Home Blog

ಜನರ ಸೇವೆಯಲ್ಲೇ ಸರ್ಕಾರಿ ನೌಕರರ ಜೀವನ ಸಾರ್ಥಕ: ಡಾ. ಬಸವರಾಜ ಬಳ್ಳಾರಿ

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ನೌಕರರು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಅವರ ಕರ್ತವ್ಯಕ್ಕೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಹೇಳಿದರು.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಖಜಾನೆ ಇಲಾಖೆ ಹಾಗೂ ಅರಣ್ಯ ಇಲಾಖೆ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಎಸ್.ಎಚ್. ಬಾದನಟ್ಟಿ ಹಾಗೂ ಅರಣ್ಯ ಇಲಾಖೆಯ ಉಪವಲಯ ಅಧಿಕಾರಿ ಎನ್. ಜಯರಾಮ ಅವರ ಸೇವಾ ನಿವೃತ್ತಿ ಅಭಿನಂದನಾ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ. ಸಹನೆ, ಸೌಜನ್ಯ ಹಾಗೂ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ಗೌರವ ಮತ್ತು ಆತ್ಮತೃಪ್ತಿ ದೊರೆಯುತ್ತದೆ ಎಂದು ಹೇಳಿದರು.

ಅರಣ್ಯ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಎನ್. ಜಯರಾಮ ಅವರ ಪರಿಸರ ಸೇವೆಯನ್ನು ಶ್ಲಾಘಿಸಿದ ಅವರು, ತಮ್ಮ ಅಧಿಕಾರಾವಧಿಯಲ್ಲಿ ಲಕ್ಷಾಂತರ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಮನೆಯೇ ಸಸ್ಯ ಸಂಗ್ರಹಾಲಯದಂತಿದ್ದು, ಜಿಲ್ಲೆಯ ‘ಸಾಲುಮರದ ತಿಮ್ಮಕ್ಕ’ ಎಂದು ಅವರನ್ನು ಕರೆಯಬಹುದು ಎಂದು ಪ್ರಶಂಸಿಸಿದರು.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಜುಲೈ 5ರಂದು ಹಾವೇರಿಯಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ರವಿ ಎಲ್. ಗುಂಜಿಕರ್ ಮಾತನಾಡಿ, ಸರ್ಕಾರಿ ನೌಕರರ ಸಂಘವು ಕೇವಲ ವೇತನ ಮತ್ತು ಭತ್ಯೆಗಳಿಗಾಗಿ ಹೋರಾಡುವ ಸಂಘಟನೆಯಲ್ಲ; ನೌಕರರು ಹಾಗೂ ಅವರ ಕುಟುಂಬದ ಹಿತರಕ್ಷಣೆಗೆ ಸದಾ ಬದ್ಧವಾಗಿರುವ ಜವಾಬ್ದಾರಿಯುತ ವೇದಿಕೆಯಾಗಿದೆ ಎಂದು ಹೇಳಿದರು.

ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಕೆಲವರು ಪ್ರಾಮಾಣಿಕ ನೌಕರರಿಗೆ ಕಿರುಕುಳ ನೀಡುತ್ತಿರುವುದು ಆತಂಕಕಾರಿ. ಇಂತಹ ಸಂದರ್ಭಗಳಲ್ಲಿ ಸಂಘಟನೆ ಸದಾ ನೌಕರರ ಪರವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು.

ಜಿಲ್ಲಾ ಖಜಾನೆ ಉಪನಿರ್ದೇಶಕ ಹರಿನಾಥ ಬಾಬು ಮಾತನಾಡಿ, ಉದ್ಯೋಗ ಸಿಗುವುದು ಅದೃಷ್ಟವಾದರೆ, ಗೌರವಯುತ ನಿವೃತ್ತಿ ಪಡೆಯುವುದು ಅದಕ್ಕಿಂತ ದೊಡ್ಡ ಸಾಧನೆ. ಸರ್ಕಾರಿ ಕಚೇರಿಗೆ ಬರುವ ಪ್ರತಿಯೊಬ್ಬ ನಾಗರಿಕನು ತನ್ನ ಕೆಲಸ ಶೀಘ್ರ ಆಗಬೇಕು ಮತ್ತು ಗೌರವ ಸಿಗಬೇಕು ಎಂಬ ನಿರೀಕ್ಷೆಯೊಂದಿಗೆ ಬರುತ್ತಾನೆ. ಆ ನಿರೀಕ್ಷೆ ಈಡೇರಿಸಿದಾಗ ಮಾತ್ರ ಸರ್ಕಾರಿ ಸೇವೆಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸೇವಾ ನಿವೃತ್ತರಾದ ಎಸ್.ಎಚ್. ಬಾದನಟ್ಟಿ ಮತ್ತು ಎನ್. ಜಯರಾಮ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಖಜಾನೆ ಇಲಾಖೆಯ ದೇವಪ್ಪ ನಾಯಕ್ ಹಾಗೂ ತೋಟಗಾರಿಕೆ ಇಲಾಖೆಯ ವೀರಪ್ಪ ಕುಂಬಾರ ಅವರನ್ನೂ ಅಭಿನಂದಿಸಲಾಯಿತು.

ಕ್ರೀಡಾ ಕಾರ್ಯದರ್ಶಿ ಐ.ಎ. ಗಾಡಗೋಳಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಮುತ್ತು ವೈ. ಮಲಕಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಮೀರ ನಾಯಕ ವಂದಿಸಿದರು.

