Home Blog

ರಾಯಪ್ಪ ಹತ್ತಿಕಾಳಗೆ ಗೌರವ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ಮಧ್ಯ ಕರ್ನಾಟಕದ ಅತಿ ದೊಡ್ಡ ಫೋಟೋಗ್ರಾಫಿ ಹಾಗೂ ವಿಡಿಯೋಗ್ರಫಿ ಛಾಯಾಮೇಳವೆಂದು ಗುರುತಿಸಿಕೊಂಡಿರುವ ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮವು ದಾವಣಗೆರೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ರಾಯಪ್ಪ ಹತ್ತಿಕಾಳ ಅವರನ್ನು ದೇವನಗರಿ ಪ್ರೊ ಇಮೇಜ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಛಾಯಾಗ್ರಹಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಸೇವೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಗುರುತಿಸಿ ಈ ವಿಶೇಷ ಗೌರವವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ದೇವನಗರಿ ಪ್ರೊ ಇಮೇಜ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು, ಸನ್ಮಾನಿತರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಗದಗ ಜಿಲ್ಲಾ ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ಪವನ ಕೆ. ಮೇಹರವಾಡೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಛಾಯಾಗ್ರಾಹಕರ ಸಂಘಗಳ ಉಪಾಧ್ಯಕ್ಷರಿಗೂ ಗೌರವ ಸನ್ಮಾನ ನೀಡಿ ಅಭಿನಂದಿಸಲಾಯಿತು.

ಗದಗ ಜಿಲ್ಲೆಯ ಛಾಯಾಗ್ರಾಹಕರಿಗೆ ಈ ಪ್ರತಿಷ್ಠಿತ ವೇದಿಕೆಯಲ್ಲಿ ದೊರೆತಿರುವ ಗೌರವವು ಜಿಲ್ಲೆಯ ಛಾಯಾಗ್ರಹಣ ಕ್ಷೇತ್ರಕ್ಕೆ ಮತ್ತಷ್ಟು ಹೆಮ್ಮೆ ತಂದಿದೆ. ದೇವನಗರಿ ಪ್ರೊ ಇಮೇಜ್–2026 ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಛಾಯಾಗ್ರಾಹಕರನ್ನು ಗುರುತಿಸಿ ಗೌರವಿಸಿದ ದೇವನಗರಿ ಪ್ರೊ ಇಮೇಜ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ಛಾಯಾಗ್ರಾಹಕರ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ.

ಜೋಳದ ಸಂಗಟಿಯೇ ನೈವೇದ್ಯ… ಭಾವೈಕ್ಯತೆಯೇ ಆರಾಧನೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಒಂದು ಕಡೆ ಭೂಮಿಯಿಂದ ತಾನಾಗಿಯೇ ಉದ್ಭವಿಸಿದ ಜಾಗೃತ ದೈವದ ಮೇಲಿನ ಅಚಲ ನಂಬಿಕೆ… ಇನ್ನೊಂದು ಕಡೆ ರೈತರ ಬೆವರಿನ ಫಲವಾದ ಜೋಳದ ಸಂಗಟಿಯನ್ನೇ ದೇವರಿಗೆ ನೈವೇದ್ಯವಾಗಿ ಅರ್ಪಿಸುವ ವಿಶಿಷ್ಟ ಸಂಪ್ರದಾಯ… ಜಾತಿ-ಮತಗಳ ಬೇಲಿ ಮೀರಿ ಒಂದೇ ಭಕ್ತಿಯ ಭಾವದಲ್ಲಿ ಒಂದಾಗುವ ಜನತೆ…!

ಇದು ಸಮೀಪದ ಮಾರನಬಸರಿ ಗ್ರಾಮದ ಐತಿಹಾಸಿಕ ಗಡ್ಡಿ ಮಾರುತೇಶ್ವರ ಪಾಲಕಿ ಉತ್ಸವದ ವಿಶೇಷತೆ.

ಗ್ರಾಮೀಣ ಜನಪದ ಸಂಸ್ಕೃತಿ, ಶತಮಾನಗಳ ನಂಬಿಕೆ ಹಾಗೂ ರೈತ ಬದುಕಿನ ಸಂಪ್ರದಾಯದ ಸಂಗಮವಾಗಿರುವ ಗಡ್ಡಿ ಮಾರುತೇಶ್ವರನ ವಾರ್ಷಿಕ ಪಾಲಕಿ ಉತ್ಸವವು ಶ್ರಾವಣ ಮಾಸದ ಮೂರನೇ ಶನಿವಾರದಂದು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಜರುಗಿತು.

ಗ್ರಾಮದ ದಕ್ಷಿಣ ಭಾಗದ ಹೊಲದಲ್ಲಿರುವ ಗಡ್ಡಿ ಮಾರುತೇಶ್ವರ ಮೂರ್ತಿಯು ಭೂಮಿಯಲ್ಲಿ ತಾನಾಗಿಯೇ ಉದ್ಭವಿಸಿದ ಜಾಗೃತ ದೈವ ಎಂಬುದು ಗ್ರಾಮಸ್ಥರ ನಂಬಿಕೆಯಾಗಿದೆ. ಪೂರ್ವಜರ ಕಾಲದಿಂದಲೂ ಶ್ರಾವಣ ಮಾಸದಲ್ಲಿ ವಿಶೇಷ ಆರಾಧನೆ ನಡೆಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮದ ಹಿರಿಯರು ತಿಳಿಸಿದರು.

