Home Blog

ಮೂರನೇ ಮಗುವಿಗೂ 365 ದಿನಗಳ ಹೆರಿಗೆ ರಜೆ: ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ತಮಿಳುನಾಡು ಸರ್ಕಾರದ ಬಂಪರ್‌ ಗಿಫ್ಟ್

0

ಚೆನ್ನೈ: ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ತಮಿಳುನಾಡು ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

ಇನ್ನು ಮುಂದೆ ಮೂರನೇ ಮಗುವಿನ ಜನನಕ್ಕೂ 365 ದಿನಗಳ ಹೆರಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮೂರನೇ ಮಗುವಿನ ಹೆರಿಗೆ ರಜೆಯನ್ನು ಈಗಿರುವ 12 ವಾರಗಳಿಂದ ಒಂದು ವರ್ಷಕ್ಕೆ ವಿಸ್ತರಿಸಲಾಗುತ್ತಿದೆ.

ಪ್ರಸ್ತುತ, ಎರಡಕ್ಕಿಂತ ಕಡಿಮೆ ಮಕ್ಕಳಿರುವ ವಿವಾಹಿತ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ 365 ದಿನಗಳ ಹೆರಿಗೆ ರಜೆ ಸಿಗುತ್ತದೆ. ಆದರೆ ಈಗಾಗಲೇ ಎರಡು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಮಹಿಳಾ ಉದ್ಯೋಗಿಗಳಿಗೆ ಮೂರನೇ ಮಗುವಿನ ಸಂದರ್ಭದಲ್ಲಿ ಕೇವಲ 12 ವಾರಗಳ ಹೆರಿಗೆ ರಜೆ ನೀಡಲಾಗುತ್ತಿತ್ತು.

ಈ ನಿಯಮದಲ್ಲಿ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಮೂರನೇ ಮಗುವಿನ ಜನನಕ್ಕೂ ಒಂದು ವರ್ಷದ ಹೆರಿಗೆ ರಜೆ ನೀಡುವುದಾಗಿ ಮಾನವ ಸಂಪನ್ಮೂಲ ನಿರ್ವಹಣಾ ಸಚಿವ ಡಿ. ಶರತ್‌ಕುಮಾರ್ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ತಮ್ಮ ಇಲಾಖೆಗೆ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದ ಸಚಿವರು, ತಮಿಳುನಾಡು ಸರ್ಕಾರವು ಸಾಮಾಜಿಕ ಕಲ್ಯಾಣ ಹಾಗೂ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವ ಕಲ್ಯಾಣಾಧಾರಿತ ಆಡಳಿತವಾಗಿದೆ ಎಂದು ಹೇಳಿದರು.

ಶೀಘ್ರದಲ್ಲೇ ಸರ್ಕಾರಿ ಆದೇಶ:

ವಿಧಾನಸಭೆಯಲ್ಲಿ ಮಾಡಿರುವ ಘೋಷಣೆಯನ್ನು ಜಾರಿಗೆ ತರಲು ಶೀಘ್ರದಲ್ಲೇ ವಿವರವಾದ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸರ್ಕಾರಿ ಆದೇಶ ಹೊರಬಂದ ಬಳಿಕ ಮೂರನೇ ಮಗುವಿನ ಹೆರಿಗೆ ರಜೆ ಸಂಬಂಧಿಸಿದ ಹೊಸ ನಿಯಮ ಅಧಿಕೃತವಾಗಿ ಜಾರಿಗೆ ಬರಲಿದೆ.

ಹಲವು ಹಂತಗಳಲ್ಲಿ ಹೆರಿಗೆ ರಜೆ ವಿಸ್ತರಣೆ:

ತಮಿಳುನಾಡಿನಲ್ಲಿ ಮಹಿಳಾ ಸರ್ಕಾರಿ ಉದ್ಯೋಗಿಗಳ ಹೆರಿಗೆ ರಜೆಯನ್ನು ಹಲವು ಹಂತಗಳಲ್ಲಿ ಹೆಚ್ಚಿಸಲಾಗಿದೆ. 2011ರಲ್ಲಿ 90 ದಿನಗಳಿಗೆ ಸೀಮಿತವಾಗಿದ್ದ ಹೆರಿಗೆ ರಜೆಯನ್ನು ಆರು ತಿಂಗಳಿಗೆ ವಿಸ್ತರಿಸಲಾಯಿತು. ಬಳಿಕ 2016ರಲ್ಲಿ ಒಂಬತ್ತು ತಿಂಗಳಿಗೆ ಹೆಚ್ಚಿಸಲಾಯಿತು. 2021ರ ಜುಲೈನಲ್ಲಿ ಹೆರಿಗೆ ರಜೆಯನ್ನು ಒಂದು ವರ್ಷ ಅಥವಾ 365 ದಿನಗಳಿಗೆ ವಿಸ್ತರಿಸಲಾಗಿತ್ತು.