ಕಾರ್ಯಕ್ರಮದಲ್ಲಿ ನರಗುಂದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ, ಜಿಲ್ಲಾ ಉಪಾಧ್ಯಕ್ಷ ಎಸ್.ಎಸ್. ಪಾರ್ವತಿಮಠ, ಜಿಲ್ಲಾ ನಿರ್ದೇಶಕ ರಾಜಕುಮಾರ ಸೊಪ್ಪಡ್ಲ, ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಎಫ್.ಜೆ. ದಲಬಂಜನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ಕುಟುಂಬ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಸರ್ಕಾರಿ ಸೇವೆ ಎಂದರೆ ಕೇವಲ ಹುದ್ದೆಯಲ್ಲ, ಜನರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ. ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಸೇವೆ ಸಲ್ಲಿಸಿದಾಗಲೇ ನೌಕರನ ಜೀವನ ಸಾರ್ಥಕವಾಗುತ್ತದೆ.”

– ಡಾ. ಬಸವರಾಜ ಬಳ್ಳಾರಿ

ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ಪ್ರತಿ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿರಲಿ: ಚಂದ್ರಶೇಖರ ಕಂದಕೂರ

ವಿಜಯಸಾಕ್ಷಿ ಸುದ್ದಿ, ರೋಣ: ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ರೋಣದಲ್ಲಿ ಜಾಗೃತಿ ರ‍್ಯಾಲಿ ಹಾಗೂ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ನಗರದ ಸಿದ್ದಾರೂಢ ದೇವಸ್ಥಾನದ ಆವರಣದಿಂದ ಆರಂಭವಾದ ಜಾಗೃತಿ ರ‍್ಯಾಲಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ನಾಲ್ಕು ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸ್ವೀಪ್ ಸಮಿತಿ ಸದಸ್ಯರು ಭಾಗವಹಿಸಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿದರು. ಬಳಿಕ ಪೋತರಾಜನಕಟ್ಟಿ ಬಳಿ ಮಾನವ ಸರಪಳಿ ನಿರ್ಮಿಸಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿದರು.

ಈ ವೇಳೆ ಮಾತನಾಡಿದ ಚಂದ್ರಶೇಖರ ಬಿ. ಕಂದಕೂರ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ವಿಶೇಷ ಪರಿಷ್ಕರಣೆ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಬೇಕು. ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ಅಳಿಸುವಿಕೆ ಸೇರಿದಂತೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪಡೆಯುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ಹೊಸದಾಗಿ 18 ವರ್ಷ ಪೂರೈಸಿದ ಯುವಕರು ಹಾಗೂ ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದ ಅರ್ಹರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿಗಳು, ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ದೇವರಾಜ ಸಜ್ಜನಶೆಟ್ಟರ, ತಾಲೂಕು ಯೋಜನಾಧಿಕಾರಿ ಸಿ.ಎಸ್. ನೀಲಗುಂದ, ಕ್ಷೇತ್ರ ಶಿಕ್ಷಣಾಧಿಕಾರಿ ದಯಾನಂದ ಯಾವಗಲ್, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎ. ಫಣಿಬಂಧ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸ್ವೀಪ್ ಸಮಿತಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

“ಪ್ರತಿ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನಿಖರ ಮತದಾರರ ಪಟ್ಟಿಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರವೇ ಚುನಾವಣಾ ಪ್ರಕ್ರಿಯೆಯ ಯಶಸ್ಸಿನ ಮೂಲಾಧಾರ.”

– ಚಂದ್ರಶೇಖರ ಬಿ. ಕಂದಕೂರ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ

ಒಂದೇ ಶಸ್ತ್ರಚಿಕಿತ್ಸೆಯಲ್ಲಿ ಕಿಡ್ನಿ–ಪ್ಯಾಂಕ್ರಿಯಾಸ್ ಕಸಿ: ಗದಗದ ಯುವಕನಿಗೆ ಹೊಸ ಜೀವನ

ವಿಜಯಸಾಕ್ಷಿ ಸುದ್ದಿ, ಗದಗ: ಹಲವು ವರ್ಷಗಳಿಂದ ಟೈಪ್–1 ಮಧುಮೇಹ ಹಾಗೂ ಅಂತಿಮ ಹಂತದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಗದಗದ ಯುವಕ ಮೇಘರಾಜ್ ಮಾರುತಿ ಕಟ್ಟಿಮನಿ ಅವರಿಗೆ ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯ ತಜ್ಞ ವೈದ್ಯರು ಒಂದೇ ಶಸ್ತ್ರಚಿಕಿತ್ಸೆಯಲ್ಲಿ ಕಿಡ್ನಿ ಮತ್ತು ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಸ್) ಕಸಿಯನ್ನು ಯಶಸ್ವಿಯಾಗಿ ನೆರವೇರಿಸಿ ಹೊಸ ಜೀವನ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಕಸಿ ತಜ್ಞ ಡಾ. ರೊಮ್ಮೆಲ್ ಎಸ್. ಹಾಗೂ ಹೆಪಟಾಲಜಿ ಮತ್ತು ಇಂಟಿಗ್ರೇಟೆಡ್ ಲಿವರ್ ಕೇರ್ ವಿಭಾಗದ ಹಿರಿಯ ಸಲಹೆಗಾರ ಡಾ. ನವೀನ್ ಗುಂಜೂ, ಸುಮಾರು 15 ವರ್ಷಗಳಿಂದ ಟೈಪ್–1 ಮಧುಮೇಹದಿಂದ ಬಳಲುತ್ತಿದ್ದ ಮೇಘರಾಜ್ ಅವರ ಆರೋಗ್ಯ ಕ್ರಮೇಣ ಹದಗೆಟ್ಟು ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿಸಿದರು.

ರಕ್ತದಲ್ಲಿನ ಸಕ್ಕರೆ ಮಟ್ಟದ ಏರಿಳಿತ, ಹೃದಯ ಹಾಗೂ ನರ ಸಂಬಂಧಿತ ಸಮಸ್ಯೆಗಳ ನಡುವೆಯೂ ವೈದ್ಯರ ತಂಡ ಶಸ್ತ್ರಚಿಕಿತ್ಸೆಗೆ ಮುನ್ನ ಅವರ ಆರೋಗ್ಯವನ್ನು ಸ್ಥಿರಗೊಳಿಸಿತು. ಮೂರು–ನಾಲ್ಕು ತಿಂಗಳ ಕಾಯುವಿಕೆಯ ಬಳಿಕ ಸುಮಾರು 6ರಿಂದ 8 ಗಂಟೆಗಳ ಅವಧಿಯ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ ಎರಡೂ ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಯಿತು.

