Home Blog

ಕೋಲಾರ| ಬೈಕ್ ವ್ಹೀಲಿಂಗ್‌ ಮಾಡುತ್ತಿದ್ದ ನಾಲ್ಕು ಯುವಕರು ಅರೆಸ್ಟ್

0

ಕೋಲಾರ: ಮಾಲೂರು ಪೊಲೀಸರು ಲಕ್ಕೂರು ಗ್ರಾಮದ ಬಳಿ ಬೈಕ್ ವ್ಹೀಲಿಂಗ್‌ ಮಾಡುತ್ತಿದ್ದ ನಾಲ್ಕು ಯುವಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಮತ್ತು ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಅಕ್ರಮವಾಗಿ ಬೈಕ್ ವ್ಹೀಲಿಂಗ್‌ ಮಾಡುತ್ತಿದ್ದುದರಿಂದ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ, ಆರೋಪಿಗಳ ಬೈಕ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಚುನಾವಣೆಗೂ ಮುನ್ನ ಉಚಿತ ಘೋಷಣೆಗಳ ಪರಿಶೀಲನೆಗೆ ಸಿದ್ಧ: ಸುಪ್ರೀಂ ಕೋರ್ಟ್

0

ನವದೆಹಲಿ: ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ನೀಡುವ ಉಚಿತ ಕೊಡುಗೆಗಳ ಕುರಿತು ಸೂಕ್ಷ್ಮ ಪರಿಶೀಲನೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಬಿಜೆಪಿ ನಾಯಕ ಹಾಗೂ ಅರ್ಜಿದಾರ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಂದಿನ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಅಶ್ವಿನಿ ಉಪಾಧ್ಯಾಯ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ,

ಈ ವಿಚಾರವು ಅತ್ಯಂತ ಮಹತ್ವದ ಸಾರ್ವಜನಿಕ ಪ್ರಾಮುಖ್ಯತೆ ಹೊಂದಿದ್ದು, ಮೂವರು ನ್ಯಾಯಾಧೀಶರ ಪೀಠದಿಂದ ವಿಚಾರಣೆ ನಡೆಸಬೇಕು ಎಂದು ಹೇಳಿದೆ. ಈ ವಿಷಯ ಗಂಭೀರ ಕಳವಳಗಳನ್ನು ಹುಟ್ಟುಹಾಕುತ್ತದೆ ಎಂದು ಅಭಿಪ್ರಾಯಪಟ್ಟ ಸಿಜೆಐ, ಮಾರ್ಚ್ ವರೆಗೆ ಕಾಯುವಂತೆ ಸೂಚಿಸಿದರು.

ಅರ್ಜಿಯಲ್ಲಿ ಏನು ಹೇಳಲಾಗಿದೆ?

ಅರ್ಜಿಯಲ್ಲಿ, ರಾಜಕೀಯ ಪಕ್ಷಗಳು ಚುನಾವಣಾ ಪ್ರಣಾಳಿಕೆಗಳಲ್ಲಿ ನೀಡುವ ಉಚಿತ ಘೋಷಣೆಗಳು ಚುನಾವಣಾ ದುಷ್ಕೃತ್ಯಕ್ಕೆ ಸಮಾನವಾಗಿವೆ ಎಂದು ಆರೋಪಿಸಲಾಗಿದೆ. ಮುಂದೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಈ ಉಚಿತ ಭರವಸೆಗಳು ಭ್ರಷ್ಟ ಪದ್ಧತಿಗಳಿಗೆ ದಾರಿ ಮಾಡಿಕೊಡುತ್ತಿವೆ ಎಂದು ಅರ್ಜಿದಾರರು ಹೇಳಿದ್ದಾರೆ.

ಉಚಿತ ಕೊಡುಗೆಗಳು ರಾಜ್ಯದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಪಕ್ಷಗಳು “ಸೂರ್ಯ-ಚಂದ್ರರನ್ನು ಬಿಟ್ಟು ಉಳಿದೆಲ್ಲವನ್ನೂ ಕೊಡುತ್ತೇವೆ” ಎಂಬ ರೀತಿಯಲ್ಲಿ ಜನರನ್ನು ಮರುಳು ಮಾಡುತ್ತಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಮಾರಕವಾಗಿದ್ದು, ಸಂವಿಧಾನಾತ್ಮಕ ತತ್ವಗಳಿಗೆ ಧಕ್ಕೆಯಾಗುತ್ತದೆ ಎಂದು ವಾದಿಸಲಾಗಿದೆ.

ಆದ್ದರಿಂದ, ಚುನಾವಣಾ ಪ್ರಣಾಳಿಕೆಗಳಲ್ಲಿ ನೀಡುವ ಭರವಸೆಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಮುಂದಿನ ದಿನಗಳಲ್ಲಿ ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಈ ಅರ್ಜಿಯ ವಿಚಾರಣೆ ರಾಜಕೀಯವಾಗಿ ಮಹತ್ವ ಪಡೆದಿದೆ.

ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ; 13 ಜನ ಸಾವು, 34 ಮಂದಿಯ ಸ್ಥಿತಿ ಗಂಭೀರ

0

ಕಠ್ಮಂಡು: ಮದುವೆಯ ಸಂಭ್ರಮ ಕ್ಷಣಾರ್ಧದಲ್ಲೇ ಮಹಾವಿಪತ್ತಾಗಿ ಮಾರ್ಪಟ್ಟ ಘಟನೆ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ನಡೆದಿದೆ. ಉತ್ತರಾಖಂಡ ಗಡಿಗೆ ಸಮೀಪದ ಈ ಪ್ರದೇಶದಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಪರ್ವತ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಈ ದುರ್ಘಟನೆಯಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದು, 34 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ, ಪಶ್ಚಿಮ ನೇಪಾಳದ ಸುದುರ್ಪಾಶ್ಚಿಮ್ ಪ್ರದೇಶದ ಪುರ್ಚೌರಿ ಪುರಸಭೆಯ ಬದ್ಗಾಂವ್ ಬಳಿ ಈ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಮದುವೆ ದಿಬ್ಬಣದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು ಎನ್ನಲಾಗಿದೆ. ಅಪಘಾತದ ತೀವ್ರತೆಗೆ 8 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಬೈತಾಡಿ ಮತ್ತು ದಾದೇಲ್ಧುರಾ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಜನರು, ನೇಪಾಳ ಪೊಲೀಸ್ ಹಾಗೂ ಸಶಸ್ತ್ರ ಪೊಲೀಸ್ ಪಡೆ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದರು. ದುರ್ಗಮ ಪರ್ವತ ಪ್ರದೇಶ ಮತ್ತು ಆಳವಾದ ಕಂದಕ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದ್ದರೂ, ರಾತ್ರಿಯಿಡೀ ಕಾರ್ಯಾಚರಣೆ ಮುಂದುವರಿಸಲಾಯಿತು.

ಪ್ರಾಥಮಿಕ ವರದಿಗಳ ಪ್ರಕಾರ, ಭಾರ ಹೊತ್ತಿದ್ದ ಬಸ್ ಏರುಗಾಡು ರಸ್ತೆಯಲ್ಲಿ ಸಾಗುವ ವೇಳೆ ತಾಂತ್ರಿಕ ದೋಷದಿಂದ, ವಿಶೇಷವಾಗಿ ಪ್ರೆಶರ್ ಪೈಪ್ ಒಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಬಗ್ಗೆ ನೇಪಾಳ ಅಧಿಕಾರಿಗಳು ವಿವರವಾದ ತನಿಖೆ ಕೈಗೊಂಡಿದ್ದಾರೆ.

ಕಾಂಗ್ರೆಸ್ ಎಂದರೆ ಕರಪ್ಶನ್, ಕಮಿಷನ್, ಕನ್ನಿಂಗ್- ಕಮ್ಯುನಲ್: ಛಲವಾದಿ ನಾರಾಯಣಸ್ವಾಮಿ ಆರೋಪ

0

ದೊಡ್ಡಬಳ್ಳಾಪುರ: ಈ ಬಾರಿ ಕೇಂದ್ರ ಬಜೆಟ್‍ನಲ್ಲಿ 3 ಸಿಗಳಿವೆ. ಒಂದನೆಯದು ಕಂಟಿನ್ಯೂಯಿಟಿ, ಕಳೆದ ಬಜೆಟ್‍ನ ಮುಂದುವರಿಕೆ ಇದರಲ್ಲಿದೆ. ಯಾವ ಬೆಲೆಯೂ ಹೆಚ್ಚಾಗಿಲ್ಲ; ತೆರಿಗೆಯೂ ಹೆಚ್ಚು ಕಡಿಮೆ ಆಗಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.

ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ ಬಾರಿ 12 ಲಕ್ಷಕ್ಕೆ ತೆರಿಗೆ ವಿನಾಯಿತಿ ನೀಡಿದ್ದರು. ಅದರಲ್ಲಿ ವ್ಯತ್ಯಾಸ ಮಾಡಿಲ್ಲ; ಜನರಿಗೆ ಸೌಲಭ್ಯ ಕೊಡಲು ಒತ್ತು ಕೊಟ್ಟಿದ್ದಾರೆ. 2ನೇ ಸಿ; ಕ್ರೆಡಿಬಿಲಿಟಿ. ಆ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿದ್ದೇವೆ. 3ನೇ ಸಿ- ಕಮಿಟ್‍ಮೆಂಟ್. ನಾವು ನುಡಿದಂತೆ ನಡೆದಿದ್ದೇವೆ ಎಂದು ಸುಳ್ಳು ಹೇಳಿಲ್ಲ. ನಾವು ಬದ್ಧತೆಯನ್ನು ಪ್ರದರ್ಶಿಸಿದ್ದೇವೆ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್ ಪಕ್ಷದ 3 ಸಿ. ಅಂದರೆ, ಕರಪ್ಶನ್ ಅಂದರೆ ಭ್ರಷ್ಟಾಚಾರ. ಅವರು ಭ್ರಷ್ಟಾಚಾರದಲ್ಲಿ ನಿಪುಣರು. ಮೋದಿಯವರ ಸರಕಾರ 12 ವರ್ಷ ಪೂರೈಸುತ್ತಿದ್ದು, ಈ 12 ವರ್ಷಗಳಲ್ಲಿ ಭ್ರಷ್ಟಾಚಾರದ ಆರೋಪಗಳಿಲ್ಲ. ಕಾಂಗ್ರೆಸ್ಸೆಂದರೆ ಕಮಿಷನ್; ಟೆಂಡರ್ ಹಾಕು ಕಮಿಷನ್ ಹೊಡಿ ಎಂಬ ನೀತಿ. ಅದಾದ ಮೇಲೆ ಕನ್ನಿಂಗ್, ಕಮ್ಯುನಲ್, ಕಾಸ್ಟಿಸಂ, ಓಲೈಕೆಗಳು ಎಂದು ಆಕ್ಷೇಪಿಸಿದರು.

