Home Blog

CJP ಪ್ರತಿಭಟನೆ ಅಂತ್ಯ; ಜಂತರ್ ಮಂತರ್ ಸ್ವಚ್ಛತೆಗೆ ಇಳಿದ NDMC, 500 ಕಾರ್ಮಿಕರ ನಿಯೋಜನೆ!

0

ನವದೆಹಲಿ: ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಾಕ್ರೋಚ್‌ ಜನತಾ ಪಾರ್ಟಿ ಪ್ರತಿಭಟನೆ ಅಂತ್ಯಗೊಂಡ ಬೆನ್ನಲ್ಲೇ ನವದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಿದೆ.

ಕೇಂದ್ರ ಸರ್ಕಾರವು ಪ್ರತಿಭಟನಾಕಾರರ ಮೂರು ಬೇಡಿಕೆಗಳಿಗೆ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ CJP ಹೋರಾಟವನ್ನು ಅಂತ್ಯಗೊಳಿಸಿತ್ತು. ಶನಿವಾರ ಸಂಜೆ ಪ್ರತಿಭಟನಾಕಾರರು ಸ್ಥಳ ಖಾಲಿ ಮಾಡುತ್ತಿದ್ದಂತೆ NDMC ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಉಳಿದಿದ್ದ ತ್ಯಾಜ್ಯ, ಮುರಿದ ಅವಶೇಷಗಳು, ತಾತ್ಕಾಲಿಕ ಡೇರೆಗಳು, ಆಹಾರ ಸಾಮಗ್ರಿಗಳಿಂದ ಸಂಗ್ರಹವಾಗಿದ್ದ ಕಸ ಸೇರಿದಂತೆ ವಿವಿಧ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ.

500ಕ್ಕೂ ಹೆಚ್ಚು ಕಾರ್ಮಿಕರ ನಿಯೋಜನೆ:

NDMC ಅಧಿಕಾರಿಗಳ ಪ್ರಕಾರ, ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಗಾಗಿ 500ಕ್ಕೂ ಹೆಚ್ಚು ಕಾರ್ಮಿಕರನ್ನು ವಿವಿಧ ಪಾಳಿಗಳಲ್ಲಿ ನಿಯೋಜಿಸಲಾಗಿದೆ. ಬ್ಯಾನರ್‌ಗಳು, ಡೇರೆಗಳು, ನಿರ್ಮಾಣ ಅವಶೇಷಗಳು ಹಾಗೂ ಇತರೆ ತ್ಯಾಜ್ಯಗಳನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ.

ಸ್ಥಳವನ್ನು 24 ಗಂಟೆಗಳೊಳಗೆ ಸಂಪೂರ್ಣ ಸ್ವಚ್ಛಗೊಳಿಸಿ ಹಿಂದಿನ ಸ್ಥಿತಿಗೆ ತರಲು ಗುರಿ ಹೊಂದಲಾಗಿದೆ. ಇದಕ್ಕಾಗಿ ಟ್ರಕ್‌ಗಳು, ಆಟೋ ಟಿಪ್ಪರ್‌ಗಳು ಹಾಗೂ ಸ್ವಚ್ಛತಾ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ.

ಹಲವು ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ:

ಜಂತರ್ ಮಂತರ್ ರಸ್ತೆ, ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಹಾಗೂ ಕನ್ನಾಟ್ ಪ್ಲೇಸ್‌ನ ಕೆಲವು ಭಾಗಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ.

ಕಳೆದ ಎರಡು ದಿನಗಳಲ್ಲಿ ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹತ್ತಾರು ಟನ್ ಮಿಶ್ರ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು NDMC ತಿಳಿಸಿದೆ.

NEET ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಅಮಿತ್ ಶಾ ಹೇಳಿದ್ದೇನು?

0

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಹುದ್ದೆಗೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.

ಹುದ್ದೆಗಿಂತ ರಾಷ್ಟ್ರದ ಹಿತಾಸಕ್ತಿ, ಯುವಕರು ಹಾಗೂ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂಬ ತತ್ವಕ್ಕೆ ಇದು ಉದಾಹರಣೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಅಮಿತ್ ಶಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅಧಿಕಾರಕ್ಕಿಂತ ದೇಶದ ಹಿತವೇ ಮೊದಲ ಆದ್ಯತೆ ಎಂದು ಉಲ್ಲೇಖಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿದ್ಯಾರ್ಥಿಗಳ ಭಾವನೆಗಳನ್ನು ಗೌರವಿಸುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಪ್ರಧಾನಿ ಮೋದಿ ಅವರ ಕ್ರಮಗಳನ್ನು ಅವರು ಶ್ಲಾಘಿಸಿದ್ದು, ಇದರಿಂದ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ಪಿಎಂ ಶ್ರೀ ಶಾಲೆಗಳ ವಿಸ್ತರಣೆ, ಡಿಜಿಟಲ್ ಶಿಕ್ಷಣ ಉತ್ತೇಜನ, ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ-ಶಿಕ್ಷಣ ಕ್ಷೇತ್ರದ ಸಮನ್ವಯದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಅಮಿತ್ ಶಾ ಸ್ಮರಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕ ಹಾಗೂ ವಿದ್ಯಾರ್ಥಿ ಕೇಂದ್ರಿತವಾಗಿಸಲು ಪ್ರಧಾನ್ ಕೈಗೊಂಡ ಕ್ರಮಗಳು ಗಮನಾರ್ಹವಾಗಿವೆ. ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣದ ಗುರಿಗೆ ಅವರ ಸೇವೆ ಸಾಕ್ಷಿಯಾಗಿದೆ ಎಂದು ಅಮಿತ್ ಶಾ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Jamakhandi Car Blast: ವೈನ್ ಶಾಪ್ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ; ಬಾಗಲಕೋಟೆಯಲ್ಲಿ ಆತಂಕ

