Home Blog

ಅಡುಗೆಮನೆಯಲ್ಲಿ ‘ಸೈಲೆಂಟ್ ಕಿಲ್ಲರ್’ ಸ್ಪಾಂಜ್: ಆರೋಗ್ಯಕ್ಕೆ ಭಾರಿ ಅಪಾಯ!

ಅಡುಗೆಮನೆಯಲ್ಲಿ ಪಾತ್ರೆ ತೊಳೆಯುವ ಸ್ಪಾಂಜ್‌ಗಳ ಸ್ವಚ್ಛತೆಯನ್ನು ನಿರ್ಲಕ್ಷಿಸುವುದು ಆರೋಗ್ಯಕ್ಕೆ ಗಂಭೀರ ಅಪಾಯ ಉಂಟುಮಾಡಬಹುದು.

ಸದಾ ಒದ್ದೆಯಾಗಿರುವ ಸ್ಪಾಂಜ್‌ಗಳಲ್ಲಿ ಆಹಾರ ಅವಶೇಷಗಳು ಜಮೆಯಾಗುತ್ತಿದ್ದು, ಇ. ಕೋಲಿ ಸೇರಿದಂತೆ ಅಪಾಯಕಾರಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಕೆಲ ಸಂದರ್ಭಗಳಲ್ಲಿ ಇವು ಶೌಚಾಲಯದ ಸೀಟಿಗಿಂತಲೂ ಹೆಚ್ಚು ಕೊಳೆಯನ್ನು ಹೊಂದಿರಬಹುದು.

ಈ ಬ್ಯಾಕ್ಟೀರಿಯಾಗಳು ಪಾತ್ರೆ ಮತ್ತು ಅಡುಗೆಮನೆಯ ಮೇಲ್ಮೈಗಳ ಮೂಲಕ ದೇಹಕ್ಕೆ ಪ್ರವೇಶಿಸಿದರೆ ವಾಂತಿ, ಅತಿಸಾರ, ಹೊಟ್ಟೆ ನೋವು ಮೊದಲಾದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಲ್ಲಿ ರೋಗನಿರೋಧಕ ಶಕ್ತಿ ಕುಗ್ಗುವ ಅಪಾಯ ಹೆಚ್ಚಾಗಿದೆ.

ಆರೋಗ್ಯದ ದೃಷ್ಟಿಯಿಂದ ಸ್ಪಾಂಜ್‌ಗಳನ್ನು ಪ್ರತಿ 1–2 ವಾರಗಳಿಗೊಮ್ಮೆ ಮತ್ತು ಬ್ರಷ್‌ಗಳನ್ನು 1–2 ತಿಂಗಳಿಗೊಮ್ಮೆ ಬದಲಾಯಿಸುವುದು ಅಗತ್ಯ. ಜೊತೆಗೆ, ಪ್ರತಿ ಬಳಕೆಯ ನಂತರ ತೊಳೆಯುವುದು, ಬೆಚ್ಚಗಿನ ನೀರು ಮತ್ತು ಸಾಬೂನಿನಿಂದ ಸ್ವಚ್ಛಗೊಳಿಸುವುದು, ಮೈಕ್ರೋವೇವ್ ಅಥವಾ ಕುದಿಯುವ ನೀರಿನಲ್ಲಿ ನಿಷ್ಕ್ರಿಯಗೊಳಿಸುವುದು ಉತ್ತಮ ವಿಧಾನಗಳಾಗಿವೆ.

ಅಡಿಗೆ ಸೋಡಾ ಬಳಸಿ ಸ್ಪಾಂಜ್‌ಗಳಲ್ಲಿನ ದುರ್ವಾಸನೆ ಮತ್ತು ಬ್ಯಾಕ್ಟೀರಿಯಾಗಳನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ.

