Home Blog

ಗದಗ| ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ದಾಳಿ: 43ಜನರ ತಪಾಸಣೆ

0

ಗದಗ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಿಗ್ಗೆ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಕಾಲಕ್ಕೆ ತಪಾಸಣೆ ನಡೆಸಿ, ಒಟ್ಟು 43 ರೌಡಿಶೀಟರ್‌ಗಳನ್ನು ಪರಿಶೀಲನೆಗೆ ಒಳಪಡಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನಿರ್ದೇಶನದಂತೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಬೆಟಗೇರಿ ಬಡಾವಣೆ, ಗದಗ ಶಹರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ರೌಡಿಶೀಟರ್‌ಗಳ ಇತ್ತೀಚಿನ ಚಟುವಟಿಕೆಗಳು, ಸಂಪರ್ಕಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಲಾಯಿತು.

ಸಮಾಜದಲ್ಲಿ ಶಾಂತಿ ಕದಡುವ ಅಥವಾ ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.

ಸಿಸಿಟಿವಿ ಜಾಡು ಹಿಡಿದು ಅಂತರ ಜಿಲ್ಲಾ ಮನೆಕಳ್ಳರ ಬಂಧನ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅಂತರ ಜಿಲ್ಲಾ ಮನೆಕಳ್ಳರನ್ನು ಬಂಧಿಸಿ, ₹5.12 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.

ನವಲಗುಂದ ಪೊಲೀಸ್ ಠಾಣೆಯ ಗುನ್ನಾ ನಂ. 86/2026 ಕಲಂ 331(1), 305 ಬಿಎನ್‌ಎಸ್ ಪ್ರಕರಣದಲ್ಲಿ ಮೇ 31ರಂದು ಪಿರ್ಯಾದಿದಾರ ಅಲ್ಲಾಗೌಡ ತಂದೆ ಹನಮಂತಗೌಡ ಬಾಲನಗೌಡ್ರ, ವಯಸ್ಸು 42 ವರ್ಷ, ಅಮರಗೋಳ ತಾ. ರೋಣ, ಹಾಲಿ ವಾಸ್ತಿ ನವಲಗುಂದ ಬಸ್ತಿ ಪ್ಲಾಟ್ ನಿವಾಸಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ತಕ್ಷಣ ನವಲಗುಂದ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿತ್ತು. ತನಿಖಾ ತಂಡದಲ್ಲಿ ಜನಾರ್ಧನ ಬಿ., ಉಮಾದೇವಿ ಸೇರಿದಂತೆ ಸಿಬ್ಬಂದಿಯನ್ನು ಒಳಗೊಂಡ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು.

ನವಲಗುಂದ ಪಟ್ಟಣ ಹಾಗೂ ಹೊರವಲಯದ ವಿವಿಧ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಗಳ ಜಾಡು ಪತ್ತೆ ಹಚ್ಚಲಾಯಿತು. ಬಳಿಕ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳು ಬೆಳಗಾವಿ ಜಿಲ್ಲೆಯವರಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿತರಿಂದ 46 ಗ್ರಾಂ ಬಂಗಾರದ ಆಭರಣಗಳು, ಅಂದಾಜು ₹5,12,000 ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆ ಗುಂಜನ್ ಆರ್ಯ, ಶಿವಾನಂದ ಕಟಗಿ ಹಾಗೂ ವಿನೋದ ಮುಕ್ತೇದಾರ ಅವರ ಮಾರ್ಗದರ್ಶನದಲ್ಲಿ ನಡೆಯಿತು.

ತನಿಖಾ ತಂಡದಲ್ಲಿ ಎಸ್.ಡಿ. ಮಲ್ಲನಗೌಡ್ರ (ಎಎಸ್‌ಐ), ಸುರೇಶ ಹುರಳಿ, ಎಂ.ಎಚ್. ನಾಗಾವಿ, ಮುತ್ತು ಭಜಂತ್ರಿ, ಸದಾಶಿವ ಮಳ್ಳೂರ, ಸಂತೋಷ ಸಿಂಗಣ್ಣವರ, ಸಿ.ಎಸ್. ಮಠಪತಿ, ಗೂಳಪ್ಪ ಜಗಲಿ, ಧಾರವಾಡ ಜಿಲ್ಲಾ ತಾಂತ್ರಿಕ ಸಿಬ್ಬಂದಿಗಳಾದ ವಿಠ್ಠಲ ಡಂಗನ್ನವರ ಹಾಗೂ ರವಿ ಪಟ್ಟೇದ ಭಾಗವಹಿಸಿದ್ದರು.

