ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಗಿಡ ನೆಟ್ಟು ಪೋಷಿಸುವ ಮೂಲಕ ಪರಿಸರ ರಕ್ಷಣೆಗೆ ಕೈಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಿ.ಡಿ.ಒ. ಜೈನ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ದಿನಾಚರಣೆ ಎಂದರೆ ಭೂಮಿತಾಯಿಯ ಆರಾಧನೆ ಮಾಡಿದಂತೆ. ವಾಯು ಮಾಲಿನ್ಯ ತಡೆಗಟ್ಟಲು ಹಾಗೂ ಪರಿಸರ ಸಮತೋಲನ ಕಾಪಾಡಲು ಗಿಡ-ಮರಗಳ ಬೆಳವಣಿಗೆ ಅತ್ಯಗತ್ಯವಾಗಿದೆ. ಮರಗಳನ್ನು ಬೆಳೆಸುವುದು ಮತ್ತು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಇಂದಿನ ಜೀವನಶೈಲಿಯಲ್ಲಿ ಪರಿಸರದ ಮೇಲಿನ ಒತ್ತಡ ಹೆಚ್ಚುತ್ತಿದ್ದು, ಪ್ರಕೃತಿಯ ಸಮತೋಲನ ಹದಗೆಡುತ್ತಿದೆ. ಮನುಷ್ಯನ ಅತಿಯಾದ ಸ್ವಾರ್ಥ ಮತ್ತು ಪ್ರಕೃತಿ ಸಂಪನ್ಮೂಲಗಳ ದುರ್ಬಳಕೆಯಿಂದ ಉಷ್ಣಾಂಶ ಹೆಚ್ಚಳ, ಮಳೆಯ ಕೊರತೆ ಹಾಗೂ ಪರಿಸರ ವೈಪರೀತ್ಯಗಳು ಉಂಟಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಗೀತಾ ಕುಲಕರ್ಣಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮರಗಳನ್ನು ಕಡಿಯುವುದರಿಂದ ನಮ್ಮ ವಿನಾಶಕ್ಕೆ ನಾವೇ ಕಾರಣರಾಗುತ್ತಿದ್ದು, ರೈತರು ತಮ್ಮ ಜಮೀನುಗಳ ಬದುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಪ್ರತಿಯೊಬ್ಬರೂ ಕೈಗೊಳ್ಳಬೇಕು. ಪರಿಸರ ಉಳಿವಿಗೆ ಸಣ್ಣ ಪ್ರಯತ್ನಗಳೂ ದೊಡ್ಡ ಬದಲಾವಣೆಗೆ ಕಾರಣವಾಗುತ್ತವೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಲೋಹಿತ್ ಕುಮಾರ್ ಪಿ.ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳು ಹಾಗೂ ಸಾರ್ವಜನಿಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸ್ಪರ್ಧೆಗಳಲ್ಲಿ ಭಾಗಿ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಗರ ಹಾಗೂ ಸುತ್ತಮುತ್ತಲಿನ ಶಾಲೆಗಳ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.
“ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿದರೆ ಪರಿಸರ ಸಂರಕ್ಷಣೆಗೆ ಅದು ಅತ್ಯುತ್ತಮ ಕೊಡುಗೆಯಾಗುತ್ತದೆ. ಗಿಡಗಳನ್ನು ಬೆಳೆಸುವುದು ಮಾತ್ರವಲ್ಲ, ಅವುಗಳನ್ನು ಉಳಿಸುವ ಜವಾಬ್ದಾರಿಯೂ ನಮ್ಮದಾಗಿದೆ.”
ಸಿ.ಎಸ್. ಶಿವನಗೌಡ್ರ
ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

