Home Blog

ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಬುಧವಾರ ನಡೆದ ಟಾರ್ಗೆಟ್ ಇಂಡಿಯಾ ಕಾರ್ಯಕ್ರಮದಲ್ಲಿ ಹಾಗೂ ಬಳಿಕ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಮಾತನಾಡಿದರು.

“ಬೆಂಗಳೂರಿನಲ್ಲಿ ಕಚೇರಿ ಜಾಗದ ಬಾಡಿಗೆ 1 ರಿಂದ 1.5 ಡಾಲರ್ ಇದೆ. ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಅರ್ಧ ಡಾಲರ್ ಗೆ ಸಿಗುತ್ತದೆ. ಅಲ್ಲಿ ಡಬಲ್ ಎಫ್ಎಆರ್ ನೀಡಲು ಮುಂದಾಗಿದ್ದೇವೆ. ಆ ಮೂಲಕ ಅಲ್ಲಿಯೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ನೀಡಲು ಮುಂದಾಗಿದ್ದೇವೆ. ಕರ್ನಾಟಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ನಿಮ್ಮ ಸಲಹೆಗಳಿಗೆ ನಾವು ಮುಕ್ತರಾಗಿದ್ದೇವೆ” ಎಂದರು.

“ನೀವೆಲ್ಲರೂ ಬಲಿಷ್ಠವಾಗಿ ಬೆಳೆಯಲು ಎಲ್ಲಾ ಸಹಕಾರ ನೀಡಲು ಸಿದ್ಧ. ನೀವು ಬಲಿಷ್ಠರಾದರೆ ನಾವು ಬಲಿಷ್ಠರಾಗಲು ಸಾಧ್ಯ. ನೀವೆಲ್ಲರೂ ಕರ್ನಾಟಕದ ಪ್ರಗತಿಯ ಪಾಲುದಾರರು, ರಾಯಭಾರಿಗಳು. ಈ ರಾಜ್ಯ ಹಾಗೂ ದೇಶದ ಪ್ರಗತಿಗೆ ನಾವು ನಿಮ್ಮ ಜೊತೆ ಕೆಲಸ ಮಾಡಲಿದ್ದೇವೆ. ನಾವೆಲ್ಲರೂ ಒಂದೇ ತಂಡ ‘ಟೀಮ್ ಕರ್ನಾಟಕ’. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು” ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

“ಬೆಂಗಳೂರಿನಲ್ಲಿ ಪ್ರತಿ ತಿಂಗಳು 30 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350 ಕಿ. ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀ ಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ.

ನೀವೆಲ್ಲರೂ ಹೆಬ್ಬಾಳ ಬಳಿ ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದೀರಿ. ಈಗಾಗಿ ನಾವು ಸಣ್ಣ ಟನಲ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಜೊತೆಗೆ ಬೆಂಗಳೂರಿನಲ್ಲಿ 40 ಕಿ. ಮೀ ಉದ್ದದ ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಆದೇಶ ಹೊರಡಿಸಲಾಗುವುದು. ಇವುಗಳ ಜೊತೆಗೆ 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಯೋಜನೆ ರೂಪಿಸಿದ್ದೇವೆ.

133 ಕಿ.ಮೀ ಉದ್ದದ ಮೇಲ್ಸೇತುವೆ ಯೋಜನೆ ರೂಪಿಸಿದ್ದೇವೆ. ಜೊತೆಗೆ 123 ಕಿ. ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ನಿರ್ಮಾಣ ಮಾಡುತ್ತಿದ್ದೇವೆ. ಮೊದಲ ಹಂತಕ್ಕೆ ನಾವು 26 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದೇವೆ. ಹೀಗೆ ಬೆಂಗಳೂರಿನ ಪ್ರಗತಿಗೆ ಮುಂದಾಗಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಕರ್ನಾಟಕ ಪ್ರತಿಭಾವಂತ ಮಾನವ ಸಂಪನ್ಮೂಲಗಳ ಕೇಂದ್ರ:

