Home Blog

ಪಠ್ಯದ ಜತೆಗೆ ಸಂಸ್ಕಾರವೂ ಮುಖ್ಯ: ಡಾ. ಮಹೇಶ್ವರ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ನಿತ್ಯದ ಪಠ್ಯದ ಜತೆಗೆ ಉತ್ತಮ ಸಂಸ್ಕಾರ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ನಂದಿಪುರ ಪುಣ್ಯಕ್ಷೇತ್ರದ ಡಾ. ಮಹೇಶ್ವರ ಸ್ವಾಮೀಜಿ ಹೇಳಿದರು.

ತಾಲೂಕಿನ ನಂದಿಪುರ ಪುಣ್ಯಕ್ಷೇತ್ರದ ಶ್ರೀ ಗುರು ಚರಂತೇಶ್ವರ ಶಾಲೆಯಲ್ಲಿ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿ ಹಾಗೂ ವಾರದ ಸಭೆಯಲ್ಲಿ ಸಾನ್ನಿಧ್ಯ ವಹಿಸಿ, ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಜ್ಞಾನಕ್ಕೆ ಮಾತ್ರ ಸೀಮಿತವಾಗದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಬೆಳೆಸಿಕೊಳ್ಳಬೇಕು. ಇವು ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ ಎಂದರು.

ತಾಲೂಕು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ನಾಯ್ಕ ಮಾತನಾಡಿ, ಪ್ರತಿಯೊಬ್ಬ ಮಗುವಿನಲ್ಲೂ ಪ್ರತಿಭೆಯಿದ್ದು, ಶಾಲಾ ಹಂತದಲ್ಲಿಯೇ ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಸಂಪನ್ಮೂಲ ವ್ಯಕ್ತಿ ಪರಮೇಶ್ವರಯ್ಯ ಸೊಪ್ಪಿಮಠ, ಶಿಕ್ಷಣ ಸಂಯೋಜಕರಾದ ಶಿವಲಿಂಗಸ್ವಾಮಿ, ಗುರುಬಸವರಾಜ, ಮುಖ್ಯಗುರು ವೀರೇಶ ಬಸೆಟ್ಟಿ, ಮುಖಂಡ ಅಲ್ಲಾಭಕ್ಷಿ, ಶಾಲಾ ಆಡಳಿತಾಧಿಕಾರಿ ಕೊಟ್ರದೇವರು, ಪಾಲಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟ ವಿದ್ಯಾರ್ಥಿಗಳು ಗಮನ ಸೆಳೆದರು. ಹನುಮಾನ್ ಚಾಲೀಸಾ ಪಠಣ, ನೃತ್ಯ ಹಾಗೂ ಭಾಷಣದ ಮೂಲಕ ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸಿದರು. ರಾಧಾ-ಕೃಷ್ಣ ವೇಷಭೂಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿನಿಯರಾದ ಮಾನಸ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶಂಕರಗೌಡ ಸ್ವಾಗತಿಸಿದರು. ಹೆಚ್.ಎಂ. ನಚಿಕೇತ ಸ್ವಾಮಿ ವಂದಿಸಿದರು. ಶಿವಮಣಿ ನಿರ್ವಹಿಸಿದರು. ಕೃಷ್ಣನ ವೇಷಧಾರಿ ಮಹಮ್ಮದ್ ಅಪ್ಜಲ್ ಅವರಿಂದ ನಡೆದ ಬೆಣ್ಣೆ ಗಡಿಗೆ ಒಡೆಯುವ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಗಿತ್ತು.

ಪಠ್ಯಜ್ಞಾನ ವಿದ್ಯಾರ್ಥಿಯ ಬುದ್ಧಿಯನ್ನು ಬೆಳೆಸಿದರೆ, ಸಂಸ್ಕಾರ ಮತ್ತು ಪಠ್ಯೇತರ ಚಟುವಟಿಕೆಗಳು ಅವರ ವ್ಯಕ್ತಿತ್ವವನ್ನು ರೂಪಿಸುತ್ತವೆ. ಎರಡಕ್ಕೂ ಸಮಾನ ಆದ್ಯತೆ ದೊರೆತಾಗಲೇ ಸಮಗ್ರ ಬೆಳವಣಿಗೆ ಸಾಧ್ಯ.

