Home Blog

ಪಶ್ಚಿಮ ಬಂಗಾಳದ ಆಧಾರ್‌… ಬಾಂಗ್ಲಾದೇಶದ ಅಸಲಿ ಮುಖ!

0

ವಿಜಯಸಾಕ್ಷಿ ಸುದ್ದಿ, ಗದಗ: ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ ಇಟ್ಟುಕೊಂಡು ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ನಿವಾಸಿಗಳು ಪತ್ತೆಯಾಗಿರುವ ಪ್ರಕರಣ ಜಿಲ್ಲೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ದಾಖಲೆಗಳ ಪರಿಶೀಲನೆ ವೇಳೆ ಇಬ್ಬರೂ ಬಾಂಗ್ಲಾದೇಶದವರು ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಭಾರತಕ್ಕೆ ಇವರ ಪ್ರವೇಶ ಹೇಗಾಯಿತು? ಪಶ್ಚಿಮ ಬಂಗಾಳದ ವಿಳಾಸದ ಆಧಾರ್‌ ಕಾರ್ಡ್‌ ಇವರ ಕೈಗೆ ಹೇಗೆ ಬಂತು? ಗದಗಕ್ಕೆ ಇವರನ್ನು ಕರೆತಂದವರು ಯಾರು? ಎಂಬ ಪ್ರಶ್ನೆಗಳು ಇದೀಗ ಪೊಲೀಸರನ್ನು ಕಾಡುತ್ತಿವೆ.

ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ನೂರಾರು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಕಾಮಗಾರಿ ಸ್ಥಳದಲ್ಲಿ ಕಳೆದ ಎರಡು ತಿಂಗಳಿಂದ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ೨೬ ವರ್ಷದ ಸಕೀಬ್‌ ಸಹೀನ್‌ ಹಾಗೂ ೨೨ ವರ್ಷದ ದಿಲಾವರ್‌ ಹುಸೇನ್‌ ಎಂಬ ಇಬ್ಬರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕಾರ್ಮಿಕರಾಗಿ ಬಂದು ಸಿಕ್ಕಿಬಿದ್ದವರು

ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಈ ಇಬ್ಬರು ಗದಗಕ್ಕೆ ಬಂದಿದ್ದರು ಎನ್ನಲಾಗಿದೆ. ಕಳೆದ ಎರಡು ತಿಂಗಳಿಂದ ಹರ್ತಿಯ ಕಾಮಗಾರಿ ಸ್ಥಳದಲ್ಲೇ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರ ಬಳಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ಗಳು ಪತ್ತೆಯಾಗಿವೆ.

ಆದರೆ, ಪೊಲೀಸರಿಗೆ ಲಭ್ಯವಾದ ಮಾಹಿತಿಯ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ ಇಬ್ಬರೂ ಬಾಂಗ್ಲಾದೇಶದ ನಿವಾಸಿಗಳು ಎಂಬುದು ಬೆಳಕಿಗೆ ಬಂದಿದೆ. ಇವರ ಜನ್ಮಸ್ಥಳ ಬಾಂಗ್ಲಾದೇಶ ಎಂದು ದಾಖಲೆಗಳಲ್ಲಿ ನಮೂದಾಗಿರುವುದು ಪೊಲೀಸರ ಅನುಮಾನಕ್ಕೆ ಮತ್ತಷ್ಟು ಬಲ ನೀಡಿದೆ. ಹೀಗಾಗಿ ಇವರ ಬಳಿ ದೊರೆತ ದಾಖಲೆಗಳ ಸತ್ಯಾಸತ್ಯತೆ ಹಾಗೂ ಅವರು ಭಾರತದಲ್ಲಿ ನೆಲೆಸಿರುವ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಧಾರ್‌ ಸಿಕ್ಕಿದ್ದೇಗೆ?

ಬಾಂಗ್ಲಾದೇಶದ ನಿವಾಸಿಗಳಾಗಿದ್ದರೆ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ ಇವರ ಕೈಗೆ ಹೇಗೆ ಬಂತು ಎಂಬುದು ತನಿಖೆಯ ಪ್ರಮುಖ ಪ್ರಶ್ನೆಯಾಗಿದೆ. ದಾಖಲೆಗಳು ನಕಲಿಯೇ? ಅಕ್ರಮವಾಗಿ ದಾಖಲೆಗಳಲ್ಲಿ ಬದಲಾವಣೆ ಮಾಡಲಾಗಿದೆಯೇ? ಅಥವಾ ಯಾರಾದರೂ ಇವರಿಗೆ ದಾಖಲೆಗಳನ್ನು ಸಿದ್ಧಪಡಿಸಿಕೊಟ್ಟಿದ್ದಾರೆಯೇ ಎಂಬ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಇಬ್ಬರೂ ಈ ಹಿಂದೆ ಬೆಂಗಳೂರು, ಮಂಗಳೂರು, ಗಂಗಾವತಿ ಸೇರಿದಂತೆ ರಾಜ್ಯದ ವಿವಿಧೆಡೆ ಕೂಲಿ ಕೆಲಸ ಮಾಡಿದ್ದರೆನ್ನಲಾಗಿದೆ. ಹೀಗಾಗಿ ಅವರು ಈ ಸ್ಥಳಗಳಲ್ಲಿ ಯಾವ ದಾಖಲೆಗಳ ಆಧಾರದಲ್ಲಿ ಕೆಲಸ ಮಾಡಿದರು, ಅವರನ್ನು ಒಂದೊಂದು ಊರಿಗೆ ಕರೆದುಕೊಂಡು ಹೋಗುತ್ತಿದ್ದವರು ಯಾರು, ಅವರೊಂದಿಗೆ ಇನ್ನೂ ಯಾರಾದರೂ ಸಂಪರ್ಕದಲ್ಲಿದ್ದಾರೆಯೇ ಎಂಬುದನ್ನು ಪೊಲೀಸರು ಜಾಲಾಡುತ್ತಿದ್ದಾರೆ.

ಗುತ್ತಿಗೆದಾರರಿಗೂ ಗೊತ್ತಿತ್ತಾ?

ಕಾಮಗಾರಿ ಸ್ಥಳದಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಲಾಗಿತ್ತೇ? ಗುತ್ತಿಗೆದಾರರಿಗೆ ಇವರ ಹಿನ್ನೆಲೆ ತಿಳಿದಿತ್ತೇ? ಪಶ್ಚಿಮ ಬಂಗಾಳದ ವಿಳಾಸದ ಆಧಾರ್‌ ಕಾರ್ಡ್‌ ಆಧರಿಸಿಯೇ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗಿತ್ತೇ ಎಂಬ ಪ್ರಶ್ನೆಗಳಿಗೂ ಪೊಲೀಸರು ಉತ್ತರ ಹುಡುಕುತ್ತಿದ್ದಾರೆ.

