Home Blog

‘ಸತ್ತವರ ಖಾತೆಗೆ ಹಣ ಹೋಗಿದೆ, ಸರಿಪಡಿಸುತ್ತಿದ್ದೇವೆ’: ಗೃಹಲಕ್ಷ್ಮಿ ವಿವಾದಕ್ಕೆ ಹೆಚ್‌.ಎಂ. ರೇವಣ್ಣ ಸ್ಪಷ್ಟನೆ

0

ರಾಯಚೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಸಿಎಜಿ ವರದಿಯಲ್ಲಿರುವ 60 ಕೋಟಿ ರೂ. ಹಣ ಬ್ಯಾಂಕ್ ಖಾತೆ ಇಲ್ಲದವರಿಗೆ ಜಮೆಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್‌.ಎಂ. ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಆದರೆ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗಿರುವುದು ನಿಜವಾಗಿದ್ದು, ಆ ಹಣವನ್ನು ಮರುಪಡೆಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ವೇಳೆ 2.80 ಲಕ್ಷ ಮೃತ ಫಲಾನುಭವಿಗಳು ಪತ್ತೆಯಾಗಿದ್ದು, ಅವರ ಖಾತೆಗಳಿಗೆ 115 ಕೋಟಿ ರೂ. ಜಮೆಯಾಗಿರುವುದು ಗೊತ್ತಾಗಿದೆ. ಇದರಲ್ಲಿ 15 ಕೋಟಿ ರೂ. ಈಗಾಗಲೇ ವಾಪಸ್ ಪಡೆಯಲಾಗಿದ್ದು, ಉಳಿದ 100 ಕೋಟಿ ರೂ. ವಸೂಲಿಗೆ ಬ್ಯಾಂಕ್‌ಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದರು.

ಒಂದೇ ಬ್ಯಾಂಕ್ ಖಾತೆಗೆ 20 ಮಂದಿ ಫಲಾನುಭವಿಗಳ ಹಣ ಜಮೆಯಾಗಿದೆ ಎಂಬ ಆರೋಪದ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಯೋಜನೆ ಆರಂಭದ ವೇಳೆಯಲ್ಲಿ ಸಂಪೂರ್ಣ ಆನ್‌ಲೈನ್ ನೋಂದಣಿ ಹಾಗೂ ಹಣ ವರ್ಗಾವಣೆ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಕೆಲವು ತಾಂತ್ರಿಕ ಲೋಪಗಳು ಕಂಡುಬಂದಿವೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿರುವ ಪ್ರಕರಣಗಳು ಹಾಗೂ ಅನ್ನಭಾಗ್ಯ ಯೋಜನೆಯಲ್ಲಿ ನಕಲಿ ರೇಷನ್ ಕಾರ್ಡ್ ಬಳಕೆಯ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕೆಗೆ ಪ್ರತಿಕ್ರಿಯಿಸಿದ ರೇವಣ್ಣ, “ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಕಾಂಗ್ರೆಸ್ ಸರ್ಕಾರ. ಲೋಪಗಳು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದವರಿಗೆ ಈಗ ಉತ್ತರ ಸಿಕ್ಕಿದೆ” ಎಂದು ತಿರುಗೇಟು ನೀಡಿದರು.

22 ಪ್ರಕರಣಗಳಲ್ಲಿ ಜಪ್ತಿಯಾಗಿದ್ದ ಕೋಟಿ ಕೋಟಿ ಮೌಲ್ಯದ ಮಾದಕ ದ್ರವ್ಯ ಧ್ವಂಸ: ಡ್ರಗ್ ಮಾಫಿಯಾಗೆ ಪೊಲೀಸರ ಖಡಕ್ ಸಂದೇಶ

0

ಬೀದರ್: ಡ್ರಗ್ ಮಾಫಿಯಾಗೆ ಬೀದರ್ ಪೊಲೀಸರು ಮತ್ತೊಮ್ಮೆ ಖಡಕ್ ಸಂದೇಶ ರವಾನಿಸಿದ್ದಾರೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾದ 22 ಪ್ರಕರಣಗಳಲ್ಲಿ ಜಪ್ತಿಯಾಗಿದ್ದ ₹9.41 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ನಿಯಮಾನುಸಾರ ಧ್ವಂಸಗೊಳಿಸಲಾಗಿದೆ.

ಭಾಲ್ಕಿ ತಾಲೂಕಿನ ಧನ್ನೂರು ಸಮೀಪದ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 997 ಕೆಜಿ ಗಾಂಜಾ, 51 ಸಾವಿರಕ್ಕೂ ಹೆಚ್ಚು ನಶೆ ಗುಳಿಗೆಗಳು ಮತ್ತು 743 ಮಾದಕ ಸಿರಪ್‌ಗಳನ್ನು ಜಿಲ್ಲಾ ಡ್ರಗ್ಸ್ ವಿಲೇವಾರಿ ಸಮಿತಿಯ ನಿಯಮಾವಳಿಯಂತೆ ನಾಶಪಡಿಸಲಾಯಿತು.

ಜಿಲ್ಲಾ ಎಸ್‌ಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿ, ಮಾದಕ ವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಮುಂದುವರಿಸಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದರು. ಅಕ್ರಮ ಡ್ರಗ್ಸ್ ಮಾರಾಟ ಮತ್ತು ಸಾಗಣೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಕೆ ನೀಡಿದರು.

ರಾಮಭಕ್ತರ ನಂಬಿಕೆಗೆ ಧಕ್ಕೆ ತಂದವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್ ಎಚ್ಚರಿಕೆ

0

ಲಕ್ನೋ: ಅಯೋಧ್ಯೆ ರಾಮಮಂದಿರದ ಕಾಣಿಕೆ ಹಣ ದುರುಪಯೋಗ ಪ್ರಕರಣದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ರಾಮಭಕ್ತರು ತಮ್ಮ ಭಕ್ತಿ ಮತ್ತು ನಂಬಿಕೆಯಿಂದ ಕಾಣಿಕೆ ನೀಡುತ್ತಾರೆ. ಆ ಹಣದಲ್ಲಿ ಅಕ್ರಮ ಎಸಗುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಡಿಯೋರಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ, ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಾಗಿದ್ದು, ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಸನಾತನ ಧರ್ಮದ ಭಾವನೆಗಳಿಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ವಿಚಾರವನ್ನು ರಾಜಕೀಯಗೊಳಿಸುವ ಪ್ರಯತ್ನಗಳ ವಿರುದ್ಧವೂ ಯೋಗಿ ಅಸಮಾಧಾನ ವ್ಯಕ್ತಪಡಿಸಿದರು. ರಾಮಮಂದಿರ ನಿರ್ಮಾಣವನ್ನು ಮೊದಲಿನಿಂದಲೂ ವಿರೋಧಿಸಿದ್ದವರೇ ಈಗ ಈ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

“ರಾಮನೇ ಇಲ್ಲ ಎಂದು ಹೇಳಿದ್ದವರು, ದೇವಾಲಯದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದವರು, ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದವರು ಮತ್ತು ರಾಮನವಮಿ ವೇಳೆ ಗಲಭೆಗಳಿಗೆ ಕಾರಣರಾದವರೇ ಈಗ ಮತ್ತೆ ಈ ವಿಚಾರವನ್ನು ಎತ್ತುತ್ತಿದ್ದಾರೆ” ಎಂದು ಅವರು ವಾಗ್ದಾಳಿ ನಡೆಸಿದರು.

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿಗೆ ಮತ್ತೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದಿಂದ ಪೂರ್ಣ ಪ್ರಮಾಣದಲ್ಲಿ ಪುನರಾರಂಭ

ಬೆಂಗಳೂರು: ತಜ್ಞರು ಹಾಗೂ ಅಧಿಕಾರಿಗಳ ತಾಂತ್ರಿಕ ಸಮಿತಿಯ ಶಿಫಾರಸಿನ ಮೇರೆಗೆ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ)ಯನ್ನು ಪೂರ್ಣ ಪ್ರಮಾಣದಲ್ಲಿ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ತಾಂತ್ರಿಕ ಸಮಿತಿಯ ವರದಿಯನ್ನು ಸರ್ಕಾರ ಅಂಗೀಕರಿಸಿದ್ದು, ವೈಜ್ಞಾನಿಕ ಮೌಲ್ಯಮಾಪನದ ಆಧಾರದ ಮೇಲೆ ಪರಿಣಾಮಕಾರಿ ಸಾಗಣೆ ಸಾಮರ್ಥ್ಯ (Carrying Capacity) ಪರಿಶೀಲಿಸಿ ಜಂಗಲ್ ಸಫಾರಿ ಪುನರಾರಂಭಕ್ಕೆ ಹಸಿರು ನಿಶಾನೆ ನೀಡಲಾಗಿದೆ.