ಬಾಗಲಕೋಟೆ: ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಿಲ್ಲಿಸಿದ್ದ ಮಹೀಂದ್ರಾ ಎಕ್ಸ್‌ಯುವಿ 300 ಕಾರು ಸ್ಫೋಟಗೊಂಡ ಘಟನೆ ನಡೆದಿದೆ.

ಗ್ರಾಮದ ಯುವರಾಜ ವೈನ್ ಶಾಪ್ ಎದುರು ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾಗಿದೆ. ಕಾರಿನ ಬಿಡಿಭಾಗಗಳು ಛಿದ್ರಗೊಂಡು ಸುತ್ತಮುತ್ತಲ ಪ್ರದೇಶದಲ್ಲಿ ಬಿದ್ದಿವೆ.

ಸ್ಫೋಟದಿಂದ ಓರ್ವ ವ್ಯಕ್ತಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಸ್ಫೋಟಗೊಂಡ ಕಾರು ಎಂ.ಜಿ. ತೋರಗಲ್ ಅವರ ಹೆಸರಿನಲ್ಲಿದ್ದು, ವೈನ್ ಶಾಪ್ ಮ್ಯಾನೇಜರ್ ಹನುಮಂತ ಸಂಗೊಂಡ ಅವರು ಕಾರನ್ನು ತಂದಿದ್ದರು ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಜಮಖಂಡಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಳಿಕ ಸೊಕೊ ತಂಡ ಹಾಗೂ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರು ಸ್ಫೋಟಕ್ಕೂ ಮುನ್ನ ಯಾವುದೇ ಹಾನಿಯಾಗಿರಲಿಲ್ಲ. ಹೀಗಾಗಿ ಯಾರೋ ಕಾರಿನಲ್ಲಿ ಸ್ಫೋಟಕ ಇಟ್ಟಿರಬಹುದು ಎಂದು ಹನುಮಂತ ಸಂಗೊಂಡ ಶಂಕೆ ವ್ಯಕ್ತಪಡಿಸಿದ್ದಾರೆ.

ಅದೃಷ್ಟವಶಾತ್ ಕಾರು ಚಾಲನೆಯಲ್ಲಿದ್ದ ವೇಳೆ ಈ ಘಟನೆ ಸಂಭವಿಸಿಲ್ಲ. ಒಂದು ವೇಳೆ ಚಲಿಸುತ್ತಿದ್ದಾಗ ಸ್ಫೋಟವಾಗಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅವರು ತಿಳಿಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

ಶ್ರೀ ವೆಂಕಟೇಶ್ವರನಿಗೆ ವಿಶೇಷ ಪೂಜೆ; ಲಕ್ಷ್ಮೇಶ್ವರದಲ್ಲಿ ಭಕ್ತರ ಸಾಗರ

0

ಲಕ್ಷ್ಮೇಶ್ವರ: ಆಷಾಢ ಮಾಸದ ಅಂಗವಾಗಿ ಲಕ್ಷ್ಮೇಶ್ವರದ ಸವಣೂರು ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಮಹಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನೂರಾರು ಭಕ್ತರು ಭಾಗವಹಿಸಿ ಶ್ರೀ ವೆಂಕಟೇಶ್ವರನ ದರ್ಶನ ಪಡೆದು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.