ಪ್ರಕರಣವನ್ನು ಭೇದಿಸಿ ಕಳುವಾದ ಆಸ್ತಿಯನ್ನು ವಶಪಡಿಸಿಕೊಂಡ ನವಲಗುಂದ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿಯನ್ನು ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

 

ಮದುವೆ ಭರವಸೆ ನೀಡಿ ಅತ್ಯಾಚಾರ: ಆರೋಪಿಗೆ ಹೈಕೋರ್ಟ್ ಕ್ಲಾಸ್, ಮಗುವಿನ ಜವಾಬ್ದಾರಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಪೀಠ!

ಬೆಂಗಳೂರು: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ನಿರ್ವಹಣೆಗೆ ಹಣ ಪಾವತಿಸದ ಹಿನ್ನೆಲೆ ನ್ಯಾಯಾಲಯ ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಸಂತ್ರಸ್ತೆ ಮತ್ತು ಮಗುವಿನ ನಿರ್ವಹಣೆಗೆ 75 ಸಾವಿರ ರೂಪಾಯಿ ಠೇವಣಿ ಇಡಲು ನೀಡಿದ್ದ ಮಧ್ಯಂತರ ಆದೇಶವನ್ನು ಪಾಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿದರು. “ಮಗು ಕೆಳವರ್ಗದ ಕುಟುಂಬದಲ್ಲಿ ಜನಿಸಿದೆ ಎಂಬ ಕಾರಣಕ್ಕೆ ಅದನ್ನು ಕೈಬಿಡಲು ಸಾಧ್ಯವಿಲ್ಲ. ನಿಮ್ಮ ಕೃತ್ಯದಿಂದ ಮಗು ಜನಿಸಿದೆ. ಅದರ ಜವಾಬ್ದಾರಿ ತೆಗೆದುಕೊಳ್ಳಲೇಬೇಕು” ಎಂದು ಕಠಿಣವಾಗಿ ಹೇಳಿದ್ದಾರೆ.

ಆರೋಪಿಯ ಪರ ವಕೀಲರು, ಕೃಷ್ಣ ಜೆ. ರಾವ್ ವಿದ್ಯಾರ್ಥಿಯಾಗಿರುವುದರಿಂದ ನ್ಯಾಯಾಲಯದ ಷರತ್ತು ಪಾಲಿಸಲು ಸಾಧ್ಯವಾಗಿಲ್ಲ ಎಂದು ವಾದ ಮಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, “75 ಸಾವಿರ ರೂಪಾಯಿ ನೀಡಲು ಸಾಧ್ಯವಾಗುತ್ತಿಲ್ಲವೇ? ನಿಮ್ಮ ತಂದೆ ಇದ್ದಾರಲ್ಲ. ಹಣ ಪಾವತಿಸದಿದ್ದರೆ ಅರ್ಜಿಗಳನ್ನು ವಜಾಗೊಳಿಸುತ್ತೇನೆ” ಎಂದು ಎಚ್ಚರಿಕೆ ನೀಡಿದರು.

ಸಂತ್ರಸ್ತೆಯ ಪರ ವಕೀಲರು, ಬ್ಯಾಂಕ್ ಖಾತೆ ವಿವರಗಳನ್ನು ಈಗಾಗಲೇ ನೀಡಲಾಗಿದ್ದರೂ ಹಣ ವರ್ಗಾವಣೆ ಮಾಡಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಮೊದಲ ಕಂತಿನ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟಿದ್ದರೂ ಅದರ ಮಾಹಿತಿ ಸಂತ್ರಸ್ತೆಗೆ ನೀಡಿಲ್ಲ ಎಂಬುದನ್ನೂ ತಿಳಿಸಿದರು.

