ದಕ್ಷಿಣ ಕನ್ನಡ: ಕರಾವಳಿ ಕರ್ನಾಟಕ ಮತ್ತು ಗೋವಾವನ್ನು ವೇಗವಾಗಿ ಸಂಪರ್ಕಿಸುವ ಮಹತ್ವಾಕಾಂಕ್ಷಿ ಬೆಂಗಳೂರು–ಮಂಗಳೂರು–ಮಡ್ಗಾಂವ್ ವಂದೇ ಭಾರತ್ ರೈಲು ಸೇವೆ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನೀಡಿರುವ ಹೇಳಿಕೆ ಕರಾವಳಿ ಭಾಗದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಇತ್ತೀಚೆಗೆ ಯೋಜನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಮುಂದಿನ ಕೆಲವು ತಿಂಗಳೊಳಗೆ ಬೆಂಗಳೂರು, ಮಂಗಳೂರು ಮತ್ತು ಮಡ್ಗಾಂವ್ ನಡುವೆ ವೇಗದ ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.
ಹಾಸನ–ಮಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿಯ ಅಂತಿಮ ಪರಿಶೀಲನೆ ಮಾತ್ರ ಬಾಕಿಯಿದ್ದು, ಅದು ಪೂರ್ಣಗೊಂಡ ಬಳಿಕವೇ ಸೇವೆಗೆ ಹಸಿರು ನಿಶಾನೆ ಸಿಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ರೈಲು ಸೇವೆ ಆರಂಭವಾದರೆ ಕರಾವಳಿ ಹಾಗೂ ಮಲೆನಾಡು ಭಾಗಗಳ ನಡುವಿನ ಸಂಚಾರಕ್ಕೆ ಹೊಸ ಚೈತನ್ಯ ಸಿಗಲಿದೆ. ಈಗಾಗಲೇ ಮಾರ್ಗದ ಬಹುತೇಕ ಭಾಗಗಳಲ್ಲಿ ವಿದ್ಯುದೀಕರಣ ಪೂರ್ಣಗೊಂಡಿದ್ದು, ಪ್ರಯೋಗಾತ್ಮಕ ಸಂಚಾರ ಕಾರ್ಯಗಳೂ ನಡೆಯುತ್ತಿವೆ. ಇದರಿಂದ ಯೋಜನೆ ಅಂತಿಮ ಹಂತ ತಲುಪಿರುವುದು ಸ್ಪಷ್ಟವಾಗಿದೆ.
ರೈಲ್ವೆ ಇಲಾಖೆಯ ಮೂಲಗಳ ಪ್ರಕಾರ, ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಈ ಸೇವೆಯನ್ನು ಮಳೆಗಾಲ ಆರಂಭಕ್ಕೂ ಮುನ್ನವೇ ಸಾರ್ವಜನಿಕರಿಗೆ ಪರಿಚಯಿಸುವ ಸಾಧ್ಯತೆ ಇದೆ. ಸುರಕ್ಷತಾ ಅನುಮೋದನೆ ಹಾಗೂ ತಾಂತ್ರಿಕ ಪರೀಕ್ಷೆಗಳು ಪೂರ್ಣಗೊಂಡ ಬಳಿಕ ಅಧಿಕೃತ ಚಾಲನೆ ನೀಡಲಾಗುತ್ತದೆ.