ಇದು ಕೇವಲ ಇಬ್ಬರು ಅಕ್ರಮ ವಲಸಿಗರ ಪತ್ತೆ ಪ್ರಕರಣವೇ ಅಥವಾ ಇದರ ಹಿಂದೆ ದೊಡ್ಡ ಜಾಲವಿದೆಯೇ ಎಂಬ ಅನುಮಾನವೂ ಮೂಡಿದೆ. ಇಬ್ಬರು ರಾಜ್ಯದ ವಿವಿಧೆಡೆ ಕೆಲಸ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ, ಇವರ ಸಂಪರ್ಕದಲ್ಲಿದ್ದವರು ಹಾಗೂ ದಾಖಲೆಗಳ ಸೃಷ್ಟಿಗೆ ನೆರವಾದವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇವರ ಹಿಂದೆ ಇನ್ನಾರಾದರೂ ಇದ್ದಾರೆಯೇ? ಅಕ್ರಮ ವಲಸಿಗರಿಗೆ ದಾಖಲೆಗಳನ್ನು ಸಿದ್ಧಪಡಿಸುವ ಜಾಲವಿದೆಯೇ? ಇನ್ನೂ ಹೆಚ್ಚಿನ ಮಂದಿ ಇದೇ ರೀತಿಯಲ್ಲಿ ರಾಜ್ಯದಲ್ಲಿ ನೆಲೆಸಿದ್ದಾರೆಯೇ ಎಂಬ ಪ್ರಶ್ನೆಗಳಿಗೆ ತನಿಖೆ ಮುಂದುವರಿದಂತೆ ಉತ್ತರ ಸಿಗಬೇಕಿದೆ.

ಭಾರತ ಪ್ರವೇಶದಿಂದ ದಾಖಲೆಗಳವರೆಗೆ ಜಾಡು

ಹರ್ತಿಯಲ್ಲಿ ಪತ್ತೆಯಾದ ಇಬ್ಬರು ಬಾಂಗ್ಲಾದೇಶದ ನಿವಾಸಿಗಳ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಭಾರತಕ್ಕೆ ಅವರು ಯಾವ ಮಾರ್ಗದಿಂದ ಪ್ರವೇಶಿಸಿದರು, ಗದಗಕ್ಕೆ ಕರೆತಂದವರು ಯಾರು, ಪಶ್ಚಿಮ ಬಂಗಾಳದ ವಿಳಾಸದ ಆಧಾರ್‌ ಕಾರ್ಡ್‌ ಹೇಗೆ ದೊರೆಯಿತು ಹಾಗೂ ರಾಜ್ಯದ ವಿವಿಧೆಡೆ ಅವರು ಹೇಗೆ ಕೆಲಸ ಮಾಡಿದರು ಎಂಬುದರ ಸುತ್ತ ತನಿಖೆಯ ಜಾಡು ಸಾಗುತ್ತಿದೆ.

“ಇಬ್ಬರ ಹಿನ್ನೆಲೆ, ಭಾರತಕ್ಕೆ ಪ್ರವೇಶಿಸಿದ ರೀತಿ, ಅವರ ಬಳಿ ದೊರೆತ ದಾಖಲೆಗಳು ಹಾಗೂ ಅವರು ಈ ಹಿಂದೆ ಕೆಲಸ ಮಾಡಿರುವ ಸ್ಥಳಗಳ ಕುರಿತು ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರಲಿದೆ.”

ರೋಹನ್‌ ಜಗದೀಶ್‌, ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಶ್ರಾವಣದ ಸೊಬಗಿನಲ್ಲಿ ಕಂಗೊಳಿಸಿದ ವರಮಹಾಲಕ್ಷ್ಮೀ ಆರಾಧನೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಶ್ರಾವಣ ಮಾಸದ ಎರಡನೇ ಶುಕ್ರವಾರದ ಅಂಗವಾಗಿ ನರೇಗಲ್ಲ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವರಮಹಾಲಕ್ಷ್ಮೀ ಪೂಜೆ ಭಕ್ತಿಭಾವ ಹಾಗೂ ಸಂಭ್ರಮದಿಂದ ನೆರವೇರಿತು. ಮನೆಮನೆಗಳಲ್ಲಿ ಲಕ್ಷ್ಮೀ ದೇವಿಯ ಆರಾಧನೆ, ಹೂವಿನ ಅಲಂಕಾರ, ದೀಪಗಳ ಬೆಳಕು, ಮಂಗಳಗೀತೆ ಹಾಗೂ ಸಿಹಿ-ಸವಿಯೂಟದ ವಾತಾವರಣ ಕಳೆಗಟ್ಟಿತ್ತು.

ಕುಟುಂಬದ ಸುಖ-ಶಾಂತಿ, ಆರೋಗ್ಯ, ಆಯುಷ್ಯ, ಐಶ್ವರ್ಯ ಹಾಗೂ ಸಮೃದ್ಧಿಗಾಗಿ ಮಹಿಳೆಯರು ವರಮಹಾಲಕ್ಷ್ಮೀ ವ್ರತ ಆಚರಿಸಿದರು. ಪೂಜೆಗೆ ಮುನ್ನವೇ ಹೂವು, ಹಣ್ಣು, ತೆಂಗಿನಕಾಯಿ, ಬಾಳೆದಿಂಡು, ಮಾವಿನ ತೋರಣ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡಿದ್ದರು.

ಶುಕ್ರವಾರ ಬೆಳಗ್ಗೆಯೇ ಮನೆಗಳನ್ನು ಸ್ವಚ್ಛಗೊಳಿಸಿ, ಬಾಗಿಲಿಗೆ ಮಾವಿನ ತೋರಣ ಹಾಗೂ ಬಾಳೆಕಂಬಗಳನ್ನು ಕಟ್ಟಿ, ರಂಗೋಲಿ ಬಿಡಿಸಿ ಹಬ್ಬದ ವಾತಾವರಣ ನಿರ್ಮಿಸಿದರು. ಕಳಶ ಪ್ರತಿಷ್ಠಾಪಿಸಿ ಅರಿಶಿಣ, ಕುಂಕುಮ ಹಾಗೂ ಹೂವುಗಳಿಂದ ಅಲಂಕರಿಸಿ, ಲಕ್ಷ್ಮೀ ದೇವಿಯ ಮೂರ್ತಿಗೆ ವಿವಿಧ ಆಭರಣ ಮತ್ತು ಹೂವಿನ ಅಲಂಕಾರ ಮಾಡಿದರು.