ಈ ವೇಳೆ ನ್ಯಾಯಮೂರ್ತಿ ನಾಗಪ್ರಸನ್ನ, “ಇದು ಕೇವಲ ಇಬ್ಬರ ನಡುವಿನ ಸಂಬಂಧದ ವಿಚಾರವಲ್ಲ. ಆ ಸಂಬಂಧದಿಂದ ಒಂದು ನಿರಪರಾಧಿ ಮಗು ಜನಿಸಿದೆ. ಅದರ ಬದುಕಿನ ಜವಾಬ್ದಾರಿಯಿಂದ ಹೇಗೆ ತಪ್ಪಿಸಿಕೊಳ್ಳುತ್ತೀರಿ?” ಎಂದು ಪ್ರಶ್ನಿಸಿದರು.

ಇದೇ ವೇಳೆ, ಇದು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 69ರ ಅಡಿಯಲ್ಲಿ ಮದುವೆಯ ಸುಳ್ಳು ಭರವಸೆಗೆ ಸಂಬಂಧಿಸಿದ ಸ್ಪಷ್ಟ ಪ್ರಕರಣವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅರ್ಜಿಗಳು ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಸೂಚಿಸಿತು. ಆದರೆ ಪ್ರಕರಣದ ಮೂಲ ವಿಚಾರಗಳ ಕುರಿತು ವಾದ ಮಂಡಿಸಲು ಅವಕಾಶ ನೀಡಿ ವಿಚಾರಣೆಯನ್ನು ಮುಂದೂಡಿದೆ.

ಜೀನ್ಸ್‌ ಬಣ್ಣ ಬೇಗ ಮಾಸುತ್ತಿದೆಯೇ? ಈ ಟ್ರಿಕ್ಸ್‌ ಫಾಲೋ ಮಾಡಿದರೆ ಹೊಸದರಂತೆಯೇ ಇರುತ್ತದೆ!

0

ಇತ್ತೀಚಿನ ದಿನಗಳಲ್ಲಿ ಡೆನಿಮ್‌ ಜೀನ್ಸ್‌ ಯುವಜನತೆ ಸೇರಿದಂತೆ ಎಲ್ಲ ವಯೋಮಾನದವರ ನೆಚ್ಚಿನ ಉಡುಪಾಗಿದೆ.

ಆರಾಮದಾಯಕವಾಗಿರುವುದರ ಜೊತೆಗೆ ಸ್ಟೈಲಿಶ್‌ ಲುಕ್‌ ನೀಡುವ ಜೀನ್ಸ್‌ಗಳನ್ನು ಹೆಚ್ಚಿನವರು ದೈನಂದಿನ ಬಳಕೆಯಲ್ಲಿ ಧರಿಸುತ್ತಾರೆ. ಆದರೆ ಕೆಲವೇ ದಿನಗಳಲ್ಲಿ ಜೀನ್ಸ್‌ ಬಣ್ಣ ಮಾಸಿ ಹಳೆಯದಾಗಿ ಕಾಣಿಸಿಕೊಳ್ಳುವುದು ಸಾಮಾನ್ಯ ಸಮಸ್ಯೆಯಾಗಿದೆ.

ತಜ್ಞರ ಪ್ರಕಾರ, ಜೀನ್ಸ್‌ನ ಗುಣಮಟ್ಟ ಮಾತ್ರವಲ್ಲದೆ ಅದನ್ನು ತೊಳೆಯುವ ಮತ್ತು ಆರೈಕೆ ಮಾಡುವ ವಿಧಾನವೂ ಅದರ ಬಾಳಿಕೆ ಹಾಗೂ ಬಣ್ಣದ ಮೇಲೆ ಪರಿಣಾಮ ಬೀರುತ್ತದೆ. ಸರಿಯಾದ ವಿಧಾನ ಅನುಸರಿಸಿದರೆ ಜೀನ್ಸ್‌ ದೀರ್ಘಕಾಲ ಹೊಸದರಂತೆ ಕಾಣುತ್ತದೆ.

