Home Blog

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಗಂಭೀರ; ಮಣಿಪಾಲ್ ಆಸ್ಪತ್ರೆಗೆ ಕುಟುಂಬಸ್ಥರ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ತಂಡ ನಿರಂತರ ನಿಗಾವಹಿಸಿದೆ.

ಮೊನ್ನೆ ಸಂಜೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚೆನ್ನಮ್ಮ ಅವರನ್ನು ತುರ್ತುವಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯದ ಬಗ್ಗೆ ವೈದ್ಯರು ಅಗತ್ಯ ಚಿಕಿತ್ಸೆಯನ್ನು ಮುಂದುವರಿಸಿದ್ದು, ಕುಟುಂಬ ಸದಸ್ಯರು ಆಸ್ಪತ್ರೆಯಲ್ಲೇ ಇದ್ದು ವೈದ್ಯರಿಂದ ಆರೋಗ್ಯದ ಮಾಹಿತಿ ಪಡೆಯುತ್ತಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ ಸೇರಿದಂತೆ ಕುಟುಂಬದ ಪ್ರಮುಖ ಸದಸ್ಯರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ನಡೆಸಿದರು. ಕುಮಾರಸ್ವಾಮಿ ಅವರು ತಾಯಿಯ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.

ಇತ್ತ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೂಡ ಆಸ್ಪತ್ರೆಯ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದು, ಕುಟುಂಬಸ್ಥರು ಹಾಗೂ ಅಭಿಮಾನಿಗಳು ಚೆನ್ನಮ್ಮ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿಯನ್ನು ವೈದ್ಯರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ.

ಕರ್ನಾಟಕಕ್ಕೆ ಅಮೃತ್ ಭಾರತ್ ಯೋಜನೆಯ ಕೊಡುಗೆ: ನವೀಕೃತ ನಾಲ್ಕು ರೈಲು ನಿಲ್ದಾಣಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿಯಲ್ಲಿ ನವೀಕರಣಗೊಂಡಿರುವ ಕರ್ನಾಟಕದ ನಾಲ್ಕು ರೈಲು ನಿಲ್ದಾಣಗಳು ಸೇರಿದಂತೆ ದೇಶದಾದ್ಯಂತ ಒಟ್ಟು 75 ರೈಲು ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ನ ಜಲಂಧರ್ ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ವರ್ಚುವಲ್ ಮೂಲಕ ಉದ್ಘಾಟಿಸಿದರು.

ಸ್ಥಳೀಯ ಸಂಸ್ಕೃತಿ ಮತ್ತು ವಾಸ್ತುಶಿಲ್ಪವನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಈ ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಪ್ರಯಾಣಿಕರಿಗೆ ವಿಶ್ವದರ್ಜೆಯ ಹಾಗೂ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕರ್ನಾಟಕದಲ್ಲಿ ದಕ್ಷಿಣ ಕನ್ನಡದ ಬಂಟ್ವಾಳ, ಕೊಪ್ಪಳ, ಧಾರವಾಡ ಜಿಲ್ಲೆಯ ಅಳ್ನಾವರ ಹಾಗೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ರೈಲು ನಿಲ್ದಾಣಗಳು ಈ ಯೋಜನೆಯಡಿ ನವೀಕರಣಗೊಂಡಿವೆ.

ಸುಮಾರು 15.10 ಕೋಟಿ ರೂಪಾಯಿ ವೆಚ್ಚದಲ್ಲಿ ಬಾದಾಮಿ ರೈಲು ನಿಲ್ದಾಣವನ್ನು ಆಧುನೀಕರಿಸಲಾಗಿದೆ. ಎರಡು ಪ್ಲಾಟ್‌ಫಾರ್ಮ್‌ಗಳಿದ್ದ ನಿಲ್ದಾಣದಲ್ಲಿ ಈಗ ಮೂರು ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಲಾಗಿದೆ. ಟಿಕೆಟ್ ಕೌಂಟರ್‌ಗಳ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಹೆಚ್ಚಿಸಲಾಗಿದ್ದು, ದಿವ್ಯಾಂಗರು ಹಾಗೂ ದೃಷ್ಟಿಹೀನರಿಗಾಗಿ ಪ್ರತ್ಯೇಕ ಟಿಕೆಟ್ ಕೌಂಟರ್ ವ್ಯವಸ್ಥೆ ಕಲ್ಪಿಸಲಾಗಿದೆ.