“ನಮ್ಮ ರಾಜ್ಯದಲ್ಲಿ ಪ್ರತಿಭಾನ್ವಿತ ಮಾನವ ಸಂಪನ್ಮೂಲ ಇದೆ. ನಮ್ಮ ರಾಜ್ಯದಲ್ಲಿ 257 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಪ್ರತಿ ವರ್ಷ 1.50 ಲಕ್ಷ ಎಂಜಿನಿಯರ್ ಗಳನ್ನು ತಯಾರು ಮಾಡುತ್ತಿದ್ದೇವೆ. ಇಂದು ನಿಮ್ಮ ಉಪಸ್ಥಿತಿಯೇ ನಮ್ಮ ಮೇಲಿರುವ ನಂಬಿಕೆಗೆ ಸಾಕ್ಷಿಯಾಗಿದೆ. ನಮ್ಮ ಮೇಲೆ ನಂಬಿಕೆ ಇಟ್ಟಿರುವ ನಿಮಗೆ ಧನ್ಯವಾದಗಳು. ನೀವು ನಿಮ್ಮ ಸಲಹೆಗಳ ಮೂಲಕ ಈ ರಾಜ್ಯಕ್ಕೆ ಹೊಸ ರೂಪ ನೀಡುತ್ತಿದ್ದೇವೆ. ನಮ್ಮ ಜೊತೆ ಕೆಲಸ ಮಾಡಿದವರು ಯಾರೂ ಹಿಂದಕ್ಕೆ ಹೋಗಿಲ್ಲ. ಬೆಂಗಳೂರು ಜಾಗತಿಕ ನಗರವಾಗಿದ್ದು, ಬೆಂಗಳೂರಿನ ಮೂಲಕ ಭಾರತವನ್ನು ನೋಡಲಾಗುತ್ತಿದೆ. ಬೆಂಗಳೂರಿನಲ್ಲಿ ಉದ್ಯಮಗಳಿಗೆ ಅಗತ್ಯವಿರುವ ಸಹಕಾರ ನೀಡಿ, ನಾವೂ ಕೈ ಜೋಡಿಸುತ್ತೇವೆ ಎಂದು ಪ್ರಧಾನ ಮಂತ್ರಿಗಳು ತಿಳಿಸಿದ್ದಾರೆ” ಎಂದರು.

“ಕರ್ನಾಟಕಕ್ಕೆ ಬಂದ ಕಂಪನಿಗಳು ಇಲ್ಲಿನ ಸಾಮರ್ಥ್ಯ, ಪ್ರತಿಭೆ ಬಗ್ಗೆ ಅರಿತಿದ್ದಾರೆ. ನಾವು ಭವಿಷ್ಯದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ ಇತರೆ ಭಾಗಗಳಲ್ಲಿ ಉದ್ಯಮ ಆರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಮಹಾರಾಷ್ಟ್ರವು ಉದ್ಯಮಗಳಿಗೆ ದುಬಾರಿಯಾಗಿದ್ದು, ಅವರಿಗೆ ಕರ್ನಾಟಕ ಉತ್ತಮ ಆಯ್ಕೆಯಾಗಿದೆ ಎಂದು ನಮ್ಮ ಸ್ನೇಹಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಕಚೇರಿ ಕೆಲಸ ಮುಗಿಸಿ 30-40 ನಿಮಿಷಗಳಲ್ಲಿ ಮನೆ ಸೇರಲು ಬಯಸುತ್ತಾರೆ. ಕರ್ನಾಟಕ ಈ ಎಲ್ಲಾ ಆಯಾಮಗಳನ್ನು ಪರಿಗಣಿಸುತ್ತಿದೆ” ಎಂದು ಹೇಳಿದರು.

“ಇಲ್ಲಿನ ಸಂಸ್ಕೃತಿ ಹಾಗೂ ಹವಾಮಾನ ಬೆಂಗಳೂರಿನ ಅತಿ ದೊಡ್ಡ ಬಲ. ನಮ್ಮ ಸಂಸ್ಕೃತಿ ಉಳಿಸಿಕೊಂಡು ಪ್ರಗತಿ ಸಾಧಿಸುವ ಗುರಿ ಹೊಂದಿದ್ದೇವೆ. ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸುತ್ತಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ” ಎಂದರು.

ದೇಶದಲ್ಲಿ 138 ಅಂತಾರಾಷ್ಟ್ರೀಯ ಶಾಲೆಗಳಿದ್ದು, ಆ ಪೈಕಿ 40 ಶಾಲೆಗಳು ಕರ್ನಾಟಕ ಹಾಗೂ ಬೆಂಗಳೂರಿನಲ್ಲಿವೆ. ಬೆಂಗಳೂರಿನಲ್ಲಿ 2 ಲಕ್ಷ ವಿದೇಶಿ ಪಾಸ್ ಪೋರ್ಟ್ ದಾರರು ಕೆಲಸ ಮಾಡುತ್ತಿದ್ದಾರೆ. ನಾವು ನಿಮ್ಮ ನಿರೀಕ್ಷೆಯನ್ನು ತಲುಪಲಿದ್ದೇವೆ. ಬೆಂಗಳೂರು ಟೆಕ್ ಸಮಿಟ್ ನಿಮ್ಮೆಲ್ಲರಿಗೂ ಒಂದು ಅವಕಾಶವನ್ನು ನೀಡಲಿದ್ದು, ದೇಶದ ದೊಡ್ಡ ಟೆಕ್ ಸಮಿಟ್ ಗಳಲ್ಲಿ ಒಂದಾಗಿದೆ. ನಾವು ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮ ಸ್ಥಾಪನೆಗೆ ಆದ್ಯತೆ ನೀಡುತ್ತಿದ್ದೇವೆ” ಎಂದು ತಿಳಿಸಿದರು.

