Home Blog

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ!

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯಿ ಫಾಲ್ಸ್ ಸಮೀಪದ ಕಾಡಿನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕಡಿರುದ್ಯಾವರ ನಿವಾಸಿ ಸುಮಂತ್ (28) ಹಾಗೂ ಗರ್ಡಾಡಿ ನಿವಾಸಿ ನವನೀತ್ (26) ಎಂದು ಗುರುತಿಸಲಾಗಿದೆ. ಏಪ್ರಿಲ್ 16ರಂದು ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿ ಈ ಕುರಿತು ಪೋಷಕರಿಗೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಬಳಿಕ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದರು. ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈಕೋರ್ಟ್ ತೀರ್ಪಿಗೆ ಸವಾಲು: ಬೈಕ್ ಟ್ಯಾಕ್ಸಿ ಕುರಿತು ಸರ್ಕಾರದ ಮುಂದಿನ ಹೆಜ್ಜೆ!

ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಯ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.

ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಪ್ರತ್ಯೇಕ ನಿಯಮಾವಳಿ ರೂಪಿಸುವ ಉದ್ದೇಶ ಇಲ್ಲವೆಂದು ಸ್ಪಷ್ಟಪಡಿಸಿರುವ ಸರ್ಕಾರ, ಹೈಕೋರ್ಟ್ ಆದೇಶಕ್ಕೆ ಸವಾಲು ಹಾಕಲು ಮುಂದಾಗಿದೆ.

ಗಮನಾರ್ಹವಾಗಿ, ಕಳೆದ ವರ್ಷ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಬೈಕ್ ಟ್ಯಾಕ್ಸಿ ಸೇವೆಗಳನ್ನು ಅನಧಿಕೃತವೆಂದು ಘೋಷಿಸಿ ನಿಷೇಧಿಸಿತ್ತು. ಆದರೆ ಈ ವರ್ಷದ ಜನವರಿ 23ರಂದು ದ್ವಿಸದಸ್ಯ ಪೀಠವು ಮಹತ್ವದ ತೀರ್ಪು ನೀಡಿದ್ದು, ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅರ್ಜಿ ಸಲ್ಲಿಸಿದರೆ, ಸರ್ಕಾರ ಅವುಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ನಿರ್ದೇಶಿಸಿತ್ತು.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಯೆಲ್ಲೋ ಬೋರ್ಡ್ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಈ ತೀರ್ಪು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ಧವಾಗಿರುವ ಹಿನ್ನೆಲೆ, ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಈ ಮಧ್ಯೆ, ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ಪ್ರತಿಕ್ರಿಯೆ ನೀಡಿ, ಬೈಕ್ ಟ್ಯಾಕ್ಸಿ ವಿಚಾರದಲ್ಲಿ ಸರ್ಕಾರದ ನಿಲುವು ಸರಿಯಾದದ್ದೇ ಆಗಿದ್ದು, ಈ ವಿಷಯದಲ್ಲಿ ಕಾನೂನು ಸ್ಪಷ್ಟತೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಸಾರಿಗೆ ಇಲಾಖೆ ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, ಏಪ್ರಿಲ್ 23ರೊಳಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೊಸ ಮದ್ಯ ತೆರಿಗೆ ಕರಡು ಪ್ರಕಟ: ಕಡಿಮೆ ದರದ ಮದ್ಯವೂ ದುಬಾರಿ?

ಬೆಂಗಳೂರು: ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

ಈ ಕ್ರಮ ಜಾರಿಯಾದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಬಳಸುವ ವಿಸ್ಕಿ, ರಮ್, ಜಿನ್ ಹಾಗೂ ಬ್ರಾಂಡಿ ಮದ್ಯಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಕನಿಷ್ಠ ಶೇ.20ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಹೊಸ ನಿಯಮದ ಪ್ರಕಾರ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ (AIB) ಹೆಚ್ಚಿದ್ದಂತೆ ತೆರಿಗೆ ಪ್ರಮಾಣವೂ ಹೆಚ್ಚಾಗಲಿದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ತಯಾರಾಗುವ ಇಂಡಿಯನ್ ಮೇಡ್ ಲಿಕರ್ ಬೆಲೆಯ ಮೇಲೂ ಪರಿಣಾಮ ಬೀಳಲಿದೆ ಎಂದು ಅಂದಾಜಿಸಲಾಗಿದೆ.