ಆದರೆ ಈ 365 ದಿನಗಳ ರಜೆ ಪ್ರಯೋಜನವು ನಿಗದಿತ ಅರ್ಹತಾ ನಿಯಮಗಳ ಪ್ರಕಾರ ಎರಡಕ್ಕಿಂತ ಕಡಿಮೆ ಮಕ್ಕಳಿರುವ ನಿಯಮಿತ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಅನ್ವಯಿಸುತ್ತಿತ್ತು. ಇದೀಗ ಮೂರನೇ ಮಗುವಿಗೂ ಒಂದು ವರ್ಷದ ಹೆರಿಗೆ ರಜೆ ನೀಡುವ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ.

ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಮೂರನೇ ಮಗುವಿನ ಸಂದರ್ಭದಲ್ಲೂ ಒಂದು ವರ್ಷದ ರಜೆ ದೊರೆಯುವಂತಾಗಿರುವುದು ತಮಿಳುನಾಡು ಸರ್ಕಾರದ ಈ ಘೋಷಣೆಯ ಪ್ರಮುಖ ಅಂಶವಾಗಿದೆ.

Crime News: ನೀರು ಕೊಡಲಿಲ್ಲವೆಂದು ಲಾರಿ ಕ್ಲೀನರ್‌ಗೆ ಚಾಕು ಇರಿತ; ಆರೋಪಿ ಬಂಧನ

0

ಬೆಂಗಳೂರು: ಕುಡಿಯಲು ನೀರು ಕೊಡಲಿಲ್ಲ ಎಂಬ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಲಾರಿ ಕ್ಲೀನರ್‌ವೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಆರ್‌ಎಂಸಿ ಯಾರ್ಡ್‌ನಲ್ಲಿರುವ ಫ್ಯಾಕ್ಟರಿಯೊಂದರ ಬಳಿ ನಡೆದಿದೆ.

ಹತ್ಯೆಯಾದ ದುರ್ದೈವಿಯನ್ನು ಆಂಧ್ರಪ್ರದೇಶ ಮೂಲದ ಬರ್ಕತ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ ಮೂಲದ ಸೀನಪ್ಪ ಎಂಬಾತನನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.

ಬರ್ಕತ್ ಹಾಗೂ ಸೀನಪ್ಪ ಇಬ್ಬರೂ ಲಾರಿ ಕ್ಲೀನರ್‌ಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಧ್ಯಾಹ್ನ ಊಟದ ಬಳಿಕ ಸೀನಪ್ಪ, ಬರ್ಕತ್ ಬಳಿ ಕುಡಿಯಲು ನೀರು ಕೇಳಿದ್ದಾನೆ. ಆದರೆ ಬರ್ಕತ್ ನೀರು ನೀಡಲು ನಿರಾಕರಿಸಿದ್ದಾನೆ ಎನ್ನಲಾಗಿದೆ.

ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ವಿಕೋಪಕ್ಕೆ ತಿರುಗಿದೆ. ಈ ವೇಳೆ ಸೀನಪ್ಪ ಚಾಕುವಿನಿಂದ ಬರ್ಕತ್‌ಗೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಪರಿಣಾಮ ಬರ್ಕತ್ ಮೃತಪಟ್ಟಿದ್ದಾನೆ.

ಕೊಲೆ ಬಳಿಕ ಆರೋಪಿ ಸೀನಪ್ಪ ಸ್ಥಳದಿಂದ ಪರಾರಿಯಾಗಿದ್ದ. ಘಟನೆ ಕುರಿತು ಲಾರಿ ಚಾಲಕರಿಂದ ಮಾಹಿತಿ ಪಡೆದ ಆರ್‌ಎಂಸಿ ಯಾರ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಮೀನು ಹಿಡಿಯಲು ಹೋಗಿ ನಾಪತ್ತೆಯಾದ ಮೂವರು ಯುವಕರು; ತುಂಗಭದ್ರಾ ಹಿನ್ನೀರಿನಲ್ಲಿ ಶೋಧ!

0

ಹಗರಿಬೊಮ್ಮನಹಳ್ಳಿ: ಮೀನು ಹಿಡಿಯಲು ತುಂಗಭದ್ರಾ ನದಿಗೆ ತೆರಳಿದ್ದ ಮೂವರು ಯುವಕರು ಏಕಾಏಕಿ ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ನಡೆದಿದೆ.

ನಾಪತ್ತೆಯಾದವರನ್ನು ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ಎಂದು ಗುರುತಿಸಲಾಗಿದೆ. ಮೂವರು ಮಂಗಳವಾರ ಮಧ್ಯಾಹ್ನ ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ.

ಆದರೆ ಸಂಜೆಯಾದರೂ ಮೂವರು ಮನೆಗೆ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಬಳಿಕ ಸಂಬಂಧಿಕರು ಹಾಗೂ ಕುಟುಂಬಸ್ಥರು ಹುಡುಕಾಟ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಹಗರಿಬೊಮ್ಮನಹಳ್ಳಿ ಪೊಲೀಸರು ಹಾಗೂ ಸ್ಥಳೀಯರು ನದಿಯ ಬಳಿ ತೆರಳಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸದ್ಯ ಎಸ್‌ಡಿಆರ್‌ಎಫ್ ತಂಡವೂ ಸ್ಥಳಕ್ಕೆ ಆಗಮಿಸಿ ತುಂಗಭದ್ರಾ ನದಿ ಹಿನ್ನೀರಿನಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಹಗರಿಬೊಮ್ಮನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿ ನಾಪತ್ತೆಯಾದ ಮೂವರು ಯುವಕರಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಈ ಸಂಬಂಧ ತಂಬ್ರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕರು ನಾಪತ್ತೆಯಾಗಿರುವ ನಿಖರ ಕಾರಣ ತಿಳಿದುಬಂದಿಲ್ಲ.