ಉತ್ಸವದ ಅಂಗವಾಗಿ ರೈತರು ಜೋಳ, ಧಾನ್ಯ, ಕಾಳು-ಕಡಿ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಕಾಣಿಕೆಯಾಗಿ ಅರ್ಪಿಸಿದರು. ವಿಶೇಷ ಪೂಜೆ ಬಳಿಕ ಜೋಳದ ಸಂಗಟಿ ಹಾಗೂ ಸಾರಿನ ದಾಸೋಹ ನಡೆಯಿತು.

ಅನ್ನಸಂತರ್ಪಣೆಯ ನಂತರ ಆಂಜನೇಯಸ್ವಾಮಿ ದೇವಸ್ಥಾನದಿಂದ ಅಲಂಕೃತ ಪಾಲಕಿ ಹೊರಟು, ‘ಡೊಳ್ಳಿನ ಮಜಲು’ ವಾದ್ಯ ವೈಭವದೊಂದಿಗೆ ಉದ್ಭವ ಮೂರ್ತಿಯ ಸನ್ನಿಧಾನಕ್ಕೆ ತಲುಪಿತು. ಉತ್ತಮ ಮಳೆ-ಬೆಳೆ, ರೈತರ ಬದುಕಿನಲ್ಲಿ ಸಮೃದ್ಧಿ ಹಾಗೂ ಸಕಲ ಜೀವಿಗಳಿಗೆ ಆರೋಗ್ಯ ದೊರೆಯಲಿ ಎಂದು ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಭಾವೈಕ್ಯತೆಗೆ ಜೀವಂತ ಸಾಕ್ಷಿಯಾದ ಉತ್ಸವ

ಗಡ್ಡಿ ಮಾರುತೇಶ್ವರನ ವಿಶೇಷ ಪೂಜೆ, ಸಂಗಟಿ ದಾಸೋಹ ಹಾಗೂ ಪಾಲಕಿ ಉತ್ಸವದಲ್ಲಿ ಹಿಂದೂ ಬಾಂಧವರೊಂದಿಗೆ ಮುಸ್ಲಿಂ ಸಮುದಾಯದವರೂ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು. ಜಾತಿ-ಮತಗಳ ಭೇದ ಮರೆತು ಎಲ್ಲರೂ ಒಂದಾಗಿ ಸಂಭ್ರಮಿಸಿದ ಈ ಉತ್ಸವವು ಮಾರನಬಸರಿ ಗ್ರಾಮವನ್ನು ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆಯ ಜೀವಂತ ಸಾಕ್ಷಿಯನ್ನಾಗಿ ಮಾಡಿತು.

ಪೂರ್ವಜರ ಕಾಲದಿಂದಲೂ ಗಡ್ಡಿ ಮಾರುತೇಶ್ವರನಿಗೆ ವಿಶೇಷ ಆಚರಣೆ ನಡೆಸಿಕೊಂಡು ಬರುತ್ತಿದ್ದೇವೆ. ರೈತರ ಬೆವರಿನೊಂದಿಗೆ ಬೆಳೆದ ಜೋಳದ ಸಂಗಟಿಯೇ ದೇವರಿಗೆ ಪ್ರಮುಖ ನೈವೇದ್ಯ. ಜಾತಿ-ಮತಗಳ ಬೇಲಿ ಮೀರಿ ನಾವೆಲ್ಲರೂ ಒಂದಾಗಿ ಊರು ಹಾಗೂ ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸುತ್ತೇವೆ.

– ಶರಣಪ್ಪ ಕುರಿ, ಗ್ರಾಮದ ಹಿರಿಯ

ಮೌಲಾನಾ ಆಜಾದ್–ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಖಾಲಿ ಹುದ್ದೆ ಭರ್ತಿಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಮತ್ತು ಶಿಕ್ಷಕೇತರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ರಾಜ್ಯಾಧ್ಯಕ್ಷ ಮಹ್ಮದಶಫಿ ನಾಗರಕಟ್ಟೆ ತಿಳಿಸಿದ್ದಾರೆ.

ನಗರದ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಮೌಲಾನಾ ಆಜಾದ್ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದರು.

ಹುದ್ದೆಗಳ ಕೊರತೆಯಿಂದ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರ ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ತೊಡಕಾಗುತ್ತಿದೆ. ಮತ್ತೊಂದೆಡೆ, ಅಗತ್ಯ ವಿದ್ಯಾರ್ಹತೆ ಹೊಂದಿರುವ ಅನೇಕ ಪದವೀಧರರು ಉದ್ಯೋಗದ ನಿರೀಕ್ಷೆಯಲ್ಲಿ ಕಾಯುತ್ತಿರುವ ಸಂದರ್ಭದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಅವರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಈ ವಸತಿ ಶಾಲೆಗಳು ಬಡವರು, ಅಲ್ಪಸಂಖ್ಯಾತರು, ಅತ್ಯಂತ ಹಿಂದುಳಿದವರು ಹಾಗೂ ದಲಿತ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಪ್ರಮುಖ ಕೇಂದ್ರಗಳಾಗಿವೆ. ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಖಾಲಿ ಇರುವ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ವಾತಾವರಣ ಕಲ್ಪಿಸಬೇಕು. ಜತೆಗೆ ವಿದ್ಯಾವಂತ ನಿರುದ್ಯೋಗಿ ಪದವೀಧರರಿಗೆ ಉದ್ಯೋಗದ ಅವಕಾಶ ಒದಗಿಸಬೇಕು ಎಂದು ಮಹ್ಮದಶಫಿ ನಾಗರಕಟ್ಟೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಾಫರ ಡಾಲಾಯತ, ಮಹಬೂಬ್ ಬಾದಷಾ ಖಾಜಿ, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ದೊಡ್ಡಮನಿ, ಕುತುಬುದ್ದೀನ್ ಶೇಖ, ಅಬ್ದುಲರಜ್ಜಾಕ ಮಂಗಳೂರು, ರಫೀಕ್ ಈಟಿ, ಸಲೀಂ ಕರಡಿ, ಯಾಸಿನ್ ಮುಲ್ಲಾ, ಅಫ್ಜಲ್ ಮನಿಯಾರ್, ಜೋಹರ ಮುಂಡರಗಿ, ಇಮ್ರಾನ್ ತಹಶೀಲ್ದಾರ್, ಮೀರಾಸಾಬ ಇರಕಲ್, ನಿಜಾಮುದ್ದೀನ್ ಕಾಟಾಪುರ, ರಹೀಂಸಾಬ ದೊಡ್ಡಮನಿ, ಸಲೀಂ ನಾಲಬಂದ, ಮಕ್ತುಂ ಹುಸೇನ್ ಜಮಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಟ-ಪಾಠದೊಂದಿಗೆ ಬದುಕಿನ ಮೌಲ್ಯ ಅರಿಯಿರಿ: ಜಯಶ್ರೀ ಉಗಲಾಟದ

