Home Blog

ಮಧುಗಿರಿಯಲ್ಲಿ ನ್ಯಾಯಾಧೀಶೆ ಹೃದಯಾಘಾತದಿಂದ ನಿಧನ

ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ.

ಕಾಂತಮ್ಮ (43) ಮೃತ ನ್ಯಾಯಾಧೀಶೆ. ಅವರು ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದು, ಅಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರಾದ ಕಾಂತಮ್ಮ, ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕುಡಿಯುವ ನೀರಿಗಾಗಿ 419.50 ಕೋಟಿ ರೂ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಇಂದು  ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ  ಜರುಗಿತು.

ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ.

ಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ

ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದರು.

ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ

ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳ ಗುರುತಿಸುವಿಕೆ

ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

22 ಕೊಳವೆ ಬಾವಿಗಳು  ಬಾಡಿಗೆಗೆ

ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ಗಳಿಗೆ 57 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದು

ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಗುರುತಿಸಿದರು.

ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ.

ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಿ

ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು.  ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು

ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು .

ಎಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಿ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು.

ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಮೇವಿನ ಕೊರತೆ ಸಧ್ಯಕ್ಕೆ ಇಲ್ಲ

ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದರು ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು ಮುಖ್ಯಮಂತ್ರಿ ಅವರು ತಿಳಿಸಿದರು.

ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ವಹಿಸಿ

ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.

ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ: ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ 

ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗಿದ್ದು, ಇದಕ್ಕೆ ಕಾರಣವೇನು? ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕುಡಿಯುವ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಿ

ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಬೇಕು. ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಠೇವಣಿಗಾಗಿ ಕಾಯಬಾರದು ಎಂದರು.

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆಗಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಹಿಳೆಯರಿಗೂ ಕಾನೂನು ರಚನೆಗೆ ಸಮಾನ ಅವಕಾಶ ಸಿಗಲಿದೆ. ಇದಕ್ಕೆ ವಿರೋಧಪಕ್ಷ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕು ಇರಬೇಕು, ಸಮಾನ ಅವಕಾಶ ಸಿಗಬೇಕು ಎಂದು ಬಯಸಿದ್ದರು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದೂ ಹೇಳಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಬಾಬಾ ಸಾಹೇಬರ ಚಿಂತನೆಗೆ ಶಕ್ತಿ ಕೊಟ್ಟಿದ್ದಾರೆ ಎಂದರು.

ಈ ಹಿಂದೆ ಮಹಿಳೆಯರಿಗೆ ಅವಕಾಶ, ಅಧಿಕಾರ ಮತ್ತು ಸಮಾನ ಹಕ್ಕು ಕೊಡುವಲ್ಲಿ ಬಾಯಿ ಮಾತಿನ ಭಾಷಣ ಇತ್ತೇ ಹೊರತು ಹೃದಯವಂತಿಕೆ ಇರಲಿಲ್ಲ. ಆದರೆ ಇಂದು ನಾರಿ ಶಕ್ತಿ ಹೆಸರಿನಲ್ಲಿ ಪ್ರಧಾನಿಯವರು ಸಂಸತ್ತಿನ ವಿಶೇಷ ಅಧಿವೇಶನ ಕರೆದು ಮಸೂದೆ ಮಂಡಿಸುತ್ತಿದ್ದಾರೆ.

ಇನ್ನು ಮುಂದೆ ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯ ಅವಕಾಶಗಳ ದೊರೆಯಲಿವೆ. ಹಿಂದೂ ಕೋಡ್ ಬಿಲ್ ತರುವ ಮೊದಲು ಹೆಣ್ಣು ಮಕ್ಕಳಿಗೆ ಮತದಾನದ ಅವಕಾಶವೂ ಇರಲಿಲ್ಲ. ಬಾಬಾ ಸಾಹೇಬರು ಅವರ ಶಕ್ತಿ, ಯೋಚನೆ ಹಾಗೂ ಚಿಂತನೆಯಿಂದ ಹೆಣ್ಣು ಮಕ್ಕಳಿಗೆ ಮತದಾನದ ಅವಕಾಶ ಸಿಕ್ಕಿತು. ನಾರೀಶಕ್ತಿ ಮಸೂದೆ ಮೂಲಕ ಕಾನೂನು ರಚನೆಯಲ್ಲೂ ಮಹಿಳೆಯರಿಗೆ ಸಮಾನ ಅವಕಾಶ ಸಿಗಲಿದೆ ಎಂದರು.

