಾರದೊಳಗೆ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಅಡರಕಟ್ಟಿ ಗ್ರಾಮದಿಂದ ಗದಗ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ, ರೈತರು ಸೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಂಜುನಾಥ ಮಾಗಡಿ, ಬಿ.ಟಿ. ಚಂದ್ರಶೇಖರ, ಬಸವರಾಜ ಹೀರೆಮನಿ, ಮುತ್ತಣ್ಣ ಗಡೆಪ್ಪನವರ, ಸಿದ್ದಣ್ಣ ಹವಳದ, ನಿಂಗಪ್ಪ ಪ್ಯಾಟಿ, ಚನ್ನಬಸಪ್ಪ ಹಳೆಮನಿ, ರಾಮಣ್ಣ ಚಿಕ್ಕಣ್ಣವರ, ಗಂಗನಗೌಡ್ರ ಪಾಟೀಲ, ಮಾಂತೇಶ ಹವಳದ, ಯಲ್ಲಪ್ಪ ರೊಳ್ಳಿ ಸೇರಿದಂತೆ ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರು ಉಪಸ್ಥಿತರಿದ್ದರು.

“ಒಂದು ವಾರದೊಳಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಅಡರಕಟ್ಟಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ.”

– ರವಿಕಾಂತ ಅಂಗಡಿ, ರೈತ ಮುಖಂಡ ಹಾಗೂ ವಕೀಲ

ಗ್ರಾಮ ಬಿಟ್ಟು ಹೋದರೆ ಕ್ರಮ ಖಚಿತ!

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಓ) ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು (ವಿಎ) ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲೇ ಕಾರ್ಯನಿರ್ವಹಿಸಬೇಕು. ಸರ್ಕಾರದ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಧಿಕಾರಿಗಳ ಚಲನವಲನದ ಮೇಲೆ ಪ್ರತಿದಿನ ನಿಗಾ ವಹಿಸಿ, ಜನರಿಗೆ ಅವರು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸೋಮವಾರ ಶಿರಹಟ್ಟಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ಪರಿಹಾರ ಮತ್ತು ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದ ಅಧಿಕಾರಿಗಳೂ ಕೇಂದ್ರಸ್ಥಾನದಲ್ಲಿಯೇ ಇರಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಗ್ರಾಮಗಳಲ್ಲಿ ಉದ್ಯೋಗವಿಲ್ಲದೆ ಜನರು ಗುಳೆ ಹೋಗುತ್ತಿರುವುದರಿಂದ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಬೇಕು ಎಂದು ಸೂಚಿಸಿದರು.

ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಶೇ.27ರಷ್ಟು ಮಳೆ ಕೊರತೆ ಉಂಟಾಗಿದ್ದು, ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿ ರೈತರಿಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಘೋಷಿಸಿರುವ ₹1 ಕೋಟಿ ಪರಿಹಾರದ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಲಮಾಣಿ, ಪಿಡಿಓಗಳು ಪ್ರತಿದಿನ ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು ಜಿಪಿಎಸ್ ಆಧಾರಿತ ಫೋಟೋ ಅಪ್‌ಲೋಡ್ ಮಾಡಬೇಕು. ಇದುವರೆಗೆ ಬಹುತೇಕ ಪಂಚಾಯಿತಿಗಳಲ್ಲಿ ಸಮರ್ಪಕ ಕ್ರಿಯಾ ಯೋಜನೆ ಸಿದ್ಧವಾಗಿಲ್ಲ. ಒಂದು ವಾರದೊಳಗೆ ಕ್ರಿಯಾ ಯೋಜನೆ ಪೂರ್ಣಗೊಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಳೆಯ ಬಿಲ್‌ಗಳನ್ನು ನಿಯಮಾನುಸಾರ ಮಾಡದೇ ಇಚ್ಛೆ ಬಂದವರಿಗೆ ಬಿಲ್ ಪಾವತಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ತಾಪಂ ಇಒ ಆರ್.ವಿ. ದೊಡ್ಡಮನಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಓಗಳು ಉಪಸ್ಥಿತರಿದ್ದರು.

“ಪಿಡಿಓ ಹಾಗೂ ವಿಎಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ಒಂದು ವಾರದೊಳಗೆ ಉದ್ಯೋಗ ಖಾತರಿ ಕಾಮಗಾರಿಗಳು ಆರಂಭವಾಗಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಉಸ್ತುವಾರಿ ಸಚಿವರಿಗೆ ವರದಿ ಸಲ್ಲಿಸಲಾಗುವುದು.”

– ಡಾ. ಚಂದ್ರು ಲಮಾಣಿ, ಶಾಸಕ, ಶಿರಹಟ್ಟಿ