ಗದಗ: ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾರ್ವಜನಿಕರಿಗೆ ಬೆದರಿಕೆ, ಕಿರುಕುಳ ಹಾಗೂ ಹಲ್ಲೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ರೌಡಿ ಶೀಟರ್ ದರ್ಶನ್ನನ್ನು 6 ತಿಂಗಳ ಅವಧಿಗೆ ಗದಗ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆಯ ಪ್ರಸ್ತಾವನೆ ಮೇರೆಗೆ ಪ್ರಕರಣದ ಸಂಪೂರ್ಣ ವಿಚಾರಣೆ ನಡೆಸಿದ ಎಸ್ಪಿ ಈ ಆದೇಶ ಹೊರಡಿಸಿದ್ದು, ಸಾರ್ವಜನಿಕರ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ದರ್ಶನ್ ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾಲ ಪಡೆದವರಿಂದ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ. ಸಾಲ ಮರುಪಾವತಿಯಲ್ಲಿ ವಿಳಂಬವಾದರೆ ಅವರ ಮನೆಗಳಿಗೆ ಅಕ್ರಮ ಪ್ರವೇಶ ಮಾಡಿ ಬೆದರಿಕೆ ಹಾಕುವುದು, ಹಲ್ಲೆ ನಡೆಸುವುದು, ಆಸ್ತಿ-ಪಾಸ್ತಿಗೆ ಹಾನಿ ಉಂಟುಮಾಡುವುದು ಸೇರಿದಂತೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ ಈಗಾಗಲೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೂ ವರ್ತನೆಯಲ್ಲಿ ಯಾವುದೇ ಬದಲಾವಣೆ ಕಂಡುಬರದ ಕಾರಣ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ.
ದರ್ಶನ್ ವಿರುದ್ಧ ದಾಖಲಾಗಿರುವ ಪ್ರಕರಣಗಳು
ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2020 – ಐಪಿಸಿ ಕಲಂ 363, 384, 324, 342, 504, 506
ಅಪರಾಧ ಸಂಖ್ಯೆ 41/2022 – ಐಪಿಸಿ ಕಲಂ 420, 467, 471 ಹಾಗೂ ಕರ್ನಾಟಕ ಅತಿಯಾದ ಬಡ್ಡಿ ವಸೂಲಿ ನಿಷೇಧ ಕಾಯ್ದೆ-2004ರ ಕಲಂ 3 ಮತ್ತು 4
ಅಪರಾಧ ಸಂಖ್ಯೆ 14/2026 – ಬಿಎನ್ಎಸ್ ಕಲಂ 115(2), 318(4), 329(3), 352, 351(3) ಹಾಗೂ 3(5)
ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ
ಅಪರಾಧ ಸಂಖ್ಯೆ 11/2024 – ಐಪಿಸಿ ಕಲಂ 427, 504, 506 ಜೊತೆಗೆ 34
ಗದಗ ನಗರ ಪೊಲೀಸ್ ಠಾಣೆ
ಅಪರಾಧ ಸಂಖ್ಯೆ 94/2026 – ಬಿಎನ್ಎಸ್ ಕಲಂ 308(4), 331(5), 324(5) ಜೊತೆಗೆ 3(5)
ಇದಲ್ಲದೆ, ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2021, 2023 ಹಾಗೂ 2025ರಲ್ಲಿ ಸಿಆರ್ಪಿಸಿ ಕಲಂ 107 ಹಾಗೂ ಬಿಎನ್ಎಸ್ಎಸ್ ಕಲಂ 126 ಅಡಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾರ್ವಜನಿಕರಿಗೆ ಕಿರುಕುಳ ನೀಡುವವರು ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಮುಂದೆಯೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.