— ಡಾ. ಮಹೇಶ್ವರ ಸ್ವಾಮೀಜಿ

ತೃತೀಯ ಭಾಷೆ ಬದಲಿಗೆ ಎಐ ಅಳವಡಿಕೆ ಆದೇಶ ಹಿಂಪಡೆಯಿರಿ : ಹಿಂದಿ ಶಿಕ್ಷಕರ ಸಂಘ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಪ್ರೌಢಶಾಲೆಗಳಲ್ಲಿ ತೃತೀಯ ಭಾಷೆ ಬದಲಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಕೃತಕ ಬುದ್ಧಿಮತ್ತೆ (ಎಐ) ವಿಷಯ ಅಳವಡಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಗದಗ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಬಿಜಾಪೂರ ನೇತೃತ್ವದಲ್ಲಿ ಹಿಂದಿ ಶಿಕ್ಷಕರು ಶುಕ್ರವಾರ ಗದಗ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

2026-27ನೇ ಸಾಲಿನಲ್ಲಿ ತೃತೀಯ ಭಾಷೆಯ ಬದಲಿಗೆ ಎಐ ಅಳವಡಿಸುವುದು ಸೂಕ್ತವಲ್ಲ. ಈ ಕಾರಣದಿಂದ ತೃತೀಯ ಭಾಷೆ ಬೋಧಿಸುತ್ತಿರುವ ಶಿಕ್ಷಕರನ್ನು ಅಗತ್ಯವಿರುವ ಹತ್ತಿರದ ಶಾಲೆಗಳಿಗೆ ನಿಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಶಿಕ್ಷಕರಲ್ಲಿ ಆತಂಕ ಮೂಡಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದೇಶದಿಂದ ಕನ್ನಡ, ಹಿಂದಿ, ಇಂಗ್ಲಿಷ್, ಸಂಸ್ಕೃತ ಸೇರಿದಂತೆ ತೃತೀಯ ಭಾಷಾ ಶಿಕ್ಷಕರ ಸೇವಾ ಭದ್ರತೆ ಹಾಗೂ ಭವಿಷ್ಯದ ಬಗ್ಗೆ ಅನಿಶ್ಚಿತತೆ ಉಂಟಾಗಲಿದೆ. ತ್ರಿಭಾಷಾ ಸೂತ್ರವನ್ನು ಯಥಾವತ್ತಾಗಿ ಮುಂದುವರಿಸಿ, ತೃತೀಯ ಭಾಷಾ ಶಿಕ್ಷಕರನ್ನು ಬೇರೆ ಶಾಲೆಗಳಿಗೆ ನಿಯೋಜಿಸಬಾರದು ಎಂದು ಒತ್ತಾಯಿಸಿದರು.

ತೃತೀಯ ಭಾಷೆಗೆ ಬದಲಾಗಿ ಎಐ ಅಳವಡಿಸುವ ಬದಲು, ಈಗಿರುವ ಕಂಪ್ಯೂಟರ್ ಸಾಕ್ಷರತೆ ಅಥವಾ ನೀತಿ ಶಿಕ್ಷಣದ ವಾರದ ನಾಲ್ಕು ಅವಧಿಗಳನ್ನು ಬಳಸಿಕೊಂಡು ಎಐಗೆ ಹೆಚ್ಚುವರಿ ಅವಧಿ ಕಲ್ಪಿಸಬೇಕು. ಇದರಿಂದ ಭಾಷಾ ಕಲಿಕೆಯ ಜತೆಗೆ ವಿದ್ಯಾರ್ಥಿಗಳಿಗೆ ಎಐ ಶಿಕ್ಷಣವೂ ದೊರೆಯಲಿದೆ ಎಂದು ಸಂಘ ಸಲಹೆ ನೀಡಿದೆ.

ಕಳೆದ 10 ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ತೃತೀಯ ಭಾಷಾ ಶಿಕ್ಷಕರ ನೇಮಕಾತಿ ನಡೆದಿಲ್ಲ. ಈ ಬಾರಿಯ ನೇಮಕಾತಿಯಲ್ಲಿಯೂ ಹಿಂದಿ ಶಿಕ್ಷಕರನ್ನು ಕೈಬಿಡಲಾಗಿದ್ದು, ಸಾವಿರಾರು ಹಿಂದಿ ಬಿ.ಎಡ್. ಪದವೀಧರರಿಗೆ ಅನ್ಯಾಯವಾಗಿದೆ. ವಯೋಮಿತಿ ಮೀರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಹಿಂದಿ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಂ. ರಾಠೋಡ, ರಾಜ್ಯ ಪ್ರತಿನಿಧಿ ಉಮೇಶ ನಿಪ್ಪಾಣಿಕರ, ನಾಗಯ್ಯ ಹಿರೇಮಠ, ಎಸ್.ಎಸ್. ಪಾಟೀಲ, ಕೆ.ಆರ್. ಬಾಕಳೆ, ಬಿ.ಸಿ. ಜೋಗಿನ, ಎಂ.ಡಿ. ನದಾಫ, ಡಾ.ಸಿ.ಎಂ. ರಫೀ, ಡಾ.ಎಚ್.ಎಂ. ಅತ್ತಾರ, ಎನ್.ಎಂ. ಕಾಗದಗಾರ, ನಾಝಬೀನ್‌ಭಾನು ಎಂ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಐ ಕಲಿಕೆಗೆ ನಮ್ಮ ವಿರೋಧವಿಲ್ಲ. ಆದರೆ ತೃತೀಯ ಭಾಷೆಯನ್ನೇ ತೆಗೆದುಹಾಕಿ ಎಐ ಅಳವಡಿಸುವ ಕ್ರಮದಿಂದ ಭಾಷಾ ಶಿಕ್ಷಣ ಹಾಗೂ ಶಿಕ್ಷಕರ ಸೇವಾ ಭದ್ರತೆಗೆ ಧಕ್ಕೆಯಾಗಲಿದೆ. ಸರ್ಕಾರ ಪರ್ಯಾಯ ವ್ಯವಸ್ಥೆ ರೂಪಿಸಬೇಕು.

