ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮನಕಲಕುವ ಘಟನೆ ನಡೆದಿದೆ.
ಕುಡಿತದ ಚಟಕ್ಕೆ ಬಿದ್ದು ನಿರಂತರವಾಗಿ ತಾಯಿಗೆ ಕಿರುಕುಳ ನೀಡುತ್ತಿದ್ದ ಮಗನನ್ನೇ ಹೆತ್ತ ತಾಯಿಯೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.
ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ರಮೇಶ್ (43) ಮೃತ ವ್ಯಕ್ತಿಯಾಗಿದ್ದು, ಈತನನ್ನು ಕೊಲೆ ಮಾಡಿದವರು ತಾಯಿ ಮಂಜುಳಾ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜುಳಾ ಬೇರೆಯವರ ಮನೆಗಳಲ್ಲಿ ಕೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದರು.
ಮಗ ರಮೇಶ್ಗೆ ಕುಡಿತದ ಚಟವಿದ್ದು, ಕೆಲಸಕ್ಕೂ ಹೋಗದೆ ಪ್ರತಿದಿನ ಕುಡಿಯಲು ಹಣಕ್ಕಾಗಿ ತಾಯಿಯನ್ನು ಪೀಡಿಸುತ್ತಿದ್ದ. ಈ ಕಾರಣದಿಂದ ಮನೆಯಲ್ಲಿ ನಿರಂತರವಾಗಿ ತಾಯಿ-ಮಗನ ನಡುವೆ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆಯ ದಿನ ತಾಯಿ ಮಂಜುಳಾ ಮಗನನ್ನು ಚಾಮುಂಡಿ ಬೆಟ್ಟದ ತಪ್ಪಲಿಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಗಲಾಟೆ ವಿಕೋಪಕ್ಕೆ ತಲುಪಿದಾಗ, ತಾಯಿ ಅಲ್ಲಿದ್ದ ಕಲ್ಲಿನಿಂದ ಮಗನ ತಲೆಗೆ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಸಿಕ್ಕ ನಂತರ ನಜರ್ಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಿದ್ದಾರೆ. ಬಳಿಕ ತಾಯಿ ಮಂಜುಳಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಕುಟುಂಬ ಸಂಬಂಧಗಳು ಹಾಗೂ ಕುಡಿತದ ಚಟದಿಂದ ಉಂಟಾಗುವ ಭೀಕರ ಪರಿಣಾಮಗಳ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದೆ.