ಜಾತಿ ಗಣತಿ ವರದಿ ಅಧಿವೇಶನದಲ್ಲಿ ಮಂಡಿಸಲಿ; ಸರ್ಕಾರ ತನ್ನ ನಿಲುವು ಪ್ರಕಟಿಸಬೇಕು – ವಿ. ಸುನೀಲ್ ಕುಮಾರ್

ಬೆಂಗಳೂರು: ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಕುರಿತು ರಾಜ್ಯ ಸರ್ಕಾರ ತನ್ನ ಸ್ಪಷ್ಟ ನಿಲುವು ಪ್ರಕಟಿಸಿ, ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ವರದಿಯನ್ನು ಮಂಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಸಿದ್ಧಗೊಂಡಿರುವ ವರದಿ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಸುಮಾರು 450 ಕೋಟಿಗೂ ಅಧಿಕ ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡಿ ನಡೆಸಲಾದ ಸಮೀಕ್ಷೆಯ ವರದಿಯ ಕುರಿತು ಚರ್ಚೆಗೆ ಬಿಜೆಪಿ ಸಂಪೂರ್ಣ ಸಿದ್ಧವಿದೆ. ವಿಧಾನಮಂಡಲ ಅಧಿವೇಶನದಲ್ಲಿ ಈ ವಿಷಯಕ್ಕೆ ಪ್ರತ್ಯೇಕ ಸಮಯ ನಿಗದಿಪಡಿಸಿ ವರದಿಯಲ್ಲಿರುವ ಅಂಶಗಳನ್ನು ಸಾರ್ವಜನಿಕವಾಗಿ ಚರ್ಚೆಗೆ ತರಬೇಕು ಎಂದು ಅವರು ಹೇಳಿದರು.

ಒಬಿಸಿ ಸಮುದಾಯದ ಪರವಾಗಿ ಮಾತನಾಡುವುದಾಗಿ ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದಲ್ಲಿ ಹಿಂದುಳಿದ ವರ್ಗಗಳ ಆಯೋಗ ಅಥವಾ ಜಾತಿ ಗಣತಿ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ. ಹೊರಗೆ ಅಹಿಂದ ಹಾಗೂ ಒಬಿಸಿ ಪರವಾಗಿ ಮಾತನಾಡುವ ಸರ್ಕಾರ, ಬಜೆಟ್‌ನಲ್ಲೂ ಈ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ ಎಂದು ಟೀಕಿಸಿದರು.

ಸರ್ಕಾರದ ಬಳಿ ರಾಜ್ಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ದತ್ತಾಂಶವೇ ಇಲ್ಲದಿದ್ದರೆ ಅಭಿವೃದ್ಧಿ ಯೋಜನೆಗಳನ್ನು ಹೇಗೆ ರೂಪಿಸಲಾಗುತ್ತದೆ? ಜನರಿಗೆ ಸೌಲಭ್ಯಗಳನ್ನು ಯಾವ ಆಧಾರದ ಮೇಲೆ ನೀಡಲಾಗುತ್ತದೆ? ಸರ್ಕಾರ ಘೋಷಿಸುವ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿಯೂ ವಿಫಲವಾಗಿದೆ ಎಂದು ಆರೋಪಿಸಿದರು.

ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧುಸೂದನ್ ನಾಯಕ್ ವರದಿಯನ್ನು ತರಾತುರಿಯಲ್ಲಿ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಕಾಂತರಾಜು ವರದಿಯನ್ನು ಸರ್ಕಾರ ಸ್ವೀಕರಿಸಿರಲಿಲ್ಲ. ಬಳಿಕ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಸಚಿವ ಸಂಪುಟದ ಮುಂದೆ ತಂದರೂ, ಸಹೋದ್ಯೋಗಿಗಳ ವಿರೋಧದಿಂದ ಅದನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಹಿಂದೇಟು ಹಾಕಲಾಯಿತು ಎಂದು ಹೇಳಿದರು.

ರಾಹುಲ್ ಗಾಂಧಿ ಸೂಚನೆಯ ಮೇರೆಗೆ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಕೈಬಿಡಲಾಯಿತು. ಈಗ ಮಧುಸೂದನ್ ನಾಯಕ್ ವರದಿಯನ್ನೂ ಇದೇ ಸರ್ಕಾರ ಕಡೆಗಣಿಸುವ ಸಾಧ್ಯತೆ ಇದೆ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ವರದಿಯನ್ನೂ ‘ಘನತ್ಯಾಜ್ಯ ವಿಲೇವಾರಿ’ ಮಾಡುವಂತಾಗಲಿದೆ ಎಂದು ವಿ. ಸುನೀಲ್ ಕುಮಾರ್ ವ್ಯಂಗ್ಯವಾಡಿದರು.