ಪ್ರಸ್ತುತ MRP ಆಧಾರದ ಮೇಲೆ ವಿವಿಧ ಸ್ಲ್ಯಾಬ್‌ಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಆದರೆ ಹೊಸ ವ್ಯವಸ್ಥೆ ಜಾರಿಯಾದಲ್ಲಿ ಕಡಿಮೆ ಆದಾಯ ವರ್ಗದವರು ಬಳಸುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯವೇ ಹೆಚ್ಚು ದುಬಾರಿಯಾಗಲಿದೆ. ಈ ವಿಭಾಗದ ಮದ್ಯಗಳಲ್ಲಿ ಸರಾಸರಿ ಆಲ್ಕೋಹಾಲ್ ಪ್ರಮಾಣ ಶೇ.42.8ರಷ್ಟಿದ್ದು, ಇವು ಒಟ್ಟು ಎಕ್ಸೈಸ್ ಆದಾಯದಲ್ಲಿ ಶೇ.80ರಷ್ಟು ಪಾಲು ಹೊಂದಿವೆ.

ಇದಕ್ಕೂ ಮುನ್ನವೇ 180 ಮಿಲಿ ಮದ್ಯದ ಬೆಲೆ 80ರಿಂದ 95 ರೂಪಾಯಿವರೆಗೆ ಏರಿಕೆಯಾಗಿತ್ತು. ಹೊಸ ತೆರಿಗೆ ವ್ಯವಸ್ಥೆ ಜಾರಿಯಾದಲ್ಲಿ ಇದು 105ರಿಂದ 110 ರೂಪಾಯಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆರು ದಶಕಗಳ ಹಳೆಯ ಮದ್ಯ ತೆರಿಗೆ ನೀತಿಯಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮುಂದಾಗಿದ್ದು, ಈ ಕ್ರಮ ಜಾರಿಯಾದಲ್ಲಿ ಆಲ್ಕೋಹಾಲ್-ಇನ್-ಬೇವರೇಜ್ (AIB) ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಪಾಶ್ಚಾತ್ಯ ದೇಶಗಳಲ್ಲಿ ಈ ವ್ಯವಸ್ಥೆ ಇದ್ದರೂ, ಭಾರತದಲ್ಲಿ ಇದೇ ಮೊದಲ ಪ್ರಯೋಗವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಬ್ರೂವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಮಾರ್ ಪರಸಾ, ಈ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯ ಸಾಮಾನ್ಯ ಜನರಿಗೆ ಲಭ್ಯವಾಗುವಂತಹದ್ದು. ಅದರ ಬೆಲೆ ಏರಿಕೆಯಿಂದ ಮಾರುಕಟ್ಟೆಯ ಮೇಲೆ ಪರಿಣಾಮ ಬೀಳಲಿದೆ ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಮುಂದಾಗಿರುವುದಾಗಿ ಅವರು ಹೇಳಿದ್ದು, ಅಂತಿಮ ಅಧಿಸೂಚನೆಗೂ ಮುನ್ನ ಸರ್ಕಾರ ನಮ್ಮ ಸಲಹೆಗಳನ್ನು ಪರಿಗಣಿಸಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿ! ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ

ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಸಂಗತಿ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

ಜವರಪ್ಪ ಎಂಬ ವ್ಯಕ್ತಿ ಕೊಲೆಯಾದ ದುರ್ದೈವಿ. ಈ ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಹಾಗೂ ಕುರ್ಣೇಗಾಲ ಗ್ರಾಮದ ಅಮೃತಾ (26)ರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಈ ಕೊಲೆ ನಡೆದಿರುವುದು ತಿಳಿದುಬಂದಿದೆ.

ಕೆಲವು ದಿನಗಳ ಹಿಂದೆ ಕುರ್ಣೇಗಾಲ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಜವರಪ್ಪ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜವರಪ್ಪನ ಸಹೋದರ ರವಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಅಮೃತಾ ಮತ್ತು ಸಿದ್ದೇಶ್ ನಡುವೆ ಅಕ್ರಮ ಸಂಬಂಧ ಇರುವುದಾಗಿ ತಿಳಿದುಬಂದಿದ್ದು, ತಮ್ಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಕಾರಣ ಜವರಪ್ಪನನ್ನು ಕೊಲ್ಲಲು ಸಂಚು ರೂಪಿಸಿರುವುದು ಬಹಿರಂಗವಾಗಿದೆ.

ಯೋಜನೆಯಂತೆ ಅಮೃತಾ ಕುಮ್ಮಕ್ಕಿನಿಂದ ಸಿದ್ದೇಶ್ ಜವರಪ್ಪನನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಜವರಪ್ಪ ಮತ್ತು ಅಮೃತಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಸಣ್ಣಪುಟ್ಟ ವಿಷಯಗಳಿಗೆ ಆಗಾಗ ಗಲಾಟೆ ನಡೆಯುತ್ತಿತ್ತೆಂದು ಹೇಳಲಾಗಿದೆ. ಸುಮಾರು 12 ದಿನಗಳ ಹಿಂದೆ ಅಮೃತಾ ಮಕ್ಕಳೊಂದಿಗೆ ತವರೂರಿಗೆ ತೆರಳಿದ್ದಳು.

ಏಪ್ರಿಲ್ 16ರಂದು ಹೆಂಡತಿಯ ಮನೆಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದ ಜವರಪ್ಪ ಮನೆಗೆ ಮರಳಿರಲಿಲ್ಲ. ಬಳಿಕ ಮರುದಿನ ಬೆಳಗ್ಗೆ ಗ್ರಾಮ ಸಮೀಪ ರಸ್ತೆ ಬದಿಯಲ್ಲಿ ಅವನ ಮೃತದೇಹ ಪತ್ತೆಯಾಗಿತ್ತು.

ಈ ಪ್ರಕರಣದ ತನಿಖೆಗಾಗಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿತ್ತು. ಕೊನೆಗೆ ಪ್ರಕರಣದ ನಿಜಸ್ವರೂಪ ಬಹಿರಂಗವಾಗಿದ್ದು, ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವುದು ದೃಢಪಟ್ಟಿದೆ. ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ: ನಾಲ್ವರು ಸಾವು? ಫುಲ್ ಟ್ರಾಫಿಕ್ ಜಾಮ್!

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಬೈಕ್, ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ದೃಶ್ಯಗಳು ಭೀತಿಗೊಳಿಸುವಂತಿವೆ.

ಮಾಹಿತಿಯ ಪ್ರಕಾರ, ಮರಿಯಮ್ಮನಹಳ್ಳಿಯಿಂದ ಹೊಸಪೇಟೆ ಕಡೆಗೆ ಬೆಳ್ಳುಳ್ಳಿ ಸಾಗಿಸುತ್ತಿದ್ದ ಲಾರಿ, ಚಿತ್ರದುರ್ಗದತ್ತ ತೆರಳುತ್ತಿತ್ತು. ತಡವಾಗಿದ್ದ ಹಿನ್ನೆಲೆ ಚಾಲಕ ಅತಿವೇಗದಲ್ಲಿ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ. ಬಿಎಂಎಂ ಫ್ಯಾಕ್ಟರಿ ಸಮೀಪ ಎದುರು ಬರುತ್ತಿದ್ದ ವಾಹನಗಳನ್ನು ಗಮನಿಸದೇ ನಿಯಂತ್ರಣ ತಪ್ಪಿದ ಲಾರಿ ಮೊದಲು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಮತ್ತೊಂದು ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಂತಿಮವಾಗಿ ಬಸ್‌ಗೆ ಗುದ್ದಿದ ರಭಸಕ್ಕೆ ಲಾರಿ ಪಲ್ಟಿಯಾಗಿದೆ.