ಈ ಸಾರಿಯ ಕೇಂದ್ರ ಬಜೆಟ್‍ನಲ್ಲಿ ಇಲ್ಲಿ ಯಾರನ್ನೂ ಓಲೈಕೆ ಮಾಡುವ ಕೆಲಸವನ್ನು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಾಡಿಲ್ಲ. ಅದು ಬಿಜೆಪಿಯ ನೀತಿ ಎಂದು ತಿಳಿಸಿದರು. ಕಾಂಗ್ರೆಸ್ ಬಜೆಟ್ ಇದಾಗಿದ್ದರೆ ತಾರತಮ್ಯ ಮತ್ತು ಓಲೈಕೆಗಳನ್ನು ಬಹಳಷ್ಟು ಕಾಣಬಹುದಾಗಿತ್ತು ಎಂದು ಟೀಕಿಸಿದರು.

ಬಿಗ್​​ಬಾಸ್ ವಿನ್ನರ್​ ಗಿಲ್ಲಿಗೆ ವಿರುದ್ಧ ಮತ್ತೊಂದು ದೂರು ದಾಖಲು

ಬಿಗ್‌ಬಾಸ್ ಕನ್ನಡ ಸೀಸನ್ 12 ವಿಜೇತರಾಗಿ ಹೊರಹೊಮ್ಮಿದ ಬಳಿಕ ಗಿಲ್ಲಿ ನಟ ಕರ್ನಾಟಕದ ಅತ್ಯಂತ ಜನಪ್ರಿಯ ಸೆಲೆಬ್ರಿಟಿಗಳ ಸಾಲಿಗೆ ಸೇರಿದ್ದಾರೆ. ರಿಯಾಲಿಟಿ ಶೋನಲ್ಲಿ ತೋರಿದ ಆತ್ಮವಿಶ್ವಾಸ, ಆಟದ ಶೈಲಿ ಮತ್ತು ವ್ಯಕ್ತಿತ್ವವೇ ಅವರಿಗೆ ಭಾರೀ ಅಭಿಮಾನಿ ಬಳಗವನ್ನು ತಂದಿದೆ. ಬಿಗ್‌ಬಾಸ್ ಗೆಲುವಿನೊಂದಿಗೆ ಗಿಲ್ಲಿಯ ವೃತ್ತಿಜೀವನವೂ ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಆದರೆ ಇದೇ ಹೊತ್ತಿನಲ್ಲಿ ಗಿಲ್ಲಿ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಗಿಲ್ಲಿ ಬಿಗ್‌ಬಾಸ್‌ಗೆ ತೆರಳುವ ಮುನ್ನ ನಟಿಸಿದ್ದ ‘ಸರ್ಕಾರಿ ಶಾಲೆ ಎಚ್8’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆಯಾಗಿದ್ದು, ಚಿತ್ರದ ನಿರ್ಮಾಪಕರು ಗಿಲ್ಲಿ ನಟ ವಿರುದ್ಧ ಫಿಲಂ ಚೇಂಬರ್‌ಗೆ ದೂರು ದಾಖಲಿಸಿದ್ದಾರೆ.

ನಿರ್ಮಾಪಕ ತೇಜಸ್ವಿ ಎಸ್ ಅವರ ಹೇಳಿಕೆಯಂತೆ, ಗಿಲ್ಲಿಗೆ ಸಿನಿಮಾದಲ್ಲಿ ಪ್ರಮುಖ ಪಾತ್ರ ನೀಡಲಾಗಿತ್ತು. ಅವರು ಕೇಳಿದಷ್ಟು ಸಂಭಾವನೆಯನ್ನು ಬಿಗ್‌ಬಾಸ್‌ಗೆ ಹೋಗುವ ಮುನ್ನವೇ ಪಾವತಿಸಲಾಗಿದೆ. ಆದರೆ ಸಿನಿಮಾ ಬಿಡುಗಡೆ ಹಂತದಲ್ಲಿ ಗಿಲ್ಲಿ ಯಾವುದೇ ರೀತಿಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಕರೆ ಮಾಡಿದರೆ ಫೋನ್ ಎತ್ತುತ್ತಿಲ್ಲ. ಕನಿಷ್ಠ ನಮ್ಮ ಸಿನಿಮಾದ ಬಗ್ಗೆ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಕೂಡ ಇಲ್ಲ. ಸ್ಟಾರ್ ಆದ್ಮೇಲೆ ಜವಾಬ್ದಾರಿ ಇರಬೇಕು” ಎಂದು ನಿರ್ಮಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫಿಲಂ ಚೇಂಬರ್ ದೂರು ದಾಖಲಿಸಿಕೊಂಡಿದ್ದು, ಗಿಲ್ಲಿಯನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

