Home Blog

ತಪ್ಪು ಪ್ಯಾಡ್ ಬಳಕೆ ಆರೋಗ್ಯಕ್ಕೆ ಅಪಾಯ; ಮಹಿಳೆಯರಿಗೆ ವೈದ್ಯರ ಸಲಹೆ

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ ಹೈಜೀನ್ ಕುರಿತು ಜಾಗೃತಿ ಹೆಚ್ಚಾಗುತ್ತಿದೆ.

ಮಹಿಳೆಯರು ಈಗ ಸ್ಯಾನಿಟರಿ ಪ್ಯಾಡ್‌ಗಳ ಗುಣಮಟ್ಟ ಹಾಗೂ ಅವು ಚರ್ಮದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಹಾಗೂ ಸೋಂಕಿನ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ.

ವೈದ್ಯರ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ಗಳಲ್ಲಿ ಅಧಿಕ ಪ್ರಮಾಣದ ಸುಗಂಧ ದ್ರವ್ಯಗಳು ಅಥವಾ ಹಾನಿಕಾರಕ ರಾಸಾಯನಿಕಗಳಿದ್ದರೆ ಚರ್ಮದಲ್ಲಿ ಉರಿ, ಕೆಂಪು ದದ್ದುಗಳು ಹಾಗೂ ಅಲರ್ಜಿ ಸಮಸ್ಯೆಗಳು ಕಾಣಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ.

ವಿಶೇಷವಾಗಿ ಬೇಸಿಗೆ ಮತ್ತು ತೇವಾಂಶ ಇರುವ ವಾತಾವರಣದಲ್ಲಿ ದೀರ್ಘಕಾಲ ಒಂದೇ ಪ್ಯಾಡ್ ಬಳಸುವುದರಿಂದ ಬ್ಯಾಕ್ಟೀರಿಯಾ ಹಾಗೂ ಫಂಗಲ್ ಇನ್‌ಫೆಕ್ಷನ್ ಅಪಾಯ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಮೃದುವಾದ, ಗಾಳಿಯಾಡುವ ಹಾಗೂ ಚರ್ಮ ಸ್ನೇಹಿ ಪ್ಯಾಡ್‌ಗಳನ್ನು ಬಳಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೆಚ್ಚು ಸುಗಂಧವಿರುವ ಪ್ಯಾಡ್‌ಗಳನ್ನು ಬಳಸದಿರುವುದು ಉತ್ತಮ ಎಂದೂ ತಿಳಿಸಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ಪ್ರತಿ 4ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಅಗತ್ಯವಾಗಿದೆ. ಹೆಚ್ಚು ಬೆವರು ಅಥವಾ ಚರ್ಮದ ಸಮಸ್ಯೆ ಇರುವ ಮಹಿಳೆಯರಿಗೆ ಕಾಟನ್ ಆಧಾರಿತ ಪ್ಯಾಡ್‌ಗಳು ಮತ್ತು ಕಾಟನ್ ಪ್ಯಾಂಟಿ ಉತ್ತಮ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ.

ಇತ್ತೀಚೆಗೆ ಮೋರಿಂಗಾ ಆಧಾರಿತ ಸ್ಯಾನಿಟರಿ ಪ್ಯಾಡ್‌ಗಳು ಮಹಿಳೆಯರ ಗಮನ ಸೆಳೆಯುತ್ತಿವೆ. ಮೋರಿಂಗಾದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಉರಿ ಕಡಿಮೆ ಮಾಡುವ ಗುಣಗಳಿರುವುದರಿಂದ ಚರ್ಮದ ಸಮಸ್ಯೆ ಮತ್ತು ದುರ್ಗಂಧ ಕಡಿಮೆ ಮಾಡಲು ಸಹಾಯಕವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆಯರ ಆರೋಗ್ಯದಲ್ಲಿ ಪಿರಿಯಡ್ಸ್ ಹೈಜೀನ್ ಪ್ರಮುಖ ಪಾತ್ರ ವಹಿಸುತ್ತಿದ್ದು, ಗುಣಮಟ್ಟದ ಹಾಗೂ ಸುರಕ್ಷಿತ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಆರೋಗ್ಯ ಕಾಪಾಡುವ ಪ್ರಮುಖ ಹೆಜ್ಜೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

‘ಪೆದ್ದಿ’ ಕಥೆ ಕೇಳಿ ಮೋದಿ ಹೇಳಿದ್ದೇನು? ರಾಮ್ ಚರಣ್ ಬಹಿರಂಗಪಡಿಸಿದ ‘ಹಳ್ಳಿ ಟ್ಯಾಲೆಂಟ್’ ಸೀಕ್ರೆಟ್!