ಗಾಯಗೊಂಡವರನ್ನು ತಕ್ಷಣ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪೈಕಿ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ ರವಾನೆ ಮಾಡಲಾಗಿದೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಲಿಂಡರ್ ಸ್ಫೋಟ: ಗುಡಿಸಲು ಮನೆ ಭಸ್ಮ, 3 ಲಕ್ಷ ನಗದು ಸೇರಿ ಚಿನ್ನಾಭರಣ ಸುಟ್ಟು ಕರಕಲು!

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಸಿಲಿಂಡರ್ ಸ್ಫೋಟದಿಂದ ಉಂಟಾದ ಅಗ್ನಿಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಹಾಗೂ ದವಸ ಧಾನ್ಯಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇರದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ತಿಳಿದುಬಂದಿದೆ.

ತಹಶೀಲ್ದಾರ್ ರೇಹಾನ್ ಪಾಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಚಿನ್ನದ ದರ ದುಬಾರಿ: 10 ದಿನದಲ್ಲಿ 600ರೂ ಏರಿಕೆ! ಇಂದಿನ ದರ ಇಲ್ಲಿದೆ

0

ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಮತ್ತೆ ಏರಿಳಿತ ಕಂಡುಬಂದಿದ್ದು, ವಾರಾಂತ್ಯದಲ್ಲಿ ಎರಡೂ ಲೋಹಗಳ ದರ ಏರಿಕೆಯಾಗಿದೆ. ಚಿನ್ನದ ಬೆಲೆ ಪ್ರತಿ ಗ್ರಾಂಗೆ ಸುಮಾರು 145 ರೂಪಾಯಿ ಹೆಚ್ಚಳ ಕಂಡಿದ್ದು, ಬೆಳ್ಳಿ ದರವು 10 ರೂಪಾಯಿ ಏರಿಕೆಯಾಗಿದೆ.

ಕಳೆದ ಎರಡು ವಾರಗಳಿಂದ ತೂಗುಯ್ಯಾಲೆಯಂತೆ ಅಸ್ಥಿರತೆ ತೋರಿಸುತ್ತಿದ್ದ ಚಿನ್ನ-ಬೆಳ್ಳಿ ದರಗಳು, ಕಳೆದ ಹತ್ತು ದಿನಗಳಲ್ಲಿ ಗಮನಾರ್ಹ ಏರಿಕೆಯನ್ನು ದಾಖಲಿಸಿವೆ. ಚಿನ್ನದ ಬೆಲೆ ಈ ಅವಧಿಯಲ್ಲಿ ಸುಮಾರು 600 ರೂಪಾಯಿಗೂ ಅಧಿಕ ಏರಿಕೆಯಾಗಿದ್ದರೆ, ಬೆಳ್ಳಿ ಬೆಲೆ ಸುಮಾರು 25 ರೂಪಾಯಿಗಳಷ್ಟು ದುಬಾರಿಯಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 19ಕ್ಕೆ):

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,684 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,578 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಕೆಜಿಎಫ್‌ನಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ!

ಕೋಲಾರ: ಜಿಲ್ಲೆಯ ಕೆಜಿಎಫ್ ಹಾಗೂ ಬಂಗಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ದಿಢೀರ್ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ.

ಈ ಕಾರ್ಯಾಚರಣೆಗೆ ಐದು ಸಬ್-ಇನ್ಸ್‌ಪೆಕ್ಟರ್‌ಗಳು ಹಾಗೂ ಐದು ಇನ್ಸ್‌ಪೆಕ್ಟರ್‌ಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ರೌಡಿಶೀಟರ್‌ ಮನೆಗೆ ಪ್ರತ್ಯೇಕ ತಂಡವನ್ನು ನಿಯೋಜಿಸಲಾಗಿತ್ತು. ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ.

