ಕಲಬುರಗಿ: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ವಿರುದ್ಧ ಭೂ ವಂಚನೆ ಆರೋಪ ಕೇಳಿಬಂದಿದ್ದು, ಅಳಿಯನೊಂದಿಗೆ ಸೇರಿ ನಕಲಿ ದಾಖಲೆ ಸೃಷ್ಟಿಸಿ 27 ಎಕರೆ ಜಮೀನು ಕಬಳಿಸಿದ್ದಾರೆ ಎಂದು ಭೂಮಾಲಕಿ ಬಸಮ್ಮ ಕುಟುಂಬ ಆರೋಪಿಸಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿರುವ ಸರ್ವೆ ನಂಬರ್ 242 ಮತ್ತು 245ರ ಜಮೀನಿಗೆ ಸಂಬಂಧಿಸಿದಂತೆ ಶಹಾಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬಸಮ್ಮ ಅವರ ಪುತ್ರ ಎಂಬಂತೆ ಸುಳ್ಳು ದಾಖಲೆ ಸೃಷ್ಟಿಸಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಅಳಿಯ ಶಂಕರಗೌಡ ಅವರ ಹೆಸರಿಗೆ ಮೊದಲಿಗೆ ಜಮೀನು ನೋಂದಣಿ ಮಾಡಿಸಿ, ಬಳಿಕ ಶಿವಶಂಕರಪ್ಪ ಅವರ ಹೆಸರಿಗೆ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಭೂಮಿ ವಂಚನೆಯ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಭೂ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಶಂಕರಪ್ಪ ಅವರ ಪ್ರತಿಕ್ರಿಯೆ ಪಡೆಯಲು ಟಿವಿ9 ಯತ್ನಿಸಿದರೂ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಅವರಿಂದ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಇದರ ಬೆನ್ನಲ್ಲೇ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣವೂ ಶಿವಶಂಕರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ ತಂದಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದ್ದು, ಜಾಮೀನು ಅರ್ಜಿ ವಜಾಗೊಂಡ ಬಳಿಕ ಸಿಐಡಿ ಅಧಿಕಾರಿಗಳು ಮೂರನೇ ನೋಟಿಸ್ ಜಾರಿ ಮಾಡಿದ್ದರು. ಆದರೆ ಶಿವಶಂಕರಪ್ಪ ಸಿಐಡಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬಳಿಕ ಸಿಐಡಿ ಅಧಿಕಾರಿಗಳು ಶಿವಶಂಕರಪ್ಪ ಅವರ ಮನೆ ಮೇಲೆ ದಾಳಿ ನಡೆಸಿದ್ದರು. ಆದರೆ ಈ ವೇಳೆ ಅವರು ಮನೆಯಲ್ಲಿ ಇರಲಿಲ್ಲ ಎಂಬುದು ಅಧಿಕಾರಿಗಳಿಗೆ ತಿಳಿದುಬಂದಿತ್ತು.
ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರು ಕೆಪಿಎಸ್ಸಿ ನೇಮಕಾತಿ ಅಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ನೀಟ್ ಪರೀಕ್ಷೆಯ ಅಕ್ರಮದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಉಲ್ಲೇಖಿಸಿ, ಇಂತಹ ಅಕ್ರಮಗಳಿಂದ ಪರಿಶ್ರಮಪಟ್ಟು ಓದಿದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಏನಾಗಬೇಕು ಎಂದು ಪ್ರಶ್ನಿಸಿದ್ದರು.
ಕೆಪಿಎಸ್ಸಿ ಮೇಲಿನ ಜನರ ವಿಶ್ವಾಸ ನಾಶವಾಗುತ್ತಿದೆ ಮತ್ತು ಇದು ವ್ಯವಸ್ಥಿತ ಫ್ರಾಡ್ ಎಂದು ಹೇಳಿದ್ದ ನ್ಯಾಯಮೂರ್ತಿಗಳು, ಶಿವಶಂಕರಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು.

