Home Blog

ಎಸ್‌ಐಆರ್ ಜಾರಿಯಲ್ಲೇ ನಗರಸಭೆ ಅಧಿಕಾರಿಗಳ ಇಂದೋರ್ ಪ್ರವಾಸ?

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲೇ ಗದಗ-ಬೆಟಗೇರಿ ನಗರಸಭೆಯ ಪೌರಾಯುಕ್ತರು, ಸಿಬ್ಬಂದಿ ಹಾಗೂ ಕೆಲ ಸದಸ್ಯರು ಕಸ ವಿಲೇವಾರಿ ಅಧ್ಯಯನದ ಹೆಸರಿನಲ್ಲಿ ಇಂದೋರ್‌ಗೆ ತೆರಳಿರುವುದನ್ನು ಖಂಡಿಸಿರುವ ಗದಗ ಜಿಲ್ಲಾ ಹೆಚ್.ಡಿ. ಕುಮಾರಸ್ವಾಮಿ ಬಳಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಾವಲ ಎಂ. ಮುಳಗುಂದ, ಇದು ಕರ್ತವ್ಯಲೋಪವಾಗಿದ್ದು ಕರದಾತರ ಹಣದ ದುರ್ಬಳಕೆ ಎಂದು ಆರೋಪಿಸಿದ್ದಾರೆ.

ಅವರು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದು, ನಗರದಲ್ಲಿ ರಸ್ತೆಗಳ ಮೇಲೆ ಕಸ ರಾಶಿ ಬಿದ್ದಿದ್ದು, ದುರ್ವಾಸನೆ ಹರಡುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಗರವನ್ನು ಬಿಟ್ಟು ಇಂದೋರ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಟೀಕಿಸಿದ್ದಾರೆ.

ನಗರಸಭೆಯ ಸುಮಾರು ₹10 ಲಕ್ಷ ಹಣವನ್ನು ಈ ಪ್ರವಾಸಕ್ಕೆ ಖರ್ಚು ಮಾಡಲಾಗಿದೆ ಎಂದು ಆರೋಪಿಸಿರುವ ಅವರು, ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದಲ್ಲೇ ಉತ್ತಮ ನಗರ ಸ್ಥಳೀಯ ಸಂಸ್ಥೆಗಳಿದ್ದಾಗ ಇಂದೋರ್‌ಗೆ ತೆರಳುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದ್ದಾರೆ.

ಈ ಹಿಂದೆ ವಿದೇಶ ಹಾಗೂ ಇತರ ನಗರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡಿದ್ದರೂ ಗದಗ-ಬೆಟಗೇರಿ ನಗರದ ಸ್ವಚ್ಛತೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ನಗರವನ್ನು ಸ್ವಚ್ಛವಾಗಿಡಲು ಪೌರ ಕಾರ್ಮಿಕರೇ ಶ್ರಮಿಸುತ್ತಿರುವಾಗ ಅಧಿಕಾರಿಗಳ ಪ್ರವಾಸದಿಂದ ಯಾವುದೇ ಪ್ರಯೋಜನವಿಲ್ಲ ಎಂದು ದೂರಿದರು.

ಪ್ರವಾಸಕ್ಕೆ ಖರ್ಚಾದ ಹಣವನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದಲೇ ವಸೂಲಿ ಮಾಡಬೇಕು. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಪತ್ರ ಬರೆದಿದ್ದು, ರಾಜ್ಯ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

“ನಗರದಲ್ಲಿ ಕಸದ ಸಮಸ್ಯೆ ಬಗೆಹರಿಸದೆ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಕರದಾತರ ಹಣ ವ್ಯಯ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಬೇಕು.”

– ದಾವಲ ಎಂ. ಮುಳಗುಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೆಚ್.ಡಿ. ಕುಮಾರಸ್ವಾಮಿ ಬಳಗ, ಗದಗ

ಮತದಾರರ ಜಾಗೃತಿಗೆ ಮುಂಡರಗಿಯಲ್ಲಿ ಬೈಕ್ ರ‍್ಯಾಲಿ

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ಪಟ್ಟಣದಲ್ಲಿ ಬೈಕ್ ರ‍್ಯಾಲಿ ಆಯೋಜಿಸಲಾಯಿತು.

ತಹಸೀಲ್ದಾರ್ ಕಚೇರಿಯಿಂದ ಆರಂಭವಾದ ರ‍್ಯಾಲಿಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾರರ ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ರ‍್ಯಾಲಿ ಬಳಿಕ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಎಲ್ಲ ಅರ್ಹರ ಹೆಸರು ಸೇರ್ಪಡೆಯಾಗುವಂತೆ ವಿವಿಧ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿರಸ್ತೆದಾರ ಚಿದಾನಂದ, ತಾಲೂಕು ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಜಗದೀಶ ಐರಣಿ, ಶಿಕ್ಷಕರ ಸಂಘದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಭಾಗವಹಿಸಿದ್ದರು.

