ಗದಗ: ಜಿಲ್ಲೆಯಲ್ಲಿನ ರೌಡಿಶೀಟರ್ಗಳು ಹಾಗೂ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿರಂತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಗಡಿಪಾರುಗೊಂಡವರನ್ನು ಮೈನುದ್ದೀನ್, ಫಕ್ರುಸಾಬ್ ಹಾಗೂ ಹಾಲಪ್ಪ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಹಲವು ಗಂಭೀರ ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ದಾಖಲೆಗಳಿಂದ ಬಹಿರಂಗವಾಗಿದೆ.
ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್
ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ, ಆರೋಪಿಗಳು ಕೊಲೆ ಯತ್ನ, ಗಲಭೆ, ಸಾರ್ವಜನಿಕ ಆಸ್ತಿ ಹಾನಿ, ಜೀವ ಬೆದರಿಕೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಅನೇಕ ಬಾರಿ ಪ್ರಕರಣ ದಾಖಲಾಗಿದ್ದರೂ ತಮ್ಮ ಚಟುವಟಿಕೆಗಳನ್ನು ನಿಲ್ಲಿಸದೇ ಪುನಃ ಅಪರಾಧ ಕೃತ್ಯಗಳಲ್ಲಿ ತೊಡಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆ ಸಮಾಜದ ಶಾಂತಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಗಡಿಪಾರು ಕ್ರಮ ಜಾರಿಗೊಳಿಸಲಾಗಿದೆ.
ಮೈನುದ್ದೀನ್ ವಿರುದ್ಧ 5 ಗಂಭೀರ ಪ್ರಕರಣಗಳು
ಮೈನುದ್ದೀನ್ ವಿರುದ್ಧ 2017ರಿಂದ 2026ರವರೆಗೆ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಗಲಭೆ, ಕೊಲೆ ಯತ್ನ, ದರೋಡೆ, ಸಾರ್ವಜನಿಕ ಆಸ್ತಿ ಹಾನಿ ಹಾಗೂ ಜೀವ ಬೆದರಿಕೆ ಪ್ರಕರಣಗಳಲ್ಲಿ ಈತನ ಹೆಸರು ಕೇಳಿ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಕ್ರುಸಾಬ್ ವಿರುದ್ಧ 10 ಪ್ರಕರಣಗಳು!
ಫಕ್ರುಸಾಬ್ ವಿರುದ್ಧ 2017ರಿಂದ 2025ರವರೆಗೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಗಲಭೆ, ಹಲ್ಲೆ, ಕೊಲೆ ಯತ್ನ ಹಾಗೂ ಸಮಾಜದ ಶಾಂತಿ ಭಂಗಪಡಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪಗಳಿವೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆ ಬದಲಾಗದ ಹಿನ್ನೆಲೆ ಪೊಲೀಸರು ಗಡಿಪಾರು ಅಸ್ತ್ರ ಪ್ರಯೋಗಿಸಿದ್ದಾರೆ.
ಹಾಲಪ್ಪ ವಿರುದ್ಧ 12 ಪ್ರಕರಣಗಳ ಪಟ್ಟಿ!
ಹಾಲಪ್ಪ ವಿರುದ್ಧ ಅತ್ಯಧಿಕವಾಗಿ 12 ಪ್ರಕರಣಗಳು ದಾಖಲಾಗಿವೆ. ಗಲಭೆ, ಬೆದರಿಕೆ, ಸಾರ್ವಜನಿಕ ಆಸ್ತಿ ಹಾನಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಗಳಿವೆ. 2017ರಿಂದ 2025ರವರೆಗೆ ನಿರಂತರವಾಗಿ ಪ್ರಕರಣಗಳು ದಾಖಲಾಗಿರುವುದರಿಂದ ಈತನ ವಿರುದ್ಧವೂ ಕಠಿಣ ಕ್ರಮ ಜಾರಿಯಾಗಿದೆ.
ಅಪರಾಧಿಗಳಿಗೆ ಜಿಲ್ಲೆಯಲ್ಲಿ ಜಾಗ” – ಎಸ್ಪಿ ರೋಹನ್ ಜಗದೀಶ್
ಜಿಲ್ಲೆಯಲ್ಲಿ ಸಮಾಜ ವಿರೋಧಿ ಚಟುವಟಿಕೆಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ. ಸಾರ್ವಜನಿಕ ಶಾಂತಿ ಕದಡುವವರ ವಿರುದ್ಧ ಮುಂದೆಯೂ ಗಡಿಪಾರು ಸೇರಿದಂತೆ ಕಠಿಣ ಕಾನೂನು ಕ್ರಮ ಮುಂದುವರಿಯಲಿದೆ” ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರೋಹನ್ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

