Home Blog

ಒಂದು ಬದಿಯಿಂದ ಮತ್ತೊಂದು ಬದಿಗೆ ನುಗ್ಗಿದ ಲಾರಿ: ಟ್ರ್ಯಾಕ್ಟರ್‌, ಬೊಲೆರೋಗೆ ಡಿಕ್ಕಿ – ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಚಿಕ್ಕಬಳ್ಳಾಪುರ: ಟೈರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪ ನಡೆದಿದೆ. ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಎಸ್‌ಟಿಆರ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಮೊದಲು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಇಟ್ಟಿಗೆಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿವೆ.

ಬಳಿಕ ಲಾರಿ ರಸ್ತೆ ವಿಭಜಕ ದಾಟಿ ವಿರುದ್ಧ ದಿಕ್ಕಿಗೆ ನುಗ್ಗಿ ಬೊಲೆರೋ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಪಿಕಪ್ ವಾಹನ ರಸ್ತೆಯಿಂದ ಹೊರಕ್ಕೆ ಎಸೆಯಲ್ಪಟ್ಟು ಜಮೀನಿನಲ್ಲಿ ಬಿದ್ದಿದೆ. ವಾಹನದಲ್ಲಿದ್ದ ಕ್ರೇಟ್‌ಗಳೂ ಚದುರಿಹೋಗಿವೆ.

ಅಪಘಾತದಲ್ಲಿ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವೆನ್ನಿಲಾ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ತಾಯಿ ಪ್ರಿಯಾಂಕಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ಪೊಲೀಸರ ಸಿದ್ಧತೆ

ಬೆಂಗಳೂರು: ಕಾಡುಗೋಡಿ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಪ್ರಕರಣದ ಸತ್ಯಾಂಶ ಹೊರತರುವ ನಿಟ್ಟಿನಲ್ಲಿ ವೈಜ್ಞಾನಿಕ ತನಿಖೆಗೆ ಮುಂದಾಗಿದ್ದಾರೆ. ಪ್ರಕರಣದಲ್ಲಿ ಸಹ ಆರೋಪಿ ಆಗಿರುವ ಬಾಲಕಿಯ ತಾಯಿ ಪ್ರಿಯಾಂಕಾ ವಿರುದ್ಧ ಅನುಮಾನಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಆಕೆಗೆ ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಮೋಹನ್ ಮತ್ತು ಪ್ರಿಯಾಂಕಾರನ್ನು ಬಾಣಸವಾಡಿ ಎಸಿಪಿ ಅನುಷಾ ನೇತೃತ್ವದ ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಹೆಚ್ಚಿನ ವಿಚಾರಣೆ ಹಾಗೂ ಸಾಕ್ಷ್ಯ ಸಂಗ್ರಹಕ್ಕಾಗಿ ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ಮನವಿ ಮಾಡಿದ್ದರು.

ಪೊಲೀಸರ ಮನವಿಯನ್ನು ಪರಿಗಣಿಸಿದ ಒಂದನೇ ಎಸಿಜೆಎಂ ನ್ಯಾಯಾಲಯ, ಆರೋಪಿ ಮೋಹನ್‌ಗೆ 5 ದಿನ ಹಾಗೂ ಪ್ರಿಯಾಂಕಾಗೆ 10 ದಿನಗಳ ಪೊಲೀಸ್ ಕಸ್ಟಡಿಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಅವಧಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಲು ತನಿಖಾಧಿಕಾರಿಗಳು ಮುಂದಾಗಿದ್ದಾರೆ.

ಇದುವರೆಗೆ ನಡೆದ ವಿಚಾರಣೆಯಲ್ಲಿ ಆರೋಪಿ ಮೋಹನ್ ಕೊಲೆ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಾರ್ಚ್ 24ರಂದು ಇಂದಿರಾನಗರದಲ್ಲಿ ಶಾಪಿಂಗ್‌ಗೆ ತೆರಳಿದ್ದ ವೇಳೆ ಐಸ್‌ಕ್ರೀಂ ವಿಚಾರಕ್ಕೆ ಬಾಲಕಿ ಅಳುತ್ತಿದ್ದ ಹಿನ್ನೆಲೆಯಲ್ಲಿ ಕೋಪಗೊಂಡು ಆಕೆಯ ಹೊಟ್ಟೆಗೆ ಒದ್ದು, ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಆದರೆ ಸಹ ಆರೋಪಿ ಪ್ರಿಯಾಂಕಾ ಮಾತ್ರ ಪ್ರಕರಣದಲ್ಲಿ ತನ್ನ ಪಾತ್ರವನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ಮಗಳ ಕೊಲೆ ಕುರಿತು ತನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದಾಳೆ. ತನ್ನ ವಿರುದ್ಧದ ಆರೋಪಗಳು ಸುಳ್ಳು ಎಂದು ಆಕೆ ತನಿಖಾಧಿಕಾರಿಗಳ ಮುಂದೆ ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ.

