Home Blog

ಸುಫಾರಿ ಹೆಸರಿನಲ್ಲಿ ₹40 ಲಕ್ಷ ಬೇಡಿಕೆ: ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ ₹16 ಲಕ್ಷ ವಸೂಲಿ

0

ಮೈಸೂರು: ನಗರದಲ್ಲಿ ಗುತ್ತಿಗೆದಾರನನ್ನು ಗುರಿಯಾಗಿಸಿಕೊಂಡು ನಡೆದ ಸಂಘಟಿತ ಅಪಹರಣ ಪ್ರಕರಣ ಭಾರೀ ಆತಂಕ ಮೂಡಿಸಿದೆ. ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿ ರಾತ್ರಿಯಿಡೀ ಕಾರಿನಲ್ಲಿ ಬಂಧಿಯಾಗಿರಿಸಿ, “ಕೊಲೆ ಸುಫಾರಿ” ಹೆಸರಿನಲ್ಲಿ ₹40 ಲಕ್ಷಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು, ಕೊನೆಗೆ ₹16 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣದ ಬೆನ್ನತ್ತಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಜುಲೈ 15ರಂದು ಮೈಸೂರು ತಾಲೂಕಿನ ಮುದೇಗೌಡನ ದೊಡ್ಡಿ ಗ್ರಾಮದ ಗುತ್ತಿಗೆದಾರ ರಾಮು ತಮ್ಮ ತೋಟದಿಂದ ಮನೆಗೆ ಮರಳುತ್ತಿದ್ದ ವೇಳೆ ನಾಲ್ವರು ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಕಾರಿನೊಳಗೆ ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿ ವಿವಿಧ ಪ್ರದೇಶಗಳಲ್ಲಿ ಸುತ್ತಾಡಿಸಿದ್ದು, ಅವರ ಮೊಬೈಲ್‌ನಿಂದಲೇ ಕುಟುಂಬದವರಿಗೆ ಕರೆ ಮಾಡಿಸಿ ಅನುಮಾನ ಬಾರದಂತೆ ನೋಡಿಕೊಂಡಿದ್ದಾರೆ.

ಅಪಹರಣದ ವೇಳೆ ರಾಮು ಅವರ ಬಳಿಯಿದ್ದ 30 ಗ್ರಾಂ ಚಿನ್ನದ ಸರ, 20 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ₹50 ಸಾವಿರ ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ “ನಿನ್ನ ಹತ್ಯೆಗೆ ₹9 ಲಕ್ಷ ಸುಫಾರಿ ನೀಡಲಾಗಿದೆ. ಬದುಕಬೇಕಾದರೆ ₹40 ಲಕ್ಷ ಕೊಡಬೇಕು” ಎಂದು ಬೆದರಿಸಿ ಹಲ್ಲೆ ನಡೆಸಿದ್ದಾರೆ.

ಹಣ ಇಲ್ಲ ಎಂದು ರಾಮು ಹೇಳಿದ ಬಳಿಕ, ₹16 ಲಕ್ಷ ಇರುವುದಾಗಿ ತಿಳಿಸಿದ್ದು, ಆ ಹಣವನ್ನು ಪತ್ನಿಯಿಂದ ತರಿಸುವಂತೆ ಒತ್ತಾಯಿಸಲಾಗಿದೆ. ರಾಮು ಅವರ ಬಾಮೈದ ಸುರೇಶ್, ನಂದಗುಂದ ಸೇತುವೆ ಬಳಿ ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಗೆ ₹16 ಲಕ್ಷ ಹಸ್ತಾಂತರಿಸಿದ್ದಾರೆ.

ಹಣ ಪಡೆದ ಬಳಿಕ ಆರೋಪಿಗಳು ರಾಮುವನ್ನು ಇನ್ನೂ ಕೆಲಕಾಲ ಕಾರಿನಲ್ಲಿ ಸುತ್ತಾಡಿಸಿ, ಅಜ್ಞಾತ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ವರುಣಾ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಸುಳಿವು ಪತ್ತೆ ಹಚ್ಚಲು ಮೂರು ವಿಶೇಷ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸಿದರೆ ಪೌರತ್ವ ರದ್ದಾಗುವುದಿಲ್ಲ; ಸುಪ್ರೀಂ ಕೋರ್ಟ್ ಸ್ಪಷ್ಟನೆ

0

ನವದೆಹಲಿ: ಮತದಾರರ ಪಟ್ಟಿಯಿಂದ (ವೋಟರ್ ಲಿಸ್ಟ್) ವ್ಯಕ್ತಿಯ ಹೆಸರನ್ನು ಅಳಿಸುವುದರಿಂದ ಆತನ ಅಥವಾ ಆಕೆಯ ಪೌರತ್ವ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ನಿರ್ವಹಿಸುವ ಸಾಂವಿಧಾನಿಕ ಸಂಸ್ಥೆಯಾಗಿದ್ದರೂ, ಯಾವುದೇ ವ್ಯಕ್ತಿಯ ಪೌರತ್ವವನ್ನು ನಿರ್ಧರಿಸುವ ಅಧಿಕಾರ ಅದಕ್ಕಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಮಾಹಿತಿ ಬಹಿರಂಗಪಡಿಸುವಂತೆ ಕೋರಿ ಪಶ್ಚಿಮ ಬಂಗಾಳ ಕಾಂಗ್ರೆಸ್‌ನ ಎಸ್‌ಐಆರ್ ಸಮಿತಿ ಅಧ್ಯಕ್ಷ ಪ್ರಸೇನ್‌ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಸಂಬಂಧ ಚುನಾವಣಾ ಆಯೋಗ, ಪಶ್ಚಿಮ ಬಂಗಾಳ ಸರ್ಕಾರ ಹಾಗೂ ರಾಜ್ಯ ಚುನಾವಣಾ ಸಮಿತಿಗೆ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಅರ್ಜಿದಾರರು, ಎಸ್‌ಐಆರ್ ಪ್ರಕ್ರಿಯೆ ಬಳಿಕ ಸ್ವೀಕರಿಸಲಾದ ಮತ್ತು ತಿರಸ್ಕರಿಸಲಾದ ಫಾರ್ಮ್-6 ಹಾಗೂ ಫಾರ್ಮ್-7 ಅರ್ಜಿಗಳ ಸಂಖ್ಯೆ, ಮೇಲ್ಮನವಿ ನ್ಯಾಯಮಂಡಳಿಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೋರಿದ್ದಾರೆ.