‘ಸರ್ಕಾರಿ ಶಾಲೆ ಎಚ್8’ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದ್ದು, ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕತೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಗಿಲ್ಲಿ ಜೊತೆಗೆ ಗುಣ ಹರಿಯಬ್ಬೆ, ಮೇಘಶ್ರೀ, ಜನಪದ ಕಲಾವಿದ ಮೋಹನ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಹಿರಿಯ ಕಲಾವಿದರಾದ ರಾಘವೇಂದ್ರ ರಾಜ್ ಕುಮಾರ್, ಸುಚೇಂದ್ರ ಪ್ರಸಾದ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಸ್ಟಾರ್ ಆಗುವ ಕ್ಷಣಕ್ಕಿಂತ, ಆ ಸ್ಟಾರ್‌ಡಮ್‌ನೊಂದಿಗೆ ಬರುವ ಜವಾಬ್ದಾರಿಯೇ ದೊಡ್ಡದು ಎಂಬ ಚರ್ಚೆ ಈ ಪ್ರಕರಣದೊಂದಿಗೆ ಸ್ಯಾಂಡಲ್‌ವುಡ್‌ನಲ್ಲಿ ಆರಂಭವಾಗಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಕಡಿತ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

0

ನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿ ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸಿದೆ. ಆದರೆ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಗಣನೀಯವಾಗಿ ಕಡಿಮೆಯಾಗುತ್ತಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ ಎಂದು ಸಂಸದ ಈರಣ್ಣ ಕಡಾಡಿ ರಾಜ್ಯಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಷಯವನ್ನು ಸದನದ ಗಮನಕ್ಕೆ ತಂದ ಅವರು, ಬೆಳಗಾವಿ ವಿಮಾನ ನಿಲ್ದಾಣವನ್ನು 262.64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಪ್ರಸ್ತುತ 25.98 ಕೋಟಿ ರೂ. ವೆಚ್ಚದಲ್ಲಿ ವಿಸ್ತರಣಾ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು. ಈ ಹಿಂದೆ ಐದು ವಿಮಾನಯಾನ ಸಂಸ್ಥೆಗಳು 13 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದರೆ, ಇದೀಗ ಕೇವಲ ಎರಡು ಸಂಸ್ಥೆಗಳು ಮಾತ್ರ ಸೇವೆ ನೀಡುತ್ತಿದ್ದು, ಹಾರಾಟಗಳು ಐದು ನಗರಗಳಿಗೆ ಮಾತ್ರ ಸೀಮಿತವಾಗಿವೆ ಎಂದು ಹೇಳಿದರು.

2024-25ನೇ ಸಾಲಿನಲ್ಲಿ ಸುಮಾರು 3.40 ಲಕ್ಷ ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣವನ್ನು ಬಳಸಿದ್ದಾರೆ. ಪ್ರಯಾಣಿಕರ ಸಂಖ್ಯೆಯಲ್ಲಿ ಯಾವುದೇ ಇಳಿಕೆ ಕಂಡುಬರದಿದ್ದರೂ ವಿಮಾನಯಾನ ಸೇವೆಗಳು ಹಂತ ಹಂತವಾಗಿ ಸ್ಥಗಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಈರಣ್ಣ ಕಡಾಡಿ ಹೇಳಿದರು.

ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಸಬ್ಸಿಡಿ ದೊರೆಯುವವರೆಗೂ ಮಾತ್ರ ವಿಮಾನಯಾನ ಸಂಸ್ಥೆಗಳು ಸೇವೆ ಮುಂದುವರಿಸಿ, ಯೋಜನೆ ಮುಗಿದ ಬಳಿಕ ಹಾರಾಟಗಳನ್ನು ನಿಲ್ಲಿಸುತ್ತಿವೆ ಎಂದು ಅವರು ಆರೋಪಿಸಿದರು. ಬೆಳಗಾವಿಯಿಂದ ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಗೆ ಸುಮಾರು 85% ಪ್ರಯಾಣಿಕರು ಪ್ರಯಾಣಿಸುತ್ತಿರುವಾಗಲೂ ಸೇವೆಗಳನ್ನು ಕಡಿತಗೊಳಿಸಿರುವುದು ಅಸಮಂಜಸವಾಗಿದೆ ಎಂದು ಹೇಳಿದರು.

ಹೀಗಾಗಿ, ಸೇವೆಗಳನ್ನು ಸ್ಥಗಿತಗೊಳಿಸಿರುವ ವಿಮಾನಯಾನ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಬೇಕು ಎಂದು ಅವರು ರಾಜ್ಯಸಭೆಯಲ್ಲಿ ಒತ್ತಾಯಿಸಿದರು. ಜೊತೆಗೆ ಮುಂಬೈ, ಪುಣೆ, ಇಂದೋರ್ ಹಾಗೂ ಚೆನ್ನೈ ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕವನ್ನು ಪುನರಾರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಐದು ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ

0

ಮೈಸೂರು: ರಾಜ್ಯದಲ್ಲಿ ಐದು ವರ್ಷಗಳ ಕಾಲ ನಮ್ಮ ತಂದೆಯವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ವಿಚಾರ ಈಗ ಸಂಪೂರ್ಣವಾಗಿ ಸೆಟ್ಲ್ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಹೈಕಮಾಂಡ್ ಈಗಾಗಲೇ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ನೀಡಿದೆ. ಕೆಲವರು ನಾಯಕತ್ವ ಬದಲಾವಣೆಗಾಗಿ ಪ್ರಯತ್ನಿಸಿದ್ದರು. ಆದರೆ ಆ ಪ್ರಯತ್ನಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಈಗ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಈ ವಿಷಯವನ್ನು ಮಾಧ್ಯಮಗಳಲ್ಲಿ ಮಾತ್ರ ಚರ್ಚಿಸಲಾಗುತ್ತಿದೆ. ನಮ್ಮ ಪಕ್ಷದೊಳಗೆ ಯಾವುದೇ ಗೊಂದಲಗಳಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ಮುಡಾ ಪ್ರಕರಣದಲ್ಲಿ ನ್ಯಾಯಾಲಯದಿಂದ ಸಿಎಂ ಕುಟುಂಬಕ್ಕೆ ಕ್ಲೀನ್ಚಿಟ್ ದೊರೆತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ದೂರುದಾರರು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ಆ ಪ್ರಕ್ರಿಯೆ ಮುಗಿದ ನಂತರ ಸೈಟ್ ವಾಪಸ್ ಪಡೆಯುವ ಬಗ್ಗೆ ನಮ್ಮ ತಾಯಿ ತೀರ್ಮಾನ ಕೈಗೊಳ್ಳುತ್ತಾರೆ. ಈ ವಿಚಾರವನ್ನು ಈಗ ಸದ್ಯಕ್ಕೆ ನಾವು ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಪ್ರಕರಣದಲ್ಲಿ ಇನ್ನೂ ಕೆಲವು ಕಾನೂನು ಪ್ರಕ್ರಿಯೆಗಳು ಬಾಕಿ ಇದ್ದು, ಅವು ಪೂರ್ಣಗೊಂಡ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ನಮ್ಮ ತಾಯಿಗೆ ಈ ಪ್ರಕರಣದಲ್ಲಿ ಕ್ಲೀನ್ಚಿಟ್ ದೊರೆತಿರುವುದು ಸಂತೋಷ ತಂದಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ICC U19 World Cup: 15 ಸಿಕ್ಸರ್​, 15 ಬೌಂಡರಿ.. ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ!

0

ಹಾರಾರೆ: ಅಂಡರ್-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಹಾರಾರೆ ಸ್ಫೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸಿಡಿಲಬ್ಬರ ಬ್ಯಾಟಿಂಗ್ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ನಾಲ್ಕನೇ ಓವರ್‌ನಲ್ಲೇ ಮೊದಲ ಆಘಾತ ಎದುರಾಯಿತು. ಆರಂಭಿಕ ಬ್ಯಾಟರ್ ಆರನ್ ಜಾರ್ಜ್ (9) ವಿಕೆಟ್ ಕಳೆದುಕೊಂಡರು. ಆ ಬಳಿಕ ವೈಭವ್ ಸೂರ್ಯವಂಶಿ ಮತ್ತು ನಾಯಕ ಆಯುಷ್ ಮ್ಹಾತ್ರೆ ಇನಿಂಗ್ಸ್ ಸ್ಥಿರಗೊಳಿಸಿ ಭರ್ಜರಿ ಜೊತೆಯಾಟ ನಡೆಸಿದರು.

ವೈಭವ್ ಸೂರ್ಯವಂಶಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಮನಬಂದಂತೆ ದಾಳಿ ನಡೆಸಿ ತಂಡದ ರನ್ ವೇಗವನ್ನು劇ವಾಗಿ ಹೆಚ್ಚಿಸಿದರು. ಅವರು ಕೇವಲ 55 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಫೈನಲ್ ಪಂದ್ಯದಲ್ಲೇ ದಾಖಲೆ ಬರೆದರು. ವೈಭವ್ ಒಟ್ಟು 79 ಎಸೆತಗಳಲ್ಲಿ 175 ರನ್ ಗಳಿಸಿ ಔಟಾದರು. ಅವರ ಈ ಆಕರ್ಷಕ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಹಾಗೂ 15 ಸಿಕ್ಸರ್‌ಗಳು ಸೇರಿದ್ದವು. ಅಂತಿಮವಾಗಿ ಮ್ಯಾನಿ ಲಮ್ಸ್‌ಡೆನ್ ಅವರ ಬೌಲಿಂಗ್‌ನಲ್ಲಿ ಅವರು ಔಟಾದರು.

ಅಂಡರ್-19 ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆಗೂ ವೈಭವ್ ಪಾತ್ರರಾದರು. ಸ್ಪಿನ್ನರ್ ಫರ್ಹಾನ್ ಅಹ್ಮದ್ ಅವರ 14.1ನೇ ಓವರ್‌ನಲ್ಲಿ ಲಾಂಗ್ ಆಫ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅವರು ಡೆವಾಲ್ಡ್ ಬ್ರೆವಿಸ್ ಅವರ ದಾಖಲೆ ಮುರಿದರು. 2022ರ ಅಂಡರ್-19 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಬ್ರೆವಿಸ್ ಆರು ಪಂದ್ಯಗಳಲ್ಲಿ 20 ಸಿಕ್ಸರ್‌ಗಳನ್ನು ಬಾರಿಸಿದ್ದರು. ಆದರೆ ವೈಭವ್ ಈ ಟೂರ್ನಿಯಲ್ಲಿ ಒಟ್ಟು 28 ಸಿಕ್ಸರ್‌ಗಳನ್ನು ಬಾರಿಸಿ ಹೊಸ ದಾಖಲೆ ಸ್ಥಾಪಿಸಿದ್ದಾರೆ.