ಸುಮಾರು 200 ಚದರ ಮೀಟರ್ ವಿಸ್ತೀರ್ಣದ ಹೊಸ ಕಟ್ಟಡ, 12 ಮೀಟರ್ ಅಗಲದ ಪಾದಚಾರಿ ಮೇಲ್ಸೇತುವೆ, ಅಲಂಕೃತ ಮುಂಭಾಗ, ಕುಡಿಯುವ ನೀರಿನ ವ್ಯವಸ್ಥೆ, ದೃಷ್ಟಿಹೀನರಿಗೆ ಸ್ಪರ್ಶ ಮಾರ್ಗ, ವಿಶೇಷ ಶೌಚಾಲಯ, ಕಾಯ್ದಿರಿಸಿದ ಪಾರ್ಕಿಂಗ್, ಎರಡು ಲಿಫ್ಟ್‌ಗಳು, ತಾಯಂದಿರಿಗೆ ಹಾಲುಣಿಸುವ ಕೊಠಡಿ, ಹವಾನಿಯಂತ್ರಿತ ಕಾಯುವ ಕೊಠಡಿ ಸೇರಿದಂತೆ ಒಟ್ಟು ಐದು ನಿರೀಕ್ಷಣಾ ಕೊಠಡಿಗಳು, ಸೋಲಾರ್ ವಿದ್ಯುತ್ ಹಾಗೂ ಉಚಿತ ವೈ-ಫೈ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಅಳ್ನಾವರ ರೈಲು ನಿಲ್ದಾಣದ ಮುಖ್ಯ ಕಟ್ಟಡವನ್ನು ವಿಸ್ತರಿಸಲಾಗಿದ್ದು, ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹೊಸ ಪ್ರವೇಶ ದ್ವಾರ ನಿರ್ಮಿಸಲಾಗಿದೆ. ಸುಮಾರು 4,500 ಚದರ ಮೀಟರ್ ಪ್ರದೇಶದಲ್ಲಿ ವಾಹನ ನಿಲುಗಡೆ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.

ಇಲ್ಲಿ ಡಿಜಿಟಲ್ ಟಿಕೆಟ್ ಕೌಂಟರ್‌ಗಳು, ಹವಾನಿಯಂತ್ರಿತ ಕಾಯುವ ಕೊಠಡಿಗಳು, ಮಹಿಳೆಯರಿಗಾಗಿ ಬೇಬಿ-ಫೀಡಿಂಗ್ ಕೊಠಡಿ, ಎಕ್ಸಿಕ್ಯೂಟಿವ್ ಲೌಂಜ್, ಪ್ಲಾಟ್‌ಫಾರ್ಮ್‌ಗಳಿಗೆ ಸುಧಾರಿತ ರೂಫ್ ಶೆಲ್ಟರ್, ಆಧುನಿಕ ಶೌಚಾಲಯಗಳು, ಎರಡು ಲಿಫ್ಟ್‌ಗಳು, 12 ಮೀಟರ್ ಅಗಲದ ಪಾದಚಾರಿ ಮೇಲ್ಸೇತುವೆ, ದಿವ್ಯಾಂಗರಿಗಾಗಿ ರ್ಯಾಂಪ್ ಹಾಗೂ ಉಚಿತ ಹೈ-ಸ್ಪೀಡ್ ವೈ-ಫೈ ಸೌಲಭ್ಯ ಕಲ್ಪಿಸಲಾಗಿದೆ.

ಸುಮಾರು 21.14 ಕೋಟಿ ರೂಪಾಯಿ ವೆಚ್ಚದಲ್ಲಿ ಕೊಪ್ಪಳ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗಿದೆ. ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸಲು ಜಿ+1 ಮಾದರಿಯ ಹೊಸ ನಿಲ್ದಾಣ ಕಟ್ಟಡ ನಿರ್ಮಿಸಲಾಗಿದ್ದು, ಟಿಕೆಟ್ ಬುಕ್ಕಿಂಗ್ ಕಚೇರಿ, ನಿರೀಕ್ಷಣಾ ಕೊಠಡಿಗಳು ಹಾಗೂ 600 ಚದರ ಮೀಟರ್ ವಿಸ್ತೀರ್ಣದ ಸುತ್ತಾಟ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗಿದೆ.

ಇದಲ್ಲದೆ, ಪ್ಲಾಟ್‌ಫಾರ್ಮ್ ಶೆಲ್ಟರ್, 12 ಮೀಟರ್ ಅಗಲದ ಕೇಂದ್ರ ಪಾದಚಾರಿ ಮೇಲ್ಸೇತುವೆ, ಎರಡು ಲಿಫ್ಟ್‌ಗಳು, ಎರಡು ಎಸ್ಕಲೇಟರ್‌ಗಳು, ಎಲ್‌ಇಡಿ ಬೆಳಕಿನ ವ್ಯವಸ್ಥೆ, ಸುಲಭ್ ಶೌಚಾಲಯ, ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರ, ಹವಾನಿಯಂತ್ರಿತ ಕಾಯುವ ಕೊಠಡಿ, ಡಿಜಿಟಲ್ ಲಾಕರ್ ಹಾಗೂ ಶಿಶು ಆಹಾರ ಕೊಠಡಿ ಸೇರಿದಂತೆ ಹಲವು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಒದಗಿಸಲಾಗಿದೆ.

