ಬೆಂಗಳೂರು: ಈ ಸರ್ಕಾರದ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಇದು ದಲಿತರನ್ನು ರಕ್ಷಿಸದ ಸರ್ಕಾರ ಎಂದು ವಿಧಾನಪರಿಷತ್ತಿನ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ದಲಿತರ ಮೇಲೆ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣಗಳು ಹೆಚ್ಚಾಗಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ದೇವದುರ್ಗದಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆಯನ್ನು ಉಲ್ಲೇಖಿಸಿದ ಅವರು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದರೂ ಗೃಹ ಇಲಾಖೆ ಮೌನವಾಗಿದೆ ಎಂದು ಆರೋಪಿಸಿದರು. ಗೃಹ ಸಚಿವರು ವಾಸ್ತವದಲ್ಲಿ ಆರ್ಎಸ್ಎಸ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಸಚಿವ ಕಾಶಪ್ಪನವರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ನಾರಾಯಣಸ್ವಾಮಿ, ಪ್ರಧಾನಿ ಮೋದಿ ಅವರ ಬಗ್ಗೆ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಸಚಿವರ ಬಂಧನ ಅಥವಾ ಎಫ್ಐಆರ್ ಆಗಿಲ್ಲ ಎಂದು ದೂರಿದ ಅವರು, ಈ ವಿಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿರುವುದನ್ನು ಖಂಡಿಸಿದ ನಾರಾಯಣಸ್ವಾಮಿ, ಇಂತಹ ಕ್ರಮವನ್ನು ಬಿಜೆಪಿ ಎಂದಿಗೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೂಡಲೇ ಸಚಿವ ಕಾಶಪ್ಪನವರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