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್‍ನವರು ಯಾವುದೇ ಅಪಸ್ವರ ಎತ್ತದೆ ಅಂಗೀಕಾರಕ್ಕೆ ಸಹಕರಿಸಲಿದ್ದಾರೆ ಎಂಬ ವಿಶ್ವಾಸ ಇದೆ. ಒಂದು ವೇಳೆ ಅಪಸ್ವರ ತೆಗೆದರೆ ಅವರ ಭವಿಷ್ಯ ಗಂಭೀರವಾಗುತ್ತದೆ ಎಂದು ಎಚ್ಚರಿಸಿದರು. ಈ ಮಸೂದೆಯನ್ನು ಪಕ್ಷದ ಪರವಾಗಿ ಸ್ವಾಗತಿಸುತ್ತೇವೆ. ದೇಶದಲ್ಲಿನ ನಾರೀಶಕ್ತಿ ಅಂಬೇಡ್ಕರ್ ಅವರಿಗೆ ಹೇಗೆ ಕೃತಜ್ಞತೆ ಹೊಂದಿದ್ದಾರೋ ಹಾಗೇಯೇ ಮೋದಿಜಿಯವರಿಗೂ ಕೃತಜ್ಞತೆ ವ್ಯಕ್ತಪಡಿಸಲಿದ್ದಾರೆ ಎಂದು ನುಡಿದರು.

ಸಚಿವ ಸ್ಥಾನ ಕೇಳುವುದು ತಪ್ಪಲ್ಲ: ಸಂಪುಟ ಪುನರ್ ರಚನೆಗೆ ದಿನೇಶ್ ಗುಂಡೂರಾವ್ ಒತ್ತಾಯ

ಬೆಂಗಳೂರು: ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಸಂಪುಟ ಪುನರ್‌ರಚನೆ ಆಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಾಸಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸುವುದು ಸಹಜ. ಪ್ರತಿಯೊಬ್ಬರಿಗೂ ಮಂತ್ರಿಯಾಗುವ ಆಸೆ ಇರುತ್ತದೆ ಎಂದು ಹೇಳಿದರು. ಹಿಂದೆ ತಾವು ಸಚಿವರಾಗಿದ್ದಾಗಲೂ ಸಂಪುಟ ಪುನರ್‌ರಚನೆ ನಡೆದಿತ್ತು ಎಂದು ಉಲ್ಲೇಖಿಸಿದರು.

ಬೇರೆಯವರಿಗೂ ಸಚಿವ ಸ್ಥಾನ ಸಿಗಬೇಕು ಎಂಬುದು ಸಹಜ. ಆದರೆ ಯಾರು ಸಚಿವರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಒಟ್ಟು ಸಚಿವರ ಪಟ್ಟಿಯನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಶಾಸಕರು ದೆಹಲಿಗೆ ತೆರಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಉಪಮುಖ್ಯಮಂತ್ರಿಗಳ ಹೇಳಿಕೆಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಶಾಸಕರು ತಮ್ಮ ಮಟ್ಟಿಗೆ ಪ್ರಯತ್ನಿಸುವುದು ತಪ್ಪಲ್ಲ ಎಂದು ಪುನರುಚ್ಚರಿಸಿದರು.

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ ಆರೋಪಿಗಳ ಶಿಕ್ಷೆ ಪ್ರಮಾಣ ನಾಳೆ ಪ್ರಕಟ

ಬೆಂಗಳೂರು: ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಕುರಿತು ದೀರ್ಘಕಾಲ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಎಲ್ಲ ಆರೋಪಿಗಳ ವಾದ-ಪ್ರತಿವಾದಗಳನ್ನು ಆಲಿಸಿ ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