ಶಸ್ತ್ರಚಿಕಿತ್ಸೆಯಾಗಿ ಆರು ತಿಂಗಳು ಕಳೆದಿದ್ದು, ಮೇಘರಾಜ್ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಈಗ ಅವರಿಗೆ ಡಯಾಲಿಸಿಸ್, ಇನ್ಸುಲಿನ್ ಚುಚ್ಚುಮದ್ದು ಅಥವಾ ರಕ್ತದೊತ್ತಡದ ಹಲವು ಮಾತ್ರೆಗಳ ಅಗತ್ಯವಿಲ್ಲ. ಕಸಿ ಮಾಡಿದ ಕಿಡ್ನಿ ಹಾಗೂ ಪ್ಯಾಂಕ್ರಿಯಾಸ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರು ಆರೋಗ್ಯಕರ ಹಾಗೂ ಸ್ವತಂತ್ರ ಜೀವನ ನಡೆಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದರು.

“ಟೈಪ್–1 ಮಧುಮೇಹದಿಂದ ಕಿಡ್ನಿ ವೈಫಲ್ಯಕ್ಕೆ ತುತ್ತಾದ ಆಯ್ದ ರೋಗಿಗಳಿಗೆ ಕಿಡ್ನಿ ಮತ್ತು ಪ್ಯಾಂಕ್ರಿಯಾಸ್ ಜಂಟಿ ಕಸಿಯೇ ಅತ್ಯುತ್ತಮ ಚಿಕಿತ್ಸೆ. ಇದು ಜೀವಿತಾವಧಿ ಹೆಚ್ಚಿಸುವುದರ ಜೊತೆಗೆ ಡಯಾಲಿಸಿಸ್ ಮತ್ತು ಇನ್ಸುಲಿನ್ ಮೇಲಿನ ಅವಲಂಬನೆಯನ್ನು ಸಂಪೂರ್ಣವಾಗಿ ನಿವಾರಿಸುತ್ತದೆ.”

– ಡಾ. ರೊಮ್ಮೆಲ್ ಎಸ್.

ಭಾವನಾತ್ಮಕ ಕಥೆಯೊಂದಿಗೆ ಗೆದ್ದ ‘ಕಾಲಘಟ್ಟ’; ಪ್ರಕಾಶ್ ಅಂಬಳೆ ನಿರ್ದೇಶನಕ್ಕೆ ಭಾರೀ ಪ್ರಶಂಸೆ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಭಾವನಾತ್ಮಕ ಕಥೆಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್. ಮಹೇಂದರ್ ಹಾಗೂ ಜೋಗಿ ಪ್ರೇಮ್ ಅವರ ಸಾಲಿಗೆ ನಿರ್ದೇಶಕ ಕೆ. ಪ್ರಕಾಶ್ ಅಂಬಳೆ ಹೊಸ ಭರವಸೆಯಾಗಿ ಹೊರಹೊಮ್ಮಿದ್ದಾರೆ ಎಂಬ ಮಾತು ಪ್ರೇಕ್ಷಕರ ವಲಯದಲ್ಲಿ ಕೇಳಿಬರುತ್ತಿದೆ.

ನಿರ್ಮಾಪಕ ಲಯನ್ ಚಿಕ್ಕೇಗೌಡ ಟಿ.ಸಿ. ತಳದವಾದಿ ಅವರ ನಿರ್ಮಾಣದ ‘ಕಾಲಘಟ್ಟ’ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜನಪದ ಸೊಗಡು, ಮಣ್ಣಿನ ಪರಿಮಳ, ಕುಟುಂಬದ ಬಾಂಧವ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಆಧರಿಸಿದ ಕಥಾಹಂದರ ಪ್ರೇಕ್ಷಕರ ಮನಸ್ಸಿಗೆ ತಟ್ಟಿದ್ದು, ವಿಶೇಷವಾಗಿ ಚಿತ್ರದ ಭಾವನಾತ್ಮಕ ದೃಶ್ಯಗಳು ಹಾಗೂ ಕ್ಲೈಮ್ಯಾಕ್ಸ್ ಅನೇಕ ಪ್ರೇಕ್ಷಕರನ್ನು ಭಾವುಕರನ್ನಾಗಿಸುತ್ತಿವೆ.

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಪ್ರತಿಭೆ ಕೆ. ಪ್ರಕಾಶ್ ಅಂಬಳೆ, ಕನ್ನಡ ಮಣ್ಣಿನ ಕಥೆಯನ್ನು ವಾಣಿಜ್ಯ ಅಂಶಗಳೊಂದಿಗೆ ಸಮತೋಲನವಾಗಿ ತೆರೆಗೆ ತಂದಿರುವುದು ಚಿತ್ರದ ವಿಶೇಷತೆ ಎನ್ನಲಾಗುತ್ತಿದೆ. ಸಂಸ್ಕೃತಿ, ಪರಂಪರೆ ಹಾಗೂ ಕುಟುಂಬದ ಮೌಲ್ಯಗಳನ್ನು ಕಥೆಯಲ್ಲಿ ಅಚ್ಚುಕಟ್ಟಾಗಿ ಹೆಣೆದಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಚಿತ್ರದ ನಿರ್ಮಾಪಕ ಲಯನ್ ಚಿಕ್ಕೇಗೌಡ ಟಿ.ಸಿ. ತಳದವಾದಿ, ಕಥೆಯ ಗುಣಮಟ್ಟಕ್ಕೆ ಯಾವುದೇ ರಾಜಿ ಮಾಡಿಕೊಳ್ಳದೆ ಚಿತ್ರ ನಿರ್ಮಾಣಕ್ಕೆ ಬೆಂಬಲ ನೀಡಿದ್ದು, ಚಿತ್ರದ ಯಶಸ್ಸಿನಲ್ಲಿ ಅವರ ಪಾತ್ರವೂ ಮಹತ್ವದ್ದಾಗಿದೆ. ಕಲಾವಿದರು ಹಾಗೂ ತಂತ್ರಜ್ಞರ ಸಮರ್ಪಕ ಕೆಲಸವೂ ಚಿತ್ರದ ಬಲವಾಗಿ ಪರಿಣಮಿಸಿದೆ.