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಬಿಹಾರ ಎಸ್‌ಐಆರ್ ಪ್ರಕರಣದಲ್ಲಿ ನೀಡಿದ್ದ ಹಿಂದಿನ ತೀರ್ಪನ್ನು ಉಲ್ಲೇಖಿಸಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದರಿಂದ ವ್ಯಕ್ತಿಯ ಪೌರತ್ವ ಕಳೆದುಹೋಗುವುದಿಲ್ಲ ಎಂದು ಪುನರುಚ್ಚರಿಸಿತು. ಪೌರತ್ವ ನಿರ್ಧಾರ ಮಾಡುವ ಅಧಿಕಾರ ಪೌರತ್ವ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಚುನಾವಣಾ ಆಯೋಗಕ್ಕೆ ಅಂತಹ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟವರಿಗೆ ಮೇಲ್ಮನವಿ ಸಲ್ಲಿಸಲು ರಚಿಸಲಾಗಿರುವ 18 ನ್ಯಾಯಮಂಡಳಿಗಳ ಕಾರ್ಯವೈಖರಿಯಲ್ಲಿ ವಿಳಂಬ ಮತ್ತು ಅಸಮರ್ಪಕತೆ ಇದೆ ಎಂದು ಆರೋಪಿಸಿದರು. ಸಲ್ಲಿಸಲಾದ ಮೇಲ್ಮನವಿಗಳಲ್ಲಿ ಸುಮಾರು 70 ಶೇಕಡಾ ಪ್ರಕರಣಗಳಲ್ಲಿ ಮತದಾರರ ಹೆಸರನ್ನು ಮರು ಸೇರ್ಪಡೆಗೊಳಿಸಲಾಗಿದ್ದು, ಉಳಿದ 30 ಶೇಕಡಾ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಲ್ಲದೆ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲ್ಪಟ್ಟ ಬಳಿಕ ಕೆಲವರಿಗೆ ಮಹಿಳಾ ಕಲ್ಯಾಣ ಯೋಜನೆಗಳು, ನಗದು ವರ್ಗಾವಣೆ ಯೋಜನೆಗಳು ಹಾಗೂ ಜಾತಿ ಪ್ರಮಾಣಪತ್ರ ಪರಿಶೀಲನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ವಕೀಲರು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ವಿಷಯದ ಬಗ್ಗೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಇದರ ಅರಿವಿದೆ ಎಂದು ತಿಳಿಸಿತು.

ನ್ಯಾಯಾಲಯವು ತನ್ನ ಹಿಂದಿನ ಆದೇಶವನ್ನು ಉಲ್ಲೇಖಿಸಿ, ಯಾವುದೇ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ನಿರ್ಧಾರ ಕೈಗೊಂಡ ಬಳಿಕ, ಪೌರತ್ವ ಕಾಯ್ದೆಯಡಿ ಅಗತ್ಯ ಪರಿಶೀಲನೆಗಾಗಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸುವುದು ಚುನಾವಣಾ ಆಯೋಗದ ಕರ್ತವ್ಯ. ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಂಬಂಧಿತ ವ್ಯಕ್ತಿಯ ಪೌರತ್ವದ ಸ್ಥಾನಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿತು.

ವಿಚಾರಣೆ ವೇಳೆ ಬಾಕಿ ಇರುವ ಮೇಲ್ಮನವಿಗಳ ಸಂಖ್ಯೆಯ ಬಗ್ಗೆಯೂ ಗಮನ ಸೆಳೆದ ವಕೀಲರು, 34 ಲಕ್ಷ ಮೇಲ್ಮನವಿಗಳ ಪೈಕಿ ಕೇವಲ 38 ಸಾವಿರ ಪ್ರಕರಣಗಳಷ್ಟೇ ಇತ್ಯರ್ಥಗೊಂಡಿದ್ದು, ಸುಮಾರು 33.5 ಲಕ್ಷ ಅರ್ಜಿಗಳು ಇನ್ನೂ ಬಾಕಿ ಉಳಿದಿವೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ, ಮೇಲ್ಮನವಿಗಳು ಬಾಕಿ ಇರುವ ಕಾರಣದಿಂದ ಜನರ ನಾಗರಿಕ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳಿಗೆ ಧಕ್ಕೆಯಾಗಬಾರದು ಎಂದು ಮನವಿ ಮಾಡಿದರು.

ಈ ನಡುವೆ, ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಸಲ್ಲಿಕೆಯಾಗಿರುವ ಇತರೆ ಅರ್ಜಿಗಳೊಂದಿಗೆ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 25ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಈಗಾಗಲೇ ತಿಳಿಸಿದೆ.

ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದ ಸೋನಂ ವಾಂಗ್ಚುಕ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ಶಿಫ್ಟ್

0

ನವದೆಹಲಿ: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈಕೋರ್ಟ್ ಆದೇಶ ಹಾಗೂ ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಪೊಲೀಸರು, ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಹೈಕೋರ್ಟ್ ನಿರ್ದೇಶನಗಳು ಮತ್ತು ತಜ್ಞ ವೈದ್ಯರ ಸಲಹೆಯನ್ನು ಅನುಸರಿಸಿ ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಜಂತರ್ ಮಂತರ್ ಪ್ರದೇಶವನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಹೈಕೋರ್ಟ್ ಆದೇಶ ಜಾರಿಗೆ ತರಲು ಪೊಲೀಸರು ಮುಂದಾದ ವೇಳೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಆದರೂ ಪೊಲೀಸರು ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಿ, ವಾಂಗ್ಚುಕ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಪ್ರತಿದಿನ ವೈದ್ಯಕೀಯ ತಪಾಸಣೆ ನಡೆಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಶುಕ್ರವಾರ ಆರೋಗ್ಯ ಪರೀಕ್ಷೆ ನಡೆಸಿದ ವೈದ್ಯರು, ಅವರ ಆರೋಗ್ಯದಲ್ಲಿ ತೀವ್ರ ಹಿನ್ನಡೆ ಕಂಡುಬಂದಿದ್ದು, ಪ್ರಮುಖ ಅಂಗಾಂಗಗಳ ಕಾರ್ಯಕ್ಷಮತೆ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು,

ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಭಾಗದ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆಯ ಚಟುವಟಿಕೆ ಮತ್ತೆ ವೇಗ ಪಡೆದುಕೊಂಡಿದೆ.

ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದಲ್ಲದೆ ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿಯೂ ಕೆಲವೆಡೆ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ನದಿ-ಹಳ್ಳಗಳ ತೀರ ಪ್ರದೇಶದ ನಿವಾಸಿಗಳು, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಮೀನುಗಾರರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಾವು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಈ ಆರೋಗ್ಯ ಸಮಸ್ಯೆ ಇರುವವರು ದಿನಕ್ಕೆ ಎಷ್ಟು ತಿನ್ನಬೇಕು? ತಜ್ಞರ ಸಲಹೆ ಇಲ್ಲಿದೆ

0

ಮಳೆಗಾಲ ಆರಂಭವಾಗಿದ್ದರೂ ಮಾರುಕಟ್ಟೆಯಲ್ಲಿ ಇನ್ನೂ ಮಾವಿನ ಹಣ್ಣಿನ ಸೀಸನ್ ಮುಂದುವರಿದಿದೆ. ರುಚಿ, ಸುವಾಸನೆ ಹಾಗೂ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ವಿಟಮಿನ್ ಎ, ವಿಟಮಿನ್ ಸಿ, ಫೈಬರ್,

ಪೊಟ್ಯಾಸಿಯಂ, ಫೋಲೇಟ್ ಮತ್ತು ಹಲವು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಮಾವು ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಕೆಲವು ಆರೋಗ್ಯ ಸಮಸ್ಯೆ ಇರುವವರು ಇದನ್ನು ಮಿತ ಪ್ರಮಾಣದಲ್ಲಿ ಸೇವಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಯಾರು ಮಾವು ತಿನ್ನುವಾಗ ಎಚ್ಚರಿಕೆ ವಹಿಸಬೇಕು?

ಮಧುಮೇಹ ಇರುವವರು:
ಮಧುಮೇಹ ಇರುವವರು ಮಾವನ್ನು ಸಂಪೂರ್ಣವಾಗಿ ಬಿಡುವ ಅಗತ್ಯವಿಲ್ಲ. ಆದರೆ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ವೇಗವಾಗಿ ಏರಬಹುದು. ಆದ್ದರಿಂದ ವೈದ್ಯರು ಅಥವಾ ಪೌಷ್ಟಿಕ ತಜ್ಞರು ಸೂಚಿಸಿದ ಪ್ರಮಾಣದಲ್ಲಿ ಮಾತ್ರ ಸೇವಿಸುವುದು ಸೂಕ್ತ.

ಪ್ರೀ-ಡಯಾಬಿಟಿಸ್ ಮತ್ತು ಇನ್ಸುಲಿನ್ ರೆಸಿಸ್ಟೆನ್ಸ್ ಇರುವವರು:
ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿ ಸಮಸ್ಯೆ ಇರುವವರು ಅಥವಾ ಮೆಟಾಬಾಲಿಕ್ ಸಿಂಡ್ರೋಮ್‌ನಿಂದ ಬಳಲುತ್ತಿರುವವರು ಮಾವಿನ ಸೇವನೆಯನ್ನು ಮಿತಿಗೊಳಿಸುವುದು ಉತ್ತಮ.

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು:
ಮಾವಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಕ್ಯಾಲೊರಿ ಪ್ರಮಾಣ ಇರುವುದರಿಂದ ಅತಿಯಾಗಿ ಸೇವಿಸಿದರೆ ತೂಕ ಇಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಬಹುದು. ಆದ್ದರಿಂದ ಸಮತೋಲಿತ ಆಹಾರದ ಭಾಗವಾಗಿ ಮಾತ್ರ ಸೇವಿಸಬೇಕು.