ಬಂಡಾಯ ಮಣಿಸಿ ದಾವಣಗೆರೆ ಉಪ ಚುನಾವಣೆಯಲ್ಲಿ ಗೆದ್ದ ಸಮರ್ಥ್ ಶಾಮನೂರು

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಉಪಚುನಾವಣೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲು ಕಂಡಿದ್ದು, ಕಾಂಗ್ರೆಸ್ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸ್ ಕರಿಯಪ್ಪ ವಿರುದ್ಧ 5,708 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಸಮರ್ಥ್ ಶಾಮನೂರು 69,578 ಮತಗಳನ್ನು ಪಡೆದಿದ್ದರೆ, ಶ್ರೀನಿವಾಸ ದಾಸ್ ಕರಿಯಪ್ಪ 63,870 ಮತಗಳನ್ನು ಗಳಿಸಿದ್ದಾರೆ.

ಇನ್ನು ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,975 ಮತಗಳನ್ನು ಪಡೆದಿದ್ದು, ನೋಟಾಗೆ 511 ಮತಗಳು ಚಲಾವಣೆಯಾಗಿವೆ.

ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಸಿಗದ ಹಿನ್ನೆಲೆ ಕೆಲ ನಾಯಕರು ಅಸಮಾಧಾನಗೊಂಡು ಬಂಡಾಯ ಎದ್ದಿದ್ದರು. ಪರಿಣಾಮವಾಗಿ ಎಸ್‌ಡಿಪಿಐ ಅಭ್ಯರ್ಥಿ ಸೇರಿದಂತೆ ಒಟ್ಟು 15 ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

ಈ ಎಲ್ಲಾ ಅಭ್ಯರ್ಥಿಗಳಿಗೆ ಒಟ್ಟಾರೆ 22,768 ಮತಗಳು ಲಭಿಸಿವೆ. ಮತ ವಿಭಜನೆಯಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಅಂತರ ಕಡಿಮೆಯಾದರೂ, ಅಂತಿಮವಾಗಿ ಸಮರ್ಥ್ ಶಾಮನೂರು ಗೆಲುವು ಸಾಧಿಸಲು ಸಾಧ್ಯವಾಯಿತು. ಸಮರ್ಥ್ ಶಾಮನೂರು ಅವರ ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ವಿಜಯೋತ್ಸವ ಆಚರಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು: ಮೀನೂಟ ಬಡಿಸಿ ಕಾರ್ಯಕರ್ತರ ಸಂಭ್ರಮಾಚರಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನತ್ತ ಸಾಗುತ್ತಿದ್ದಂತೆ ಪಕ್ಷದ ಕಚೇರಿಗಳಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಕಾರ್ಯಕರ್ತರು ಮೀನು-ಅನ್ನ ಬಡಿಸಿ ಸಂಭ್ರಮಾಚರಣೆ ನಡೆಸುವ ಮೂಲಕ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮಾಂಸಾಹಾರ ನಿಷೇಧಿಸಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಇದೇ ವಿಚಾರವನ್ನು ಮುಂದಿಟ್ಟುಕೊಂಡು, ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ಮೊಟ್ಟೆ, ಮೀನು ಹಾಗೂ ಮಾಂಸ ಸೇವನೆಗೆ ನಿರ್ಬಂಧ ವಿಧಿಸಬಹುದು ಎಂದು ಪ್ರಚಾರ ನಡೆಸಿದ್ದರು.

ಈ ಆರೋಪಗಳಿಗೆ ತಿರುಗೇಟು ನೀಡುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸಾಂಪ್ರದಾಯಿಕ ಬಂಗಾಳಿ ಆಹಾರವಾದ ‘ಮಾಚ್-ಭಾತ್’ ವಿತರಿಸಿ ಸಂಭ್ರಮಿಸಿದ್ದಾರೆ. ‘ಮಾಚ್’ ಎಂದರೆ ಮೀನು ಹಾಗೂ ‘ಭಾತ್’ ಎಂದರೆ ಅನ್ನ. ಬಿಜೆಪಿ ಮಾಂಸಾಹಾರ ನಿಷೇಧಿಸುತ್ತದೆ ಎಂಬುದು ಕೇವಲ ಅಪಪ್ರಚಾರ ಎಂದು ಕಾರ್ಯಕರ್ತರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಇದೀಗ ಬಿಜೆಪಿ ಪರವಾಗಿ ತಿರುಗಿದ್ದು, ಪಕ್ಷ ಐತಿಹಾಸಿಕ ಗೆಲುವು ದಾಖಲಿಸಿದೆ. ಹಲವು ವರ್ಷಗಳಿಂದ ಮಮತಾ ಬ್ಯಾನರ್ಜಿ ಹಿಡಿತದಲ್ಲಿದ್ದ ರಾಜ್ಯದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವತ್ತ ಮುನ್ನಡೆಯುತ್ತಿದೆ.

