Home Blog

ಗದಗ: ಬಟ್ಟೆ ತೊಳೆಯಲು ಹೋಗಿ ಅಕ್ಕ-ತಂಗಿ ಸಾವು..!

ಗದಗ : ಬೇಸಿಗೆಯಿಂದಾಗಿ ಊರಿನ ಕೆರೆ ಬತ್ತಿ ಹೋಗಿದ್ದರಿಂದ ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಶಿಕಾರಿ (15) ಹಾಗೂ ಮುತ್ತವ್ವ ಹರಣಶಿಕಾರಿ (8) ಎಂದು ಗುರುತಿಸಲಾಗಿದೆ.

ತಿಮ್ಮಾಪೂರ – ಯರೇಹಂಚಿನಾಳ ರಸ್ತೆಯ ಸಮೀಪ, ಕೊಪ್ಪಳ ಜಿಲ್ಲೆಯ ಯರೆಹಂಚಿನಾಳ ಗ್ರಾಮದ ಸರಹದ್ದಿನ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಕೃಷಿಹೊಂಡದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಗ್ರಾಮದ ಕೆರೆ ಸಂಪೂರ್ಣ ಬತ್ತಿ ಹೋಗಿರುವುದರಿಂದ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದರು. ಇದೇ ಕಾರಣಕ್ಕೆ ಮಂಗಳವಾರ ಮಧ್ಯಾಹ್ನ ಇಬ್ಬರು ಬಾಲಕಿಯರು ಕೃಷಿಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈಜಲು ಬಾರದೆ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಕೃಷಿಹೊಂಡದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆದರು. ಇಬ್ಬರು ಹೆಣ್ಣುಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಘಟನಾ ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಇರುವುದರಿಂದ ಜನರು ಕೃಷಿಹೊಂಡಗಳನ್ನೇ ಅವಲಂಬಿಸಿರುವುದು ಈ ದುರಂತಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.

ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ: ಕುಮಾರಸ್ವಾಮಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ.

ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ ಎಂದು ಭಾವಿಸಿದ್ದೆ. ಆದರೆ, ಸಾಧನಾ ಸಮಾವೇಶಗಳನ್ನು ಮಾಡುವುದರಲ್ಲಿ ಸಂಭ್ರಮಿಸುತ್ತಿರುವ ಈ ಸರ್ಕಾರಕ್ಕೆ ರೈತರ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಿಡಿಕಾರಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ರಾಜ್ಯದಲ್ಲಿ 2023ರಲ್ಲಿ 2,423 ಹಾಗೂ 2024ರಲ್ಲಿ 2,971 ರೈತರು, ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಒಟ್ಟು 5,394 ರೈತರು ಜೀವ ಚೆಲ್ಲಿದ್ದಾರೆ. ಕರ್ನಾಟಕ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯ ಸರಕಾರಕ್ಕೆ ಈ ಅಂಕಿ ಅಂಶಗಳು ಗೊತ್ತಿಲ್ಲವೇ? ಅಥವಾ ಗೊತ್ತಿದ್ದರೂ ಮುಚ್ಚಿಟ್ಟಿದಿಯ ಎನ್ನುವ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.

ಇಷ್ಟು ಬೃಹತ್ ಪ್ರಮಾಣದ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಈ ಸರ್ಕಾರದವರು ಜಾಣ್ಮೆಯಿಂದ ಮುಚ್ಚಿಟ್ಟಿದಾರೆ. ಈ ಆತ್ಮಹತ್ಯೆಗಳ ಸಮರ್ಪಣೆಗಾಗಿ ತುಮಕೂರಿನಲ್ಲಿ ಇವರು ಸಮಾವೇಶ ಮಾಡಿದ್ದಾರೆ ಎಂದು ತಿಕ್ಷ್ಣವಾಗಿ ಕೇಂದ್ರ ಸಚಿವರು ಪ್ರಶ್ನಿಸಿದರು.