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; ಮಗು ಸೇರಿ 9 ಮಂದಿ ಸಾವು!

0

ಕೋಲ್ಕತ್ತಾ: ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ವೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತೀವ್ರವಾಗಿ ವ್ಯಾಪಿಸಿದ ಪರಿಣಾಮ ಹೋಟೆಲ್‌ನಲ್ಲಿದ್ದ ಹಲವು ಅತಿಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ:

ಅಗ್ನಿ ಅವಘಡದ ಮಾಹಿತಿ ಲಭ್ಯವಾಗುತ್ತಿದ್ದಂತೆ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬಳಿಕ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತು.

ಹೋಟೆಲ್‌ನೊಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರು. ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಪ್ರಾಥಮಿಕ ಮಾಹಿತಿಯ ಪ್ರಕಾರ ಎಸಿ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಈ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಅಗ್ನಿಶಾಮಕ ಇಲಾಖೆಯ ಪ್ರಕಾರ, ಘಟನೆಯಲ್ಲಿ ಮೃತಪಟ್ಟ ಎಲ್ಲಾ 9 ಮಂದಿ ಬಾಂಗ್ಲಾದೇಶದ ಪ್ರಜೆಗಳು ಎಂದು ತಿಳಿದುಬಂದಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಅವರು ಕೋಲ್ಕತ್ತಾಗೆ ಬಂದಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಗುರುತು ಹಾಗೂ ಅಗ್ನಿ ಅವಘಡದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಜನನಿಬಿಡ ಪ್ರದೇಶದಲ್ಲೇ ಈ ಭೀಕರ ಅಗ್ನಿ ಅವಘಡ ಸಂಭವಿಸಿರುವುದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಶೃಂಗೇರಿ ಅಂಚೆ ಮತ ಮರು ಎಣಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ!

0

ಚಿಕ್ಕಮಗಳೂರು: 2023ರ ವಿಧಾನಸಭಾ ಚುನಾವಣೆಯಿಂದ ಆರಂಭವಾಗಿ, ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಭಾರೀ ರಾಜಕೀಯ ಸಂಚಲನಕ್ಕೆ ಕಾರಣವಾಗಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ವಿವಾದದ ಕುರಿತು ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.

ಈ ಪ್ರಕರಣದಲ್ಲಿ ಕೆಲವೇ ದಿನಗಳ ಅವಧಿಯಲ್ಲಿ ಶಾಸಕರ ಬದಲಾವಣೆಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಶಾಸಕ ಸ್ಥಾನ ಉಳಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ನಡೆಯಲಿರುವ ವಿಚಾರಣೆ ಮಹತ್ವ ಪಡೆದುಕೊಂಡಿದೆ.

201 ಮತಗಳ ಅಂತರದಲ್ಲಿ ರಾಜೇಗೌಡ ಗೆಲುವು:

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ಸುಮಾರು ಮೂರು ವರ್ಷಗಳ ಕಾಲ ನಡೆದ ಬಳಿಕ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆದೇಶಿಸಿತ್ತು.

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು:

ಹೈಕೋರ್ಟ್ ಆದೇಶದಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದರಿಂದ ಮೂರು ವರ್ಷಗಳ ಕಾಲ ಶಾಸಕರಾಗಿದ್ದ ರಾಜೇಗೌಡ ಅವರು ಶಾಸಕ ಸ್ಥಾನ ಕಳೆದುಕೊಂಡಿದ್ದರು.

ಮರು ಎಣಿಕೆಯ ಬಳಿಕ ಜೀವರಾಜ್ ಅವರು ಶಾಸಕರಾಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದರು.

ಮೂರೇ ದಿನಕ್ಕೆ ಮತ್ತೆ ಬದಲಾದ ಶಾಸಕ ಸ್ಥಾನ:

ಆದರೆ ಅಂಚೆ ಮತ ಮರು ಎಣಿಕೆ ಫಲಿತಾಂಶವನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡುವ ಮೂಲಕ ರಾಜೇಗೌಡ ಅವರು ಶಾಸಕ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡಿತ್ತು.

ಇದರ ಪರಿಣಾಮವಾಗಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಡಿ.ಎನ್. ಜೀವರಾಜ್ ಅವರು ಮೂರೇ ದಿನಗಳಲ್ಲಿ ಮತ್ತೆ ಶಾಸಕ ಸ್ಥಾನ ಕಳೆದುಕೊಂಡರು.

ಇಂದು ದಾಖಲೆಗಳ ಪರಿಶೀಲನೆ ಸಾಧ್ಯತೆ:

ಮೇ 2ರಂದು ಅಂಚೆ ಮತ ಮರು ಎಣಿಕೆ ನಡೆದ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು. ಮರು ಎಣಿಕೆಯ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ತೀವ್ರ ಕುತೂಹಲ ಮನೆ ಮಾಡಿತ್ತು.