ಇದರ ಜೊತೆಗೆ, ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ಮೊದಲ ಬ್ಯಾಟರ್ ಹಾಗೂ ಒಟ್ಟಾರೆ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವೈಭವ್ ಪಾತ್ರರಾದರು. ಅಲ್ಲದೆ, ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟರ್ ಎಂಬ ದಾಖಲೆಗೂ ಅವರು ಸೇರಿದ್ದಾರೆ. ಇದಕ್ಕೂ ಮೊದಲು ಉನ್ಮುಕ್ತ್ ಚಂದ್ ಮತ್ತು ಮಂಜೋತ್ ಕಲ್ರಾ ಮಾತ್ರ ಈ ಸಾಧನೆ ಮಾಡಿದ್ದರು.

ಇನ್ನೂ, ಅಂಡರ್-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ವಿಶೇಷ ದಾಖಲೆಯನ್ನೂ ವೈಭವ್ ಸೂರ್ಯವಂಶಿ ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ಜೆಡಿಎಸ್-ಬಿಜೆಪಿಯ ಶಕ್ತಿ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ: ನಿಖಿಲ್ ಕುಮಾರಸ್ವಾಮಿ

0

ಮಂಡ್ಯ: ಜೆಡಿಎಸ್-ಬಿಜೆಪಿಯ ಶಕ್ತಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ. ಮೈತ್ರಿ ಶಾಶ್ವತವಾಗಿ ಉಳಿದುಕೊಳ್ಳಬೇಕು ಅನ್ನೋದಿದ್ರೆ ಕುಳಿತು ಚರ್ಚೆ ಮಾಡಿ, ಕುಮಾರಣ್ಣನ ಮನೆಬಾಗಿಲು ಯಾವಾಗಲೂ ತೆರೆದಿರುತ್ತೆ ಎಂದು ಮಾಜಿ ಸಚಿವ ನಾರಾಯಣಗೌಡ ವಿರುದ್ಧ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷ, ಜೆಡಿಎಸ್ ಪ್ರಾದೇಶಿಕ ಪಕ್ಷ. ರಾಷ್ಟ್ರೀಯ ನಾಯಕರು ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿರುವ ವಿಚಾರ. ಎರಡೂ ಪಕ್ಷದ ಕಾರ್ಯಕರ್ತರ ಗೌರವ ಇದು. ಚಿತ್ರದುರ್ಗದಿಂದ ಚಾಮರಾಜನಗರದವರೆಗೆ NDA ಅಭ್ಯರ್ಥಿಗಳು ಗೆದ್ದಿದ್ದಾರೆ. ಜೆಡಿಎಸ್-ಬಿಜೆಪಿಯ ಶಕ್ತಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯ ಅಲ್ಲ ಸ್ವಾಮಿ ಎಂದು ವಾಗ್ದಾಳಿ ನಡೆಸಿದರು.

ಮುಂದುವರೆದು ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷದ ಚೌಕಟ್ಟಿನಲ್ಲಿ ಕರೆದು ಜಿಲ್ಲಾ ನಾಯಕರ ಜೊತೆ ಸಭೆ ಮಾಡಿದಾಗ ಸಾಮಾನ್ಯ ಕಾರ್ಯಕರ್ತ ಅಂತ ನಾನು ಹೇಳಿದ್ದೇನೆ. ಇದು ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಚಾರ ಅಲ್ಲ. ಅಂತಹ ಅನಿವಾರ್ಯ ಕೂಡ ಸೃಷ್ಟಿ ಆಗಿಲ್ಲ. ಕಾಮನ್ ಸೆನ್ಸ್ ಇರುವ ವ್ಯಕ್ತಿ ಯಾವ ರೀತಿ ಮಾತನಾಡಬೇಕು ಅನ್ನೋದ ಅರಿತುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

ಕೆ.ಆರ್.ಪೇಟೆಯಲ್ಲಿ ಏಕೈಕ ಶಾಸಕ ಮಂಜಣ್ಣ ಆಯ್ಕೆ ಆಗಿದ್ದಾರೆ. ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಹಜವಾಗಿ ಹೇಳಿದ್ದೆ ಅಷ್ಟೆ, ತಪ್ಪೇನು? ಮೈತ್ರಿ ಮೇಲ್ಮಟ್ಟದಲ್ಲಿ ಚರ್ಚೆ ಆಗಿದೆ. ಮೈತ್ರಿ ಶಾಶ್ವತವಾಗಿ ಉಳಿದುಕೊಳ್ಳಬೇಕು ಅನ್ನೋದಿದ್ರೆ ಬನ್ನಿ ಕುಳಿತು ಚರ್ಚೆ ಮಾಡಿ. ನನ್ನ ಚುನಾವಣೆ ಸೋಲಿನ ಮೇಲೆ ರಾಜಕಾರಣದ ನಾಯಕತ್ವ ಸೃಷ್ಟಿ ಆಗುತ್ತೋ, ಸೃಷ್ಟಿ ಆಗಿಲ್ವೋ ಅನ್ನೋದು ನಿರ್ಣಯ ಆಗಲ್ಲ ಎಂದು ಮಾಜಿ ಸಚಿವ ನಾರಾಯಣ ಗೌಡ ವಿರುದ್ಧ ನಿಖಿಲ್ ಕಿಡಿ ಕಾರಿದ್ರು.