ವಿಚಾರಣೆ ವೇಳೆ ಸಿಬಿಐ ಪರ ಸಹಾಯಕ ಸಾಲಿಸೇಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿ, ಈ ಅಪರಾಧ ಅತ್ಯಂತ ಗಂಭೀರವಾಗಿದ್ದು ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆಯಾಗಿದೆ. ಆರೋಪಿಗಳು ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದು, ನ್ಯಾಯ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಎಲ್ಲ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಆರೋಪಿಗಳ ಪರ ವಕೀಲರು, ಶಿಕ್ಷೆ ಪ್ರಮಾಣವನ್ನು ಕಡಿಮೆಗೊಳಿಸಬೇಕೆಂದು ಕೋರಿದರು. ಆರೋಪಿಗಳಿಗೆ ಕುಟುಂಬದ ಜವಾಬ್ದಾರಿಗಳಿದ್ದು, ಮಾನವೀಯ ದೃಷ್ಟಿಯಿಂದ ಶಿಕ್ಷೆಯಲ್ಲಿ ಸಡಿಲಿಕೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.

ಕೃಷ್ಣಾ ನದಿಯಲ್ಲಿ ಕುರಿಗಾಹಿಯ ಮೇಲೆ ಮೊಸಳೆ ದಾಳಿ! ಬಲಗೈ ಕಟ್

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಬಳಿ ಕೃಷ್ಣಾ ನದಿಯಲ್ಲಿ ಮೊಸಳೆ ದಾಳಿ ನಡೆದಿದ್ದು, ಕುರಿಗಾಹಿಯೊಬ್ಬರ ಬಲಗೈ ತುಂಡಾಗಿದೆ. ಮೊಸಳೆ ದಾಳಿಗೆ ಒಳಗಾದ ಹೊನ್ನಗುಡೆಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುರಿ ಮರಿಗಳಿಗೆ ನೀರು ತರಲು ಕೃಷ್ಣಾ ನದಿಗೆ ಹೋದ ವೇಳೆ ಏಕಾಏಕಿ ಮೊಸಳೆ ದಾಳಿ ನಡೆಸಿದೆ. ಕೈ ಕಚ್ಚಿಕೊಂಡು ನದಿಯೊಳಗೆ ಎಳೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿದೆ.

ಆದರೆ ಧೈರ್ಯವಾಗಿ ಹೋರಾಡಿದ ಹೊನ್ನಗುಡೆಪ್ಪ ಮೊಸಳೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವೇಳೆ, ಬಲಗೈ ತುಂಡಾಗಿದೆ. ಗಾಯಾಳುವನ್ನು ರಾಯಚೂರಿನ ಓಪೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಭಾಗದಲ್ಲಿ ಮೊಸಳೆಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ನದಿ ತೀರದ ಜನರಲ್ಲಿ ಭೀತಿ ಹೆಚ್ಚಾಗಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಮೊಸಳೆಗಳ ನಿಯಂತ್ರಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ ಗಾಯಾಳುವಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಇನ್ನೂ ಅಂತ್ಯಗೊಂಡಿಲ್ಲ: ಬಾಲಕೃಷ್ಣ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಇನ್ನೂ ಅಂತ್ಯಗೊಂಡಿಲ್ಲ ಎಂದು ಶಾಸಕ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಈ ಗೊಂದಲವನ್ನು ಹೈಕಮಾಂಡ್ ಸರಿಯಾಗಿ ಪರಿಹರಿಸದಿದ್ದರೆ ಪಕ್ಷದ ಬೆಳವಣಿಗೆಗೆ ತೊಂದರೆ ಉಂಟಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬೈಎಲೆಕ್ಷನ್ ಫಲಿತಾಂಶದ ಬಳಿಕ ಮತ್ತೆ ನಾಯಕತ್ವ ವಿಚಾರ ಚರ್ಚೆಯಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಶ್ನೆಯನ್ನು ನಮ್ಮಂತಹವರ ಬಳಿ ಕೇಳುವುದು ಸೂಕ್ತವಲ್ಲ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವವರು ಬೇರೆ ಇದ್ದಾರೆ ಎಂದರು.

ನಾಯಕತ್ವದ ಅಂತಿಮ ತೀರ್ಮಾನ ಹೈಕಮಾಂಡ್ ಕೈಯಲ್ಲಿದ್ದು, ನಾವು ಅದನ್ನು ಒಪ್ಪಲೇಬೇಕು. ನಮಗೆ ಟಿಕೆಟ್ ನೀಡಿದ್ದು ಕೂಡ ಹೈಕಮಾಂಡ್ ಆಗಿರುವುದರಿಂದ ಅವರ ಆದೇಶಕ್ಕೆ ನಾವು ಬದ್ಧರಾಗಿರಬೇಕು ಎಂದು ಹೇಳಿದರು.