0

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಬಾಲ್ಯ ಹಸನಾಗಲು ಆಟ-ಪಾಠದೊಂದಿಗೆ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಚಿಂತಕಿ ಜಯಶ್ರೀ ಉಗಲಾಟದ ಹೇಳಿದರು.

ನಗರದ ಗಂಗಿಮಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಕಮಹಾದೇವಿ ಕದಳಿಶ್ರೀ ಮಹಿಳಾ ವೇದಿಕೆಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ‘ಅಮೃತಭೋಜನ–ಜ್ಞಾನ ಸಿಂಚನ’ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ಭೋಜನ ವಿತರಿಸಿ ಅವರು ಮಾತನಾಡಿದರು.

ಬಾಲ್ಯದಲ್ಲಿಯೇ ಉತ್ತಮ ನಡೆ-ನುಡಿ ಹಾಗೂ ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಶಾಲಾ ಪಾಠದೊಂದಿಗೆ ಜೀವನ ಪಾಠವೂ ಅಗತ್ಯವಾಗಿದೆ ಎಂದು ಹೇಳಿದರು.

ಚಿಂತಕ ರಮೇಶ ಶಿಗ್ಲಿ ಮಾತನಾಡಿ, ಸಂಗೀತದ ಮೂಲಕ ಕಲಿಕೆಯನ್ನು ಪರಿಣಾಮಕಾರಿಯಾಗಿಸಿಕೊಳ್ಳಬಹುದು. ಮಕ್ಕಳು ಶರಣರು ಹಾಗೂ ದಾರ್ಶನಿಕರ ಜೀವನ ಸಂದೇಶಗಳನ್ನು ತಿಳಿದು ಅನುಸರಿಸಬೇಕು ಎಂದರು.

ಚಿಂತಕಿ ಸುಜಾತಾ ಲಕ್ಷ್ಮೇಶ್ವರ ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿ ಅದನ್ನು ಸಾಧಿಸಲು ಹಿರಿಯರ ಮಾರ್ಗದರ್ಶನ ಪಡೆಯಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿ ಮುತ್ತಣ್ಣ ತೋಟಗೇರ ಅವರು ಪ್ರಯತ್ನ ಮತ್ತು ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು. ಸಾವಿತ್ರಿ ಶಿಗ್ಲಿ ಅವರು ಮಕ್ಕಳು ಯೋಗ ಮತ್ತು ಧ್ಯಾನವನ್ನು ರೂಢಿಸಿಕೊಳ್ಳುವುದರಿಂದ ಏಕಾಗ್ರತೆ ಹೆಚ್ಚುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕುಮಾರ ಯಶಸ್ಸಕುಮಾರ ಶಿಗ್ಲಿ ಅವರ ಜನ್ಮದಿನವನ್ನು ಮಕ್ಕಳೊಂದಿಗೆ ಆಚರಿಸಲಾಯಿತು.

ವೇದಿಕೆಯ ಸಂಚಾಲಕಿ ಕವಿತಾ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ.ಎಸ್. ಬೆಳಹಾರ ಸ್ವಾಗತಿಸಿದರು. ಐ.ಡಿ. ಕಬ್ಬೇರಹಳ್ಳಿ ನಿರೂಪಿಸಿದರು. ಆರ್.ಡಿ. ಮಗಜಿ ವಂದಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಎಂ.ಟಿ. ವಡ್ಡಟ್ಟಿ, ಕವಯಿತ್ರಿ ಹಾಗೂ ಗಾಯಕಿ ಪದ್ಮಾ ಕಬಾಡಿ, ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಬಿಜೆಪಿ ಮಹಿಳಾ ಮೋರ್ಚಾದಿಂದ ವಿಶಿಷ್ಟ ರಕ್ಷಾಬಂಧನ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಗದಗ ನಗರ ಮಂಡಲ ವತಿಯಿಂದ ರಕ್ಷಾಬಂಧನ ಹಬ್ಬವನ್ನು ಪೌರಕಾರ್ಮಿಕರು ಹಾಗೂ ಶಿಕ್ಷಕರೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಗದಗ ನಗರ ಮಂಡಲ ಅಧ್ಯಕ್ಷೆ ಸ್ವಾತಿ ಅಕ್ಕಿ ವಹಿಸಿ ಮಾತನಾಡಿ, ಊರು ಹಾಗೂ ಬೀದಿಗಳನ್ನು ಸ್ವಚ್ಛವಾಗಿಟ್ಟುಕೊಂಡು ಸಾರ್ವಜನಿಕರ ಆರೋಗ್ಯ ಕಾಪಾಡುವ ಪೌರಕಾರ್ಮಿಕರು ಸಮಾಜದ ನಿಜವಾದ ರಕ್ಷಕರಾಗಿದ್ದಾರೆ ಎಂದು ಹೇಳಿದರು.