ಸಮಿತಿಯ ಶಿಫಾರಸಿನಂತೆ ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕವು ಪರಿಸರ ಪ್ರವಾಸೋದ್ಯಮ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದು, ಸುಸ್ಥಿರ ಪ್ರವಾಸೋದ್ಯಮ ಮಾದರಿಯನ್ನು ಅನುಸರಿಸುತ್ತಿದೆ. ಜಂಗಲ್ ಸಫಾರಿ ಪುನರಾರಂಭದಿಂದ ಸ್ಥಳೀಯ ಜನರಿಗೆ ಉದ್ಯೋಗ ಹಾಗೂ ಜೀವನೋಪಾಯದ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿದ್ದು, ಸ್ಥಳೀಯ ಆರ್ಥಿಕತೆಯ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ಕಾಪಾಡುವ ಜೊತೆಗೆ ವನ್ಯಜೀವಿ ಸಂರಕ್ಷಣೆ, ಸ್ಥಳೀಯ ಸಮುದಾಯಗಳ ಜೀವನೋಪಾಯ ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ಒದಗಿಸುವ ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸಿಎಜಿ ವರದಿ ಸತ್ಯಕ್ಕೆ ದೂರ; ಗೃಹಲಕ್ಷ್ಮಿ ಹಣ ಪಡೆದ ಮೃತರ ಖಾತೆಗಳಿಂದ ₹15 ಕೋಟಿ ವಾಪಸ್ – ಹೆಚ್.ಎಂ. ರೇವಣ್ಣ

ರಾಯಚೂರು: ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ನಿಯಂತ್ರಕ ಮತ್ತು ಮಹಾಲೇಖಪರಿಶೋಧಕರ (ಸಿಎಜಿ) ವರದಿಯಲ್ಲಿ ಉಲ್ಲೇಖಿಸಿರುವ 60 ಕೋಟಿ ರೂಪಾಯಿ ಬ್ಯಾಂಕ್ ಖಾತೆಯೇ ಇಲ್ಲದವರಿಗೆ ಜಮೆಯಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವ ಅಂಶ ಮಾತ್ರ ಸರಿಯಾಗಿದೆ. ಆದರೆ ಒಂದೇ ಬ್ಯಾಂಕ್ ಖಾತೆಗೆ 20 ಮಂದಿ ಫಲಾನುಭವಿಗಳ ಹಣ ಜಮೆಯಾಗಿದೆ ಎಂಬ ವರದಿಯ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿದ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಪೂರ್ಣ ಆನ್‌ಲೈನ್ ವ್ಯವಸ್ಥೆಯ ಮೂಲಕ ಅರ್ಜಿ ಸ್ವೀಕಾರ, ನೋಂದಣಿ ಮತ್ತು ಹಣ ಜಮೆ ಪ್ರಕ್ರಿಯೆ ನಡೆಸಲಾಗಿತ್ತು. ಈ ಕಾರಣದಿಂದ ಕೆಲ ತಾಂತ್ರಿಕ ಲೋಪಗಳು ನಡೆದಿರುವುದು ಈಗ ಪರಿಶೀಲನೆಯಲ್ಲಿ ಗೊತ್ತಾಗಿದೆ ಎಂದು ಅವರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ವೇಳೆ ಸುಮಾರು 2.80 ಲಕ್ಷ ಫಲಾನುಭವಿಗಳು ಮೃತಪಟ್ಟಿರುವುದು ಪತ್ತೆಯಾಗಿದೆ. ಅವರ ಖಾತೆಗಳಿಗೆ ಒಟ್ಟು 115 ಕೋಟಿ ರೂಪಾಯಿ ಜಮೆಯಾಗಿದ್ದು, ಈಗಾಗಲೇ 15 ಕೋಟಿ ರೂಪಾಯಿಯನ್ನು ವಾಪಸ್ ಪಡೆಯಲಾಗಿದೆ. ಉಳಿದ 100 ಕೋಟಿ ರೂಪಾಯಿ ಮರುಪಡೆಯಲು ಬ್ಯಾಂಕ್‌ಗಳೊಂದಿಗೆ ಚರ್ಚೆ ನಡೆಯುತ್ತಿದೆ ಎಂದು ರೇವಣ್ಣ ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ಕೆಲವು ಅಂಗಡಿ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ರೇಷನ್ ಕಾರ್ಡ್‌ಗಳನ್ನು ಪಡೆದು ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳೂ ಬೆಳಕಿಗೆ ಬಂದಿದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ ಎಂದರು.

ಇಡಿ ದಾಳಿ ಅಚ್ಚರಿ ತಂದಿದೆ; ರಾಜಕೀಯ ಪ್ರೇರಿತ ಸಂಚು ಇದೆಯೇ ಕಾದು ನೋಡಬೇಕು – ಸತೀಶ್ ಜಾರಕಿಹೊಳಿ

ಬೆಳಗಾವಿ: ತಮ್ಮ ಭಾಮೈದ ವೈ. ಮಂಜುನಾಥ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿ ಅಚ್ಚರಿ ಮೂಡಿಸಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಸಿಕ್ಕ ಬಳಿಕವೇ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಮಂಜುನಾಥ್ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಹಿಂದೆ ಹೈಕೋರ್ಟ್ ಒಂದು ಹಳೆಯ ಪ್ರಕರಣವನ್ನು ರದ್ದುಪಡಿಸಿತ್ತು. ಇಂತಹ ಸಂದರ್ಭದಲ್ಲಿ ಭ್ರಷ್ಟಾಚಾರ ಆರೋಪದಡಿ ಇಡಿ ದಾಳಿ ನಡೆಸಿರುವುದು ಅಚ್ಚರಿ ಮೂಡಿಸಿದೆ” ಎಂದು ಹೇಳಿದರು.

ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ರಾಜ್ಯದಲ್ಲಿ ಲೋಕಾಯುಕ್ತ ಮತ್ತು ಇತರ ತನಿಖಾ ಸಂಸ್ಥೆಗಳಿವೆ. ಕೇಂದ್ರ ಸರ್ಕಾರದ ಮಟ್ಟದಲ್ಲಿ ತನಿಖೆ ಅಗತ್ಯವಿದ್ದರೆ ಸಿಬಿಐ ತನಿಖೆ ನಡೆಸಬಹುದಿತ್ತು. ಆದರೆ ಇಡಿ ದಾಳಿ ನಡೆಸಿರುವುದರ ಹಿಂದೆ ರಾಜಕೀಯ ಪ್ರೇರಿತ ಉದ್ದೇಶ ಇದೆಯೇ ಎಂಬುದನ್ನು ಕಾದು ನೋಡಬೇಕಿದೆ. ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದರ ಆಧಾರದ ಮೇಲೆ ಮುಂದಿನ ಬೆಳವಣಿಗೆಗಳು ಸ್ಪಷ್ಟವಾಗಲಿವೆ ಎಂದು ಅಭಿಪ್ರಾಯಪಟ್ಟರು.

ಸತೀಶ್ ಜಾರಕಿಹೊಳಿ ಅವರ ಸಂಬಂಧಿಯಾಗಿರುವ ಕಾರಣಕ್ಕೆ ದಾಳಿ ನಡೆದಿದೆಯೇ ಅಥವಾ ಸಚಿವರ ಪ್ರಭಾವದಿಂದಲೇ ಆಸ್ತಿ ಸಂಪಾದಿಸಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮಂಜುನಾಥ್ ಒಬ್ಬ ಸರ್ಕಾರಿ ಅಧಿಕಾರಿ ಮಾತ್ರ. ಅವರು ಕೆಲಸ ಮಾಡುವ ಇಲಾಖೆಯಲ್ಲಿ ನಮ್ಮ ಯಾವುದೇ ಪ್ರಭಾವ ಇರುವುದಿಲ್ಲ. ಅದು ಸೀಮಿತ ಅಧಿಕಾರದ ಹುದ್ದೆಯಾಗಿದೆ” ಎಂದು ಸ್ಪಷ್ಟಪಡಿಸಿದರು.

ಮಾವಲಿ ಚೆಕ್‌ಪೋಸ್ಟ್ ಸಮೀಪದ ರೆಸಾರ್ಟ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಆ ರೆಸಾರ್ಟ್ ಮಂಜುನಾಥ್ ಹೆಸರಿನಲ್ಲಿಲ್ಲ. ಅದು ಅವರ ಸಹೋದರರ ಹೆಸರಿನಲ್ಲಿದ್ದು, ಕಳೆದ 30 ವರ್ಷಗಳಿಂದ ಅವರ ಕುಟುಂಬವೇ ರೆಸಾರ್ಟ್ ಉದ್ಯಮ ನಡೆಸುತ್ತಿದೆ” ಎಂದು ತಿಳಿಸಿದರು.

ಇಡಿ ದಾಳಿ ನಡೆದು ಮೂರು ದಿನಗಳು ಕಳೆದಿದ್ದು, ಅಧಿಕಾರಿಗಳು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಲು ಸಮಯ ಬೇಕಾಗುತ್ತದೆ. ಇಂದು ಮಂಜುನಾಥ್ ಅವರನ್ನು ಭೇಟಿಯಾಗಿ ಪ್ರಕರಣದ ಕುರಿತು ಮಾಹಿತಿ ಪಡೆಯುತ್ತೇನೆ. ಬಳಿಕ ಅಗತ್ಯವಿದ್ದರೆ ಈ ಬಗ್ಗೆ ಮತ್ತಷ್ಟು ಪ್ರತಿಕ್ರಿಯೆ ನೀಡುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ರೈತರು ಭೂಮಿ ಕೊಡಲು ಒಪ್ಪಿದರೆ ನನ್ನದೇನೂ ತಕರಾರು ಇಲ್ಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಬಿಡದಿಯ ಭಾಧಿತ ರೈತರ ಹಿತಾಸಕ್ತಿಯ ಬಗ್ಗೆ ಚರ್ಚಿಸಲು ನಾನು ನಾಳೆ (ಜೂನ್ 27 ಶನಿವಾರ) ಭೈರಮಂಗಲದಲ್ಲಿ ಮುಖ್ಯಮಂತ್ರಿಗಳಾಗಿ ಕಾಯುತ್ತೇನೆ. ಅವರು ಸ್ಥಳಕ್ಕೆ ಬಂದರೆ ಸಮಸ್ಯೆಯ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು; ಮುಖ್ಯಮಂತ್ರಿಗಳ ಜತೆ ಪತ್ರ ಸಮರ ಅಂತೇನಿಲ್ಲ. ವಿಧಾನಸೌಧಕ್ಕೆ ಬರುವಂತೆ ಅವರು ಪತ್ರ ಬರೆದಿದ್ದರು. ವಿಧಾನಸೌಧ ಬೇಡ, ಭೈರಮಂಗಲದಲ್ಲಿ ನೊಂದ ರೈತರ ಸಮ್ಮುಖದಲ್ಲಿಯೇ ಚರ್ಚೆ ನಡೆಯುವುದು ಸೂಕ್ತ ಎಂದು ನಾನು ಪತ್ರದಲ್ಲಿ ತಿಳಿಸಿದ್ದೆ.