“ನಿಖರ ಮತದಾರರ ಪಟ್ಟಿಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಬಿಎಲ್‌ಒಗಳಿಗೆ ಸರಿಯಾದ ಮಾಹಿತಿ ನೀಡಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು.”

– ವಿಜಯಕುಮಾರ ಬೆಣ್ಣೆ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ಮುಂಡರಗಿ

ಗೃಹಲಕ್ಷ್ಮಿಯಲ್ಲಿ ₹225 ಕೋಟಿ ಗೋಲ್‌ಮಾಲ್? ನಿರ್ಮಲಾ ಡಿ. ಕೊಳ್ಳಿ ಆರೋಪ

ವಿಜಯಸಾಕ್ಷಿ ಸುದ್ದಿ, ಗದಗ: ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಅಕ್ರಮ ನಡೆದಿದ್ದು, ಯೋಜನೆಯಡಿ ₹225 ಕೋಟಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂದು ಸಿಎಜಿ ವರದಿಯನ್ನು ಉಲ್ಲೇಖಿಸಿ ಗದಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಿರ್ಮಲಾ ಡಿ. ಕೊಳ್ಳಿ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿರುವ ಅವರು, ಚುನಾವಣೆಗೂ ಮುನ್ನ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ಹಾಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಈಗ ಯೋಜನೆಗಳ ಅನುಷ್ಠಾನದಲ್ಲಿ ವೈಫಲ್ಯ ತೋರಿದೆ ಎಂದು ದೂರಿದ್ದಾರೆ.

ಸಿಎಜಿ ವರದಿಯ ಪ್ರಕಾರ ಮೃತಪಟ್ಟ ಸುಮಾರು 1.08 ಲಕ್ಷ ಫಲಾನುಭವಿಗಳ ಹೆಸರಿನಲ್ಲಿ ₹116 ಕೋಟಿ, ಬ್ಯಾಂಕ್ ಖಾತೆ ವಿವರಗಳಿಲ್ಲದ 23,262 ಮಂದಿಗೆ ₹46.65 ಕೋಟಿ, ಒಂದೇ ಬ್ಯಾಂಕ್ ಖಾತೆಗೆ 19,020 ಫಲಾನುಭವಿಗಳ ಹೆಸರಿನಲ್ಲಿ ₹60.70 ಕೋಟಿ ಜಮೆ ಮಾಡಲಾಗಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ಪರಿಶೀಲನೆ ಹೆಸರಿನಲ್ಲಿ ರಾಜ್ಯದಾದ್ಯಂತ 6 ಲಕ್ಷಕ್ಕೂ ಹೆಚ್ಚು ಅರ್ಹ ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ ಅವರು, ಗೃಹಜ್ಯೋತಿ ಯೋಜನೆಯಲ್ಲೂ ಹೊಸ ಷರತ್ತುಗಳನ್ನು ವಿಧಿಸಿ ಫಲಾನುಭವಿಗಳಿಗೆ ತೊಂದರೆ ಉಂಟು ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಯೋಜನೆಯಿಂದ ಕೈಬಿಟ್ಟಿರುವ ಅರ್ಹ ಫಲಾನುಭವಿಗಳನ್ನು ಕೂಡಲೇ ಮರುಸೇರ್ಪಡೆಗೊಳಿಸಿ, ಬಾಕಿ ಇರುವ ಹಣವನ್ನು ಜಮೆ ಮಾಡಬೇಕು. ಗೃಹಜ್ಯೋತಿ ಯೋಜನೆಯಲ್ಲಿನ ಜಟಿಲ ನಿಯಮಗಳನ್ನು ಸಡಿಲಗೊಳಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಮಹಿಳೆಯರಿಗೆ ಉಚಿತ ಯೋಜನೆಗಳ ಬದಲಿಗೆ ಉದ್ಯೋಗ ಸೃಷ್ಟಿ, ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಸ್ವಾವಲಂಬಿ ಬದುಕಿಗೆ ಅವಕಾಶ ಮಾಡಿಕೊಡಬೇಕು ಎಂದು ನಿರ್ಮಲಾ ಡಿ. ಕೊಳ್ಳಿ ಒತ್ತಾಯಿಸಿದರು.

ಅಲ್ಲದೆ, ಮಹಿಳೆಯರ ಹಕ್ಕುಗಳ ರಕ್ಷಣೆ ಹಾಗೂ ಯೋಜನೆಗಳಲ್ಲಿನ ಅಕ್ರಮವನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

“ಮಹಿಳೆಯರಿಗೆ ಉಚಿತ ಭಾಗ್ಯಗಳ ಭಿಕ್ಷೆ ಬೇಡ; ಗೌರವಯುತ ಬದುಕಿಗೆ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ಸರ್ಕಾರ ಕಲ್ಪಿಸಬೇಕು.”