ನವದೆಹಲಿ: ರಾಮ್ ಚರಣ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಬಿಡುಗಡೆಗೆ ಸಜ್ಜಾಗುತ್ತಿರುವ ನಡುವೆಯೇ ಚಿತ್ರದ ಪ್ರಚಾರ ಹೊಸ ಹಂತಕ್ಕೇರಿದೆ. ದೆಹಲಿಯಲ್ಲಿ ನಡೆದ ಭರ್ಜರಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮ್ ಚರಣ್, ಪ್ರಧಾನಿ ನರೇಂದ್ರ ಮೋದಿ ಜೊತೆ ‘ಪೆದ್ದಿ’ ಕುರಿತಾಗಿ ನಡೆದ ವಿಶೇಷ ಸಂಭಾಷಣೆಯನ್ನು ಬಹಿರಂಗಪಡಿಸಿದ್ದು, ಅದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

“‘ಪೆದ್ದಿ’ ಕೇವಲ ಸಿನಿಮಾ ಅಲ್ಲ. ಇದು ಹಳ್ಳಿಯ ಯುವಕರ ಕನಸು, ಪ್ರತಿಭೆ ಮತ್ತು ಹೋರಾಟದ ಕಥೆ,” ಎಂದು ರಾಮ್ ಚರಣ್ ಹೇಳಿದರು. ಗ್ರಾಮೀಣ ಭಾರತದ ಅಸಲಿ ಶಕ್ತಿಯನ್ನು ಈ ಸಿನಿಮಾ ತೆರೆಗೆ ತರುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಜೊತೆಗಿನ ಭೇಟಿಯನ್ನು ನೆನೆಸಿಕೊಂಡ ರಾಮ್ ಚರಣ್, “ನಾನು ದೆಹಲಿಯಲ್ಲಿ ಮೋದಿ ಅವರನ್ನು ಭೇಟಿಯಾದಾಗ ಅವರು ‘ಪೆದ್ದಿ’ ಬಗ್ಗೆ ಕೇಳಿದರು. ಆಗ ನಾನು ಇದು ಹಳ್ಳಿಗಳಿಂದ ರಾಷ್ಟ್ರಮಟ್ಟಕ್ಕೆ ಹೊರಹೊಮ್ಮುವ ಪ್ರತಿಭೆಗಳ ಕಥೆ ಎಂದು ವಿವರಿಸಿದೆ,” ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ್ದ ಮೋದಿ, ಪಶ್ಚಿಮ ಬಂಗಾಳದ ಒಂದು ಹಳ್ಳಿಯ ಫುಟ್ಬಾಲ್ ಆಟಗಾರರ ಉದಾಹರಣೆ ನೀಡಿದರಂತೆ. “ಒಬ್ಬ ಆಟಗಾರ ಸಾಧನೆ ಮಾಡಿದ ಬಳಿಕ ಇಡೀ ಹಳ್ಳಿ ಫುಟ್ಬಾಲ್ ಕಡೆ ತಿರುಗಿತು. ಈಗ ಆ ಪ್ರದೇಶವೇ ಪ್ರತಿಭೆಗಳ ಕೇಂದ್ರವಾಗಿದೆ,” ಎಂದು ಪ್ರಧಾನಿ ಹೇಳಿದ್ದನ್ನು ರಾಮ್ ಚರಣ್ ಬಹಿರಂಗಪಡಿಸಿದರು.

‘ಪೆದ್ದಿ’ ಸಿನಿಮಾದಲ್ಲಿ ರಾಮ್ ಚರಣ್ ಗ್ರಾಮೀಣ ಹಿನ್ನೆಲೆಯ ಯುವಕನಾಗಿ ಕಾಣಿಸಿಕೊಳ್ಳಲಿದ್ದು, ಕ್ರಿಕೆಟ್‌ನಿಂದ ಕುಸ್ತಿ ಕ್ಷೇತ್ರದವರೆಗೆ ಸಾಗುವ ಪ್ರೇರಣಾದಾಯಕ ಪಯಣ ಕಥೆಯ ಹೈಲೈಟ್ ಆಗಿದೆ. ಪಾತ್ರಕ್ಕಾಗಿ ವಿಶೇಷ ದೈಹಿಕ ತಯಾರಿ ನಡೆಸಬೇಕಾಯಿತು ಎಂದು ರಾಮ್ ಚರಣ್ ಹೇಳಿದ್ದಾರೆ.

ಜಾನ್ಹವಿ ಕಪೂರ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್, ಜಗಪತಿ ಬಾಬು, ಬೊಮನ್ ಇರಾನಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಎಆರ್ ರೆಹಮಾನ್ ಸಂಗೀತ ನೀಡಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಅದ್ಧೂರಿಯಾಗಿ ನಿರ್ಮಿಸಿದೆ.

ನಟಿ, ಮಿಸ್ ಪುಣೆ ತ್ವಿಶಾ ಶರ್ಮಾ ಸಾವಿನ ಹಿಂದಿನ ಡಾರ್ಕ್ ಸೀಕ್ರೆಟ್‌? ಜಾಮೀನು ರದ್ದಾದ ಬೆನ್ನಲ್ಲೇ ಅತ್ತೆ ಅರೆಸ್ಟ್!

ಭೋಪಾಲ್: ಮಾಜಿ ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಸಿಬಿಐ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಎರಡನೇ ಆರೋಪಿಯಾಗಿರುವ ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರನ್ನು ಬಂಧಿಸಿದೆ. ಹೈಕೋರ್ಟ್ ಜಾಮೀನು ರದ್ದುಪಡಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ನಡೆದಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಸಿಬಿಐ ಮೂಲಗಳ ಪ್ರಕಾರ, ತ್ವಿಶಾ ಸಾವಿನ ಹಿಂದೆ ಸಾಮಾನ್ಯ ಆತ್ಮಹತ್ಯೆಗಿಂತಲೂ ಗಂಭೀರ ಸಂಗತಿಗಳಿರುವ ಶಂಕೆ ಬಲವಾಗುತ್ತಿದೆ. ಮರಣೋತ್ತರ ಪರೀಕ್ಷೆಯಲ್ಲಿ ದೇಹದ ಮೇಲೆ ಪತ್ತೆಯಾದ ಗಾಯಗಳು ಹಾಗೂ ಗರ್ಭಪಾತ ಸಂಬಂಧದ ಒತ್ತಡದ ಆರೋಪಗಳು ತನಿಖೆಯನ್ನು ಮತ್ತಷ್ಟು ಗಂಭೀರಗೊಳಿಸಿವೆ.

ಮದುವೆಯಾದ ಕೆಲವೇ ತಿಂಗಳಲ್ಲಿ ತ್ವಿಶಾ ಗರ್ಭಿಣಿಯಾಗಿದ್ದು, ಬಳಿಕ ನಡೆದ ಗರ್ಭಪಾತದ ಹಿಂದೆ ಕುಟುಂಬದ ಒತ್ತಡವಿತ್ತು ಎಂಬ ಆರೋಪ ಕೇಳಿಬಂದಿದೆ. ಪತಿ ಮಗುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾನೆ ಎನ್ನಲಾದ ಚಾಟ್‌ಗಳು ಹಾಗೂ ಗರ್ಭಪಾತಕ್ಕೆ ಒತ್ತಾಯಿಸಿದ್ದ ಆರೋಪದ ವಾಟ್ಸಾಪ್ ಸಾಕ್ಷ್ಯಗಳು ಈಗ ಸಿಬಿಐ ತನಿಖೆಯ ಪ್ರಮುಖ ಅಂಶಗಳಾಗಿವೆ.

ಇದಕ್ಕೂ ಮೊದಲು ಪ್ರಕರಣದ ಮೊದಲ ಆರೋಪಿ ಸಮರ್ಥ್ ಸಿಂಗ್ 10 ದಿನ ತಲೆಮರೆಸಿಕೊಂಡ ಬಳಿಕ ಬಂಧನಕ್ಕೊಳಗಾಗಿದ್ದರು. ಈಗ ಅತ್ತೆಯ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಹೈಪ್ರೊಫೈಲ್ ಸ್ವರೂಪ ಪಡೆದುಕೊಂಡಿದೆ.