ಸಮಾಜಕ್ಕಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕ ಬಂಧುಗಳಿಗೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಾರ್ಗದರ್ಶನ ನೀಡುವ ಶಿಕ್ಷಕರಿಗೆ ಗೌರವದ ರಾಖಿ ಕಟ್ಟಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ರಕ್ಷಾಬಂಧನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಶಿಕ್ಷಕರು ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛತೆಗಾಗಿ ನಿರಂತರ ಸೇವೆ ಸಲ್ಲಿಸುವ ಪೌರಕಾರ್ಮಿಕರೊಂದಿಗೆ ರಕ್ಷಾಬಂಧನ ಆಚರಿಸುತ್ತಿರುವುದು ವಿಶೇಷ ಹಾಗೂ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ನಿರ್ಮಲಾ ಕೊಳ್ಳಿ ಹಾಗೂ ವಿದ್ಯಾವತಿ ಗಡಗಿ ಮಾತನಾಡಿ, ಉತ್ತಮ ಶಿಕ್ಷಕರು ಕೇವಲ ಪಾಠ ಕಲಿಸುವುದಲ್ಲದೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರ ಜೀವನ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಇಂತಹ ಶಿಕ್ಷಕರೊಂದಿಗೆ ರಕ್ಷಾಬಂಧನ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂ.ಎಸ್. ಕರಿಗೌಡ್ರ, ಶ್ರೀಪತಿ ಉಡುಪಿ, ನಗರ ಮಂಡಲ ಅಧ್ಯಕ್ಷ ಸುರೇಶ್ ಮರಳಪ್ಪನವರ, ಅನಿಲ ಅಬ್ಬಿಗೇರಿ, ಚೆನ್ನಮ್ಮ ಹುಳಕಣ್ಣವರ, ಅಮರನಾಥ ಗಡಗಿ, ಪ್ರೀತಿ ಶಿವಪ್ಪನಮಠ, ವಂದನಾ ವರ್ಣೆಕರ್, ಅಶ್ವಿನಿ ಜಗತಾಪ, ಮೇಘನಾ ಕೊಟ್ಟೂರ, ಗೀತಾ ಅಣ್ಣಿಗೇರಿ, ಶೈಲಾ ಜೋಸೆಫ್, ಮಹಾಲಕ್ಷ್ಮಿ ಶಿರಸಿಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪಾ ಪೂಜಾರ ಕಾರ್ಯಕ್ರಮ ನಿರೂಪಿಸಿದರು. ರೇಖಾ ಗವಳಿ ವಂದಿಸಿದರು.

ಗೃಹಜ್ಯೋತಿ ಬಿಟ್ಟ 3 ಲಕ್ಷಕ್ಕೂ ಹೆಚ್ಚು ಮಂದಿ! ಸರ್ಕಾರಕ್ಕೆ ₹500 ಕೋಟಿ ಉಳಿತಾಯ?

0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಡಿ ದೊರೆಯುವ ಉಚಿತ ವಿದ್ಯುತ್ ಸೌಲಭ್ಯವನ್ನು ರಾಜ್ಯದ 3 ಲಕ್ಷಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತರಾಗಿ ತ್ಯಜಿಸಿದ್ದಾರೆ.

ಸರ್ಕಾರದ ‘ಗ್ಯಾರಂಟಿ ಗೀವ್ ಅಪ್’ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ವೇಳೆ ಹಲವು ಫಲಾನುಭವಿಗಳು ತಮಗೆ ಯೋಜನೆಯ ಸೌಲಭ್ಯ ಅಗತ್ಯವಿಲ್ಲ ಎಂದು ತಿಳಿಸಿ ಹಿಂದೆ ಸರಿದಿದ್ದಾರೆ.

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆ ಸಂದರ್ಭದಲ್ಲಿ ಫಲಾನುಭವಿಗಳ ಅರ್ಹತೆಯನ್ನು ಪರಿಶೀಲಿಸಲಾಗುತ್ತಿದೆ. ಇದೇ ವೇಳೆ ಆರ್ಥಿಕವಾಗಿ ಸಬಲರಾಗಿರುವವರು ಹಾಗೂ ಯೋಜನೆಯ ಸೌಲಭ್ಯ ಬೇಡವೆಂದು ಭಾವಿಸುವವರು ಸ್ವಯಂಪ್ರೇರಿತರಾಗಿ ‘ಗೀವ್ ಅಪ್’ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಈ ಕುರಿತು ಮಾಹಿತಿ ನೀಡಿದ್ದು, ಗೃಹಜ್ಯೋತಿ ಯೋಜನೆಯ ಗೀವ್ ಅಪ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಮನೆ-ಮನೆಗೆ ತೆರಳಿ ನಡೆಸುತ್ತಿರುವ ಮರುಪರಿಶೀಲನೆ ಕಾರ್ಯವನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಎಷ್ಟು ಉಳಿತಾಯ?

ಗೃಹಜ್ಯೋತಿ ಯೋಜನೆಯಡಿ 150 ಯೂನಿಟ್‌ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಯೋಜನೆಯಿಂದ ಹೊರಬರುವ ಫಲಾನುಭವಿಗಳ ಸಂಖ್ಯೆಯನ್ನು ಆಧರಿಸಿ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ₹42 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.