ಜೀನ್ಸ್‌ಗಳನ್ನು ತೊಳೆಯುವಾಗ ಯಾವಾಗಲೂ ಒಳಭಾಗವನ್ನು ಹೊರಗೆ ತಿರುಗಿಸಿ ಒಗೆಯಬೇಕು. ಇದರಿಂದ ಹೊರಭಾಗದ ಬಣ್ಣ ಮಾಸುವುದು ಮತ್ತು ಸವೆತ ಉಂಟಾಗುವುದನ್ನು ತಡೆಯಬಹುದು. ಅಲ್ಲದೆ, ಬಿಸಿ ನೀರಿನ ಬದಲಿಗೆ ತಣ್ಣನೆಯ ನೀರನ್ನು ಬಳಸುವುದು ಉತ್ತಮ. ಬಿಸಿ ನೀರು ಜೀನ್ಸ್‌ನ ಬಣ್ಣವನ್ನು ಬೇಗನೆ ಮಸುಕಾಗಿಸುವ ಸಾಧ್ಯತೆ ಇದೆ.

ಜೀನ್ಸ್‌ ಅನ್ನು ಹೆಚ್ಚು ಉಜ್ಜುವುದು ಅಥವಾ ಬಲವಾಗಿ ಹಿಂಡುವುದನ್ನು ತಪ್ಪಿಸಬೇಕು. ಇಂತಹ ಕ್ರಮಗಳು ಬಟ್ಟೆಯ ಗುಣಮಟ್ಟಕ್ಕೆ ಹಾನಿ ಉಂಟುಮಾಡುವುದರ ಜೊತೆಗೆ ಬಣ್ಣ ಮಾಸುವಿಕೆಯನ್ನು ಹೆಚ್ಚಿಸುತ್ತವೆ. ಸೌಮ್ಯವಾದ ಡಿಟರ್ಜೆಂಟ್‌ ಬಳಸುವುದು ಸಹ ಅಗತ್ಯವಾಗಿದೆ. ಕಠಿಣ ರಾಸಾಯನಿಕಗಳಿರುವ ಡಿಟರ್ಜೆಂಟ್‌ಗಳು ಡೆನಿಮ್‌ ಬಟ್ಟೆಗೆ ಹಾನಿ ಮಾಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಜೀನ್ಸ್‌ ಒಣಗಿಸುವ ವಿಧಾನವೂ ಅಷ್ಟೇ ಮುಖ್ಯವಾಗಿದೆ. ನೇರ ಸೂರ್ಯನ ಬೆಳಕಿನಲ್ಲಿ ಒಣಗಿಸುವ ಬದಲು ನೆರಳಿನ ಸ್ಥಳದಲ್ಲಿ ಒಣಗಿಸಿದರೆ ಬಣ್ಣ ದೀರ್ಘಕಾಲ ಉಳಿಯುತ್ತದೆ.

ಇನ್ನು ಪ್ರತಿ ಬಾರಿ ಧರಿಸಿದ ಬಳಿಕ ಜೀನ್ಸ್‌ ತೊಳೆಯುವ ಅಗತ್ಯವಿಲ್ಲ ಎಂದು ಫ್ಯಾಷನ್‌ ತಜ್ಞರು ಸಲಹೆ ನೀಡಿದ್ದಾರೆ. ಸಾಮಾನ್ಯವಾಗಿ 4ರಿಂದ 5 ಬಾರಿ ಧರಿಸಿದ ನಂತರ ತೊಳೆಯುವುದು ಸೂಕ್ತ. ಬಳಕೆಯ ನಂತರ ಗಾಳಿ ಚೆನ್ನಾಗಿ ಬರುವ ಸ್ಥಳದಲ್ಲಿ ಜೀನ್ಸ್‌ ಅನ್ನು ಇಟ್ಟರೆ ದುರ್ವಾಸನೆ ದೂರವಾಗಿ ಪದೇಪದೇ ತೊಳೆಯುವ ಅವಶ್ಯಕತೆಯೂ ಕಡಿಮೆಯಾಗುತ್ತದೆ.

