ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ನಿತ್ಯದ ಪಠ್ಯದ ಜತೆಗೆ ಉತ್ತಮ ಸಂಸ್ಕಾರ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ನಂದಿಪುರ ಪುಣ್ಯಕ್ಷೇತ್ರದ ಡಾ. ಮಹೇಶ್ವರ ಸ್ವಾಮೀಜಿ ಹೇಳಿದರು.
ತಾಲೂಕಿನ ನಂದಿಪುರ ಪುಣ್ಯಕ್ಷೇತ್ರದ ಶ್ರೀ ಗುರು ಚರಂತೇಶ್ವರ ಶಾಲೆಯಲ್ಲಿ ಆಯೋಜಿಸಿದ್ದ ಕೃಷ್ಣ ಜನ್ಮಾಷ್ಟಮಿ ಹಾಗೂ ವಾರದ ಸಭೆಯಲ್ಲಿ ಸಾನ್ನಿಧ್ಯ ವಹಿಸಿ, ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಜ್ಞಾನಕ್ಕೆ ಮಾತ್ರ ಸೀಮಿತವಾಗದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಬೆಳೆಸಿಕೊಳ್ಳಬೇಕು. ಇವು ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ ಎಂದರು.
ತಾಲೂಕು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ನಾಯ್ಕ ಮಾತನಾಡಿ, ಪ್ರತಿಯೊಬ್ಬ ಮಗುವಿನಲ್ಲೂ ಪ್ರತಿಭೆಯಿದ್ದು, ಶಾಲಾ ಹಂತದಲ್ಲಿಯೇ ಅದನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಸಂಪನ್ಮೂಲ ವ್ಯಕ್ತಿ ಪರಮೇಶ್ವರಯ್ಯ ಸೊಪ್ಪಿಮಠ, ಶಿಕ್ಷಣ ಸಂಯೋಜಕರಾದ ಶಿವಲಿಂಗಸ್ವಾಮಿ, ಗುರುಬಸವರಾಜ, ಮುಖ್ಯಗುರು ವೀರೇಶ ಬಸೆಟ್ಟಿ, ಮುಖಂಡ ಅಲ್ಲಾಭಕ್ಷಿ, ಶಾಲಾ ಆಡಳಿತಾಧಿಕಾರಿ ಕೊಟ್ರದೇವರು, ಪಾಲಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶ್ರೀಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟ ವಿದ್ಯಾರ್ಥಿಗಳು ಗಮನ ಸೆಳೆದರು. ಹನುಮಾನ್ ಚಾಲೀಸಾ ಪಠಣ, ನೃತ್ಯ ಹಾಗೂ ಭಾಷಣದ ಮೂಲಕ ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸಿದರು. ರಾಧಾ-ಕೃಷ್ಣ ವೇಷಭೂಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿನಿಯರಾದ ಮಾನಸ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶಂಕರಗೌಡ ಸ್ವಾಗತಿಸಿದರು. ಹೆಚ್.ಎಂ. ನಚಿಕೇತ ಸ್ವಾಮಿ ವಂದಿಸಿದರು. ಶಿವಮಣಿ ನಿರ್ವಹಿಸಿದರು. ಕೃಷ್ಣನ ವೇಷಧಾರಿ ಮಹಮ್ಮದ್ ಅಪ್ಜಲ್ ಅವರಿಂದ ನಡೆದ ಬೆಣ್ಣೆ ಗಡಿಗೆ ಒಡೆಯುವ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಗಿತ್ತು.
ಪಠ್ಯಜ್ಞಾನ ವಿದ್ಯಾರ್ಥಿಯ ಬುದ್ಧಿಯನ್ನು ಬೆಳೆಸಿದರೆ, ಸಂಸ್ಕಾರ ಮತ್ತು ಪಠ್ಯೇತರ ಚಟುವಟಿಕೆಗಳು ಅವರ ವ್ಯಕ್ತಿತ್ವವನ್ನು ರೂಪಿಸುತ್ತವೆ. ಎರಡಕ್ಕೂ ಸಮಾನ ಆದ್ಯತೆ ದೊರೆತಾಗಲೇ ಸಮಗ್ರ ಬೆಳವಣಿಗೆ ಸಾಧ್ಯ.
— ಡಾ. ಮಹೇಶ್ವರ ಸ್ವಾಮೀಜಿ