ಇದರಿಂದ ವಾರ್ಷಿಕವಾಗಿ ಸರಿಸುಮಾರು ₹500 ಕೋಟಿ ಸರ್ಕಾರದ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಬಹುದು ಎಂದು ತಿಳಿಸಲಾಗಿದೆ.

ಗೃಹಲಕ್ಷ್ಮಿಗೂ ರೀ-ಸರ್ವೆ:

ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯ ಬೆನ್ನಲ್ಲೇ ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೂ ರೀ-ಸರ್ವೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಪ್ರಕ್ರಿಯೆಗೆ ನಾಳೆಯಿಂದ ಅಧಿಕೃತ ಚಾಲನೆ ಸಿಗಲಿದೆ.

ಆಧುನಿಕ ತಂತ್ರಜ್ಞಾನ ಬಳಸಿ ಯೋಜನೆಗೆ ಅನರ್ಹರಾಗಿರುವ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡಲು ಕ್ರಮ ಕೈಗೊಳ್ಳಲಾಗುತ್ತದೆ. ಇದರ ಜೊತೆಗೆ ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರು ಸ್ವಯಂಪ್ರೇರಿತರಾಗಿ ಗೃಹಲಕ್ಷ್ಮಿ ಯೋಜನೆಯಡಿ ದೊರೆಯುವ ₹2,000 ಮಾಸಿಕ ನೆರವನ್ನು ತ್ಯಜಿಸಲು ಅವಕಾಶ ನೀಡಲಾಗುತ್ತದೆ.

ಅನರ್ಹ ಫಲಾನುಭವಿಗಳಿಗೆ ಶಾಕ್?

ಗೃಹಜ್ಯೋತಿ ಯೋಜನೆಯ ಮಾದರಿಯಲ್ಲೇ ಗೃಹಲಕ್ಷ್ಮಿ ಯೋಜನೆಯಲ್ಲೂ ಅರ್ಹತೆ ಇಲ್ಲದ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯದಿಂದ ಹೊರಗಿಡುವ ಸಾಧ್ಯತೆಯಿದೆ. ಅಲ್ಲದೆ, ಆರ್ಥಿಕವಾಗಿ ಸಬಲರಾಗಿರುವ ಮಹಿಳೆಯರು ಸ್ವಯಂಪ್ರೇರಿತರಾಗಿ ಯೋಜನೆಯಿಂದ ಹಿಂದೆ ಸರಿಯುವ ನಿರೀಕ್ಷೆಯಿದೆ.

ಇದರಿಂದ ಗೃಹಲಕ್ಷ್ಮಿ ಯೋಜನೆಯಲ್ಲೂ ಫಲಾನುಭವಿಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಯಿದ್ದು, ಸರ್ಕಾರದ ಮೇಲಿನ ಆರ್ಥಿಕ ಹೊರೆಯೂ ತಗ್ಗಬಹುದು ಎಂದು ನಿರೀಕ್ಷಿಸಲಾಗಿದೆ.

ಸರ್ವರ್ ಸ್ತಬ್ಧ… ಅನ್ನಭಾಗ್ಯಕ್ಕಾಗಿ ಜನರ ಪರದಾಟ!

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ದೊರೆಯುವ ಪಡಿತರ ಅಕ್ಕಿಗಾಗಿ ಫಲಾನುಭವಿಗಳು ಶನಿವಾರ ದಿನವಿಡೀ ಸರತಿ ಸಾಲಿನಲ್ಲಿ ನಿಂತು ಪರದಾಡಿದ ದೃಶ್ಯ ಮುಳಗುಂದ ಪಟ್ಟಣದ ನ್ಯಾಯಬೆಲೆ ಅಂಗಡಿಗಳ ಮುಂದೆ ಕಂಡುಬಂತು.

ಆನ್‌ಲೈನ್ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಉಂಟಾದ ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳ ದೃಢೀಕರಣ ಹಾಗೂ ಪಡಿತರ ವಿತರಣೆಯಲ್ಲಿ ವಿಳಂಬ ಉಂಟಾಗಿತ್ತು. ಪರಿಣಾಮವಾಗಿ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ಪಡಿತರ ಅಕ್ಕಿ ಪಡೆಯಲಾಗದೆ ತೀವ್ರ ಸಂಕಷ್ಟ ಅನುಭವಿಸಿದರು.

ಕೆಲವರು ಶನಿವಾರ ಬೆಳಗ್ಗೆ 5 ಗಂಟೆಯಿಂದಲೇ ನ್ಯಾಯಬೆಲೆ ಅಂಗಡಿಗಳ ಮುಂದೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದರು. ರಾತ್ರಿ 10 ಗಂಟೆಯಾದರೂ ಕೆಲವರಿಗೆ ತಮ್ಮ ಸರದಿ ಬಾರದ ಸ್ಥಿತಿ ನಿರ್ಮಾಣವಾಗಿದ್ದು, ಅನ್ನಭಾಗ್ಯದ ಅಕ್ಕಿಗಾಗಿ ಇಡೀ ದಿನ ಕಾಯಬೇಕಾದ ದುಸ್ಥಿತಿ ಫಲಾನುಭವಿಗಳದ್ದಾಗಿತ್ತು.