ಯಾವತ್ತೂ ಕೂಡ ಕಾರ್ಯಕರ್ತರನ್ನ ಬೇದ-ಭಾವ ಮಾಡಿಲ್ಲ. ಕುಮಾರಣ್ಣ ವ್ಯಕ್ತಿತ್ವ ರಾಜ್ಯದ ಜನತೆಗೆ ಗೊತ್ತಿದೆ.
ಜನರ ಕಷ್ಟ ಅರಿತು ಕೆಲಸ ಮಾಡ್ತಿರೋ ಕೇಂದ್ರ ಮಂತ್ರಿ ಅವರು. ಕುಮಾರಣ್ಣನ ಮೇಲೆ ಗೂಬೆ ಕೂರಿಸುವುದು ಬೇಡ ಎಂದರು. ಇನ್ನು ಸ್ಥಳೀಯ ಚುನಾವಣೆಯಲ್ಲಿ ಬ್ಯಾಲೆಟ್ ಪೆಪರ್ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆದ್ದರೆ ಅಂತಹ ರಾಜ್ಯಗಳಲ್ಲಿ ಇವಿಎಂ ಮಿಷನ್ ಚೆನ್ನಾಗಿ ವರ್ಕ್ ಆಗುತ್ತೆ.

ಸೋಲುವ ಕಡೆ ಇವಿಎಂ ಟ್ಯಾಪಿಂಗ್ ಅಂತ ಹೇಳ್ತಾರೆ. ಟೆಕ್ನಾಲಜಿ ಬಹಳ ಮುಂದುವರಿದಿದೆ. ಈ ಸಂದರ್ಭದಲ್ಲಿ ಬ್ಯಾಲೆಟ್ ಪೇಪರ್ ಅಗತ್ಯತೆ ಸರಿಯಲ್ಲ. ಟೆಕ್ನಾಲಜಿ ಬಳಸಿಕೊಳ್ಳವುದನ್ನ ಬಿಟ್ಟು ಬ್ಯಾಲೆಟ್ ಪೇಪರ್ ಬಳಕೆ ಅರ್ಥವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು 2019ರಲ್ಲಿ ಒಬ್ಬ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಯಾರ್ಯಾರು ಸಂಚು ರೂಪಿಸಿದ್ರು? ನನ್ನ ಚುನಾವಣೆಯ ಸೋಲಿನ ಮೇಲೆ ನನ್ನ ರಾಜಕಾರಣದ ನಾಯತ್ವ ಸೃಷ್ಟಿ ಆಗುತ್ತೋ, ಆಗಲ್ವೋ ಅನ್ನೋದು ನಿರ್ಣಯ ಆಗಲ್ಲ ಎಂದು ತಿರುಗೇಟು ನೀಡಿದರು.

ಉತ್ಪಾದನೋತ್ತರ ಕೃಷಿಯಲ್ಲಿ ತೊಡಗಿ ರೈತರು ಉದ್ಯಮಿಗಳಾಗಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ -2026 ಉತ್ಪದಾನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಮಹಿಳಾ ಕೃಷಿಕರ ಸಾಧನೆ ಸ್ಪೂರ್ತಿದಾಯಕ

ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು ಸರ್ಕಾರ ಹೆಚ್ಚಿನ ಒತ್ತು ನೀಡುತ್ತದೆ. ಕೃಷಿ ಹಾಗೂ ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ರೈತರು ತೊಡಗಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕಗೊಳಿಸಬಹುದಾಗಿದೆ. ರೈತರು ಉದ್ಯಮಿಗಳಾಗಬೇಕು .

ಉತ್ಪನ್ನಗಳನ್ನು ಬೆಳೆಯುವ ಜೊತೆಗೆ, ಸಂಗ್ರಹಣೆ, ಸಂಸ್ಕರಣೆ, ಪ್ಯಾಕೇಜಿಂಗ್, ಮಾರುಕಟ್ಟೆ , ಉಪಉತ್ಪನ್ನಗಳ ಅಭಿವೃದ್ಧಿಯಲ್ಲಿ ರೈತರು ನಿರತರಾಗಬೇಕಿದೆ. ಕೃಷಿಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ತೊಡಗಿಕೊಳ್ಳುವುದು ಅಗತ್ಯ. ಇಂದಿನ ಪ್ರಶಸ್ತಿಗೆ ಭಾಜನರಾದ ಮಹಿಳಾ ಕೃಷಿಕರ ಸಾಧನೆ ಸ್ಪೂರ್ತಿದಾಯಕವಾಗಿದೆ ಎಂದರು.

ರೈತರ ಸಮಸ್ಯೆಗೆ ಓಗೊಟ್ಟ ಸ್ಪಂದನಾಶೀಲ ಸರ್ಕಾರ

ರೈತರಿಗೆ ಉತ್ತಮವಾದ ಬಿತ್ತನೆ ಬೀಜ, ಗೊಬ್ಬರ, ಔಷದಿ, ಸರ್ಕಾರ ಒದಗಿಸುತ್ತಿದ್ದು, ಯಂತ್ರೋಪಕರಣಗಳ ಖರೀದಿಗೆ 1,500 ಕೋಟಿ ಸಹಾಯಧನವನ್ನು ನೀಡಲಾಗುತ್ತಿದೆ. ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆಪರಿಹಾರವನ್ನು ರೈತರಿಗೆ ವಿತರಿಸಲಾಗಿದೆ. ಕಬ್ಬು, ರಾಗಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಸುವುದಕ್ಕೆ ರೈತರು ಸೀಮಿತವಾಗುತ್ತಿದ್ದಾರೆ. ಆದರೆ ಬೆಳೆ ತೆಗೆದ ನಂತರ ಚಟುವಟಿಕೆಗಳಲ್ಲಿ ರೈತರು ಕೈಗೊಳ್ಳಬೇಕು.

ಕಬ್ಬು ಬೆಳೆ ರೈತರೊಂದಿಗೆ ಚರ್ಚಿಸಿ ಸಂಧಾನ ನಡೆಸಿ ಕಬ್ಬು ಬೆಳೆಗೆ ಬೆಲೆ ನಿಗಧಿ ಪಡಿಸಲಾಯಿತು. ಅಂತೆಯೇ ತೊಗರಿ ಬೆಳೆಗೆ ಖರೀದಿ ಕೇಂದ್ರವನ್ನು ಒಂದು ತಿಂಗಳ ಮುಂಚೆಯೇ ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಯಿತು. ಮೆಕ್ಕೆ ಜೋಳ ಹೆಚ್ಚುವರಿ ಇಳುವರಿ ಬಂದು 54 ಲಕ್ಷ ಮೆ.ಟನ್ ಉತ್ಪಾದನೆಯಾಗಬಹುದಾಗಿದೆ. ಆದ್ದರಿಂದ ಕೇಂದ್ರ ಕ್ವಿಂಟಾಲ್ ವೊಂದಕ್ಕೆ 2400 ರೂ. ನಿಗದಿಪಡಿಸಿದ್ದು, ಮೆಕ್ಕೆಜೋಳ ಬಳಸುವ ಕಾರ್ಖಾನೆಗಳು, ಎಥನಾಲ್ ತಯಾರಕರೊಂದಿಗೆ ಚರ್ಚೆ ನಡೆಸಿ, 40 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಅನುವು ಮಾಡಿಕೊಡಲಾಯಿತು ಎಂದರು.

ಯುವಜನರು ಕೃಷಿಯಲ್ಲಿ ತೊಡಗಿಕೊಳ್ಳಬೇಕು

ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಸ್ವಾತಂತ್ರ್ಯಪೂರ್ವದಲ್ಲಿ ಶೇ.80 ರಷ್ಟು ಜನ ಕೃಷಿಯನ್ನು ಅವಲಂಬಿಸಿದ್ದರು. ಈಗ ಈ ಪ್ರತಿಶತ ಶೇ. 62 ಕ್ಕೆ ಇಳಿದಿದೆ. ಕೃಷಿಯಲ್ಲಿ ಉತ್ಪಾದನೋತ್ತರ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ಕೃಷಿ ಲಾಭದಾಯಕವಾಗುತ್ತದೆ ಎಂದರು.

ಕೃಷಿಭಾಗ್ಯ ಯೋಜನೆ ಮರುಸ್ಥಾಪನೆ

ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಬಹಳಷ್ಟು ಈಡೇರಿಸಲಾಗಿದ್ದು, ಅವುಗಳಲ್ಲಿ ಜಾರಿಯಾಗಿರುವ ಕೃಷಿ ಭಾಗ್ಯ ಯೋಜನೆ ಪ್ರಮುಖವಾಗಿದೆ. ಬಿಜೆಪಿ ತನ್ ಅಧಿಕಾರಾವಧಿಯಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ನಮ್ಮ ಸರ್ಕಾರ ಮತ್ತೊಮ್ಮೆ ಕೃಷಿ ಭಾಗ್ಯ ಯೋಜನೆಯನ್ನು ಮರುಸ್ಥಾಪಿಸಿದೆ.

ಸುಮಾರು 200 ಕೋಟಿ ಅನುದಾನವನ್ನು ಇದಕ್ಕಾಗಿ ನೀಡಲಾಗಿದೆ. ನಮ್ಮ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗಾಗಿ ಮಾಡಿದ ಶಕ್ತಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳು ಅತ್ಯಂತ ಪ್ರಮುಖವೆನಿಸಿವೆ. ಅಲ್ಲದೇ ಅನ್ನಭಾಗ್ಯ ಯೋಜನೆಗಳಿಂದ ಬಡವರು ಉಳಿತಾಯದಲ್ಲಿ ಹೂಡಿಕೆ ಮಾಡಬಹುದಾಗಿದೆ. ಎಲ್ಲರಿಗೂ ಸಮಾನ ಅವಕಾಶವನ್ನು ನೀಡುವ ಉದ್ದೇಶದಿಂದ ಈ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.

error: Content is protected !!