ಮಂಗಳೂರು: ನ್ಯಾಯಾಲಯದ ವಾರಂಟ್ಗಳನ್ನು ಲೆಕ್ಕಿಸದೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ ಪೊಲೀಸರ ಕಣ್ಣಿಗೆ ಮಣ್ಣೆರಚಲು ಬುರ್ಖಾ ಧರಿಸಿ ಮಹಿಳೆಯ ಸೋಗಿನಲ್ಲಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಅಲಿಯಾಸ್ ‘ಸುರ್ಮೋ ಇಮ್ರಾನ್’ನನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಇಮ್ರಾನ್ ವಿರುದ್ಧ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದ ಈತನ ಪತ್ತೆಗೆ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು.
ತನಿಖೆ ವೇಳೆ ಆರೋಪಿ ಮಹಿಳೆಯರ ಬುರ್ಖಾ ಧರಿಸಿ ಸಂಚರಿಸುವ ಮೂಲಕ ಪೊಲೀಸರ ಗಮನ ತಪ್ಪಿಸುತ್ತಿದ್ದ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ದಾಖಲೆಗಳ ಪ್ರಕಾರ, ಉಳ್ಳಾಲ ಠಾಣೆಯ ಎರಡು ಕೊಲೆ ಯತ್ನ ಪ್ರಕರಣಗಳು, ಬರ್ಕೆ ಠಾಣೆಯ ಎರಡು ಗಲಭೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣಗಳು ಮತ್ತು ಮಂಗಳೂರು ಗ್ರಾಮಾಂತರ ಠಾಣೆಯ ಡಕಾಯಿತಿ ಪ್ರಕರಣ ಸೇರಿದಂತೆ ಐದು ಪ್ರಮುಖ ಪ್ರಕರಣಗಳಲ್ಲಿ ಆರೋಪಿಯ ವಿರುದ್ಧ ನ್ಯಾಯಾಲಯದ ವಾರಂಟ್ಗಳು ಜಾರಿಯಾಗಿದ್ದವು.
ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಬಂಧನವನ್ನು ದೃಢಪಡಿಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