ಲಭ್ಯವಾಗಿರುವ ಆರಂಭಿಕ ಫಲಿತಾಂಶಗಳ ಪ್ರಕಾರ ಬಿಜೆಪಿ 198 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ತೃಣಮೂಲ ಕಾಂಗ್ರೆಸ್ 89 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಒಟ್ಟು 2,926 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

ಮೊದಲ ಹಂತದಲ್ಲಿ 152 ಕ್ಷೇತ್ರಗಳಿಗೆ 1,487 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ, ಎರಡನೇ ಹಂತದಲ್ಲಿ 142 ಕ್ಷೇತ್ರಗಳಿಗೆ 1,448 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 93.19 ಶೇಕಡಾ ಹಾಗೂ ಎರಡನೇ ಹಂತದಲ್ಲಿ 92.47 ಶೇಕಡಾ ಮತದಾನ ದಾಖಲಾಗಿತ್ತು.

ರಾಜ್ಯದಲ್ಲಿ ಸರ್ಕಾರ ರಚಿಸಲು 148 ಸ್ಥಾನಗಳ ಬಹುಮತ ಅಗತ್ಯವಿದ್ದು, ಈ ಬಾರಿ 385 ಮಹಿಳಾ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಅಂತಿಮ ಫಲಿತಾಂಶ ಬಿಜೆಪಿ ಪರವಾಗಿ ಮುಂದುವರಿದರೆ, ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇದು ಮಹತ್ವದ ತಿರುವಾಗಲಿದೆ.

ಬಾಗಲಕೋಟೆ ಉಪಚುನಾವಣೆ: ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದುಕೊಂಡ ಮೇಟಿ ಭರ್ಜರಿ ಜಯ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು 21,866 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿ ಪಕ್ಷಕ್ಕೆ ಮಹತ್ವದ ಜಯ ತಂದುಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಬಲವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಒಟ್ಟು 97,941 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದಿದ್ದು, ಉಮೇಶ್ ಮೇಟಿ ಸ್ಪಷ್ಟ ಮುನ್ನಡೆಯೊಂದಿಗೆ ವಿಜಯಶಾಲಿಯಾಗಿದ್ದಾರೆ.

ಗೆಲುವಿನ ಬಳಿಕ ಮಾತನಾಡಿದ ಉಮೇಶ್ ಮೇಟಿ, ಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಮತದಾರರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು. ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ. ಇದು ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಪರಿಶ್ರಮ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಗೆಲುವಾಗಿದೆ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆಯಿಂದ ಹಿಡಿದು ಚುನಾವಣಾ ಪ್ರಚಾರದ ಕೊನೆಯ ಹಂತದವರೆಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ್, ಸಚಿವ ಸತೀಶ್ ಜಾರಕಿಹೋಳಿ ಸೇರಿದಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಅಪಾರ ಶ್ರಮ ಪಟ್ಟಿದ್ದಾರೆ. ಅವರ ಸಹಕಾರ ಮತ್ತು ಬೆಂಬಲದಿಂದಲೇ ಈ ಗೆಲುವು ಸಾಧ್ಯವಾಗಿದೆ ಎಂದು ತಿಳಿಸಿದರು.

ನಟ ದರ್ಶನ್ ಜೈಲು ಸೌಲಭ್ಯಗಳ ಬಗ್ಗೆ ವರದಿ ಕೇಳಿದ ಸುಪ್ರೀಂ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಜೈಲಿನಲ್ಲಿ ಅವರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠ, ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ರಾಜ್ಯ ಸರ್ಕಾರ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ ಮಹತ್ವದ ಸೂಚನೆ ನೀಡಿದೆ. ಒಂದು ವಾರದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ.