ಪ್ರಿಯಾಂಕಾ ನೀಡಿರುವ ಹೇಳಿಕೆಗಳು ಹಾಗೂ ಪ್ರಕರಣದ ಇತರೆ ಸಾಕ್ಷ್ಯಗಳ ನಡುವೆ ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಪಾಲಿಗ್ರಾಫ್ ಪರೀಕ್ಷೆಯ ಮೊರೆ ಹೋಗಿದ್ದಾರೆ. ಪರೀಕ್ಷೆಗೆ ಪ್ರಿಯಾಂಕಾ ಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದ್ದು, ಇದಕ್ಕಾಗಿ ಅಗತ್ಯ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ.

ವೆನ್ನಿಲಾ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದು, ಪ್ರಕರಣದ ನಿಖರ ಸತ್ಯಾಂಶವನ್ನು ಹೊರತರುವ ನಿಟ್ಟಿನಲ್ಲಿ ಪೊಲೀಸರು ಬಹುಮುಖ ತನಿಖೆ ಮುಂದುವರಿಸಿದ್ದಾರೆ.

3 ವರ್ಷದಲ್ಲಿ 100 ಕೋಟಿ ಖರ್ಚು, ಫಲಿತಾಂಶ ಶೂನ್ಯ?: ಗ್ಯಾರಂಟಿ ಅನುಷ್ಠಾನ ಸಮಿತಿಗಳ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ರಚಿಸಿರುವ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಕಾರ್ಯವೈಖರಿ ಹಾಗೂ ಅವುಗಳ ಮೇಲಿನ ವೆಚ್ಚದ ಕುರಿತು ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸಮಿತಿಗಳ ನಿರ್ವಹಣೆಗೆ ಸುಮಾರು 100 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದ್ದು, ಸಮಿತಿಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಎಸ್. ಪ್ರಕಾಶ್ ಆರೋಪಿಸಿದ್ದಾರೆ.

ನಗರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ 3ರಿಂದ 4 ಲಕ್ಷ ಅನರ್ಹ ಹಾಗೂ ಅಪಾತ್ರ ಫಲಾನುಭವಿಗಳ ಹೆಸರನ್ನು ಸರ್ಕಾರ ಇದೀಗ ಪಟ್ಟಿಯಿಂದ ತೆಗೆದುಹಾಕಲು ಮುಂದಾಗಿರುವುದೇ ಅನುಷ್ಠಾನ ಸಮಿತಿಗಳ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ಹೇಳಿದರು.

ಅನುಷ್ಠಾನ ಸಮಿತಿಯ ಪದಾಧಿಕಾರಿಗಳಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನೇಮಕಾತಿ ಮಾಡಲಾಗಿದೆ. ಅವರಿಗೆ ಸಂಬಳ, ಪ್ರವಾಸ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸಮಿತಿಗಳ ನಿರ್ವಹಣೆಗೆ ವರ್ಷಕ್ಕೆ ಸುಮಾರು 35 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಿತಿಗಳು ಇದುವರೆಗೆ ಒಂದೇ ಒಂದು ಅರ್ಹ ಫಲಾನುಭವಿಯ ಹೆಸರನ್ನು ಸೇರ್ಪಡೆಗೊಳಿಸಿಲ್ಲ ಹಾಗೂ ಅನರ್ಹ ಫಲಾನುಭವಿಯ ಹೆಸರನ್ನು ರದ್ದುಪಡಿಸಲು ಯಾವುದೇ ಶಿಫಾರಸು ಮಾಡಿಲ್ಲ ಎಂದು ಆರೋಪಿಸಿದ ಎಸ್. ಪ್ರಕಾಶ್, “ಸರ್ಕಾರದ ಸೌಲಭ್ಯಗಳನ್ನು ಪಡೆದು ಯಾವುದೇ ಪರಿಣಾಮಕಾರಿ ಕೆಲಸ ಮಾಡದಿದ್ದರೆ ಇಂತಹ ಸಮಿತಿಗಳ ಅಗತ್ಯವೇನು?” ಎಂದು ಪ್ರಶ್ನಿಸಿದರು.

ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹ್ರಾಜ್ ಖಾನ್ ಅವರಿಗೆ ಬೆಂಗಳೂರಿನ ಜಯಮಹಲ್ ಪ್ರದೇಶದಲ್ಲಿ ಸರ್ಕಾರಿ ನಿವಾಸ ಒದಗಿಸಿರುವುದನ್ನೂ ಅವರು ಟೀಕಿಸಿದರು. ಮೇಲ್ಮನೆ ಹಾಗೂ ಕೆಳಮನೆ ವಿರೋಧ ಪಕ್ಷದ ನಾಯಕರಿಗೆ ಸಮರ್ಪಕ ವಸತಿ ಸೌಲಭ್ಯ ದೊರೆಯದಿರುವ ಸಂದರ್ಭದಲ್ಲಿ ಈ ರೀತಿಯ ಕ್ರಮಗಳು ಸರ್ಕಾರಿ ಸಂಪನ್ಮೂಲಗಳ ದುರುಪಯೋಗಕ್ಕೆ ಕಾರಣವಾಗುತ್ತಿವೆ ಎಂದು ಆರೋಪಿಸಿದರು.

CCB ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ: ₹70.50 ಲಕ್ಷ ಮೌಲ್ಯದ ಕೊಕೇನ್ ಜಪ್ತಿ! ಮಹಿಳೆ ಸೇರಿ ಇಬ್ಬರ ಬಂಧನ

0

ಬೆಂಗಳೂರು: ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ₹70.50 ಲಕ್ಷ ಮೌಲ್ಯದ 130 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಉಗಾಂಡಾ ಮೂಲದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತರನ್ನು ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಜನತ್ ಹಾಗೂ ಡ್ರಗ್ಸ್ ಸ್ವೀಕರಿಸುತ್ತಿದ್ದ ವಾಹಬ್ ಎಲ್ವಿಸ್ ಯುನಿಸ್ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ಯಶವಂತಪುರ ಮತ್ತು ಗೊರಗುಂಟೆಪಾಳ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳ ಅಕ್ರಮ ಮಾರಾಟದಲ್ಲಿ ತೊಡಗಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳವು ಚಿಕ್ಕಬಾಣವರದಲ್ಲಿ ಇಬ್ಬರನ್ನೂ ಬಂಧಿಸಿ, ಅವರಿಂದ 130 ಗ್ರಾಂ ಕೊಕೇನ್ ವಶಪಡಿಸಿಕೊಂಡಿದೆ. ಜಪ್ತಿ ಮಾಡಿದ ಕೊಕೇನ್‌ನ ಮೌಲ್ಯ ಸುಮಾರು ₹70.50 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ, ಉಗಾಂಡಾ ಮೂಲದ ಜನತ್ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದಳು ಎಂಬುದು ಬೆಳಕಿಗೆ ಬಂದಿದೆ. ಅಲ್ಲದೆ, ಈ ಹಿಂದೆ ದೆಹಲಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಐದು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದಳು ಎಂಬ ಮಾಹಿತಿಯೂ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ರಾಜೇಶ್ ಎಲ್.ವೈ. ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿಗಳ ಜಾಲ ಹಾಗೂ ಮಾದಕ ದ್ರವ್ಯಗಳ ಮೂಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ರೈತರಿಗೆ ಬಂಪರ್ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌:‌ 75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ

0

ಚೆನ್ನೈ: ತಮಿಳುನಾಡು ಸಿಎಂ ವಿಜಯ್ ರೈತ ಕಲ್ಯಾಣದ ಭಾಗವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಹಕಾರಿ ಬ್ಯಾಂಕುಗಳಲ್ಲಿ ಪಡೆದಿರುವ ₹75,000 ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಹೊಸ ಯೋಜನೆಯ ಪ್ರಕಾರ 2025ರ ಮೇ 1ರಿಂದ 2026ರ ಫೆಬ್ರವರಿ 28ರ ನಡುವೆ ಪಡೆದ ಸಾಲಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ. ₹75,000ಕ್ಕಿಂತ ಹೆಚ್ಚು ಸಾಲ ಹೊಂದಿರುವ ರೈತರಿಗೆ ₹35,000 ವರೆಗೆ ಸಾಲ ಮನ್ನಾ ನೀಡಲಾಗುತ್ತದೆ.