ಬಾಳೆಕಂಬ, ಹೂವಿನ ಹಾರ, ಬಣ್ಣಬಣ್ಣದ ತೋರಣ ಹಾಗೂ ದೀಪಗಳಿಂದ ಸಿಂಗರಿಸಿದ ಪೂಜಾ ಮಂಟಪಗಳು ಕಣ್ಮನ ಸೆಳೆದವು. ಹಣ್ಣು, ತೆಂಗಿನಕಾಯಿ ಹಾಗೂ ವಿವಿಧ ನೈವೇದ್ಯಗಳನ್ನು ಅರ್ಪಿಸಿ ಧೂಪ-ದೀಪ ಬೆಳಗಿಸಿ ಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು.

ಗೃಹಿಣಿಯರು ಹೊಸ ಸೀರೆ ಧರಿಸಿ ಸಾಂಪ್ರದಾಯಿಕ ಅಲಂಕಾರದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿದರು. ಗೋಧಿಹುಗ್ಗಿ, ಕರ್ಜಿಕಾಯಿ, ಕಡುಬು, ಅನ್ನ-ಸಾರು ಸೇರಿದಂತೆ ವಿವಿಧ ಖಾದ್ಯಗಳನ್ನು ತಯಾರಿಸಿ ನೈವೇದ್ಯ ಅರ್ಪಿಸಿ ಪ್ರಸಾದ ವಿತರಿಸಿದರು.

ಸಂಜೆಯಾಗುತ್ತಿದ್ದಂತೆ ಮಹಿಳೆಯರು ಅಕ್ಕಪಕ್ಕದ ಮನೆಗಳಿಗೆ ತೆರಳಿ ಪರಸ್ಪರ ಅರಿಶಿಣ-ಕುಂಕುಮ, ಹೂವು, ತಾಂಬೂಲ ಹಾಗೂ ಸೌಭಾಗ್ಯದ ಸಾಮಗ್ರಿಗಳನ್ನು ನೀಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಇದರಿಂದ ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಾಯಿತು.

ವರಮಹಾಲಕ್ಷ್ಮೀ ಹಬ್ಬವು ಧಾರ್ಮಿಕ ಆಚರಣೆಯ ಜತೆಗೆ ಕುಟುಂಬ ಸದಸ್ಯರನ್ನು ಒಗ್ಗೂಡಿಸುವ ಹಾಗೂ ಮಹಿಳೆಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಾಂಸ್ಕೃತಿಕ ಹಬ್ಬವಾಗಿದೆ. ಶ್ರಾವಣದ ಹಸಿರು ಸೊಬಗಿನ ನಡುವೆ ದೀಪದ ಬೆಳಕು, ಹೂವಿನ ಪರಿಮಳ ಹಾಗೂ ಭಕ್ತಿಯ ವಾತಾವರಣ ಎಲ್ಲೆಡೆ ಮನೆಮಾಡಿತ್ತು.

ಕುಟುಂಬದ ಎಲ್ಲ ಸದಸ್ಯರಿಗೆ ಆರೋಗ್ಯ, ಆಯುಷ್ಯ, ಐಶ್ವರ್ಯ ಹಾಗೂ ನೆಮ್ಮದಿ ದೊರೆಯಲಿ, ಎಲ್ಲರ ಇಷ್ಟಾರ್ಥಗಳು ಈಡೇರಲಿ ಎಂದು ಮಹಿಳೆಯರು ಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸಿದರು.

ಸಂಭ್ರಮದಲ್ಲಿ ಸ್ನೇಹಾ ರಾಠೋಡ್, ಜ್ಯೋತಿ ವಂಕಲಕುಂಟಿ, ವಿಜಯಲಕ್ಷ್ಮಿ ಹಿರೇಮಠ, ಈರಮ್ಮ ಹುಲ್ಲೂರ, ಸವಿತಾ ಬೇವಿನಕಟ್ಟಿ, ಶೋಭಾ, ಐಶ್ವರ್ಯ, ವಿದ್ಯಾ, ಚನ್ನಮ್ಮ, ಲಕ್ಷ್ಮೀ ಕಲ್ಲೂರ, ಗಂಗಮ್ಮ ಕಲ್ಲೂರ, ರಶ್ಮಿ ಕರಮುಡಿ, ಸಾವಿತ್ರಿ ಕಡೆತೋಟದ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನರಗುಂದ ವಿಧಾನಸಭಾ ಕ್ಷೇತ್ರದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಹಾಗೂ ಪ್ರತಿಭಟನೆ ನಡೆಯಿತು.

ನರಗುಂದ, ಹೊಳೆಆಲೂರು ಹಾಗೂ ಲಕ್ಕುಂಡಿ ಮಂಡಲಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು, ಪ್ರಕರಣಕ್ಕೆ ಸಂಬಂಧಿಸಿದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಕ್ಷೇತ್ರದ ಯುವ ಮುಖಂಡ ಉಮೇಶಗೌಡ ಪಾಟೀಲ, ಮಂಡಲ ಅಧ್ಯಕ್ಷರಾದ ನಾಗನಗೌಡ ತಿಮ್ಮನಗೌಡ್ರ, ಸೋಮಶೇಖರಪ್ಪ ಚರೇದ, ಪ್ರಕಾಶ ಅರಹುಣಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ಕೊರಿಗಣ್ಣವರ, ಸುರೇಶ ಗಾಣಿಗೇರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಎಂ.ಎಸ್. ಕರೀಗೌಡ್ರ, ವಸಂತ ಮೇಟಿ, ಈಶಪ್ಪ ನಾಯ್ಕರ, ಪ್ರದೀಪ ನವಲಗುಂದ, ರವಿಕಾಂತ ಅಂಗಡಿ, ಮುತ್ತಣ್ಣ ಜಂಗಣ್ಣವರ, ಚಂದ್ರು ದಂಡಿನ, ಅಶೋಕ ಹೆಬ್ಬಳ್ಳಿ, ಮಹೇಶ ಮುಸ್ಕಿನಭಾವಿ, ಅನೀಲ ದರಿಯಣ್ಣವರ, ಪ್ರವೀಣ ಯಲಿಗಾರ, ಸೋಮನಗೌಡ ಹುಡೇದಮನಿ, ಶರಣು ಬರಶೆಟ್ಟ, ಶಿವಕುಮಾರ ನೀಲಗುಂದ, ಶಶಿಧರಗೌಡ ಪಾಟೀಲ, ಬಸವರಾಜ ಚಲವಾದಿ, ಸುರೇಶ ಚಲವಾದಿ, ಅನೀಲ ಅಬ್ಬಿಗೇರಿ, ಸಂತೋಷ ಅಕ್ಕಿ, ಪ್ರಶಾಂತ ನಾಯ್ಕರ, ವಾಯ್.ಪಿ. ಅಡ್ನೂರ, ಡಿ.ವಾಯ್. ಹುನುಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನರಗುಂದ ವಿಧಾನಸಭಾ ಕ್ಷೇತ್ರದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಧರಣಿ ಹಾಗೂ ಪ್ರತಿಭಟನೆ ನಡೆಯಿತು.