ಕುಟುಂಬ ಸಮೇತ ವೀಕ್ಷಿಸಬಹುದಾದ ಭಾವನಾತ್ಮಕ ಚಿತ್ರವಾಗಿ ‘ಕಾಲಘಟ್ಟ’ ಹೊರಹೊಮ್ಮಿದ್ದು, ಪ್ರೇಕ್ಷಕರ ಜೊತೆಗೆ ಚಿತ್ರರಂಗದ ವಲಯ ಹಾಗೂ ಮಾಧ್ಯಮಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಒಗ್ಗಟ್ಟೇ ವೀರಶೈವ–ಲಿಂಗಾಯತರ ಮಹಾಶಕ್ತಿ: ರಂಭಾಪುರಿ ಶ್ರೀ

ವಿಜಯಸಾಕ್ಷಿ ಸುದ್ದಿ, ಗದಗ: ವೀರಶೈವ–ಲಿಂಗಾಯತ ಸಮಾಜದ ಶಕ್ತಿ ಅಪಾರವಾಗಿದ್ದು, ಸಮಾಜದ ವಿವಿಧ ಸಂಘಟನೆಗಳು ಪರಸ್ಪರ ಸಹಕಾರ, ಸೌಹಾರ್ದತೆ ಹಾಗೂ ಸಮನ್ವಯದಿಂದ ಒಂದಾಗಿ ಕಾರ್ಯನಿರ್ವಹಿಸಿದರೆ ಸಮಾಜದ ಅಭ್ಯುದಯಕ್ಕೆ ಹೊಸ ದಿಕ್ಕು ದೊರೆಯಲಿದೆ ಎಂದು ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಶ್ರೀ ಶ್ರೀ ಶ್ರೀ 1008 ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಗದಗ ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಮಾಂಗಲ್ಯ ಮಂದಿರದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ‘ಶ್ರೀ ಶಿವರಂಭಾಪುರೀಶ್ವರ ಸಭಾಂಗಣ’ವನ್ನು ಗುರುವಾರ ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದ ಅವರು, ‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಧ್ಯೇಯದೊಂದಿಗೆ ನಿರ್ಮಿಸಿರುವ ಈ ಸಭಾಂಗಣ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಚಟುವಟಿಕೆಗಳ ಕೇಂದ್ರವಾಗಿ ಸಮಾಜದಲ್ಲಿ ಏಕತೆ ಮತ್ತು ಸದ್ಭಾವನೆ ಬೆಳೆಸಲಿ ಎಂದು ಹಾರೈಸಿದರು.

ಸಭಾಂಗಣ ನಿರ್ಮಾಣದ ಹಿನ್ನೆಲೆಯನ್ನು ವಿವರಿಸಿದ ಶ್ರೀಗಳು, 1975-76ರಲ್ಲಿ ತ್ರಿಕಾಲ ವಂದನೀಯ ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಮಾಜಿ ಸಚಿವ ಕೆ.ಎಚ್. ಪಾಟೀಲ ಅವರ ಸಹಕಾರದಿಂದ ಮಾಂಗಲ್ಯ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿತ್ತು. ಬಳಿಕ ಕಾಮಗಾರಿ ಸ್ಥಗಿತಗೊಂಡಿದ್ದರೂ, 1992ರಲ್ಲಿ ಪೀಠಾರೋಹಣದ ನಂತರ ಭಕ್ತರ ಸಹಕಾರದಿಂದ ಮತ್ತೆ ಆರಂಭಗೊಂಡಿತು ಎಂದು ತಿಳಿಸಿದರು.

ಬಸಣ್ಣ ಮಲ್ಲಾಡದ ಅವರ ಮುಂದಾಳತ್ವದಲ್ಲಿ ಸುಮಾರು ಒಂದೂವರೆ ವರ್ಷದಲ್ಲಿ 75 ಲಕ್ಷದಿಂದ 1 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಂಗಲ್ಯ ಮಂದಿರ ನಿರ್ಮಾಣಗೊಂಡಿದ್ದು, ಇದೀಗ ಭಕ್ತರ ಅನುಕೂಲಕ್ಕಾಗಿ ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ‘ಶ್ರೀ ಶಿವರಂಭಾಪುರೀಶ್ವರ ಸಭಾಂಗಣ’ ನಿರ್ಮಿಸಲಾಗಿದೆ ಎಂದು ಹೇಳಿದರು. ವೀರಗಂಗಾಧರ ಜಗದ್ಗುರುಗಳ ಕಾವ್ಯನಾಮ ‘ಶಿವರಂಭಾಪುರಿ’ ಆಧರಿಸಿ ಸಭಾಂಗಣಕ್ಕೆ ಈ ಹೆಸರು ನಾಮಕರಣ ಮಾಡಲಾಗಿದೆ ಎಂದರು.

ಮಾರ್ಕೆಟ್ ಸಮಿತಿಯಿಂದ ಪಡೆದ 30×120 ಅಡಿ ಜಾಗದಲ್ಲಿ ಆಧುನಿಕ ಸೌಲಭ್ಯಗಳಿರುವ ಕೊಠಡಿಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗಿದ್ದು, ಅದರ ಜವಾಬ್ದಾರಿಯನ್ನು ಇಂಜಿನಿಯರ್ ಅಮರನಾಥ ಸೋಮಣ್ಣ ಮಲ್ಲಾಡದ ಅವರಿಗೆ ವಹಿಸಲಾಗುವುದು ಎಂದು ತಿಳಿಸಿದರು.

