Home Blog

ನೆಲಮಂಗಲದಲ್ಲಿ ಚಿರತೆ ಹಾವಳಿ ಹೆಚ್ಚಳ: ಸಾಕು ಪ್ರಾಣಿಗಳ ಮೇಲೆ ದಾಳಿ, ಗ್ರಾಮಸ್ಥರಲ್ಲಿ ಆತಂಕ

ನೆಲಮಂಗಲ: ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಉಂಟಾಗಿದೆ.

ತಾಲೂಕಿನ ಕೆಂಗಲ್ ಗ್ರಾಮ ಹಾಗೂ ಸೋಂಪುರ ಹೋಬಳಿಯ ತೀರ್ಥ ಪ್ರಸಾದ್ ತೋಟದಲ್ಲಿ ಚಿರತೆ ನಿರಂತರವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಕತ್ತಲಿನ ವೇಳೆ ಹೊಂಚು ಹಾಕಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಘಟನೆಗಳು ಹೆಚ್ಚಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಚಿರತೆ ದಾಳಿಯಿಂದ ಬಾತುಕೋಳಿ, ಕುರಿ ಮತ್ತು ಮೇಕೆಗಳ ಮೇಲೆ ಹಾನಿ ಸಂಭವಿಸುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬರಲು ಸಹ ಜನರು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿರತೆ ಓಡಾಟದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.

ಚಿರತೆ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸಂಜೆ ನಂತರ ಉಗುರು ಕತ್ತರಿಸಬಾರದು ಏಕೆ? ಇದರ ಹಿಂದಿನ ವೈಜ್ಞಾನಿಕ ಕಾರಣವೇನು?

0

ನಮ್ಮ ಸಂಪ್ರದಾಯದಲ್ಲಿ ಸೂರ್ಯಾಸ್ತದ ನಂತರ, ವಿಶೇಷವಾಗಿ ಸಂಜೆ ಬಳಿಕ ಉಗುರುಗಳನ್ನು ಕತ್ತರಿಸುವುದು ಅಶುಭ ಎಂದು ಹಿರಿಯರು ಹೇಳುವುದನ್ನು ಸಾಮಾನ್ಯವಾಗಿ ಕೇಳಬಹುದು.

ಇದಕ್ಕೆ ಸಂಬಂಧಿಸಿದಂತೆ ವಿವಿಧ ನಂಬಿಕೆಗಳು ಮತ್ತು ವೈಜ್ಞಾನಿಕ ಕಾರಣಗಳ ಕುರಿತು ಚರ್ಚೆ ನಡೆಯುತ್ತದೆ.

ಸಾಂಪ್ರದಾಯಿಕ ನಂಬಿಕೆಗಳ ಪ್ರಕಾರ, ಸಂಜೆ ಸಮಯದಲ್ಲಿ ಲಕ್ಷ್ಮೀ ದೇವಿಯ ಪ್ರವೇಶವಾಗುತ್ತದೆ ಎಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಕಸ ತೆಗೆಯುವುದು ಅಥವಾ ಹಣ ಸಂಬಂಧಿತ ಕೆಲಸಗಳನ್ನು ಮಾಡುವುದು ಅಶುಭ ಎಂದು ಕೆಲವರು ನಂಬುತ್ತಾರೆ. ಅದೇ ರೀತಿ ಉಗುರು ಕತ್ತರಿಸುವುದನ್ನೂ ತಪ್ಪಿಸಿಕೊಳ್ಳಬೇಕು ಎಂಬ ಅಭಿಪ್ರಾಯವೂ ಇದೆ.

ಇದಕ್ಕೆ ಹಿಂದೆ ಇರುವ ಪ್ರಮುಖ ಕಾರಣಗಳಲ್ಲಿ ಒಂದಾಗಿ ಹಳೆಯ ಕಾಲದ ಜೀವನಶೈಲಿ ಮತ್ತು ಸುರಕ್ಷತೆ ವಿಚಾರಗಳನ್ನು ಹೇಳಲಾಗುತ್ತದೆ. ಆ ಸಮಯದಲ್ಲಿ ವಿದ್ಯುತ್ ಸೌಲಭ್ಯ ಇರಲಿಲ್ಲ. ಸೀಮೆಎಣ್ಣೆ ದೀಪದ ಬೆಳಕಿನಲ್ಲಿ ಅಥವಾ ಕಡಿಮೆ ಬೆಳಕಿನಲ್ಲಿ ಉಗುರು ಕತ್ತರಿಸುವುದು ಅಪಾಯಕಾರಿಯಾಗಿತ್ತು. ಚೂಪಾದ ಸಾಧನಗಳಿಂದ ಗಾಯವಾಗುವ ಸಾಧ್ಯತೆ ಹೆಚ್ಚಿತ್ತು ಎಂದು ಹಿರಿಯರು ವಿವರಿಸುತ್ತಾರೆ.

ಇದಲ್ಲದೆ ರಾತ್ರಿ ಸಮಯದಲ್ಲಿ ಕತ್ತರಿಸಿದ ಉಗುರುಗಳನ್ನು ಸರಿಯಾಗಿ ಸ್ವಚ್ಛಗೊಳಿಸುವುದು ಮತ್ತು ವಿಲೇವಾರಿ ಮಾಡುವುದು ಕಷ್ಟವಾಗುತ್ತಿತ್ತು. ಇದರಿಂದ ಸ್ವಚ್ಛತೆ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇತ್ತು.

ಇಂದಿನ ದಿನಗಳಲ್ಲಿ ಸಹ ಸ್ವಚ್ಛತೆ ದೃಷ್ಟಿಯಿಂದ, ದಿನದ ಬೆಳಕಿನಲ್ಲಿ ಅಥವಾ ಉತ್ತಮ ಬೆಳಕಿನಲ್ಲಿ ಉಗುರು ಕತ್ತರಿಸುವುದು ಉತ್ತಮ ಎಂದು ಸಲಹೆ ನೀಡಲಾಗುತ್ತದೆ. ದಿನದ ಹೊತ್ತಿನಲ್ಲಿ ಕತ್ತರಿಸಿದ ಉಗುರುಗಳನ್ನು ಸರಿಯಾಗಿ ಸ್ವಚ್ಛಗೊಳಿಸಲು ಮತ್ತು ವಿಲೇವಾರಿ ಮಾಡಲು ಸುಲಭವಾಗುತ್ತದೆ ಎಂದು ತಿಳಿಸಲಾಗಿದೆ.

ಉಗುರುಗಳು ಕೆರಾಟಿನ್ ಪದಾರ್ಥದಿಂದ ನಿರ್ಮಿತವಾಗಿದ್ದು, ಸ್ನಾನದ ನಂತರ ಅಥವಾ ಕೈಗಳು ಮೃದುವಾಗಿರುವ ಸಮಯದಲ್ಲಿ ಕತ್ತರಿಸುವುದು ಸುಲಭವಾಗುತ್ತದೆ ಎಂದು ತಜ್ಞರು ಸೂಚಿಸುತ್ತಾರೆ. ಕತ್ತರಿಸಿದ ನಂತರ ಕೈಗಳನ್ನು ತೊಳೆಯುವುದು ಮತ್ತು ಸ್ವಚ್ಛತೆಯನ್ನು ಕಾಪಾಡುವುದು ಅಗತ್ಯ ಎಂದು ಹೇಳಲಾಗುತ್ತದೆ.

ಇದು ಸಂಪೂರ್ಣವಾಗಿ ಸಂಪ್ರದಾಯ, ನಂಬಿಕೆ ಮತ್ತು ಸ್ವಚ್ಛತಾ ಕಾರಣಗಳ ಸಮನ್ವಯದಿಂದ ಬಂದಿರುವ ಅಭ್ಯಾಸ ಎಂದು ತಿಳಿದುಬರುತ್ತದೆ.

 

ಬೆಸ್ಕಾಂ ಆನ್‌ಲೈನ್ ಸೇವೆಗಳಿಗೆ 21 ದಿನ ತಾತ್ಕಾಲಿಕ ಸ್ಥಗಿತ: ಗ್ರಾಹಕರಿಗೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತನ್ನ ಗ್ರಾಹಕರಿಗೆ ಮಹತ್ವದ ಮುನ್ಸೂಚನೆ ನೀಡಿದ್ದು, ಆನ್‌ಲೈನ್ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದೆ.

ಜೂನ್ 10ರಿಂದ ಜೂನ್ 30ರವರೆಗೆ ಒಟ್ಟು 21 ದಿನಗಳ ಕಾಲ ಬೆಸ್ಕಾಂನ ಎಲ್ಲಾ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೇಟಾವನ್ನು ಹಳೆಯ ಸಾಫ್ಟ್‌ವೇರ್‌ನಿಂದ ಹೊಸ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗೆ ವರ್ಗಾಯಿಸುವ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ಸ್ಥಗಿತ ಅಗತ್ಯವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಈ ಅವಧಿಯಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಕೆ, ಮಾಲೀಕತ್ವ ಬದಲಾವಣೆ, ಲೋಡ್ ಹೆಚ್ಚಳ ವಿನಂತಿ ಹಾಗೂ ಆನ್‌ಲೈನ್ ಬಿಲ್ ಪಾವತಿ ಸೇರಿದಂತೆ ಹಲವು ಪ್ರಮುಖ ಸೇವೆಗಳು ಬೆಸ್ಕಾಂ ಪೋರ್ಟಲ್ ಮತ್ತು ಆಪ್ ಮೂಲಕ ಲಭ್ಯವಿರುವುದಿಲ್ಲ.

ಆದರೆ ಗ್ರಾಹಕರು ಫೋನ್‌ಪೇ, ಗೂಗಲ್‌ಪೇ, ಅಮೆಜಾನ್‌ಪೇ ಸೇರಿದಂತೆ ಯುಪಿಐ ಮಾಧ್ಯಮಗಳ ಮೂಲಕ ವಿದ್ಯುತ್ ಬಿಲ್ ಪಾವತಿಯನ್ನು ಮುಂದುವರಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಸಾಫ್ಟ್‌ವೇರ್ ಅಪ್‌ಗ್ರೇಡ್ ಪ್ರಕ್ರಿಯೆಯಿಂದ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇಂದಿರಾನಗರದಲ್ಲಿ ವಾಕಿಂಗ್‌ಗೆ ಬಂದಿದ್ದ ಆಂದ್ರ ಮೂಲದ ಮಹಿಳೆ ನಾಪತ್ತೆ: 5 ದಿನಗಳಿಂದ ಹುಡುಕಾಟ

ಬೆಂಗಳೂರು: ಬೆಂಗಳೂರಿನ ಇಂದಿರಾನಗರ ಪ್ರದೇಶದಲ್ಲಿ ಆಂದ್ರ ಮೂಲದ 48 ವರ್ಷದ ಮಹಿಳೆ ಲಕ್ಷ್ಮೀ ದೇವಿ ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಜೂನ್ 5ರಂದು ಸಂಜೆ 6:40ರ ಸುಮಾರಿಗೆ ಇಂದಿರಾನಗರದ ಪಾರ್ಕ್‌ಗೆ ಕುಟುಂಬದೊಂದಿಗೆ ವಾಕಿಂಗ್‌ಗೆ ಬಂದಿದ್ದ ಸಂದರ್ಭದಲ್ಲಿ ಅವರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ನಂತರ ಕುಟುಂಬ ಸದಸ್ಯರು ಹಲವೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರೆತಿಲ್ಲ.

ಸಪ್ನಾ ಬುಕ್ ಹೌಸ್ ಸಮೀಪ ಮಹಿಳೆಯನ್ನು ಕೊನೆಯದಾಗಿ ನೋಡಲಾಗಿದೆ ಎಂದು ತಿಳಿದುಬಂದಿದ್ದು, ನಂತರ ಅವರು ನಡೆದು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ನಂತರದಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಹಿಳೆ ತೆಲುಗು ಭಾಷೆ ಮಾತ್ರ ಮಾತನಾಡುತ್ತಿದ್ದು, ಅವರ ಬಳಿ ಮೊಬೈಲ್ ಹಾಗೂ ಹಣ ಇಲ್ಲದ ಸ್ಥಿತಿಯಲ್ಲಿದ್ದರು ಎಂದು ಕುಟುಂಬ ತಿಳಿಸಿದೆ.

ಕಳೆದ ಐದು ದಿನಗಳಿಂದ ಕುಟುಂಬಸ್ಥರು ಆತಂಕದಲ್ಲಿ ಹುಡುಕಾಟ ನಡೆಸುತ್ತಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಹ ತನಿಖೆ ಆರಂಭಿಸಿದ್ದು, ಮಹಿಳೆ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಮಾಹಿತಿ ನೀಡುವವರಿಗೆ ಸೂಕ್ತ ಬಹುಮಾನ ಘೋಷಿಸಲಾಗಿದೆ ಎಂದು ಕುಟುಂಬ ತಿಳಿಸಿದೆ. ಸಾರ್ವಜನಿಕರಿಗೆ ಮಹಿಳೆ ಬಗ್ಗೆ ಯಾವುದೇ ಮಾಹಿತಿ ಇದ್ದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಟೋಲ್ ಫ್ರೀ ಸಂಖ್ಯೆ 112 ಅಥವಾ 7411747841, 7204080450 ಸಂಪರ್ಕಿಸಲು ಮನವಿ ಮಾಡಲಾಗಿದೆ.


ಭಾರತದಿಂದ ಆಮದು ಆಗುವ ಮಾವಿನ ಹಣ್ಣಿಗೆ ನೇಪಾಳ ತಾತ್ಕಾಲಿಕ ನಿಷೇಧ!

ಕಠ್ಮಂಡು: ಭಾರತದಿಂದ ಆಮದು ಮಾಡಿಕೊಳ್ಳಲಾಗುತ್ತಿರುವ ಮಾವಿನ ಹಣ್ಣಿನ ಮೇಲೆ ನೇಪಾಳ ಸರ್ಕಾರ ತಾತ್ಕಾಲಿಕ ನಿರ್ಬಂಧ ಹೇರಿದೆ.

ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ ಹಣ್ಣಿನ ಸಾಗಣೆಗಳಲ್ಲಿ ಅನುಮತಿತ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಕಂಡುಬಂದಿವೆ. ಗ್ರಾಹಕರ ಆರೋಗ್ಯ ರಕ್ಷಣೆ ಹಾಗೂ ಆಹಾರ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ.

ಈ ಕ್ರಮವು ಕೇವಲ ಆಹಾರ ಸುರಕ್ಷತೆಗೆ ಸಂಬಂಧಿಸಿದ್ದು, ಭಾರತ-ನೇಪಾಳ ದ್ವಿಪಕ್ಷೀಯ ಸಂಬಂಧಗಳ ಮೇಲೆ ಯಾವುದೇ ಪರಿಣಾಮ ಬೀರುವ ಉದ್ದೇಶ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮೊದಲು ಜಪಾನ್ ಕೂಡ ಭಾರತೀಯ ಮಾವಿನ ಹಣ್ಣಿನ ಆಮದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. ಆದರೆ ಜಪಾನ್‌ನ ನಿರ್ಧಾರ ಕೀಟನಾಶಕ ಅಂಶಗಳಿಗೆ ಸಂಬಂಧಿಸಿರಲಿಲ್ಲ. ಭಾರತದಲ್ಲಿನ ಕೆಲವು ಸಂಸ್ಕರಣಾ ಕೇಂದ್ರಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿನ ಕೊರತೆಯನ್ನು ಉಲ್ಲೇಖಿಸಿ ಆ ದೇಶ ನಿರ್ಬಂಧ ಹೇರಿತ್ತು.

ನೇಪಾಳದ ನಿರ್ಬಂಧದಿಂದ ಅಲ್ಫೋನ್ಸೋ, ಕೇಸರ್, ಲಂಗ್ರಾ ಹಾಗೂ ಬಂಗನಪಲ್ಲಿ ಸೇರಿದಂತೆ ಹಲವು ಜನಪ್ರಿಯ ಭಾರತೀಯ ಮಾವಿನ ತಳಿಗಳ ರಫ್ತಿಗೆ ಹೊಡೆತ ಬಿದ್ದಿದೆ. ಇದರಿಂದ ಭಾರತೀಯ ಹಣ್ಣು ವ್ಯಾಪಾರಿಗಳಲ್ಲಿ ಆತಂಕ ಮನೆಮಾಡಿದ್ದು, ಬೇಸಿಗೆ ಅವಧಿಯಲ್ಲಿ ಮಾವಿನ ಹಣ್ಣಿನ ಬೇಡಿಕೆ ಹೆಚ್ಚಿರುವ ಕಾರಣ ಮುಂದಿನ ದಿನಗಳಲ್ಲಿ ಪೂರೈಕೆ ಮತ್ತು ವ್ಯಾಪಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

ಭಾರಿ ಮಳೆ: ವಿಭೂತಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶ ಬಂದ್!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಕೋಲ ತಾಲೂಕಿನ ಪ್ರಸಿದ್ಧ ವಿಭೂತಿ ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಹೇರಲಾಗಿದೆ.

ಯಾಣದ ಸಮೀಪದಲ್ಲಿರುವ ವಿಭೂತಿ ಜಲಪಾತ ಮಳೆಗಾಲದಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ ಭಾರಿ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದ ಸೂಚನೆ ಮೇರೆಗೆ ಹೊಸಕಂಬಿ ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

ಈ ಹಿಂದೆ ಏಕಾಏಕಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಸಿಗರ ಜೀವಕ್ಕೆ ಅಪಾಯ ಉಂಟಾದ ಘಟನೆಗಳು ನಡೆದಿದ್ದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜೂನ್ ಎರಡನೇ ವಾರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ತಡೆ ವಿಧಿಸಲಾಗಿದೆ.

ಅರಣ್ಯ ಇಲಾಖೆ ಆದೇಶದಂತೆ ಮುಂದಿನ ಸೂಚನೆ ಬರುವವರೆಗೆ ವಿಭೂತಿ ಜಲಪಾತಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧವಾಗಿದ್ದು, ಪ್ರವಾಸಿಗರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಉದ್ಯಾನ ನಗರಿ ಕಸದ ನಗರಿಯಾಗುತ್ತಿದೆಯೇ? ಬ್ಲ್ಯಾಕ್ ಸ್ಪಾಟ್‌ಗಳ ಸಂಖ್ಯೆ ಏರಿಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ತೀವ್ರಗೊಂಡಿದ್ದು, ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳುದ್ದಕ್ಕೂ ಕಸದ ರಾಶಿಗಳು ಕಂಡುಬರುತ್ತಿವೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಲೇವಾರಿಯಾಗದೆ ಬಿದ್ದಿರುವ ಕಸದಿಂದ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ.

ಎರಡು ತಿಂಗಳಿನಿಂದ ಹಲವು ಪ್ರದೇಶಗಳಲ್ಲಿ ಕಸ ಸಂಗ್ರಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಪರಿಣಾಮವಾಗಿ ಕಸದ ರಾಶಿಗಳು ರಸ್ತೆ ಮಧ್ಯಭಾಗದವರೆಗೂ ಹರಡಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆ ಉಂಟುಮಾಡುತ್ತಿದೆ.

ನಗರದ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಮಾರ್ಷಲ್‌ಗಳನ್ನು ನೇಮಿಸಲಾಗಿದ್ದರೂ, ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಮನೆಗಳ ಬಳಿ ಕಸದ ವಾಹನಗಳು ನಿಯಮಿತವಾಗಿ ಬಾರದ ಕಾರಣ ಅನೇಕರು ರಸ್ತೆಗಳಲ್ಲೇ ಕಸ ಎಸೆಯುತ್ತಿದ್ದಾರೆ ಎನ್ನಲಾಗಿದೆ.

ಹಸಿ ಕಸ ಸಂಗ್ರಹವಾಗಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಆರೋಗ್ಯ ಸಮಸ್ಯೆಗಳ ಆತಂಕವೂ ಎದುರಾಗಿದೆ. ಕಸ ವಿಲೇವಾರಿಯಲ್ಲಿ ಉಂಟಾಗಿರುವ ಅವ್ಯವಸ್ಥೆ ಬಗ್ಗೆ ನಾಗರಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕಸಾ ಪೋರ್ಟಲ್’ ಅಂಕಿಅಂಶಗಳ ಪ್ರಕಾರ, ಒಂದು ತಿಂಗಳ ಹಿಂದೆ 3,200ರಷ್ಟಿದ್ದ ಸಕ್ರಿಯ ಕಸದ ಬ್ಲ್ಯಾಕ್ ಸ್ಪಾಟ್‌ಗಳ ಸಂಖ್ಯೆ ಇದೀಗ 5,445ಕ್ಕೆ ಏರಿಕೆಯಾಗಿದೆ. ಈ ಬೆಳವಣಿಗೆ ಉದ್ಯಾನ ನಗರಿ ಮತ್ತೆ ಕಸದ ನಗರಿಯಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿಸಿದೆ.

ನಗರದಲ್ಲಿ ಕಸದ ಸಮಸ್ಯೆ ಹೆಚ್ಚಾಗಲು ಕಳೆದ ಹಲವು ವರ್ಷಗಳಿಂದ ಕಸ ಸಂಗ್ರಹಣೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು, ಟಿಪ್ಪರ್ ವಾಹನಗಳ ಕೊರತೆ, ಸಿಬ್ಬಂದಿ ಅಭಾವ, ಸಂಬಳ ಪಾವತಿಯ ವಿಳಂಬ ಹಾಗೂ ವಾಹನಗಳ ದುರಸ್ತಿ ಸಮಸ್ಯೆಗಳು ಪ್ರಮುಖ ಕಾರಣಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಮೋದಿ ಸರ್ಕಾರಕ್ಕೆ 12 ವರ್ಷ ಪೂರ್ಣ; ನಾಳೆ ರಾಜ್ಯಾದ್ಯಂತ ವಿಶೇಷ ಪೂಜೆ ನಡೆಸಲಿರುವ ಬಿಜೆಪಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 12 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜೂನ್ 10ರಂದು ರಾಜ್ಯದಾದ್ಯಂತ ವಿಶೇಷ ಪೂಜೆಗಳನ್ನು ಆಯೋಜಿಸಲು ಬಿಜೆಪಿ ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ, ಪ್ರಧಾನಿ ಮೋದಿ ಅವರು ಕಳೆದ 12 ವರ್ಷಗಳಿಂದ ದೇಶದ ಪ್ರಧಾನ ಸೇವಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶೇಷ ಪೂಜೆ ನೆರವೇರಿಸಲಿದ್ದು, ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬನಶಂಕರಿಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿಶೇಷ ಪೂಜೆ ಸಲ್ಲಿಸಲಿದ್ದು, ಮಾಜಿ ಸಚಿವ ಗೋಪಾಲಯ್ಯ ಮಹಾಲಕ್ಷ್ಮಿ ಲೇಔಟ್‌ನ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಂತಿನಗರದ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ಪ್ರಧಾನಿ ಮೋದಿ ಅವರು 12 ವರ್ಷಗಳ ಕಾಲ ದೇಶದ ಆಡಳಿತ ನಡೆಸಿ ಜನಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ, ಆಯಸ್ಸು ಹಾಗೂ ದೇಶದ ಅಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.

ರಾಜ್ಯದ 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಚಿವರು ವಿಶೇಷ ಪೂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಣ್ಣಿನ ಆರೋಗ್ಯ ಕಾಪಾಡಿದರೆ ಕೃಷಿ ಉಳಿಯುತ್ತದೆ

ವಿಜಯಸಾಕ್ಷಿ ಸುದ್ದಿ, ಗದಗ: ರೈತರ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಫಲವತ್ತತೆ ಕಾಪಾಡುವಿಕೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಖೇತ್ ಬಚಾವೋ ಅಭಿಯಾನ’ಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೃಷಿ ಭೂಮಿಯ ಸಂರಕ್ಷಣೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಮಣ್ಣಿನ ಪರೀಕ್ಷೆ, ನೀರಿನ ಸಮರ್ಪಕ ಬಳಕೆ ಹಾಗೂ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

‘ಖೇತ್ ಬಚಾವೋ ಅಭಿಯಾನ’ದ ಮೂಲಕ ರೈತರಿಗೆ ಮಣ್ಣಿನ ಸವಕಳಿ ತಡೆ, ಬೆಳೆ ವೈವಿಧ್ಯತೆ, ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಇದರಿಂದ ಕೃಷಿ ಉತ್ಪಾದಕತೆ ಹೆಚ್ಚಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು. ರೈತ ಸಮುದಾಯವೂ ಸಕ್ರಿಯವಾಗಿ ಪಾಲ್ಗೊಂಡು ಇದರ ಉದ್ದೇಶವನ್ನು ಸಾಕಾರಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೆ., ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ಎಂ.ವಿ. ಚಳಗೇರಿ, ಎಸ್.ಎಸ್. ಕಲ್ಮನಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಭಿಯಾನದ ಅಂಗವಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರ ಸಭೆಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ಕೃಷಿ ತಂತ್ರಜ್ಞಾನ ಮಾಹಿತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 “ಮಣ್ಣಿನ ಫಲವತ್ತತೆ ಉಳಿದರೆ ಮಾತ್ರ ರೈತರ ಬದುಕು ಮತ್ತು ಕೃಷಿಯ ಭವಿಷ್ಯ ಸುರಕ್ಷಿತವಾಗಿರುತ್ತದೆ.” — ಬಸವರಾಜ ಬೊಮ್ಮಾಯಿ

 

ಗಾಣಿಗ ಸಮಾಜ ಕಡೆಗಣನೆ ಸಹಿಸುವುದಿಲ್ಲ: ಬಸವರಾಜ ಬಿಂಗಿ

ವಿಜಯಸಾಕ್ಷಿ ಸುದ್ದಿ, ಗದಗ: ಹೊಸ ಸರ್ಕಾರದಲ್ಲಿ ಗಾಣಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡದಿರುವುದು ದುರ್ದೈವದ ಸಂಗತಿ. ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಣಿಗ ಸಮುದಾಯದ ಶಾಸಕರಿಗೆ ಅವಕಾಶ ನೀಡಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಗಾಣಿಗ ಸಮಾಜದ ಮುಖಂಡ ಬಸವರಾಜ ಬಿಂಗಿ ಎಚ್ಚರಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಣ ಸವದಿ, ವೀರೇಂದ್ರ ಪಪ್ಪಿ ಹಾಗೂ ಬಿ.ಕೆ. ಸಂಗಮೇಶ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಸಮಾಜದ ಮುಖಂಡ ಡಾ. ಶೇಖರ್ ಸಜ್ಜನವರ ಮಾತನಾಡಿ, “ರಾಜ್ಯದಲ್ಲಿಯೇ ಅತಿಹೆಚ್ಚು ಮತಗಳ ಅಂತರದಿಂದ ಗೆದ್ದಿರುವ ಹಾಗೂ ಅನುಭವಿ ಹೋರಾಟಗಾರರಾಗಿರುವ ಲಕ್ಷ್ಮಣ ಸವದಿ ರಾಜ್ಯದ ಪ್ರಮುಖ ನಾಯಕರಾಗಿದ್ದಾರೆ. ಅವರನ್ನು ಸಚಿವರನ್ನಾಗಿ ಮಾಡುವುದು ಸಮಾಜದ ಬಹುದಿನಗಳ ಬೇಡಿಕೆ,” ಎಂದರು.

ಬಿಜೆಪಿಯಿಂದ ಕಾಂಗ್ರೆಸ್‌ಗೆ ಕರೆತರುವ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಈಗ ಆ ಭರವಸೆ ಈಡೇರಿಸುವ ಸಮಯ ಬಂದಿದೆ ಎಂದು ಹೇಳಿದರು.

ನಿಂಗಪ್ಪ ಕೆಂಗಾರ ಮಾತನಾಡಿ, “ಹಿಂದಿನ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಉತ್ತಮ ಆಡಳಿತ ನೀಡಿದ್ದಾರೆ. ರಾಜ್ಯದಲ್ಲಿ ಗಾಣಿಗ ಸಮಾಜವನ್ನು ಒಗ್ಗೂಡಿಸುವ ನಾಯಕತ್ವ ಅವರದು. ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟ ತೀವ್ರಗೊಳ್ಳಲಿದೆ,” ಎಂದು ಎಚ್ಚರಿಸಿದರು.

ಜಾತ್ಯತೀತ ಸರ್ಕಾರ ಹಿಂದುಳಿದ ಹಾಗೂ ತುಳಿತಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು. ಉತ್ತರ ಕರ್ನಾಟಕದಲ್ಲಿ 30ರಿಂದ 40 ಶಾಸಕರನ್ನು ಗೆಲ್ಲಿಸುವ ಸಾಮರ್ಥ್ಯ ಗಾಣಿಗ ಸಮಾಜಕ್ಕಿದೆ. ಈ ಶಕ್ತಿಯನ್ನು ಸರ್ಕಾರ ಲಘುವಾಗಿ ತೆಗೆದುಕೊಳ್ಳಬಾರದು ಎಂದು ಮುಖಂಡರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಶೋಕ ಮಂದಾಲಿ, ಗಿರಿಯಪ್ಪ ಅಸೂಟಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಗಾಣಿಗ ಸಮಾಜದ ಶಕ್ತಿಯನ್ನು ಕಡೆಗಣಿಸಿದರೆ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯಬೇಕಾಗುತ್ತದೆ.” — ಬಸವರಾಜ ಬಿಂಗಿ

 

error: Content is protected !!