ಶೋಧದ ವೇಳೆ ಇಬ್ಬರು ರೌಡಿಶೀಟರ್‌ಗಳ ಮನೆಗಳಲ್ಲಿ ಲಾಂಗ್, ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿವೆ. ಪತ್ತೆಯಾದ ಎಲ್ಲಾ ಆಯುಧಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಾಗತಿಕ ಟೆಕ್ ಕ್ಷೇತ್ರದಲ್ಲಿ ಭಾರೀ ಉದ್ಯೋಗ ಕಡಿತ: ನಾಲ್ಕು ತಿಂಗಳಲ್ಲಿ 80,000 ಮಂದಿಗೆ ಹೊಡೆತ!

0

ನವದೆಹಲಿ: 2026ರ ಮೊದಲ ನಾಲ್ಕು ತಿಂಗಳಲ್ಲಿ ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಸುಮಾರು 80,000 ಉದ್ಯೋಗ ಕಡಿತಗಳು ಸಂಭವಿಸಿವೆ ಎಂದು ವರದಿಯಾಗಿದೆ. ಟ್ರೇಡಿಂಗ್ ಪ್ಲಾಟ್‌ಫಾರ್ಮ್ಸ್ ವರದಿ ಪ್ರಕಾರ, ಕೋವಿಡ್ ನಂತರ ಕಂಪನಿಗಳು ನೇಮಕಾತಿಯನ್ನು ಕಡಿತಗೊಳಿಸಿದ್ದರೆ, ಇದೀಗ ವೆಚ್ಚ ನಿಯಂತ್ರಣದ ಭಾಗವಾಗಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿವೆ.

ಈ ವರ್ಷದ ಒಟ್ಟು ಉದ್ಯೋಗ ಕಡಿತಗಳಲ್ಲಿ ಸುಮಾರು 50% ಕೃತಕ ಬುದ್ಧಿಮತ್ತೆ (AI) ಮತ್ತು ಆಟೋಮೇಷನ್ ಅಳವಡಿಕೆಯ ಪರಿಣಾಮವಾಗಿದೆ. ಜಾಗತಿಕ ಮಟ್ಟದಲ್ಲಿ ನಡೆದ ಉದ್ಯೋಗ ಕಡಿತಗಳಲ್ಲಿ 77% ಅಮೆರಿಕಾದಲ್ಲೇ ಸಂಭವಿಸಿದೆ. 62 ಕಂಪನಿಗಳಲ್ಲಿ 61,000ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ.

ಒರಾಕಲ್ ಕಂಪನಿ ಜಾಗತಿಕವಾಗಿ ಅತಿ ಹೆಚ್ಚು, ಅಂದರೆ 25,000 ರಿಂದ 30,000 ಉದ್ಯೋಗಿಗಳನ್ನು ಕಡಿತಗೊಳಿಸಿದೆ. ಇದರಲ್ಲಿ ಭಾರತದಲ್ಲೇ ಸುಮಾರು 10,000–12,000 ಮಂದಿ ಬಾಧಿತರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಅಮೆಜಾನ್ ಫೆಬ್ರವರಿಯಲ್ಲಿ ಸುಮಾರು 16,000 ಉದ್ಯೋಗಿಗಳನ್ನು ವಜಾಗೊಳಿಸಿದೆ. ಕಾರ್ಯಾಚರಣೆಯ ದಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಮೆಟಾ ಮೇ 20ರಿಂದ ಮೊದಲ ಹಂತದ ಉದ್ಯೋಗ ಕಡಿತ ಪ್ರಾರಂಭಿಸಲು ಯೋಜಿಸಿದ್ದು, ಸುಮಾರು 8,000 ಸಿಬ್ಬಂದಿ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ಪ್ರಾದೇಶಿಕವಾಗಿ ನೋಡಿದರೆ, ಆಸ್ಟ್ರೇಲಿಯಾದಲ್ಲಿ ಸುಮಾರು 4,450 ಉದ್ಯೋಗ ಕಡಿತವಾಗಿದ್ದು, ಯುರೋಪಿನ ಆಸ್ಟ್ರಿಯಾ, ಸ್ವೀಡನ್ ಮತ್ತು ನೆದರ್‌ಲ್ಯಾಂಡ್ಸ್ ದೇಶಗಳಲ್ಲಿ ಸೆಮಿಕಂಡಕ್ಟರ್, ಟೆಲಿಕಾಂ ಮತ್ತು ಐಟಿ ಕ್ಷೇತ್ರಗಳಲ್ಲಿ ಒತ್ತಡದ ಪರಿಣಾಮ ಕಡಿತಗಳು ಕಂಡುಬಂದಿವೆ.