ನರಗುಂದ, ಹೊಳೆಆಲೂರು ಹಾಗೂ ಲಕ್ಕುಂಡಿ ಮಂಡಲಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು, ಪ್ರಕರಣಕ್ಕೆ ಸಂಬಂಧಿಸಿದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಕ್ಷೇತ್ರದ ಯುವ ಮುಖಂಡ ಉಮೇಶಗೌಡ ಪಾಟೀಲ, ಮಂಡಲ ಅಧ್ಯಕ್ಷರಾದ ನಾಗನಗೌಡ ತಿಮ್ಮನಗೌಡ್ರ, ಸೋಮಶೇಖರಪ್ಪ ಚರೇದ, ಪ್ರಕಾಶ ಅರಹುಣಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ಕೊರಿಗಣ್ಣವರ, ಸುರೇಶ ಗಾಣಿಗೇರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಎಂ.ಎಸ್. ಕರೀಗೌಡ್ರ, ವಸಂತ ಮೇಟಿ, ಈಶಪ್ಪ ನಾಯ್ಕರ, ಪ್ರದೀಪ ನವಲಗುಂದ, ರವಿಕಾಂತ ಅಂಗಡಿ, ಮುತ್ತಣ್ಣ ಜಂಗಣ್ಣವರ, ಚಂದ್ರು ದಂಡಿನ, ಅಶೋಕ ಹೆಬ್ಬಳ್ಳಿ, ಮಹೇಶ ಮುಸ್ಕಿನಭಾವಿ, ಅನೀಲ ದರಿಯಣ್ಣವರ, ಪ್ರವೀಣ ಯಲಿಗಾರ, ಸೋಮನಗೌಡ ಹುಡೇದಮನಿ, ಶರಣು ಬರಶೆಟ್ಟ, ಶಿವಕುಮಾರ ನೀಲಗುಂದ, ಶಶಿಧರಗೌಡ ಪಾಟೀಲ, ಬಸವರಾಜ ಚಲವಾದಿ, ಸುರೇಶ ಚಲವಾದಿ, ಅನೀಲ ಅಬ್ಬಿಗೇರಿ, ಸಂತೋಷ ಅಕ್ಕಿ, ಪ್ರಶಾಂತ ನಾಯ್ಕರ, ವಾಯ್.ಪಿ. ಅಡ್ನೂರ, ಡಿ.ವಾಯ್. ಹುನುಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

೫೦ ಕೆ.ಜಿ. ಗೊಬ್ಬರ ಚೀಲ ಹೊತ್ತು ೧೫ ಕಿ.ಮೀ. ನಡೆದ ರಾಮಗಿರಿಯ ಗಿರೀಶ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ನಾಗರ ಪಂಚಮಿ ಹಬ್ಬದ ಅಂಗವಾಗಿ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ಯುವಕರಿಗಾಗಿ ಆಯೋಜಿಸಿದ್ದ ೫೦ ಕೆ.ಜಿ. ತೂಕದ ರಸಗೊಬ್ಬರ ಚೀಲ ಹೊತ್ತು ನಡೆಯುವ ವಿಶಿಷ್ಟ ಸ್ಪರ್ಧೆಯಲ್ಲಿ ಗಿರೀಶ ಶೆಟ್ಟೆಪ್ಪನವರ ಗಮನ ಸೆಳೆದಿದ್ದಾರೆ.

ಹೆಚ್ಚು ದೂರ ನಡೆಯುವವರಿಗೆ ಬಹುಮಾನ ಘೋಷಿಸಲಾಗಿದ್ದ ಸ್ಪರ್ಧೆಯಲ್ಲಿ ಗಿರೀಶ ಅವರು ೫೦ ಕೆ.ಜಿ. ತೂಕದ ರಸಗೊಬ್ಬರ ಚೀಲವನ್ನು ಹೆಗಲ ಮೇಲೆ ಹೊತ್ತು, ಹುಬ್ಬಳ್ಳಿ–ಲಕ್ಷ್ಮೇಶ್ವರ ರಸ್ತೆಯಲ್ಲಿ ಎಲ್ಲಿಯೂ ಚೀಲವನ್ನು ಕೆಳಗಿಡದೆ ಬರೋಬ್ಬರಿ ೧೫ ಕಿ.ಮೀ. ನಡೆದು ಪ್ರಥಮ ಸ್ಥಾನ ಪಡೆದರು. ಮಹಾಂತೇಶ ಮೈಲಾರೆಪ್ಪ ಬಳ್ಕೊಳ್ಳಿ ಅವರು ೧೦ ಕಿ.ಮೀ. ನಡೆದು ದ್ವಿತೀಯ ಸ್ಥಾನ ಗಳಿಸಿದರು.

ಬುಧವಾರ ವಿಜೇತರನ್ನು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಮಡಿವಾಳರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರು ಮೊಬೈಲ್‌ ಗೀಳು ಹಾಗೂ ದುಶ್ಚಟಗಳಿಂದ ದೂರವಿರಬೇಕು. ಹಬ್ಬಗಳ ಸಂದರ್ಭದಲ್ಲಿ ಹಿರಿಯರ ಕಾಲದಿಂದ ನಡೆದುಕೊಂಡು ಬಂದಿರುವ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳು ಹಾಗೂ ಹವ್ಯಾಸಗಳನ್ನು ಮುಂದುವರಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ರಾಮಣ್ಣ ಜಿಡ್ಡಿಮನಿ, ಪರಸಪ್ಪ ಹುಣಸಿಮರದ, ಮಾತಾಂಡಪ್ಪ ಗಂಜಿಗಟ್ಟಿ, ರಾಜೇಸಾಬ್ ಅಣ್ಣಿಗೇರಿ, ಮಲ್ಲೇಶ ಬೇವಿನಮರದ, ಶಿವನಪ್ಪ ಜುಲ್ಸಿ, ನೀಲಪ್ಪ ಬೇವಿನಮರದ, ಕೋಟೆಪ್ಪ ಗಂಜಿಗಟ್ಟಿ, ಶಿವಣ್ಣ ಬಾಲಣ್ಣವರ, ಖಾಸೀಂಸಾಬ್ ತೆಗ್ಗಿನಮನಿ, ಕಲ್ಲಪ್ಪ ಮಲ್ಲಾಡದ, ಬಸಪ್ಪ ಸಿಂಗಣ್ಣನವರ ಹಾಗೂ ವಿನಾಯಕ ಮಡಿವಾಳರ ಇದ್ದರು.