ಸರಿಯಾದ ಆರೈಕೆ ಮತ್ತು ತೊಳೆಯುವ ವಿಧಾನ ಅನುಸರಿಸಿದರೆ ಡೆನಿಮ್‌ ಜೀನ್ಸ್‌ಗಳು ಹೆಚ್ಚು ಕಾಲ ಹೊಸದರಂತೆ ಕಾಣುವುದರ ಜೊತೆಗೆ ಬಾಳಿಕೆಯೂ ಹೆಚ್ಚುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

RSS ದೇಶದ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿದೆ: ಸಂಸದ ಯದುವೀರ್ ಒಡೆಯರ್

ಮೈಸೂರು: ದೇಶದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಉಳಿಸುವ ಕೆಲಸವನ್ನು ಆರ್‌ಎಸ್‌ಎಸ್‌ ಮಾಡುತ್ತಿದೆ. ಅದರ ಕಾರ್ಯವನ್ನು ದೇಶದ ಜನರು ಮೆಚ್ಚಿಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ಸಂಸದ ಯದುವೀರ್ ಒಡೆಯರ್ ಟೀಕಿಸಿದರು.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಿಂದ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದು, ವಿಕಸಿತ ಭಾರತದ ನಿರ್ಮಾಣಕ್ಕಾಗಿ ದೃಢವಾದ ಅಡಿಪಾಯ ಹಾಕಿದ್ದಾರೆ.

ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಆದರೆ ಇಂದು ಭಾರತ ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಅನೇಕ ವಿದೇಶಿ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುತ್ತಿವೆ ಎಂದು ಹೇಳಿದರು.

ಮೋದಿ ಸರ್ಕಾರದ ಸಾಧನೆಗಳನ್ನು ಉಲ್ಲೇಖಿಸಿದ ಯದುವೀರ್, ಸುಮಾರು 25 ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ. ದೇಶದಲ್ಲಿ ಬಡವರ ಪ್ರಮಾಣ ಶೇ.29ರಿಂದ ಶೇ.11ಕ್ಕೆ ಇಳಿದಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗಳಿಗೆ ನೇರವಾಗಿ ವಾರ್ಷಿಕ ₹6,000 ಜಮೆಯಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ತಿಳಿಸಿದರು.

ಮಹಿಳಾ ಸ್ವಸಹಾಯ ಸಂಘಗಳಿಗೆ ಹೆಚ್ಚಿನ ಸಾಲ ಸೌಲಭ್ಯ ಒದಗಿಸಲಾಗಿದೆ. ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಭಾರತೀಯ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ವಿಶ್ವ ಮಟ್ಟದಲ್ಲಿ ಭಾರತಕ್ಕೆ ಗೌರವವೂ ಹೆಚ್ಚಿದೆ. ಇವೆಲ್ಲವೂ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಸಾಧನೆಗಳು ಎಂದು ಹೇಳಿದರು.

RSS ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಕುರಿತು ನೀಡುತ್ತಿರುವ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ನಗರದ ವಿನೋಬನಗರದ ಕಲ್ಲಹಳ್ಳಿಯ ಅಭಿಷ್ಟವರ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಬಗ್ಗೆ ಮಾತನಾಡುವ ನೈತಿಕ ಹಕ್ಕು ಮತ್ತು ಗೌರವವನ್ನು ಪ್ರಿಯಾಂಕ್ ಖರ್ಗೆ ಅವರು ಉಳಿಸಿಕೊಂಡಿಲ್ಲ. ಅವರು ಪದೇ ಪದೇ ಇದೇ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಅವರ ತಂದೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಈಗ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಅವರ ವಿಚಾರ ಅವರಿಗೆ, ನಮ್ಮ ವಿಚಾರ ನಮಗೆ. ಆರ್‌ಎಸ್‌ಎಸ್‌ ಅನ್ನು ದೇಶದ ಜನತೆ ಒಪ್ಪಿಕೊಂಡಿದ್ದಾರೆ. ಅದರ ಕಾರ್ಯವೈಖರಿಯನ್ನು ಜಗತ್ತೇ ಗುರುತಿಸಿದೆ. ಅದರ ಪರಿಣಾಮವೇ ಇಂದು ದೇಶದ ಅಭಿವೃದ್ಧಿ ಮತ್ತು ಆಡಳಿತದಲ್ಲಿ ಕಾಣಿಸುತ್ತಿದೆ ಎಂಬುದು ಎಲ್ಲರಿಗೂ ತಿಳಿದ ಸಂಗತಿ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಆರೋಪಿಸಿದ ರಾಘವೇಂದ್ರ, “ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಮತ್ತು ಪಕ್ಷದ ಹೈಕಮಾಂಡ್‌ನ್ನು ಮೆಚ್ಚಿಸಲು ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ ಅವರ ಆರೋಪಗಳನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವೇ ಇಲ್ಲ” ಎಂದು ಹೇಳಿದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹1.37 ಕೋಟಿ ಮೌಲ್ಯದ ಚಿನ್ನ ಜಪ್ತಿ; ಆರೋಪಿ ಬಂಧನ

0

ಬೆಂಗಳೂರು: ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಕರಣಗಳನ್ನು ನಿರಂತರವಾಗಿ ಭೇದಿಸುತ್ತಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಇದೀಗ ಭಾರೀ ಪ್ರಮಾಣದ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದಾರೆ. ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ ₹1.37 ಕೋಟಿ ಮೌಲ್ಯದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ವಶಪಡಿಸಿಕೊಳ್ಳಲಾದ ಚಿನ್ನದ ಒಟ್ಟು ತೂಕ 899.50 ಗ್ರಾಂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿ ಅತ್ಯಂತ ಕುತಂತ್ರದಿಂದ ಚಿನ್ನವನ್ನು ಸಾಗಿಸಲು ಯತ್ನಿಸಿದ್ದ. ನಾಲ್ಕು ಪ್ರತ್ಯೇಕ ಕ್ಯಾಪ್ಸುಲ್‌ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ಕಳ್ಳಸಾಗಣೆ ಮಾಡಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ.

ವಿಮಾನ ನಿಲ್ದಾಣದಲ್ಲಿ ಆರೋಪಿ ಅನುಮಾನಾಸ್ಪದವಾಗಿ ವರ್ತಿಸಿದ್ದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಿನ್ನವನ್ನು ಅಡಗಿಸಿ ಸಾಗಿಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ತಕ್ಷಣವೇ ಅದನ್ನು ವಶಕ್ಕೆ ಪಡೆದಿದ್ದಾರೆ.

ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು, ಚಿನ್ನದ ಮೂಲ, ಸಾಗಾಟದ ಜಾಲ ಹಾಗೂ ಇದರ ಹಿಂದೆ ಇರುವ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಕುರಿತು ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

RSS ನೋಂದಣಿ ವಿವಾದ: ಸಿ.ಟಿ. ರವಿಗೆ ಇತಿಹಾಸ ಗೊತ್ತಿಲ್ಲ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ನೀಡಿದ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಆರ್‌ಎಸ್‌ಎಸ್ ಇತಿಹಾಸದ ಬಗ್ಗೆ ಅವರಿಗೆ ಸರಿಯಾದ ಮಾಹಿತಿ ಇಲ್ಲ ಎಂದು ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ನೋಂದಣಿ ಮಾಡಿಕೊಳ್ಳುವ ವಿಚಾರದಲ್ಲಿ ಸಂಘ ಪರಿವಾರ ಅನಗತ್ಯ ಆತಂಕ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದರು.

ಸರ್ದಾರ್ ಪಟೇಲ್ ಹಾಗೂ ಜವಾಹರಲಾಲ್ ನೆಹರೂ ಅವರ ಕಾಲದಲ್ಲಿ ಆರ್‌ಎಸ್‌ಎಸ್ ನಿಷೇಧಕ್ಕೊಳಗಾದ ಸಂದರ್ಭಗಳಲ್ಲಿ ಸಂಘದ ನಾಯಕರು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದರು. ಆ ಇತಿಹಾಸ ಎಲ್ಲರಿಗೂ ಗೊತ್ತಿದೆ. ಆದರೆ ಈಗ ನೋಂದಣಿ ಮಾಡಿಕೊಳ್ಳಿ ಎಂದರೆ ಏಕೆ ಭಯಪಡುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