ಫ್ಯಾಟಿ ಲಿವರ್ ಇರುವವರು:
ಫ್ಯಾಟಿ ಲಿವರ್ ಸಮಸ್ಯೆ ಇರುವವರು ಮಾವನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು. ಆದರೆ ಆಹಾರದ ಒಟ್ಟು ಕ್ಯಾಲೊರಿ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಸೇವಿಸುವುದು ಅಗತ್ಯ.

ಮಾವು ತಿನ್ನುವ ಸರಿಯಾದ ವಿಧಾನ ಯಾವುದು?

ಆರೋಗ್ಯ ತಜ್ಞರ ಪ್ರಕಾರ, ಮಾವಿನ ಜ್ಯೂಸ್, ಮಿಲ್ಕ್‌ಶೇಕ್ ಅಥವಾ ಹೆಚ್ಚು ಸಕ್ಕರೆ ಸೇರಿಸಿದ ಸಿಹಿ ಪದಾರ್ಥಗಳಿಗಿಂತ ಹಣ್ಣನ್ನೇ ನೇರವಾಗಿ ತಿನ್ನುವುದು ಆರೋಗ್ಯಕರ. ಮೊಸರು ಅಥವಾ ಒಂದು ಮುಷ್ಟಿ ಬಾದಾಮಿ, ಗೋಡಂಬಿ ಅಥವಾ ಇತರ ನಟ್ಸ್ ಜೊತೆಗೆ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ತ್ವರಿತವಾಗಿ ಏರುವ ಸಾಧ್ಯತೆ ಕಡಿಮೆಯಾಗಬಹುದು.

ಮಾವು ತಿನ್ನುವ ಮೊದಲು ಹೀಗೆ ಮಾಡಿ

ಮಾವು ತಿನ್ನುವ ಮೊದಲು ಅದನ್ನು ಚೆನ್ನಾಗಿ ತೊಳೆದು ಸುಮಾರು 20 ರಿಂದ 30 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡುವುದು ಉತ್ತಮ ಎಂದು ಕೆಲವು ತಜ್ಞರು ಸಲಹೆ ನೀಡುತ್ತಾರೆ. ಇದರಿಂದ ಹಣ್ಣಿನ ಮೇಲ್ಮೈಯಲ್ಲಿರುವ ಧೂಳು, ಕಲ್ಮಶಗಳು ಹಾಗೂ ಕೆಲವು ಲ್ಯಾಟೆಕ್ಸ್ ಅಂಶಗಳು ಕಡಿಮೆಯಾಗಬಹುದು. ಆದರೆ ಇದರಿಂದ ಮಾವಿನಲ್ಲಿರುವ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಸಾಕ್ಷ್ಯ ಇಲ್ಲ.

ದಿನಕ್ಕೆ ಎಷ್ಟು ಮಾವು ತಿನ್ನಬಹುದು?

ಸಹಜವಾಗಿ ಹಣ್ಣಾದ ಮಾವನ್ನು ಆಯ್ಕೆ ಮಾಡುವುದು ಉತ್ತಮ. ಸಾಮಾನ್ಯವಾಗಿ ದಿನಕ್ಕೆ ಒಂದು ಮಧ್ಯಮ ಗಾತ್ರದ ಮಾವು ಸೇವಿಸುವುದು ಸಾಕಷ್ಟು ಎಂದು ಪರಿಗಣಿಸಲಾಗುತ್ತದೆ. ಯಾವುದೇ ಆಹಾರವನ್ನು ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಮದ್ದೂರು ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟ: ಓರ್ವ ಸಾವು, ಮತ್ತೋರ್ವ ಗಂಭೀರ

ಮಂಡ್ಯ: ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಏರ್ ಕಂಡೀಷನರ್‌ಗೆ ಗ್ಯಾಸ್ ತುಂಬಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಮೈಸೂರಿನ ಖಾಸಗಿ ಸಂಸ್ಥೆಯ ನೌಕರ ಮಹಮದ್ ಸಾದಿಕ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮಹಮದ್ ಸಲ್ಮಾನ್ ಎಂದು ತಿಳಿದುಬಂದಿದೆ.

ಕಾರ್ಖಾನೆಯ ಸಕ್ಕರೆ ಉತ್ಪಾದನಾ ವಿಭಾಗದ ಕಂಟ್ರೋಲ್ ರೂಂ ಬಳಿ ಎಸಿಗೆ ಗ್ಯಾಸ್ ತುಂಬಿಸುವ ಕೆಲಸದಲ್ಲಿ ಇಬ್ಬರು ನೌಕರರು ತೊಡಗಿದ್ದರು. ಈ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟದ ತೀವ್ರತೆಗೆ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಖಾನೆ ಸಿಬ್ಬಂದಿ ಇಬ್ಬರನ್ನೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ ಮಾರ್ಗಮಧ್ಯದಲ್ಲೇ ಮಹಮದ್ ಸಾದಿಕ್ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಮಹಮದ್ ಸಲ್ಮಾನ್ ಅವರಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Eye Health Tips: ಅಗಸೆ ಬೀಜ vs ಕುಂಬಳಕಾಯಿ ಬೀಜ! ಕಣ್ಣಿನ ಆರೋಗ್ಯಕ್ಕೆ ಯಾವುದು ಬೆಸ್ಟ್?