ಇದೀಗ ಪ್ರಕರಣ ಮತ್ತೆ ಸುಪ್ರೀಂ ಕೋರ್ಟ್‌ನ ಅಂಗಳದಲ್ಲಿದ್ದು, ಇಂದು ನಡೆಯುವ ವಿಚಾರಣೆಯಲ್ಲಿ 2023ರ ಮೂಲ ಮತ ಎಣಿಕೆ ಹಾಗೂ 2026ರ ಮರು ಎಣಿಕೆಯ ದಾಖಲೆಗಳನ್ನು ಚುನಾವಣಾ ಆಯೋಗ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ಈ ದಾಖಲೆಗಳನ್ನು ನ್ಯಾಯಾಲಯ ಪರಿಶೀಲಿಸುವ ಸಾಧ್ಯತೆಯಿದೆ.

ಹೀಗಾಗಿ ಶೃಂಗೇರಿ ಕ್ಷೇತ್ರದ ಶಾಸಕ ಸ್ಥಾನ ಯಾರ ಪಾಲಾಗಲಿದೆ ಎಂಬುದು ಮತ್ತೆ ಕುತೂಹಲ ಮೂಡಿಸಿದ್ದು, ಇಂದಿನ ಸುಪ್ರೀಂ ಕೋರ್ಟ್ ವಿಚಾರಣೆಯತ್ತ ರಾಜ್ಯ ರಾಜಕೀಯದ ಚಿತ್ತ ನೆಟ್ಟಿದೆ.

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ; ಇಂದು ತಿಪಟೂರಿನಲ್ಲಿ ಅಂತ್ಯಕ್ರಿಯೆ!

0

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.

ಕಳೆದ ಕೆಲಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ಸಂತಾಪ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿದ್ದ ನಾಗೇಶ್:

ಬಿ.ಸಿ. ನಾಗೇಶ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರಿಂದ 2023ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಹಲವು ಪ್ರಮುಖ ನಿರ್ಧಾರಗಳ ಮೂಲಕ ಗಮನ ಸೆಳೆದಿದ್ದರು. ಪಕ್ಷದ ಸಂಘಟನೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಬಿಜೆಪಿಯ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.

ಎರಡು ಬಾರಿ ತಿಪಟೂರು ಶಾಸಕರಾಗಿದ್ದರು:

ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಬಿ.ಸಿ. ನಾಗೇಶ್ ಅವರು ವಿಧಾನಸಭೆಗೆ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಕೆಲಸಗಳ ಮೂಲಕ ತಮ್ಮದೇ ಆದ ರಾಜಕೀಯ ಛಾಪು ಮೂಡಿಸಿದ್ದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.

ಇಂದು ತಿಪಟೂರಿಗೆ ಪಾರ್ಥಿವ ಶರೀರ ರವಾನೆ:

ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ ಬೆಂಗಳೂರಿನಿಂದ ಅವರ ಸ್ವಕ್ಷೇತ್ರ ತಿಪಟೂರಿಗೆ ರವಾನಿಸಲಾಗುತ್ತಿದೆ. ಬುಧವಾರ, ಆಗಸ್ಟ್ 19ರಂದು ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಮಾಜಿ ಸಚಿವರ ನಿಧನದಿಂದ ತಿಪಟೂರು ಸೇರಿದಂತೆ ರಾಜ್ಯದಾದ್ಯಂತ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ರಾಜಕೀಯ ಸಹೋದ್ಯೋಗಿಗಳು ದುಃಖತಪ್ತರಾಗಿದ್ದಾರೆ.

ಗದಗದ ಗ್ರಾಮದೇವತೆಗಳ ಹರಿಜಾತ್ರೆಗೆ ಸಡಗರ: ಆ.19ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಗ್ರಾಮದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ 12 ವರ್ಷಕ್ಕೊಮ್ಮೆ ನಡೆಯುವ ಹರಿಜಾತ್ರಾ ಮಹೋತ್ಸವದ ಅಂಗವಾಗಿ ಆಗಸ್ಟ್ 19ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಂತೂರ-ಬೆಂತೂರಿನ ಬೂದೀಶ್ವರ ಸಂಸ್ಥಾನಮಠದ ಪೂಜ್ಯ ಶ್ರೀ ಡಾ. ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ಟ್ರಸ್ಟ್ ಕಮಿಟಿ ಅಧ್ಯಕ್ಷ ಕೊಟ್ರಪ್ಪ ಕಮತರ ಅಧ್ಯಕ್ಷತೆ ವಹಿಸುವರು. ಜಾತ್ರಾ ಕಮಿಟಿ ಕಾರ್ಯಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಬಣಜಿಗ ಸಮಾಜದ ಅಧ್ಯಕ್ಷ ಈಶಣ್ಣ ಮುನವಳ್ಳಿ, ಮರಾಠಾ ಸಮಾಜದ ಜಿಲ್ಲಾಧ್ಯಕ್ಷ ಅರುಣಕುಮಾರ ಚವ್ಹಾಣ, ವಿಶ್ವಕರ್ಮ ಸಮಾಜದ ಆರ್.ಡಿ. ಕಡ್ಲಿಕೊಪ್ಪ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಬೆಳದಡಿ ಹಾಗೂ ಉದ್ಯಮಿ ಪ್ರಕಾಶ ಕರಿ ಭಾಗವಹಿಸುವರು.