ಮೂಲಗಳ ಪ್ರಕಾರ, ಸಿಬಿಐ ಅಧಿಕಾರಿಗಳು ಇದೀಗ ಕುಟುಂಬದ ಆರ್ಥಿಕ ವ್ಯವಹಾರಗಳು, ವರದಕ್ಷಿಣೆ ಆರೋಪಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳ ಮೇಲೆ ಫೋಕಸ್ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಶಾಕಿಂಗ್ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಸಿಎಂ ಸ್ಥಾನ ತ್ಯಜಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ದೆಹಲಿ ಪ್ರಯಾಣ!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸಿದ್ದರಾಮಯ್ಯ ಅವರು ಇದೀಗ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯಪಾಲರ ಕಚೇರಿಗೆ ರಾಜೀನಾಮೆ ಪತ್ರ ತಲುಪಿದ ಬೆನ್ನಲ್ಲೇ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರಯಾಣಕ್ಕೆ ಸಿದ್ಧರಾಗಿದ್ದಾರೆ ಎನ್ನುವ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದೆ.

ಸಿದ್ದರಾಮಯ್ಯ ಅವರು ಇಂದು ಸಂಜೆಯೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಈ ಪ್ರವಾಸದ ಪ್ರಮುಖ ಉದ್ದೇಶ ಎಂದು ತಿಳಿದುಬಂದಿದೆ.

ಎಐಸಿಸಿ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೈಕಮಾಂಡ್‌ಗೆ ಧನ್ಯವಾದ ತಿಳಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜೀನಾಮೆಯ ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಹೈಕಮಾಂಡ್ ಸಹ ಈ ಕುರಿತು ಸ್ಪಷ್ಟ ಸೂಚನೆ ನೀಡಿಲ್ಲ.

ಈ ನಡುವೆ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ಸುದ್ದಿ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.

ಅಧಿಕಾರದ ಹಿಂದೆ ಹೋಗಿಲ್ಲ, ಆಸ್ತಿ-ಹಣದ ಆಸೆಯೂ ಇಲ್ಲ: ಸಿದ್ದರಾಮಯ್ಯ ನೇರ ನುಡಿ

ಬೆಂಗಳೂರು:“ನಾನು ಯಾವತ್ತಿಗೂ ಸಿದ್ಧಾಂತ ಮತ್ತು ಮೌಲ್ಯಗಳಲ್ಲಿ ರಾಜೀ ಮಾಡಿಕೊಂಡಿಲ್ಲ. ಅಧಿಕಾರದ ಹಿಂದೆ ಹೋದವನಲ್ಲ, ಆಸ್ತಿ ಮತ್ತು ಹಣದ ಹಿಂದೆ ಬಿದ್ದವನೂ ಅಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕರಾಗಿ ಹೇಳಿದರು.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ರಾಜೀನಾಮೆ ಪತ್ರವನ್ನು ಅವರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ರಾಜಕೀಯ ಪಯಣದ ಹಲವು ನೆನಪುಗಳನ್ನು ಹಂಚಿಕೊಂಡರು.

ನನಗೆ ಎರಡು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿಯೂ ಕೆಲಸ ಮಾಡಿದ್ದೇನೆ. ಈ ಅವಕಾಶಗಳನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಸೋನಿಯಾ ಗಾಂಧಿ ಅವರು ನನ್ನನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿದರು. ಆಗ ನನ್ನ ಜೊತೆಗೆ ಎಂಟು ಮಂದಿ ಶಾಸಕರು ಕೂಡ ಪಕ್ಷ ಸೇರಿದ್ದರು. ಅವರಲ್ಲಿ ಕೆಲವರು ಈಗ ನಮ್ಮೊಂದಿಗಿಲ್ಲ. ಅವರಿಗೆಲ್ಲ ನಾನು ಚಿರಋಣಿ ಎಂದು ಹೇಳಿದರು.