ಇಂದಿರಾ ಗಾಂಧಿ ಅವರ ತುರ್ತು ಪರಿಸ್ಥಿತಿ ಅವಧಿಯಲ್ಲಿಯೂ ಸಂಘದ ಪ್ರಮುಖರು ಸರ್ಕಾರಕ್ಕೆ ಪತ್ರ ಬರೆದಿದ್ದರು ಎಂದು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಈ ದೇಶದ ಸಂವಿಧಾನ ಮತ್ತು ಕಾನೂನುಗಳಿಗೆ ನಾವು ಒಳಪಡುವುದಿಲ್ಲ ಎಂದು ಯಾರಾದರೂ ಹೇಳಬಹುದೇ? ಎಂದು ಪ್ರಶ್ನಿಸಿದರು.

ದೇಶದಲ್ಲಿ ಬೀದಿ ವ್ಯಾಪಾರಿಯಿಂದ ಹಿಡಿದು ದೇವಾಲಯಗಳವರೆಗೆ ಪ್ರತಿಯೊಂದು ಸಂಸ್ಥೆಯೂ ನೋಂದಣಿ ಮಾಡಿಸಿಕೊಳ್ಳಬೇಕು. ಎಲ್ಲರೂ ತಮ್ಮ ಆದಾಯ-ವೆಚ್ಚದ ಲೆಕ್ಕವನ್ನು ನೀಡಬೇಕು. ಹಾಗಿದ್ದರೆ ಆರ್‌ಎಸ್‌ಎಸ್ ಮಾತ್ರ ಏಕೆ ಲೆಕ್ಕ ನೀಡಬಾರದು? ದೇಣಿಗೆಗಳ ಮೂಲ ಮತ್ತು ವೆಚ್ಚಗಳ ಬಗ್ಗೆ ಪಾರದರ್ಶಕತೆ ಇರಬಾರದೆ? ಎಂದು  ಪ್ರಶ್ನಿಸಿದರು.

ಆರ್‌ಎಸ್‌ಎಸ್ ಹಾಗೂ ಅದರ ಇತಿಹಾಸದ ಬಗ್ಗೆ ಹಲವು ದಾಖಲೆಗಳಿವೆ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನದ ಬಾಂಬ್ ದಾಳಿ; 11 ಮಕ್ಕಳು ಸೇರಿ 13 ಮಂದಿ ಸಾವು..!

0

ಕಾಬೂಲ್: ಅಫ್ಘಾನಿಸ್ತಾನದ ಗಡಿಭಾಗದಲ್ಲಿ ಪಾಕಿಸ್ತಾನ ಸೇನೆ ಮತ್ತೆ ವಾಯುದಾಳಿ ನಡೆಸಿದೆ ಎಂದು ತಾಲಿಬಾನ್ ಸರ್ಕಾರ ಆರೋಪಿಸಿದ್ದು, ಈ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಮೃತರಲ್ಲಿ ಹೆಚ್ಚಿನವರು ಮಕ್ಕಳು ಎನ್ನಲಾಗಿದ್ದು, ಘಟನೆ ಉಭಯ ದೇಶಗಳ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬೀಹುಲ್ಲಾ ಮುಜಾಹಿದ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಪಾಕಿಸ್ತಾನವು ಅಫ್ಘಾನಿಸ್ತಾನದ ವಾಯುಗಡಿಯನ್ನು ಉಲ್ಲಂಘಿಸಿ ಕುನಾರ್, ಖೋಸ್ಟ್ ಹಾಗೂ ಪಕ್ತಿಕಾ ಪ್ರಾಂತ್ಯಗಳಲ್ಲಿರುವ ನಾಗರಿಕರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ಅವರು ಆರೋಪಿಸಿದ್ದಾರೆ.