– ನಿರ್ಮಲಾ ಡಿ. ಕೊಳ್ಳಿ, ಜಿಲ್ಲಾಧ್ಯಕ್ಷೆ, ಬಿಜೆಪಿ ಮಹಿಳಾ ಮೋರ್ಚಾ, ಗದಗ

ಮಳೆಗಾಲದಲ್ಲಿ ಕುಡಿಯುವ ನೀರು, ಆರೋಗ್ಯಕ್ಕೆ ಮೊದಲ ಆದ್ಯತೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಳೆಗಾಲದಲ್ಲಿ ಕುಡಿಯುವ ನೀರಿನ ಲಭ್ಯತೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ನೀರಿನ ಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕಾಲುವೆ ಹಾಗೂ ಕೆರೆಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡದಂತೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಚಿಕನ್‌ಗುನ್ಯಾ ಹಾಗೂ ಮಲೇರಿಯಾ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ದೇವಾಲಯಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಮತ್ತು ಸ್ವಚ್ಛತಾ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ಸೋರಿಕೆ ಕಂಡುಬಂದ ತಕ್ಷಣ ಸಂಬಂಧಿತ ಇಲಾಖೆಗಳು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಹೊಸ ಬೋರ್‌ವೆಲ್ ಕೊರೆಸಲು ಅನುಮತಿ ನೀಡಬಾರದು ಎಂದು ತಿಳಿಸಿದರು.

ಮಳೆಗಾಲದಲ್ಲಿ ಸಿಡಿಲು ಬಡಿತದ ಅಪಾಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜನ, ಜಾನುವಾರು ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ತಿಳಿಸಬೇಕು. ಪಿಡಿಒಗಳು ಹಾಗೂ ಗ್ರಾಮ ಸಹಾಯಕರು ಮಳೆಮಾಪಕ (ರೇನ್‌ಗೇಜ್) ಸಾಧನಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆಯು ಪ್ರತಿಯೊಬ್ಬ ರೈತನಿಗೂ ಬೆಳೆ ವಿಮೆ ಕುರಿತು ಮಾಹಿತಿ ತಲುಪಿಸಬೇಕು. ಯಾವುದೇ ರೈತ ಬೆಳೆ ವಿಮೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಪ್ರತಿ ತಿಂಗಳು ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ಕುಡಿಯುವ ನೀರು, ಸ್ವಚ್ಛತೆ ಹಾಗೂ ಶೌಚಾಲಯ ವ್ಯವಸ್ಥೆ ಪರಿಶೀಲಿಸಬೇಕು. ದೇವಾಲಯಗಳ ಅಭಿವೃದ್ಧಿಗೆ ಅಗತ್ಯ ಯೋಜನೆ ರೂಪಿಸಬೇಕು ಎಂದರು.

ತಾಲೂಕು ಮಟ್ಟದ ಕ್ರೀಡಾಂಗಣಗಳ ನಿರ್ಮಾಣಕ್ಕೆ ಅಗತ್ಯ ಸ್ಥಳ ಗುರುತಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆಯ ಬಾಕಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ಎಲ್ಲ ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

“ಮಳೆಗಾಲದಲ್ಲಿ ಕುಡಿಯುವ ನೀರಿನ ಸಂರಕ್ಷಣೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಯಾವುದೇ ನಿರ್ಲಕ್ಷ್ಯ ಸಹಿಸಲಾಗದು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.”

– ಸ್ನೇಹಲ್ ಆರ್., ಜಿಲ್ಲಾಧಿಕಾರಿ, ಧಾರವಾಡ

ಒಂದು ವಾರದಲ್ಲಿ ಕಾಮಗಾರಿ ಪ್ರಗತಿ ತೋರಿಸಿ: ಸಂಸದ ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಗದಗ: ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ಗದಗ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ವಿಳಂಬಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಒಂದು ವಾರದೊಳಗೆ ಬಾಕಿ ಇರುವ ಎಲ್ಲಾ ಪ್ರಗತಿ ವರದಿಗಳನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಎಂಪಿಎಲ್‌ಎಡಿಎಸ್ ಹಾಗೂ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2024-25 ಹಾಗೂ 2025-26ನೇ ಸಾಲಿನ ಅನುದಾನದಡಿ ಒಟ್ಟು 35 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಇದುವರೆಗೆ ಕೇವಲ 8 ಕಾಮಗಾರಿಗಳು ಮಾತ್ರ ಪೂರ್ಣಗೊಂಡಿವೆ. 11 ಕಾಮಗಾರಿಗಳಿಗೆ ಅಂದಾಜು ಪತ್ರಿಕೆ ಸಲ್ಲಿಕೆಯಾಗದೇ ಹಾಗೂ 16 ಕಾಮಗಾರಿಗಳಿಗೆ ಎರಡನೇ ಹಂತದ ಅನುದಾನ ಬಿಡುಗಡೆಗೆ ಅಗತ್ಯ ಪ್ರಸ್ತಾವನೆ ಸಲ್ಲಿಸದೇ ಅಧಿಕಾರಿಗಳು ವಿಳಂಬ ಮಾಡಿರುವುದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಾರ್ವಜನಿಕರ ಹಣ ವ್ಯರ್ಥವಾಗದಂತೆ ಆರ್‌ಟಿಸಿ, ಈ-ಸ್ವತ್ತು, ಆಸ್ತಿ ದಾಖಲೆ ಹಾಗೂ ಕಟ್ಟಡ ನಿರ್ಮಾಣ ಪರವಾನಗಿ ಸಂಬಂಧಿತ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಒಂದು ವಾರದೊಳಗೆ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಚರ್ಚೆಯಾದ ಐದು ಪ್ರಮುಖ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರು ಅಥವಾ ಅನುಷ್ಠಾನ ಸಂಸ್ಥೆಗಳು ನಿಗದಿತ ಅವಧಿಯಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೆ, ಆ ಕಾಮಗಾರಿಗಳ ಅನುದಾನವನ್ನು ರದ್ದುಪಡಿಸಿ ಬೇರೆ ಅಗತ್ಯ ಕಾಮಗಾರಿಗಳಿಗೆ ಮರುಹಂಚಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಸಭಾಭವನ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಕಂಪ್ಯೂಟರ್ ಉತಾರದಲ್ಲಿನ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ನಿಯಮಾನುಸಾರ ಕಾಮಗಾರಿ ಆರಂಭಿಸಲು ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳ ಸ್ಮಶಾನ ವೈರಾಗ್ಯ ಧಾಮ, ಅಂಬೇಡ್ಕರ್ ಭವನ ಹಾಗೂ ಸಮುದಾಯ ಭವನಗಳ ಕಾಮಗಾರಿಗಳಿಗೆ ಅಗತ್ಯ ದಾಖಲೆ ಮತ್ತು ನಿರಾಕ್ಷೇಪಣಾ ಪತ್ರಗಳನ್ನು ಶೀಘ್ರವಾಗಿ ಪಡೆಯುವಂತೆ ನಿರ್ದೇಶಿಸಿದರು.

ಕೇಂದ್ರ ಸರ್ಕಾರದ ದರ್ಪಣ್ ಪೋರ್ಟಲ್‌ನಲ್ಲಿ ಎಲ್ಲಾ ಕಾಮಗಾರಿಗಳ ಜಿಪಿಎಸ್ ಮಾಹಿತಿ ಹಾಗೂ ಪ್ರಗತಿ ವಿವರಗಳನ್ನು ಕಾಲಕಾಲಕ್ಕೆ ಕಡ್ಡಾಯವಾಗಿ ನವೀಕರಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸಂಸದರು ನೀಡಿರುವ ಸೂಚನೆಗಳನ್ನು ಗಂಭೀರವಾಗಿ ಅನುಷ್ಠಾನಗೊಳಿಸಲಾಗುವುದು. ಒಂದು ವಾರದೊಳಗೆ ಬಾಕಿ ಇರುವ ಎಲ್ಲಾ ಅಂದಾಜು ಪತ್ರಿಕೆ ಹಾಗೂ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ತಾಂತ್ರಿಕ ನೆಪ ಹೇಳಿ ಕಾಮಗಾರಿಗಳನ್ನು ವಿಳಂಬಗೊಳಿಸುವುದನ್ನು ಸಹಿಸುವುದಿಲ್ಲ. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ವಿವಿಧ ಇಲಾಖೆಗಳ ಕಾರ್ಯಪಾಲಕ ಅಭಿಯಂತರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಒಂದು ವಾರದೊಳಗೆ ದಾಖಲೆಗಳನ್ನು ಪೂರ್ಣಗೊಳಿಸಿ ಕಾಮಗಾರಿಗಳಿಗೆ ವೇಗ ನೀಡಿ. ವಿಳಂಬ ಮುಂದುವರಿದರೆ ಅನುದಾನ ರದ್ದುಪಡಿಸಿ ಬೇರೆ ಕಾಮಗಾರಿಗಳಿಗೆ ಮರುಹಂಚಿಕೆ ಮಾಡಲಾಗುವುದು.”

– ಬಸವರಾಜ ಬೊಮ್ಮಾಯಿ, ಸಂಸದ, ಹಾವೇರಿ–ಗದಗ ಲೋಕಸಭಾ ಕ್ಷೇತ್ರ

ವಿದ್ಯಾರ್ಥಿಗಳ ಜಾಗೃತಿ ಜಾಥಾ ಮೂಲಕ ಎಸ್‌ಐಆರ್ ಅರಿವು

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್–2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು.

ಪಟ್ಟಣದ ವಿದ್ಯಾರಣ್ಯ ಸರ್ಕಲ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಕೃಷ್ಣಪ್ಪ ಧರ್ಮರ ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ತೆರಳಿ ಎಸ್‌ಐಆರ್ ನಮೂನೆಗಳನ್ನು ವಿತರಿಸುತ್ತಿದ್ದು, ಮತದಾರರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕು. ನಿಖರ ಮತದಾರರ ಪಟ್ಟಿಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕ-ಯುವತಿಯೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ತಮ್ಮ ಮನೆ, ನೆರೆಹೊರೆ ಹಾಗೂ ಸಮುದಾಯದಲ್ಲಿ ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸುವ ಮೂಲಕ ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅವರು ಹೇಳಿದರು.

ಜಾಥಾದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಹವಾಲ್ದಾರ್, ಇಸಿಒ ಆರ್.ಬಿ. ಜೋಶಿ, ಸಿಆರ್‌ಪಿಗಳಾದ ಉಮೇಶ್ ನೇಕಾರ್, ಎನ್.ಎ. ಮುಲ್ಲಾ, ತಾಲೂಕು ಪಂಚಾಯಿತಿ ಸಿಬ್ಬಂದಿ ಶ್ರೀಕಾಂತ, ಶಿಕ್ಷಕರಾದ ಪಿ.ಎಚ್. ಕೊಂಡಾಬಿಂಗಿ, ಆರ್.ಎಂ. ಕದಡಿ, ಲಕ್ಷ್ಮಣ ಪೂಜಾರ, ಕಾಂತೇಶ್ ಮುದುಗಲ್ ಸೇರಿದಂತೆ ಪಟ್ಟಣದ ವಿವಿಧ ಪ್ರೌಢಶಾಲೆಗಳ ಶಿಕ್ಷಕರು ಹಾಗೂ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

“ಸರಿಯಾದ ಮತ್ತು ನಿಖರ ಮತದಾರರ ಪಟ್ಟಿಯಿಂದ ಮಾತ್ರ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯ. ಮತದಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಮಾತ್ರವಲ್ಲ, ಜವಾಬ್ದಾರಿಯೂ ಆಗಿದೆ.”

– ಕೃಷ್ಣಪ್ಪ ಧರ್ಮರ, ಸಹಾಯಕ ನಿರ್ದೇಶಕರು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ

ಹಳೆ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ನೌಕರರಿಗೆ ಅನುಕೂಲವಾಗುವಂತೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಸದಸ್ಯರು ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಎಂ. ಧನಂಜಯ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಸಭಾಂಗಣದಲ್ಲಿ ನಡೆದ ಸಮಾವೇಶದ ಬಳಿಕ ಸಂಘದ ಅಧ್ಯಕ್ಷ ಎಸ್.ಸಿ. ಗೋಲಪ್ಪನವರ, ಆರ್.ಎಚ್. ನರೇಗಲ್ಲ ಹಾಗೂ ಎಲ್.ಎಸ್. ಅರಳಹಳ್ಳಿ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ತಹಸೀಲ್ದಾರ್ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಲ್.ಎಸ್. ಅರಳಹಳ್ಳಿ, 2006ರ ನಂತರ ನೇಮಕಗೊಂಡ ಅನುದಾನಿತ ಶಾಲಾ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹಳೆ ಪಿಂಚಣಿ ಯೋಜನೆಯನ್ನು ಸರ್ಕಾರ ಇನ್ನೂ ಜಾರಿಗೆ ತಂದಿಲ್ಲ. ಹಲವು ಬಾರಿ ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ಕೂಡಲೇ ಓಪಿಎಸ್ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಅನುದಾನಿತ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಕಾಲ್ಪನಿಕ ವೇತನ ಜಾರಿಗೊಳಿಸುವುದು, ಕೆಪಿಎಸ್ ಹಾಗೂ ಪಿಎಂ ಶ್ರೀ ಶಾಲೆಗಳನ್ನು ಅನುದಾನಿತ ಶಾಲೆಗಳಿಂದ ಮೂರು ಕಿಲೋಮೀಟರ್ ವ್ಯಾಪ್ತಿಯ ಹೊರಗೆ ಆರಂಭಿಸುವುದು, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ದೊರೆಯುವ ಸೌಲಭ್ಯಗಳನ್ನು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೂ ವಿಸ್ತರಿಸುವುದು, ಶಿಕ್ಷಕರಿಗೆ ಬೋಧನಾ ಕಾರ್ಯ ಹೊರತುಪಡಿಸಿ ಇತರೆ ಕೆಲಸಗಳನ್ನು ನೀಡದಿರುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎ.ಜಿ. ಲಿಂಗಶೆಟ್ಟರ, ಬಿ.ಬಿ. ಬಳಿಗಾರ, ವಿ.ಸಿ. ಬೆಂಡಿಗೇರಿ, ಎಂ.ಬಿ. ಕಲ್ಲೂರ, ಟಿ.ಎಸ್. ಹೂಗಾರ, ಆರ್.ಆರ್. ಅಯ್ಯನಗೌಡ್ರ, ಪಿ.ಟಿ. ಪವಾರ, ಎಸ್.ಬಿ. ಬೆಟಗೇರಿ, ಎ.ಬಿ. ಹೂಗಾರ, ಎಂ.ಎಚ್. ಬೆಳಗಟ್ಟಿ, ವಿ.ಎಸ್. ಹಿರೇಮಠ, ಎಂ.ಎಸ್. ಚೌಧರಿ, ಆರ್.ಎಚ್. ನರೇಗಲ್ಲ, ಜಿ.ಎನ್. ಮೆಳ್ಳಳ್ಳಿ, ಎಂ.ಸಿ. ಹಿರೇಮಠ, ಆರ್.ಸಿ. ಉಮಚಗಿ, ಎಸ್.ಎಸ್. ಮಠದ, ಎಸ್.ಎಂ. ಹಾದಿಮನಿ, ಎ.ಎಂ. ಛತ್ರದ, ಎಲ್.ಎಂ. ಹುರಳಿಕೊಪ್ಪಿ, ಪಿ.ಎಲ್. ಪಾಟೀಲ, ಶೀಲಾ ತಳವಾರ ಸೇರಿದಂತೆ ಹಲವರು ಭಾಗವಹಿಸಿದ್ದರು.

“2006ರ ನಂತರ ನೇಮಕಗೊಂಡ ಅನುದಾನಿತ ಶಾಲಾ ನೌಕರರ ಬಹುದಿನಗಳ ಬೇಡಿಕೆಯಾಗಿರುವ ಹಳೆ ಪಿಂಚಣಿ ಯೋಜನೆಯನ್ನು ಸರ್ಕಾರ ಕೂಡಲೇ ಮರುಜಾರಿಗೊಳಿಸಬೇಕು.”

– ಎಲ್.ಎಸ್. ಅರಳಹಳ್ಳಿ, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ

ಅಧಿಕಾರಿಗಳ ಅಂಕಿ-ಅಂಶದಲ್ಲಿ ವ್ಯತ್ಯಾಸ: ತಾಪಂ ಸಭೆಯಲ್ಲಿ ತರಾಟೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಗಾಗಿ ಶನಿವಾರ ಶಿರಹಟ್ಟಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹಾಗೂ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಎ.ಎ. ಕಂಬಾಳಿಮಠ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.

ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಅಧಿಕಾರಿ, ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳ ಬಿತ್ತನೆ ಆಗಿಲ್ಲ ಎಂದು ಮಾಹಿತಿ ನೀಡುತ್ತಿದ್ದಂತೆ ಮಧ್ಯಪ್ರವೇಶಿಸಿದ ಎ.ಎ. ಕಂಬಾಳಿಮಠ, “ಜಿಲ್ಲಾ ಮಟ್ಟದ ಜಂಟಿ ನಿರ್ದೇಶಕರು ಬಿತ್ತನೆಯಾಗಿದೆ ಎಂದು ವರದಿ ನೀಡಿದ್ದಾರೆ. ಹಾಗಾದರೆ ಸರಿಯಾದ ಮಾಹಿತಿ ಯಾವುದು? ಅಧಿಕಾರಿಗಳು ಸಭೆಗೆ ಬರುವಾಗ ಸಂಪೂರ್ಣ ಹಾಗೂ ನಿಖರ ಅಂಕಿ-ಅಂಶಗಳೊಂದಿಗೆ ಹಾಜರಾಗಬೇಕು. ಹಾರಿಕೆ ಅಂಕಿ-ಅಂಶಗಳನ್ನು ನೀಡಬಾರದು,” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಜೂನ್ 1ರಿಂದ ಜುಲೈ 4ರವರೆಗೆ 102 ಮಿ.ಮೀ. ವಾಡಿಕೆ ಮಳೆಯ ಬದಲಿಗೆ 78 ಮಿ.ಮೀ. ಮಾತ್ರ ಮಳೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಮಾಹಿತಿ ನೀಡಿದರು. ಈಗಾಗಲೇ 2,200 ಹೆಕ್ಟೇರ್ ಹೆಸರು ಹಾಗೂ 27,000 ಹೆಕ್ಟೇರ್ ಗೋವಿನಜೋಳ ಬಿತ್ತನೆಯಾಗಿದ್ದು, 385 ಟನ್ ಯೂರಿಯಾ ಮತ್ತು 38 ಟನ್ ಡಿಎಪಿ ಗೊಬ್ಬರ ಸಂಗ್ರಹವಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕಂಬಾಳಿಮಠ, ಕಡಿಮೆ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿಯಾಗದಂತೆ ರೈತರಲ್ಲಿ ಜಾಗೃತಿ ಮೂಡಿಸಬೇಕು. ಬೆಳೆ ವಿಮೆ ನೋಂದಣಿ ಕುರಿತು ವ್ಯಾಪಕ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ, ಯೋಜನಾಧಿಕಾರಿ ಎಚ್.ಎ. ಕೊಂಡಿಕೊಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅಂಧ–ಅನಾಥರ ಬದುಕಿಗೆ ಬೆಳಕಾದ ಉಭಯ ಗುರುಗಳು: ಡಾ. ಅನ್ನದಾನೀಶ್ವರ ಶಿವಯೋಗಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡನಾಡಿಗೆ ಪಂಡಿತ ಪಂಚಾಕ್ಷರಿ ಗವಾಯಿಗಳು ಹಾಗೂ ಪಂಡಿತ ಡಾ. ಪುಟ್ಟರಾಜ ಕವಿ ಗವಾಯಿಗಳಂತಹ ಮಹಾನ್ ಗುರುಗಳು ದೊರೆತಿರುವುದು ನಮ್ಮೆಲ್ಲರ ಪುಣ್ಯ. ಉಭಯ ಗುರುಗಳು ಅಂಧ–ಅನಾಥರ ಸೇವೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಸಂಗೀತದ ಮೂಲಕ ಸಾವಿರಾರು ಮಂದಿಯ ಬದುಕಿಗೆ ಬೆಳಕು ನೀಡಿದರು ಎಂದು ಮುಂಡರಗಿಯ ಜಗದ್ಗುರು ಡಾ. ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.

ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 82ನೇ ಹಾಗೂ ಲಿಂ. ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 16ನೇ ಪುಣ್ಯಸ್ಮರಣೋತ್ಸವ ಮತ್ತು ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ನಡೆದ ಕೀರ್ತನ ಸಮ್ಮೇಳನದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಹಾನಗಲ್ ಕುಮಾರೇಶ್ವರ ಶಿವಯೋಗಿಗಳು ಗದಿಗೆಯ್ಯನವರಿಗೆ ಸಂಗೀತ ಶಿಕ್ಷಣ ನೀಡದಿದ್ದರೆ ಪಂಚಾಕ್ಷರಿ ಗವಾಯಿಗಳು ರೂಪುಗೊಳ್ಳುತ್ತಿರಲಿಲ್ಲ. ಅದೇ ರೀತಿ ಪುಟ್ಟರಾಜ ಕವಿ ಗವಾಯಿಗಳು ಅಂಧ–ಅನಾಥರಿಗೆ ಸಂಗೀತ ಶಿಕ್ಷಣ ನೀಡದಿದ್ದರೆ ಗದುಗಿನ ವೀರೇಶ್ವರ ಪುಣ್ಯಾಶ್ರಮವು ಸಂಗೀತ ಕಾಶಿಯಾಗಿ ಬೆಳೆದಿರುತ್ತಿರಲಿಲ್ಲ. ಅವರ ಆದರ್ಶ, ಕೃಪಾಶೀರ್ವಾದದಿಂದ ಆಶ್ರಮದ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಕಪೋತಗಿರಿ ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶಿವಕುಮಾರ ಮಹಾಸ್ವಾಮಿಗಳು ಮಾತನಾಡಿ, ಉಭಯ ಗುರುಗಳು ವೀರೇಶ್ವರ ಪುಣ್ಯಾಶ್ರಮವನ್ನು ಸಂಗೀತದ ಕಾಶಿಯನ್ನಾಗಿ ರೂಪಿಸಿದ್ದಾರೆ. ಆಶ್ರಮದಲ್ಲಿ ಸಂಗೀತ, ಸಾಹಿತ್ಯ, ಕಲೆ ಹಾಗೂ ಧಾರ್ಮಿಕ ಚಟುವಟಿಕೆಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಓಂಕಾರಗಿರಿಯ ಓಂಕಾರೇಶ್ವರ ಹಿರೇಮಠದ ಫಕ್ಕೀರೇಶ್ವರ ಪಟ್ಟಾಧ್ಯಕ್ಷರು ಮಾತನಾಡಿ, ಧರ್ಮದ ಉಳಿವಿಗೆ ಹಿಂದಿನ ಮಹಾತ್ಮರು ಅಪಾರ ಶ್ರಮಿಸಿದ್ದಾರೆ. ಆಶ್ರಮವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಧರ್ಮವಾಗಿದೆ. ಕಲಾವಿದರು ತಮ್ಮ ಸಾಧನೆಯ ಮೂಲಕ ಆಶ್ರಮದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.

ಗದುಗಿನ ಆಧ್ಯಾತ್ಮ ವಿದ್ಯಾಶ್ರಮದ ಡಾ. ಶಿವಶರಣೆ ನೀಲಮ್ಮ ತಾಯಿ ಮಾತನಾಡಿ, ಒಂದು ಕಾಲದಲ್ಲಿ ಸಂಗೀತವು ಶ್ರೀಮಂತರ ಸ್ವತ್ತಾಗಿತ್ತು. ಉಭಯ ಗುರುಗಳು ಅಂಧ–ಅನಾಥರಿಗೆ ಸಂಗೀತ ಶಿಕ್ಷಣ ನೀಡಿ ಅವರ ಬದುಕಿಗೆ ಹೊಸ ದಿಕ್ಕು ತೋರಿಸಿದರು. ಸಂಗೀತದ ಮೂಲಕ ಸಮಾಜ ಸೇವೆ ಮಾಡಿದ ಅವರ ಕೊಡುಗೆ ಅಮೂಲ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಅಡ್ನೂರ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ಸಂಗಮೇಶ ಗವಾಯಿಗಳು ಸಮ್ಮುಖ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶೇಖಣ್ಣ ಗದ್ದಿಕೇರಿ, ವಿ. ಜಂಬನಗೌಡ್ರು, ವೈ. ಮೃತ್ಯುಂಜಯ, ಎಸ್.ಪಿ. ಪಂಪನಗೌಡ, ಎಸ್. ಗುರುಪಂಚಾಕ್ಷರಿ, ಬೆಂಗಳೂರಿನ ಹೇಮಾ ಮಾತಾಜಿ–ಮನೋಹರ ಗುರೂಜಿ, ಎಚ್. ನಾಗನಗೌಡರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪೂಜ್ಯ ಕಲ್ಲಯ್ಯಜ್ಜನವರು ಆಶೀರ್ವಚನ ಹಾಗೂ ಮಂಗಳಾಶಯ ಸಲ್ಲಿಸಿದರು. ಡಾವಣಗೆರೆ ಮತ್ತು ಶಿವಮೊಗ್ಗ ಶಾಖಾ ಆಶ್ರಮಗಳ ಅಂಧ ವಿದ್ಯಾರ್ಥಿಗಳು ಪ್ರಾರ್ಥನೆ ಹಾಗೂ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಿದರು. ಹರ್ಲಾಪೂರದ ಸದಾನಂದ ಶಾಸ್ತ್ರಿಗಳು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಬಳಿಕ ನಾಡಿನ ವಿವಿಧ ಸಂಗೀತಗಾರರಿಂದ ಅಹೋರಾತ್ರಿ ಸಂಗೀತ ಸಮಾರಾಧನೆ ನಡೆಯಿತು.

“ಪಂಚಾಕ್ಷರಿ ಗವಾಯಿಗಳು ಮತ್ತು ಪುಟ್ಟರಾಜ ಗವಾಯಿಗಳು ಅಂಧ–ಅನಾಥರ ಬದುಕನ್ನು ಸಂಗೀತದ ಮೂಲಕ ಬೆಳಗಿಸಿದ ಮಹಾನ್ ಸಂತರು. ಅವರ ಸೇವೆಯನ್ನು ಮುಂದುವರಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ.”

– ಜಗದ್ಗುರು ಡಾ. ಅನ್ನದಾನೀಶ್ವರ ಶಿವಯೋಗಿಗಳು, ಮುಂಡರಗಿ

ಶಿವಮೊಗ್ಗದಲ್ಲಿ ಭೀಕರ ದುರಂತ: ಮರದ ರೆಂಬೆ ಬಿದ್ದು ಬೈಕ್ ಸವಾರ ಸಾವು!

ಶಿವಮೊಗ್ಗ: ಹೊಸನಗರ ತಾಲೂಕಿನ ತಾರಿಗ ಗ್ರಾಮ ಮಾರ್ಗದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ.

ಚಲಿಸುತ್ತಿದ್ದ ಬೈಕ್ ಮೇಲೆ ರಸ್ತೆ ಬದಿಯ ಒಣಮರದ ರೆಂಬೆ ಮುರಿದು ಬಿದ್ದ ಪರಿಣಾಮ 26 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತರನ್ನು ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದ ಸಂತೋಷ್ (26) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಮತ್ತೊಬ್ಬ ಯುವಕ ವೀರಭದ್ರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ, ಇಬ್ಬರೂ ಮೀನು ಹಿಡಿಯಲು ಬೇಕಾದ ಸಾಮಾನುಗಳನ್ನು ತೆಗೆದುಕೊಂಡು ಬೈಕ್‌ನಲ್ಲಿ ತಾರಿಗ ಗ್ರಾಮದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಸುಮಾರು 50 ಅಡಿ ಎತ್ತರದ ಒಣಮರದ ದೊಡ್ಡ ರೆಂಬೆ ಏಕಾಏಕಿ ಮುರಿದು ಅವರ ಬೈಕ್ ಮೇಲೆ ಬಿದ್ದಿದೆ.

ರೆಂಬೆ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ. ಇದರಿಂದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ರಿಪ್ಪನ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.