0

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಕಣ್ಣಿನ ದೃಷ್ಟಿ ಮಸುಕಾಗುವುದು, ಕಣ್ಣಿನ ಆಯಾಸ, ಡ್ರೈ ಐ, ಮೊಬೈಲ್ ಹಾಗೂ ಕಂಪ್ಯೂಟರ್ ಬಳಕೆಯಿಂದ ಉಂಟಾಗುವ ಡಿಜಿಟಲ್ ಐ ಸ್ಟ್ರೇನ್ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಹಲವರು ನೈಸರ್ಗಿಕ ಆಹಾರಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಅಗಸೆ ಬೀಜ (Flax Seeds) ಮತ್ತು ಕುಂಬಳಕಾಯಿ ಬೀಜ ಕಣ್ಣಿನ ದೃಷ್ಟಿಗೆ ಸಹಾಯ ಮಾಡುತ್ತವೆ ಎಂಬ ಮಾತುಗಳು ಕೇಳಿಬರುತ್ತವೆ. ಹಾಗಾದರೆ ಇವೆರಡರಲ್ಲಿ ಯಾವುದು ಹೆಚ್ಚು ಉಪಯುಕ್ತ? ಇಲ್ಲಿದೆ ಮಾಹಿತಿ.

ಕಣ್ಣಿನ ಆರೋಗ್ಯಕ್ಕೆ ಅಗಸೆ ಬೀಜದ ಪ್ರಯೋಜನಗಳು:

ಅಗಸೆ ಬೀಜಗಳಲ್ಲಿ ಒಮೆಗಾ-3 ಫ್ಯಾಟಿ ಆಸಿಡ್, ಫೈಬರ್, ವಿಟಮಿನ್ ಇ ಹಾಗೂ ಲಿಗ್ನಾನ್ಸ್ ಸಮೃದ್ಧವಾಗಿವೆ.

ಇವು ಕಣ್ಣಿನ ರೆಟಿನಾದ ಆರೋಗ್ಯ ಕಾಪಾಡಲು ಸಹಾಯ ಮಾಡಬಹುದು. ಅಲ್ಲದೆ, ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣಿನ ಉರಿಯೂತ ಕಡಿಮೆ ಮಾಡಿ, ಕಣ್ಣೀರಿನ ಗುಣಮಟ್ಟ ಸುಧಾರಿಸಲು ನೆರವಾಗಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.

ಆದರೆ ಅಗಸೆ ಬೀಜ ಸೇವನೆಯಿಂದ ಕನ್ನಡಕದ ಸಂಖ್ಯೆ ಕಡಿಮೆಯಾಗುತ್ತದೆ ಅಥವಾ ಕನ್ನಡಕದ ಅಗತ್ಯವೇ ಇರುವುದಿಲ್ಲ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ.

ಕುಂಬಳಕಾಯಿ ಬೀಜಗಳ ಪ್ರಯೋಜನಗಳು:

ಕುಂಬಳಕಾಯಿ ಬೀಜಗಳಲ್ಲಿ ಜಿಂಕ್, ಮೆಗ್ನೀಷಿಯಂ, ವಿಟಮಿನ್ ಇ ಹಾಗೂ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಿನ ಪ್ರಮಾಣದಲ್ಲಿವೆ.

ಕಣ್ಣಿನ ರೆಟಿನಾ ಸರಿಯಾಗಿ ಕಾರ್ಯನಿರ್ವಹಿಸಲು ಜಿಂಕ್ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ವಯಸ್ಸಾದಂತೆ ಉಂಟಾಗುವ ಕೆಲವು ದೃಷ್ಟಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಲು ಸಹ ಸಹಕಾರಿಯಾಗಬಹುದು.

ಕುಂಬಳಕಾಯಿ ಬೀಜಗಳನ್ನು ಹುರಿದು ಅಥವಾ ಸಲಾಡ್, ಮೊಸರು, ಸ್ಮೂಥಿ ಹಾಗೂ ಓಟ್ಸ್ ಜೊತೆ ಸೇರಿಸಿ ಸೇವಿಸಬಹುದು.

ಕಣ್ಣಿನ ದೃಷ್ಟಿಗೆ ಸಹಾಯ ಮಾಡುವ ಇತರ ಆಹಾರಗಳು:

ಕೇವಲ ಬೀಜಗಳಷ್ಟೇ ಅಲ್ಲ, ಈ ಆಹಾರಗಳು ಕೂಡ ಕಣ್ಣಿನ ಆರೋಗ್ಯಕ್ಕೆ ಉತ್ತಮ:

  • ಕ್ಯಾರೆಟ್: ಬೀಟಾ ಕ್ಯಾರೋಟಿನ್ ಸಮೃದ್ಧ
  • ಪಾಲಕ್, ಮೆಂತೆ ಹಾಗೂ ಹಸಿರು ಸೊಪ್ಪುಗಳು: ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ಹೊಂದಿವೆ
  • ಮೊಟ್ಟೆ: ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ
  • ಮೀನು (ಸ್ಯಾಲ್ಮನ್, ಸಾರ್ಡಿನ್): ಒಮೆಗಾ-3 ಮೂಲ
  • ಕಿತ್ತಳೆ, ನಿಂಬೆ: ವಿಟಮಿನ್ ಸಿ
  • ಬಾದಾಮಿ, ವಾಲ್ನಟ್
  • ಸಿಹಿ ಗೆಣಸು
  • ದೃಷ್ಟಿ ಮಸುಕಾಗಲು ಪ್ರಮುಖ ಕಾರಣಗಳು

ಕಣ್ಣಿನ ದೃಷ್ಟಿ ಕಡಿಮೆಯಾಗಲು ಹಲವು ಕಾರಣಗಳಿರಬಹುದು.

  • ಸಮೀಪದೃಷ್ಟಿ ಅಥವಾ ದೂರದೃಷ್ಟಿ
  • ಡ್ರೈ ಐ ಸಿಂಡ್ರೋಮ್
  • ಮಧುಮೇಹದಿಂದ ಉಂಟಾಗುವ ಕಣ್ಣಿನ ಸಮಸ್ಯೆಗಳು
  • ಕ್ಯಾಟರಾಕ್ಟ್ (ಕಣ್ಣಿನ ಪೊರೆ)
  • ಗ್ಲೂಕೋಮಾ
  • ಹೆಚ್ಚು ಸಮಯ ಮೊಬೈಲ್ ಅಥವಾ ಕಂಪ್ಯೂಟರ್ ಬಳಕೆ

ದೃಷ್ಟಿ ಹಠಾತ್ ಮಸುಕಾಗುವುದು, ಕಣ್ಣಿನಲ್ಲಿ ನೋವು, ಕೆಂಪಾಗುವಿಕೆ ಅಥವಾ ಬೆಳಕನ್ನು ಸಹಿಸಲಾಗದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ನೇತ್ರ ತಜ್ಞರನ್ನು ಸಂಪರ್ಕಿಸಬೇಕು.

ಕಣ್ಣಿನ ಆರೋಗ್ಯ ಕಾಪಾಡಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ:

  • ಪ್ರತಿ 20 ನಿಮಿಷಕ್ಕೊಮ್ಮೆ 20-20-20 ನಿಯಮ ಪಾಲಿಸಿ.
  • ದಿನಕ್ಕೆ ಕನಿಷ್ಠ 7–8 ಗಂಟೆ ನಿದ್ರೆ ಮಾಡಿ.
  • ಸಾಕಷ್ಟು ನೀರು ಕುಡಿಯಿರಿ.
  • ಸೂರ್ಯನ ತೀವ್ರ ಬೆಳಕಿನಲ್ಲಿ UV ರಕ್ಷಣೆ ಇರುವ ಕನ್ನಡಕ ಧರಿಸಿ.
  • ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ.

ಆರೋಗ್ಯಕರ ಆಹಾರ ಸೇವನೆ ಕಣ್ಣಿನ ಆರೋಗ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ. ಆದರೆ ಅಗಸೆ ಬೀಜ ಅಥವಾ ಕುಂಬಳಕಾಯಿ ಬೀಜ ತಿಂದರೆ ಕನ್ನಡಕದ ಅಗತ್ಯವೇ ಇರುವುದಿಲ್ಲ ಎಂಬುದಕ್ಕೆ ವೈಜ್ಞಾನಿಕ ಆಧಾರವಿಲ್ಲ. ಉತ್ತಮ ದೃಷ್ಟಿಗಾಗಿ ಪೌಷ್ಟಿಕ ಆಹಾರ, ನಿಯಮಿತ ಕಣ್ಣಿನ ಪರೀಕ್ಷೆ ಹಾಗೂ ಆರೋಗ್ಯಕರ ಜೀವನಶೈಲಿ ಮುಖ್ಯವಾಗಿದೆ.

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ; ಬಸ್‌ನಲ್ಲಿ ತೆರಳಿ ವ್ಯವಸ್ಥೆ ಪರಿಶೀಲಿಸಿದ ಯತೀಂದ್ರ ಸಿದ್ದರಾಮಯ್ಯ!

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮನೆ ಮಾಡಿತ್ತು.

ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಆಗಮಿಸಿದ್ದು, ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಭಕ್ತರ ಹೆಚ್ಚಿನ ಸಂಖ್ಯೆಯ ಆಗಮನದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನೂಕುನುಗ್ಗಲು ಉಂಟಾಗದಂತೆ ಪೊಲೀಸರು ಹಾಗೂ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು. ಭಕ್ತರಿಗೆ ಸುಗಮ ದರ್ಶನ ಹಾಗೂ ಸಂಚಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿತ್ತು.

ಈ ನಡುವೆ ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಭಕ್ತರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳು ಹಾಗೂ ಸಂಚಾರ ವ್ಯವಸ್ಥೆಯನ್ನು ಪರಿಶೀಲಿಸಿದರು.

ವಿಶೇಷವೆಂದರೆ, ಸಚಿವರು ತಮ್ಮ ಸ್ವಂತ ವಾಹನ ಬಳಸದೇ ಸಾರ್ವಜನಿಕರೊಂದಿಗೆ ಸರ್ಕಾರಿ ಬಸ್‌ನಲ್ಲಿ ಚಾಮುಂಡಿ ಬೆಟ್ಟಕ್ಕೆ ಪ್ರಯಾಣಿಸಿದರು. ಪ್ರಯಾಣದ ವೇಳೆ ಭಕ್ತರೊಂದಿಗೆ ಸಂವಾದ ನಡೆಸಿದ ಅವರು, ಬಸ್ ಸೇವೆ, ಸಂಚಾರ ವ್ಯವಸ್ಥೆ ಹಾಗೂ ಬೆಟ್ಟದಲ್ಲಿ ಕಲ್ಪಿಸಲಾಗಿರುವ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಭಕ್ತರು ಸಾರಿಗೆ ಇಲಾಖೆಯ ವಿಶೇಷ ಬಸ್ ಸೇವೆಗಳನ್ನು ಬಳಸುವಂತೆ ಮನವಿ ಮಾಡಲಾಗಿತ್ತು.