ಜೈಲಿನಲ್ಲಿ ದರ್ಶನ್‌ಗೆ ಸಮರ್ಪಕ ಸೌಲಭ್ಯಗಳನ್ನು ಒದಗಿಸಲಾಗಿದೆಯೇ ಎಂಬ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆ ಯಾವ ಹಂತದಲ್ಲಿದೆ ಹಾಗೂ ಉಳಿದಿರುವ ಸಾಕ್ಷ್ಯ ಪರಿಶೀಲನೆಗೆ ಇನ್ನಷ್ಟು ಎಷ್ಟು ಸಮಯ ಬೇಕಾಗಬಹುದು ಎಂಬುದರ ಕುರಿತು ವಿಚಾರಣಾ ನ್ಯಾಯಾಲಯದಿಂದಲೂ ವರದಿ ಕೇಳಲಾಗಿದೆ.

ವಿಚಾರಣೆ ವೇಳೆ ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿ, ಜೈಲಿನಲ್ಲಿ ದರ್ಶನ್‌ಗೆ ಸೂಕ್ತ ಮೂಲಸೌಕರ್ಯ ಕಲ್ಪಿಸಲಾಗಿಲ್ಲ ಎಂದು ತಿಳಿಸಿದರು.

ದರ್ಶನ್ ಅವರನ್ನು ಬೆಳಕು ಸಮರ್ಪಕವಾಗಿ ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ. ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗಿದೆ” ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್, ಪ್ರಕರಣದ ಪ್ರಗತಿ ಹಾಗೂ ಜೈಲು ಪರಿಸ್ಥಿತಿಯ ಕುರಿತು ವಾಸ್ತವ ಮಾಹಿತಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ಇದುವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ ಮತ್ತು ಮುಂದಿನ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳ್ಳಲು ಬೇಕಾಗುವ ಅವಧಿಯ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ನ್ಯಾಯಾಲಯ ಸೂಚಿಸಿದ್ದು, ಮುಂದಿನ ವಿಚಾರಣೆಯಲ್ಲಿ ಈ ವರದಿಗಳ ಆಧಾರದ ಮೇಲೆ ಜಾಮೀನು ಅರ್ಜಿಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಮೋದಿಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಬೆಂಗಳೂರು: ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿಜೀ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ಜೀ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ ಸಂದೇಶವನ್ನು ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಅಮಿತ್ ಶಾ ಜೀ ಅವರು ಚುನಾವಣಾ ಚಾಣಕ್ಯ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಅಮಿತ್ ಶಾ ಜೀ ಅವರ ತಂತ್ರಗಾರಿಕೆಯೂ ಈ ಗೆಲುವಿನ ಹಿಂದಿದೆ ಎಂದರು.

ಪಶ್ಚಿಮ ಬಂಗಾಲದ ಗೆಲುವಿಗಾಗಿ ಅಲ್ಲಿನ ಕಾರ್ಯಕರ್ತರಿಗೆ ನಾವು ದೊಡ್ಡ ಸಲಾಂ ಹೇಳಬೇಕಿದೆ. ಅಲ್ಲಿ ಹಲವು ದಶಕಗಳಿಂದ ನಮ್ಮ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ಆಗುತ್ತಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ ಎಂದರಲ್ಲದೇ 3 ರಾಜ್ಯಗಳ ಕಾರ್ಯಕರ್ತರಿಗೆ ವಂದನೆ, ಅಭಿನಂದನೆ ತಿಳಿಸುವುದಾಗಿ ಹೇಳಿದರು.

ಎರಡೂ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿದ್ದಾರೆ..