ಕೇವಲ ಹತ್ತು ನಿಮಿಷಗಳ ಕಾಲ ಮಳೆ ಬಂದರೆ ಇಲ್ಲಿ ನೋಡಿದರೂ ನೀರು ನಿಲ್ಲುತ್ತದೆ. ಈ ಸಮಾವೇಶಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ದುಂದು ವೆಚ್ಚ ಮಾಡಿದೆ. ಜನರನ್ನೂ ಸರಕಾರವೇ ಕರೆತರಬೇಕು. ಅದಕ್ಕೆ ಅಧಿಕಾರಿಗಳಿಗೆ ಇಂತಿಷ್ಟು ಜನರನ್ನು ಕರೆದುಕೊಂಡು ಬರುವುದಕ್ಕೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ಕಾಂಗ್ರೆಸ್ ನವರ ಕಾರ್ಯಕ್ರಮಗಳಿಗೆ ಜನ ಬರಬೇಕಲ್ಲ, ಅದಕ್ಕಾಗಿ ಅಧಿಕಾರಿಗಳನ್ನು ದುರ್ಬಳಿಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ಸರಕಾರ ರೈತರ ಜೀವನದ ಮೇಲೆ ಸಮಾಧಿ ಕಟ್ಟಿ, ಅದರ ಮೇಲೆ ತಮ್ಮ ವೈಭವ ಪ್ರದರ್ಶನ ಮಾಡುತ್ತಿದ್ದಾರೆ. ಇವರನ್ನು ಜನ ಕ್ಷಮಿಸುವುದಿಲ್ಲ. ಒಂದೆಡೆ ರೈತರು ನಿತ್ಯವೂ ಸಾಯುತ್ತಿದ್ದಾರೆ ಇವರು ಗ್ಯಾರಂಟಿ ಹೆಸರಿನಲ್ಲಿ ಹಬ್ಬ ಮಾಡುತ್ತಿದ್ದಾರೆ. ಇವರ ಗ್ಯಾರಂಟಿಗಳು ಉತ್ತಮವಾಗಿ ಇದ್ದಿದ್ದರೆ ರೈತರು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ಸಚಿವ ಕುಮಾರಸ್ವಾಮಿ ಅವರು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದರು.

ಸಮಾವೇಶದ ಹೆಸರಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ. ಕಳೆದ ವರ್ಷ ಕೂಡ ಹಕ್ಕು ಪತ್ರಗಳ ಬಗ್ಗೆಯೇ ಹೆಚ್ಚು ಚರ್ಚೆ ಮಾಡಿದ್ದರು. ನಮ್ಮ ಬಳಿ ಬರುವ ರೈತರು ಹಾಗೂ ಅನೇಕ ಜಿಲ್ಲೆಗಳಲ್ಲಿ ನಾವು ಹೋದಾಗ ಕಂದಾಯ ಇಲಾಖೆಯ ಬಗ್ಗೆಯೇ ಹೆಚ್ಚು ದೂರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. 6ನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಇವರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ರೈತ ಆತ್ಮಹತ್ಯೆ ಪ್ರಕರಣಗಳು ಇವರ ಯೋಗ್ಯತೆಯನ್ನು ಸಾರಿ ಸಾರಿ ಸಾರಿ ಹೇಳುತ್ತಿವೆ ಎಂದು ಸಚಿವರು ಅಕ್ರೋಶ ವ್ಯಕ್ತಪಡಿಸಿದರು.

ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಸಿದ್ದ:

ಬಿಡದಿ ಟೌನ್ ಶಿಪ್ ವಿಚಾರವಾಗಿ ಚರ್ಚೆಗೆ ಪಂಥಾಹ್ವಾನ ನೀಡಿರುವ ರಾಜ್ಯದ ಉಪ ಮುಖ್ಯಮಂತ್ರಿಯ ಸವಾಲನ್ನು ಸ್ವೀಕರಿಸಿದ ಕೇಂದ್ರ ಸಚಿವರು, ಚರ್ಚೆ ಮಾಡಲು ತಯಾರ್ ಇದ್ದೇನೆ. ಎಲ್ಲಿಗೆ ಬೇಕಾದರೂ ಬರಲಿ. ಬಿಡದಿಯಲ್ಲಿ ಮೂರೂವರೆ ಸಾವಿರ ಜನ ತಕರಾರು ತೆಗೆದು ಅರ್ಜಿ ಕೊಟ್ಟಿದ್ದಾರೆ. ರೈತರನ್ನು ರೌಡಿಗಳು ಮತ್ತು ಪೊಲೀಸರ ಮೂಲಕ ಬೆದರಿಸುವ ಕೆಲಸ ಮಾಡುತ್ತಿದ್ದಾರೆ. ಯೋಜನೆಯಿಂದ ಒಳ್ಳೆಯದು ಆಗುವುದಿದ್ದರೆ ರೈತರೆ ಸಂತೋಷವಾಗಿ ಭೂಮಿ ಕೊಡುತ್ತಿದ್ದರು. ಆದರೆ ಇಲ್ಲಿ ಭೂಮಿ ಕೊಡಲು ರೈತರು ಬಯಸುತ್ತಿಲ್ಲ. ಹೀಗಾಗಿ ರೈತರ ಹಿತಕ್ಕೆ ತಕ್ಕಂತೆ ಸರ್ಕಾರ ವರ್ತಿಸಬೇಕು ಎಂದು ಸಚಿವರು ಹೇಳಿದರು

ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್ ಸೇರುತ್ತಾರೆ:

ಎರಡು ಬಾರಿ ಶಾಸಕರಾಗಿ ಗೆದ್ದಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ್ದಾಗಿ ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.