ವೀರಶೈವ–ಲಿಂಗಾಯತ ಸಮಾಜದಲ್ಲಿರುವ ಶಕ್ತಿಯನ್ನು ವಿಭಜಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಅಂತಹ ಪ್ರಯತ್ನಗಳಿಗೆ ಅವಕಾಶ ನೀಡದೆ ಎಲ್ಲ ಸಂಘಟನೆಗಳು ಮುಷ್ಟಿಯಂತೆ ಒಂದಾಗಿ ಸಮಾಜದ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕು. ಪಂಚಪೀಠಗಳ ವಿಚಾರದಲ್ಲೂ ಭಕ್ತರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮೂಲ ವಾಹಿನಿಯಲ್ಲಿ ಒಂದಾಗಿ ಸಮಾಜದ ಶ್ರೇಯಸ್ಸಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಕಾಶಿ ಪೀಠದ ನೂತನ ಜಗದ್ಗುರುಗಳು ಆಷಾಢ ಮಾಸದ ವಿಶೇಷ ಪೂಜೆಯನ್ನು ಇದೇ ಮಾಂಗಲ್ಯ ಮಂದಿರದಲ್ಲಿ ಐದು ದಿನಗಳ ಕಾಲ ನೆರವೇರಿಸಲಿದ್ದು, ಮದುವೆ ಕಾರ್ಯಕ್ರಮಗಳಿಲ್ಲದ ದಿನಗಳಲ್ಲಿ ಪಂಚಪೀಠಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಮಂದಿರವನ್ನು ಮೀಸಲಿಡಲಾಗುವುದು ಎಂದು ಘೋಷಿಸಿದರು.

ಕಾರ್ಯಕ್ರಮದಲ್ಲಿ ಸುಳ್ಳದ ಪಂಚಗ್ರಹ ಮಠದ ಪೂಜ್ಯ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ನರಸಾಪುರ–ಕದಾಂಪೂರದ ಪೂಜ್ಯ ವೀರಭದ್ರೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಡಾ. ರಾಜಗುರು ಗುರುಸ್ವಾಮಿ ಕಲಕೇರಿ, ದುಂಡಪ್ಪ ಮಲ್ಲಾಡದ, ಬಸವಣ್ಣೆಪ್ಪ ಪುರದ, ಚಂದ್ರು ಬಾಳಿಹಳ್ಳಿಮಠ, ರಾಜಣ್ಣ ಮಲ್ಲಾಡದ, ಮಂಜುನಾಥ ಬೇಲೇರಿ, ಮಂಜುನಾಥ ಅಬ್ಬಿಗೇರಿ, ಡಾ. ಶ್ರೀಶೈಲಪ್ಪ ಮಲ್ಲಾಡದ, ಸುರೇಶ ಅಬ್ಬಿಗೇರಿ, ಅಮರನಾಥ ಮಲ್ಲಾಡದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.

“ವೀರಶೈವ–ಲಿಂಗಾಯತ ಸಮಾಜದ ಶಕ್ತಿ ಅಪಾರ. ಸಂಘಟನೆಗಳು ಭಿನ್ನಾಭಿಪ್ರಾಯ ಮರೆತು ಒಂದಾದರೆ ಸಮಾಜದ ಅಭಿವೃದ್ಧಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.”

— ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು

ಗ್ರಾಮ ಪಂಚಾಯಿತಿ ಮೇಲೆ ಹರಿದ ರಾಷ್ಟ್ರಧ್ವಜ ಹಾರಾಟ: ಗ್ರಾಮಸ್ಥರ ಆಕ್ರೋಶ

ಗದಗ: ಹರಿದ ರಾಷ್ಟ್ರಧ್ವಜವನ್ನು ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಹಾರಿಸಿದ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಜ್ಜೂರು ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಾಗೂ ರೈತ ಸಂಘದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರಿದ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಈ ನಿರ್ಲಕ್ಷ್ಯಕ್ಕೆ ಕಾರಣರಾದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಘಟನೆ ತಿಳಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ರೈತ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಪಿಡಿಒ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜದಂತಹ ಗೌರವದ ಸಂಕೇತದ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಧ್ವಜಕ್ಕೆ ಅವಮಾನವಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆ: ಮಂಗಳವಾರದಿಂದ ಕ್ಲೌಡ್ ಸೀಡಿಂಗ್ ಆರಂಭ!

ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರೈತರ ನೆರವಿಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ.

ಮಂಗಳವಾರದಿಂದ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.

ಹಾವೇರಿ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಎಂಟು ತಾಲೂಕುಗಳ ಬಹುತೇಕ ರೈತರು ಕೃಷಿಯನ್ನೇ ಅವಲಂಬಿಸಿದ್ದಾರೆ. ಆದರೆ ಈ ಬಾರಿ ಮುಂಗಾರು ಆರಂಭದಲ್ಲಿ ಒಂದೇ ಬಾರಿ ಮಳೆಯಾಗಿದ್ದು, ನಂತರ ಮಳೆ ಕೈಕೊಟ್ಟಿದೆ. ಪರಿಣಾಮ ಹಲವು ಕಡೆ ಬಿತ್ತನೆ ಮಾಡಿದ ಬೀಜ ಮೊಳಕೆಯೊಡೆಯದೆ ಉಳಿದರೆ, ಕೆಲವೆಡೆ ಮೊಳಕೆಯೊಡೆದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿವೆ.