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗಳ ಕುರಿತು ಪ್ರಸ್ತಾಪಿಸಿದ ಅವರು, ದಾವಣಗೆರೆ ದಕ್ಷಿಣದಲ್ಲಿ ಕಡಿಮೆ ಅಂತರದಲ್ಲಿ ನಿರ್ಧಾರ ಆಗಲಿದೆ. ದಾವಣಗೆರೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಬಾಗಲಕೋಟೆಯ ಸೋಲನ್ನು ನಿರೀಕ್ಷಿಸಿರಲಿಲ್ಲ. ಹಿಂದೆ ಕಾಂಗ್ರೆಸ್ ಪಕ್ಷ ಗೆದ್ದಿದ್ದರೂ ಈ ಬಾರಿ ಮತದಾರರು ನಮ್ಮ ಕೈಹಿಡಿಯುವ ವಿಶ್ವಾಸ ಇತ್ತು. ಎರಡೂ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಸಾಕಷ್ಟು ಶ್ರಮ ಹಾಕಿದ್ದಾರೆ ಎಂದು ತಿಳಿಸಿದರು.

ಇದರ ಮಿಗಿಲಾಗಿ ಮುಖ್ಯಮಂತ್ರಿಯವರು ಬಾಗಲಕೋಟೆಯಲ್ಲಿ ಬಂದು 15 ದಿನ ಬೀಡು ಬಿಟ್ಟಿದ್ದರು. ಸಚಿವ ಸಂಪುಟದ ಸದಸ್ಯರೂ ಬೀಡು ಬಿಟ್ಟಿದ್ದರು. ಆದರೂ ಗೆಲುವಿನ ವಿಶ್ವಾಸ ನಮಗಿತ್ತು. ಆದರೆ, ಬಾಗಲಕೋಟೆಯಲ್ಲಿ ನಮಗೆ ಹಿನ್ನಡೆ ಆಗಿದೆ ಎಂಬುದನ್ನು ಒಪ್ಪಿಕೊಳ್ಳುವುದಾಗಿ ಹೇಳಿದರು.

ಶೃಂಗೇರಿ ಮರುಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

ಬೆಂಗಳೂರು: ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ. ಅತ್ಯಂತ ಆಘಾತಕಾರಿ ವಿಚಾರ. ನಾವು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ಕಾನೂನಾತ್ಮಕವಾಗಿಯೂ ಹೋರಾಟ ಮಾಡುತ್ತೇವೆ” ಎಂದು ಹೇಳಿದರು.

“ಇದೊಂದು ಅಂತಾರಾಷ್ಟ್ರೀಯ ಸಂಚಿನ ರೀತಿ ನಡೆದಿದ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟಿಗೆ ಹೋಗುತ್ತಿದ್ದೆವು. ಇಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ಕೆಲವರನ್ನು ಉಪಯೋಗಿಸಿಕೊಂಡು ನಮಗೆ ಮತ ಬಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ. ಎಲ್ಲಾ ಬಂಡಲ್ ಗಳು ಮಾನ್ಯ ಎಂದು ತೀರ್ಮಾನ ಆದ ಮೇಲೆ ಈ ತಿದ್ದುಪಡಿ ಹೇಗಾಯಿತು” ಎಂದರು.

ಇಂತಹವರಿಗೆ ಮತ ಬಿದ್ದಿದೆ ಎಂದು ಪ್ರತಿ ಮತಗಳನ್ನು ಎಲ್ಲರಿಗೂ ತೋರಿಸಿರುತ್ತಾರೆ. ಇದನ್ನು ಕ್ಯಾಮೆರಾದಲ್ಲಿಯೂ ದಾಖಲೀಕರಣ ಮಾಡಿಕೊಳ್ಳಲಾಗಿರುತ್ತದೆ. ಎಲ್ಲಾ ಎಣಿಕೆಯಾದ ಮೇಲೆ ಬಂಡಲ್ ಗಳನ್ನು ಒಳಗೆ ಹಾಕಿ ಸೀಲ್ ಮಾಡಲಾಗಿರುತ್ತದೆ. ಇದಾದ ನಂತರ ಬಂಡಲ್ ತೆಗೆದು ಮತ್ತೊಂದು ಗುರುತು ಮಾಡಲಾಗಿದೆ. ಈಗ ಅದು ಮಾತ್ರ ಎಣಿಕೆಯಾಗಬೇಕು ಎಂದು ನ್ಯಾಯಲಯದ ಮೂಲಕ ಆದೇಶ ತಂದು ಈ ರೀತಿ ಮಾಡಲಾಗಿದೆ” ಎಂದರು.