ಇದೊಂದು ಗೌರವಪೂರ್ವಕ ಭೇಟಿ ಎಂದ ಅವರು, ಜೆಡಿಎಸ್ ಪಕ್ಷ ಸೇರಲು ಅವರು ಉತ್ಸುಕರಾಗಿದ್ದಾರೆ. ಸದ್ಯದಲ್ಲೇ ದಿನಾಂಕ ನಿಗದಿ ಮಾಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಪಕ್ಷದ ಬಲವರ್ಧನೆಗೆ ನಾವು ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇವೆ. ಈಗಿನ ತಲೆ ಪಕ್ಷಕ್ಕೆ ಶಕ್ತಿ ತುಂಬುತ್ತಿದ್ದೇವೆ. ಅದರ ಭಾಗವಾಗಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ಕಚೇರಿಗೆ ಆಗಮಿಸುವುದಕ್ಕೂ ಮುನ್ನ ಸಚಿವರು ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿದ್ದರು. ಸುಮಾರು ಒಂದು ತಾಸಿನ ಈ ಭೇಟಿ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಮಲ್ಲೇಶ್ ಬಾಬು, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಮ್. ರಮೇಶ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಅನೇಕ ಮುಖಂಡರು ಸಚಿವರ ಜೊತೆಯಲ್ಲಿ ಇದ್ದರು.

3 ವರ್ಷದಲ್ಲಿ ಸರ್ಕಾರದ ಸಾಧನೆ ಏನು?: ತುಮಕೂರು ಸಮಾವೇಶದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ತುಮಕೂರಿನಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಈ ಮೂರು ವರ್ಷದಲ್ಲಿ ಸರ್ಕಾರ ಮಾಡಿದ ಸಾಧನೆ ಏನು?”ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರುದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ತನ್ನದೇ ಸಾಧನೆಗಳಿಲ್ಲದ ಕಾರಣ ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳನ್ನು ತಮ್ಮ ಸರ್ಕಾರದ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

“ಹುಬ್ಬಳ್ಳಿಯಲ್ಲಿ ಭಾರಿ ಪ್ರಮಾಣದಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಸಲಾಗಿದೆ. ಆದರೆ ಅದು ಬಿಜೆಪಿ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ. ಹಳೆ ಸರ್ಕಾರದ ಯೋಜನೆಗಳನ್ನು ಈಗಿನ ಸರ್ಕಾರ ತನ್ನ ಸಾಧನೆ ಎಂದು ಜನರಿಗೆ ತೋರಿಸಲು ಯತ್ನಿಸುತ್ತಿದೆ” ಎಂದು ದೂರಿದರು.

ತುಮಕೂರಿನಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶ ಜನರಲ್ಲಿ ನಗೆಪಾಟಲಿಗೆ ಗುರಿಯಾಗಿದೆ. ಈ ಕುರಿತು ಜನರೇ ವ್ಯಂಗ್ಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಈ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಯಾವುದೇ ಕೌಂಟರ್ ಕಾರ್ಯಕ್ರಮ ನಡೆಸುವುದಿಲ್ಲ. ಜನರಿಗೆ ವಾಸ್ತವ ಸ್ಥಿತಿ ಗೊತ್ತಿದೆ ಎಂದು ಸ್ಪಷ್ಟಪಡಿಸಿದರು.

ಉಪ ಚುನಾವಣೆಗಳ ವಿಚಾರವನ್ನು ಪ್ರಸ್ತಾಪಿಸಿದ ಅವರು, “ಸರ್ಕಾರ ನಿಜವಾಗಿಯೂ ಸಾಧನೆ ಮಾಡಿದ್ದರೆ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಹಲವು ದಿನಗಳು ತಂಗಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದು ಟೀಕಿಸಿದರು.

ಮತದಾನಕ್ಕೂ ಕೆಲವೇ ದಿನಗಳ ಮೊದಲು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲಾಗಿದೆ. ಜಾಹೀರಾತುಗಳ ಮೂಲಕ ರಾಜ್ಯದ ಆರ್ಥಿಕ ಹಾಗೂ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬ ಭಾವನೆ ಮೂಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.ಸಮಾವೇಶದ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಇದೇ ವೇಳೆ ಬಿಜೆಪಿ ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ ಅವರು, “ನಾವು ಹೋರಾಟ ಮಾಡಿರಲಿಲ್ಲ ಎಂದರೆ ವಾಲ್ಮೀಕಿ ಹಗರಣದಲ್ಲಿ ಸಚಿವರ ರಾಜೀನಾಮೆ ಆಗುತ್ತಿರಲಿಲ್ಲ” ಎಂದು ಹೇಳಿದರು.