ಬ್ಯಾಡಗಿ ಹಾಗೂ ಹಾನಗಲ್ ಸೇರಿದಂತೆ ಹಲವು ಭಾಗಗಳಲ್ಲಿ ರೈತರು ಬಿತ್ತನೆ ಮಾಡಿದ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಮೋಡ ಬಿತ್ತನೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಮಳೆಗಾಗಿ ದೇವರ ಮೊರೆ ಹೋಗಿ ವಿಶೇಷ ಪೂಜೆ, ಕಪ್ಪೆ ಮದುವೆ ಸೇರಿದಂತೆ ವಿವಿಧ ಆಚರಣೆಗಳನ್ನು ಸಹ ರೈತರು ನಡೆಸಿದ್ದಾರೆ.

ರೈತರ ಸಂಕಷ್ಟವನ್ನು ಮನಗಂಡು ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದಲ್ಲಿ ಮಂಗಳವಾರದಿಂದ ಮೋಡ ಬಿತ್ತನೆ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೇ ಸಂಬಂಧಿತ ಇಲಾಖೆಯಿಂದ ಅನುಮತಿ ದೊರೆತಿದ್ದು, ಜಿಲ್ಲೆಯ ಆರು ಮಂದಿ ಶಾಸಕರು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಪ್ರಕಾಶ್ ಕೋಳಿವಾಡ ಅವರ ಸ್ವಂತ ವಿಮಾನದ ಮೂಲಕವೇ ಮೋಡ ಬಿತ್ತನೆ ನಡೆಸಲಾಗುತ್ತದೆ. ಈ ಕಾರ್ಯಕ್ಕೆ ಪ್ರತಿ ಗಂಟೆಗೆ ಸುಮಾರು ₹15 ಲಕ್ಷ ವೆಚ್ಚವಾಗಲಿದ್ದು, ಅದನ್ನು ಜಿಲ್ಲೆಯ ಆರು ಕ್ಷೇತ್ರಗಳ ಶಾಸಕರು ತಮ್ಮ ಸ್ವಂತ ಖರ್ಚಿನಲ್ಲಿ ಭರಿಸಲು ಮುಂದಾಗಿದ್ದಾರೆ.

ಈ ಹಿಂದೆ ಬರ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಕೂಡ ಪ್ರಕಾಶ್ ಕೋಳಿವಾಡ ಅವರು ಅನುಮತಿ ಪಡೆದು ಮೋಡ ಬಿತ್ತನೆ ನಡೆಸಿದ್ದರು.

 

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಅರ್ಹ ಮತದಾರರು ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯೇ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಗಳ ಸಹಯೋಗದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಶುಕ್ರವಾರ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ಇಪ್ಪತ್ತು ವರ್ಷಗಳಿಗೊಮ್ಮೆ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸುವ ಪ್ರಕ್ರಿಯೆ ನಡೆಯುತ್ತದೆ. ಈ ಬಾರಿ 2026ರ ವಿಶೇಷ ಪರಿಷ್ಕರಣೆಯಡಿ ಈಗಿರುವ ಮತದಾರರ ಮಾಹಿತಿಯನ್ನು ದೃಢೀಕರಿಸುವ ಜೊತೆಗೆ ಹೊಸ ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಯುವಜನರು ತಮ್ಮ ಕುಟುಂಬದ ಸದಸ್ಯರು ಹಾಗೂ ಪರಿಚಿತರ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಎಂಬುದನ್ನು ಪರಿಶೀಲಿಸಿ, ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಪ್ರಕ್ರಿಯೆ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಎ.ಎ. ಕಂಬಾಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಚುನಾವಣೆಗಳ ಯಶಸ್ಸಿಗೆ ನಿಖರ ಮತದಾರರ ಪಟ್ಟಿಯೇ ಮೂಲಾಧಾರವಾಗಿದೆ. ಈ ಬಾರಿ ಸಮಗ್ರ ಪರಿಶೀಲನೆಯ ಮೂಲಕ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮುನ್ಸಿಪಲ್ ಹೈಸ್ಕೂಲ್‌ನಿಂದ ಆರಂಭವಾದ ಜಾಗೃತಿ ಜಾಥಾ ಗಾಂಧಿ ಸರ್ಕಲ್, ಮಹೇಂದ್ರಕರ ಸರ್ಕಲ್, ಟಾಂಗಾ ಕೂಟ, ಬಸವೇಶ್ವರ ಸರ್ಕಲ್, ಜೋಡು ಮಾರುತಿ ರಸ್ತೆ ಮೂಲಕ ಮುಳಗುಂದ ನಾಕಾದವರೆಗೆ ಸಂಚರಿಸಿತು. ಎನ್‌ಸಿಸಿ, ಸ್ಕೌಟ್ಸ್-ಗೈಡ್ಸ್, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿಡಿಪಿಐ ಆರ್.ಎಸ್. ಬುರಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಸಾರ್ವಜನಿಕರ ಸಹಕಾರದಿಂದ ಮಾತ್ರ ದೋಷರಹಿತ ಹಾಗೂ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಾಧ್ಯ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು

ಸಹಕಾರವೇ ರೈತರ ಸಮೃದ್ಧಿಯ ಹೆಬ್ಬಾಗಿಲು: ಅಶೋಕಪ್ಪ ಯಾವಗಲ್

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ರೈತರ ಆದಾಯ, ಸ್ವಾವಲಂಬನೆ ಹಾಗೂ ಉದ್ಯೋಗ ವೃದ್ಧಿಗೆ ಸಹಕಾರ ಚಳವಳಿ ಮತ್ತಷ್ಟು ಬಲಗೊಳ್ಳಬೇಕಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಪ್ಪ ಯಾವಗಲ್ ಹೇಳಿದರು.