ಏಷ್ಯಾದಲ್ಲಿ ಭಾರತದಲ್ಲಿ 2,000ಕ್ಕೂ ಹೆಚ್ಚು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇಸ್ರೇಲ್ ಮತ್ತು ಸಿಂಗಾಪುರದಲ್ಲಿಯೂ AI ಸ್ಟಾರ್ಟ್‌ಅಪ್‌ಗಳು, ಇ-ಕಾಮರ್ಸ್ ಹಾಗೂ ಸೈಬರ್ ಸುರಕ್ಷತಾ ಕಂಪನಿಗಳು ಸಿಬ್ಬಂದಿ ಕಡಿತ ಮಾಡಿವೆ.

ವಲಯವಾರು ನೋಡಿದರೆ, ಕ್ಲೌಡ್ ಕಂಪ್ಯೂಟಿಂಗ್ ಮತ್ತು ಸಾಫ್ಟ್‌ವೇರ್-ಆಸ್-ಎ-ಸರ್ವಿಸ್ ಕ್ಷೇತ್ರದಲ್ಲಿ ಸುಮಾರು 28,000 ಉದ್ಯೋಗ ಕಡಿತವಾಗಿದ್ದು, ನಂತರ ಇ-ಕಾಮರ್ಸ್ ವಲಯದಲ್ಲಿ ಸುಮಾರು 19,000 ಮಂದಿಗೆ ಹೊಡೆತ ಬಿದ್ದಿದೆ. ವಿಶ್ಲೇಷಕರ ಅಂದಾಜು ಪ್ರಕಾರ, ಈ ವರ್ಷದ ಅಂತ್ಯದೊಳಗೆ ಜಾಗತಿಕ ಉದ್ಯೋಗ ಕಡಿತದ ಸಂಖ್ಯೆ 3 ಲಕ್ಷವನ್ನು ಮೀರಬಹುದು.

ಕಲಬುರಗಿಯಲ್ಲಿ ಉರಿಯುವ ಬಿಸಿಲು: 45 ಡಿಗ್ರಿಗೆ ತಲುಪಿದ ತಾಪಮಾನ

ಕಲಬುರಗಿ: ಬೇಸಿಗೆ ಆರಂಭವಾದ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ದಾಖಲೆ ಮಟ್ಟ ತಲುಪಿದೆ.

ಏಪ್ರಿಲ್ ತಿಂಗಳಲ್ಲಿಯೇ ಗರಿಷ್ಠ ತಾಪಮಾನ 44ರಿಂದ 45.05 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುತ್ತಿದೆ. ಕಳೆದ 25 ವರ್ಷಗಳಲ್ಲಿ ಕಂಡ ಅತ್ಯಧಿಕ ಬಿಸಿಲು ಇದಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ ವೇಳೆಗೆ ಸೂರ್ಯನ ತಾಪಕ್ಕೆ ಭೂಮಿ ಕೆಂಡದಂತಾಗುತ್ತಿದ್ದು, ಹೊರಗೆ ಸಂಚಾರ ಕಷ್ಟಕರವಾಗಿದೆ. ತೀವ್ರ ಬಿಸಿಗಾಳಿಯಿಂದ ಜನರು ತಂಪು ಪಾನೀಯಗಳತ್ತ ಮೊರೆ ಹೋಗುತ್ತಿದ್ದಾರೆ.

error: Content is protected !!