ಬೆಂಗಳೂರು: ನಕಲಿ ಔಷಧಿ ತಯಾರಿಕೆ ಹಾಗೂ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ನಡೆದ ದಾಳಿಯ ಬೆನ್ನಲ್ಲೇ ಆರೋಗ್ಯ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿ ನಡೆಸಿ ಪ್ರಕರಣದ ಕುರಿತು ಹಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಡದಿಯಲ್ಲಿ ನಿನ್ನೆ ನಡೆದ ಕಾರ್ಯಾಚರಣೆ ವೇಳೆ ಭಾರೀ ಪ್ರಮಾಣದ ಔಷಧಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೀಟ್ ಪೊಲೀಸರಿಂದ ಅಧಿಕಾರಿಗಳಿಗೆ ಮಾಹಿತಿ ದೊರೆತ ತಕ್ಷಣ ಕಾರ್ಯಾಚರಣೆ ನಡೆಸಲಾಗಿದ್ದು, ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಿಗಳು ಪತ್ತೆಯಾಗಿವೆ. ಕಾರ್ಯಾಚರಣೆಯಲ್ಲಿ ವಿಳಂಬವಾಗಿದ್ದರೆ ಔಷಧಿಗಳನ್ನು ಬೇರೆಡೆಗೆ ಸಾಗಿಸುವ ಸಾಧ್ಯತೆ ಇತ್ತು ಎಂದು ಸಚಿವರು ತಿಳಿಸಿದ್ದಾರೆ.
ಒಂದೇ ದಿನ ಸುಮಾರು ₹5 ಕೋಟಿ ಮೌಲ್ಯದ ಔಷಧಿಗಳನ್ನು ರವಾನೆ ಮಾಡಲಾಗುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಸಿದ್ಧಯ್ಯ ಎಂಬುವರಿಗೆ ಸೇರಿದ ಫಾರ್ಮ್ಹೌಸ್ ಅನ್ನು ಪ್ರಶಾಂತ್ ಎಂಬುವರಿಗೆ ಲೀಸ್ಗೆ ನೀಡಲಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಪ್ರಭು ಎಂಬ ವ್ಯಕ್ತಿ ನಕಲಿ ಔಷಧಿ ತಯಾರಿಕೆ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಿಂದ ಕಡಿಮೆ ಬೆಲೆಗೆ ಔಷಧಿಗಳನ್ನು ತರಿಸಲಾಗುತ್ತಿತ್ತು. ಬಳಿಕ ಅವುಗಳ ಮೇಲೆ ಸ್ಥಳೀಯವಾಗಿ ಲೇಬಲ್ಗಳನ್ನು ಅಂಟಿಸಿ, ಪ್ರತಿಷ್ಠಿತ ಔಷಧಿ ಕಂಪನಿಗಳ ಉತ್ಪನ್ನಗಳಂತೆ ಬಿಂಬಿಸಿ ಆಸ್ಪತ್ರೆಗಳು ಹಾಗೂ ಮೆಡಿಕಲ್ಗಳಿಗೆ ಪೂರೈಕೆ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಸಚಿವರು ಹೇಳಿದ್ದಾರೆ. ಫೋಜ್ ಲೇಬಲ್, ಹಿಜ್ಲಮ, ಕ್ರವಿಟಾಜ್ ಸೇರಿದಂತೆ ಹಲವು ಔಷಧಿಗಳ ಹೆಸರಿನಲ್ಲಿ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಎಸ್ಪಿ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಈಗಾಗಲೇ ಗೃಹ ಸಚಿವರನ್ನು ಭೇಟಿ ಮಾಡಿ ಮಾಹಿತಿ ನೀಡಿರುವುದಾಗಿ ಯು.ಟಿ. ಖಾದರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರನ್ನೂ ಭೇಟಿ ಮಾಡಿ ಪ್ರಕರಣದ ಕುರಿತು ಚರ್ಚಿಸುವುದಾಗಿ ಹೇಳಿದ್ದಾರೆ.
ಇದು ಕೇವಲ ಸ್ಥಳೀಯ ಮಟ್ಟದ ಪ್ರಕರಣವಲ್ಲ. ಇದರ ಹಿಂದೆ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡ ಜಾಲ ಇರುವ ಸಾಧ್ಯತೆಯಿದೆ ಎಂದು ಸಚಿವರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಜಾಲದ ಹಿಂದೆ ಯಾರಿದ್ದಾರೆ? ಔಷಧಿಗಳು ಎಲ್ಲಿಂದ ಬಂದವು? ದಂಧೆಯಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ? ಜಾಲದ ಸಂಪರ್ಕ ಎಲ್ಲಿಯವರೆಗೆ ಇದೆ? ಯಾವೆಲ್ಲ ಕಡೆ ಈ ಔಷಧಿಗಳನ್ನು ಪೂರೈಕೆ ಮಾಡಲಾಗಿದೆ? ಕಳೆದ ಎರಡು ವರ್ಷಗಳಲ್ಲಿ ಎಷ್ಟು ಮಂದಿ ಈ ಔಷಧಿಗಳನ್ನು ಬಳಸಿದ್ದಾರೆ? ಎಂಬ ಎಲ್ಲಾ ಪ್ರಶ್ನೆಗಳಿಗೂ ತನಿಖೆಯ ಮೂಲಕ ಉತ್ತರ ಕಂಡುಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಅಲ್ಲದೆ, ನಕಲಿ ಔಷಧಿಗಳ ಬಳಕೆಯಿಂದ ಯಾರಾದರೂ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ವಿಧಾನಮಂಡಲದ ಸದನದಲ್ಲೂ ಚರ್ಚೆ ನಡೆಸಲಾಗುವುದು. ಕೇಂದ್ರ ಸರ್ಕಾರಕ್ಕೂ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.
ಇದೇ ವೇಳೆ ನಕಲಿ ಔಷಧಿ ದಂಧೆಯ ಕುರಿತು ಸಮಯಕ್ಕೆ ಸರಿಯಾಗಿ ಮಾಹಿತಿ ನೀಡಿ ಕಾರ್ಯಾಚರಣೆಗೆ ನೆರವಾದ ಬೀಟ್ ಪೊಲೀಸರ ಕಾರ್ಯವನ್ನು ಸಚಿವರು ಶ್ಲಾಘಿಸಿದ್ದಾರೆ. ಮಾಹಿತಿ ನೀಡಿ ಕಾರ್ಯಾಚರಣೆಗೆ ಸಹಕರಿಸಿದ ಪೊಲೀಸರಿಗೆ ವಿಶೇಷ ಬಹುಮಾನ ನೀಡುವುದಾಗಿ ಯು.ಟಿ. ಖಾದರ್ ಘೋಷಿಸಿದ್ದಾರೆ.