“ಇದರ ಬಗ್ಗೆ ದೊಡ್ಡ ತನಿಖೆ ಅವಶ್ಯಕತೆಯಿದೆ. ಈ ಹಿಂದೆ ಫಲಿತಾಂಶ ಸರಿಯಾಗಿತ್ತು ಎಂದು ಎಲ್ಲರೂ ಸಹಿ ಮಾಡಿದ್ದಾರೆ. ಚುನಾವಣಾ ಆಯೋಗದ ಬಳಿಯೂ ದಾಖಲೆಯಿದೆ. ಆದರೆ ಮರುಎಣಿಕೆಯಲ್ಲಿ ಬದಲಾವಣೆಯಾಗಿದೆ. ಒಬ್ಬರಿಗೆ ಮತ ಬಿದ್ದ ಕಡೆ ಇನ್ನೊಬ್ಬರಿಗೂ ಗುರುತು ಹಾಕಲಾಗಿದೆ. ಇದರ ಬಗ್ಗೆ ದೂರನ್ನು ಸಹ ನೀಡಲಾಗಿದೆ” ಎಂದರು.

“ಫಲಿತಾಂಶದ ಬಗ್ಗೆ ರಿಟರ್ನಿಂಗ್ ಆಫೀಸರ್ ನ್ಯಾಯಲಯಕ್ಕೆ ಕಳುಹಿಸಬೇಕಿತ್ತು. ಸಂಬಂಧಿಸಿದ ಅಧಿಕಾರಿ ಇದನ್ನೆಲ್ಲಾ ಗಮನಿಸಿದ್ದಾರೆ. ಇದು ಇಡೀ ರಾಜ್ಯಕ್ಕೆ ಕಳಂಕದ ಪ್ರಕರಣ” ಎಂದರು.

“ಈ ಹಿಂದೆ ನಾಯಕರೊಬ್ಬರು ಸಹಕಾರಿ ಚುನಾವಣೆ ವೇಳೆ ಮತಪತ್ರವನ್ನೇ ನುಂಗಿದ್ದರು. ಈಗ ಇಲ್ಲಿಯೂ ಹೆಚ್ಚಿನ ಗುರುತು ಮಾಡಿ, ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಅಕ್ರಮ ಎಸಗಲಾಗಿದೆ. ಗಾಯತ್ರಿ ಶಾಂತನಗೌಡ ಅವರ ವಿಚಾರವನ್ನು ನ್ಯಾಯಲಯದಲ್ಲಿ ಬ್ಲಾಕ್ ಮಾಡಿಕೊಂಡೆ ಬರುತ್ತಿದ್ದಾರೆ. ಸೌಮ್ಯ ರೆಡ್ಡಿ ಅವರು 12 ಮತಗಳ ಅಂತರದಲ್ಲಿ ಸೋತಿದ್ದಾರೆ. ಅದು ಇನ್ನು ಎಣಿಕೆಯಾಗಿಲ್ಲ. ಇದು ಹೇಗೆ ಎಣಿಕೆಯಾಗುತ್ತದೆ” ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಮಾಡಿದರೆ ದರುಪಯೋಗವಾಗುತ್ತದೆ ಎನ್ನುವ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, “ಅವರು ಮೊದಲು ಚುನಾವಣೆಗೆ ನಿಲ್ಲುತ್ತಾರೋ ಅಥವಾ ಬಿಜೆಪಿ ಜೊತೆ ವಿಲೀನ ಆಗುತ್ತಾರೋ ಎಂಬುದನ್ನು ಮೊದಲು ನೋಡೋಣ” ಎಂದರು.