ಸಾಲ ಮನ್ನಾ ಕುರಿತು ಸಿಎಂ ಪರಿಶೀಲನೆ; ಬೆಳೆ ಹಾನಿ ವರದಿ ಬಳಿಕ ನಿರ್ಧಾರ – ಲಕ್ಷ್ಮಣ್ ಸವದಿ

ಚಿಕ್ಕೋಡಿ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಾಲ ಮನ್ನಾ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಮುಂಗಾರು ಬೆಳೆಗಳಿಗೆ ಹಾನಿಯಾಗುವ ಆತಂಕ ಎದುರಾಗಿದ್ದು, ರೈತರು ಸಾಲ ಮನ್ನಾ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿ, ಸಾಲ ಮನ್ನಾ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿರುವುದನ್ನು ಸವದಿ ಉಲ್ಲೇಖಿಸಿದರು.

“ನಾಳೆ ಬೆಳಿಗ್ಗೆ 10.30ಕ್ಕೆ ಬೆಳಗಾವಿ ವಿಭಾಗ ಮಟ್ಟದ ಪರಿಶೀಲನಾ ಸಭೆ ನಡೆಯಲಿದೆ. ಸಭೆಯಲ್ಲಿ ಬೆಳೆ ಹಾನಿಯ ಪ್ರಮಾಣದ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗುವುದು. ಅದರ ಆಧಾರದ ಮೇಲೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸಮರ್ಪಕ ಮಳೆಯಾಗದ ಕಾರಣ ನದಿಗೆ ನೀರಿನ ಹರಿವು ವಿಳಂಬವಾಗಿದ್ದು, ಅದರ ಪರಿಣಾಮ ಹಲ್ಯಾಳ ಏತ ನೀರಾವರಿ ಯೋಜನೆಯನ್ನು ಸುಮಾರು 38 ದಿನ ತಡವಾಗಿ ಆರಂಭಿಸಲಾಗಿದೆ ಎಂದು ತಿಳಿಸಿದರು.

ಪ್ರಸ್ತುತ ಮಳೆ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೆರೆ ಮತ್ತು ಬಾಂದಾರಗಳನ್ನು ತುಂಬಿಸುವುದಕ್ಕಿಂತ, ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳನ್ನು ಉಳಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಹಲ್ಯಾಳ ಹಾಗೂ ಕರಿಮಸೂತಿ ಏತ ನೀರಾವರಿ ಯೋಜನೆಗಳ ಮೂಲಕ ರೈತರ ಬೆಳೆಗಳಿಗೆ ನೀರು ಪೂರೈಸಲಾಗುವುದು. ನಂತರದ ಹಂತದಲ್ಲಿ ಕೆರೆಗಳನ್ನು ತುಂಬಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಸವದಿ ಹೇಳಿದರು.

ಈಜಿಪ್ಟ್ ವಿರುದ್ಧ ಅರ್ಜೆಂಟೀನಾಗೆ ರೋಚಕ ಗೆಲುವು: ಫುಟ್ಬಾಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಮೆಸ್ಸಿ!

ಅಟ್ಲಾಂಟಾ: ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ಮತ್ತೊಮ್ಮೆ ಫುಟ್ಬಾಲ್ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈಜಿಪ್ಟ್ ವಿರುದ್ಧದ ಫಿಫಾ ವಿಶ್ವಕಪ್ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೋಲು ದಾಖಲಿಸುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಸತತ ಆರು ನಾಕೌಟ್ ಪಂದ್ಯಗಳಲ್ಲಿ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ಅಪೂರ್ವ ವಿಶ್ವದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ತೀವ್ರ ಪೈಪೋಟಿಯ ಈ ಪಂದ್ಯದಲ್ಲಿ ಅರ್ಜೆಂಟೀನಾ ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಪಂದ್ಯದ 67ನೇ ನಿಮಿಷದವರೆಗೂ ಈಜಿಪ್ಟ್ 2-0 ಗೋಲುಗಳ ಮುನ್ನಡೆ ಸಾಧಿಸಿ ಅರ್ಜೆಂಟೀನಾವನ್ನು ಟೂರ್ನಿಯಿಂದ ಹೊರಹಾಕುವ ಹಂತಕ್ಕೆ ತಳ್ಳಿತ್ತು.

ಆದರೆ ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಅದ್ಭುತ ಪುನರಾಗಮನ ಮಾಡಿತು. 79ನೇ ನಿಮಿಷದಲ್ಲಿ ರೊಮೆರೊ ಮೊದಲ ಗೋಲು ಬಾರಿಸಿದರೆ, 83ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ಸಮಬಲದತ್ತ ತಂಡವನ್ನು ಮುನ್ನಡೆಸುವ ಮಹತ್ವದ ಗೋಲು ದಾಖಲಿಸಿದರು. ಬಳಿಕ 90ನೇ ನಿಮಿಷದಲ್ಲಿ ಎಂಜೊ ಫೆರ್ನಾಂಡಿಸ್ ಗೆಲುವಿನ ಗೋಲು ಸಿಡಿಸುವ ಮೂಲಕ ಅರ್ಜೆಂಟೀನಾಗೆ 3-2 ಅಂತರದ ರೋಚಕ ಜಯ ತಂದುಕೊಟ್ಟರು.