ಹಬ್ಬಗಳು ಸೌಹಾರ್ದತೆಯ ಸಂಕೇತವಾಗಲಿ: ಡಿವೈಎಸ್ಪಿ ಪ್ರಭುಗೌಡ

0

ವಿಜಯಸಾಕ್ಷಿ ಸುದ್ದಿ, ಡಂಬಳ: ದೇಶದ ಸರ್ವಜನಾಂಗವು ಸುಂದರ ನಂದನವನದ ತೋಟವಿದ್ದಂತೆ. ಪ್ರತಿಯೊಂದು ಹಬ್ಬವನ್ನು ಅರ್ಥಪೂರ್ಣವಾಗಿ, ಸಂತೋಷ ಹಾಗೂ ಸೌಹಾರ್ದತೆಯಿಂದ ಆಚರಿಸಿದಾಗ ಹಬ್ಬಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದು ನರಗುಂದ ಡಿವೈಎಸ್ಪಿ ಪ್ರಭುಗೌಡ ಕಿರೇದಹಳ್ಳಿ ಹೇಳಿದರು.

ಡಂಬಳ ಗ್ರಾಮದ ಹೊರಠಾಣೆಯಲ್ಲಿ ಗದಗ ಜಿಲ್ಲಾ ಪೊಲೀಸ್ ಹಾಗೂ ನರಗುಂದ ಉಪವಿಭಾಗದ ಮುಂಡರಗಿ ಪೊಲೀಸ್ ಠಾಣೆಗಳ ಸಂಯುಕ್ತ ಆಶ್ರಯದಲ್ಲಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಬ್ಬಗಳನ್ನು ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಸಹಕಾರದಿಂದ ಆಚರಿಸಬೇಕು. ಯಾವುದೇ ಕಾರಣಕ್ಕೂ ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವಂತಹ ಘಟನೆಗಳಿಗೆ ಅವಕಾಶ ನೀಡಬಾರದು ಎಂದರು.

ಸಿಪಿಐ ಅಯ್ಯನಗೌಡ ಪಾಟೀಲ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕು. ಕಾನೂನನ್ನು ಕೈಗೆ ತೆಗೆದುಕೊಳ್ಳದೆ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮರಿಯಪ್ಪ ಸಿದ್ಧಣ್ಣವರ ಮಾತನಾಡಿ, ಲಿಂ. ಡಾ. ಜಗದ್ಗುರು ತೋಂಟದ ಸಿದ್ಧಲಿಂಗ ಶ್ರೀಗಳು ಜಾತಿ, ಮತ, ಪಂಥದ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಬದುಕುವ ಸಂದೇಶ ನೀಡಿದ್ದಾರೆ. ಅದರಂತೆ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸುತ್ತೇವೆ ಎಂದರು.

ಅಂಜುಮನ್ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ ಮಾತನಾಡಿ, ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ರೈತರು ಹಾಗೂ ಕಾರ್ಮಿಕ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಬೀಳಬಾರದು ಎಂಬ ಉದ್ದೇಶದಿಂದ ಈದ್ ಮಿಲಾದ್ ಹಬ್ಬವನ್ನು ಆಡಂಬರವಿಲ್ಲದೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಡಂಬಳ ಹೋಬಳಿಯ ೨೪ ಗ್ರಾಮಗಳಲ್ಲಿ ಹಬ್ಬದ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಬೋರ್‌ವೆಲ್‌ಗಳ ಕೇಬಲ್ ಹಾಗೂ ರೈತರ ಪರಿಕರಗಳ ಕಳ್ಳತನ ತಡೆಯಲು ಮತ್ತು ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದರು.

ಸಭೆಯಲ್ಲಿ ಮಹೇಶ ಗಡಗಿ, ಕೆ.ಕೆ. ಬಂಡಿ, ಯುವ ಮುಖಂಡ ಬಸವರಡ್ಡಿ ಬಂಡಿಹಾಳ, ಮಲ್ಲೇಶ ಮಠದ, ಕುಬೇರಪ್ಪ ಕೊಳ್ಳಾರ, ಜಾಕೀರ ಮೂಲಿಮನಿ, ಪ್ರಜ್ವಲ್ ಮಾನೆ, ಶಿವಾನಂದ ಬಂಡಿ, ಲೆಂಕಪ್ಪ ಕದಡಿ, ಮುತ್ತು ಭೋವಿ, ಮಹೇಶ ಬಿಸನಳ್ಳಿ, ಮಲ್ಲೇಶ ಸಂಜಿವಣ್ಣನವರ, ಗೋವಿಂದಪ್ಪ ಆನಿ ಸೇರಿದಂತೆ ಪೊಲೀಸ್ ಸಿಬ್ಬಂದಿ, ಗ್ರಾಮದ ಹಿರಿಯರು ಹಾಗೂ ಯುವಕರು ಉಪಸ್ಥಿತರಿದ್ದರು.

ಬೆಳೆ ಹಾನಿಗೆ ರೈತರ ಕೈಹಿಡಿಯಲು ಜಿಲ್ಲಾಡಳಿತ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಹಂಗಾಮಿನಲ್ಲಿ ಮಳೆಯ ವ್ಯತ್ಯಯ ಹಾಗೂ ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ‘ಮಧ್ಯ ಋತು ಸಂಕಷ್ಟ’ ನಿಯಮ ಜಾರಿಗೊಳಿಸುವ ಕುರಿತು ಪರಿಶೀಲನೆ ನಡೆಸಲಾಗಿದ್ದು, ಬೆಳೆ ನಷ್ಟದ ನಿಖರ ಅಂದಾಜಿಗಾಗಿ ಉಪಗ್ರಹ ದತ್ತಾಂಶ ಹಾಗೂ ಜಂಟಿ ಕ್ಷೇತ್ರ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಹಂಗಾಮಿನ ಬೆಳೆಗಳಿಗೆ ‘ಮಧ್ಯ ಋತು ಸಂಕಷ್ಟ’ ಜಾರಿ ಕುರಿತು ಜಿಲ್ಲಾ ಮಟ್ಟದ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿದರು.