ಈ ಸರ್ಕಾರಕ್ಕೆ ಭಂಡತನ ಹೆಚ್ಚಾಗಿದೆ. ಯಾವುದೇ ಹೋರಾಟಕ್ಕೂ ತಲೆಬಾಗದ ಮನೋಭಾವ ತೋರಿಸುತ್ತಿದೆ. ಆದರೆ ರಾಜ್ಯದ ಜನ ಈ ಎಲ್ಲವನ್ನು ಗಮನಿಸುತ್ತಿದ್ದಾರೆ. ಈ ರಾಜಕೀಯ ಆಟ ಹೆಚ್ಚು ದಿನ ನಡೆಯುವುದಿಲ್ಲ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿದ್ದೇ ಸರ್ಕಾರದ ಸಾಧನೆ: ಕಾಂಗ್ರೆಸ್ ವಿರುದ್ಧ ಬಿ. ಶ್ರೀರಾಮುಲು ವಾಗ್ದಾಳಿ

ಬಳ್ಳಾರಿ: ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ ನಾಯಕ ಬಿ. ಶ್ರೀರಾಮುಲು, “ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ದೊಡ್ಡ ಸಾಧನೆ” ಎಂದು ಆರೋಪಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ಸುಳ್ಳಿನ ಅಡಿಪಾಯದ ಮೇಲೆ ನಿಂತಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ಮಾಲೀಕರಾದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆ ಸುಳ್ಳಿನ ಸಾಕ್ಷಿದಾರರು. ಸರ್ಕಾರ ಸಂಪೂರ್ಣವಾಗಿ ಸುಳ್ಳಿನ ರಾಜಕಾರಣದ ಮೇಲೆ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ರೈತರ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರೈತರಿಗೆ ಸರ್ಕಾರದಿಂದ ಸಮರ್ಪಕ ನೆರವು ಸಿಗುತ್ತಿಲ್ಲ. ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನವೂ ಇನ್ನೂ ಬಾಕಿಯಾಗಿದೆ ಎಂದು ಆರೋಪಿಸಿದರು.

ಇದೇ ವೇಳೆ ಕೃಷಿ ವೆಚ್ಚ ಹಾಗೂ ಬೀಜದ ಬೆಲೆ ಏರಿಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಟೀಕಿಸಿದರು.

ರೈತರ ಬದುಕು ಉಳಿಸುವ ಬದಲು ಸರ್ಕಾರ ರೈತರ ಆತ್ಮಹತ್ಯೆ ಭಾಗ್ಯ ನೀಡುವ ಕೆಲಸ ಮಾಡುತ್ತಿದೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು. ರೈತರ ಸಾವಿನ ಅಂಕಿ-ಅಂಶಗಳನ್ನು ಉಲ್ಲೇಖಿಸಿದ ಅವರು, “ಇದು ಮಾನಗೆಟ್ಟ ಸರ್ಕಾರ. ರೈತರ ನೋವಿಗೆ ಸ್ಪಂದಿಸುವ ಬದಲು ರಾಜಕೀಯ ಸಮಾವೇಶಗಳಲ್ಲಿ ತೊಡಗಿಕೊಂಡಿದೆ” ಎಂದು ಆರೋಪಿಸಿದರು.

ಗೋಕರ್ಣ, ಕಾರವಾರ ಬೀಚ್‌ಗಳಲ್ಲಿ ವಾಟರ್ ಸ್ಪೋರ್ಟ್ಸ್ ಸ್ಥಗಿತ: ಪ್ರವಾಸಿಗರಿಗೆ ಜಿಲ್ಲಾಡಳಿತ ಶಾಕ್

ಕಾರವಾರ: ಮಳೆಗಾಲ ಆರಂಭ ಮತ್ತು ಹವಾಮಾನ ವೈಪರಿತ್ಯದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕಡಲತೀರ ಹಾಗೂ ನದಿಪ್ರದೇಶಗಳಲ್ಲಿ ನಡೆಯುತ್ತಿದ್ದ ಜಲಸಾಹಸ ಕ್ರೀಡೆಗಳಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿಷೇಧ ಹೇರಿದೆ.

ಜಲಸಾಹಸ ಕ್ರೀಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಹೊರಡಿಸಿರುವ ಆದೇಶದಂತೆ, ಮೇ 19ರಿಂದ ಮಳೆಗಾಲ ಮುಗಿಯುವವರೆಗೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಯಾವುದೇ ಜಲಕ್ರೀಡೆ ಚಟುವಟಿಕೆ ನಡೆಸಲು ಅವಕಾಶ ಇರುವುದಿಲ್ಲ.

ಗೋಕರ್ಣ ಮುಖ್ಯ ಬೀಚ್, ಓಂ ಬೀಚ್, ಕುಡ್ಲೆ ಬೀಚ್, ಹಾಫ್‌ಮೂನ್ ಬೀಚ್, ಪ್ಯಾರಡೈಸ್ ಬೀಚ್, ಮುರುಡೇಶ್ವರ ಹಾಗೂ ಕಾರವಾರ ಬೀಚ್‌ಗಳಲ್ಲಿ ನಡೆಯುತ್ತಿದ್ದ ಬೋಟಿಂಗ್ ಮತ್ತು ವಾಟರ್ ಸ್ಪೋರ್ಟ್ಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮುರುಡೇಶ್ವರದ ನೇತ್ರಾಣಿ ದ್ವೀಪದಲ್ಲಿ ನಡೆಯುತ್ತಿದ್ದ ಸ್ಕೂಬಾ ಡೈವಿಂಗ್ ಚಟುವಟಿಕೆಗೂ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ತದಡಿ ಅಘನಾಶಿನಿ ನದಿ ತೀರ ಹಾಗೂ ಶರಾವತಿ ಹಿನ್ನೀರಿನ ಪ್ರವಾಸಿ ಬೋಟಿಂಗ್ ಸೇವೆಯನ್ನೂ ನಿಲ್ಲಿಸಲಾಗಿದೆ.

ಹವಾಮಾನ ಇಲಾಖೆ ಚಂಡಮಾರುತ ಮತ್ತು ಬಿರುಗಾಳಿ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಅಪ್ಸರಕೊಂಡ ಕಡಲ ತೀರದಲ್ಲಿ ಪ್ರೀ-ವೆಡ್ಡಿಂಗ್ ಸೆಟ್ ಅಳವಡಿಕೆಗೂ ಅವಕಾಶ ನೀಡಿಲ್ಲ.

ಪೆಂಡಾಲ್‌ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಬಾಲಕ ಸಾವು: ಬೆಸ್ಕಾಂ ವಿರುದ್ಧ ಆಕ್ರೋಶ

0

ಕೋಲಾರ: ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ನಗರದ ಪುಲ್ ಷಾ ಮೊಹಲ್ಲಾದಲ್ಲಿ ನಡೆದಿದೆ.

ತಿಥಿ ಕಾರ್ಯಕ್ಕಾಗಿ ಹಾಕಲಾಗಿದ್ದ ಪೆಂಡಾಲ್ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಈ ವೇಳೆ ಅಲ್ಲಿದ್ದ ಮಕ್ಕಳು ಅದರ ಸಂಪರ್ಕಕ್ಕೆ ಬಂದಿದ್ದಾರೆ. ಪರಿಣಾಮ ಸಯ್ಯದ್ ರೆಹಮಾನ್ (4) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇನ್ನೂ ಮೂವರು ಮಕ್ಕಳು ವಿದ್ಯುತ್ ಶಾಕ್‌ಗೆ ಒಳಗಾಗಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಅವರನ್ನು ರಕ್ಷಿಸಲಾಗಿದೆ. ಗಾಯಗೊಂಡ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮತ್ತು ಪೋಷಕರು ಆರೋಪಿಸಿದ್ದಾರೆ. ‘ಈ ಹಿಂದೆ ಕೂಡ ವಿದ್ಯುತ್ ತಂತಿಗಳು ಕೆಳಗೆ ಬೀಳುತ್ತಿರುವ ಬಗ್ಗೆ ದೂರು ನೀಡಿದ್ದೇವೆ. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಬಂದ ಬೆಸ್ಕಾಂ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು, ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾಹ ವಾರ್ಷಿಕೋತ್ಸವದಂದು ದರ್ಶನ್‌ಗೆ ಸಿಕ್ಕ ರಿಲೀಫ್; ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಜೊತೆ ವಿಶೇಷ ಭೇಟಿ

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಇಂದು (ಮೇ 19) ಭಾವನಾತ್ಮಕ ಕ್ಷಣ ಸಿಕ್ಕಿದೆ. ತಮ್ಮ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ಪುತ್ರ ವಿನೀಶ್ ಅವರನ್ನು ಸುಮಾರು ಹತ್ತು ತಿಂಗಳ ಬಳಿಕ ಮುಖಾಮುಖಿಯಾಗಿ ಭೇಟಿ ಮಾಡುವ ಅವಕಾಶ ದೊರೆತಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ನಂತರ ದರ್ಶನ್ ಜೈಲಿನಲ್ಲೇ ಇದ್ದು, ಕುಟುಂಬದ ಸದಸ್ಯರನ್ನು ಕೇವಲ ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿ ದೂರದಿಂದ ಮಾತ್ರ ಭೇಟಿಯಾಗುತ್ತಿದ್ದರು.

