ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಸಮೀಪ ನಡೆದ ಮಹ್ಮದ್ ಫಾರೂಕ್ ಶೇಖಸನದಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ನಿಶ್ಚಿತಾರ್ಥವಾದ ಯುವತಿಯ ಪ್ರಿಯಕರನೇ ಸಂಚು ರೂಪಿಸಿ ಹತ್ಯೆ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಕೊಲೆಯಾದ ಮಹ್ಮದ್ ಫಾರೂಕ್ ಅವರಿಗೆ ಸುಮಾರು ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಆದರೆ, ನಿಶ್ಚಿತಾರ್ಥವಾದ ಯುವತಿಯನ್ನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದ ದಾವಲಸಾಬ್ ಮಕಾಂದಾರ್, ಫಾರೂಕ್ ಅವರನ್ನು ಸಂಪರ್ಕಿಸಿ ತನ್ನ ಪ್ರೀತಿಯ ವಿಚಾರ ತಿಳಿಸಿದ್ದಾನೆ ಎನ್ನಲಾಗಿದೆ. ಈ ವಿಚಾರದಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಜಗಳವೂ ನಡೆದಿತ್ತು.
ಘಟನೆಯ ದಿನ ದಾವಲಸಾಬ್ ಫಾರೂಕ್ಗೆ ಫೋನ್ ಕರೆ ಮಾಡಿ ಜಮೀನಿಗೆ ಕರೆಯಿಸಿಕೊಂಡಿದ್ದಾನೆ. ಬಳಿಕ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು ಫಾರೂಕ್ ಜೊತೆ ಜಗಳವಾಡಿ, ಕೊಡಲಿಯಿಂದ ಹೊಡೆದು ಭೀಕರವಾಗಿ ಹತ್ಯೆ ನಡೆಸಿದ್ದಾರೆ. ಕೊಲೆ ಬಳಿಕ ಮುಳಗುಂದ ಸಮೀಪದ ಹಳ್ಳದಲ್ಲಿ ಕೊಡಲಿಯನ್ನು ಬಿಸಾಕಿ ಪರಾರಿಯಾಗಿದ್ದರು.
ಈ ಪ್ರಕರಣ ಸಂಬಂಧ ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಿವಾಸಿ ದಾವಲಸಾಬ್ ಮಕಾಂದಾರ್, ಮಕಬೂಲಸಾಬ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಆರೋಪಿಗಳನ್ನು ಕಾನೂನು ಸಂಘರ್ಷಕ್ಕೆ ಒಳಪಡಿಸಲಾಗಿದೆ.
ಫೋನ್ ಕಾಲ್ಗಳ ಹಾದಿ ಬೆನ್ನಟ್ಟಿದ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