ಪ್ರಸಕ್ತ ಮುಂಗಾರು ಋತುವಿನಲ್ಲಿ ಪ್ರಕೃತಿ ವಿಕೋಪ ಹಾಗೂ ಬರಗಾಲದಂತಹ ಹವಾಮಾನ ಪರಿಸ್ಥಿತಿಯಿಂದ ರೈತರ ಬೆಳೆಗಳಿಗೆ ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ, ರೈತರಿಗೆ ಶೀಘ್ರ ಆರ್ಥಿಕ ನೆರವು ಕಲ್ಪಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ‘ಮಧ್ಯ ಋತು ಸಂಕಷ್ಟ’ ನಿಯಮದಡಿ ಪರಿಹಾರ ಕಲ್ಪಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದರು.

ಬೆಳೆಗಳ ಬೆಳವಣಿಗೆ ಹಾಗೂ ತೇವಾಂಶದ ಕೊರತೆಯನ್ನು ನಿಖರವಾಗಿ ವಿಶ್ಲೇಷಿಸಲು ಎನ್‌ಡಿವಿಐ, ಎನ್‌ಡಿಡಬ್ಲ್ಯುಐ ಹಾಗೂ ಕೆಎಸ್‌ಎನ್‌ಎಂಡಿಸಿ ಮಳೆ ಆಧಾರಿತ ಉಪಗ್ರಹ ದತ್ತಾಂಶ ಬಳಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿಮಾ ಕಂಪನಿ, ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡವು ಬಾಧಿತ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರತ್ಯಕ್ಷ ಪರಿಶೀಲನೆ ನಡೆಸಿ ಶೀಘ್ರ ವರದಿ ಸಲ್ಲಿಸಲಿದೆ. ಬೆಳೆ ಕೊಯ್ಲು ಮುಕ್ತಾಯಗೊಳ್ಳುವ ಮುನ್ನವೇ ‘ಮಧ್ಯ ಋತು ಸಂಕಷ್ಟ’ ಪ್ರಕ್ರಿಯೆ ಪೂರ್ಣಗೊಳಿಸಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳ ಪ್ರಸ್ತುತ ಸ್ಥಿತಿಗತಿಯನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ. ಎನ್‌ಡಿವಿಐ ಹಾಗೂ ತೇವಾಂಶ ಸೂಚ್ಯಂಕ ಆಧಾರಿತ ಮಾಹಿತಿಯನ್ನು ಪರಿಶೀಲಿಸಿ, ‘ಮಧ್ಯ ಋತು ಸಂಕಷ್ಟ’ ಮಾರ್ಗಸೂಚಿಯಂತೆ ಸಕ್ರಿಯಗೊಳಿಸಬಹುದಾದ ಬೆಳೆ ವಿಮಾ ಘಟಕಗಳನ್ನು ಗುರುತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೃಷಿ ಇಲಾಖೆ ಕಂದಾಯ ಹಾಗೂ ವಿಮಾ ಕಂಪನಿಗಳೊಂದಿಗೆ ಸೇರಿ ಬೆಳೆ ಹಾನಿಯ ಪ್ರಮಾಣವನ್ನು ಸಮರ್ಪಕವಾಗಿ ಸಮೀಕ್ಷೆ ನಡೆಸಲಿದೆ. ಅರ್ಹ ರೈತರಿಗೆ ಯೋಜನೆಯ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮುಂಗಾರು ಬೆಳೆಗಳ ಪ್ರಸ್ತುತ ಸ್ಥಿತಿಗತಿ, ಬೆಳೆ ಹಾನಿಯ ಪ್ರಮಾಣ ಹಾಗೂ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗೆ ತಕ್ಷಣದ ಮಧ್ಯಂತರ ಪರಿಹಾರ ಒದಗಿಸುವ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಕೆಎಸ್‌ಎನ್‌ಎಂಡಿಸಿ ಪ್ರತಿನಿಧಿಗಳು ಹಾಗೂ ವಿಮಾ ಕಂಪನಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

“ಮಳೆ ಅಭಾವ ಅಥವಾ ದೀರ್ಘಕಾಲದ ಒಣಹವೆಯಿಂದ ಶೇ. ೫೦ಕ್ಕಿಂತ ಹೆಚ್ಚು ಬೆಳೆ ನಷ್ಟವಾಗಿರುವ ಸಾಧ್ಯತೆ ಇರುವ ಪ್ರದೇಶಗಳನ್ನು ನಿಖರವಾಗಿ ಗುರುತಿಸಬೇಕು. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮಾರ್ಗಸೂಚಿಯಂತೆ ಅರ್ಹ ರೈತರಿಗೆ ಶೇ. ೨೫ರಷ್ಟು ಮುಂಗಡ ಮಧ್ಯಂತರ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಹಾಗೂ ವಿಮಾ ಸಂಸ್ಥೆಗಳು ತಕ್ಷಣ ಜಂಟಿ ಕ್ಷೇತ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು.”

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

“ಕೃಷಿ ಇಲಾಖೆ ಹಾಗೂ ವಿಮಾ ಕಂಪನಿಯ ಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಅರ್ಹ ರೈತರು ಯೋಜನೆಯ ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ನೋಂದಾಯಿತ ಅರ್ಹ ರೈತರಿಗೆ ನಿಯಮಾನುಸಾರ ವಿಮಾ ಸೌಲಭ್ಯ ದೊರಕಿಸಲು ಇಲಾಖೆ ಬದ್ಧವಾಗಿದೆ.”

ಚೇತನಾ ಪಾಟೀಲ, ಜಂಟಿ ಕೃಷಿ ನಿರ್ದೇಶಕಿ

ಈದ್ ಮಿಲಾದ್ ಶಾಂತಿಯುತ ಆಚರಣೆಗೆ ಕರೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹ್ಮದ್ ಪೈಗಂಬರ್ ಅವರ ಜಯಂತಿ (ಈದ್ ಮಿಲಾದ್) ಶಾಂತಿ ಮತ್ತು ಸಹನೆಯ ಪ್ರತೀಕವಾಗಿದ್ದು, ಈದ್ ಮಿಲಾದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಹ್ಮದ್ ಪೈಗಂಬರ್ ಜಯಂತಿ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಭಾಗದ ಜನರು ಶಾಂತಿ, ಸೌಹಾರ್ದತೆಯಿಂದ ಬಾಳುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಸಣ್ಣಪುಟ್ಟ ವಿಚಾರಗಳಿಗೆ ಶಾಂತಿಯ ವಾತಾವರಣಕ್ಕೆ ಧಕ್ಕೆ ತರುವಂತಹ ಯಾವುದೇ ಘಟನೆಗಳು ನಡೆಯಬಾರದು. ಹಬ್ಬದ ಆಚರಣೆಗೆ ಪೊಲೀಸ್ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ. ಆದರೆ ಹಬ್ಬದ ನೆಪದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮುಸ್ಲಿಂ ಬಾಂಧವರು ಮಹ್ಮದ್ ಪೈಗಂಬರ್ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ ಯಾರೇ ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡುವ ಪ್ರಯತ್ನ ಮಾಡಿದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ಪಟ್ಟಣದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಹಿಂದೂ ಹಾಗೂ ಮುಸ್ಲಿಂ ಬಾಂಧವರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ ಕಾಪಾಡುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸಿಪಿಐ ಬಿ.ವಿ. ನ್ಯಾಮಗೌಡ ಹಾಗೂ ಪಿಎಸ್‌ಐ ನಾಗರಾಜ ಗಡಾದ ಮಾತನಾಡಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಹಿಂದೂ ಹಾಗೂ ಮುಸ್ಲಿಂ ಬಾಂಧವರು ಪರಸ್ಪರ ಸಹಕಾರದಿಂದ ಹಬ್ಬಗಳನ್ನು ಆಚರಿಸಬೇಕು. ಯಾವುದೇ ಕಾರಣಕ್ಕೂ ಶಾಂತಿ ಕದಡುವಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಹಿರಿಯರು, ಯುವಕರು ಹಾಗೂ ವಿವಿಧ ಸಂಘಟನೆಗಳು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಹಿರಿಯ ಮುಖಂಡ ಪೂರ್ಣಾಜಿ ಕರಾಟೆ, ಮೈನುದ್ದಿನ ಆಡೂರ, ಸಾಹೀಬ್‌ಜಾನ್ ಹವಾಲ್ದಾರ್, ಶರಣು ಗೋಡಿ, ಗಂಗಾಧರ ಮೆಣಸಿನಕಾಯಿ, ಅಂಜುಮನ್ ಸಂಸ್ಥೆ ಅಧ್ಯಕ್ಷ ಮುಕ್ತಾರಅಹ್ಮದ್ ಗದಗ, ಇಸ್ಮಾಯಿಲ್ ಆಡೂರ, ಭಾಷಾಸಾಬ ಮುಳಗುಂದ, ರಫೀಕ್ ಕಲ್ಬುರ್ಗಿ, ಫಿರ್ದೋಸ್ ಆಡೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಯುವಶಕ್ತಿ ಸಂಘಟನೆಯತ್ತ ಮಹತ್ವದ ಹೆಜ್ಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಯುವಕರನ್ನು ದೇಶದ ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಜಿಲ್ಲೆಯಲ್ಲಿ ೧೭೮ ‘ಭಾರತ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ೧೬ರಿಂದ ೩೫ ವರ್ಷದೊಳಗಿನ ಯುವಕ-ಯುವತಿಯರನ್ನು ಸಂಘಟಿಸಿ, ನಾಯಕತ್ವ ಗುಣ ಹಾಗೂ ದೇಶಪ್ರೇಮ ಬೆಳೆಸುವ ಜೊತೆಗೆ ಸಾಮಾಜಿಕ ಮತ್ತು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸುವ ಗುರಿ ಹೊಂದಲಾಗಿದೆ.

ನಗರದ ಜಿಲ್ಲಾಡಳಿತ ಭವನದ ಕೇಸ್ವಾನ್ ವಿಡಿಯೋ ಸಂವಾದ ಸಭಾಂಗಣದಲ್ಲಿ ನಡೆದ ‘ಭಾರತ ಜೋಡೋ ಯುವ ಸಂಘ’ಗಳ ಸ್ಥಾಪನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿದರು.

ಯುವಶಕ್ತಿಯು ದೇಶದ ಅತಿದೊಡ್ಡ ಸಂಪತ್ತು. ಅದನ್ನು ಸೃಜನಶೀಲ ಹಾಗೂ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸುವ ಮೂಲಕ ದೇಶದ ಅಭಿವೃದ್ಧಿಗೆ ವೇಗ ನೀಡಬೇಕು. ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ಪರಿಣಾಮಕಾರಿಯಾಗಿ ಸ್ಥಾಪಿಸಲು ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯಡಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಸಂಘಗಳನ್ನು ರಚಿಸಲಾಗುವುದು. ಪ್ರತಿ ಸಂಘಕ್ಕೆ ವಾರ್ಷಿಕ ₹೧೦ ಲಕ್ಷ ಅನುದಾನ ಲಭ್ಯವಾಗಲಿದೆ. ಜಿಲ್ಲೆಯಲ್ಲಿ ಈಗಾಗಲೇ ೩,೫೦೦ಕ್ಕೂ ಅಧಿಕ ಸದಸ್ಯರು ನೋಂದಣಿಯಾಗಿದ್ದು, ಒಟ್ಟು ೧೮ ಸಾವಿರ ಯುವಕ-ಯುವತಿಯರನ್ನು ಸದಸ್ಯರನ್ನಾಗಿ ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವುದು, ದೇಶಪ್ರೇಮದ ಭಾವನೆ ಮೂಡಿಸುವುದು ಹಾಗೂ ಅವರ ಶಕ್ತಿ ಮತ್ತು ಪ್ರತಿಭೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಲು ಸಂಘಗಳು ಉತ್ತಮ ವೇದಿಕೆಯಾಗಲಿವೆ. ಹೀಗಾಗಿ ಸಂಘಗಳ ಸ್ಥಾಪನೆ ಹಾಗೂ ಕಾರ್ಯನಿರ್ವಹಣೆಗೆ ಎಲ್ಲ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಸಂಘಗಳ ಉದ್ದೇಶ, ಕಾರ್ಯನಿರ್ವಹಣೆ, ಅನುದಾನದ ಬಳಕೆ ಹಾಗೂ ಮೇಲ್ವಿಚಾರಣೆ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಘಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ್ ಎಂ. ತುಂಬುರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

೧೫ ಸದಸ್ಯರ ಕಾರ್ಯಕಾರಿ ಸಮಿತಿ

ಸಂಘಗಳ ಕಾರ್ಯನಿರ್ವಹಣೆ ಹಾಗೂ ಅನುದಾನದ ಸಮರ್ಪಕ ಬಳಕೆಗಾಗಿ ೧೫ ಮಂದಿ ಸದಸ್ಯರ ಕಾರ್ಯಕಾರಿ ಸಮಿತಿ ರಚಿಸಲಾಗುವುದು. ಜಿಲ್ಲಾಧಿಕಾರಿಗಳು ಪದಾಧಿಕಾರಿಗಳನ್ನು ನೇಮಿಸಲಿದ್ದು, ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ, ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಮೇಲ್ವಿಚಾರಣಾ ಸಮಿತಿ ಸಂಘಗಳ ಚಟುವಟಿಕೆಗಳನ್ನು ಗಮನಿಸಲಿದೆ.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು: ಡಾ. ಪ್ರದೀಪ ಉಗಲಾಟ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದರಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೊರಹೊಮ್ಮುತ್ತಿರುವುದು ಶೈಕ್ಷಣಿಕ ಪ್ರಗತಿಯ ಸಂಕೇತವಾಗಿದೆ ಎಂದು ಗದಗ-ಬೆಟಗೇರಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ ಹೇಳಿದರು.