ಅತಿಥಿಗಳಾಗಿ ನಗರಸಭೆ ಸದಸ್ಯರಾದ ಲಕ್ಷ್ಮವ್ವ ಭಜಂತ್ರಿ, ರಾಘವೇಂದ್ರ ಯಳವತ್ತಿ, ಪೂರ್ಣಿಮಾ ಭರದ್ವಾಡ, ಚಂದ್ರಶೇಖರ ಗೌಡ ಕರಿಸೋಮನಗೌಡ್ರ ಹಾಗೂ ಇಮ್ತಿಯಾಜ್ ಶಿರಹಟ್ಟಿ ಉಪಸ್ಥಿತರಿರುವರು.

ನಂತರ ರಾತ್ರಿ 8.30ಕ್ಕೆ ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಸಯ್ಯ ಹಾಗೂ ಗದುಗಿನ ನಟರಂಗ ಕಲಾ ಸಂಸ್ಥೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಯೋಚಿಸಿ; ಹೀಗೆ ಮರುಬಳಕೆ ಮಾಡಬಹುದು!

0

ಭಾರತದಲ್ಲಿ ಬಾಳೆಹಣ್ಣು ಬಹುತೇಕ ಎಲ್ಲರಿಗೂ ಇಷ್ಟವಾಗುವ ಹಣ್ಣು.

ವರ್ಷಪೂರ್ತಿ ಸುಲಭವಾಗಿ ಸಿಗುವ ಹಾಗೂ ಕೈಗೆಟುಕುವ ದರದಲ್ಲಿ ದೊರೆಯುವ ಕಾರಣ ಮನೆಗಳಲ್ಲಿ ಬಾಳೆಹಣ್ಣಿನ ಬಳಕೆ ಹೆಚ್ಚಾಗಿದೆ. ಆದರೆ ಬಾಳೆಹಣ್ಣು ತಿಂದ ಬಳಿಕ ಅದರ ಸಿಪ್ಪೆಯನ್ನು ಬಹುತೇಕರು ಕಸದ ಬುಟ್ಟಿಗೆ ಎಸೆಯುತ್ತಾರೆ. ಆದರೆ ಈ ಸಿಪ್ಪೆಯನ್ನು ಹಲವು ರೀತಿಯಲ್ಲಿ ಮರುಬಳಕೆ ಮಾಡಬಹುದು.

ಬಾಳೆಹಣ್ಣಿನ ಸಿಪ್ಪೆಯಲ್ಲಿ ವಿವಿಧ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕ ಸಂಯುಕ್ತಗಳಿದ್ದು, ಮನೆ ಬಳಕೆ ಹಾಗೂ ತೋಟಗಾರಿಕೆಯಲ್ಲಿ ಇದನ್ನು ಬಳಸಬಹುದು. ಆದರೆ ಚರ್ಮ ಅಥವಾ ಹಲ್ಲುಗಳ ಮೇಲೆ ಬಳಸುವ ಮೊದಲು ಅಲರ್ಜಿ ಅಥವಾ ಕಿರಿಕಿರಿ ಉಂಟಾಗುವುದೇ ಎಂಬುದನ್ನು ಗಮನಿಸುವುದು ಉತ್ತಮ.

ಗಿಡಗಳಿಗೆ ಗೊಬ್ಬರವಾಗಿ ಬಳಸಿ:

ಬಾಳೆಹಣ್ಣಿನ ಸಿಪ್ಪೆಯಲ್ಲಿ ಪೊಟ್ಯಾಸಿಯಮ್ ಸೇರಿದಂತೆ ಕೆಲವು ಖನಿಜಾಂಶಗಳಿವೆ. ಸಿಪ್ಪೆಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಕಾಂಪೋಸ್ಟ್‌ಗೆ ಸೇರಿಸಬಹುದು. ಅಥವಾ ಸಿಪ್ಪೆಯನ್ನು ನೀರಿನಲ್ಲಿ ನೆನೆಸಿ, ಆ ನೀರನ್ನು ಗಿಡಗಳಿಗೆ ಹಾಕಬಹುದು. ಇದರಿಂದ ಸಸ್ಯಗಳಿಗೆ ಕೆಲವು ಪೋಷಕಾಂಶಗಳು ದೊರೆಯುತ್ತವೆ.

ಶೂ ಮತ್ತು ಲೆದರ್ ಬ್ಯಾಗ್‌ಗಳಿಗೆ ಪಾಲಿಶ್:

ಬಾಳೆಹಣ್ಣಿನ ಸಿಪ್ಪೆಯ ಒಳಭಾಗವನ್ನು ಚರ್ಮದ ಶೂ ಅಥವಾ ಲೆದರ್ ಬ್ಯಾಗ್‌ ಮೇಲೆ ನಿಧಾನವಾಗಿ ಉಜ್ಜಿ, ಬಳಿಕ ಸ್ವಚ್ಛವಾದ ಒಣ ಬಟ್ಟೆಯಿಂದ ಒರೆಸಬಹುದು. ಕೆಲವು ಲೆದರ್ ವಸ್ತುಗಳಿಗೆ ಇದು ತಾತ್ಕಾಲಿಕ ಹೊಳಪು ನೀಡಬಹುದು. ಮೊದಲು ಕಾಣದ ಜಾಗದಲ್ಲಿ ಪರೀಕ್ಷಿಸುವುದು ಉತ್ತಮ.

