Home Blog

Crime News: ಕುಡಿತದ ಚಟಕ್ಕೆ ದಾಸನಾಗಿದ್ದ ಮಗನನ್ನೇ ಕೊಲೆಗೈದ ಹೆತ್ತ ತಾಯಿ!

0

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮನಕಲಕುವ ಘಟನೆ ನಡೆದಿದೆ.

ಕುಡಿತದ ಚಟಕ್ಕೆ ಬಿದ್ದು ನಿರಂತರವಾಗಿ ತಾಯಿಗೆ ಕಿರುಕುಳ ನೀಡುತ್ತಿದ್ದ ಮಗನನ್ನೇ ಹೆತ್ತ ತಾಯಿಯೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.

ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ ರಮೇಶ್ (43) ಮೃತ ವ್ಯಕ್ತಿಯಾಗಿದ್ದು, ಈತನನ್ನು ಕೊಲೆ ಮಾಡಿದವರು ತಾಯಿ ಮಂಜುಳಾ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜುಳಾ ಬೇರೆಯವರ ಮನೆಗಳಲ್ಲಿ ಕೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದರು.

ಮಗ ರಮೇಶ್‌ಗೆ ಕುಡಿತದ ಚಟವಿದ್ದು, ಕೆಲಸಕ್ಕೂ ಹೋಗದೆ ಪ್ರತಿದಿನ ಕುಡಿಯಲು ಹಣಕ್ಕಾಗಿ ತಾಯಿಯನ್ನು ಪೀಡಿಸುತ್ತಿದ್ದ. ಈ ಕಾರಣದಿಂದ ಮನೆಯಲ್ಲಿ ನಿರಂತರವಾಗಿ ತಾಯಿ-ಮಗನ ನಡುವೆ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಘಟನೆಯ ದಿನ ತಾಯಿ ಮಂಜುಳಾ ಮಗನನ್ನು ಚಾಮುಂಡಿ ಬೆಟ್ಟದ ತಪ್ಪಲಿಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಗಲಾಟೆ ವಿಕೋಪಕ್ಕೆ ತಲುಪಿದಾಗ, ತಾಯಿ ಅಲ್ಲಿದ್ದ ಕಲ್ಲಿನಿಂದ ಮಗನ ತಲೆಗೆ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಸಿಕ್ಕ ನಂತರ ನಜರ್‌ಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಿದ್ದಾರೆ. ಬಳಿಕ ತಾಯಿ ಮಂಜುಳಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಕುಟುಂಬ ಸಂಬಂಧಗಳು ಹಾಗೂ ಕುಡಿತದ ಚಟದಿಂದ ಉಂಟಾಗುವ ಭೀಕರ ಪರಿಣಾಮಗಳ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದೆ.

IPL ಇತಿಹಾಸದಲ್ಲಿ ಹೊಸ ದಾಖಲೆ: ಅತಿದೊಡ್ಡ ಗುರಿ ಬೆನ್ನಟ್ಟಿ ಡೆಲ್ಲಿ ಮಣಿಸಿದ ಪಂಜಾಬ್!

0

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2026 ರ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇತಿಹಾಸ ಸೃಷ್ಟಿಸಿದೆ.

ಡೆಲ್ಲಿಯ 265 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್, ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಭಾರೀ ಮೊತ್ತ ಪೇರಿಸಿತು. ಕೆಎಲ್ ರಾಹುಲ್ ಅಬ್ಬರದ ಶತಕ ಸಿಡಿಸಿ 67 ಎಸೆತಗಳಲ್ಲಿ 152 ರನ್ ಗಳಿಸಿದರು. ನಿತೀಶ್ ರಾಣಾ 44 ಎಸೆತಗಳಲ್ಲಿ 91 ರನ್ ಗಳಿಸಿ ಭರ್ಜರಿ ಜೊತೆಯಾಟ ನೀಡಿದರು. ಈ ಇಬ್ಬರೂ ಸೇರಿ 200ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ಆಡಿದರು.