ಸ್ಮಶಾನ ಸ್ವಚ್ಛಗೊಳಿಸಿದ ಪತ್ರಕರ್ತರು

0
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪತ್ರಿಕಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಲಕ್ಷ್ಮೇಶ್ವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಪಟ್ಟಣದ ಸರ್ಕಾರಿ ಪ್ರೌಢಶಾಲೆ ಸಮೀಪದ ನಿರ್ಲಕ್ಷ್ಯಕ್ಕೊಳಗಾಗಿದ್ದ ಸ್ಮಶಾನ ಭೂಮಿಯನ್ನು ಸ್ವಚ್ಛಗೊಳಿಸುವ ಮೂಲಕ ಸಮಾಜಮುಖಿ ಸೇವೆ ಸಲ್ಲಿಸಿದರು.
ವರ್ಷಗಳಿಂದ ನಿರ್ವಹಣೆ ಇಲ್ಲದೆ ಸ್ಮಶಾನ ಭೂಮಿಯಲ್ಲಿ ಆಳೆತ್ತರದ ಜಾಲಿ, ಮುಳ್ಳಿನ ಗಿಡಗಳು ಹಾಗೂ ತ್ಯಾಜ್ಯ ತುಂಬಿಕೊಂಡಿದ್ದರಿಂದ ಅಂತ್ಯಸಂಸ್ಕಾರಕ್ಕೆ ಬರುವ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, “ಸಮಸ್ಯೆಯನ್ನು ಕೇವಲ ಸುದ್ದಿಯಾಗಿಸುವುದಲ್ಲ, ಪರಿಹಾರಕ್ಕೂ ಕೈಜೋಡಿಸೋಣ” ಎಂಬ ಉದ್ದೇಶದಿಂದ ಪತ್ರಕರ್ತರು ಜನರ ಸಹಕಾರದೊಂದಿಗೆ ಜೆಸಿಬಿ ಯಂತ್ರ ಬಳಸಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಗಿಡಗಂಟಿಗಳನ್ನು ತೆರವುಗೊಳಿಸಿ, ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ಸ್ಮಶಾನ ಭೂಮಿಯನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಮಾತನಾಡಿದ ಚಂಬಣ್ಣ ಬಾಳಿಕಾಯಿ, ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸ್ಮಶಾನ ಭೂಮಿಯನ್ನು ಸ್ವಚ್ಛಗೊಳಿಸುವ ಮೂಲಕ ಪತ್ರಕರ್ತರು ಮಾದರಿ ಸೇವೆ ಸಲ್ಲಿಸಿದ್ದಾರೆ ಎಂದರು.
ಚಂದ್ರು ಮಾಗಡಿ ಮಾತನಾಡಿ, ಶಾಲೆಯ ಪಕ್ಕದಲ್ಲಿದ್ದ ಸ್ಮಶಾನದಲ್ಲಿ ಗಿಡಗಂಟೆ ಹಾಗೂ ತ್ಯಾಜ್ಯ ತುಂಬಿದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಕಳೆದ ವರ್ಷ ಪತ್ರಿಕಾ ದಿನಾಚರಣೆ ಅಂಗವಾಗಿ 30ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ ಮಾಡಿಸಿದ್ದ ಪತ್ರಕರ್ತರು, ಈ ವರ್ಷ ಸಾರ್ವಜನಿಕ ಆಸ್ತಿಯ ಸಂರಕ್ಷಣೆಗೆ ಸ್ವಚ್ಛತಾ ಕಾರ್ಯ ಕೈಗೊಂಡಿರುವುದು ಶ್ಲಾಘನೀಯ ಎಂದರು.
ಸ್ವಚ್ಛತಾ ಕಾರ್ಯದಲ್ಲಿ ನಾಗಪ್ಪ ಮಂಜುನಾಥ ಮಾಗಡಿ, ನಾಗಪ್ಪ ಓಂಕಾರಿ, ಹೊನ್ನಪ್ಪ ವಡ್ಡರ, ವೆಂಕರಡ್ಡಿ ಪಾಟೀಲ, ಪುರಸಭೆಯ ಪರಶುರಾಮ ಪಶುಪತಿಹಾಳ, ಓಣಿಯ ನಾಗರಿಕರು ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.
ಪತ್ರಕರ್ತರ ಈ ಸಮಾಜಮುಖಿ ಸೇವೆಯನ್ನು ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಹಿರಿಯ ನಾಗರಿಕರು ಮುಕ್ತಕಂಠದಿಂದ ಪ್ರಶಂಸಿಸಿದರು.

ಪತ್ರಿಕೆ ಓದುವ ಹವ್ಯಾಸ ಬೆಳೆಸಿ: ಶ್ರೀ ಚನ್ನವೀರ ಮಹಾಸ್ವಾಮೀಜಿ

0
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಜಗತ್ತಿನ ಆಗುಹೋಗುಗಳ ಮಾಹಿತಿ ನೀಡುವುದರ ಜೊತೆಗೆ ಸಮಾಜದ ಎಲ್ಲ ಕ್ಷೇತ್ರಗಳ ಪ್ರತಿಬಿಂಬವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗಕ್ಕೆ ಸಮಾಜ ಇನ್ನಷ್ಟು ಶಕ್ತಿ ತುಂಬಬೇಕು ಎಂದು ಹೂವಿನಶಿಗ್ಲಿಯ ಶ್ರೀ ಚನ್ನವೀರ ಮಹಾಸ್ವಾಮೀಜಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, “ಸತ್ಯದ ಹುಡುಕಾಟವೇ ಪತ್ರಿಕೋದ್ಯಮದ ಧರ್ಮ. ನೊಂದ ಜನರ ಧ್ವನಿಯಾಗಿರುವ ಪತ್ರಿಕೆಗಳು ಪ್ರಜಾಪ್ರಭುತ್ವವನ್ನು ಬಲಪಡಿಸುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿವೆ” ಎಂದರು.
ವಿನಾಕಾರಣ ಅನೇಕ ವಿಷಯಗಳಿಗೆ ಹಣ ಖರ್ಚು ಮಾಡುವ ಜನರು ಜ್ಞಾನ ವೃದ್ಧಿಗೆ ದಿನಪತ್ರಿಕೆಗಳನ್ನು ಖರೀದಿಸಿ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕಾ ದಿನಾಚರಣೆ ಅಂಗವಾಗಿ ರುದ್ರಭೂಮಿಯನ್ನು ಸ್ವಚ್ಛಗೊಳಿಸಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಿಎಸ್‌ಐ ನಾಗರಾಜ ಗಡಾದ, ನ್ಯಾಯಾಂಗ, ಕಾರ್ಯಾಂಗ ಹಾಗೂ ಶಾಸಕಾಂಗಗಳು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಾಗ ಸಮಾಜವನ್ನು ಎಚ್ಚರಿಸುವ ಕೆಲಸವನ್ನು ಪತ್ರಿಕಾ ರಂಗ ಮಾಡುತ್ತದೆ. ವಿದ್ಯಾರ್ಥಿಗಳಲ್ಲಿ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸುವುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯಗತ್ಯ ಎಂದು ಹೇಳಿದರು.
ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಆನಂದಯ್ಯ ವಿರಕ್ತಮಠ ಮಾತನಾಡಿ, ಪತ್ರಕರ್ತರು ಕೇವಲ ಸುದ್ದಿ ನೀಡುವವರಲ್ಲ, ಸಮಾಜದ ಬದಲಾವಣೆಯ ರೂವಾರಿಗಳಾಗಿದ್ದಾರೆ.
ವಿದ್ಯಾರ್ಥಿಗಳು ಶಾಲಾ ಹಂತದಲ್ಲೇ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಂಡರೆ ವಿವಿಧ ಕ್ಷೇತ್ರಗಳ ಸಮಗ್ರ ಜ್ಞಾನ ದೊರೆಯುತ್ತದೆ ಎಂದು ತಿಳಿಸಿದರು.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಸೊರಟೂರ ಅಧ್ಯಕ್ಷತೆ ವಹಿಸಿದ್ದರು. ಗುರುರಾಜ ಪಾಟೀಲ ಕುಲಕರ್ಣಿ, ಮಲ್ಲು ಕಳಸಾಪುರ, ಸುರೇಶ ಕಡ್ಲಿಮಟ್ಟಿ, ಬಿ.ಸಿ. ಪಟ್ಟೇದ ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
“ಸತ್ಯದ ಹುಡುಕಾಟವೇ ಪತ್ರಿಕೋದ್ಯಮದ ಧರ್ಮ. ಸಮಾಜದ ಧ್ವನಿಯಾಗಿರುವ ಪತ್ರಿಕೆಗಳನ್ನು ಓದುವ ಸಂಸ್ಕೃತಿ ಇನ್ನಷ್ಟು ಬೆಳೆಯಬೇಕು.”
– ಶ್ರೀ ಚನ್ನವೀರ ಮಹಾಸ್ವಾಮೀಜಿ, ಹೂವಿನಶಿಗ್ಲಿ

ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲಿ: ಪಿ.ಟಿ. ಪರಮೇಶ್ವರ ನಾಯ್ಕ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.

ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲಿನ ನಂತರವೂ ಪಕ್ಷದ ಕೆಲಸ ಮಾಡಲು ಬಯಸಿದ್ದ ನನಗೆ ಪಕ್ಷದ ವರಿಷ್ಠರು ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ತಕ್ಕಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವಿಭಾಗ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದರೂ, ಅವರ ಪಕ್ಷದವರೇ ಈ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಟೀಕೆ ಮಾಡುವುದನ್ನು ಬಿಟ್ಟು ಯೋಜನೆಗಳ ಲಾಭ ಪಡೆಯುವುದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದರು.

ನೀಟ್ ಪರೀಕ್ಷೆಯ ಅಕ್ರಮವನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವುದು ಖಂಡನೀಯ. ಹೋರಾಟವನ್ನು ಬಲಪ್ರಯೋಗದಿಂದ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ತಮ್ಮ ಜನ್ಮದಿನದ ಅಂಗವಾಗಿ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯೆ ಹಗರಿ ಆಂಜನೇಯ ದೇವಸ್ಥಾನದ ಬಳಿ ನಡೆದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸೊನ್ನದ ಮಹೇಶ್, ಸಕ್ರಹಳ್ಳಿ ಮಲ್ಲಿಕಾರ್ಜುನ, ಏಣಿಗಿ ಪಕ್ಕೀರ್ ಸಾಬು, ಬೋವಿ ಈರಣ್ಣ, ಬೋವಿ ಹುಲುಗಪ್ಪ, ಕೆ.ಎಸ್. ಉಡುಚಪ್ಪ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಕೊಟ್ರೇಶ್, ಸಿ. ಬಸವರಾಜ್, ದಾದಾಪೀರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

“ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.”

ಪಿ.ಟಿ. ಪರಮೇಶ್ವರ ನಾಯ್ಕ, ರಾಜ್ಯ ಉಪಾಧ್ಯಕ್ಷ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ

ಮುಖಕ್ಕೆ ಮಾಸ್ಕ್… ಕೈಗೆ ಗ್ಲೌಸ್… ಕೊನೆಗೆ ಜೈಲು!

0

ವಿಜಯಸಾಕ್ಷಿ ಸುದ್ದಿ, ಗದಗ: ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್ ಧರಿಸಿ ಯಾವುದೇ ಸುಳಿವು ಬಿಡದೆ ಲಾಕ್ ಆಗಿದ್ದ ಮನೆಗಳನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಸಾಮಾನು ಹಾಗೂ ನಗದು ದೋಚುತ್ತಿದ್ದ ಅಂತರರಾಜ್ಯ ಖತರ್ನಾಕ್ ಮಾಸ್ಕ್ ಗ್ಯಾಂಗ್ ಅನ್ನು ಗದಗ ನಗರ ಪೊಲೀಸರು ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿ, ₹42.73 ಲಕ್ಷ ಮೌಲ್ಯದ ಕಳುವಾದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ.

ಗದಗ ನಗರದ ಉದಯನಗರದಲ್ಲಿ ನಡೆದಿದ್ದ ಸುಮಾರು ₹44 ಲಕ್ಷ ಮೌಲ್ಯದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೇ 6ರಿಂದ 8ರ ನಡುವಿನ ಅವಧಿಯಲ್ಲಿ ನಗರದ ಉದಯನಗರ 1ನೇ ಕ್ರಾಸ್, ಕ್ಲರ್ಕ್ಸ್ ಇನ್ ಹಿಂಭಾಗದಲ್ಲಿರುವ ಮಂಜುನಾಥ ತಂದೆ ಷಣ್ಮುಖಸಾ ಬಸವಾ ಅವರ ಮನೆಯನ್ನು ಗುರಿಯಾಗಿಸಿಕೊಂಡಿದ್ದ ಕಳ್ಳರು, ಬೀಗ ಮುರಿದು ಮನೆಯೊಳಗೆ ನುಗ್ಗಿ 342 ಗ್ರಾಂ ಚಿನ್ನಾಭರಣ (₹34.20 ಲಕ್ಷ), 1,970 ಗ್ರಾಂ ಬೆಳ್ಳಿ ಸಾಮಾನು (₹2.20 ಲಕ್ಷ) ಹಾಗೂ ₹8.50 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಒಟ್ಟಾರೆ ಸುಮಾರು ₹44.90 ಲಕ್ಷ ಮೌಲ್ಯದ ಕಳ್ಳತನ ನಡೆದಿತ್ತು.

ಈ ಗ್ಯಾಂಗ್ ಕಾರ್ಯಾಚರಣೆಯ ಶೈಲಿಯೇ ವಿಭಿನ್ನವಾಗಿತ್ತು. ಹಗಲು ವೇಳೆಯಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ, ರಾತ್ರಿ ವೇಳೆ ಮುಖಕ್ಕೆ ಮಾಸ್ಕ್ ಹಾಗೂ ಕೈಗೆ ಗ್ಲೌಸ್ ಧರಿಸಿ ಕಳ್ಳತನ ನಡೆಸುತ್ತಿದ್ದರು. ಯಾವುದೇ ಬೆರಳಚ್ಚು ಅಥವಾ ಸುಳಿವು ಸಿಗದಂತೆ ಎಚ್ಚರಿಕೆ ವಹಿಸುತ್ತಿದ್ದ ಕಾರಣ ಪ್ರಕರಣ ಭೇದಿಸುವುದು ಪೊಲೀಸರಿಗೆ ಸವಾಲಾಗಿತ್ತು.
ಆದರೆ, ಘಟನಾ ಸ್ಥಳದ ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಅನುಮಾನಾಸ್ಪದ ಕಾರಿನ ಚಲನವಲನ ತನಿಖೆಗೆ ಮಹತ್ವದ ಸುಳಿವಾಯಿತು. ಅದನ್ನೇ ಆಧಾರವಾಗಿಟ್ಟುಕೊಂಡು ಗದಗ ಪೊಲೀಸರು ವಿವಿಧ ಜಿಲ್ಲೆಗಳಲ್ಲಿ ತಾಂತ್ರಿಕ ಮಾಹಿತಿ ಕಲೆಹಾಕಿ ಕಾರ್ಯಾಚರಣೆ ನಡೆಸಿ, ಅಂತರರಾಜ್ಯ ಕಳ್ಳರ ಜಾಲವನ್ನು ಭೇದಿಸಿದರು.

ಬಂಧಿತ ಆರೋಪಿಗಳನ್ನು ಮಹಮ್ಮದರಫೀಕ್ (36, ಬಂಟ್ವಾಳ – ದಕ್ಷಿಣ ಕನ್ನಡ), ಇಮ್ರಾನ್ ತಿಗಡಿ (40, ಬೈಲಹೊಂಗಲ – ಬೆಳಗಾವಿ) ಹಾಗೂ ಮೌಲಾಲಿ ದರ್ಗಾ (34, ಹಾನಗಲ್ – ಹಾವೇರಿ) ಎಂದು ಗುರುತಿಸಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ಉದಯನಗರದ ಮನೆಯಲ್ಲೇ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 330 ಗ್ರಾಂ ಚಿನ್ನಾಭರಣ (₹33.33 ಲಕ್ಷ), 750 ಗ್ರಾಂ ಬೆಳ್ಳಿ ಸಾಮಾನು (₹90 ಸಾವಿರ), ಕಳ್ಳತನಕ್ಕೆ ಬಳಸಿದ್ದ ಮಾರೂತಿ ಸುಜುಕಿ ಎರ್ಟಿಗಾ ಕಾರು (₹8 ಲಕ್ಷ) ಹಾಗೂ ಕಳುವಿನ ಹಣದಿಂದ ಖರೀದಿಸಿದ್ದ ಮಾರೂತಿ ಸುಜುಕಿ ಆಲ್ಟೋ ಎಲ್‌ಎಕ್ಸ್ಐ ಕಾರು (₹50 ಸಾವಿರ) ಸೇರಿದಂತೆ ಒಟ್ಟು ₹42.73 ಲಕ್ಷ ಮೌಲ್ಯದ ಆಸ್ತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಗದಗ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಕೇರಳ, ತಮಿಳುನಾಡಿನಲ್ಲಿಯೂ ಇದೇ ರೀತಿಯ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನಿಖಾ ತಂಡಕ್ಕೆ ಎಸ್‌ಪಿ ಅಭಿನಂದನೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಹಾಗೂ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂಗಮೇಶ ವಿ. ಶಿವಯೋಗಿ, ಬೆಟಗೇರಿ ವೃತ್ತದ ಇನ್ಸ್‌ಪೆಕ್ಟರ್ ಧೀರಜ್ ಶಿಂಧೆ, ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಲ್.ಕೆ. ಜೂಲಕಟ್ಟಿ, ಪಿಎಸ್‌ಐ ಬಿ.ಟಿ. ರಿತ್ತಿ, ಪಿಎಸ್‌ಐ ರೇಣುಕಾ ಮುಂಡೇವಾಡಗಿ, ಎಆರ್ ಎಸ್ ಐ ಗುರು ಬೂದಿಹಾಳ, ಆನಂದ್ ಸಿಂಗ್ ದೊಡ್ಡಮನಿ, ವಿ.ಎಸ್. ಶೆಟ್ಟೆಣ್ಣವರ, ಎಸ್.ಎಸ್. ಮಾವಿನಕಾಯಿ, ಉಮೇಶ್ ಸುಣಗಾರ, ಶರಣಪ್ಪ ನಾಗೇಂದ್ರಗಡ, ಕುಮಾರ ತಿಗರಿ, ಕಲಂದರ್ ನದಾಫ್, ಲಕ್ಷ್ಮೇಶ್ವರ ಠಾಣೆಯ ಸಿಬ್ಬಂದಿ, ಸಂಜೀವ ಕೊರಡೂರು (ಟೆಕ್ನಿಕಲ್ ಸೆಲ್), ಅಣ್ಣಪ್ಪ ಕವಲೂರು, ಹನುಮಂತ ಯಾಡಿಯಾಪೂರ, ಪ್ರಕಾಶ ಉಮಚಗಿ, ವೀರಪ್ಪ ಗೌಡನಾಯ್ಕರ, ಗಣೇಶ್ ತಳವಾರ, ಕಾರ್ತಿಕ ಮಂಗಳಿ ಸೇರಿದಂತೆ ನಗರ ಠಾಣೆ, ತಾಂತ್ರಿಕ ವಿಭಾಗ, ಸಿಇಎನ್ ಠಾಣೆ ಹಾಗೂ ಇತರ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಅಲ್ಪಾವಧಿಯಲ್ಲೇ ಪ್ರಕರಣವನ್ನು ಭೇದಿಸಿದ ತನಿಖಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಸ್‌ಪಿ ರೋಹನ್ ಜಗದೀಶ್ ಅಭಿನಂದಿಸಿದರು.

“ಯಾವುದೇ ಸುಳಿವು ಸಿಗದಿದ್ದರೂ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದ ಕಾರಿನ ಜಾಡು ಹಿಡಿದು ತನಿಖೆ ನಡೆಸಿದ ಪರಿಣಾಮ ಅಂತರರಾಜ್ಯ ಕಳ್ಳರ ಗ್ಯಾಂಗ್ ಬಂಧಿಸಲು ಸಾಧ್ಯವಾಯಿತು. ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.”

ರೋಹನ್ ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕರು, ಗದಗ

 

ಮಹಾಲಕ್ಷ್ಮೀ ದೇವಸ್ಥಾನ ಕಳ್ಳತನದ ಆರೋಪಿಯೂ ಬಂಧನ

ಇದೇ ಕಾರ್ಯಾಚರಣೆಯಲ್ಲಿ ಗದಗ ನಗರದ ಹಾತಲಗೇರಿ ನಾಕಾದ ಮಹಾಲಕ್ಷ್ಮೀ ದೇವಸ್ಥಾನ ಕಳ್ಳತನ ಪ್ರಕರಣವನ್ನೂ ಪೊಲೀಸರು ಭೇದಿಸಿದ್ದಾರೆ. ದೇವಿಗೆ ಹಾಕುವ ₹1.25 ಲಕ್ಷ ಮೌಲ್ಯದ ಚಿನ್ನದ ತಾಳಿ, ಬೆಳ್ಳಿಯ ಕಿರೀಟ ಹಾಗೂ ಇತರೆ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಈ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಪೃಥ್ವಿರಾಜ್‌ ಎಂಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್ ಇಲ್ಲ! 5 ವರ್ಷದಲ್ಲಿ 50 ಲಕ್ಷ ಹೊಸ ವಾಹನಗಳ ಸೇರ್ಪಡೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ ಐದು ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಹೊಸ ವಾಹನಗಳು ರಸ್ತೆಗಿಳಿದಿರುವ ಮಾಹಿತಿ ಬೆಳಕಿಗೆ ಬಂದಿದೆ.

ನಗರದಲ್ಲಿದ್ದ ವಾಹನಗಳ ಸಂಖ್ಯೆ ಸುಮಾರು 98 ಲಕ್ಷದಿಂದ 1.47 ಕೋಟಿಗೆ ಏರಿಕೆಯಾಗಿದ್ದು, ಐದು ವರ್ಷಗಳಲ್ಲಿ ಸುಮಾರು 50 ಲಕ್ಷ ಹೊಸ ವಾಹನಗಳು ಸೇರ್ಪಡೆಯಾಗಿವೆ. ವಾಹನಗಳ ಸಂಖ್ಯೆ ಹೆಚ್ಚಳಕ್ಕೆ ತಕ್ಕಂತೆ ರಸ್ತೆ ಮೂಲಸೌಕರ್ಯ ವಿಸ್ತರಣೆಯಾಗದ ಪರಿಣಾಮ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ.

ಸಿಲ್ಕ್ ಬೋರ್ಡ್‌ನಿಂದ ಹೆಬ್ಬಾಳದವರೆಗೆ, ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್‌ವರೆಗೆ ಪ್ರಮುಖ ರಸ್ತೆಗಳಲ್ಲಿ ಪ್ರತಿದಿನ ವಾಹನಗಳ ಉದ್ದನೆಯ ಸಾಲು ಕಾಣಿಸುತ್ತಿದೆ. ಐಟಿ ಉದ್ಯೋಗಿಗಳು, ವಿದ್ಯಾರ್ಥಿಗಳು, ವ್ಯಾಪಾರಸ್ಥರು ಸೇರಿದಂತೆ ಲಕ್ಷಾಂತರ ಜನರು ನಿತ್ಯ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಗಂಟೆಗಟ್ಟಲೆ ಸಮಯ ಕಳೆಯುವಂತಾಗಿದೆ.

ಕೇವಲ 5 ರಿಂದ 10 ಕಿಲೋಮೀಟರ್ ದೂರ ಕ್ರಮಿಸಲು 30 ರಿಂದ 60 ನಿಮಿಷಗಳಿಗೂ ಹೆಚ್ಚು ಸಮಯ ಬೇಕಾಗುತ್ತಿದೆ. ಇದರಿಂದ ಜನರ ಅಮೂಲ್ಯ ಸಮಯ ವ್ಯರ್ಥವಾಗುವುದರ ಜೊತೆಗೆ ವಾಹನಗಳು ಒಂದೇ ಕಡೆ ನಿಲ್ಲುವುದರಿಂದ ಇಂಧನ ಬಳಕೆ ಹೆಚ್ಚಾಗಿ ವಾಯು ಮಾಲಿನ್ಯವೂ ಹೆಚ್ಚುತ್ತಿದೆ.

ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪ್ರಮುಖ ಜಂಕ್ಷನ್‌ಗಳ ವೈಜ್ಞಾನಿಕ ನಿರ್ವಹಣೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸುವುದು, ಅಕ್ರಮ ಪಾರ್ಕಿಂಗ್ ತೆರವು, ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್‌ಗಳ ಸಮರ್ಪಕ ಬಳಕೆ ಹಾಗೂ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಅಗತ್ಯ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೆಂಗಳೂರಿನ ವೇಗದ ಬೆಳವಣಿಗೆಗೆ ಅನುಗುಣವಾಗಿ ರಸ್ತೆ ಹಾಗೂ ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಪಡಿಸದಿದ್ದರೆ, ಮುಂದಿನ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರೈಲ್ವೆ ಹಳಿಗಳ ಬಳಿ ಕಸ ಎಸೆದರೆ ಕಠಿಣ ಕ್ರಮ; ಬೆಂಗಳೂರಿನಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ!

ಬೆಂಗಳೂರು: ರೈಲ್ವೆ ಹಳಿಗಳ ಪಕ್ಕದಲ್ಲಿ ಹಾಗೂ ರೈಲ್ವೆಗೆ ಸೇರಿದ ಜಾಗಗಳಲ್ಲಿ ಕಸ ಮತ್ತು ಕಟ್ಟಡ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೈರುತ್ಯ ರೈಲ್ವೆ ಎಚ್ಚರಿಕೆ ನೀಡಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ನಗರದ ಐದು ಪಾಲಿಕೆಗಳ ಸಹಯೋಗದೊಂದಿಗೆ ರೈಲ್ವೆ ಹಳಿಗಳ ಸುತ್ತಮುತ್ತಲಿನ ತ್ಯಾಜ್ಯ ತೆರವುಗೊಳಿಸಲು ಎರಡು ತಿಂಗಳ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಮಾತನಾಡಿ, ರೈಲ್ವೆ ಜಾಗದಲ್ಲಿ ಅನಧಿಕೃತವಾಗಿ ಕಸ ಎಸೆಯುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರೈಲ್ವೆ ಆಸ್ತಿಯ ರಕ್ಷಣೆ, ಹಳಿಗಳ ಸುತ್ತಮುತ್ತ ಸಂಗ್ರಹವಾಗಿರುವ ಕಸದ ರಾಶಿ ತೆರವು ಹಾಗೂ ಭವಿಷ್ಯದಲ್ಲಿ ಮತ್ತೆ ತ್ಯಾಜ್ಯ ಎಸೆಯದಂತೆ ತಡೆಯುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ರೈಲ್ವೆ ಇಲಾಖೆ ಕಠಿಣ ಕಣ್ಗಾವಲು ವ್ಯವಸ್ಥೆ ರೂಪಿಸಲಿದೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಹಳಿಗಳ ಪಕ್ಕದಲ್ಲಿ ಅಕ್ರಮವಾಗಿ ಕಸ ಎಸೆಯುವುದರಿಂದ ರೈಲು ಸಂಚಾರದ ಸುರಕ್ಷತೆಗೆ ಅಪಾಯ ಎದುರಾಗುತ್ತಿದೆ. ಹಲವು ಸಂದರ್ಭಗಳಲ್ಲಿ ಕಸದ ರಾಶಿಗೆ ಬೆಂಕಿ ತಗುಲಿ ಸಿಗ್ನಲಿಂಗ್ ವ್ಯವಸ್ಥೆ ಹಾಗೂ ವಿದ್ಯುತ್ ಕೇಬಲ್‌ಗಳು ಹಾನಿಗೊಳಗಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಇದಲ್ಲದೆ, ಬೆಂಗಳೂರು-ಮೈಸೂರು ಹಾಗೂ ಬೆಂಗಳೂರು-ಹೊಸೂರು ರೈಲು ಮಾರ್ಗಗಳಲ್ಲಿ ಪದೇ ಪದೇ ತ್ಯಾಜ್ಯ ಸಂಗ್ರಹವಾಗುತ್ತಿರುವುದರಿಂದ ರೈಲ್ವೆ ಗಡಿ ಗುರುತುಗಳು ಮರೆಯಾಗುವ ಹಾಗೂ ಅತಿಕ್ರಮಣದ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ಜಂಟಿಯಾಗಿ ಸ್ವಚ್ಛತಾ ಕಾರ್ಯದ ಜೊತೆಗೆ ಅಕ್ರಮ ತ್ಯಾಜ್ಯ ವಿಲೇವಾರಿ ತಡೆಯಲು ಕ್ರಮ ಕೈಗೊಳ್ಳುತ್ತಿವೆ.