ತಾಲೂಕಿನ ಬೆಳಹೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಲಿಕಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಅಭಿನಂದಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದರ ಪರಿಣಾಮ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇತ್ತೀಚಿನ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಡಾ. ಪ್ರದೀಪ ಉಗಲಾಟ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಕೆ.ಎಸ್. ದಿಂಡಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಮುನ್ನಡೆಯಬೇಕು ಎಂದರು.

ಡಿಡಿಪಿಐ ಹಾಗೂ ಬಿಇಒ ಅವರ ಮಾರ್ಗದರ್ಶನದಲ್ಲಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಮುದಾಯ ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವವೂ ಅತ್ಯಂತ ಮುಖ್ಯವಾಗಿದೆ. ರೋಟರಿ ಕ್ಲಬ್ ಪದಾಧಿಕಾರಿಗಳು ಶಾಲೆಗೆ ಆಗಮಿಸಿ ಸಸಿ ನೆಡುವುದರ ಜೊತೆಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿರುವುದು ಅಭಿನಂದನೀಯ ಎಂದರು.

ಸಚೇತನ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ಹಾಗೂ ವಿವಿಧ ಎಫ್‌ಎಲ್‌ಎನ್‌ ಕಲಿಕಾ ಸ್ಪರ್ಧೆಗಳಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ನೋಟ್‌ಬುಕ್ ಹಾಗೂ ಪೆನ್ಸಿಲ್‌ಗಳನ್ನು ವಿತರಿಸಿ ಕಲಿಕೆಗೆ ಉತ್ತೇಜನ ನೀಡಲಾಯಿತು.

ಕನ್ನಡ ಶಬ್ದಗಳನ್ನು ಬಿಡಿಸುವ ಸ್ಪರ್ಧೆಯಲ್ಲಿ ರೋಹಿತ ಹುಲಕೋಟಿ, ಕಿರಣ ಶಿಶುವಿನಹಳ್ಳಿ ಹಾಗೂ ಸ್ಪೂರ್ತಿ ಪಕ್ಕೀರಗೌಡ್ರ ವಿಜೇತರಾದರು. ಮೂಲಕ್ರಿಯೆಗಳ ಲೆಕ್ಕ ಬಿಡಿಸುವ ಸ್ಪರ್ಧೆಯಲ್ಲಿ ನಿವೇದಿತಾ ನರಗುಂದ, ಸ್ನೇಹಾ ನೀರಲಗಿ ಹಾಗೂ ಸಾನ್ವಿ ಮಡಿವಾಳರ ಸ್ಥಾನ ಪಡೆದರು.

ಮಗ್ಗಿ ಹೇಳುವ ಸ್ಪರ್ಧೆಯಲ್ಲಿ ಶಾಂಭವಿ ಹುಲಕೋಟಿ, ತನ್ವೀರ್ ನದಾಫ್ ಹಾಗೂ ರೋಹಿತ ಭರಮನಗೌಡ್ರ ವಿಜೇತರಾದರು. ನಾಲ್ಕನೇ ತರಗತಿಯ ಕನ್ನಡ ಉಕ್ತಲೇಖನ ಸ್ಪರ್ಧೆಯಲ್ಲಿ ವೇದಾ ದೊಡ್ಡಗೌಡ್ರ, ಸಾನ್ವಿ ಚಲವಾದಿ ಹಾಗೂ ಕೀರ್ತಿ ಉಪ್ಪಾರ ಉತ್ತಮ ಸಾಧನೆ ಮಾಡಿದರು.

ಐದನೇ ತರಗತಿಯ ಉಕ್ತಲೇಖನ ಸ್ಪರ್ಧೆಯಲ್ಲಿ ಅನುಪಮ ಹುಲಕೋಟಿ, ದೇವೇಂದ್ರಗೌಡ ಮುದಿಗೌಡ್ರ ಹಾಗೂ ತೇಜಸ್ವಿನಿ ಚಲವಾದಿ ವಿಜೇತರಾದರು. ಮೂಲಕ್ರಿಯೆಗಳ ಲೆಕ್ಕ ಬಿಡಿಸುವ ಸ್ಪರ್ಧೆಯಲ್ಲಿ ಸಾಬಣ್ಣಸಾಬ ಹೊಂಬಳ, ಪಲ್ಲವಿ ಪಕ್ಕಿರಗೌಡ್ರ ಹಾಗೂ ಪಲ್ಲವಿ ಹುಲಕೋಟಿ ಸಾಧನೆ ಮಾಡಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ನೀಲಾ ಲಿಂಗನಾಯ್ಕರ, ಬಸಮ್ಮ ಕತ್ತಿ ಹಾಗೂ ಅನಿಸಾ ನದಾಫ್ ಸ್ಥಾನ ಪಡೆದರು. ಸಚೇತನ ಕಾರ್ಯಕ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ನೀಲಾ ಲಿಂಗನಾಯ್ಕರ ಸೇರಿದಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು.

ವೇದಿಕೆಯಲ್ಲಿ ರೋಟರಿ ಕ್ಲಬ್ ಉಪಾಧ್ಯಕ್ಷ ಸುರೇಶ ಕುಂಬಾರ, ಕಾರ್ಯದರ್ಶಿ ಅಕ್ಷಯ್ ಶೆಟ್ಟಿ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪತ್ತೇಸಾಬ ದೊಡ್ಡಮನಿ, ಸದಸ್ಯ ಪರಸಪ್ಪ ಹುಲಕೋಟಿ ಉಪಸ್ಥಿತರಿದ್ದರು.

ಶಾಲೆಯ ಶಿಕ್ಷಕರಾದ ಬಿ.ಎಂ. ಸೈಯದ್, ಮಂಜುನಾಥ ಜಕ್ಕಲಿ, ರುಕ್ಮಿಣಿ ಗುಳಗಂದಿ, ಸುಜಾತಾ ಧೋಳ, ಸುಮಾ ತಿಪ್ಪರಡ್ಡಿ, ಲಲಿತಾ ಚನ್ನಪ್ಪಗೌಡರ ಸೇರಿದಂತೆ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.