ಇನ್ನೂ ಪಕ್ಷದ ಒಳಗಿನ ಗೊಂದಲವನ್ನು ಶೀಘ್ರವಾಗಿ ಪರಿಹರಿಸಬೇಕು. ಇಲ್ಲವಾದರೆ ಅದು ಪಕ್ಷದ ಮುಂದಿನ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಅಭಿಪ್ರಾಯಪಟ್ಟರು.

ಕುಮಾರಸ್ವಾಮಿ ಜೊತೆ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದು ಸ್ಪಷ್ಟವಿಲ್ಲ. ಕೆಲವರು ಸುಮ್ಮನೆ ಹೇಳಿಕೊಳ್ಳುತ್ತಾರೆ ಎಂದು ಹೇಳಿದರು. ಜೊತೆಗೆ, ಪಕ್ಷಕ್ಕೆ ಸೇರಲು ಓಪನ್ ಆಫರ್ ನೀಡುವ ಬಗ್ಗೆ ಮಾತನಾಡಿದ ಅವರು, ಅದು ಅವರ ರಾಜಕೀಯ ಶೈಲಿ ಎಂದು ಲೇವಡಿ ಮಾಡಿದರು.

ಯಕ್ಷಗಾನ ಕಲಾವಿದರಿಗೆ ಬೆದರಿಕೆ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ FIR

0

ಮಂಗಳೂರು: ಧರ್ಮಸ್ಥಳ ಪ್ರಕರಣದ ಹಿನ್ನೆಲೆ ಸುದ್ದಿಯಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ‘ಬುರುಡೆ ಗ್ಯಾಂಗ್’ ಎಂಬ ಯಕ್ಷಗಾನ ಪ್ರಸಂಗದ ವಿಚಾರವಾಗಿ ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪ ಅವರ ವಿರುದ್ಧ ಕೇಳಿಬಂದಿದೆ.

ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಹಾಗೂ ಗ್ರಾಮಾಂತರ ಠಾಣೆಗಳಲ್ಲಿ ತಿಮರೋಡಿ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳ ಪ್ರಕರಣದಂತೆ ಕಥಾವಸ್ತು ಹೊಂದಿರುವ ‘ಬುರುಡೆ ಗ್ಯಾಂಗ್’ ಯಕ್ಷಗಾನ ಪ್ರಸಂಗ ನಿರ್ಮಾಣಗೊಂಡಿತ್ತು.

ಇದರಿಂದ ಅಸಮಾಧಾನಗೊಂಡ ತಿಮರೋಡಿ ಏಪ್ರಿಲ್ 11ರಂದು ಯಕ್ಷಗಾನ ಹಾಸ್ಯ ಕಲಾವಿದ ಪ್ರಜ್ವಲ್ ಗುರುನಾಯನಕೆರೆಗೆ ಕರೆ ಮಾಡಿ, ಕಲಾವಿದರಾದ ದಿನೇಶ್ ಶೆಟ್ಟಿಗಾರ್ ಮತ್ತು ನಟ ಮಂದಾರ ಸುಂದರ ರೈ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಅವರ ತಾಯಂದಿರ ಕುರಿತು ಕೂಡ ಅವಮಾನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕರೆಗಿನ ಆಡಿಯೋವನ್ನು ಪ್ರಜ್ವಲ್ ಅವರು ಸಂಬಂಧಿತ ಕಲಾವಿದರಿಗೆ ಕಳುಹಿಸಿದ್ದು, ಅದನ್ನು ಕೇಳಿ ಅವರು ಮನಸ್ತಾಪಗೊಂಡಿದ್ದಾರೆ. ಈ ಹಿನ್ನೆಲೆ ಮಂದಾರ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ FIR ದಾಖಲಾಗಿದ್ದು, ದಿನೇಶ್ ಶೆಟ್ಟಿಗಾರ್ ತಾಯಿ ಲೀಲಾವತಿ ಶೆಟ್ಟಿಗಾರ್ ನೀಡಿದ ದೂರಿನಡಿ ಮಹಿಳಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಆಡಿಯೋದಲ್ಲಿರುವ ವಿಷಯ:

ಆಡಿಯೋದಲ್ಲಿ ತಿಮರೋಡಿ ಯಕ್ಷಗಾನ ಕಲಾವಿದರ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು ಕೇಳಿಸುತ್ತದೆ. “ಒಂದು ಮಗುವಿಗೆ ಅನ್ಯಾಯವಾಗಿರುವ ವಿಷಯದಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ. ಅದನ್ನು ಹಾಸ್ಯ ಮಾಡುವುದು ಸರಿಯಲ್ಲ. ಯಕ್ಷಗಾನಕ್ಕೆ ತನ್ನದೇ ಆದ ಗೌರವವಿದೆ, ಇಂತಹ ಕಥೆ ಮಾಡುವ ಮೊದಲು ಜಾಗ್ರತೆ ಇರಬೇಕು” ಎಂದು ಹೇಳಿದ್ದಾರೆ ಎನ್ನಲಾಗಿದೆ. ಸದ್ಯ ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ರಾಜ್ಯಾದ್ಯಂತ ಬಿಸಿಲಿನ ಕಾಟ: ಕಲಬುರಗಿಯಲ್ಲಿ 45°C, ಬೆಂಗಳೂರಿನಲ್ಲಿ ಉಷ್ಣತೆ ಏರಿಕೆ!

ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ಜನರು ತೀವ್ರ ಬೇಗೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದ್ದು, ಆತಂಕ ಹೆಚ್ಚಿಸಿದೆ.

ಇನ್ನೊಂದೆಡೆ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿದ್ದು, ಕಳೆದ ಕೆಲ ದಿನಗಳಿಂದ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರುವ ಮಟ್ಟದಲ್ಲಿ ಉಷ್ಣತೆ ಏರಿಕೆಯಾಗುತ್ತಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36°C ರಿಂದ 37°C ನಡುವೆ ಇರಲಿದೆ. ಮಂಗಳವಾರ 36.6°C ದಾಖಲಾಗಿದ್ದು, ಈ ವರ್ಷದಲ್ಲೇ ಅತ್ಯಂತ ಬಿಸಿಯಾದ ದಿನವಾಗಿತ್ತು. ಮುಂದಿನ ದಿನಗಳಲ್ಲಿ 38°C ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೂ, ಅದು ಸೀಮಿತ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ.

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಆರೆಂಜ್ ಹಾಗೂ ಯೆಲ್ಲೋ ಹೀಟ್‌ವೇವ್ ಅಲರ್ಟ್ ನೀಡಲಾಗಿದೆ. ಕಲಬುರಗಿಯ ಅವ್ರಾದ್ ಬಿ ಪ್ರದೇಶದಲ್ಲಿ 45°C, ಚಿಂಚೋಳಿ ಮತ್ತು ಅಫ್ಜಲ್ಪುರದಲ್ಲಿ 44°C ಕ್ಕೂ ಅಧಿಕ ತಾಪಮಾನ ದಾಖಲಾಗಿದೆ.

ಸಾಮಾನ್ಯಕ್ಕಿಂತ 3°C ರಿಂದ 4°C ಹೆಚ್ಚು ತಾಪಮಾನ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಕಲಬುರಗಿ ಜಿಲ್ಲಾಧಿಕಾರಿ ನಾಗರಿಕರಿಗೆ ಬೆಳಿಗ್ಗೆ 11:30ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಲು ಸೂಚಿಸಿದ್ದಾರೆ.

ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಬಿಸಿ ಮತ್ತು ತೇವಾಂಶಯುಕ್ತ ಹವಾಮಾನದ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಲೋಕಸಭೆಯಲ್ಲಿ ಗದ್ದಲ ಮಧ್ಯೆ ಮಹಿಳಾ ಮೀಸಲಾತಿ ಮಸೂದೆ ಮಂಡನೆ

0

ನವದೆಹಲಿ: ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಸೇರಿದಂತೆ ಮಹತ್ವದ ಮೂರು ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಿದೆ. ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆ ಜೊತೆಗೆ, ಕ್ಷೇತ್ರ ಪುನರ್ವಿಂಗಡಣೆ ಹಾಗೂ ಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಯೋಜನೆಯೂ ಇದರಲ್ಲಿ ಒಳಗೊಂಡಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಸೂದೆ ಮಂಡಿಸಿದ ವೇಳೆ, ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸದನದಲ್ಲಿ ಗದ್ದಲ ಉಂಟಾಯಿತು.