ಈ ನಡುವೆ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಡಿಜಿಪಿ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ ವಿಶೇಷ ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ದರ್ಶನ್ ಕೂಡ ಜೈಲು ಅಧಿಕಾರಿಗಳ ಬಳಿ ಇದೇ ಬೇಡಿಕೆ ಇಟ್ಟಿದ್ದರು.

ಅಂತಿಮವಾಗಿ ಜೈಲಧಿಕಾರಿಗಳು ಅರ್ಧ ಗಂಟೆಯ ಮುಖಾಮುಖಿ ಭೇಟಿಗೆ ಅನುಮತಿ ನೀಡಿದ್ದು, ದರ್ಶನ್ ಇರುವ ಕೊಠಡಿಯಲ್ಲೇ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಭೇಟಿ ಮಾಡಿ ಸಮಯ ಕಳೆದಿದ್ದಾರೆ.

ಹತ್ತು ತಿಂಗಳ ಬಳಿಕ ಕುಟುಂಬದ ಜೊತೆ ಹತ್ತಿರದಿಂದ ಮಾತನಾಡಿದ ದರ್ಶನ್ ಭಾವುಕರಾಗಿದ್ದರೆಂದು ಮೂಲಗಳು ತಿಳಿಸಿವೆ.

ಬೆಲೆ ಏರಿಕೆ, ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರವೇ ಕಾರಣ: ತುಮಕೂರಿನಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ತುಮಕೂರು: ಇಂದಿನ ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಿದ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ ‘ಸಾಧನಾ ಸಮಾವೇಶ’ದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಶಿಕ್ಷಣ ನೀತಿಗಳನ್ನು ತೀವ್ರವಾಗಿ ಟೀಕಿಸಿದರು.

ನರೇಂದ್ರ ಮೋದಿ ಅಮೆರಿಕಕ್ಕೆ ತೆರಳಿದಾಗ ಡೊನಾಲ್ಡ್ ಟ್ರಂಪ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುತ್ತಿದ್ದರು. ಟ್ರಂಪ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇರಾನ್ ಮೇಲೆ ಯುದ್ಧವೂ ನಡೆಯಿತು. ಆದರೆ ಇರಾನ್ ಮೇಲೆ ದಾಳಿ ನಡೆದಾಗ ಮೋದಿ ಒಮ್ಮೆಯೂ ವಿಷಾದ ವ್ಯಕ್ತಪಡಿಸಲಿಲ್ಲ ಎಂದು ಹೇಳಿದರು.

ಮಧ್ಯಪ್ರಾಚ್ಯದಲ್ಲಿ ಉಂಟಾದ ಉದ್ವಿಗ್ನತೆಯಿಂದ ಇಂಧನ ದರ ಏರಿಕೆ ಉಂಟಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ. ಈ ಸ್ಥಿತಿಗೂ ಪ್ರಧಾನಿ ಮೋದಿ ಅವರೇ ನೇರ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಇದೇ ವೇಳೆ ಉದ್ಯಮಿಗಳಾದ ಗೌತಮ್ ಅದಾನಿ ಹಾಗೂ ಮುಕೇಶ್ ಅಂಬಾನಿ ಕುರಿತು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಮೋದಿ ಪ್ರಧಾನಿಯಾದ ಬಳಿಕ ಲಾಭ ಪಡೆದವರು ಅಂಬಾನಿ ಮತ್ತು ಅದಾನಿ ಮಾತ್ರ ಎಂದು ಟೀಕಿಸಿದರು.

2014ರಲ್ಲಿ ಗೌತಮ್ ಅದಾನಿ ಅವರ ಆಸ್ತಿ ಮೌಲ್ಯ ಸುಮಾರು 16 ಸಾವಿರ ಕೋಟಿ ರೂಪಾಯಿ ಇತ್ತು. ಇಂದು ಅದು ಲಕ್ಷಾಂತರ ಕೋಟಿಗೆ ಏರಿಕೆಯಾಗಿದೆ. ಅದೇ ರೀತಿ ಮುಕೇಶ್ ಅಂಬಾನಿಯವರ ಆರ್ಥಿಕ ಸ್ಥಿತಿಯೂ ಬಹಳಷ್ಟು ವೃದ್ಧಿಯಾಗಿದೆ.

ಆದರೆ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರದ ನೀತಿಗಳಿಂದ ಸಾಮಾನ್ಯ ಜನರ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದ್ದು, ಯುವಕರು ಹಾಗೂ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮುಂದಿನ ಐಪಿಎಲ್ ನಲ್ಲಿ ಧೋನಿ ಆಡ್ತಾರಾ? ಸುರೇಶ್ ರೈನಾ ಕೊಟ್ಟ ಉತ್ತರ ಏನು?

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್. ಧೋನಿ ಅವರ ಐಪಿಎಲ್ ಭವಿಷ್ಯದ ಬಗ್ಗೆ ಮತ್ತೆ ಚರ್ಚೆಗಳು ಜೋರಾಗಿವೆ. ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಧೋನಿ, ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಮುಂದಿನ ಆವೃತ್ತಿಯಲ್ಲೂ ಅವರು ಆಡಲಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಕಳೆದ ಐದು ವರ್ಷಗಳಿಂದ ಧೋನಿ ನಿವೃತ್ತಿ ಕುರಿತ ಚರ್ಚೆಗಳು ನಡೆಯುತ್ತಲೇ ಇದ್ದರೂ, ಅವರು ಪ್ರತಿ ಬಾರಿ ಅಭಿಮಾನಿಗಳಿಗೆ ಅಚ್ಚರಿ ನೀಡುತ್ತಾ ತಂಡದೊಂದಿಗೆ ಮುಂದುವರಿದಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಧೋನಿ ಚೆನ್ನೈ ತಂಡದ ಭಾಗವಾಗಿದ್ದರೂ, ಇದುವರೆಗೆ ಯಾವುದೇ ಪಂದ್ಯದಲ್ಲಿ ಮೈದಾನಕ್ಕಿಳಿದಿಲ್ಲ. ಇದರಿಂದ ಅವರ ಮುಂದಿನ ನಿರ್ಧಾರ ಕುರಿತು ಇನ್ನಷ್ಟು ಕುತೂಹಲ ಹೆಚ್ಚಾಗಿದೆ.

ಮೇ 18ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್‌ನ ತವರಿನ ಕೊನೆಯ ಪಂದ್ಯದಲ್ಲಿ ಧೋನಿ ಮೈದಾನಕ್ಕೆ ಬಂದು ಅಭಿಮಾನಿಗಳೊಂದಿಗೆ ಕ್ಷಣಗಳನ್ನು ಹಂಚಿಕೊಂಡರು. ಈ ವೇಳೆ ಅಭಿಮಾನಿಗಳಿಗೆ ಕೈಬೀಸುವುದರ ಜೊತೆಗೆ ಕೆಲವರಿಗೆ ಆಟೋಗ್ರಾಫ್ ನೀಡಿ, ಚೆಂಡುಗಳನ್ನು ಉಡುಗೊರೆಯಾಗಿ ನೀಡಿದರು.

ಈ ಪಂದ್ಯ ವೀಕ್ಷಣೆಗೆ ಆಗಮಿಸಿದ್ದ ಧೋನಿ ಅವರ ಮಾಜಿ ಸಹ ಆಟಗಾರ ಹಾಗೂ ಚೆನ್ನೈ ಅಭಿಮಾನಿಗಳಲ್ಲಿ ‘ಚಿನ್ನ ಥಲಾ’ ಎಂದೇ ಪ್ರಸಿದ್ಧರಾಗಿರುವ ಸುರೇಶ್ ರೈನಾ, ಧೋನಿ ಅವರ ಮುಂದಿನ ಐಪಿಎಲ್ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.

ಮುಂದಿನ ವರ್ಷವೂ ಆಡಬೇಕು ಎಂದು ನಾನು ಧೋನಿಗೆ ಕೇಳಿದ್ದೆ. ಅದಕ್ಕೆ ಅವರು ‘ನನ್ನ ದೇಹ ಸ್ವಲ್ಪ ದಣಿದಂತೆ ಅನಿಸುತ್ತಿದೆ’ ಎಂದು ಹೇಳಿದರು. ಆದರೆ ನಾನು ನೀವು ಮುಂದಿನ ವರ್ಷವೂ ಆಡಲೇಬೇಕು ಎಂದು ಒತ್ತಾಯಿಸಿದ್ದೇನೆ ಎಂದು ರೈನಾ ಹೇಳಿದ್ದಾರೆ.