ಪಂದ್ಯದಲ್ಲಿ ಮೆಸ್ಸಿ ಆರಂಭದಲ್ಲಿ ಪೆನಾಲ್ಟಿ ಅವಕಾಶವನ್ನು ತಪ್ಪಿಸಿಕೊಂಡಿದ್ದರೂ, ನಿರ್ಣಾಯಕ ಕ್ಷಣದಲ್ಲಿ ಗೋಲು ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅರ್ಜೆಂಟೀನಾ ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದ್ದ ವೇಳೆ ಮೆಸ್ಸಿಯ ಅನುಭವ ಮತ್ತು ನಾಯಕತ್ವ ಮತ್ತೊಮ್ಮೆ ತಂಡಕ್ಕೆ ಆಸರೆಯಾಯಿತು.

ಈ ಗೆಲುವಿನೊಂದಿಗೆ ಅರ್ಜೆಂಟೀನಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು, ಮೆಸ್ಸಿ ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಮತ್ತೊಂದು ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

ಇದರ ಜೊತೆಗೆ, ಮೆಸ್ಸಿ ಪ್ರಸ್ತುತ ವಿಶ್ವಕಪ್ ಗೋಲ್ಡನ್ ಬೂಟ್ ಸ್ಪರ್ಧೆಯಲ್ಲಿ 8 ಗೋಲುಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಫ್ರಾನ್ಸ್‌ನ ಕೈಲಿಯನ್ ಎಂಬಪ್ಪೆ ಹಾಗೂ ನಾರ್ವೆಯ ಎರ್ಲಿಂಗ್ ಹಾಲೆಂಡ್ ತಲಾ 7 ಗೋಲುಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲಿಸಿ ಕ್ರಮ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಹುಣಸೂರು ಶಾಸಕ ಹರೀಶ್ ಗೌಡ ಅವರ ಪತ್ನಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಇತ್ತೀಚೆಗೆ ನಟಿಯೊಬ್ಬರ ಹೆಸರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಸೃಷ್ಟಿಸಿದ ಪ್ರಕರಣವನ್ನೂ ಉಲ್ಲೇಖಿಸಿದ ಸಚಿವರು, ಇಂತಹ ಸೈಬರ್ ಪ್ರಕರಣಗಳ ತನಿಖೆಗೆ ಸ್ವಲ್ಪ ಸಮಯ ಬೇಕಾಗುತ್ತದೆ. “ಯಾರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಪ್ರತಿಯೊಬ್ಬರಿಗೂ ನ್ಯಾಯ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಬರ ಪರಿಸ್ಥಿತಿ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದ ಪರಿಸ್ಥಿತಿಯ ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಪರಿಹಾರಕ್ಕಾಗಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

“ಮುಖ್ಯಮಂತ್ರಿಗಳು ಈಗಾಗಲೇ ಅಗತ್ಯ ಸೂಚನೆ ನೀಡಿದ್ದಾರೆ. ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳ ಪ್ರಕಾರ ವರದಿ ಸಿದ್ಧಪಡಿಸಲಾಗುತ್ತದೆ. ಜಿಲ್ಲೆಗಳಿಂದ ನೆಲಮಟ್ಟದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು,

ಬಿತ್ತನೆ, ಮೇವು, ಕುಡಿಯುವ ನೀರು ಸೇರಿದಂತೆ ಎಲ್ಲ ವಿವರಗಳನ್ನು ಒಳಗೊಂಡ ವರದಿ ಸಿದ್ಧವಾದ ಬಳಿಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ನಂತರ ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ ಬರ ಘೋಷಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ” ಎಂದು ಅವರು ಹೇಳಿದರು.

SIR ಕರ್ತವ್ಯಕ್ಕೆ ತೆರಳಿದ್ದ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳಿದ್ದ ದಲಿತ ಸಮುದಾಯದ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಲಾಗಿದೆ ಎಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ.

ಈ ಸಂಬಂಧ ಮಹಿಳೆಯೊಬ್ಬರ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯಾಗಿರುವ ಬಿಎಲ್‌ಒ, ಜುಲೈ 6ರಂದು ಎಸ್‌ಐಆರ್ ಪ್ರಕ್ರಿಯೆಗಾಗಿ ಎಎಲ್‌ಒ ಮಾಧವ್ ಅವರೊಂದಿಗೆ ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಅವರ ಮನೆಗೆ ತೆರಳಿದ್ದರು.