ಜಕ್ಕಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್, ಧಾರವಾಡ ಹಾಲು ಒಕ್ಕೂಟ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಹಕಾರ ಸಚಿವಾಲಯದ ಐದು ವರ್ಷಗಳ ಸಂಭ್ರಮದ ಅಂಗವಾಗಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಸಿಸಿ ಬ್ಯಾಂಕ್‌ನ ಮಾಜಿ ನಿರ್ದೇಶಕ ಸಿ.ಕೆ. ಮಾಳಶೆಟ್ಟಿ ಬ್ಯಾಂಕ್‌ನ ಕೃಷಿ ಸಾಲ, ಉಳಿತಾಯ ಖಾತೆ, ಠೇವಣಿ ಹಾಗೂ ವಿವಿಧ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೋಣ ತಾಲೂಕು ವೈದ್ಯಾಧಿಕಾರಿ ಡಾ. ಪಿ.ಎಂ. ಕಮತಿ ಮತ್ತು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ಕೆ.ವಿ. ಹಾದಿಮನಿ ಆರೋಗ್ಯಕರ ಜೀವನಶೈಲಿ, ಹೃದಯಾಘಾತ ತಡೆ ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ಅರಿವು ಮೂಡಿಸಿದರು.

ಕೆಸಿಸಿ ಬ್ಯಾಂಕ್ ವ್ಯವಸ್ಥಾಪಕ ವಿ.ಎಸ್. ಪಾಟೀಲ ಬ್ಯಾಂಕಿಂಗ್ ಸೇವೆಗಳು ಹಾಗೂ ಡಿಜಿಟಲ್ ಸೌಲಭ್ಯಗಳನ್ನು ವಿವರಿಸಿದರೆ, ಧಾರವಾಡ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಜಿ.ಸಿ. ಸಾಲೋಟಿಮಠ ಹಾಲು ಉತ್ಪಾದಕರಿಗೆ ದೊರೆಯುವ ಪ್ರೋತ್ಸಾಹಧನ, ವಿಮೆ ಹಾಗೂ ಅನುದಾನಿತ ಯೋಜನೆಗಳ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಶಿವನಾಗಪ್ಪ ಜಂಬೂನಾಥ ದೊಡ್ಡಮೇಟಿ, ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಮುಧೋಳ ಸೇರಿದಂತೆ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ರೈತರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

“ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ಸಾಕಾರಗೊಳ್ಳಬೇಕಾದರೆ ರೈತರು ಮತ್ತು ಸಹಕಾರ ಸಂಘಗಳು ಪರಸ್ಪರ ಕೈಜೋಡಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಬೇಕು.”

ಅಶೋಕಪ್ಪ ಯಾವಗಲ್

ಆಶ್ರಮದ ಪಾವಿತ್ರ್ಯಕ್ಕೆ ಧಕ್ಕೆ ಬಂದರೆ ಸುಮ್ಮನಿರುವುದಿಲ್ಲ: ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮವು ತ್ರಿಕಾಲಜ್ಞಾನಿ ಹಾನಗಲ್ ಕುಮಾರೇಶ್ವರರ ಕನಸಿನ ಕೂಸಾಗಿದ್ದು, ಅದರ ಪಾವಿತ್ರ್ಯ, ಪರಂಪರೆ ಮತ್ತು ಮೂಲ ತತ್ವಗಳಿಗೆ ಯಾವುದೇ ಧಕ್ಕೆ ಬರದಂತೆ ಎಲ್ಲರೂ ಜಾಗರೂಕರಾಗಬೇಕು ಎಂದು ಶಿರಹಟ್ಟಿಯ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆದ ಉಭಯ ಶ್ರೀಗಳ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಕೀರ್ತನ ಸಮ್ಮೇಳನ ಹಾಗೂ ಅಂಧರ ಗೋಷ್ಠಿಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಆಶ್ರಮವು ಎಲ್ಲರಿಗೂ ತಾಯಿಯಂತಿದ್ದು, ಅದರ ಮೇಲೆ ಯಾರೇ ಕಣ್ಣು ಹಾಕಿದರೂ ಸಹಿಸುವ ಪ್ರಶ್ನೆಯೇ ಇಲ್ಲ. ಆಶ್ರಮದ ರಕ್ಷಣೆ ಮತ್ತು ಪಾವಿತ್ರ್ಯ ಕಾಪಾಡುವುದು ಪ್ರತಿಯೊಬ್ಬ ಭಕ್ತನ ಜವಾಬ್ದಾರಿ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಅನೇಕ ಧಾರ್ಮಿಕ ಸಂಸ್ಥೆಗಳು ಮತ್ತು ಗೌರವಾನ್ವಿತ ಸ್ಥಾನಗಳು ವಿವಾದಕ್ಕೆ ಒಳಗಾಗುತ್ತಿರುವುದು ವಿಷಾದನೀಯ. ಆದರೆ ಸತ್ಯ ಎಲ್ಲರಿಗೂ ಗೊತ್ತಿದ್ದರೂ ಪ್ರತಿಕ್ರಿಯಿಸುವ ಸಮಯ ಇನ್ನೂ ಬಂದಿಲ್ಲ. ಆಶ್ರಮದ ಕಲಾವಿದರು, ಭಕ್ತರು ಹಾಗೂ ಆಡಳಿತ ಮಂಡಳಿ ತಾಳ್ಮೆ ಕಾಪಾಡಿಕೊಂಡರೆ ಎಲ್ಲ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಸಿಗಲಿದೆ ಎಂದು ಹೇಳಿದರು.