ಅಂತಿಮ ನಿರ್ಧಾರ ಧೋನಿ ಅವರದ್ದೇ ಆಗಿದ್ದು, ಅವರು ಮುಂದಿನ ಆವೃತ್ತಿಯಲ್ಲಿ ಆಡಲು ಸಿದ್ಧರಾಗಿರಬಹುದು ಎಂಬ ಭಾವನೆ ಇದೆ ಎಂದು ರೈನಾ ಅಭಿಪ್ರಾಯಪಟ್ಟಿದ್ದಾರೆ.

ಜನರ ಹಣದಲ್ಲಿ ಕಾಂಗ್ರೆಸ್ ಸರ್ಕಾರ ಮೋಜು-ಮಸ್ತಿ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು:  ರಾಜ್ಯ ಸರ್ಕಾರ ಆಯೋಜಿಸಿರುವ ಸಾಧನಾ ಸಮಾವೇಶವನ್ನು ತೀವ್ರವಾಗಿ ಟೀಕಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜನರ ತೆರಿಗೆ ಹಣದಲ್ಲಿ ಮೋಜು-ಮಸ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಈ ಸಮಾವೇಶ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವ ಸಾಧನೆಗಾಗಿ ಈ ಸಮಾವೇಶ ನಡೆಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಸರ್ಕಾರದ ವಿರುದ್ಧ ಸಾಮಾನ್ಯ ಜನರೇ ಹೆಚ್ಚು ಪ್ರಶ್ನೆ ಕೇಳುತ್ತಿದ್ದಾರೆ” ಎಂದು ಕಿಡಿಕಾರಿದರು.

ಸಾರಿಗೆ ಇಲಾಖೆಯ ಕಾರ್ಯವೈಖರಿಯನ್ನು ಪ್ರಶ್ನಿಸಿದ ನಿಖಿಲ್, ನೌಕರರ ಬಾಕಿ ವೇತನ ಮತ್ತು ಅರಿಯರ್ಸ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ಹೇಳಿದರು.

“ಸಂಧಾನ ಸಭೆ ನಡೆದರೂ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಶಕ್ತಿ ಯೋಜನೆಯಡಿ ಉಚಿತ ಬಸ್ ಸೇವೆ ಘೋಷಿಸಿದ ಸರ್ಕಾರ, ಈಗ ಸಾರಿಗೆ ಇಲಾಖೆ ಯಾವ ಸ್ಥಿತಿಗೆ ಬಂದಿದೆ ಎಂಬುದಕ್ಕೆ ಉತ್ತರ ನೀಡಬೇಕು” ಎಂದು ಆಗ್ರಹಿಸಿದರು.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಸ್ಥೆಗಳ ನಿರ್ವಹಣೆಯನ್ನೂ ಟೀಕಿಸಿದ ಅವರು, “ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದೇ ಒಂದು ಹೊಸ ಬಸ್ ಖರೀದಿಸಿಲ್ಲ. ಬಸ್‌ಗಳಿಗೆ ಟಯರ್ ಬದಲಾಯಿಸುವ ಸ್ಥಿತಿಯೂ ಇಲ್ಲ. ಬಸ್ ನಿರ್ವಹಣೆಗೆ ಬೇಕಾದಷ್ಟು ಹಣ ಸರ್ಕಾರದ ಬಳಿ ಇಲ್ಲ” ಎಂದು ಆರೋಪಿಸಿದರು.

ಸಾರಿಗೆ ನೌಕರರಿಗೆ ಸಂಬಳ ಪಾವತಿ ವಿಚಾರದಲ್ಲೂ ಸರ್ಕಾರ ಸಮರ್ಪಕ ನಿರ್ಧಾರ ಕೈಗೊಂಡಿಲ್ಲ ಎಂದು ಟೀಕಿಸಿದ ಅವರು, “ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 4,500 ಇವಿ ಬಸ್‌ಗಳನ್ನು ಬೆಂಗಳೂರಿಗೆ ಒದಗಿಸದೇ ಹೋಗಿದ್ದರೆ ಪರಿಸ್ಥಿತಿ ಇನ್ನೂ ಹದಗೆಡುತ್ತಿತ್ತು” ಎಂದರು.

ಬೆಂಗಳೂರಿನ ಕಸ ಸಮಸ್ಯೆ ಕುರಿತು ಮಾತನಾಡಿದ ನಿಖಿಲ್, “ಒಮ್ಮೆ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುತ್ತಿದ್ದ ನಗರ ಇಂದು ಕಸದ ರಾಶಿಯಿಂದ ತುಂಬಿ ಗಾರ್ಬೇಜ್ ಸಿಟಿಯಾಗಿ ಬದಲಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದರು.

error: Content is protected !!