ಲೋಕಸಭೆ ಬಲ ಹೆಚ್ಚಿಸುವ ಪ್ರಸ್ತಾವನೆ

ಈ ಮಸೂದೆಯ ಪ್ರಕಾರ, ಪ್ರಸ್ತುತ 543 ಸದಸ್ಯರಿರುವ ಲೋಕಸಭೆಯನ್ನು 850 ಸದಸ್ಯರ ತನಕ ವಿಸ್ತರಿಸುವ ಉದ್ದೇಶವಿದೆ. ಇದರಲ್ಲಿ ರಾಜ್ಯಗಳಿಂದ 815 ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 35 ಸದಸ್ಯರು ಆಯ್ಕೆಯಾಗುವಂತೆ ಯೋಜನೆ ರೂಪಿಸಲಾಗಿದೆ. ಆದರೆ, ಈ ಬದಲಾವಣೆ ಕ್ಷೇತ್ರ ಪುನರ್ವಿಂಗಡಣೆಯ ಬಳಿಕವೇ ಜಾರಿಯಾಗಲಿದೆ.

ಮಹಿಳಾ ಮೀಸಲಾತಿ ವಿವಾದ

ಮಹಿಳೆಯರಿಗೆ 33% ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನ ಅಧಿನಿಯಮ’ ಜಾರಿಗೆ ಸರ್ಕಾರ ಮುಂದಾಗಿದ್ದರೂ, ಅದನ್ನು ಕ್ಷೇತ್ರ ಪುನರ್ವಿಂಗಡಣೆಗೆ ಕಟ್ಟಿ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷಗಳು, ಇದು ಮೀಸಲಾತಿಯನ್ನು ವಿಳಂಬಗೊಳಿಸುವ ತಂತ್ರ ಎಂದು ಆರೋಪಿಸಿವೆ.

ಇದೇ ವಿಚಾರವಾಗಿ ಕಾಂಗ್ರೆಸ್ ಮುಖಂಡ  ಜೈರಾಮ್ ರಮೇಶ್ ಕೂಡ ಪ್ರಶ್ನೆ ಎತ್ತಿದ್ದು, “ಈಗಲೇ ಜಾರಿಗೆ ತರಲು ಏನು ಅಡ್ಡಿ?” ಎಂದು ಕೇಳಿದ್ದಾರೆ.

ಡಿಲಿಮಿಟೇಶನ್ ಮಸೂದೆ

‘ಡಿಲಿಮಿಟೇಶನ್ ಮಸೂದೆ, 2026’ ಮೂಲಕ ಹಳೆಯ 2002ರ ಕಾಯ್ದೆಯನ್ನು ರದ್ದುಗೊಳಿಸಿ, ಹೊಸ ಆಯೋಗವನ್ನು ರಚಿಸಲು ಸರ್ಕಾರ ಮುಂದಾಗಿದೆ. ಈ ಆಯೋಗವು ಇತ್ತೀಚಿನ ಜನಗಣತಿ ಅಂಕಿಅಂಶಗಳ ಆಧಾರದ ಮೇಲೆ ಕ್ಷೇತ್ರಗಳ ಗಡಿಗಳನ್ನು ಮರುನಿರ್ಧರಿಸಲಿದೆ.

ಕೇಂದ್ರಾಡಳಿತ ಪ್ರದೇಶಗಳಿಗೂ ಮೀಸಲಾತಿ

ಇದೇ ವೇಳೆ, ದೆಹಲಿ, ಜಮ್ಮು-ಕಾಶ್ಮೀರ ಮತ್ತು ಪುದುಚೇರಿ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲೂ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ತರಲು ಮತ್ತೊಂದು ತಿದ್ದುಪಡಿ ಮಸೂದೆ ಮಂಡಿಸಲಾಗಿದೆ.

error: Content is protected !!