ಅಮೃತ್ ಭಾರತ್ ಯೋಜನೆಯಡಿ ರೈಲು ನಿಲ್ದಾಣಗಳ ಆಧುನೀಕರಣದಿಂದ ಪ್ರಯಾಣಿಕರಿಗೆ ಉತ್ತಮ ಮೂಲಸೌಕರ್ಯ, ಸುಗಮ ಸೇವೆ ಹಾಗೂ ಸುರಕ್ಷಿತ ಪ್ರಯಾಣದ ಅನುಭವ ದೊರೆಯಲಿದ್ದು, ಸ್ಥಳೀಯ ಪ್ರವಾಸೋದ್ಯಮ ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗುವ ನಿರೀಕ್ಷೆಯಿದೆ.

‘ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ’ ಹೆಸರಲ್ಲಿ ವಂಚನೆ: ಸೋಷಿಯಲ್ ಮೀಡಿಯಾ ಜಾಲ ಬೇಧಿಸಿದ ಪೊಲೀಸರು

ಉತ್ತರ ಕನ್ನಡ: ಮುರುಡೇಶ್ವರ ದೇವಸ್ಥಾನದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಲಕ್ಕಿ ಡ್ರಾ ನಡೆಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ವಂಚನಾ ಜಾಲವನ್ನು ಮುರುಡೇಶ್ವರ ಪೊಲೀಸರು ಭೇದಿಸಿದ್ದಾರೆ. ದೇವಸ್ಥಾನದ ಹೆಸರನ್ನು ದುರುಪಯೋಗಪಡಿಸಿಕೊಂಡು ಲಾಟರಿ ಟಿಕೆಟ್ ಮಾರಾಟದ ನೆಪದಲ್ಲಿ ಮೋಸ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಲಖನಗಾಂವ್ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (32) ಎಂದು ಗುರುತಿಸಲಾಗಿದೆ. ಈತ “ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ” ಹೆಸರಿನಲ್ಲಿ ನಕಲಿ ಪೋಸ್ಟರ್‌ಗಳನ್ನು ಸೃಷ್ಟಿಸಿ, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳ ಮೂಲಕ ಸಾರ್ವಜನಿಕರನ್ನು ಸಂಪರ್ಕಿಸಿ ಆನ್‌ಲೈನ್ ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ನಡೆಸುತ್ತಿದ್ದ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಕುರಿತು ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.

ಮುರುಡೇಶ್ವರ ದೇವಸ್ಥಾನ ಯಾವುದೇ ಲಕ್ಕಿ ಡ್ರಾ ಅಥವಾ ಲಾಟರಿ ಯೋಜನೆಗಳನ್ನು ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಆಡಳಿತ ಮಂಡಳಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಇಂತಹ ನಕಲಿ ಜಾಹೀರಾತುಗಳಿಗೆ ಸಾರ್ವಜನಿಕರು ಬಲಿಯಾಗದಂತೆ ಎಚ್ಚರಿಕೆ ನೀಡಿದೆ.

ಕರಾವಳಿಯ 23 ಕಂಬಳಗಳಿಗೆ ರಾಜ್ಯ ಸರ್ಕಾರದಿಂದ ₹1.15 ಕೋಟಿ ಅನುದಾನ ಘೋಷಣೆ!

ಉಡುಪಿ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಕರಾವಳಿಯ ಕಂಬಳ ಆಯೋಜಕರಿಗೆ ಮಹತ್ವದ ಸಿಹಿ ಸುದ್ದಿ ನೀಡಿದೆ.