— ಎ.ಎಲ್. ಬಿಜಾಪೂರ, ಜಿಲ್ಲಾಧ್ಯಕ್ಷ, ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘ

ಶಿಕ್ಷಕರೇ ಸುಂದರ ಸಮಾಜದ ನಿರ್ಮಾತೃಗಳು: ಪ್ರೇಮಾ ಗುಳಗೌಡರ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಕ ವೃತ್ತಿ ಕೇವಲ ಜೀವನೋಪಾಯವಲ್ಲ. ಶ್ರದ್ಧೆಯಿಂದ ಮಕ್ಕಳ ಉತ್ತಮ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿಯಾಗಿದೆ. ತ್ಯಾಗಮಯ ಶಿಕ್ಷಕರ ಬದುಕು ಸದಾ ಆದರ್ಶಮಯವಾಗಿದ್ದು, ಅವರೇ ಸುಂದರ ಸಮಾಜದ ನಿರ್ಮಾತೃಗಳು ಎಂದು ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್‌ನ ಪಿಡಿಸಿ ಪ್ರೇಮಾ ಗುಳಗೌಡರ ಹೇಳಿದರು.

ಗದಗ-ಬೆಟಗೇರಿ ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಶಿಕ್ಷಕರ ಮೌಲ್ಯಯುತ ಮಾರ್ಗದರ್ಶನ ಮಕ್ಕಳ ಅನುಭವ ಮತ್ತು ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿದೆ. ಶಿಕ್ಷಕ-ವಿದ್ಯಾರ್ಥಿ ನಡುವಿನ ಪ್ರಯತ್ನ ಹಾಗೂ ಸ್ವಪ್ರಯತ್ನದ ಬೆಸುಗೆ ಮಕ್ಕಳ ಬಾಳಿಗೆ ಬೆಳಕು ನೀಡಿ ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುತ್ತದೆ ಎಂದರು.

ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ ಮಾತನಾಡಿ, ಶಿಕ್ಷಣವು ಮಾನವನ ಸಾಮರ್ಥ್ಯ ವಿಕಸನಗೊಳಿಸುವ ಹಾಗೂ ಸಮಾನ, ನ್ಯಾಯಯುತ ಸಮಾಜ ನಿರ್ಮಿಸಿ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿರುವ ಮೂಲಭೂತ ಅಂಶವಾಗಿದೆ. ಮಕ್ಕಳನ್ನು ಅಕ್ಷರದ ಮೂಲಕ ಸಶಕ್ತಗೊಳಿಸುವಲ್ಲಿ ಶಿಕ್ಷಕರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದರು.

ಕ್ಲಬ್ ಕಾರ್ಯದರ್ಶಿ ಪೂಜಾ ಭೂಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಗದಗ ಜಿಲ್ಲೆಯ ವಿವಿಧ ತಾಲೂಕುಗಳಿಂದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಸೇವೆ ಅನುಪಮವಾಗಿದೆ ಎಂದರು.