ಅಲ್ಲದೆ, ಜೂನ್ 27ರಂದು, ಅಂದರೆ ಶನಿವಾರ ಬಿಡದಿಯ ಭೈರಮಂಗಲದಲ್ಲಿ ಬಹಿರಂಗ ಚರ್ಚೆಗೆ ಬರುತ್ತೇನೆ ಎಂದು ಹೇಳಿದ್ದೆ. ಅದರಂತೆ ನಾನು ಬುಧವಾರ ಭೈರಮಂಗಲಕ್ಕೆ ತೆರಳಿ ಮುಖ್ಯಮಂತ್ರಿಗಳಾಗಿ ಕಾಯುತ್ತೇನೆ. ಅವರು ಬಂದರೆ ಚರ್ಚೆ ನಡೆಸುತ್ತೇನೆ ಎಂದರು ಅವರು.

ಶನಿವಾರ ಮಧ್ಯಾಹ್ನದವರೆಗೂ ನಾನು ಬೈರಮಂಗಲದಲ್ಲಿ ಮುಖ್ಯಮಂತ್ರಿಗಳಿಗಾಗಿ ಕಾಯುತ್ತೇನೆ. ಅವರು ಬಂದರೆ ಸಂತೋಷ. ಚರ್ಚೆಗೆ ಬನ್ನಿ ಎಂದು ಪತ್ರ ಬರೆದಿದ್ದೇನೆ. ಅವರು ಇನ್ನೂ ಏನು ಉತ್ತರ ಕೊಟ್ಟಿಲ್ಲ. ನಾವೇನು ಗಲಾಟೆ ಮಾಡಿಸಲು ಹೋಗುತ್ತಿಲ್ಲ. ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಕೊಡುತ್ತಿದ್ದೇವೆ ಅಷ್ಟೇ. ನಾನು ಕೊಟ್ಟ ಸಮಯಕ್ಕೆ ಹೋಗುತ್ತಿದ್ದೇನೆ. ಅವರು ಬಂದರೆ ಒಳ್ಳೆಯದು.

ನಿನ್ನೆಯಿಂದ ಹದಿನೈದು ಇಪ್ಪತ್ತು ಜನ ಭೂಮಿ ಕೊಡಲು ಸಿದ್ದ ಅಂತ ಕೂತಿದ್ದಾರೆ. ಇದರ ಹಿಂದಿನ ವಿಚಾರಗಳನ್ನು ನಾನೂ ಅರ್ಥ ಮಾಡಿಕೊಂಡಿದ್ದೇನೆ. ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನಿಲ್ಲ. ರೈತರು ಭೂಮಿ ಕೊಡಲು ಒಪ್ಪಿದರೆ ನನ್ನದೇನೂ ತಕರಾರು ಇಲ್ಲ. ಬಲವಂತವಾಗಿ ರೈತರನ್ನು ಬೆದರಿಸಿದರೆ ಸರಿ ಇರೋದಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ನಾನು ಕೂಡ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಅನೇಕ ಸಂದರ್ಭಗಳಲ್ಲಿ ರೈತರ ಬಳಿಯೇ ಹೋಗಿದ್ದೇನೆ. ಇದೇ ಬಿಡದಿ ಯೋಜನೆ ಪ್ರಶ್ನೆ ಬಂದಾಗ ರೈತರನ್ನು ಕೃಷ್ಣಾ ಕಚೇರಿಗೆ ಕರೆಸಿಕೊಂಡು ಅವರ ಸಮ್ಮುಖದಲ್ಲಿಯೇ ಸಭೆ ಮಾಡಿದ್ದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರೇ ಬಿಡದಿ ಉಪನಗರ ಯೋಜನೆಯನ್ನು ವಿರೋಧ ಮಾಡಿದ್ದರು. ರೈತರು ಬೇಡ ಎಂದರು ಕಾಂಗ್ರೆಸ್ ನಾಯಕರಿಗೆ ಯೋಜನೆ ಬೇಕಾಗಿದೆ ಎಂದು ಅವರು ಹೇಳಿದರು.