ಬೆಳ್ಳಿ ವಸ್ತುಗಳ ಸ್ವಚ್ಛತೆಗೆ:

ಬಾಳೆಹಣ್ಣಿನ ಸಿಪ್ಪೆಯನ್ನು ಪೇಸ್ಟ್ ಮಾಡಿ ಬೆಳ್ಳಿ ವಸ್ತುಗಳನ್ನು ಸ್ವಚ್ಛಗೊಳಿಸಲು ಬಳಸುವ ಮನೆಮದ್ದುಗಳಿವೆ. ಬಳಿಕ ಸ್ವಚ್ಛವಾದ ಬಟ್ಟೆಯಿಂದ ಒರೆಸಬಹುದು. ಆದರೆ ಸೂಕ್ಷ್ಮವಾದ ಅಥವಾ ದುಬಾರಿ ಆಭರಣಗಳ ಮೇಲೆ ಯಾವುದೇ ಮನೆಮದ್ದನ್ನು ಬಳಸುವ ಮೊದಲು ಎಚ್ಚರಿಕೆ ವಹಿಸುವುದು ಸೂಕ್ತ.

ಚರ್ಮದ ಆರೈಕೆಯಲ್ಲಿ ಬಳಕೆ?

ಬಾಳೆಹಣ್ಣಿನ ಸಿಪ್ಪೆಯಲ್ಲಿ ಕೆಲವು ಉತ್ಕರ್ಷಣ ನಿರೋಧಕ ಸಂಯುಕ್ತಗಳಿದ್ದರೂ, ಮೊಡವೆ, ಕಲೆ ಅಥವಾ ಚರ್ಮದ ಸಮಸ್ಯೆಗಳಿಗೆ ಬಾಳೆಹಣ್ಣಿನ ಸಿಪ್ಪೆ ಪರಿಣಾಮಕಾರಿ ಚಿಕಿತ್ಸೆ ಎಂಬುದಕ್ಕೆ ಸಾಕಷ್ಟು ದೃಢವಾದ ವೈದ್ಯಕೀಯ ಸಾಕ್ಷ್ಯವಿಲ್ಲ. ಮುಖಕ್ಕೆ ನೇರವಾಗಿ ಉಜ್ಜುವುದು ಅಥವಾ ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ಹಚ್ಚುವುದು ಕೆಲವರಿಗೆ ಕಿರಿಕಿರಿ ಅಥವಾ ಅಲರ್ಜಿ ಉಂಟುಮಾಡಬಹುದು.

ಆದ್ದರಿಂದ ಚರ್ಮದ ಸಮಸ್ಯೆಗಳಿಗೆ ಇದನ್ನು ಚಿಕಿತ್ಸೆಯ ಪರ್ಯಾಯವಾಗಿ ಬಳಸದೆ, ಅಗತ್ಯವಿದ್ದರೆ ಚರ್ಮರೋಗ ತಜ್ಞರ ಸಲಹೆ ಪಡೆಯುವುದು ಉತ್ತಮ.

ಬಾಳೆಹಣ್ಣಿನ ಸಿಪ್ಪೆಯನ್ನು ಮರುಬಳಕೆ ಮಾಡುವುದಾದರೆ ಅದನ್ನು ಚೆನ್ನಾಗಿ ತೊಳೆದು ಬಳಸಬೇಕು. ವಿಶೇಷವಾಗಿ ಹಲ್ಲು ಬಿಳುಪುಗೊಳಿಸಲು ಸಿಪ್ಪೆಯನ್ನು ಉಜ್ಜುವುದು ಅಥವಾ ಚರ್ಮದ ಸಮಸ್ಯೆಗಳಿಗೆ ಬಳಸುವುದು ಸಾಬೀತಾದ ವೈದ್ಯಕೀಯ ಚಿಕಿತ್ಸೆಯಲ್ಲ. ಮನೆಮದ್ದುಗಳನ್ನು ಬಳಸುವಾಗ ಎಚ್ಚರಿಕೆ ವಹಿಸುವುದು ಮುಖ್ಯ.

ಗದಗದ ಭವಿಷ್ಯಕ್ಕಾಗಿ ರಕ್ತದ ಸಹಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸಮಗ್ರ ಅಭಿವೃದ್ಧಿ, ಶಾಶ್ವತ ಕುಡಿಯುವ ನೀರಿನ ಪರಿಹಾರ, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ರೈತರ ಹಿತದೃಷ್ಟಿಯಿಂದ ಗದಗ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು 20ನೇ ವಾರ್ಡ್‌ನಲ್ಲಿ ರಕ್ತ ಸಹಿ ಅಭಿಯಾನ ನಡೆಯಿತು.

ಬಿಜೆಪಿ ಮುಖಂಡ ಮೋಹನ್ ವರವಿ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ವಾರ್ಡ್‌ನ ನೂರಾರು ಯುವಕರು ಸ್ವಯಂಪ್ರೇರಿತರಾಗಿ ಪಾಲ್ಗೊಂಡು ರಕ್ತದಿಂದ ಸಹಿ ಮಾಡುವ ಮೂಲಕ ತಮ್ಮ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದರು.

ಗದಗದ ಅಭಿವೃದ್ಧಿ ಹಾಗೂ ಜನರ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಒತ್ತಾಯದೊಂದಿಗೆ ನಡೆಯುತ್ತಿರುವ ರಕ್ತ ಸಹಿ ಅಭಿಯಾನಕ್ಕೆ ದಿನದಿಂದ ದಿನಕ್ಕೆ ಯುವಕರ ಬೆಂಬಲ ಹೆಚ್ಚುತ್ತಿದೆ. ಇದು ಕೇವಲ ರಕ್ತದ ಸಹಿಯಲ್ಲ, ಗದಗದ ಅಭಿವೃದ್ಧಿಗಾಗಿ ಯುವಜನರ ಆಶಯ, ಸಂಕಲ್ಪ ಹಾಗೂ ಒಗ್ಗಟ್ಟಿನ ಪ್ರತೀಕವಾಗಿದೆ ಎಂದು ಅಭಿಯಾನಕಾರರು ತಿಳಿಸಿದರು.

ನಗರದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಹಾಗೂ ರೈತರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಜನರ ದೀರ್ಘಕಾಲದ ಬೇಡಿಕೆಗಳಿಗೆ ಕೇವಲ ಭರವಸೆ ನೀಡದೆ, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಈ ಜನಪರ ಹೋರಾಟದ ಧ್ವನಿ ಸರ್ಕಾರ ಹಾಗೂ ಆಡಳಿತಗಾರರ ಗಮನಕ್ಕೆ ತಲುಪಿ, ಗದಗದ ಜನರ ನ್ಯಾಯಯುತ ಬೇಡಿಕೆಗಳಿಗೆ ಶೀಘ್ರ ಸ್ಪಂದನೆ ದೊರೆಯಲಿ ಎಂಬ ಆಶಯವನ್ನು ಅಭಿಯಾನಕಾರರು ವ್ಯಕ್ತಪಡಿಸಿದರು.

ಅಭಿಯಾನದಲ್ಲಿ ಪ್ರವೀಣ್ ಕರಬಿಷ್ಟಿ, ಮಂಜು ವರವಿ, ಮಲ್ಲು ಜಂತ್ಲಿ, ಮಂಜುನಾಥ ಜುಟ್ಲರ, ಪರಶುರಾಮ ಗೊಂದಿ, ಅಮಸಿದ್ದ ಗೌಡರ, ಅನಿಲ ಬಳ್ಳಾರಿ, ಮನೋಜ ಕಿರಟಗೇರಿ, ಲಕ್ಷ್ಮಣ ಮುರುಗೋಡ, ಪ್ರಶಾಂತ ವರವಿ, ಬಸವರಾಜ ಕಮತರ, ನಿಖಿಲ ಅಣ್ಣಿಗೇರಿ, ಪ್ರಕಾಶ ಬರಾಡ, ಸಮೀರ್ ಪಿತ್ತೂರು, ಕಿರಣ ಹುನಗುಂಡಿ, ಕುನಲ ಪವಾರ, ಸಚಿನ ಕಾಂಬಳೆ, ಲೋಕೇಶ ಹೂವಿನಹಡಗಲಿ, ಪ್ರಜ್ವಲ ಕರಿ, ಸಂತೋಷ ಕುರಿ, ನೂತನ ಮುರುಗೋಡ, ಶಿವು ಮುಳುಗುಂದ, ಸೋಹಿಲ ಮುಳುಗುಂದ, ಆರ್ಯನ ಬಾದಾಮಿ, ಉಮೇಶ್ ರೆಡ್ಡಿ ಹಳ್ಯಳ, ತನ್ಮಯ ದೊಡ್ಡಮನಿ, ಮದನ ಸಿಂಗ್ ರಜಪೂತ ಸೇರಿದಂತೆ ನೂರಾರು ಯುವಕರು ಪಾಲ್ಗೊಂಡಿದ್ದರು.

“ನಮಗೆ ಯಾರ ವಿರುದ್ಧವೂ ಹೋರಾಟವಿಲ್ಲ, ಗದಗದ ಅಭಿವೃದ್ಧಿಗಾಗಿ ನಮ್ಮ ಹೋರಾಟ. ನಮಗೆ ಬೇಕಿರುವುದು ಭರವಸೆ ಮಾತ್ರವಲ್ಲ—ನ್ಯಾಯ ಮತ್ತು ಶಾಶ್ವತ ಪರಿಹಾರ.”

– ಮೋಹನ್ ವರವಿ, ಬಿಜೆಪಿ ಮುಖಂಡ

ನಮ್ಮ ಬದುಕಿಗೂ ಬೆಲೆ ಕೊಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಜನರ ಮೂಲಭೂತ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರ ಬದುಕು ಮಾತ್ರ ಸಂಕಷ್ಟದಲ್ಲಿದೆ. ದಿನದಿಂದ ದಿನಕ್ಕೆ ಬೆಲೆ ಏರಿಕೆಯಾಗುತ್ತಿದ್ದರೂ ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ. ಹೀಗಾಗಿ ಬೆಲೆ ಏರಿಕೆಗೆ ತಕ್ಕಂತೆ ವೇತನ ಹೆಚ್ಚಿಸಿ, ನಮ್ಮ ಬದುಕಿಗೂ ಬೆಲೆ ನೀಡಿ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ನೌಕರರು, ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಗಳು, ನೀರುಗಂಟಿಗಳು, ಜವಾನರು ಹಾಗೂ ಸ್ವಚ್ಛತಾಗಾರರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ವೇತನ ದೊರೆಯುತ್ತಿಲ್ಲ. ಪ್ರಸ್ತುತ ವೇತನದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೇ 22, 2026ರಂದು ಹೊರಡಿಸಿರುವ ಆದೇಶದಂತೆ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ, ಸೇವಾ ಹಿರಿತನ ಆಧರಿಸಿ ಇನ್‌ಕ್ರಿಮೆಂಟ್ ನೀಡಬೇಕು ಎಂದು ಆಗ್ರಹಿಸಿದರು.

ನೌಕರರು ನಿವೃತ್ತಿ ಹೊಂದಿದಾಗ ಅಥವಾ ಮೃತಪಟ್ಟಾಗ ₹6 ಲಕ್ಷ ಇಡಗಂಟು ನೀಡಬೇಕು. ಗ್ರಾಮ ಪಂಚಾಯಿತಿ ಠರಾವಿನ ಮೂಲಕ ನೇಮಕಗೊಂಡು ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆಯದ ಸಿಬ್ಬಂದಿಗೂ ಈ ಸೌಲಭ್ಯ ಕಲ್ಪಿಸಬೇಕು. ತರಬೇತಿ ಪಡೆದ ಸ್ವಚ್ಛವಾಹಿನಿ ನೌಕರರಿಗೆ ವೇತನ ನೀಡುವುದರ ಜತೆಗೆ ಒಡಂಬಡಿಕೆ ಹಾಗೂ ಪ್ರತಿವರ್ಷ ನವೀಕರಣ ಪದ್ಧತಿ ರದ್ದುಪಡಿಸಿ, 15ನೇ ಹಣಕಾಸಿನಡಿ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಚಾಲಕನನ್ನು ಪರಿಗಣಿಸಿ ₹15 ಸಾವಿರ ವೇತನ ನಿಗದಿಪಡಿಸಬೇಕು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಮುಂದುವರಿಸಬೇಕು. ಕಂಪ್ಯೂಟರ್ ಜ್ಞಾನ ಮತ್ತು ವಿದ್ಯಾರ್ಹತೆ ಹೊಂದಿರುವ ಪಂಚಾಯಿತಿ ನೌಕರರಿಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಪಂಚಾಯಿತಿಯ ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ನಿಗದಿಪಡಿಸಿ, 2017ರೊಳಗೆ ನೇಮಕಗೊಂಡ ಹೆಚ್ಚುವರಿ ಕರವಸೂಲಿಗಾರರಿಗೆ ಅನುಮೋದನೆ ನೀಡಬೇಕು. ಖಾಲಿ ಇರುವ ಕರವಸೂಲಿಗಾರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿ, ಜವಾನ ಹಾಗೂ ಸ್ವಚ್ಛತಾಗಾರರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಗ್ರೇಡ್-1 ಕಾರ್ಯದರ್ಶಿಗಳಿಂದ ಪಿಡಿಒ ಹುದ್ದೆಗೆ ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು. ಕೆಸಿಎಸ್‌ಆರ್ ನಿಯಮ 325ರನ್ವಯ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೆ ಪಿಂಚಣಿ ಜಾರಿಗೊಳಿಸಬೇಕು. ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಿ, ಪಿಡಿಒ ಹುದ್ದೆಗಳಲ್ಲಿ ಶೇ.60ರಷ್ಟು ಸ್ಥಾನಗಳನ್ನು ಗ್ರೇಡ್-1 ಕಾರ್ಯದರ್ಶಿಗಳಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಈಡೇರಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿ.ಎಂ. ಜೈನಖಾನ್, ಪ್ರಧಾನ ಕಾರ್ಯದರ್ಶಿ, ರುದ್ರಪ್ಪ ಕಂದಗಲ್ಲ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಕಳೆದ 7–8 ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ. ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಈಗಿರುವ ವೇತನದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಕುಟುಂಬ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆಗೆ ಅನುಗುಣವಾಗಿ ಪರಿಷ್ಕೃತ ವೇತನವನ್ನು ಕೂಡಲೇ ಬಿಡುಗಡೆ ಮಾಡಿ, ದುಡಿಯುವ ಗ್ರಾಮ ಪಂಚಾಯಿತಿ ನೌಕರರ ಬದುಕಿಗೆ ಸರ್ಕಾರ ನ್ಯಾಯ ಒದಗಿಸಬೇಕು.”

— ಎಂ.ಬಿ. ನಾಡಗೌಡ, ಸಂಘದ ಮುಖಂಡ