ಕ್ಲಬ್ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಸಿಂಗಟರಾಯನಕೇರಿ ತಾಂಡಾದ ಸರೋಜಾ ಬಂಡಿ, ಸ.ಪ್ರಾ.ಶಾಲೆ ನಂ. 2ರ ಕಮಲಾಕ್ಷಿ ರೇಷ್ಮೆ, ಎಕಲಾಸಪುರದ ಸುರಯ್ಯ ನದಾಫ್, ಸ.ಪ್ರಾ.ಶಾಲೆ ನಂ. 13ರ ಸುಧಾ ಬೇವಿನಮಟ್ಟಿ, ಉರ್ದು ಪ್ರಾ.ಶಾಲೆ ನಂ. 4ರ ಎನ್.ಎಚ್. ಜಕ್ಕಲಿ, ಎಚ್.ಪಿ.ಎಸ್. ಗಂಗಿಮಡಿಯ ರೇಣವ್ವ ಹಾದಿಮನಿ, ಪಿಪಿಜಿ ಪ್ರಾ.ಶಾಲೆಯ ಉಡಚಮ್ಮ ವಾಲ್ಮೀಕಿ, ಎಚ್.ಪಿ.ಎಸ್. ನಂ. 8ರ ಎಸ್.ಎಚ್. ಮೊರಬರಡ್ಡಿ ಹಾಗೂ ಎಲ್.ಪಿ.ಯು.ಎಸ್. ಕಣಗಿನಹಾಳದ ರವಿ ಕಟ್ಟಿಮನಿ ಅವರನ್ನು ಪ್ರಶಸ್ತಿ ಪತ್ರದೊಂದಿಗೆ ಸನ್ಮಾನಿಸಲಾಯಿತು.

ಶಿಕ್ಷಕರ ಮಾರ್ಗದರ್ಶನವೇ ಮಕ್ಕಳ ಬದುಕಿಗೆ ಬೆಳಕು ನೀಡಿ, ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಶಕ್ತಿ. ಶಿಕ್ಷಕರ ಸೇವೆ ಸಮಾಜದ ಭವಿಷ್ಯ ನಿರ್ಮಿಸುವ ಮಹತ್ವದ ಕಾರ್ಯ.

— ಪ್ರೇಮಾ ಗುಳಗೌಡರ, ಪಿಡಿಸಿ, ಇನ್ನರ್‌ವ್ಹೀಲ್ ಕ್ಲಬ್

ಡಿಜೆ ಬಳಕೆಗೆ ಸಂಪೂರ್ಣ ನಿಷೇಧವಿಲ್ಲ : ನಿಯಮ ಪಾಲಿಸಿ ಗಣೇಶೋತ್ಸವ ಆಚರಿಸಿ : ಎಸ್ಪಿ ಮಿಥುನ್

0

ವಿಜಯಸಾಕ್ಷಿ ಸುದ್ದಿ, ಗದಗ: ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಯಾವುದೇ ಅಡ್ಡಿಯಿಲ್ಲ. ಡಿಜೆ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗುವುದಿಲ್ಲ. ಆದರೆ ಸುಪ್ರೀಂ ಕೋರ್ಟ್ ಆದೇಶ ಹಾಗೂ ನಿಯಮಗಳ ಅನ್ವಯ ಮೆರವಣಿಗೆಯಲ್ಲಿ ಡಿಜೆ ಬಳಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ತಿಳಿಸಿದರು.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆಯಲ್ಲಿ 2,000ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.

ಹೆಚ್ಚುವರಿಯಾಗಿ ಮೂರು ಕೆಎಸ್‌ಆರ್‌ಪಿ ತುಕಡಿಗಳು, 450ಕ್ಕೂ ಹೆಚ್ಚು ಹೋಮ್‌ಗಾರ್ಡ್ ಸಿಬ್ಬಂದಿ, ನಾಲ್ವರು ಡಿವೈಎಸ್‌ಪಿ ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ 30ಕ್ಕೂ ಹೆಚ್ಚು ವಾಹನಗಳನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುತ್ತಿದೆ. ಪ್ರತಿಷ್ಠಾಪನೆಗೆ ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಶಾಂತಿ ಸುವ್ಯವಸ್ಥೆ ಕಾಪಾಡಲು 150ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಹೆಚ್ಚುವರಿ ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಲಾಗಿದೆ. ರಾತ್ರಿ ಗಸ್ತು ಹೆಚ್ಚಿಸಲಾಗಿದೆ. ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಜಿಲ್ಲೆಯ 135 ಪುಂಡರನ್ನು ಗುರುತಿಸಿ ಅವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿದರು.

ಪ್ಲೆಕ್ಸ್, ಬ್ಯಾನರ್, ಪ್ರಿಂಟರ್ ಹಾಗೂ ಸೌಂಡ್ ಸಿಸ್ಟಂ ಮಾಲೀಕರ ಸಭೆ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಲಾಗಿದೆ. ಜೇಬುಗಳ್ಳತನ ತಡೆ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಕಾನೂನು ಪಾಲಿಸಿ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಜಿಲ್ಲೆಯಾದ್ಯಂತ 300ಕ್ಕೂ ಹೆಚ್ಚು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಳೆದ ವರ್ಷ 120 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿತ್ತು ಎಂದು ತಿಳಿಸಿದರು.

ಹಬ್ಬದ ಸಂಭ್ರಮಕ್ಕೆ ಪೊಲೀಸ್ ಇಲಾಖೆ ವಿರೋಧಿಯಾಗಿಲ್ಲ. ಆದರೆ ಕಾನೂನು, ಶಾಂತಿ ಮತ್ತು ಸೌಹಾರ್ದ ಕಾಪಾಡುವುದು ಎಲ್ಲರ ಜವಾಬ್ದಾರಿ. ನಿಯಮ ಪಾಲಿಸಿ ಗಣೇಶೋತ್ಸವ ಆಚರಿಸುವ ಮೂಲಕ ಜಿಲ್ಲೆಗೆ ಮಾದರಿಯಾಗಬೇಕು.

— ಮಿಥುನ್ ಎಚ್.ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಖಾಸಗಿ ಶಾಲೆಗಳ ಉತ್ತಮ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ; ಸರ್ಕಾರದ ಮಟ್ಟದಲ್ಲಿ ಚಿಂತನೆ – ಮಧು ಬಂಗಾರಪ್ಪ

0

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆನೇಕಲ್ ತಾಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿರುವ ವಿವಿಧ ಬೇಡಿಕೆಗಳು ಸರ್ಕಾರದ ಗಮನದಲ್ಲಿವೆ. ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವಂತೆ ಬೇಡಿಕೆ ಬಂದಿದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಬೆಂಗಳೂರಿನ ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಶಾಲೆಗಳ ಸಮಯ ಬದಲಾವಣೆ ಮಾಡುವಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಸಲ್ಲಿಸಿದೆ. ಈ ವಿಚಾರವನ್ನು ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.

ಖಾಸಗಿ ಶಾಲೆಗಳ ಆರ್‌ಆರ್ ನವೀಕರಣ ಹಾಗೂ ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಮನೆ ಬಾಡಿಗೆ ಭತ್ಯೆ (ಎಚ್‌ಆರ್‌ಎ)ಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರಿಗೂ ನೀಡುವಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ. ಈ ಬಗ್ಗೆಯೂ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಖಾಸಗಿ ಶಾಲೆಗಳು ಸರ್ಕಾರಕ್ಕೆ ಹಣ ಪಾವತಿಸಲು ಸಿದ್ಧವಿದ್ದು, ಸರ್ಕಾರಿ ಪಠ್ಯಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿರುವ ವಿಚಾರವೂ ಸರ್ಕಾರದ ಗಮನದಲ್ಲಿದೆ. ಈ ಬೇಡಿಕೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ!

0

ಬೆಂಗಳೂರು: ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿ ವೇಳೆ ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ ಎಂದು ಇಡಿ ತಿಳಿಸಿದೆ.

ದಾಳಿ ವೇಳೆ ದಾಖಲೆಗಳಿಲ್ಲದ ₹15 ಲಕ್ಷ ಮೌಲ್ಯದ ವಿದೇಶಿ ಹಣ ಪತ್ತೆಯಾಗಿದ್ದು, ಅದನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದ ವಿದೇಶಿ ಕರೆನ್ಸಿಯ ಫೋಟೋವನ್ನು ಇಡಿ ಬಿಡುಗಡೆ ಮಾಡಿದೆ.

ಇಡಿ ಮಾಹಿತಿ ಪ್ರಕಾರ, ಒಟ್ಟು 5 ದೇಶಗಳ ಕರೆನ್ಸಿ ಪತ್ತೆಯಾಗಿದೆ. ಅಮೆರಿಕನ್ ಡಾಲರ್, ಮಲೇಷಿಯನ್ ರಿಂಗೆಟ್, ಚೀನೀ ಯುವಾನ್, ಯುರೋ ಹಾಗೂ ದುಬೈನ ದಿರಹಂ ಕರೆನ್ಸಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ಈ ವೇಳೆ ವಿದೇಶಿ ಕರೆನ್ಸಿ ಪತ್ತೆಯಾಗಿರುವುದು ಪ್ರಕರಣದ ತನಿಖೆಯಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ.

ಬಳ್ಳಾರಿ ಚಲೋ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಪಾದಯಾತ್ರೆಗೆ ಸಿದ್ಧತೆ!

0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ವಂದೇ ಮಾತರಂ ಗೀತೆಯ ಎರಡು ಚರಣಗಳ ವಿವಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರಕ್ಕೆ ಕಾರಣವಾಗಿದೆ. ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಿದರೆ ಸಾಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಸರ್ಕಾರದ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಸುಮಾರು ಅರ್ಧ ಕಿಲೋಮೀಟರ್‌ನಿಂದ ಒಂದು ಕಿಲೋಮೀಟರ್‌ವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು ಬಿಜೆಪಿ ಮುಂದಾಗಿದೆ.

ಈ ಮೂಲಕ ವಂದೇ ಮಾತರಂ ಕುರಿತು ರಾಜ್ಯ ಸರ್ಕಾರ ಕೈಗೊಂಡಿರುವ ಸಂಪುಟದ ನಿರ್ಧಾರವನ್ನು ವಾಪಸ್ ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿ ತಂತ್ರ ರೂಪಿಸಿದೆ.

ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ವಂದೇ ಮಾತರಂ ಕೇವಲ ಹಾಡಲ್ಲ. ಎರಡು ಚರಣ ಮಾತ್ರ ಹಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ತೀರ್ಮಾನಿಸಿರುವುದು ದುರ್ದೈವ’ ಎಂದು ವಿಜಯೇಂದ್ರ ಹೇಳಿದ್ದಾರೆ.

ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ 224 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಿ, ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಲಾಗುವುದು ಎಂದಿದ್ದಾರೆ.

ಅಲ್ಲದೆ, ವಂದೇ ಮಾತರಂ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಂದ ಪಾಠ ಕಲಿಯಬೇಕು ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ED ಪ್ರೆಸ್ ನೋಟ್ʼನಲ್ಲಿ ‘ಶಂಕೆ’ ಎಂದಷ್ಟೇ ಉಲ್ಲೇಖ, ನೋಟಿಸ್ ಕೊಡಲಿ, ಎಲ್ಲದಕ್ಕೂ ದಾಖಲೆ ಸಮೇತ ಉತ್ತರಿಸುತ್ತೇವೆ: ಸತೀಶ್ ಜಾರಕಿಹೊಳಿ

0

ಬೆಂಗಳೂರು: ಆಫ್ರಿಕಾದ ಚಿನ್ನದ ಗಣಿಗಾರಿಕೆ ಸಂಸ್ಥೆಯಲ್ಲಿ ಶೇ.40ರಷ್ಟು ಪಾಲು ಇದೆ ಎಂದು ಇಡಿ ಹೇಳಿರುವುದಕ್ಕೆ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ತಮ್ಮ ಬಳಿ ಅಥವಾ ತಮ್ಮ ಕುಟುಂಬದ ಬಳಿ ಆಫ್ರಿಕಾದ ಚಿನ್ನದ ಗಣಿಗಳಲ್ಲಿ ಪಾಲು ಇದೆ ಎಂಬುದಕ್ಕೆ ಇಡಿ ಬಳಿ ದಾಖಲೆಗಳಿದ್ದರೆ ಅದನ್ನು ಸಾಬೀತುಪಡಿಸಲಿ ಎಂದು ಹೇಳಿದ್ದಾರೆ.

ಬೆಂಗಳೂರು ನಿವಾಸದ ಬಳಿ ಮಾತನಾಡಿದ ಸತೀಶ್ ಜಾರಕಿಹೊಳಿ, ಇಡಿ ಮಾಧ್ಯಮ ಪ್ರಕಟಣೆಯಲ್ಲಿ ಹೂಡಿಕೆ ಹಾಗೂ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ ಅಂಶಗಳನ್ನು ಮಾತ್ರ ಉಲ್ಲೇಖಿಸಲಾಗಿದೆ ಎಂದರು. ಇಡಿ ನೋಟಿಸ್ ನೀಡಿದರೆ ತಾವು ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಎಲ್ಲದಕ್ಕೂ ಸ್ಪಷ್ಟೀಕರಣ ನೀಡುವುದಾಗಿ ಹೇಳಿದರು.

ಇಡಿ ಹೊರಡಿಸಿರುವ ಪ್ರೆಸ್ ನೋಟ್‌ನಲ್ಲೇ ‘ಶಂಕೆ’ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಪ್ರಕರಣ ಇನ್ನೂ ಅಂತಿಮವಾಗಿಲ್ಲ. ಇಡಿ ನೋಟಿಸ್ ನೀಡಿ ವಿಚಾರಣೆಗೆ ಕರೆದರೆ ಹೋಗಿ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಪಿಡಬ್ಲ್ಯುಡಿ ಇಲಾಖೆಯಲ್ಲಿ ಲಂಚ ಪಡೆದ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಇಡಿ ಕೇವಲ ಶಂಕೆ ವ್ಯಕ್ತಪಡಿಸಿದೆ. ಮೊದಲು ವಿಚಾರಣೆ ನಡೆಯಲಿ, ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ವಿಚಾರಣೆಗೆ ಹಾಜರಾಗಿ ಅಗತ್ಯ ಸ್ಪಷ್ಟೀಕರಣ ನೀಡುತ್ತೇವೆ ಎಂದರು.

ಇಡಿ ಪ್ರೆಸ್ ನೋಟ್‌ನಿಂದ ರಾಜಕೀಯವಾಗಿ ಹಾನಿಯಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಾಮಾನ್ಯವಾಗಿ ಇಂತಹ ಆರೋಪಗಳಿಂದ ಹಾನಿಯಾಗುತ್ತದೆ. ಆದರೆ ಇಡಿ ಸ್ವತಃ ‘ಶಂಕೆ’ ಎಂದು ಹೇಳಿರುವುದರಿಂದ ಮುಂದಿನ ಬೆಳವಣಿಗೆಗಳನ್ನು ನೋಡೋಣ ಎಂದರು. ‘ಇಡಿಗಿಂತ ಮೊದಲು ಪಬ್ಲಿಕ್ ನಮ್ಮ ನ್ಯಾಯಾಲಯ’ ಎಂದು ಹೇಳಿದರು.

ಇನ್ನು ಇಡಿಗೆ ದೂರು ನೀಡಿದವರ ಬಗ್ಗೆ ಮಾತನಾಡಿದ ಅವರು, ದೂರು ನೀಡಿರುವವರು ಯಾರು ಎಂಬುದು ತಮಗೆ ಗೊತ್ತಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಈ ಬಗ್ಗೆ ನೋಡಿಕೊಳ್ಳುತ್ತಾರೆ ಎಂದರು. ದೂರುದಾರರಿಗೆ ಕಾಂಗ್ರೆಸ್‌ನೊಂದಿಗೆ ಸಂಬಂಧವಿರುವುದಷ್ಟೇ, ಅವರ ಮತಗಳು ಬಿಜೆಪಿಯಲ್ಲಿವೆ ಎಂದು ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಭದ್ರವಾಹ್ʼನಲ್ಲಿ ಜೈಶ್ ಉಗ್ರ ಸಂಘಟನೆಗೆ ಬಿಗ್ ಶಾಕ್; ಕಮಾಂಡರ್ ಹತ್ಯೆ, ಎಂ4 ರೈಫಲ್ ಪತ್ತೆ

0

ಜಮ್ಮು: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯ ಭದ್ರವಾಹ್‌ನ ಸೆವೋಜ್‌ಧಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಪಾಕಿಸ್ತಾನಿ ಉಗ್ರ ಕಮಾಂಡರ್ ಯಾಸಿರ್ ಹತನಾಗಿರುವುದು ಪತ್ತೆಯಾಗಿದೆ.

ಸೆವೋಜ್‌ಧಾರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಯಾಸಿರ್‌ನ ಮೃತದೇಹ ಪತ್ತೆಯಾಗಿದೆ. ಎಸ್‌ಒಜಿ ದೋಡಾ, ರಾಷ್ಟ್ರೀಯ ರೈಫಲ್ಸ್ ಹಾಗೂ ಸಿಆರ್‌ಪಿಎಫ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

ಮೃತದೇಹದ ಬಳಿಯಿಂದ ಅಮೆರಿಕ ನಿರ್ಮಿತ ಎಂ4 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಮೃತದೇಹ ಹಾಗೂ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿರುವ ಭದ್ರತಾ ಪಡೆಗಳು ಮುಂದಿನ ತನಿಖೆ ಆರಂಭಿಸಿದ್ದು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಯಾಸಿರ್‌ನನ್ನು ಸೆಪ್ಟೆಂಬರ್ 5ರಂದು ಮಧ್ಯ ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಅಶ್ದರ್ ಗಲಿ ಪ್ರದೇಶದಲ್ಲಿ ನಡೆದ ‘ಆಪರೇಷನ್ ಅಶ್ದರ್’ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸಿಆರ್‌ಪಿಎಫ್ ತಂಡಗಳು ಭಾಗವಹಿಸಿದ್ದವು.

ಆ ಕಾರ್ಯಾಚರಣೆಯ ವೇಳೆ ಎಕೆ ರೈಫಲ್ ಸೇರಿದಂತೆ ಹಲವು ಯುದ್ಧೋಪಕರಣಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದವು. ಇದೀಗ ಯಾಸಿರ್‌ನ ಸ್ಥಳೀಯ ಸಂಪರ್ಕಗಳು ಹಾಗೂ ಆತನ ಚಟುವಟಿಕೆಗಳ ಕುರಿತು ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ.

ಮಹಿಳಾ ಏಷ್ಯಾಕಪ್ ಫೈನಲ್ʼನಲ್ಲಿ ಭಾರತ-ಶ್ರೀಲಂಕಾ ಕದನ: ಗೆದ್ದರೂ ಟೀಂ ಇಂಡಿಯಾಗೆ ಟ್ರೋಫಿ ಸಿಗಲ್ಲ, ಕಾರಣವೇನು?

0

2026ರ ಮಹಿಳಾ ಟಿ20 ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ. ಸೆಪ್ಟೆಂಬರ್ 13ರಂದು ನಡೆಯಲಿರುವ ಈ ಮಹತ್ವದ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟಕ್ಕೇರುವ ಗುರಿಯನ್ನು ಎರಡೂ ತಂಡಗಳು ಹೊಂದಿವೆ. ಅದರಲ್ಲೂ ಕಳೆದ ಆವೃತ್ತಿಯ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದೆ.

ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಭಾರತ ಅಜೇಯವಾಗಿ ಫೈನಲ್ ಪ್ರವೇಶಿಸಿದೆ. ಮತ್ತೊಂದೆಡೆ, ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಆತಿಥೇಯ ಶ್ರೀಲಂಕಾ ಕೂಡ ಅಜೇಯವಾಗಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ.

ಕಳೆದ ಆವೃತ್ತಿಯ ಏಷ್ಯಾಕಪ್ ಫೈನಲ್‌ನಲ್ಲೂ ಭಾರತ ಮತ್ತು ಶ್ರೀಲಂಕಾ ತಂಡಗಳೇ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತವನ್ನು ಮಣಿಸಿದ್ದ ಶ್ರೀಲಂಕಾ ಚಾಂಪಿಯನ್ ಆಗಿತ್ತು. ಹೀಗಾಗಿ ಈ ಬಾರಿ ಶ್ರೀಲಂಕಾವನ್ನು ಸೋಲಿಸಿ ಪ್ರಶಸ್ತಿ ಗೆಲ್ಲುವ ಮೂಲಕ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಲ್ಲಿ ಹರ್ಮನ್‌ಪ್ರೀತ್ ಕೌರ್ ಪಡೆ ಕಣಕ್ಕಿಳಿಯಲಿದೆ.

ಆದರೆ ಈ ಫೈನಲ್‌ನಲ್ಲಿ ಭಾರತ ಗೆದ್ದರೂ ಟ್ರೋಫಿ ಹಾಗೂ ಬಹುಮಾನದ ಹಣವನ್ನು ತಂಡ ತನ್ನಲ್ಲೇ ಉಳಿಸಿಕೊಳ್ಳುವುದಿಲ್ಲ ಎಂಬುದು ಗಮನಾರ್ಹ. ಬಿಸಿಸಿಐ ಹಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ, ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ ಲಭಿಸುವ ಬಹುಮಾನದ ಮೊತ್ತವನ್ನು ಏಷ್ಯಾದ ಇತರ ಕ್ರಿಕೆಟ್ ಮಂಡಳಿಗಳ ಅಭಿವೃದ್ಧಿಗಾಗಿ ನೀಡುವ ಸಾಧ್ಯತೆಯಿದೆ.

ಇನ್ನು ಟ್ರೋಫಿ ವಿಚಾರದಲ್ಲೂ ವಿಶೇಷ ಬೆಳವಣಿಗೆ ನಡೆದಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿರುವ ಪಾಕಿಸ್ತಾನದ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸುವ ವಿಚಾರದಲ್ಲಿ ಭಾರತೀಯ ತಂಡದ ನಿಲುವು ಕುತೂಹಲ ಮೂಡಿಸಿದೆ.

ಇತ್ತೀಚೆಗೆ ನಡೆದ ಪುರುಷರ ಏಷ್ಯಾಕಪ್‌ನಲ್ಲಿ ಭಾರತ ತಂಡ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳಾ ತಂಡವೂ ಇದೇ ನಿಲುವನ್ನು ಮುಂದುವರಿಸುವ ಸಾಧ್ಯತೆ ಇದೆ. ಹೀಗಾಗಿ ಭಾರತ ಚಾಂಪಿಯನ್ ಆದರೂ ಪ್ರಶಸ್ತಿ ಟ್ರೋಫಿಯನ್ನು ನಖ್ವಿ ಅವರಿಂದ ಸ್ವೀಕರಿಸದೇ ಇರುವ ಸಾಧ್ಯತೆಗಳು ಹೆಚ್ಚಿವೆ.

ಒಟ್ಟಿನಲ್ಲಿ ಸೆಪ್ಟೆಂಬರ್ 13ರಂದು ನಡೆಯಲಿರುವ ಭಾರತ-ಶ್ರೀಲಂಕಾ ಫೈನಲ್ ಕೇವಲ ಪ್ರಶಸ್ತಿ ಕದನವಷ್ಟೇ ಅಲ್ಲದೆ, ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಪಂದ್ಯವಾಗಿಯೂ ಕುತೂಹಲ ಮೂಡಿಸಿದೆ.