ರೈತರಿಗೆ ಬೆಂಬಲ ಕೊಡಲು ಬೈರಮಂಗಲಕ್ಕೆ ಹೋಗುತ್ತಿದ್ದೇನೆ. ಕಾನೂನು ಮೀರಿ ರೈತರೇನು ಹೋರಾಟ ಮಾಡುತ್ತಿಲ್ಲ. ನಾನು ಕೂಡ ಕಾನೂನು ಪ್ರಕಾರವೇ ಹೋರಾಟದಲ್ಲಿ ಭಾಗಿಯಾಗುತ್ತೇನೆ. ಶನಿವಾರ ಮಧ್ಯಾಹ್ನದವರಿಗೂ ನಾನು ಭೈರಮಂಗಲದಲ್ಲಿಯೇ ಇದ್ದು ರೈತರ ಮನವಿಗಳನ್ನು ಆಲಿಸುತ್ತೇನೆ. ಮುಖ್ಯಮಂತ್ರಿಗಳು ಚರ್ಚೆಗೆ ಬಂದರೆ ಎಲ್ಲವೂ ಸುಗಮವಾಗಿ ಆಗುತ್ತದೆ. ಸರಕಾರದವರೇ ಬೈರಮಂಗಲದಲ್ಲಿ144 ಸೆಕ್ಷನ್ ಹಾಕಲು ಹೊರಟಿದ್ದಾರೆ. ನಾವೇನೂ ಗಲಾಟೆ ಮಾಡಲು ಹೋಗುತ್ತಿಲ್ಲ ಎಂದು ಸಚಿವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಕೆಲ ರೈತರು ಭೂಮಿ ಕೊಡಲು ಒಪ್ಪಿರಬಹುದು. ಬಹು ಪ್ರಮಾಣದ ರೈತರು ಭೂಮಿ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅವರಲ್ಲಿ ಎಲ್ಲಾ ಮಾಹಿತಿಯು ಇದೆ. ಆದರೆ ಸರ್ಕಾರದವರು ಎಲ್ಲರ ಮೇಲೆಯೂ ಗದ ಪ್ರಹಾರ ನಡೆಸಲು ಹೋಗುತ್ತಿದ್ದಾರೆ. ಇದು ಸರಿಯಾದ ಕ್ರಮ ಅಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಡೇ ಕೇರ್‌ನಲ್ಲಿ ಬೆಚ್ಚಿಬೀಳಿಸಿದ ನಿರ್ಲಕ್ಷ್ಯ: 2 ವರ್ಷದ ಮಗುವನ್ನು 25 ಬಾರಿ ಕಚ್ಚಿದ ಮತ್ತೊಂದು ಮಗು

ನವದೆಹಲಿ: ಡೇ ಕೇರ್ ಕೇಂದ್ರದ ನಿರ್ಲಕ್ಷ್ಯದಿಂದ 2 ವರ್ಷದ ಮಗುವೊಂದು ಮತ್ತೊಂದು ಮಗುವಿನ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿರುವ ಬೆಚ್ಚಿಬೀಳಿಸುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ನಡೆದಿದೆ. ಸುಮಾರು 15 ನಿಮಿಷಗಳ ಅವಧಿಯಲ್ಲಿ ಮಗುವಿಗೆ 25 ಬಾರಿ ಕಚ್ಚಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಜೂನ್ 22ರಂದು ಸಿಐಡಿಸಿಒ ಪ್ರದೇಶದ ಫಸ್ಟ್‌ಕ್ರೈ ಇಂಟೆಲ್ಲಿಟಾಟ್ಸ್ ಪ್ರೀ-ಸ್ಕೂಲ್‌ನ ಡೇ ಕೇರ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 10.30ರ ಸುಮಾರಿಗೆ ವಕೀಲೆಯಾಗಿರುವ ತಾಯಿ ತಮ್ಮ 2 ವರ್ಷದ ಮಗುವನ್ನು ಡೇ ಕೇರ್‌ಗೆ ಬಿಟ್ಟು ತೆರಳಿದ್ದರು.

ಸ್ವಲ್ಪ ಸಮಯದ ಬಳಿಕ ಒಂದು ಮಗು ಹೊರಗೆ ಹೋಗಲು ಯತ್ನಿಸಿದಾಗ ಆರೈಕೆ ಸಿಬ್ಬಂದಿ ಅದನ್ನು ಹೊರಗೆ ಕರೆದುಕೊಂಡು ಹೋಗಿ, ಉಳಿದ ಮೂವರು ಮಕ್ಕಳನ್ನು ಕೋಣೆಯೊಳಗೆ ಲಾಕ್ ಮಾಡಿ ಬಾಗಿಲು ಮುಚ್ಚಿದ್ದಾರೆ. ಕೋಣೆಯಲ್ಲಿ ಯಾವುದೇ ಶಿಕ್ಷಕಿ ಅಥವಾ ಸಿಬ್ಬಂದಿ ಇರದ ಕಾರಣ ಮಕ್ಕಳು ಭಯದಿಂದ ಅಳತೊಡಗಿದ್ದಾರೆ.

ಈ ವೇಳೆ ಒಂದು ಮಗು ಮತ್ತೊಂದು ಮಗುವನ್ನು ಪದೇ ಪದೇ ಕಚ್ಚಿದ್ದು, ಸಿಸಿಟಿವಿ ದೃಶ್ಯದಲ್ಲಿ ಸುಮಾರು 15 ನಿಮಿಷಗಳಲ್ಲಿ 25 ಬಾರಿ ಕಚ್ಚಿರುವುದು ದಾಖಲಾಗಿದೆ. ಮಗು ನೋವಿನಿಂದ ಅಳುತ್ತಿದ್ದರೂ ಸುಮಾರು 45 ನಿಮಿಷಗಳ ಕಾಲ ಯಾರೂ ಒಳಗೆ ಹೋಗಿ ಪರಿಶೀಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಘಟನೆಯಲ್ಲಿ ಮಗುವಿನ ಮುಖ, ಮೂಗು, ತುಟಿ, ಎದೆ, ಬೆನ್ನು ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಧ್ಯಾಹ್ನ 2 ಗಂಟೆಯವರೆಗೆ ಈ ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡದ ಶಾಲಾ ಆಡಳಿತ, ಮಗು ಸಣ್ಣ ಗಾಯ ಮಾಡಿಕೊಂಡಿದೆ ಎಂದು ಹೇಳಿತ್ತು. ಆದರೆ ಬಟ್ಟೆ ತೆಗೆದು ನೋಡಿದಾಗ ದೇಹದ ಹಲವೆಡೆ ಕಚ್ಚಿದ ಗಾಯಗಳು ಪತ್ತೆಯಾಗಿವೆ.

ಪೋಷಕರ ದೂರಿನ ಮೇರೆಗೆ ಡೇ ಕೇರ್ ಸಿಇಒ, ಇಬ್ಬರು ವ್ಯವಸ್ಥಾಪಕರು, ಪ್ರಾಂಶುಪಾಲೆ ಹಾಗೂ ಆರೈಕೆ ಸಿಬ್ಬಂದಿ ಸೇರಿ ಒಟ್ಟು ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸದಂತೆ 10 ಲಕ್ಷ ರೂ. ಹಾಗೂ ಮೂರು ವರ್ಷ ಉಚಿತ ಶಿಕ್ಷಣದ ಆಫರ್ ನೀಡಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಶಿಕ್ಷಣ ಇಲಾಖೆ ಆರಂಭಿಸಿದ್ದು, ಡೇ ಕೇರ್‌ಗೆ ಅಗತ್ಯ ಪೌರಾಡಳಿತ ಅನುಮತಿ ಇಲ್ಲ ಎಂಬ ಮಾಹಿತಿಯೂ ಬಹಿರಂಗವಾಗಿದೆ. ಆದರೆ ಇದುವರೆಗೆ ಯಾವುದೇ ಬಂಧನವಾಗಿಲ್ಲ.

‘ವಿಜಯವಾಡ ಚಿತ್ರರಂಗದ ಕೇಂದ್ರವಾಗಬೇಕು’: ಬಾಲಯ್ಯ 112 ಮುಹೂರ್ತದಲ್ಲೇ ಇಂಡಸ್ಟ್ರಿ ಭವಿಷ್ಯದ ಕನಸು ಬಿಚ್ಚಿಟ್ಟ ನಂದಮೂರಿ ಬಾಲಕೃಷ್ಣ

ಅಮರಾವತಿ: ನಂದಮೂರಿ ಬಾಲಕೃಷ್ಣ ಅವರ 112ನೇ ಸಿನಿಮಾ ಅಮರಾವತಿಯಲ್ಲಿ ಅದ್ಧೂರಿಯಾಗಿ ಆರಂಭವಾಗಿದ್ದು, ಕೊರಟಾಲ ಶಿವ ನಿರ್ದೇಶನದ ಈ ಚಿತ್ರಕ್ಕೆ ನಾರಾ ಲೋಕೇಶ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕಂದುಲ ದುರ್ಗೇಶ್ ಕ್ಯಾಮೆರಾ ಚಾಲನೆ ನೀಡಿದರೆ, ಬಾಲಯ್ಯ ಪುತ್ರಿ ನಂದಮೂರಿ ತೇಜಸ್ವಿನಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು.

ಇದೇ ಮೊದಲ ಬಾರಿಗೆ ಬಾಲಯ್ಯ-ಕೊರಟಾಲ ಶಿವ ಕಾಂಬಿನೇಷನ್ ಒಂದಾಗಿದ್ದು, ಎಸ್ಎಲ್ವಿ ಸಿನಿಮಾಸ್ ಹಾಗೂ ಯುವಸುಧಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಚೆರುಕುರಿ ಮತ್ತು ಸುಧಾಕರ್ ಮಿಕ್ಕಿಲಿನೇನಿ ಚಿತ್ರ ನಿರ್ಮಿಸುತ್ತಿದ್ದಾರೆ. ‘ಮಿರ್ಚಿ’, ‘ಶ್ರೀಮಂತುಡು’, ‘ಜನತಾ ಗ್ಯಾರೇಜ್’ ಹಾಗೂ ‘ಭರತ್ ಅನೆ ನೇನು’ ಖ್ಯಾತಿಯ ಕೊರಟಾಲ ಶಿವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮುಹೂರ್ತ ಸಮಾರಂಭದಲ್ಲಿ ಮಾತನಾಡಿದ ಬಾಲಯ್ಯ, ಅಭಿಮಾನಿಗಳ ಪ್ರೀತಿ ತಮ್ಮ ದೊಡ್ಡ ಶಕ್ತಿ ಎಂದರು. ನಾರಾ ಲೋಕೇಶ್, ಕಂದುಲ ದುರ್ಗೇಶ್ ಹಾಗೂ ಪುತ್ರಿ ತೇಜಸ್ವಿನಿಗೆ ಧನ್ಯವಾದ ಸಲ್ಲಿಸಿದ ಅವರು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಬೆಂಬಲದೊಂದಿಗೆ ಆಂಧ್ರಪ್ರದೇಶದಲ್ಲಿ ಚಲನಚಿತ್ರೋದ್ಯಮವನ್ನು ಮತ್ತಷ್ಟು ಬೆಳೆಸುವ ಸಂಕಲ್ಪ ವ್ಯಕ್ತಪಡಿಸಿದರು.

ವಿಜಯವಾಡ ಚಿತ್ರರಂಗದ ಪ್ರಮುಖ ಕೇಂದ್ರವಾಗಿ ಬೆಳೆಯುವ ಸಾಮರ್ಥ್ಯ ಹೊಂದಿದೆ. ಸಿನಿಮಾ ಉದ್ಯಮದ ಜೊತೆಗೆ ಮನೋರಂಜನೆ ಮತ್ತು ಪ್ರವಾಸೋದ್ಯಮ ಮೂಲಸೌಕರ್ಯವನ್ನೂ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ. ಎನ್‌ಟಿಆರ್ ಹಾಗೂ ಎಎನ್‌ಆರ್ ಜನಿಸಿದ ನೆಲದಲ್ಲಿ ಚಿತ್ರರಂಗ ಮತ್ತಷ್ಟು ವಿಸ್ತರಿಸಬೇಕು ಎಂಬುದು ನಮ್ಮ ಕನಸು ಎಂದು ಹೇಳಿದರು.

ಸದ್ಯ ಗೋಪಿಚಂದ್ ಮಲಿನೇನಿ ನಿರ್ದೇಶನದ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿರುವ ಬಾಲಯ್ಯ, ಕಾಕಿನಾಡ ವೇಳಾಪಟ್ಟಿ ಮುಗಿದ ಬಳಿಕ ಕೊರಟಾಲ ಶಿವ ನಿರ್ದೇಶನದ ಹೊಸ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಗಾಯಗೊಂಡ ತಾತನತ್ತ ನೋಡುತ್ತಿದ್ದ 16 ವರ್ಷದ ಬಾಲಕನಿಗೆ ಕಾರು ಢಿಕ್ಕಿ: ಗಂಭೀರ ಗಾಯ

0

ಹಾಸನ: ಒಂದೇ ಕುಟುಂಬಕ್ಕೆ ಕೆಲವೇ ಕ್ಷಣಗಳ ಅಂತರದಲ್ಲಿ ಎರಡು ಆಘಾತಗಳು ಎದುರಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳೆಗದ್ದೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಅಜ್ಜನನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ 16 ವರ್ಷದ ಮೊಮ್ಮಗನಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದೆ.

ಭವಿಷ್ ಎಂಬ ಬಾಲಕನ ಅಜ್ಜ ಸಿದ್ದರಾಜು ಅವರಿಗೆ ಬೈಕ್ ಡಿಕ್ಕಿಯಾಗಿ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ತಾತನತ್ತ ನೋಡುತ್ತಾ ನಿಂತಿದ್ದ ಭವಿಷ್‌ಗೆ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಬಳಿಕ ಚಾಲಕ ವಾಹನ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.