ಸವಾಲಿನ 265 ರನ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭದಲ್ಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಪ್ರಭುಸಿಮ್ರಾನ್ ಸಿಂಗ್ 26 ಎಸೆತಗಳಲ್ಲಿ 76 ರನ್ ಹಾಗೂ ಪ್ರಿಯಾಂಶ್ ಆರ್ಯ 17 ಎಸೆತಗಳಲ್ಲಿ 43 ರನ್ ಗಳಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು.

ಮಧ್ಯದ ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡರೂ, ನಾಯಕ ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು 36 ಎಸೆತಗಳಲ್ಲಿ 71 ರನ್ ಸಿಡಿಸಿ ತಂಡವನ್ನು ಗೆಲುವಿನ ದಡಕ್ಕೆ ಕರೆದೊಯ್ದರು. ಕೂಪರ್ ಕೊನೊಲಿ 27 ರನ್ ಮತ್ತು ನೆಹಲ್ ವದೇರಾ 25 ರನ್ ಗಳಿಸಿ ಬೆಂಬಲ ನೀಡಿದರು.

ಪಂಜಾಬ್ ಕಿಂಗ್ಸ್ 18.5 ಓವರ್‌ಗಳಲ್ಲಿ 265 ರನ್ ಗಳಿಸಿ 7 ಎಸೆತಗಳು ಬಾಕಿ ಇರುವಾಗಲೇ ಗೆಲುವು ಸಾಧಿಸಿತು.

ಡೆಲ್ಲಿ ಪರ ಕುಲ್‌ದೀಪ್ ಯಾದವ್ 2 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ಮತ್ತು ವಿಪ್ರಜ್ ನಿಗಮ್ ತಲಾ ಒಂದು ವಿಕೆಟ್ ಪಡೆದರು. ಪಂಜಾಬ್ ಪರ ಅರ್ಶದೀಪ್ ಸಿಂಗ್ ಮತ್ತು ಕ್ಸೇವಿಯರ್ ಬಾರ್ಟ್ಲೆಟ್ ತಲಾ ಒಂದು ವಿಕೆಟ್ ಕಿತ್ತರು.

ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ರನ್ ಚೇಸ್ ಸಾಧಿಸಿದ ಪಂದ್ಯವಾಗಿ ಹೊಸ ದಾಖಲೆ ನಿರ್ಮಿಸಿದೆ.

ಬಳ್ಳಾರಿ| ಭೀಕರ ಅಗ್ನಿ ಅವಘಡಕ್ಕೆ ಮೂರು ಗಣಿಗಾರಿಕೆ ಲಾರಿಗಳು ಸುಟ್ಟು ಭಸ್ಮ

ಬಳ್ಳಾರಿ: ಜಿಲ್ಲೆಯ ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಸೀನ್ ಬಸಪ್ಪ ಕ್ಯಾಂಪಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಗಣಿಗಾರಿಕೆ ಲಾರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಸ್ಥಳದಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ ಹಾರಿದ ಕಿಡಿ ಸಮೀಪದಲ್ಲಿದ್ದ ಲಾರಿಯ ಡೀಸೆಲ್ ಟ್ಯಾಂಕ್‌ಗೆ ತಗುಲಿದೆ. ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ವೇಗವಾಗಿ ಹಬ್ಬಿ ಮೂರು ಲಾರಿಗಳನ್ನು ಆವರಿಸಿಕೊಂಡಿದೆ.

ಬೆಂಕಿಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಲಾರಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು.

ಈ ಘಟನೆಯಲ್ಲಿ ಮೂವರು ಚಾಲಕರು ಹಾಗೂ ವೆಲ್ಡಿಂಗ್ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಸಂಡೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಗ್ನಿ ಅವಘಡದ ನಿಖರ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಪಾರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಮತಾ ಬ್ಯಾನರ್ಜಿ ವಿಫಲ: ಅಮಿತ್ ಶಾ ವಾಗ್ದಾಳಿ!