ಮನೆಯ ಅಂಗಳಕ್ಕೆ ಪ್ರವೇಶಿಸುತ್ತಿದ್ದ ವೇಳೆ, “ನೀನು ಅಲ್ಲಿಯೇ ನಿಲ್ಲು, ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿ ಮನೆಯ ಸಿಟ್‌ಔಟ್‌ಗೆ ಪ್ರವೇಶಿಸದಂತೆ ಮೆಟ್ಟಿಲಿನ ಬಳಿಯೇ ತಡೆದು ನಿಲ್ಲಿಸಲಾಯಿತು. ಈ ಮೂಲಕ ಜಾತಿ ನಿಂದನೆ ಮಾಡಿ ಸಾರ್ವಜನಿಕವಾಗಿ ಅವಮಾನಿಸಲಾಗಿದೆ ಎಂದು ಬಿಎಲ್‌ಒ ಜುಲೈ 7ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ಯಶೋಧ ಆಚಾರಿ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಸೆಕ್ಷನ್ 3(1)(r) ಹಾಗೂ 3(2)(va) ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಎಸ್‌ಐಆರ್ ಕರ್ತವ್ಯದ ವೇಳೆ ಜಾತಿ ನಿಂದನೆ ಆರೋಪದಡಿ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿ ಬೆದರಿಕೆ: ‘ಪ್ರಭಾವಿ’ಗಳ ಪಾತ್ರದ ಶಂಕೆ, ತನಿಖೆ ಚುರುಕು

ಬೆಂಗಳೂರು: ನಟ ದರ್ಶನ್ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ತನಿಖೆ ತೀವ್ರಗೊಂಡಿದ್ದು, ಪ್ರಕರಣದ ಹಿಂದೆ ಕೆಲ ‘ಪ್ರಭಾವಿ’ ವ್ಯಕ್ತಿಗಳ ಕೈವಾಡವಿರುವ ಶಂಕೆ ಪೊಲೀಸರಿಗೆ ಮೂಡಿದೆ. ಈ ಹಿನ್ನೆಲೆಯಲ್ಲಿ ಅವರ ಪಾತ್ರವನ್ನು ಪತ್ತೆಹಚ್ಚಲು ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದಡಿ ಪುನೀತ್, ಸುಹಾಸ್ ಹಾಗೂ ವೇಣು ಎಂಬ ಮೂವರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ತನಿಖೆ ವೇಳೆ ಆರೋಪಿಗಳಿಂದ ಹೇಳಿಕೆ ಮತ್ತು ಮರು ಹೇಳಿಕೆಗಳನ್ನು ಪಡೆಯಲಾಗುತ್ತಿದ್ದು, ಪ್ರಮುಖ ಆರೋಪಿ ಪುನೀತ್ ಪದೇ ಪದೇ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿರುವುದಾಗಿ ತಿಳಿದುಬಂದಿದೆ. ಸಾಕ್ಷಿಯ ಹೇಳಿಕೆಯನ್ನು ಬದಲಾಯಿಸಲು ‘ಡೀಲ್’ ಪಡೆದಿದ್ದಾನೆ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಇದು ತನಿಖೆಗೆ ಸವಾಲಾಗಿ ಪರಿಣಮಿಸಿದೆ ಎನ್ನಲಾಗಿದೆ.

ಆರೋಪಿಗಳ ಮೊಬೈಲ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಬಂಧನಕ್ಕೂ ಮುನ್ನ ಮೊಬೈಲ್ ಕರೆ ವಿವರಗಳು, ವಾಟ್ಸ್‌ಆ್ಯಪ್ ಚಾಟ್ ಸೇರಿದಂತೆ ಹಲವು ಮಾಹಿತಿಗಳನ್ನು ಆರೋಪಿಗಳು ಅಳಿಸಿದ್ದರೂ, ಫಾರೆನ್ಸಿಕ್ ತಂತ್ರಜ್ಞಾನದ ಮೂಲಕ ಅವುಗಳನ್ನು ಮರುಪಡೆಯುವ ಪ್ರಯತ್ನ ನಡೆಯುತ್ತಿದೆ.

ಸಾಕ್ಷಿಗೆ ಬೆದರಿಕೆ ಹಾಕಿದ ಸಂದರ್ಭದಲ್ಲಿ ಕಾನ್ಫರೆನ್ಸ್ ಕಾಲ್ ಬಳಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಆ ಸಂಭಾಷಣೆಯಲ್ಲಿ ಆರೋಪಿಗಳ ಹೊರತಾಗಿ ಇನ್ನಾರು ಭಾಗಿಯಾಗಿದ್ದರು ಎಂಬುದು ಎಫ್‌ಎಸ್‌ಎಲ್ ವರದಿಯ ಬಳಿಕ ಬಹಿರಂಗವಾಗುವ ಸಾಧ್ಯತೆ ಇದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ವೇಳೆ, ಪ್ರಕರಣದ 49ನೇ ಸಾಕ್ಷಿಯಾಗಿರುವ ದುರ್ಗಾ ಬಾರ್‌ನ ಸಿಬ್ಬಂದಿ ಸಂದೀಪ್ ಅವರಿಗೆ ಆಕರ್ಷ್ ಎಂಬ ವ್ಯಕ್ತಿಯ ಮೂಲಕ ಕರೆ ಮಾಡಿ, ನ್ಯಾಯಾಲಯದಲ್ಲಿ ತಾವು ಹೇಳಿದಂತೆ ಸಾಕ್ಷ್ಯ ನೀಡುವಂತೆ ಒತ್ತಡ ಹೇರಲಾಗಿತ್ತು ಎನ್ನಲಾಗಿದೆ.