2025–26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯಲಿರುವ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಈ ಕ್ರಮವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ರಾಜ್ಯ ಸರ್ಕಾರ ತನ್ನ ಭರವಸೆಯಂತೆ ನಡೆದುಕೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಂಬಳ ಆಯೋಜಕರಿಗೆ ನೀಡಿದ ಈ ಅನುದಾನದಿಂದ ಕರಾವಳಿಯ 23 ಕಂಬಳಗಳಿಗೆ ದೊಡ್ಡ ಮಟ್ಟದ ನೆರವು ದೊರೆಯಲಿದೆ ಎಂದು ಹೇಳಿದರು. ಕಂಬಳ ಆಯೋಜನೆಗೆ ಹೆಚ್ಚಿನ ವೆಚ್ಚವಾಗುತ್ತಿದ್ದು, ಈ ನೆರವು ತುಳುನಾಡಿನ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರಗಳೂ ಕಂಬಳಕ್ಕೆ ಬೆಂಬಲ ನೀಡಿದ್ದನ್ನು ಉಲ್ಲೇಖಿಸಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಪ್ರವಾಸೋದ್ಯಮ ಮತ್ತು ಕ್ರೀಡಾ ಇಲಾಖೆಗಳ ಮೂಲಕ ಅನುದಾನ ನೀಡಲಾಗಿತ್ತು. ಸದಾನಂದ ಗೌಡ ಅವರ ಆಡಳಿತಾವಧಿಯಲ್ಲಿ ₹1 ಕೋಟಿ ಅನುದಾನ ಘೋಷಿಸಲಾಗಿತ್ತು. ರಾಜಕೀಯ ಭೇದವಿಲ್ಲದೆ ಎಲ್ಲ ಸರ್ಕಾರಗಳೂ ಕಂಬಳವನ್ನು ಪ್ರೋತ್ಸಾಹಿಸಿರುವುದು ಸಂತಸದ ವಿಷಯ ಎಂದು ಹೇಳಿದರು. ಮುಂದಿನ ರಾಜ್ಯ ಬಜೆಟ್‌ನಲ್ಲಿ ಕಂಬಳಕ್ಕೆ ₹5 ಕೋಟಿ ಅನುದಾನ ಮೀಸಲಿಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

ಮೈಸೂರು ದಸರಾ ಕಂಬಳ ವಿವಾದದ ಕುರಿತು ಪ್ರತಿಕ್ರಿಯಿಸಿದ ಡಾ. ದೇವಿಪ್ರಸಾದ್ ಶೆಟ್ಟಿ, ಕಂಬಳದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ. ಇದು ಧರ್ಮ, ಜಾತಿ ಹಾಗೂ ರಾಜಕೀಯ ಭೇದ ಮೀರಿದ ಜನಪದ ಕ್ರೀಡೆಯಾಗಿದೆ. ಮೈಸೂರಿನಲ್ಲಿ ಕಂಬಳ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಕರಾವಳಿಯ ಜನಪ್ರತಿನಿಧಿಗಳು ಯಾವುದೇ ಪಕ್ಷದ ಒತ್ತಡಕ್ಕೆ ಒಳಗಾಗದೆ ಕಂಬಳದ ಗೌರವವನ್ನು ರಾಜ್ಯಾದ್ಯಂತ ಎತ್ತಿಹಿಡಿಯಬೇಕು ಎಂದು ಹೇಳಿದರು.

ಕಂಬಳದ ಬಗ್ಗೆ ಮೈಸೂರಿನಲ್ಲಿ ಅನಗತ್ಯ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಕಂಬಳವನ್ನು ಕೆಳವರ್ಗದವರ ಮೇಲಿನ ದಬ್ಬಾಳಿಕೆಯಂತೆ ಬಿಂಬಿಸುವುದು ತಪ್ಪು ಎಂದರು. ಕೋಟೆ-ಚೆನ್ನಯ್ಯ ಸೇರಿದಂತೆ ಹಲವು ಜನಪದ ನಾಯಕರ ಹೆಸರಿನಲ್ಲಿ ಕಂಬಳ ಆಯೋಜನೆ ನಡೆಯುತ್ತಿದ್ದು, ಇದು ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತವಾಗಿದೆ. ಕಂಬಳವನ್ನು ರಾಜ್ಯ ಹಾಗೂ ದೇಶದ ಮಟ್ಟದಲ್ಲಿ ಇನ್ನಷ್ಟು ವೈಭವೀಕರಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಧೈರ್ಯದಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಒಟಿಟಿಯಲ್ಲಿ ಸಮಯ್ ರೈನಾ ಅಬ್ಬರ : ‘ಧುರಂಧರ್’ ಹಿಂದಿಕ್ಕಿ ವರ್ಷದ ಅತಿದೊಡ್ಡ ಹಿಟ್ ಆಯ್ತು ‘ಇಂಡಿಯಾಸ್ ಗಾಟ್ ಲೇಟೆಂಟ್ 2’