0

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಎರಡನೇ ಹಂತದ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮಾಲ್ಪುರದಲ್ಲಿ ರ್ಯಾಲಿಯನ್ನು ನಡೆಸಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, “ಕಳೆದ 15 ವರ್ಷಗಳಲ್ಲಿ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆ ಗಂಭೀರವಾಗಿ ಕುಸಿದಿದೆ. ಆರ್‌ಜಿ ಕರ್, ಸಂದೇಶಖಾಲಿ, ಕೊಲ್ಕತ್ತಾ ಕಾನೂನು ಕಾಲೇಜು ಹಾಗೂ ದುರ್ಗಾಪುರ ಕಾಲೇಜು ಸೇರಿದಂತೆ ಹಲವಾರು ಘಟನೆಗಳು ರಾಜ್ಯದ ಸ್ಥಿತಿಯನ್ನು ತೋರಿಸುತ್ತವೆ” ಎಂದು ಆರೋಪಿಸಿದರು.

“ಮಮತಾ ದೀದಿ ಮಹಿಳೆಯರಿಗೆ ಸಂಜೆ 7 ಗಂಟೆಯ ನಂತರ ಮನೆಗಳಿಂದ ಹೊರಗೆ ಹೋಗಬೇಡಿ ಎಂದು ಹೇಳಿರುವುದು ದುರದೃಷ್ಟಕರ. ಆದರೆ ಬಿಜೆಪಿ ಅಧಿಕಾರದಲ್ಲಿರುವ ಯಾವುದೇ ರಾಜ್ಯದಲ್ಲಿ ಮಹಿಳೆಯರ ಮೇಲೆ ಇಂತಹ ನಿರ್ಬಂಧವಿಲ್ಲ. ಮೇ 5 ನಂತರ ಬಂಗಾಳದಲ್ಲಿ ಮಹಿಳೆಯರು ಭಯವಿಲ್ಲದೆ ಹೊರಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದು ಭರವಸೆ ನೀಡಿದರು.

ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ ಅವರು, “ಯಾವುದೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಮೊದಲ ಹಂತದ ಮತದಾನದ ಫಲಿತಾಂಶದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅಮಿತ್ ಶಾ, ಬಿಜೆಪಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಜೊತೆಗೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೆ ತರುವುದಾಗಿ ಪುನರುಚ್ಚರಿಸಿದ್ದಾರೆ.

ಉತ್ತರಹಳ್ಳಿಯಲ್ಲಿ ಭೀಕರ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!

ಬೆಂಗಳೂರು: ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು 21 ವರ್ಷದ ಸಿರಿಶಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಪಕ್ಕದಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಸಿರಿಶಾ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು, ತಲೆ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಧಾವಿಸಿ ಮೃತದೇಹವನ್ನು ಆರ್‌ಆರ್ ನಗರ ಮೆಡಿಕಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಸ್ ಚಾಲಕ ಚಂದ್ರು ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ಉಂಟಾಗಿದೆ.

ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ ಕುಸಿತ: ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ!

ಮಂಗಳೂರು: ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದ್ದು, ಕರಾವಳಿ ನಗರ ಮಂಗಳೂರಲ್ಲಿಯೂ ನೀರಿನ ಬಿಕ್ಕಟ್ಟು ಎದುರಾಗಿದೆ.

ಮಂಗಳೂರು ನಗರಕ್ಕೆ ನೀರು ಪೂರೈಸುವ ಪ್ರಮುಖ ಮೂಲವಾದ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಪ್ರಸ್ತುತ ಡ್ಯಾಂನ ನೀರಿನ ಮಟ್ಟ 4.53 ಮೀಟರ್‌ಗೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಮೇ 1ರಿಂದ ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವ ರೇಷನಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ. ಸುಮಾರು 5.5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿರುವ ಮಂಗಳೂರು ನಗರಕ್ಕೆ ಪ್ರತಿ ದಿನ ಸರಾಸರಿ 160 ಎಂಎಲ್‌ಡಿ ನೀರು ಪೂರೈಕೆ ಮಾಡಲಾಗುತ್ತಿತ್ತು. ಆದರೆ ಹೊಸ ವ್ಯವಸ್ಥೆಯಿಂದ ದಿನಕ್ಕೆ ಸುಮಾರು 40–50 ಎಂಎಲ್‌ಡಿ ನೀರು ಉಳಿಸಿಕೊಳ್ಳುವ ನಿರೀಕ್ಷೆ ಇದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಎಎಂಆರ್ ಹಾಗೂ ಬಿಳಿಯೂರು ಡ್ಯಾಂಗಳಲ್ಲಿ ಇರುವ ನೀರಿನ ಸಂಗ್ರಹ ಹಾಗೂ ಕೆಳಭಾಗದ ನೀರನ್ನು ಮತ್ತೆ ಪಂಪ್ ಮಾಡುವ ಮೂಲಕ ಜೂನ್ ಮೊದಲ ವಾರದವರೆಗೆ ನೀರಿನ ಪೂರೈಕೆಯನ್ನು ನಿರ್ವಹಿಸಬಹುದು. ಆದರೆ ಅದರವರೆಗೆ ಜಾಗೃತವಾಗಿ ನೀರನ್ನು ಬಳಕೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಮಹಾನಗರ ಪಾಲಿಕೆ ಗಾರ್ಡನಿಂಗ್, ವಾಹನ ತೊಳೆಯುವುದು ಸೇರಿದಂತೆ ಅನಗತ್ಯ ನೀರಿನ ಬಳಕೆಯನ್ನು ತಪ್ಪಿಸುವಂತೆ ಸೂಚನೆ ನೀಡಿದೆ. ಜೂನ್ ವೇಳೆಗೆ ಮುಂಗಾರು ಮಳೆ ಆರಂಭವಾದರೆ ಸಮಸ್ಯೆ ತಾತ್ಕಾಲಿಕವಾಗಿ ನಿವಾರಣೆಯಾಗುವ ನಿರೀಕ್ಷೆಯಿದೆ.

ದೇವಸ್ಥಾನ ಹುಂಡಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 1.5 ಲಕ್ಷ ರೂ. ವಶಕ್ಕೆ

0

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 20ರಂದು ಬೆಳಿಗ್ಗೆ ದೇವಸ್ಥಾನದ ಹೊರ ಪೌಳಿಯಿಂದ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯೊಬ್ಬನು ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ. ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ್ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬೈಕ್, ಮೂರು ಮೊಬೈಲ್ ಫೋನ್‌ಗಳು ಹಾಗೂ ದೇವಸ್ಥಾನದ ಕಾಣಿಕೆ ಹುಂಡಿಯೊಂದಿಗೆ ಒಟ್ಟು ಅಂದಾಜು 1.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಒಳಮೀಸಲಾತಿ ನಿರ್ಧಾರಕ್ಕೆ ವಿರೋಧ: ದಲಿತರಿಗೆ ನ್ಯಾಯ ಸಿಗುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಟೀಕೆ

ಬೆಂಗಳೂರು: ರಾಜ್ಯ ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ನಿರ್ಧಾರವು ಕೇವಲ ಕಣ್ಣೊರೆಸು ತಂತ್ರವಾಗಿದ್ದು, ಇದರಿಂದ ದಲಿತ ಸಮುದಾಯಗಳಿಗೆ ಸಮರ್ಪಕ ನ್ಯಾಯ ಸಿಗುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಟೀಕೆ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರ ಅವೈಜ್ಞಾನಿಕವಾಗಿದ್ದು, ದಲಿತ ಸಮುದಾಯವನ್ನು ಇನ್ನಷ್ಟು ಗೊಂದಲಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದರು.

