ಬೆಂಗಳೂರು: ಬಡ ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ‘ನಮ್ಮ ಕ್ಲಿನಿಕ್’ ಯೋಜನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.
ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್ಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್ಗಳು ಹಾಗೂ ಲ್ಯಾಬ್ ತಂತ್ರಜ್ಞರಿಗೆ ಕಳೆದ ಮೂರು ತಿಂಗಳಿಂದ ವೇತನ ಸಿಕ್ಕಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ 240ಕ್ಕೂ ಹೆಚ್ಚು ನಮ್ಮ ಕ್ಲಿನಿಕ್ಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 50% ಅನುದಾನ ನೀಡಬೇಕಿದ್ದರೂ, ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.
ವೇತನ ಸಿಗದ ಕಾರಣ ಸಿಬ್ಬಂದಿ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಈ ತಿಂಗಳ ಅಂತ್ಯದೊಳಗೆ ಬಾಕಿ ವೇತನ ಪಾವತಿಸದಿದ್ದರೆ ಸೇವೆ ಸ್ಥಗಿತಗೊಳಿಸುವುದಾಗಿ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನ ಹಂಚಿಕೆ ಪ್ರಕ್ರಿಯೆಯಲ್ಲಿ ತಾಂತ್ರಿಕ ವಿಳಂಬವಾಗಿರುವುದರಿಂದ ಸಂಬಳ ತಡವಾಗಿದೆ. ಶೀಘ್ರದಲ್ಲೇ ಬಾಕಿ ವೇತನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಿಬ್ಬಂದಿ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
ಆದರೆ, ಹಲವು ತಿಂಗಳಿಂದ ಸಂಬಳ ಸಿಗದ ಕಾರಣ ಸಿಬ್ಬಂದಿ ಅಸಮಾಧಾನಗೊಂಡಿದ್ದು, ಶೀಘ್ರದಲ್ಲೇ ವೇತನ ನೀಡದಿದ್ದರೆ ನಮ್ಮ ಕ್ಲಿನಿಕ್ ಸೇವೆಯನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಡವರಿಗೆ ದೊರೆಯುತ್ತಿರುವ ಉಚಿತ ಆರೋಗ್ಯ ಸೇವೆಗೆ ತೊಂದರೆಯಾಗುವ ಸಾಧ್ಯತೆ ಎದುರಾಗಿದೆ.