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಶೌಚಾಲಯ, ಸಾರಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಪೊಲೀಸರು ಭದ್ರತೆ ಹಾಗೂ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದರು. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಭಕ್ತರಿಂದ ಕಿಕ್ಕಿರಿದು ತುಂಬಿತ್ತು.

ನರೇಗಲ್ಲದಲ್ಲಿ ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾಧಿಕಾರಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮುಂಗಾರು ಮಳೆಯ ಕೊರತೆಯಿಂದ ನರೇಗಲ್ಲ ಹೋಬಳಿಯಲ್ಲಿ ಉಂಟಾಗಿರುವ ಬೆಳೆ ಹಾನಿಯನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಗುರುವಾರ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗದಗ ರಸ್ತೆಯಲ್ಲಿರುವ ವಿವಿಧ ರೈತರ ಜಮೀನುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳಿಗೆ ರೈತ ಮುಖಂಡರು ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ತೋರಿಸಿದರು. ಮಳೆ ಕೊರತೆಯಿಂದ ಹೆಸರು, ಉದ್ದು, ಮೆಕ್ಕೆಜೋಳ, ತೊಗರಿ, ಉಳ್ಳಾಗಡ್ಡಿ, ಶೇಂಗಾ ಹಾಗೂ ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದ್ದು, ಕೆಲವೆಡೆ ಗೋವಿನಜೋಳದ ಬೆಳೆ ಸಂಪೂರ್ಣ ಒಣಗುತ್ತಿರುವ ದೃಶ್ಯವನ್ನು ಅಧಿಕಾರಿಗಳ ತಂಡ ಕಣ್ಣಾರೆ ವೀಕ್ಷಿಸಿತು.

ರೈತರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿಗಳು ಮಳೆಯ ಅಭಾವದಿಂದ ಎದುರಾಗಿರುವ ಸಂಕಷ್ಟಗಳ ಕುರಿತು ಮಾಹಿತಿ ಪಡೆದು, ಇಲ್ಲಿನ ಬೆಳೆ ಹಾನಿಯ ವಾಸ್ತವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಬೆಳೆ ವಿಮೆ ಕುರಿತು ಮಾತನಾಡಿದ ಅವರು, ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಪಡೆದಿರುವ ರೈತರಿಗೆ ಹೆಸರು ಮತ್ತು ಉದ್ದು ಬೆಳೆಗಳಿಗೆ ಮಾತ್ರ ಜುಲೈ 22ರವರೆಗೆ ಬೆಳೆ ವಿಮೆ ನೋಂದಣಿಗೆ ಅವಕಾಶ ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಸಾಲ ನವೀಕರಣ ಸೇರಿದಂತೆ ತಾಂತ್ರಿಕ ಕಾರಣಗಳಿಂದ ವಿಮೆ ನೋಂದಣಿ ಮಾಡಿಸದ ರೈತರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಈ ವೇಳೆ ರೈತರು ಬ್ಯಾಂಕ್‌ಗಳಲ್ಲಿ ಸಾಲ ನವೀಕರಣ ವಿಳಂಬವಾಗುತ್ತಿರುವುದು ಹಾಗೂ 2025ರ ಮುಂಗಾರು ಹಂಗಾಮಿನ ಗೋವಿನಜೋಳ ಬೆಳೆ ವಿಮೆ ಪರಿಹಾರ ಇನ್ನೂ ಬಿಡುಗಡೆಯಾಗಿಲ್ಲ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹಾಗೂ ಬಾಕಿ ಇರುವ ವಿಮೆ ಪರಿಹಾರವನ್ನು ಶೀಘ್ರ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಮಳೆ ಅಭಾವದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಂಡು ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹಿಸಿದರು. ರೈತರ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದರು.

ಕುತೂಹಲಕಾರಿ ಸಂಗತಿಯೆಂದರೆ, ಅಧಿಕಾರಿಗಳ ತಂಡ ಬೆಳೆ ಹಾನಿ ಪರಿಶೀಲನೆ ನಡೆಸುತ್ತಿದ್ದ ವೇಳೆಯೇ ಮಳೆ ಸುರಿಯತೊಡಗಿದ್ದು, ಪರಿಶೀಲನಾ ಕಾರ್ಯ ಕೆಲಕಾಲ ಸ್ಥಗಿತಗೊಳ್ಳುವಂತಾಯಿತು.

ಪರಿಶೀಲನೆ ವೇಳೆ ಉಪ ವಿಭಾಗಾಧಿಕಾರಿಗಳು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ರೋಣ ಉಪ ಕೃಷಿ ನಿರ್ದೇಶಕರು, ರೋಣ ಸಹಾಯಕ ಕೃಷಿ ನಿರ್ದೇಶಕರು, ನರೇಗಲ್ಲ ಕೃಷಿ ಅಧಿಕಾರಿಗಳು, ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಅಶೋಕ ಬೇವಿನಕಟ್ಟಿ, ಚಂದ್ರು ಹೊನವಾಡ, ಶರಣಪ್ಪ ಧರ್ಮಾಯತ್, ಯಲ್ಲಪ್ಪ ಮಣ್ಣವಡ್ಡರ, ಬಸನಗೌಡ ಪಾಟೀಲ, ಮಲ್ಲನಗೌಡ ಪಾಟೀಲ, ಶರಣಪ್ಪ ಶೀಕಣಿ, ಆನಂದ ಕೊಟಗಿ, ಸಂಗಯ್ಯ ಶಾಂತಯ್ಯನಮಠ, ಶಶಿಧರ ಸಂಕನಗೌಡರ, ನಿಂಗನಗೌಡ ಲಕ್ಕನಗೌಡ್ರ, ಮಹೇಶ ಶಿವಶಿಂಪ್ರ, ನಿಂಗಪ್ಪ ಕಣವಿ ಹಾಗೂ ಬಸನಗೌಡ ಪೊಲೀಸ್ ಪಾಟೀಲ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.

ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಸಂಸದ ಬಸವರಾಜ ಬೊಮ್ಮಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಗರದ ಹಿರೇಹಂದಿಗೋಳ ರಸ್ತೆಯ ಗಂಗಿಮಡಿ ಪ್ರದೇಶದಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ನಿರೀಕ್ಷೆಯಿಂದ ಬಿತ್ತನೆ ಮಾಡಿದ್ದರು. ಆದರೆ ಜುಲೈ ತಿಂಗಳಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿದ್ದು, ಹಲವೆಡೆ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡಿದ ಬೆಳೆಗಳೂ ಹಾನಿಗೊಳಗಾಗಿದ್ದು, ವಿಶೇಷವಾಗಿ ಹೆಸರು ಬೆಳೆ ಸಂಪೂರ್ಣ ನಷ್ಟವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಬರದ ತೀವ್ರತೆ ಬೇರೆಬೇರೆಯಾಗಿದ್ದರೂ ಸರ್ಕಾರ ಇದುವರೆಗೆ ವೈಜ್ಞಾನಿಕ ಬೆಳೆ ಸಮೀಕ್ಷೆ ನಡೆಸಿಲ್ಲ. ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಸಾಂಖ್ಯಿಕ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದಾಗ ಮಾತ್ರ ಅದು ಅಧಿಕೃತವಾಗುತ್ತದೆ. ಎನ್‌ಡಿಆರ್‌ಎಫ್ ನಿಯಮಾವಳಿಗಳ ಪ್ರಕಾರ ಅಗತ್ಯ ಎಸ್‌ಒಪಿ ಸಿದ್ಧಪಡಿಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಬರ ನಿರ್ವಹಣೆಗೆ ಯಾವುದೇ ತುರ್ತು ಯೋಜನೆ ರೂಪಿಸಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪರ್ಯಾಯ ವ್ಯವಸ್ಥೆಯೂ ಇಲ್ಲ. ಪಶ್ಚಿಮ ಘಟ್ಟದಲ್ಲಿ ಮಳೆಯಾಗಿ ನದಿಗಳಲ್ಲಿ ನೀರು ಹರಿಯುತ್ತಿದ್ದರೂ, ಅದನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಿಲ್ಲ. ರಾಜ್ಯದ ಸುಮಾರು 145 ಏತ ನೀರಾವರಿ ಯೋಜನೆಗಳು ದುರಸ್ತಿ ಹಾಗೂ ವಿದ್ಯುತ್ ಬಿಲ್ ಪಾವತಿಸದ ಕಾರಣ ಸ್ಥಗಿತಗೊಂಡಿವೆ ಎಂದು ದೂರಿದರು.

ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹15 ರಿಂದ ₹20 ಕೋಟಿ ಹಣ ಲಭ್ಯವಿದ್ದು, ಅದನ್ನು ಬರ ಪರಿಹಾರ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಬಳಸಬೇಕು. ಹಣದ ಕೊರತೆಯ ನೆಪ ಹೇಳುವುದನ್ನು ಸರ್ಕಾರ ಬಿಡಬೇಕು ಎಂದ ಅವರು, ಕೇಂದ್ರ ಸರ್ಕಾರದ ರೈತರ ಮೊಬೈಲ್ ಆ್ಯಪ್ ಕುರಿತು ಜಾಗೃತಿ ಮೂಡಿಸಿ, ಬೆಳೆ ಮಾಹಿತಿ ಸಂಗ್ರಹಿಸುವ ಕೆಲಸವನ್ನೂ ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎನ್‌ಡಿಆರ್‌ಎಫ್ ಮಾನದಂಡಕ್ಕಿಂತ ಎರಡು ಪಟ್ಟು ಹೆಚ್ಚಿನ ಪರಿಹಾರ ನೀಡಲಾಗಿತ್ತು. ಒಣ ಬೇಸಾಯಕ್ಕೆ ₹13,600, ನೀರಾವರಿ ಬೆಳೆಗೆ ₹25,000 ಹಾಗೂ ತೋಟಗಾರಿಕೆ ಬೆಳೆಗಳಿಗೆ ₹28,000ವರೆಗೆ ಪರಿಹಾರ ನೀಡಿದ್ದೇವೆ. ಆದರೆ ಈಗಿನ ಸರ್ಕಾರ ರೈತರ ಸಂಕಷ್ಟ ಮರೆತು ರಾಜಕೀಯದಲ್ಲೇ ನಿರತವಾಗಿದೆ ಎಂದು ಟೀಕಿಸಿದರು.

ಇನ್ನೊಂದು ವಾರದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದಗ ಜಿಲ್ಲೆಯಾದ್ಯಂತ ಸ್ವತಂತ್ರವಾಗಿ ಬೆಳೆ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರೈತರ ಪರವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

“ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಬಿಜೆಪಿ ರೈತ ಮೋರ್ಚಾ ಉಗ್ರ ಹೋರಾಟ ನಡೆಸಲಿದೆ.”

– ಬಸವರಾಜ ಬೊಮ್ಮಾಯಿ