ಆದರೆ ಸಂದೀಪ್ ನ್ಯಾಯಾಲಯದ ಮುಂದೆ ತಮಗೆ ಸುಳ್ಳು ಸಾಕ್ಷ್ಯ ಹೇಳುವಂತೆ ಬೆದರಿಕೆ ಹಾಕಲಾಗಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಹಿಂದಿರುವ ಇತರರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.

GBA ವಾರ್ಡ್ʼಗಳಲ್ಲಿ ಪರ್ಯಾಯ SIRಗೆ ತಡೆ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪರ್ಯಾಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸಲು ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪರ್ಯಾಯ ಎಸ್‌ಐಆರ್ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗವು ಜೂನ್ 19ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಂ. ವಿವೇಕ್ ಸೇರಿದಂತೆ ಐವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?

ಅರ್ಜಿದಾರರ ಪ್ರಕಾರ, 2025ರ ಅಕ್ಟೋಬರ್ 27ರಂದು ಕೇಂದ್ರ ಚುನಾವಣಾ ಆಯೋಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸುವುದಾಗಿ ಪ್ರಕಟಿಸಿತ್ತು. ಅದರಂತೆ 2026ರ ಜೂನ್ 16ರಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.

ಆದರೆ, ಇದರ ಮೂರೇ ದಿನಗಳ ಬಳಿಕ ಜೂನ್ 19ರಂದು ರಾಜ್ಯ ಚುನಾವಣಾ ಆಯೋಗವು ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪ್ರತ್ಯೇಕ ಎಸ್‌ಐಆರ್ ನಡೆಸಲು ಆದೇಶ ಹೊರಡಿಸಿದೆ. ಇದೇ ವೇಳೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 26ರಿಂದ ಜಿಬಿಎ ಸೇರಿದಂತೆ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಎಸ್‌ಐಆರ್ ಸಮೀಕ್ಷೆಯೂ ಆರಂಭವಾಗಿದೆ.

ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಎಸ್‌ಐಆರ್ ಪ್ರಕ್ರಿಯೆಗಳು ನಡೆಯುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದು, ರಾಜ್ಯ ಚುನಾವಣಾ ಆಯೋಗದ ಜೂನ್ 19ರ ಆದೇಶವನ್ನು ರದ್ದುಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಜುಲೈ ಮೊದಲ ವಾರದಲ್ಲಿ ಉತ್ತಮ ಮಳೆ: ದೇಶದ ಮಳೆ ಕೊರತೆ ಶೇಕಡಾ 12ಕ್ಕೆ ಇಳಿದಿದೆ – ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ದೇಶದಲ್ಲಿ ಮಾನ್ಸೂನ್ ಕೊರತೆಯ ಆತಂಕ ಎದುರಾಗಿತ್ತು. ಆದರೆ ಜುಲೈ ಮೊದಲ ವಾರದಲ್ಲಿ ದೇಶಾದ್ಯಂತ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಳೆ ಕೊರತೆ ಶೇ.12ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಖಾರಿಫ್ ಬೆಳೆ ಹಂಗಾಮು ಹಾಗೂ ಎಲ್ ನಿನೊದ ಸಂಭಾವ್ಯ ಪರಿಣಾಮ ಕುರಿತು ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪ್ರಕಟಿಸಿದೆ.

ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಜೂನ್‌ನಿಂದ ಜುಲೈ 7ರವರೆಗಿನ ಮಳೆಯ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಸುಮಾರು 10 ದಿನ ತಡವಾಗಿ ಆರಂಭವಾದರೂ, ಜುಲೈ ಮೊದಲ ವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಿದೆ ಎಂದು ತಿಳಿಸಿದರು.

ಐಎಂಡಿ ಅಂದಾಜಿನ ಪ್ರಕಾರ, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಲ್ ನಿನೊ ಪ್ರಭಾವ ಮಧ್ಯಮ ಮಟ್ಟಕ್ಕೆ ದುರ್ಬಲವಾಗುವ ಸಾಧ್ಯತೆ ಇದ್ದು, ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತ ಶೇ.30ರಷ್ಟು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಸಭೆಯಲ್ಲಿ ಕೃಷಿ, ವಿದ್ಯುತ್, ಕುಡಿಯುವ ನೀರು, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪಶುಸಂಗೋಪನೆ, ಭೂ ವಿಜ್ಞಾನ, ಹಣಕಾಸು, ರಸಗೊಬ್ಬರ, ಮಾಹಿತಿ ಮತ್ತು ಪ್ರಸಾರ ಸೇರಿದಂತೆ 15ಕ್ಕೂ ಹೆಚ್ಚು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಹಾಗೂ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಜಲ ಆಯೋಗದ ಪ್ರತಿನಿಧಿಗಳು ಭಾಗವಹಿಸಿದ್ದರು.