ಈ ದಾಳಿಯನ್ನು ಖಂಡಿಸಿರುವ ತಾಲಿಬಾನ್ ಸರ್ಕಾರ, ಇದು ಅಮಾನವೀಯ ಮತ್ತು ಆಕ್ರಮಣಕಾರಿ ಕ್ರಮವಾಗಿದೆ ಎಂದು ಹೇಳಿದೆ. ದಾಳಿಯಲ್ಲಿ 11 ಮಕ್ಕಳು, ಒಬ್ಬ ಮಹಿಳೆ ಹಾಗೂ ಓರ್ವ ವೃದ್ಧ ಮೃತಪಟ್ಟಿದ್ದಾರೆ. ಗಾಯಗೊಂಡ 14 ಮಂದಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ ಎಂದು ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರ ಅಥವಾ ಸೇನೆ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ದಾಳಿಯ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಇದೇ ವೇಳೆ ಪಾಕಿಸ್ತಾನದ ಕ್ರಮವನ್ನು ಭಾರತ ಖಂಡಿಸಿರುವುದಾಗಿ ವರದಿಯಾಗಿದೆ. ನಾಗರಿಕರ ಜೀವಹಾನಿಗೆ ಕಾರಣವಾದ ಈ ಘಟನೆಯನ್ನು ಕೇವಲ ಸೇನಾ ಕಾರ್ಯಾಚರಣೆಯಂತೆ ಬಿಂಬಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ ಎಂದು ಟೀಕಿಸಲಾಗಿದೆ.

ಮೂಕಾಂಬಿಕೆಯ ಮೊರೆ ಹೋದ ಸಿಎಂ ವಿಜಯ್: ಶುಕ್ರವಾರ ಕೊಲ್ಲೂರಿನಲ್ಲಿ ವಿಶೇಷ ಪೂಜೆ

0

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯಲಿದ್ದಾರೆ. ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ಅವರು ಮೊದಲ ಬಾರಿಗೆ ಪ್ರಸಿದ್ಧ ಶಕ್ತಿಪೀಠಕ್ಕೆ ಆಗಮಿಸುತ್ತಿರುವುದು ಗಮನ ಸೆಳೆದಿದೆ.

ಶುಕ್ರವಾರ ಮಧ್ಯಾಹ್ನ ಕೊಲ್ಲೂರಿಗೆ ಆಗಮಿಸಲಿರುವ ವಿಜಯ್, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸಂಜೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಚೆನ್ನೈಗೆ ತೆರಳಲಿದ್ದಾರೆ.

ಕೊಲ್ಲೂರು ಕ್ಷೇತ್ರವು ದಕ್ಷಿಣ ಭಾರತದ ರಾಜಕೀಯ ನಾಯಕರಿಗೆ ವಿಶೇಷ ಭಕ್ತಿ ಕೇಂದ್ರವಾಗಿದೆ. ಎಂಜಿಆರ್‌ನಿಂದ ಹಿಡಿದು ಜಯಲಲಿತಾ ತನಕ ಹಲವು ತಮಿಳುನಾಡು ನಾಯಕರು ಇಲ್ಲಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. 2004ರಲ್ಲಿ ಜಯಲಲಿತಾ ಚಂಡಿಕಾಯಾಗ ನಡೆಸಿ ಅನ್ನಸಂತರ್ಪಣೆಗೆ ದೇಣಿಗೆಯನ್ನೂ ನೀಡಿದ್ದರು.

ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ಕ್ಷೇತ್ರವು ಪರಶುರಾಮ ಸೃಷ್ಟಿಯ ಏಳು ಮುಕ್ತಿ ಕ್ಷೇತ್ರಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಆದಿ ಶಂಕರಾಚಾರ್ಯರು ಪ್ರತಿಷ್ಠಾಪನೆ ಮಾಡಿದ ಈ ಶಕ್ತಿಪೀಠದಲ್ಲಿ ಮಹಾಕಾಳಿ, ಮಹಾಲಕ್ಷ್ಮಿ ಮತ್ತು ಮಹಾಸರಸ್ವತಿಯ ಐಕ್ಯಸ್ವರೂಪವಾಗಿ ಮೂಕಾಂಬಿಕೆಯನ್ನು ಆರಾಧಿಸಲಾಗುತ್ತದೆ. ದೇವಿಯ ದರ್ಶನದಿಂದ ಯಶಸ್ಸು ಮತ್ತು ಏಳಿಗೆ ದೊರೆಯುತ್ತದೆ ಎಂಬ ನಂಬಿಕೆ ಭಕ್ತರಲ್ಲಿ ಇದೆ.

error: Content is protected !!