ಬೆಂಗಳೂರು: ಬಿಎಂಟಿಸಿಗೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 4,500 ಎಲೆಕ್ಟ್ರಿಕ್ ಬಸ್ಗಳ ನಿಯೋಜನೆಗೆ ರಾಜ್ಯ ಸರ್ಕಾರ ಕ್ಯಾಬಿನೆಟ್ ಅನುಮೋದನೆ ನೀಡದೇ ವಿಳಂಬ ಮಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಈ ಯೋಜನೆಗಾಗಿ ರಾಜ್ಯ ಸರ್ಕಾರ ನೀಡಬೇಕಿರುವ ಹಣ ಅತ್ಯಲ್ಪ ಪ್ರಮಾಣದಲ್ಲಿದೆ. ಆದರೂ ಸಾರ್ವಜನಿಕ ಸಾರಿಗೆ ಬಲಪಡಿಸುವ ಮಹತ್ವದ ಯೋಜನೆಗೆ ಕಾಂಗ್ರೆಸ್ ಸರ್ಕಾರ ಒಪ್ಪಿಗೆ ನೀಡುತ್ತಿಲ್ಲ ಎಂದು ಅವರು ಹೇಳಿದರು.
“ವಿಐಪಿ ಯೋಜನೆಗಳಾದ ಟನಲ್ ರಸ್ತೆಗಳಿಗಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಲು ಸರ್ಕಾರ ಸಿದ್ಧವಾಗಿದೆ. ಆದರೆ ಪ್ರತಿದಿನ ಬಿಎಂಟಿಸಿ ಬಸ್ ಹಾಗೂ ಮೆಟ್ರೋ ಬಳಸುವ ಸಾಮಾನ್ಯ ಜನರಿಗಾಗಿ ಹಣ ಖರ್ಚು ಮಾಡಲು ಹಿಂದೇಟು ಹಾಕುತ್ತಿದೆ” ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಸಾಮಾನ್ಯ ನಾಗರಿಕರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದೆ. ಮಹಿಳೆಯರು, ಪಾದಚಾರಿಗಳು ಮತ್ತು ಸಾರ್ವಜನಿಕ ಸಾರಿಗೆ ಬಳಕೆದಾರರು ಸರ್ಕಾರದ ಆದ್ಯತೆಯಲ್ಲಿ ಇಲ್ಲ ಎಂದು ಆರೋಪಿಸಿದರು.
ಬನಶಂಕರಿ ಸ್ಕೈವಾಕ್ ಕಾಮಗಾರಿ ಸ್ಥಗಿತಗೊಂಡಿರುವುದಕ್ಕೂ ಅವರು ಆಕ್ರೋಶ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿಯಾಗಿದ್ದಾಗ ಡಿ.ಕೆ. ಶಿವಕುಮಾರ್ ಸ್ವತಃ ಗುದ್ದಲಿ ಪೂಜೆ ನೆರವೇರಿಸಿದ್ದ ಯೋಜನೆಯನ್ನು ಈಗ ಅರ್ಧಕ್ಕೆ ನಿಲ್ಲಿಸಲಾಗಿದೆ ಎಂದು ದೂರಿದರು.