ಖಾರಿಫ್ ಬೆಳೆಗಳ ರಕ್ಷಣೆಗಾಗಿ ಮಳೆ, ಜಲಾಶಯಗಳ ನೀರಿನ ಸಂಗ್ರಹ, ಬೆಳೆ ಬಿತ್ತನೆ, ನೀರಿನ ಲಭ್ಯತೆ, ಕೀಟ ಹಾಗೂ ರೋಗಗಳ ಸ್ಥಿತಿಗತಿಗಳ ಬಗ್ಗೆ ರಾಜ್ಯಗಳೊಂದಿಗೆ ಪ್ರತಿ ವಾರ ಬೆಳೆ-ಹವಾಮಾನ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದಲ್ಲದೆ, ಮಳೆ ಕೊರತೆ ಎದುರಿಸುತ್ತಿರುವ 262 ಜಿಲ್ಲೆಗಳಿಗೆ ವಿಶೇಷ ಕೃಷಿ ಕಾರ್ಯಯೋಜನೆ ವಿಸ್ತರಿಸಲಾಗಿದ್ದು, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಕೃಷಿ ವಿಜ್ಞಾನ ಕೇಂದ್ರಗಳಿಗೆ ಎಲ್ ನಿನೊ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನೀಡಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ತುಂಗಾಭದ್ರೆಯಲ್ಲಿ ನೀರಿನ ಮಟ್ಟ ಏರಿಕೆ: ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ

ದಾವಣಗೆರೆ: ಮಲೆನಾಡು ಭಾಗದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ತುಂಗಾಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹರಿಹರ ತಾಲೂಕಿನ ಪ್ರಸಿದ್ಧ ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಅಣೆಕಟ್ಟೆಯಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಇದರಿಂದ ಹರಿಹರ ತಾಲೂಕಿನ ಮೂಲಕ ಹರಿಯುವ ತುಂಗಾಭದ್ರಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ, ಉಕ್ಕಡಗಾತ್ರಿ ಶ್ರೀಕ್ಷೇತ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಆವರಿಸಿದೆ.

ನದಿಯ ಅಕ್ಕಪಕ್ಕದಲ್ಲಿರುವ ಕರಿಬಸವೇಶ್ವರ ದೇವಸ್ಥಾನದ ಸ್ನಾನಘಟ್ಟ, ಜವಳಘಟ್ಟ ಹಾಗೂ ಹೂವು-ಹಣ್ಣು ವ್ಯಾಪಾರದ ಅಂಗಡಿಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರು ನದಿ ಪಾತ್ರಕ್ಕೆ ಇಳಿಯದಂತೆ ದೇವಾಲಯದ ಆಡಳಿತ ಮಂಡಳಿ ಸೂಚನೆ ನೀಡಿದೆ.

ಭದ್ರಾ ಜಲಾಶಯದಿಂದಲೂ ನೀರು ಬಿಡುಗಡೆ ಮಾಡಿದರೆ, ನದಿ ದಂಡೆಯಲ್ಲಿರುವ ಗಣೇಶ ದೇವಸ್ಥಾನವೂ ಜಲಾವೃತವಾಗುವ ಸಾಧ್ಯತೆ ಇದೆ. ಜೊತೆಗೆ ನದಿಯ ಸೆಳೆತ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಕ್ತರು ಆ ಭಾಗಕ್ಕೆ ತೆರಳದಂತೆ ದೇವಾಲಯದ ಆಡಳಿತ ಮಂಡಳಿ ಸೂಚನಾ ಫಲಕ ಅಳವಡಿಸಲು ಮುಂದಾಗಿದೆ.

ಸದ್ಯ ನದಿಯ ಹರಿವು ನಿಯಂತ್ರಣದಲ್ಲಿದ್ದರೂ, ಮಳೆ ಇದೇ ರೀತಿ ಮುಂದುವರಿದು ನೀರಿನ ಮಟ್ಟ ಮತ್ತಷ್ಟು ಏರಿದರೆ ನಂದಿಗುಡಿಯಿಂದ ಉಕ್ಕಡಗಾತ್ರಿಗೆ ಸಂಪರ್ಕಿಸುವ ರಸ್ತೆ ಮತ್ತು ಸೇತುವೆ ಸಂಪೂರ್ಣ ಜಲಾವೃತವಾಗುವ ಸಾಧ್ಯತೆ ಇದೆ. ಅಲ್ಲದೆ ಭದ್ರಾ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಿದರೆ ಫತ್ತೇಪುರ–ಉಕ್ಕಡಗಾತ್ರಿ ಸಂಪರ್ಕ ರಸ್ತೆ ಮತ್ತು ಸೇತುವೆಯೂ ಮುಳುಗಡೆಯಾಗುವ ಆತಂಕ ವ್ಯಕ್ತವಾಗಿದೆ.