ತಮಿಳುನಾಡು ಫಲಿತಾಂಶ ಅಚ್ಚರಿ ತಂದಿದೆ: ಅಲ್ಲಿ ಹೊಸ ರಾಜಕೀಯ ಯುಗ ಆರಂಭವಾಗಿದೆ – ಡಿಕೆ ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ತಮಿಳುನಾಡಿನ ಫಲಿತಾಂಶ ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಈ ಮಟ್ಟದ ರಾಜಕೀಯ ಬದಲಾವಣೆ ಸಂಭವಿಸಬಹುದು ಎಂದು ನಿರೀಕ್ಷಿಸಿರಲಿಲ್ಲ ಎಂದರು.

ತಮಿಳುನಾಡಿನ ಫಲಿತಾಂಶ ನನಗೆ ಆಶ್ಚರ್ಯ ತಂದಿದೆ. ಅಲ್ಲಿ ಹೊಸ ರಾಜಕೀಯ ಯುಗ ಆರಂಭವಾಗಿದೆ. 30ರಿಂದ 40 ಶೇಕಡಾ ಮತಗಳಷ್ಟು ಬದಲಾವಣೆ ಆಗಬಹುದು ಎಂದುಕೊಂಡಿದ್ದೆವು. ಆದರೆ ಈ ಪ್ರಮಾಣದಲ್ಲಿ ಬದಲಾವಣೆ ಆಗುತ್ತದೆ ಎಂದು ಊಹಿಸಿರಲಿಲ್ಲ ಎಂದು ಹೇಳಿದರು.

ಕೇರಳದ ಫಲಿತಾಂಶ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‌ಗೆ ಗೆಲುವಿನ ವಿಶ್ವಾಸ ಮೊದಲಿನಿಂದಲೂ ಇತ್ತು ಎಂದು ಹೇಳಿದರು. ಅಲ್ಲಿ 10 ವರ್ಷಗಳಿಂದ ಒಂದೇ ಸರ್ಕಾರ ಅಧಿಕಾರದಲ್ಲಿತ್ತು. ಜನರು ಬದಲಾವಣೆ ಬಯಸಿದ್ದರು. ಅದಕ್ಕೆ ಇಂದು ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದರು.

ಅಸ್ಸಾಂ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಪಕ್ಷಕ್ಕೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ ಇತ್ತು ಎಂದು ಹೇಳಿದರು. ಅಸ್ಸಾಂನಲ್ಲಿ ನಾನು ಪಕ್ಷದ ಜವಾಬ್ದಾರಿ ನಿರ್ವಹಿಸಿದ್ದೆ. ಸ್ಥಳೀಯ ನಾಯಕರು 50ಕ್ಕೂ ಹೆಚ್ಚು ಸ್ಥಾನಗಳ ನಿರೀಕ್ಷೆ ವ್ಯಕ್ತಪಡಿಸಿದ್ದರು. ಆದರೆ ಕ್ಷೇತ್ರ ಮರುವಿಂಗಡಣೆ ಪರಿಣಾಮ ಬೀರಿದೆ ಎಂದು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, “ಅಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿದೆ. ಮತಯಂತ್ರಗಳಲ್ಲೂ ಸಮಸ್ಯೆ ಉಂಟಾಗಿತ್ತು. ಗೆಲ್ಲಲೇಬೇಕು ಎಂಬ ಕಾರಣಕ್ಕೆ ಬಿಜೆಪಿ ಹಲವು ರೀತಿಯ ಪ್ರಯತ್ನಗಳನ್ನು ನಡೆಸಿದೆ,” ಎಂದು ಆರೋಪಿಸಿದರು.

ತಮಿಳುನಾಡಿನಲ್ಲಿ ವಿಜಯ್ ಅಲೆ: TVK ಭರ್ಜರಿ ಮುನ್ನಡೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿರುವ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಜೊತೆಗೆ ಹೊಸ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿರುವ ಟಿವಿಕೆ ಪಕ್ಷಕ್ಕೆ ವಿಜಯ್ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ನೆರವಾಗಿರಬಹುದು ಎಂದು ಅಭಿಪ್ರಾಯಪಟ್ಟರು.

“ವಿಜಯ್ ಅವರಿಗೆ ಅಭಿನಂದನೆಗಳು. ಹೊಸ ಪಕ್ಷವಾಗಿ ಉತ್ತಮ ಪ್ರದರ್ಶನ ತೋರಿರುವುದು ಗಮನಾರ್ಹ ಬೆಳವಣಿಗೆ” ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ದಾವಣಗೆರೆಯಲ್ಲಿ ಕೆಲವು ಸ್ಥಳೀಯ ಕಾರಣಗಳಿಂದ ಕಾಂಗ್ರೆಸ್ ಮುನ್ನಡೆ ಕಡಿಮೆಯಾಗಿರಬಹುದು. ಆದರೂ ಅಂತಿಮವಾಗಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಬಾಗಲಕೋಟೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಫಲಿತಾಂಶ ಕುರಿತು ಮಾತನಾಡಿದ ಸಿದ್ದರಾಮಯ್ಯ, ಅಲ್ಲಿ ಕಾಂಗ್ರೆಸ್ ಪ್ರಭಾವ ಸೀಮಿತವಾಗಿದ್ದು, ಬಿಜೆಪಿ ಮುನ್ನಡೆಗೆ ಆಡಳಿತ ವಿರೋಧಿ ಅಲೆ ಕಾರಣವಾಗಿರಬಹುದು ಎಂದು ಹೇಳಿದರು.

ಅಸ್ಸಾಂನಲ್ಲಿ ಸೋಲನ್ನು ಒಪ್ಪಿಕೊಳ್ಳಬೇಕಾಗಿದೆ ಎಂದ ಅವರು, ಕೇರಳದಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿರುವುದು ಪಕ್ಷಕ್ಕೆ ಉತ್ಸಾಹ ತುಂಬಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವ್ಯಾಪಾರಿಯ ಮೇಲೆ ಹಲ್ಲೆ: ಜೀವ ಬೆದರಿಕೆ ಹಾಕಿ ಹಣ ಕಿತ್ತು ಮೂವರು ಪರಾರಿ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ವ್ಯಾಪಾರಿಯೊಬ್ಬರ ಮೇಲೆ ಮೂವರು ಆರೋಪಿಗಳು ಹಲ್ಲೆ ನಡೆಸಿ ₹7,700 ನಗದು ದೋಚಿದ ಘಟನೆ ನಡೆದಿದೆ.

ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೋಲಾಪುರ ಗ್ರಾಮದ ಮಹಾದೇವ ಕಲ್ಲಪ್ಪ ಗೋಳಭಾವಿ (29) ಹಲ್ಲೆಗೊಳಗಾಗಿ ಹಣ ಕಳೆದುಕೊಂಡ ವ್ಯಾಪಾರಿ.

ಎಪ್ರಿಲ್ 25ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ, ಮಹಾದೇವ ಅವರು ಲಕ್ಷ್ಮೇಶ್ವರ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ಇದ್ದಾಗ, ಆರೋಪಿಗಳಾದ
ವಿನಾಯಕ @ ವಿನಾಯಕ ಗದಗ (A1), ಮಹೇಶ್ @ ಮಹೇಶ್ ಗದಗ (A2), ಶಂಕರ್ @ ಶಂಕರ್ ಗದಗ (A3)
ಎಂಬ ಮೂವರು ಒಟ್ಟಾಗಿ ಬಂದು ಹಲ್ಲೆ ನಡೆಸಿದ್ದಾರೆ.

ಆರೋಪಿಗಳು “ನಿನ್ನ ಬಳಿ ಇರುವ ಹಣ ಮತ್ತು ಮೊಬೈಲ್ ಕೊಡದಿದ್ದರೆ ಕೊಲ್ಲುತ್ತೇವೆ” ಎಂದು ಜೀವ ಬೆದರಿಕೆ ಹಾಕಿ, ದೈಹಿಕ ಹಲ್ಲೆ ನಡೆಸಿ, ಜೇಬಿನಲ್ಲಿ ಇದ್ದ ₹7,700 ನಗದು ಹಣವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್‌ಗಳು 308(5), 351(2), 352, 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

error: Content is protected !!