ಸರ್ವರ್ ಸಮಸ್ಯೆಯಿಂದ ವಿತರಣೆ ವಿಳಂಬ

ಪಡಿತರ ವಿತರಣೆಗೆ ಅಗತ್ಯವಿರುವ ಆನ್‌ಲೈನ್ ವ್ಯವಸ್ಥೆಯಲ್ಲಿ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಫಲಾನುಭವಿಗಳ ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ವಿತರಣಾ ಪ್ರಕ್ರಿಯೆಗೆ ತೀವ್ರ ಅಡ್ಡಿಯಾಗಿತ್ತು. ಗಂಟೆಗಟ್ಟಲೆ ಕಾಯುತ್ತಿದ್ದರೂ ಅಕ್ಕಿ ಪಡೆಯಲು ಸಾಧ್ಯವಾಗದೆ ಅನೇಕ ಫಲಾನುಭವಿಗಳು ಅಸಮಾಧಾನ ವ್ಯಕ್ತಪಡಿಸಿದರು.

ವೃದ್ಧರು, ಮಹಿಳೆಯರ ಗೋಳು

ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತವರಲ್ಲಿ ಹೆಚ್ಚಿನವರು ವೃದ್ಧರು ಹಾಗೂ ಮಹಿಳೆಯರಾಗಿದ್ದರು. ದೀರ್ಘಕಾಲ ನಿಂತುಕೊಳ್ಳಲಾಗದೆ ಕೆಲ ವೃದ್ಧರು ಅಸ್ವಸ್ಥಗೊಂಡು ಮನೆಗೆ ಮರಳುವಂತಾಗಿತ್ತು.

ಈ ತಿಂಗಳ ಪಡಿತರ ಅಕ್ಕಿ ದೊರೆಯುತ್ತದೆಯೋ ಇಲ್ಲವೋ ಎಂಬ ಆತಂಕವೂ ಫಲಾನುಭವಿಗಳನ್ನು ಕಾಡುತ್ತಿತ್ತು. ವಿಶೇಷವಾಗಿ ಆರ್ಥಿಕವಾಗಿ ದುರ್ಬಲ ಕುಟುಂಬಗಳು ಅನ್ನಭಾಗ್ಯದ ಅಕ್ಕಿಯನ್ನೇ ನಂಬಿಕೊಂಡಿರುವುದರಿಂದ ಸರ್ವರ್ ಸಮಸ್ಯೆ ಅವರ ಜೀವನದ ಮೇಲೆ ನೇರ ಪರಿಣಾಮ ಬೀರುವಂತಾಗಿತ್ತು.

ದುಡಿಮೆ ಬಿಟ್ಟು ಪಡಿತರಕ್ಕಾಗಿ ಕಾಯುವ ಸ್ಥಿತಿ

ಮುಳಗುಂದ ಪ್ರದೇಶವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಪ್ರಸಕ್ತ ವರ್ಷ ಸಮರ್ಪಕ ಮುಂಗಾರು ಮಳೆಯಾಗದೆ ರೈತರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಪಸ್ವಲ್ಪ ಉಳಿದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿರುವ ಸಂದರ್ಭದಲ್ಲೇ, ಅನೇಕ ಕುಟುಂಬಗಳು ತಮ್ಮ ದಿನನಿತ್ಯದ ಜೀವನಕ್ಕಾಗಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಅವಲಂಬಿಸಿವೆ.

ಆದರೆ ಶನಿವಾರ ಸರ್ವರ್ ಸಮಸ್ಯೆಯಿಂದ ಕೂಲಿ ಕಾರ್ಮಿಕರು ತಮ್ಮ ದಿನದ ಕೆಲಸಕ್ಕೆ ತೆರಳದೆ ದಿನವಿಡೀ ನ್ಯಾಯಬೆಲೆ ಅಂಗಡಿಗಳ ಮುಂದೆ ಕಾಯುವ ಸ್ಥಿತಿ ನಿರ್ಮಾಣವಾಗಿತ್ತು. ಒಂದೆಡೆ ದುಡಿಮೆ ಇಲ್ಲ, ಇನ್ನೊಂದೆಡೆ ಪಡಿತರವೂ ಸಿಗುತ್ತಿಲ್ಲ ಎಂಬ ಪರಿಸ್ಥಿತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದವು.

“ನಮ್ಮ ಗೋಳು ಕೇಳುವವರು ಯಾರು?” ಎಂಬ ಪ್ರಶ್ನೆ ಫಲಾನುಭವಿಗಳಿಂದ ಕೇಳಿಬರುತ್ತಿತ್ತು.

ಪಡಿತರ ಅಕ್ಕಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಸಾಕಷ್ಟು ಕುಟುಂಬಗಳು, ಈ ತಿಂಗಳ ಅಕ್ಕಿ ದೊರೆಯದಿದ್ದರೆ ದಿನನಿತ್ಯದ ಜೀವನ ನಿರ್ವಹಣೆ ಕಷ್ಟವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪಡಿತರ ವಿತರಣೆಯಲ್ಲಿ ಪದೇಪದೇ ತಾಂತ್ರಿಕ ಹಾಗೂ ಸರ್ವರ್ ಸಮಸ್ಯೆಗಳು ಉಂಟಾಗುತ್ತಿರುವುದರಿಂದ ಸರ್ಕಾರ ಮತ್ತು ಆಹಾರ ಇಲಾಖೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಫಲಾನುಭವಿಗಳ ಒತ್ತಾಯವಾಗಿತ್ತು.

ಕೂಲಿ ಕಾರ್ಮಿಕರು ತಮ್ಮ ಕೆಲಸ ಬಿಟ್ಟು ದಿನವಿಡೀ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿಗೆ ತೆರೆ ಎಳೆಯಬೇಕು. ಪಡಿತರ ವಿತರಣೆಗೆ ಸುಗಮವಾದ ತಾಂತ್ರಿಕ ವ್ಯವಸ್ಥೆ ಕಲ್ಪಿಸಿ, ಯಾವುದೇ ಫಲಾನುಭವಿಯೂ ಪಡಿತರದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಗದಗ ಜಿಲ್ಲೆಯಲ್ಲಿ ಪಡಿತರ ವಿತರಣೆಯ ಶೇ.79ರಷ್ಟು ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಉಳಿದ ಶೇ.21ರಷ್ಟು ವಿತರಣೆಯನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಸರ್ವರ್ ಸಮಸ್ಯೆಯಿಂದ ಫಲಾನುಭವಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಸಲಾಗುವುದು.

— ಎಸ್.ಡಿ. ಪಾಟೀಲ, ಆಹಾರ ಇಲಾಖೆ ಉಪನಿರ್ದೇಶಕ

ಸರ್ವರ್ ಸಮಸ್ಯೆಯಿಂದ ಕೂಲಿ ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ದಿನದ ಕೆಲಸ ಬಿಟ್ಟು ಪಡಿತರಕ್ಕಾಗಿ ಕಾಯಬೇಕಾಗಿದೆ. ಫಲಾನುಭವಿಗಳಿಗೆ ತೊಂದರೆಯಾಗದಂತೆ ಸುಗಮವಾದ ಸರ್ವರ್ ವ್ಯವಸ್ಥೆ ಕಲ್ಪಿಸಬೇಕು.

— ರಿಯಾಜ್ ಮುಲ್ಲಾ, ಫಲಾನುಭವಿ, ಮುಳಗುಂದ

ವೀರಭದ್ರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗುಗ್ಗಳೋತ್ಸವ

0

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇಲ್ಲಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಉಚಿತ ಸಾಮೂಹಿಕ ಗುಗ್ಗಳೋತ್ಸವವು ವಿಜೃಂಭಣೆಯಿಂದ ಹಾಗೂ ಭಕ್ತಿಭಾವದಿಂದ ಜರುಗಿತು.

ಕಳೆದ ಸುಮಾರು 10 ವರ್ಷಗಳಿಂದ ದೇವಸ್ಥಾನದಲ್ಲಿ ಗುಗ್ಗಳೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಏಳು ಕುಟುಂಬಗಳ ಗುಗ್ಗಳ ಸೇವೆ ನೆರವೇರಿಸಲಾಯಿತು.

ಶ್ರೀ ವೀರಭದ್ರನ ಉಡುಪಾದ ಕಾಶಿ ಧರಿಸಿದ ಬಾಲ ಪುರವಂತರ ನೃತ್ಯ ಹಾಗೂ ವಡುಪು ಹೇಳುವ ವಿಶಿಷ್ಟ ಶೈಲಿ ನೆರೆದಿದ್ದ ಭಕ್ತರ ಗಮನ ಸೆಳೆಯಿತು. ವೀರ ಪುರವಂತರ ಕಾಶಿ ಧರಿಸಿದ ಅಲಂಕಾರದಲ್ಲಿ ಶ್ರೀ ವೀರಭದ್ರಸ್ವಾಮಿಯು ಕಂಗೊಳಿಸುತ್ತಿದ್ದು, ಇಡೀ ದೇವಸ್ಥಾನ ಆವರಣ ಭಕ್ತಿಮಯ ವಾತಾವರಣದಿಂದ ತುಂಬಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಗುಗ್ಗಳದ ಹಿನ್ನೆಲೆ, ಅದರ ಪರಂಪರೆ ಹಾಗೂ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕುರಿತು ಶರತ್ ಘಾರ್ಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಯಳವತ್ತಿ ಕಾರ್ಯಕ್ರಮ ನಿರೂಪಿಸಿದರು.

ಗುಗ್ಗಳೋತ್ಸವದಲ್ಲಿ ಶ್ರೀ ವೀರಭದ್ರೇಶ್ವರ ಸದ್ಭಕ್ತ ಮಂಡಳಿಯ ಸರ್ವ ಸದಸ್ಯರು ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮದ ಬಳಿಕ ಸಮಸ್ತ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದಾವಣಗೆರೆಯ ಶ್ರೀ ಪ್ರಭು ರಾಮಚಂದ್ರ ಪುರಂತರ ಪರಿವಾರದವರು ಅನ್ನಪ್ರಸಾದ ಸೇವೆ ನೆರವೇರಿಸಿದರು.

ಧಾರ್ಮಿಕ ಪರಂಪರೆ, ಭಕ್ತಿ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಸಾರಿದ ಸಾಮೂಹಿಕ ಗುಗ್ಗಳೋತ್ಸವವು ಭಕ್ತಾದಿಗಳಿಗೆ ವಿಶೇಷ ಆಧ್ಯಾತ್ಮಿಕ ಅನುಭವ ನೀಡುವ ಮೂಲಕ ಯಶಸ್ವಿಯಾಗಿ ಸಂಪನ್ನಗೊಂಡಿತು.

ತಂತ್ರಜ್ಞಾನವನ್ನು ವಿವೇಚನೆಯಿಂದ ಬಳಸುವ ಜ್ಞಾನ ಅಗತ್ಯ: ಶಂಭುಲಿಂಗಯ್ಯ ಕಲ್ಮಠ

0

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ವ್ಯತ್ಯಾಸ ಅರಿಯುವ ವಿವೇಕ ಬೆಳೆಸಿಕೊಳ್ಳಬೇಕು ಎಂದು ಚಿಂತಕ ಶಂಭುಲಿಂಗಯ್ಯ ಕಲ್ಮಠ ಹೇಳಿದರು.

ಗದುಗಿನ ಸರ್ಕಾರಿ ಪ್ರಾಥಮಿಕ ಶಾಲೆ ನಂ.6 ಹಾಗೂ ಉರ್ದು ಪ್ರಾಥಮಿಕ ಶಾಲೆ ನಂ.3ರಲ್ಲಿ ಗದಗ ಜಿಲ್ಲಾ ಶರಣ ಸಂಕುಲದ ಶರಣೆ ಅಕ್ಕಮಹಾದೇವಿಯ ಕದಳಿಶ್ರೀ ವೇದಿಕೆಯಿಂದ ಹಮ್ಮಿಕೊಂಡಿದ್ದ ‘ಅಮೃತಭೋಜನ-ಜ್ಞಾನಸಿಂಚನ’ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಿಹಿ ಭೋಜನ ವಿತರಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಯುತ ಬದುಕಿನ ದಾರಿ ತೋರಿಸುವುದು ದೊಡ್ಡ ಆಸ್ತಿಯಾಗಿದ್ದು, ಹಿರಿಯರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.

ಮುಖ್ಯ ಅತಿಥಿ ಚಂಪಾ ಪಾಟೀಲ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ, ಮಾನವೀಯತೆ, ಸಹಕಾರ ಹಾಗೂ ದೇಶಪ್ರೇಮವನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು. ಸುಮತಿ ಗದಗಿನಮಠ ಅವರು ಶರಣರ ವಚನಗಳನ್ನು ಓದಿ ಅವುಗಳ ತತ್ವದಂತೆ ಬದುಕಬೇಕು ಎಂದರು.

ವೇದಿಕೆಯ ಸಂಚಾಲಕಿ ಕವಿತಾ ದಂಡಿನ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯಿನಿ ಎಂ.ಎ. ಕಂದಗಲ್ಲ ಸ್ವಾಗತಿಸಿದರು. ಎಸ್.ಎಸ್. ಕುಷ್ಟಗಿ ನಿರೂಪಿಸಿದರು. ಎ.ಎಸ್. ಮಸೂತಿ ವಂದಿಸಿದರು.

ಅಕ್ಷತಾ ವಿಲ್ಲಾಯತ್, ಎಂ.ಐ. ಜಮಾಲಸಾಬನವರ, ಬಿ. ಹೂಗಾರ, ಸಾವಿತ್ರಿ ಬಳ್ಳಾರಿ, ಮಹೇಶ ಹಿರೇಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿಭಟನೆ ಸಾಕು… ಮೊದಲು ರೈತರ ಸಾಲ ಮನ್ನಾ ಮಾಡಿಸಿ ತೋರಿಸಿ: ಸೈಯದ್ ಖಾಲಿದ್ ಕೊಪ್ಪಳ ಸವಾಲು

0

ವಿಜಯಸಾಕ್ಷಿ ಸುದ್ದಿ, ಗದಗ: ಬರಗಾಲದ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮೊದಲು ಕೇಂದ್ರ ಸರ್ಕಾರದಿಂದ ರೈತರ ಸಾಲ ಮನ್ನಾ ಮಾಡಿಸಿ, ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಿ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಸವಾಲು ಹಾಕಿದ್ದಾರೆ.

ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೇವಲ ಪ್ರತಿಭಟನೆ ನಡೆಸಿ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ರೈತರಿಗೆ ನಿಜವಾದ ನೆರವು ದೊರೆಯಬೇಕಾದರೆ ಕೇಂದ್ರ ಸರ್ಕಾರದಿಂದ ಅಗತ್ಯ ಅನುದಾನ ಹಾಗೂ ಪರಿಹಾರ ಬಿಡುಗಡೆ ಮಾಡಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರೈತರ ಸಾಲ ಮನ್ನಾ ವಿಚಾರದಲ್ಲಿಯೂ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ರೈತರ ಪರವಾಗಿ ಮಾತನಾಡುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮಟ್ಟದಲ್ಲಿ ರೈತರಿಗೆ ಅಗತ್ಯ ನೆರವು, ಪರಿಹಾರ ಹಾಗೂ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಜನಪರ ಯೋಜನೆಗಳ ಮೂಲಕ ರೈತರು, ಮಹಿಳೆಯರು ಹಾಗೂ ಸಾಮಾನ್ಯ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ರೈತರ ಕಲ್ಯಾಣ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳು ಜನಜೀವನಕ್ಕೆ ಸಹಕಾರಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ಎಚ್.ಕೆ. ಪಾಟೀಲ ಅವರಂತಹ ನಾಯಕರು ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಶಿಕ್ಷಣ ಕ್ಷೇತ್ರದ ಪ್ರಗತಿ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ಅವರು ನಿರಂತರವಾಗಿ ಜನಪರ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೈಯದ್ ಖಾಲಿದ್ ಕೊಪ್ಪಳ ತಿಳಿಸಿದ್ದಾರೆ.

ಬರಗಾಲದ ಹೆಸರಿನಲ್ಲಿ ರಾಜಕೀಯ ಮಾಡುವುದಕ್ಕಿಂತ ರೈತರ ನೆರವಿಗೆ ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ಸಾಲ ಮನ್ನಾ ಮಾಡಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ರೈತರ ಹಿತಾಸಕ್ತಿಯೇ ಎಲ್ಲ ರಾಜಕೀಯಕ್ಕಿಂತ ಮುಖ್ಯ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.