ಒಟಿಟಿ ವೇದಿಕೆಗಳಲ್ಲಿ ಈ ವರ್ಷದ ಅತಿದೊಡ್ಡ ಸಂಚಲನವಾಗಿ ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್ 2’ ಹೊರಹೊಮ್ಮಿದೆ. ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾವನ್ನೇ ಹಿಂದಿಕ್ಕಿದ ಈ ಶೋ, 38.5 ಮಿಲಿಯನ್ ವೀಕ್ಷಣೆಗಳನ್ನು ದಾಖಲಿಸಿ 2026ರ ಅತ್ಯಧಿಕ ವೀಕ್ಷಣೆ ಪಡೆದ ಒಟಿಟಿ ಕಂಟೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಆರ್ಮ್ಯಾಕ್ಸ್ ಮೀಡಿಯಾ ಪ್ರಕಟಿಸಿರುವ ‘ದಿ ಇಂಡಿಯಾ ಒಟಿಟಿ ವಾಚ್‌ಲಿಸ್ಟ್: ಆನ್ ಆರ್ಮ್ಯಾಕ್ಸ್ ಸ್ಟ್ರೀಮ್‌ವ್ಯೂ ರಿಪೋರ್ಟ್ (ಜನವರಿ-ಜೂನ್ 2026)’ ವರದಿ ಭಾರತೀಯ ಒಟಿಟಿ ವೀಕ್ಷಕರ ಆಯ್ಕೆಯನ್ನು ಸ್ಪಷ್ಟಪಡಿಸಿದೆ. ಸಿನಿಮಾ, ವೆಬ್‌ಸಿರೀಸ್ ಮತ್ತು ರಿಯಾಲಿಟಿ ಶೋಗಳ ಪೈಕಿ ಸಮಯ್ ರೈನಾ ಅವರ ಶೋ ಅಗ್ರಸ್ಥಾನಕ್ಕೇರಿರುವುದು ವರದಿಯ ಪ್ರಮುಖ ಅಂಶವಾಗಿದೆ.

ಚಿತ್ರಮಂದಿರಗಳಲ್ಲಿ ಯಶಸ್ಸಿನ ಬಳಿಕ ನೆಟ್‌ಫ್ಲಿಕ್ಸ್‌ಗೆ ಬಂದ ‘ಧುರಂಧರ್’ ಸಿನಿಮಾ 35.2 ಮಿಲಿಯನ್ ವೀಕ್ಷಣೆಗಳನ್ನು ಪಡೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಇದರ ಮುಂದುವರಿದ ಭಾಗ ‘ಧುರಂಧರ್: ದಿ ರಿವೆಂಜ್’ 27.8 ಮಿಲಿಯನ್ ವೀಕ್ಷಣೆಗಳೊಂದಿಗೆ ಆರನೇ ಸ್ಥಾನದಲ್ಲಿದೆ.

ಇದೇ ಪಟ್ಟಿಯಲ್ಲಿ ‘ಮೇಡ್ ಇನ್ ಇಂಡಿಯಾ: ಎ ಟೈಟಾನ್ ಸ್ಟೋರಿ’ ವೆಬ್‌ಸಿರೀಸ್ 17.8 ಮಿಲಿಯನ್ ವೀಕ್ಷಣೆಗಳೊಂದಿಗೆ ಏಳನೇ ಸ್ಥಾನದಲ್ಲಿದ್ದರೆ, ಪ್ರಭಾಸ್ ಅಭಿನಯದ ‘ದಿ ರಾಜಾ ಸಾಬ್’ 17.5 ಮಿಲಿಯನ್ ವೀಕ್ಷಣೆಗಳೊಂದಿಗೆ ಒಂಬತ್ತನೇ ಸ್ಥಾನ ಪಡೆದುಕೊಂಡಿದೆ. ‘ಚಿರಯ್ಯಾ’ ಚಿತ್ರ 16.3 ಮಿಲಿಯನ್ ವೀಕ್ಷಣೆಗಳೊಂದಿಗೆ ಟಾಪ್-10 ಪಟ್ಟಿಯನ್ನು ಪೂರ್ಣಗೊಳಿಸಿದೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನೂರಾರು ಸಿನಿಮಾಗಳು ಮತ್ತು ಜನಪ್ರಿಯ ಧಾರಾವಾಹಿಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿದ್ದ ಅವರು, ಗುರುವಾರ ಮಧ್ಯಾಹ್ನ ಬೆಂಗಳೂರಿನ ವೈಯ್ಯಾಲಿಕಾವಲ್ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಚಿತ್ರರಂಗಕ್ಕೆ ಮತ್ತೊಂದು ಅಪಾರ ನಷ್ಟ ಉಂಟಾಗಿದೆ.

ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿಯಾಗಿದ್ದ ಶೈಲಜಾ ಶ್ರೀಶೈಲನ್, ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಅವರನ್ನು ಅಗಲಿದ್ದಾರೆ.

‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. ನಟ ಉಪೇಂದ್ರ ಅವರ ಬಹುತೇಕ ಸಿನಿಮಾಗಳಲ್ಲಿ ತಾಯಿ ಸೇರಿದಂತೆ ಪ್ರಮುಖ ಪಾತ್ರಗಳನ್ನು ನಿರ್ವಹಿಸಿ ತಮ್ಮ ಸಹಜ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು.

ಸಿನಿಮಾ ಮಾತ್ರವಲ್ಲದೆ ‘ಮುಕ್ತ’ ಮತ್ತು ‘ಮಾಯಾಮೃಗ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳಲ್ಲೂ ಅಭಿನಯಿಸಿ ಕನ್ನಡ ಕಿರುತೆರೆಯಲ್ಲೂ ತಮ್ಮದೇ ಆದ ಸ್ಥಾನ ನಿರ್ಮಿಸಿಕೊಂಡಿದ್ದರು.

ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ನಿಧನರಾಗಿದ್ದು, ಬಳಿಕ ಬೆಂಗಳೂರಿನ ಶ್ರೀರಾಂಪುರ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಹಿರಿಯ ಕಲಾವಿದೆಯ ಅಗಲಿಕೆಗೆ ಚಿತ್ರರಂಗದ ಗಣ್ಯರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸಂಪರ್ಕ ಆರೋಪ; ಗುಜರಾತ್ ATSನಿಂದ ಐವರು ಶಂಕಿತ ಉಗ್ರರ ಬಂಧನ

0

ಗಾಂಧಿನಗರ: ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ (JeM) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಗುಜರಾತ್ ಉಗ್ರ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತರಲ್ಲಿ ಓರ್ವ ಟೈಮ್ ಬಾಂಬ್ ತಯಾರಿಸುವ ಸಿದ್ಧತೆಯಲ್ಲಿ ತೊಡಗಿದ್ದ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರನ್ನು ಬಿಲಾಲ್ ಅಬಿದ್ ಶೇರಾ, ಮೊಹಮ್ಮದ್ ಆಯೂಬ್ ಖಾಡಿವಾಲ್, ಮೊಹಮ್ಮದ್ ಶಾಪಿ ಮುಖಿ, ಮೊಹಮ್ಮದ್ ಹಸನ್ ಕರಾಡಿಯಾ ಹಾಗೂ ಮೊಹಮ್ಮದ್ ಆಯೂಬ್ ಸುನಾಸರಾ ಎಂದು ಗುರುತಿಸಲಾಗಿದೆ.

ಎಟಿಎಸ್ ಅಧಿಕಾರಿಗಳ ಪ್ರಕಾರ, ಬಂಧಿತರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದು, ಸ್ಫೋಟಕ ಸಾಧನಗಳ ಪರೀಕ್ಷೆ ಹಾಗೂ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಸಂಪರ್ಕಿಸಿ ಉಗ್ರ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದರು ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ತಿಂಗಳ ಆರಂಭದಲ್ಲಿ ಎಟಿಎಸ್ ಎಂಟು ಮಂದಿಯನ್ನು ಬಂಧಿಸಿತ್ತು. ಆ ಆರೋಪಿಗಳ ವಿಚಾರಣೆ ವೇಳೆ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಇದೀಗ ಮತ್ತಷ್ಟು ಶಂಕಿತರನ್ನು ಬಂಧಿಸಲಾಗಿದೆ.

ತನಿಖೆಯಲ್ಲಿ ಬಂಧಿತರಿಗೆ ಪಾಕಿಸ್ತಾನದಲ್ಲಿರುವ ಹ್ಯಾಂಡ್ಲರ್‌ಗಳಿಂದ ಹಣಕಾಸಿನ ನೆರವು ದೊರೆಯುತ್ತಿತ್ತು ಎಂಬ ಮಾಹಿತಿ ಹೊರಬಂದಿದೆ. ಅಲ್ಲದೆ, ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಂತೆ ಹ್ಯಾಂಡ್ಲರ್‌ಗಳು ಸೂಚನೆ ನೀಡಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಬಂಧಿತರಲ್ಲಿ ಒಬ್ಬನಿಗೆ ಸ್ಫೋಟಕ ತಯಾರಿಕೆ ಬಗ್ಗೆ ಹೆಚ್ಚಿನ ಜ್ಞಾನವಿದ್ದು, ಕಾರ್ಯನಿರ್ವಹಿಸುವ ಟೈಮ್ ಬಾಂಬ್ ನಿರ್ಮಾಣದ ಅಂತಿಮ ಹಂತದಲ್ಲಿದ್ದ ಎನ್ನಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಎಟಿಎಸ್ ತಂಡ, ಬಾಂಬ್ ತಯಾರಿ ಪೂರ್ಣಗೊಳ್ಳುವ ಮುನ್ನವೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಸ್ಥಳೀಯ ಸರ್ಕಾರಿ ಅಭಿಯೋಜಕರು ನ್ಯಾಯಾಲಯಕ್ಕೆ ಮಾಹಿತಿ ನೀಡುವ ವೇಳೆ, ಈ ಗುಂಪು ಈ ಹಿಂದೆ ಕಚ್ಚಾ ಟೈಮ್ ಬಾಂಬ್ ಪರೀಕ್ಷೆಗೆ ಯತ್ನಿಸಿತ್ತು. ಆದರೆ, ಆ ಪ್ರಯತ್ನ ವಿಫಲವಾಗಿತ್ತು ಎಂದು ತಿಳಿಸಿದ್ದಾರೆ.

ಪ್ರಕರಣದ ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಕೇಂದ್ರ ಹಾಗೂ ರಾಜ್ಯ ಗುಪ್ತಚರ ಸಂಸ್ಥೆಗಳು ಉಗ್ರ ಜಾಲದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿವೆ.

ಸದ್ಯ ಎಟಿಎಸ್ ಅಧಿಕಾರಿಗಳು ಬಾಂಬ್ ತಯಾರಿಕೆ ಸಾಮಗ್ರಿಗಳು, ತಾಂತ್ರಿಕ ದಾಖಲೆಗಳು ಹಾಗೂ ಉರ್ದು ಭಾಷೆಯಲ್ಲಿರುವ ಜೈಶ್-ಎ-ಮೊಹಮ್ಮದ್ ಸಂಘಟನೆಯ ತೀವ್ರಗಾಮಿ ಸಾಹಿತ್ಯ ಸೇರಿದಂತೆ ಹಲವು ಸಾಕ್ಷ್ಯಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

DCRE ಘಟಕದ ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ

ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಹುದ್ದೆಯ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡುವಂತೆ ಮಹತ್ವದ ಆದೇಶ ಹೊರಡಿಸಲಾಗಿದೆ.

ನಿರಂತರ ಕರ್ತವ್ಯ ನಿರ್ವಹಣೆಯಿಂದ ಒತ್ತಡಕ್ಕೆ ಒಳಗಾಗುತ್ತಿದ್ದ ಸಿಬ್ಬಂದಿಗೆ ವಿಶ್ರಾಂತಿ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಡಿಸಿಆರ್‌ಇ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗೆ ವಾರಕ್ಕೊಮ್ಮೆ ರಜೆ ಪಡೆಯುವ ಅವಕಾಶ ದೊರೆಯಲಿದೆ.

ಆದೇಶದಲ್ಲಿ ಏನಿದೆ?

2021ರ ಆಗಸ್ಟ್ 3ರಂದು ಪೊಲೀಸ್ ಪ್ರಧಾನ ಕಚೇರಿ ಹೊರಡಿಸಿದ್ದ ಸುತ್ತೋಲೆ ಸಂಖ್ಯೆ ಆರ್‌ಎಲ್‌ಎನ್-1/14/2021 ಅನ್ನು ಉಲ್ಲೇಖಿಸಿ ಈ ನಿರ್ದೇಶನ ನೀಡಲಾಗಿದೆ. ಡಿಸಿಆರ್‌ಇ ಕಂಟ್ರೋಲ್ ರೂಮ್‌ನಿಂದ ಅಧಿಕೃತ ಸಂದೇಶದ ಮೂಲಕ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.

ಆದೇಶದ ಪ್ರಕಾರ, ಪಾಳಿ (ಶಿಫ್ಟ್) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೂ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ರಜೆ ನೀಡಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಈ ಕ್ರಮದಿಂದಾಗಿ ಸಿಬ್ಬಂದಿಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಲಿದೆ. ಜೊತೆಗೆ, ಹೆಚ್ಚಿನ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಸಮರ್ಪಕ ವಿಶ್ರಾಂತಿ ದೊರೆಯಲಿದೆ ಎಂದು ಇಲಾಖೆ ತಿಳಿಸಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ಅವರು ಜುಲೈ 16ರಂದು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಬಳಿಕ ಆದೇಶದ ಪ್ರತಿಗಳನ್ನು ಡಿಸಿಆರ್‌ಇ ವಲಯದ ಎಲ್ಲಾ ಪೊಲೀಸ್ ಅಧೀಕ್ಷಕರು, ಆಡಳಿತಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸೀರೆ ಹರಕೆ ತೀರಿಸಿದ ಡಿ ಕೆ ಶಿವಕುಮಾರ್ ಪತ್ನಿ ಉಷಾ ಶಿವಕುಮಾರ್

0

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಪವಿತ್ರ ದಿನದಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಭಕ್ತಿಯ ವಾತಾವರಣ ನಿರ್ಮಾಣವಾಗಿತ್ತು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಹಲವು ವರ್ಷಗಳ ಹಿಂದೆ ಹೊತ್ತಿದ್ದ ಹರಕೆಯನ್ನು ನೆರವೇರಿಸಿದರು.

ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಚಾಮುಂಡೇಶ್ವರಿಗೆ ಸೀರೆ ಅರ್ಪಿಸುವುದಾಗಿ ಉಷಾ ಶಿವಕುಮಾರ್ ಅವರು ಹರಕೆ ಹೊತ್ತಿದ್ದರು ಎನ್ನಲಾಗಿದೆ. ಅದರಂತೆ ಇಂದು ದೇವಾಲಯಕ್ಕೆ ಆಗಮಿಸಿದ ಅವರು ರೇಷ್ಮೆ ಸೀರೆಯನ್ನು ಕಾಣಿಕೆಯಾಗಿ ನೀಡಿ ದೇವಿಯ ಆಶೀರ್ವಾದ ಪಡೆದರು.

ದೇವಾಲಯದ ಪ್ರಧಾನ ಅರ್ಚಕರು ಹಾಗೂ ಆಡಳಿತ ಮಂಡಳಿ ಸೀರೆಯನ್ನು ದೇವಿಗೆ ಉಡಿಸಿ ವಿಶೇಷ ಅಲಂಕಾರ ಮಾಡಿದರು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸಿದ್ದು, ವಿಶೇಷ ಪೂಜೆಗಳು ನಡೆಯುತ್ತಿವೆ.

ಇನ್ನು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕೂಡ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ವಿವಿಐಪಿ ದರ್ಶನ ವ್ಯವಸ್ಥೆಯ ಮೂಲಕ ದೇವಾಲಯಕ್ಕೆ ಆಗಮಿಸಿದ ಅವರು ವಿಶೇಷ ಪೂಜೆ ಸಲ್ಲಿಸಿ ವಾಪಸ್ ತೆರಳಿದರು.

ಪ್ರೀತಿಸಿ ಮದುವೆಯಾದ ಯುವಕನ ಹತ್ಯೆ: ಸ್ನೇಹಿತ ಕರೆದಿದ್ದಾನೆಂದು ಹೊರಟವ ಶವವಾಗಿ ಪತ್ತೆ

0

ಬಳ್ಳಾರಿ: ಪ್ರೀತಿಸಿ ವಿವಾಹವಾಗಿದ್ದ ಯುವಕನೊಬ್ಬ ಮದುವೆ ಸಂಭ್ರಮ ಮುಗಿದ ಕೆಲವೇ ಗಂಟೆಗಳಲ್ಲಿ ಹತ್ಯೆಯಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ನಗರದ ಬಟ್ಟಿ ಏರಿಯಾದಲ್ಲಿ ನಡೆದಿದೆ. ನಬಿ ರಸೂಲ್ ಎಂಬ ನವವಿವಾಹಿತನ ಶವ ಮನೆ ಸಮೀಪವೇ ಪತ್ತೆಯಾಗಿದ್ದು, ಪ್ರೇಮ ವಿವಾಹದ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ವಿಚ್ಛೇದಿತ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದ ರಸೂಲ್, ಕೆಲ ದಿನಗಳ ಹಿಂದೆ ಆಕೆಯನ್ನು ಕರೆದುಕೊಂಡು ಹೋಗಿದ್ದರು. ಬಳಿಕ ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದು ಮದುವೆ ನೆರವೇರಿಸಲಾಗಿತ್ತು. ನಿನ್ನೆ ಮದುವೆ ಹಾಗೂ ಆರತಕ್ಷತೆ ಕಾರ್ಯಕ್ರಮ ಸಂತಸದಿಂದ ನಡೆದಿತ್ತು.

ರಾತ್ರಿ ಸ್ನೇಹಿತನ ಕರೆ ಬಂದಿದೆ ಎಂದು ಹೇಳಿ ಮನೆಯಿಂದ ಹೊರಟಿದ್ದ ರಸೂಲ್, ಮರಳಿ ಮನೆಗೆ ಬರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಮನೆಯಿಂದ ಸುಮಾರು 700 ಮೀಟರ್ ದೂರದಲ್ಲಿ ಅವರ ಮೃತದೇಹ ಪತ್ತೆಯಾಯಿತು.

ಮಹಿಳೆಯ ಕುಟುಂಬದವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರೆಂಬ ಮಾಹಿತಿ ಲಭ್ಯವಾಗಿದ್ದು, ಈ ಹಿಂದೆ ಬೆದರಿಕೆಯೂ ನೀಡಲಾಗಿತ್ತು ಎನ್ನಲಾಗಿದೆ. ಈ ಎಲ್ಲಾ ಆಯಾಮಗಳನ್ನು ಪರಿಗಣಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.