ನವದೆಹಲಿ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಗಳ ಸ್ವರೂಪವನ್ನು ಬದಲಾಯಿಸಿರುವ ಹೈಕೋರ್ಟ್ ಕ್ರಮದ ಬಗ್ಗೆ ನ್ಯಾಯಪೀಠ ಪ್ರಶ್ನೆ ಎತ್ತಿದೆ.
ಎಚ್.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಹೈಕೋರ್ಟ್ ಹಲ್ಲೆ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಯನ್ನು ರದ್ದುಪಡಿಸಿ, ಲೈಂಗಿಕ ದೌರ್ಜನ್ಯ ಆರೋಪದ ತನಿಖೆಯನ್ನು ಮುಂದುವರಿಸಲು ಅವಕಾಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠ, ಹೈಕೋರ್ಟ್ ಆದೇಶದ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಆರೋಪಿಯ ವಿರುದ್ಧದ ಚಾರ್ಜ್ಗಳನ್ನು ಬದಲಾಯಿಸಲು ಹೈಕೋರ್ಟ್ ಯಾವ ಆಧಾರದ ಮೇಲೆ ಮುಂದಾಗಿದೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.
ವಿಚಾರಣೆ ವೇಳೆ, ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪವಿದ್ದು, ಆ ಪ್ರಕರಣದಲ್ಲಿ ಚಾರ್ಜ್ ಫ್ರೇಮ್ ಆಗಿದೆ. ಆದರೆ ಎಚ್.ಡಿ. ರೇವಣ್ಣ ವಿರುದ್ಧದ ಆರೋಪಗಳು ವಿಭಿನ್ನವಾಗಿವೆ. ಒಂದೇ ಪ್ರಕರಣದ ಹಿನ್ನೆಲೆಯಲ್ಲಿ ತಂದೆಯ ಮೇಲೂ ಅತ್ಯಾಚಾರದ ಆರೋಪವನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮೇಲ್ಮನವಿಯ ಕುರಿತು ಉತ್ತರ ಸಲ್ಲಿಸುವಂತೆ ಎಚ್.ಡಿ. ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಮುಂದೂಡಿದೆ.