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ‘ಜನರಲ್ ಎಸ್ಸಿ’ ಎಂದು ಕರೆಯುವುದರಿಂದ ಅದು ಒಳಮೀಸಲಾತಿ ಆಗುವುದಿಲ್ಲ. ಇದು ಕೇವಲ ಗೊಂದಲ ಸೃಷ್ಟಿಸುವ ಪ್ರಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಳಮೀಸಲಾತಿ ಜಾರಿಗೆ ತರುವುದಕ್ಕೆ ಸರ್ಕಾರಕ್ಕೆ ಮೂರು ವರ್ಷ ಬೇಕಾಗಿಲ್ಲ.

ಈ ಪ್ರಕ್ರಿಯೆಯನ್ನು ಮೂರೇ ತಿಂಗಳಲ್ಲಿ ಪೂರ್ಣಗೊಳಿಸಬಹುದಾಗಿತ್ತು. ಯುವ ಹೋರಾಟಗಾರರ ಒತ್ತಡದಿಂದ ತಪ್ಪಿಸಿಕೊಳ್ಳಲು ಸರ್ಕಾರ ತುರ್ತಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಟೀಕಿಸಿದರು. ಇದೇ ವೇಳೆ, ಸಚಿವ ಸಂಪುಟ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಜರಾಗಿರಲಿಲ್ಲ ಎಂಬುದನ್ನು ಉಲ್ಲೇಖಿಸಿದ ಅವರು,

ಈ ನಿರ್ಧಾರ ತೃಪ್ತಿಕರವಾಗಿಲ್ಲ ಎಂಬುದು ಅವರಿಗೆ ತಿಳಿದಿತ್ತು ಎಂದು ಹೇಳಿದರು. ಸಚಿವ ಮುನಿಯಪ್ಪ ಅವರಿಗೆ ‘ಸಂತೋಷದಿಂದ ಮಾತನಾಡಿ’ ಎಂದು ಮುಖ್ಯಮಂತ್ರಿಗಳು ಸೂಚಿಸಿರುವುದರಿಂದಲೇ ಕಾಂಗ್ರೆಸ್‌ನ ದಲಿತ ನಾಯಕರಿಗೂ ಈ ನಿರ್ಧಾರದ ಬಗ್ಗೆ ಅಸಮಾಧಾನವಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರು ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಳಿಕ ಸಚಿವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಶ್ವಾಸಕೋಶ ಪ್ರತಿರೋಪಣ (ಟ್ರಾನ್ಸ್‌ಪ್ಲಾಂಟ್) ನಡೆಸಲು ಮೆದಳು ಪ್ರಜ್ಞೆಯಲ್ಲಿರುವುದು ಅಗತ್ಯವಾಗಿದ್ದು, ಈ ಕುರಿತು ವೈದ್ಯರು ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಸಚಿವರ ಕುಟುಂಬದವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಸಿಎಂ, ಸುಧಾಕರ್ ಅವರ ಇತರೆ ಅಂಗಾಂಗಗಳು ವೆಂಟಿಲೇಟರ್ ನೆರವಿನಿಂದ ಸ್ಥಿರವಾಗಿವೆ. ಆದರೆ ಮೆದಳಿನ ಪ್ರಜ್ಞೆ ಇನ್ನೂ ಮರಳಿಲ್ಲ. ನಾಳೆ ಸಿಟಿ ಸ್ಕ್ಯಾನ್ ನಡೆಸಿ ಮುಂದಿನ ಚಿಕಿತ್ಸಾ ಕ್ರಮವನ್ನು ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು. ಹೆಚ್ಚಿನ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ “ಐ ಎಮ್ ನಾಟ್ ಎ ಡಾಕ್ಟರ್” ಎಂದು ಹೇಳಿ ಸಿಎಂ ತೆರಳಿದರು.

ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ, ಹಠಾತ್ತನೆ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಹಿನ್ನೆಲೆಯಲ್ಲಿ, ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿತ್ತು.

ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮರಾಠಿಗೆ ಆದ್ಯತೆ ಬೇಕು, ಆದರೆ ಹಿಂಸಾಚಾರಕ್ಕೆ ಅವಕಾಶವಿಲ್ಲ: ದೇವೇಂದ್ರ ಫಡ್ನವೀಸ್ ಖಡಕ್ ಎಚ್ಚರಿಕೆ

0

ಮುಂಬೈ: ರಾಜ್ಯದಲ್ಲಿ ಮರಾಠಿ ಭಾಷೆಗೆ ಆದ್ಯತೆ ನೀಡುವುದು ಅಗತ್ಯವಾದರೂ, ಅದರ ಹೆಸರಿನಲ್ಲಿ ಯಾವುದೇ ರೀತಿಯ ಹಿಂಸಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ.

ಮುಂಬೈ ಸಮೀಪದ ಥಾಣೆ ಪ್ರದೇಶದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಚೇರಿ ಬಳಿ ಮರಾಠಿಯೇತರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳನ್ನು ಅಳವಡಿಸಿರುವ ಹಿನ್ನೆಲೆ ಉಂಟಾದ ಉದ್ವಿಗ್ನ ಪರಿಸ್ಥಿತಿಗೆ ಪ್ರತಿಕ್ರಿಯೆ ನೀಡಿದ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಮುಂಬೈನಂತಹ ಮಹಾನಗರಗಳು ಹಾಗೂ ರಾಜ್ಯದಾದ್ಯಂತ ಮರಾಠಿ ಭಾಷೆಯ ಪ್ರಚಾರ ಮಾಡುವುದು ತಪ್ಪಲ್ಲ. ಆದರೆ, ಅದನ್ನು ಜವಾಬ್ದಾರಿಯುತವಾಗಿ ನಡೆಸಬೇಕು. ಭಾಷೆ ತಿಳಿಯದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತರಬೇತಿ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ತಿಳಿಸಿದ್ದಾರೆ. ಭಾಷೆಯ ಹೆಸರಿನಲ್ಲಿ ಬಲವಂತ ಅಥವಾ ಹಿಂಸಾಚಾರಕ್ಕೆ ತೊಡಗುವುದು ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಮೇ 1ರಿಂದ ರಾಜ್ಯದಾದ್ಯಂತ ಆಟೋ ಮತ್ತು ಟ್ಯಾಕ್ಸಿ ಚಾಲಕರ ಮರಾಠಿ ಪ್ರಾವೀಣ್ಯತೆ ಮೌಲ್ಯಮಾಪನ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.

ಮರಾಠಿಯೇತರ ಚಾಲಕರಿಗೆ ಭಾಷಾ ತರಬೇತಿ ನೀಡಲು ಸರ್ಕಾರ ಕೊಂಕಣ ಮರಾಠಿ ಸಾಹಿತ್ಯ ಪರಿಷತ್ ಮತ್ತು ಮುಂಬೈ ಮರಾಠಿ ಸಾಹಿತ್ಯ ಸಂಘದಂತಹ ಸಂಸ್ಥೆಗಳೊಂದಿಗೆ ಕೈಜೋಡಿಸಿದೆ.

ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ, ಮೂಲ ಮರಾಠಿ ಭಾಷೆಯನ್ನು ಅರ್ಥಮಾಡಿಕೊಳ್ಳುವ ಹಾಗೂ ಮಾತನಾಡುವ ಸಾಮರ್ಥ್ಯದ ಆಧಾರದ ಮೇಲೆ ಚಾಲಕರನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಹತೆ ಪಡೆದವರಿಗೆ ಪ್ರಮಾಣಪತ್ರ ನೀಡಲಾಗುತ್ತದೆ.

error: Content is protected !!