ಈ ಯೋಜನೆಯಿಂದ ಒಟ್ಟು 14.43 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಇವರಲ್ಲಿ ಸಣ್ಣ, ಮಧ್ಯಮ ಹಾಗೂ ದೊಡ್ಡ ರೈತರು ಸೇರಿದ್ದಾರೆ ಎಂದು ಸರ್ಕಾರ ವಿವರಿಸಿದೆ. ಸಂಪೂರ್ಣ ಸಾಲ ಮನ್ನಾ ಪಡೆಯುವ ರೈತರ ಸಂಖ್ಯೆ 6.22 ಲಕ್ಷಕ್ಕೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಈ ನಿರ್ಧಾರದಿಂದ ಸರ್ಕಾರಕ್ಕೆ ಸುಮಾರು ₹5,932 ಕೋಟಿ ಆರ್ಥಿಕ ಹೊರೆ ಉಂಟಾಗಲಿದೆ. ಯೋಜನೆ ಅನುಷ್ಠಾನದ ಹಣಕಾಸು ನಿರ್ವಹಣೆಯನ್ನು RBI ಮಾರ್ಗಸೂಚಿಗಳ ಪ್ರಕಾರ 45–60 ದಿನಗಳಲ್ಲಿ ಪೂರ್ಣಗೊಳಿಸುವ ಯೋಜನೆ ಸರ್ಕಾರದದು.

ರೌಡಿಪಟ್ಟಿಯಿಂದ 66 ಮಂದಿಯ ಹೆಸರು ಕೈಬಿಟ್ಟ ಪ್ರಕರಣ: ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಹೇಳಿದ್ದೇನು..?

ಬೆಂಗಳೂರು: ರೌಡಿಪಟ್ಟಿಯಿಂದ 66 ಮಂದಿಯ ಹೆಸರು ಕೈಬಿಟ್ಟಿರುವ ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಒಟ್ಟು 66 ಮಂದಿಯ ಹೆಸರನ್ನು ರೌಡಿಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಇದೆ. ಬೆಂಗಳೂರಿನಲ್ಲಿ ಮಾತ್ರ 7 ಮಂದಿಯ ಹೆಸರು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು.

ಇನ್ನೂ ಐದು ಮಂದಿಗೆ ಸಂಬಂಧಿಸಿದಂತೆ ಪೊಲೀಸ್ ದೂರು ಪ್ರಾಧಿಕಾರದಿಂದ ನೋಟಿಸ್ ಬಂದಿದ್ದು, ಆ ಎಲ್ಲ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಯಾವುದೇ ಹೊಸ ಕಡತ (New File) ಸೃಷ್ಟಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ವಿಚಾರ ಅತ್ಯಂತ ಸೂಕ್ಷ್ಮವಾಗಿದ್ದು, ನ್ಯಾಯಾಲಯದಲ್ಲಿಯೂ ಪ್ರಕರಣ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಪೊಲೀಸ್ ಮಹಾನಿರ್ದೇಶಕರು (ಡಿಜಿ & ಐಜಿಪಿ) ಅವರೊಂದಿಗೆ ಚರ್ಚಿಸಿ, ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ರೌಡಿಗಳನ್ನು ನಿಯಂತ್ರಿಸುವ ವಿಧಾನ ಪೊಲೀಸರಿಗೆ ತಿಳಿದಿದ್ದು, ರೌಡಿ ಪರೇಡ್ ಎಂಬುದು ಕೇವಲ ಒಂದು ಹಂತ ಮಾತ್ರ ಎಂದು ಹೇಳಿದರು. ಅಲ್ಲದೆ, ಯಾವ ಕಾರಣಕ್ಕೆ ರೌಡಿಪಟ್ಟಿಯಿಂದ ಹೆಸರು ಕೈಬಿಡಲಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು. ಮಾರ್ಗಸೂಚಿಗಳನ್ನು ಪಾಲಿಸದೇ ಈ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಆರೋಪದ ಬಗ್ಗೆಯೂ ಸಮಗ್ರ ಪರಿಶೀಲನೆ ನಡೆಸಲಾಗುವುದು ಎಂದು ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮೆಡಿಕಲ್ ಅಂಗಡಿಗಳಲ್ಲಿ ಇನ್ಮುಂದೆ ಸಿರಪ್ ಖರೀದಿಗೆ ಹೊಸ ನಿಯಮ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಜಾರಿ

0

ನವದೆಹಲಿ: ಔಷಧಿಗಳ ದುರುಪಯೋಗ ತಡೆ ಹಾಗೂ ನಿಯಂತ್ರಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಯಾವುದೇ ಸಿರಪ್ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ 1945ರ ಔಷಧ ನಿಯಮಾವಳಿಗಳಿಗೆ ತಿದ್ದುಪಡಿ ತಂದಿದ್ದು, ವೇಳಾಪಟ್ಟಿ-K ಅಡಿಯಲ್ಲಿ ವಿನಾಯಿತಿ ಪಡೆದ ಔಷಧಿಗಳ ಪಟ್ಟಿಯಿಂದ ‘ಸಿರಪ್ಗಳು’ ಎಂಬ ವರ್ಗವನ್ನು ತೆಗೆದುಹಾಕಿದೆ. ಇದರೊಂದಿಗೆ ಸಿರಪ್ ಆಧಾರಿತ ಔಷಧಿಗಳ ಮಾರಾಟದ ಮೇಲೆ ಕಠಿಣ ನಿಯಂತ್ರಣ ಜಾರಿಯಾಗಲಿದೆ.

ಹೊಸ ನಿಯಮದ ಪ್ರಕಾರ, ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್‌ಗಳನ್ನು ವೈದ್ಯರ ಶಿಫಾರಸು ಇಲ್ಲದೆ ಮೆಡಿಕಲ್ ಶಾಪ್‌ಗಳಿಂದ ಖರೀದಿಸಲು ಸಾಧ್ಯವಾಗುವುದಿಲ್ಲ. ಔಷಧ ಮಾರಾಟಗಾರರು ಕೂಡ ನೋಂದಾಯಿತ ವೈದ್ಯಕೀಯ ತಜ್ಞರ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್ ವಿತರಿಸದಂತೆ ಸೂಚಿಸಲಾಗಿದೆ.

ಇಲ್ಲಿಯವರೆಗೆ ಕೆಮ್ಮು, ಶೀತ, ಜ್ವರ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಬಳಸುವ ಅನೇಕ ಸಿರಪ್‌ಗಳನ್ನು ಸಾರ್ವಜನಿಕರು ವೈದ್ಯರನ್ನು ಸಂಪರ್ಕಿಸದೆ ನೇರವಾಗಿ ಔಷಧ ಅಂಗಡಿಗಳಿಂದ ಖರೀದಿಸುತ್ತಿದ್ದರು. ಆದರೆ ಹೊಸ ತಿದ್ದುಪಡಿ ಜಾರಿಯಾದ ಬಳಿಕ ಈ ಪದ್ಧತಿಗೆ ತೆರೆ ಬೀಳಲಿದೆ.

ಹೀಗಾಗಿ ಕೆಮ್ಮು, ಶೀತ, ಜ್ವರ ಅಥವಾ ಇತರ ಕಾಯಿಲೆಗಳ ಚಿಕಿತ್ಸೆಗೆ ಸಿರಪ್ ಆಧಾರಿತ ಔಷಧಿಗಳ ಅಗತ್ಯವಿದ್ದರೆ ಮೊದಲು ವೈದ್ಯರನ್ನು ಸಂಪರ್ಕಿಸಿ ಪ್ರಿಸ್ಕ್ರಿಪ್ಷನ್ ಪಡೆಯುವುದು ಕಡ್ಡಾಯವಾಗಲಿದೆ. ಈ ಕ್ರಮವು ಔಷಧಿಗಳ ಅನಗತ್ಯ ಬಳಕೆ ಹಾಗೂ ದುರುಪಯೋಗವನ್ನು ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸುರಕ್ಷತಾ ನಿಯಮ ಉಲ್ಲಂಘಿಸಿದ್ದೆ ಮೈಸೂರಿನ ಪಬ್‌ ಅಗ್ನಿ ದುರಂತಕ್ಕೆ ಕಾರಣ

0

ಮೈಸೂರು: ರಿಂಗ್ ರಸ್ತೆಯಲ್ಲಿರುವ ಫಾಕ್ಸ್ಡೆನ್ ಲಿಕ್ಕರ್ ಗ್ಯಾರೇಜ್ ಪಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪಬ್ ಮಾಲೀಕ ಹಾಗೂ ನಟ ಪ್ರೀತಂ ಪುನೀತ್ ಅವರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವೇ ಎಂಬ ಪ್ರಶ್ನೆ ಎದ್ದಿದೆ.

ಪಬ್‌ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಲೈಸೆನ್ಸ್ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೇ ವ್ಯವಹಾರ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ ಫೈರ್ ಎಕ್ಸಿಟ್ ಇಲ್ಲದಿರುವುದು ಹಾಗೂ ಅಗ್ನಿಶಾಮಕ ವ್ಯವಸ್ಥೆ ಕೊರತೆಯೂ ಕಂಡುಬಂದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆಯಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಮೇಲ್ಮಹಡಿಗೆ ವ್ಯಾಪಿಸಿದೆ. ಒಳಾಂಗಣದಲ್ಲಿ ಮರದ ಅಲಂಕಾರ ಮತ್ತು ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳಿದ್ದ ಕಾರಣ ಅವಘಡ ತೀವ್ರಗೊಂಡಿದೆ.

ಘಟನೆಯಲ್ಲಿ ಸಾಹಿನ್ (ಡಾರ್ಜಿಲಿಂಗ್) ಹಾಗೂ ಪ್ರಕಾಶ್ (ನೇಪಾಳ) ಮೃತಪಟ್ಟಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಪೋಷಕರು ಕೆಲಸಕ್ಕೆ ಹೋದಾಗ ಶೆಡ್‌ಗೆ ನುಗ್ಗಿದ ಕಾಮುಕ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ- ಆರೋಪಿ ಬಂಧನ

0

ರಾಯಚೂರು ಜಿಲ್ಲೆ: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 8 ಹಾಗೂ 9 ವರ್ಷದ ಸಹೋದರಿಯರ ಮೇಲೆ ನಡೆದ ಈ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ.

ಪೊಲೀಸ್ ಮಾಹಿತಿ ಪ್ರಕಾರ, ಬಡ ಕುಟುಂಬದ ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ, ಕುಟುಂಬಕ್ಕೆ ಪರಿಚಯಸ್ಥನಾಗಿದ್ದ 30 ವರ್ಷದ ಬಾಬಾ ಎಂಬ ವ್ಯಕ್ತಿ ಶೆಡ್‌ಗೆ ನುಗ್ಗಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.

ಫೇಸ್ ಬುಕ್, OLXನಲ್ಲಿ ಬೈಕ್ ಖರೀದಿಸುವ ಮುನ್ನ ಎಚ್ಚರ: ಕದ್ದ ವಾಹನ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್!

ಬೆಂಗಳೂರು: ಫೇಸ್‌ಬುಕ್ ಮತ್ತು ಓಎಲ್‌ಎಕ್ಸ್‌ನಲ್ಲಿ ಜಾಹೀರಾತು ನೀಡಿ ಕಳವು ಮಾಡಿದ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಲ್ಮಾನ್ ಮೆಹಬೂಬ್ @ ಬಿಲಾಲ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ ವಿವಿಧ ಪ್ರದೇಶಗಳಲ್ಲಿ ಪಾರ್ಕಿಂಗ್ ಮಾಡಿದ್ದ ಬೈಕ್‌ಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ ಎನ್ನಲಾಗಿದೆ.

ಕಳವು ಮಾಡಿದ ಬೈಕ್‌ಗಳ ಮೂಲ ಗುರುತು ಸಿಗದಂತೆ ಅವುಗಳ ನಂಬರ್ ಪ್ಲೇಟ್ ಬದಲಾಯಿಸಿ, ಬಳಿಕ ಫೇಸ್‌ಬುಕ್ ಹಾಗೂ ಓಎಲ್‌ಎಕ್ಸ್‌ನಲ್ಲಿ ಜಾಹೀರಾತು ನೀಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದನು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಆತನಿಂದ ₹22 ಲಕ್ಷ ಮೌಲ್ಯದ 37 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಂದು ಬೈಕ್ ಕಳವು ಪ್ರಕರಣವೂ ಪತ್ತೆಯಾಗಿದೆ. ಪ್ರಕರಣ ಸಂಬಂಧ ಜಯನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

error: Content is protected !!