ಯಾರಾದರೂ ಆಶ್ರಮದ ಸಮಸ್ಯೆ ಬಗೆಹರಿಸುವ ನೆಪದಲ್ಲಿ ಪ್ರವೇಶಿಸಲು ಯತ್ನಿಸಿದರೆ ಎಚ್ಚರಿಕೆಯಿಂದಿರಬೇಕು. ಕಾಣದ ಕೈಗಳು ಕೆಲವೊಮ್ಮೆ ಧಾರ್ಮಿಕ ಸಂಸ್ಥೆಗಳನ್ನೇ ಗುರಿಯಾಗಿಸುತ್ತವೆ. ಪುಣ್ಯಕ್ಷೇತ್ರದೊಳಗೆ ಪ್ರವೇಶಿಸುವಾಗ ಪಾದರಕ್ಷೆಗಳಷ್ಟೇ ಅಲ್ಲ, ಜಾತಿ ಮತ್ತು ರಾಜಕಾರಣವನ್ನೂ ಹೊರಗಿಟ್ಟು ಬರಬೇಕು ಎಂದು ಕಿವಿಮಾತು ಹೇಳಿದರು.

ಪಂಚಾಕ್ಷರಿ ಗವಾಯಿಗಳು ಮತ್ತು ಪುಟ್ಟರಾಜ ಗವಾಯಿಗಳು ರಾಜಕಾರಣ ಹಾಗೂ ಜಾತೀಯತೆಯಿಂದ ದೂರವಿದ್ದು ಸಂಗೀತ, ಸಾಹಿತ್ಯ, ಕಲೆ ಮತ್ತು ಸೇವೆಯ ಮೂಲಕ ಆಶ್ರಮವನ್ನು ಬೆಳೆಸಿದರು. ಆ ಪರಂಪರೆಯೇ ಮುಂದುವರಿಯಬೇಕು. ಆಶ್ರಮದಲ್ಲಿ ಕಲಾವಿದರು, ಸಂಗೀತಗಾರರು, ಪ್ರವಚನಕಾರರು ಹಾಗೂ ಸಾಹಿತ್ಯ ಸೇವಕರನ್ನು ರೂಪಿಸುವುದೇ ಮುಖ್ಯ ಉದ್ದೇಶವಾಗಿದ್ದು, ಇಲ್ಲಿ ಯಾವುದೇ ರೀತಿಯ ರಾಜಕೀಯ ಅಥವಾ ಜಾತಿ ಪ್ರಭಾವಕ್ಕೆ ಅವಕಾಶ ಇರಬಾರದು ಎಂದು ಹೇಳಿದರು.

ಆಶ್ರಮದ ರಕ್ಷಣೆಗೆ ಎಲ್ಲರೂ ಒಂದಾಗಬೇಕು. ಇಲ್ಲಿ ವ್ಯಕ್ತಿಗಳಿಗಿಂತ ವ್ಯವಸ್ಥೆ, ಪರಂಪರೆ ಮತ್ತು ಮೌಲ್ಯಗಳು ಮುಖ್ಯ. ಕಾಲ ಬದಲಾದರೂ ಆಶ್ರಮದ ಮೂಲ ಸ್ವರೂಪ ಬದಲಾಗಬಾರದು. ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆಗಳನ್ನು ನೀಡುವುದನ್ನು ತಪ್ಪಿಸಿ, ತಾಳ್ಮೆಯಿಂದ ನಡೆದುಕೊಳ್ಳುವುದು ಒಳಿತು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದುಗಿನ ಶಿವಾನಂದ ಬ್ರಹ್ಮಮಠದ ಜಗದ್ಗುರು ಅಭಿನವ ಶಿವಾನಂದ ಮಹಾಸ್ವಾಮಿಗಳು ವಹಿಸಿದ್ದರು. ಯಲಬುರ್ಗಾದ ಬಸವಲಿಂಗೇಶ್ವರ ಶಿವಾಚಾರ್ಯರು, ಗುಳೇದಗುಡ್ಡದ ಅಭಿನವ ಒಪ್ಪತ್ತೇಶ್ವರ ಮಹಾಸ್ವಾಮಿಗಳು, ಅಡ್ನೂರಿನ ಅಭಿನವ ಪಂಚಾಕ್ಷರ ಶಿವಾಚಾರ್ಯರು, ಅರಳಿಹಳ್ಳಿಯ ಗವಿಸಿದ್ದೇಶ್ವರ ತಾತನವರು, ಜಿಗೇರಿಯ ಗುರುಸಿದ್ದೇಶ್ವರ ಶಿವಾಚಾರ್ಯರು ಸಮ್ಮುಖ ವಹಿಸಿದ್ದರು.

ಈ ಸಂದರ್ಭದಲ್ಲಿ ಅರಳಹಳ್ಳಿ ಬೃಹನ್ಮಠದ ಶರಣಬಸವಯ್ಯ ತಾತನವರ ‘ಲೀಲಾಮೃತ ಪುರಾಣ’ ಹಾಗೂ ‘ವಿಶ್ವಯೋಗಿ ವೇಮ ಮತ್ತು ಮಹಾಸಾಧ್ವಿ ಬದುಕು-ಚಿಂತನೆ’ ಗ್ರಂಥಗಳನ್ನು ಜಗದ್ಗುರುಗಳ ಸಾನ್ನಿಧ್ಯದಲ್ಲಿ ಲೋಕಾರ್ಪಣೆ ಮಾಡಲಾಯಿತು. ಬಳಿಕ ಪಂ. ಪಂಚಾಕ್ಷರಿ ಗವಾಯಿಗಳ ನಾಟ್ಯ ಸಂಘದ ಕಲಾವಿದರು ‘ಬಂಜೆ ತೊಟ್ಟಿಲು’ ಸಾಮಾಜಿಕ ನಾಟಕ ಪ್ರದರ್ಶಿಸಿದರು.

“ವೀರೇಶ್ವರ ಪುಣ್ಯಾಶ್ರಮದೊಳಗೆ ಜಾತಿ, ರಾಜಕಾರಣ ಹಾಗೂ ಸ್ವಾರ್ಥದ ಪ್ರವೇಶಕ್ಕೆ ಅವಕಾಶ ಇರಬಾರದು. ಪರಂಪರೆ ಮತ್ತು ಪಾವಿತ್ರ್ಯ ಉಳಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿ.”

ಜ. ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು