Home Blog

ದಲಿತರ ರಕ್ಷಣೆಗೆ ವಿಫಲ ಸರ್ಕಾರ: ಸಚಿವ ಕಾಶಪ್ಪನವರ್ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

0

ಬೆಂಗಳೂರು: ಈ ಸರ್ಕಾರದ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು, ಇದು ದಲಿತರನ್ನು ರಕ್ಷಿಸದ ಸರ್ಕಾರ ಎಂದು ವಿಧಾನಪರಿಷತ್ತಿನ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ದಲಿತರ ಮೇಲೆ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣಗಳು ಹೆಚ್ಚಾಗಿವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ದೇವದುರ್ಗದಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆಯನ್ನು ಉಲ್ಲೇಖಿಸಿದ ಅವರು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿದ್ದರೂ ಗೃಹ ಇಲಾಖೆ ಮೌನವಾಗಿದೆ ಎಂದು ಆರೋಪಿಸಿದರು. ಗೃಹ ಸಚಿವರು ವಾಸ್ತವದಲ್ಲಿ ಆರ್‌ಎಸ್‌ಎಸ್ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಕಾಶಪ್ಪನವರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ನಾರಾಯಣಸ್ವಾಮಿ, ಪ್ರಧಾನಿ ಮೋದಿ ಅವರ ಬಗ್ಗೆ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು. ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಸಚಿವರ ಬಂಧನ ಅಥವಾ ಎಫ್‌ಐಆರ್ ಆಗಿಲ್ಲ ಎಂದು ದೂರಿದ ಅವರು, ಈ ವಿಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸಿರುವುದನ್ನು ಖಂಡಿಸಿದ ನಾರಾಯಣಸ್ವಾಮಿ, ಇಂತಹ ಕ್ರಮವನ್ನು ಬಿಜೆಪಿ ಎಂದಿಗೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಕೂಡಲೇ ಸಚಿವ ಕಾಶಪ್ಪನವರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಮಂಡ್ಯ ಬೆಲ್ಲಕ್ಕೆ ಬಂಗಾರದ ಬೆಲೆ: ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಬೆಲ್ಲದ ದರ!

0

ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆಯ ಮೇಲೆ ತಟ್ಟಿದೆ.

ಇತಿಹಾಸದಲ್ಲೇ ಎಂದೂ ಕಂಡಿರದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ. ಈ ಹಿಂದೆ ಕ್ವಿಂಟಾಲ್‌ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡು-ಮೂರು ದಿನಗಳಲ್ಲಿ ಬರೋಬ್ಬರಿ 2,000 ರೂ. ಏರಿಕೆಯಾಗಿ ಈಗ 6,500 ರೂ.ನಿಂದ 7,000 ರೂ.ವರೆಗೆ ಹರಾಜಾಗುತ್ತಿದೆ.

ಕಳೆದ ಆರು ತಿಂಗಳಿಂದ ಮಳೆಯಿಲ್ಲದೆ ಹಾಗೂ ಕಬ್ಬಿಗೆ ನೀರಿನ ಪೂರೈಕೆಯಾಗದೆ ಗದ್ದೆಗಳು ಒಣಗಿ ನಿಂತಿವೆ. ಪರಿಣಾಮ ಕಬ್ಬಿನ ಇಳುವರಿ ಅರ್ಧದಷ್ಟು ಕುಸಿದಿದ್ದು, ಗಾಣಗಳಿಗೆ ಕಬ್ಬು ಸಿಗದೆ ಉತ್ಪಾದನೆ ಸಂಪೂರ್ಣ ಕುಂಠಿತಗೊಂಡಿದೆ. ಹಿಂದೆ ಪ್ರತಿದಿನ 10ರಿಂದ 12 ಲಾರಿಗಳಷ್ಟು ಮಾರುಕಟ್ಟೆಗೆ ಹೋಗುತ್ತಿದ್ದ ಬೆಲ್ಲದ ಪೂರೈಕೆ ಈಗ ಅರ್ಧದಷ್ಟು ಇಳಿಕೆಯಾಗಿದೆ.

ಬೆಲ್ಲದ ಮಾರುಕಟ್ಟೆ ಪ್ರಾರಂಭವಾದ ದಿನದಿಂದಲೂ ಈ ಮಟ್ಟಿಗೆ ದರ ಏರಿಕೆಯಾಗಿರಲಿಲ್ಲ. ಈ ಸೀಸನ್‌ನಲ್ಲಿ ಬೆಲೆ ತಗ್ಗಬೇಕಿತ್ತಾದರೂ, ಇಷ್ಟು ಭಾರೀ ಏರಿಕೆ ಕಂಡಿರುವುದು ಇದೇ ಮೊದಲು ಎಂದು ವ್ಯಾಪಾರಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಳೆಯಾಶ್ರಿತ ಹಾಗೂ ನೀರಾವರಿಯಿಲ್ಲದೆ ಒಣಗಿದ ಕಬ್ಬಿನ ಬೆಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದರೆ, ಕಚ್ಚಾ ವಸ್ತು ಸಿಗದೆ ಬೆಲ್ಲದ ದರ ಗಗನಕ್ಕೇರಿರುವುದು ಸಾಮಾನ್ಯ ಜನರಿಗೂ ಬಿಸಿ ತಟ್ಟುವಂತೆ ಮಾಡಿದೆ.

ಔಷಧ ಕಂಪನಿಯಲ್ಲಿ ಭಾರೀ ಸ್ಫೋಟ; ಇಬ್ಬರು ಸಾವು, 9 ಮಂದಿಗೆ ಗಂಭೀರ ಗಾಯ

0

ಹೈದರಾಬಾದ್: ತೆಲಂಗಾಣದ ಯಾದಾದ್ರಿ-ಭುವನಗಿರಿ ಜಿಲ್ಲೆಯ ಔಷಧ ಘಟಕವೊಂದರಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 10:30ರ ವೇಳೆಗೆ ಪೊಚಂಪಲ್ಲಿ ಮಂಡಲದ ದೋತಿಗುಡೆಂ ಗ್ರಾಮದ ಹೊರವಲಯದಲ್ಲಿರುವ ಹ್ಯಾಜೆಲೋ ಲ್ಯಾಬ್ ಪ್ರೈ.ಲಿ ಕಂಪನಿಯಲ್ಲಿ ಈ ಘಟನೆ ನಡೆದಿದೆ. 9 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದ ಭಾರೀ ಶಬ್ದ ಕೇಳಿ ಸ್ಥಳೀಯ ನಿವಾಸಿಗಳು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಸ್ಫೋಟದ ಬಳಿಕ ಕಂಪನಿಯ ಆವರಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ನೀರಿನ ಪೈಪ್‌ಗಳ ಮೂಲಕ ಬೆಂಕಿ ನಿಯಂತ್ರಿಸಲು ಹರಸಾಹಸಪಟ್ಟಿದ್ದು, ರಕ್ಷಣಾ ಸಿಬ್ಬಂದಿ ಹಾಗೂ ಕಾರ್ಮಿಕರು ಕೂಡ ಕಾರ್ಯಾಚರಣೆಗೆ ಸಹಕರಿಸಿದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಫಾರ್ಮಾ ಕಂಪನಿಯಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿರುವ ಸಾಧ್ಯತೆಯನ್ನು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದರೆ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಸ್ಫೋಟ ಸಂಭವಿಸಿದ ಸ್ಥಳ, ರಿಯಾಕ್ಟರ್‌ನ ಸ್ಥಿತಿ ಹಾಗೂ ಕಂಪನಿಯಲ್ಲಿ ಕೈಗೊಳ್ಳಲಾಗಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಬೆಟ್ಟದ ಮಾವಿನಕೆರೆ ದೇವಾಲಯದಲ್ಲಿ ಪುತ್ರ ಪ್ರಜ್ವಲ್ ನೆನೆದು ಭವಾನಿ ರೇವಣ್ಣ ಕಣ್ಣೀರು!

0

ಹಾಸನ: ಹೊಳೆನರಸೀಪುರದ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದ ಭವಾನಿ ರೇವಣ್ಣ ಅವರು ಪೂಜೆ ವೇಳೆ ಕಣ್ಣೀರಿಟ್ಟ ಘಟನೆ ನಡೆದಿದೆ.

ಎರಡನೇ ಶ್ರಾವಣ ಶನಿವಾರದ ಪ್ರಯುಕ್ತ ಭವಾನಿ ರೇವಣ್ಣ ಅವರು ಕುಟುಂಬಸ್ಥರೊಂದಿಗೆ ರಂಗನಾಥಸ್ವಾಮಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುಟುಂಬ ಸದಸ್ಯರೊಂದಿಗೆ ರಂಗನಾಥಸ್ವಾಮಿಗೆ ಅಭಿಷೇಕ ನೆರವೇರಿಸಿ, ಸುಮಾರು ಒಂದು ಗಂಟೆ ಕಾಲ ಗರ್ಭಗುಡಿಯಲ್ಲಿ ಕುಳಿತು ಪೂಜೆ ಸಲ್ಲಿಸಿದರು. ಈ ವೇಳೆ ಅವರು ಭಾವುಕರಾಗಿ ಕಣ್ಣೀರಿಟ್ಟರು.

ಜೈಲಿನಲ್ಲಿರುವ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆನೆದು ಭವಾನಿ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಕಂಬನಿ ಒರೆಸಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಸೂರಜ್ ರೇವಣ್ಣ ಭಾಗಿಯಾಗಿದ್ದರು.

ಹಂಪಿಯಲ್ಲಿ ದುರಂತ: ತುಂಗಭದ್ರಾ ನದಿಗೆ ಜಾರಿ ಬಿದ್ದು ತಾಯಿ–ಮಗಳು ನಾಪತ್ತೆ

0

ಹೊಸಪೇಟೆ/ವಿಜಯನಗರ: ಪ್ರವಾಸಕ್ಕೆಂದು ಹಂಪಿಗೆ ಆಗಮಿಸಿದ್ದ ತಾಯಿ–ಮಗಳು ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದ ಶಾಹೀನ್ (38) ಹಾಗೂ ಅವರ ಪುತ್ರಿ ಯಾಸ್ಮೀನ್ (13) ನಾಪತ್ತೆಯಾಗಿರುವವರು.

ಸಂಬಂಧಿಕರೊಂದಿಗೆ ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬ, ನದಿಯ ಸ್ನಾನಘಟ್ಟದ ಬಳಿ ಅಡುಗೆ ಮಾಡಿಕೊಂಡಿತ್ತು. ಬಳಿಕ ತಾಯಿ–ಮಗಳು ಸ್ನಾನಕ್ಕೆ ತೆರಳಿದ್ದ ವೇಳೆ ಇಬ್ಬರೂ ಕಾಲು ಜಾರಿ ತುಂಗಭದ್ರಾ ನದಿಗೆ ಬಿದ್ದು ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ನದಿಯಲ್ಲಿ ನೀರಿನ ಹರಿವು ಹಾಗೂ ಆಳ ಹೆಚ್ಚಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ತೊಂದರೆಯಾಗುತ್ತಿದೆ.

ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾಗಿರುವ ತಾಯಿ–ಮಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಸಿಯೂಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

0

ಗದಗ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ವಾಂತಿ, ಬೇಧಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬೀಡನಾಳ ಗ್ರಾಮದಲ್ಲಿ ನಡೆದಿದೆ.

ಬೀಡನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂದಿನಂತೆ ಶನಿವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗಿತ್ತು. ಊಟ ಸೇವಿಸಿದ ಕೆಲವೇ ಹೊತ್ತಿನಲ್ಲಿ ಹಲವು ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೆಲವೇ ಸಮಯದಲ್ಲಿ ಹೆಚ್ಚಿನ ಮಕ್ಕಳು ಅಸ್ವಸ್ಥರಾಗಿದ್ದು, ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ತಕ್ಷಣ ಶಿಕ್ಷಕರು ಹಾಗೂ ಗ್ರಾಮಸ್ಥರು ಅಲರ್ಟ್ ಆಗಿ ಮಕ್ಕಳನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಅಸ್ವಸ್ಥ ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಮಕ್ಕಳು ಅಸ್ವಸ್ಥಗೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ ಪಾಲಕರು ಆತಂಕಗೊಂಡು ಕಣ್ಣೀರಿಟ್ಟರು. ಮಕ್ಕಳ ಸ್ಥಿತಿ ಕಂಡು ಪಾಲಕರಲ್ಲಿ ಆತಂಕ ಮನೆಮಾಡಿದ್ದು, ಶಾಲೆಯ ಬಿಸಿಯೂಟದ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಸಿಯೂಟದಲ್ಲಿ ಹಲ್ಲಿ ಬಿದ್ದಿತ್ತು ಎಂಬ ಆರೋಪವೂ ಕೇಳಿಬಂದಿದ್ದು, ಇದರಿಂದಲೇ ಮಕ್ಕಳು ಅಸ್ವಸ್ಥರಾಗಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಿಸಿಯೂಟ ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರ ವಿರುದ್ಧವೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ನಿಖರ ಕಾರಣ ವೈದ್ಯಕೀಯ ಪರಿಶೀಲನೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ತನಿಖೆಯಿಂದ ತಿಳಿದುಬರಬೇಕಿದೆ.

ಕಳ್ಳಭಟ್ಟಿ ಮದ್ಯಕ್ಕೆ 9 ಮಂದಿ ಬಲಿ: ಭಾವ್‌ನಗರದಲ್ಲಿ ಮೆಥನಾಲ್ ವಿಷ ಸೇವಿಸಿ 3 ಮಂದಿ ಗಂಭೀರ

0

ಭಾವ್‌ನಗರ (ಗುಜರಾತ್): ಕಳ್ಳಭಟ್ಟಿ ಮದ್ಯ ಸೇವನೆಯಿಂದ ಭಾವ್‌ನಗರ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿ ಹಾರ್ದಿಕ್ ಕಿಲ್ಜಿ ಎಂಬವರು ಮೃತಪಟ್ಟಿದ್ದು, ಇನ್ನೂ ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಜಿಲ್ಲಾಡಳಿತದ ಮಾಹಿತಿ ಪ್ರಕಾರ, 17 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಆರು ಮಂದಿ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 17 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಂತ್ರಸ್ತರು ಮೆಥನಾಲ್ ವಿಷಪೂರಿತ ಪ್ರಮಾಣ ಹೊಂದಿದ್ದ ಕಳ್ಳಭಟ್ಟಿ ಮದ್ಯ ಸೇವಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಭಾರತದಲ್ಲಿ ತಯಾರಾಗುವ ಜನಪ್ರಿಯ ವಿದೇಶಿ ಮದ್ಯದ ಬ್ರ್ಯಾಂಡ್‌ಗಳ ಬಾಟಲಿಗಳಲ್ಲಿ ಕಳ್ಳಭಟ್ಟಿ ಮದ್ಯವನ್ನು ತುಂಬಿ ಮಾರಾಟ ಮಾಡಲಾಗಿತ್ತು. ಇದೇ ಮದ್ಯವನ್ನು ಸಂತ್ರಸ್ತರು ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಿವಿಜ್ಞಾನ ಪ್ರಯೋಗಾಲಯದ ಪರೀಕ್ಷೆಯಲ್ಲಿ ಮದ್ಯದ ಮಾದರಿಯಲ್ಲಿ ಶೇ.38.59ರಷ್ಟು ಮೆಥನಾಲ್ ಹಾಗೂ ಶೇ.0.94ರಷ್ಟು ಎಥನಾಲ್ ಇರುವುದು ದೃಢಪಟ್ಟಿದೆ. ಮೆಥನಾಲ್‌ನ ವಿಷಕಾರಿ ಪ್ರಮಾಣವೇ ಸಾವು ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಕರಣದಲ್ಲಿ ಒಟ್ಟು 21 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದ್ದು, ಈ ಪೈಕಿ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆಯನ್ನು ಗುಜರಾತ್ ಪೊಲೀಸ್ ಇಲಾಖೆಯ ರಾಜ್ಯ ಮೇಲ್ವಿಚಾರಣಾ ಘಟಕಕ್ಕೆ ವಹಿಸಲಾಗಿದೆ.

ಗುಜರಾತ್‌ನಲ್ಲಿ ಮದ್ಯ ನಿಷೇಧ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮದ್ಯದ ತಯಾರಿಕೆ, ಮಾರಾಟ ಹಾಗೂ ಸೇವನೆ ಕಾನೂನುಬಾಹಿರವಾಗಿದೆ. ಈ ನಡುವೆ ಕಳ್ಳಭಟ್ಟಿ ಮದ್ಯದಿಂದ ಸಂಭವಿಸಿರುವ ಸರಣಿ ಸಾವುಗಳು ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿವೆ.

ನಕಲಿ ಔಷಧಿ, ಕಲಬೆರಕೆ ಆಹಾರಕ್ಕೆ ಬ್ರೇಕ್: ಜಿಲ್ಲೆ-ತಾಲೂಕು ಮಟ್ಟದಲ್ಲಿ ‘ವಾಚ್ ಟೀಂ’ ರಚನೆಗೆ ಸರ್ಕಾರ ಸಿದ್ಧತೆ

0

ಮಂಗಳೂರು: ನಕಲಿ ಔಷಧಿ ಜಾಲ, ಆಹಾರ ಕಲಬೆರಕೆ ಹಾಗೂ ಸ್ವಚ್ಛತಾ ಉಲ್ಲಂಘನೆಗಳ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಿವೃತ್ತ ಹಾಗೂ ಪರಿಣಿತ ಹಿರಿಯ ನಾಗರಿಕರನ್ನು ಒಳಗೊಂಡ ಕಾವಲು ಪಡೆ ಅಥವಾ ‘ವಾಚ್ ಟೀಂ’ಗಳನ್ನು ಪ್ರತಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಗುರುತಿಸಿ, ಸಮಗ್ರ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಕಲಿ ಔಷಧಿ ಜಾಲ ಪತ್ತೆ, ಆಹಾರ ಸುರಕ್ಷತೆ ಹಾಗೂ ಸಾರ್ವಜನಿಕ ಸ್ವಚ್ಛತೆಯ ವಿಚಾರದಲ್ಲಿ ಸರ್ಕಾರದ ಕ್ರಮಗಳಿಗೆ ಜನರ ಸಹಕಾರ ಅತ್ಯಗತ್ಯ. ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದರು.

ನಕಲಿ ಔಷಧಿ ಜಾಲ ಅತ್ಯಂತ ಗಂಭೀರ ಸ್ವರೂಪದ್ದಾಗಿದ್ದು, ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿರುವ ಅನಧಿಕೃತ ಕಂಪನಿಗಳಿಂದ ಔಷಧಿಗಳು ಪೂರೈಕೆಯಾಗುತ್ತಿರುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಜನೌಷಧಿ ಕೇಂದ್ರಗಳು ಸೇರಿದಂತೆ ವಿವಿಧೆಡೆ ತಪಾಸಣೆ ಹಾಗೂ ದಾಳಿ ಮುಂದುವರಿದಿದೆ ಎಂದು ಸಚಿವರು ತಿಳಿಸಿದರು.

ಆಹಾರ ಸುರಕ್ಷತೆಯ ವಿಚಾರದಲ್ಲೂ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಫೈವ್‌ಸ್ಟಾರ್ ಹೋಟೆಲ್‌ಗಳಿಂದ ಹಿಡಿದು ಬೀದಿಬದಿ ಆಹಾರ ಮಳಿಗೆಗಳವರೆಗೆ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ದೂರು ನೀಡಿದಾಗ ಅಧಿಕಾರಿಗಳು ಕ್ರಮ ಕೈಗೊಂಡು ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಖಾದರ್ ಹೇಳಿದರು.

ತಪಾಸಣೆ ಅಥವಾ ದಾಳಿಯ ಉದ್ದೇಶ ಯಾರನ್ನೂ ಶಿಕ್ಷಿಸುವುದಲ್ಲ. ನಿಯಮ ಉಲ್ಲಂಘನೆಗಳನ್ನು ಗುರುತಿಸಿ, ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡುವುದು ಸರ್ಕಾರದ ಮುಖ್ಯ ಉದ್ದೇಶ. ಈಗಾಗಲೇ ತಪಾಸಣೆ ನಡೆಸಿದ ಹಲವು ಸ್ಥಳಗಳಲ್ಲಿ ನೋಟಿಸ್ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಹೋಟೆಲ್ ಅಸೋಸಿಯೇಷನ್ ಹಾಗೂ ಬೀದಿಬದಿ ಆಹಾರ ಮಾರಾಟಗಾರರನ್ನು ಜಿಲ್ಲಾ ಮಟ್ಟದಲ್ಲಿ ಸಭೆ ಕರೆದು ಆಹಾರ ಸುರಕ್ಷತೆ ಮತ್ತು ಸ್ವಚ್ಛತೆ ಕುರಿತು ತರಬೇತಿ ನೀಡಲು ನಿರ್ಧರಿಸಲಾಗಿದೆ. ಹೋಟೆಲ್‌ಗಳಲ್ಲಿ ಅಡುಗೆ ಎಣ್ಣೆಯನ್ನು ಪದೇಪದೆ ಮರುಬಳಕೆ ಮಾಡುವುದನ್ನು ತಪ್ಪಿಸಿ, ಬಳಸಿದ ಎಣ್ಣೆಯನ್ನು ಬಯೋಡೀಸೆಲ್ ತಯಾರಿಕೆಗೆ ಬಳಸುವ ಕುರಿತು ಕೂಡ ಜಾಗೃತಿ ಮೂಡಿಸಲಾಗುವುದು ಎಂದು ಸಚಿವರು ಹೇಳಿದರು.

ಕೆರೆಯಲ್ಲಿ ಬಾಲಕನ ಶವ ಪತ್ತೆ ಪ್ರಕರಣ: ಸತ್ಯ ಬಯಲಿಗೆಳೆಯಲು ಎಫ್‌ಎಸ್‌ಎಲ್‌ನಲ್ಲಿ ಕುಟುಂಬದ ಐವರಿಗೆ ಪರೀಕ್ಷೆ

ಬೆಳ್ತಂಗಡಿ: 15 ವರ್ಷದ ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಗೆ ಪೊಲೀಸರು ಮಹತ್ವದ ತಿರುವು ನೀಡಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಹಾಗೂ ಸಾವಿನ ಹಿಂದಿನ ನಿಗೂಢತೆ ಪತ್ತೆಹಚ್ಚಲು ನ್ಯಾಯಾಲಯದ ಅನುಮತಿ ಪಡೆದು ಬೆಂಗಳೂರಿನ ಎಫ್‌ಎಸ್‌ಎಲ್‌ನಲ್ಲಿ ಕುಟುಂಬದ ಐವರಿಗೆ ಬ್ರೈನ್ ಮ್ಯಾಪಿಂಗ್ ಹಾಗೂ ಮಂಪರು ಪರೀಕ್ಷೆ ನಡೆಸಲಾಗುತ್ತಿದೆ.

ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೃತ ಬಾಲಕನ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್, ರತ್ನಾವತಿ ಅವರ ಸಹೋದರ ರಾಧಾಕೃಷ್ಣ ಹಾಗೂ ಸಂಬಂಧಿ ಲಕ್ಷ್ಮೀನಾರಾಯಣ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಆಗಸ್ಟ್ 10ರಂದು ತಂದೆ-ತಾಯಿ ಹಾಗೂ ಸಹೋದರನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದ್ದು, ಆಗಸ್ಟ್ 11ರಂದು ರಾಧಾಕೃಷ್ಣ ಮತ್ತು ಲಕ್ಷ್ಮೀನಾರಾಯಣ ಅವರ ಹೇಳಿಕೆ ದಾಖಲಿಸಲಾಗಿದೆ. ಈ ವೇಳೆ ಪಡೆದ ಉತ್ತರಗಳು ಮತ್ತು ಪೊಲೀಸ್ ತನಿಖೆಯಿಂದ ಸಂಗ್ರಹಿಸಿರುವ ಮಾಹಿತಿಯನ್ನು ಎಫ್‌ಎಸ್‌ಎಲ್ ತಜ್ಞರು ಪರಿಶೀಲಿಸುತ್ತಿದ್ದಾರೆ.

ಮೊದಲ ಹಂತದ ಪರೀಕ್ಷೆ ಪೂರ್ಣಗೊಂಡಿದ್ದು, ಮುಂದಿನ ಹಂತದ ಬ್ರೈನ್ ಮ್ಯಾಪಿಂಗ್‌ಗಾಗಿ ಸಂಬಂಧಪಟ್ಟವರನ್ನು ಮತ್ತೆ ಹಾಜರುಪಡಿಸುವಂತೆ ಸೂಚಿಸಲಾಗಿದೆ. ಕುಟುಂಬದ ಐವರ ವಿಚಾರಣೆ ಹಾಗೂ ಪರೀಕ್ಷೆಯ ಬಳಿಕ ಇತರ ಶಂಕಿತ ವ್ಯಕ್ತಿಗಳ ಮೇಲೂ ಇದೇ ರೀತಿಯ ವೈಜ್ಞಾನಿಕ ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಸುಮಂತ್ ಸಾವು ಆರಂಭದಿಂದಲೂ ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು. ಜನವರಿ 14ರಂದು ಬೆಳಗಿನ ಜಾವ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಆತ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಬಳಿಕ ಮನೆ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿತ್ತು.

ಸಾವು ಸಹಜವಲ್ಲ ಎಂಬ ಅನುಮಾನ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ನಡೆಸಿದ್ದರು. ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿದರೂ ಈವರೆಗೆ ಪ್ರಕರಣದ ನಿಗೂಢತೆಗೆ ಸ್ಪಷ್ಟ ಉತ್ತರ ದೊರೆತಿಲ್ಲ. ಇದೀಗ ಹೇಳಿಕೆಗಳಲ್ಲಿನ ವ್ಯತ್ಯಾಸಗಳು ಹಾಗೂ ತನಿಖೆಯಿಂದ ಲಭ್ಯವಾದ ಮಾಹಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸುವ ಮೂಲಕ ಪ್ರಕರಣಕ್ಕೆ ಉತ್ತರ ಕಂಡುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಲಿಂಗಸುಗೂರು ರೇಷ್ಮೆ ಇಲಾಖೆ ಕಚೇರಿಯಲ್ಲಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್ ಶಂಕೆ

0

ರಾಯಚೂರು: ಸರ್ಕಾರಿ ರಜೆ ದಿನವೇ ಲಿಂಗಸುಗೂರಿನ ರೇಷ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಶನಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಚೇರಿಯಲ್ಲಿದ್ದ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ನಾಲ್ಕನೇ ಶನಿವಾರದ ಹಿನ್ನೆಲೆಯಲ್ಲಿ ಕಚೇರಿಗೆ ಬೀಗ ಹಾಕಲಾಗಿತ್ತು. ಸಿಬ್ಬಂದಿ ಇಲ್ಲದ ಸಮಯದಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಅಗ್ನಿಯ ತೀವ್ರತೆಗೆ ಕಚೇರಿಯ ಪೀಠೋಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ಅವಘಡದ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.