ನಾನು ಕೊನೆಯ ಉಸಿರಿರುವ ತನಕ ಕೋಮುವಾದಿಗಳ ವಿರುದ್ಧ ಹೋರಾಟ ಮಾಡುತ್ತೇನೆ. ಸಂವಿಧಾನಕ್ಕೆ ಯಾರೇ ಧಕ್ಕೆ ತಂದರೂ ಅದರ ವಿರುದ್ಧ ಹೋರಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದರು.

ತಮ್ಮ ರಾಜಕೀಯ ಬದುಕಿನ ಬಗ್ಗೆ ಮಾತನಾಡಿದ ಅವರು, “ಹಳ್ಳಿಯಿಂದ ಬಂದ ನಾನು ಶಾಸಕ, ಸಚಿವ, ವಿರೋಧ ಪಕ್ಷದ ನಾಯಕ ಅಥವಾ ಮುಖ್ಯಮಂತ್ರಿ ಆಗುತ್ತೇನೆ ಎಂದು ಯಾವತ್ತೂ ಕನಸು ಕಂಡಿರಲಿಲ್ಲ” ಎಂದು ಹೇಳಿದರು.

2006ರಲ್ಲಿ ಕಾಂಗ್ರೆಸ್‌ಗೆ ಸೇರಿದ ಬಳಿಕ ಕಾರ್ಯಕರ್ತರು, ಮುಖಂಡರು, ಶಾಸಕರು ಮತ್ತು ಸಂಸದರು ನನಗೆ ಅಪಾರ ಪ್ರೀತಿ ತೋರಿಸಿದ್ದಾರೆ. ನನಗೆ ಅವಕಾಶ ಕಲ್ಪಿಸಿದ್ದಾರೆ. ಅವರಿಗೆಲ್ಲ ನಾನು ಕೃತಜ್ಞ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ತಮ್ಮ ಜೊತೆ ಕೆಲಸ ಮಾಡಿದ ಸಹೋದ್ಯೋಗಿಗಳ ಬೆಂಬಲ ಮತ್ತು ಸಹಕಾರವನ್ನು ನೆನೆದು ಭಾವುಕರಾದ ಸಿದ್ದರಾಮಯ್ಯ, ಅವರ ಪ್ರೀತಿ ಮತ್ತು ಸಹಕಾರಕ್ಕೆ ನಾನು ಯಾವಾಗಲೂ ಚಿರಋಣಿ ಆಗಿರುತ್ತೇನೆ ಎಂದರು.

ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ ಅವರು, ನನ್ನ ರಾಜಕೀಯ ಪ್ರವೇಶ ಆಕಸ್ಮಿಕ. ನನಗೆ ಯಾವುದೇ ರಾಜಕೀಯ ಕುಟುಂಬದ ಹಿನ್ನೆಲೆ ಇರಲಿಲ್ಲ ಎಂದು ಹೇಳಿದರು. ರಾಜಕೀಯಕ್ಕೆ ಬಂದ ದಿನದಿಂದಲೇ ಬುದ್ಧ, ಬಸವಣ್ಣ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವ-ಆದರ್ಶಗಳಲ್ಲಿ ನಂಬಿಕೆ ಇಟ್ಟಿದ್ದೇನೆ. ಸಂವಿಧಾನದ ಮೇಲೆ ಅಪಾರ ವಿಶ್ವಾಸವಿದೆ ಎಂದು ಹೇಳಿದರು.

ಕೊನೆಯಲ್ಲಿ ಕುವೆಂಪು ಅವರ ಸಾಲುಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, “ಇಡೀ ಸಮಾಜ ಸರ್ವಜನಾಂಗದ ಶಾಂತಿಯ ತೋಟವಾಗಬೇಕು ಎಂಬುದು ನನ್ನ ನಂಬಿಕೆ” ಎಂದು ಕರೆ ನೀಡಿದರು.

ಸಿಎಂ ಬದಲಾದರೂ ಉತ್ತಮ ಆಡಳಿತದ ನಂಬಿಕೆ ಇಲ್ಲ: ಕಾಂಗ್ರೆಸ್ ಬೆಳವಣಿಗೆ ಬಗ್ಗೆ ವಿಜಯೇಂದ್ರ ಟೀಕೆ

ಬಳ್ಳಾರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆದರೂ ಉತ್ತಮ ಆಡಳಿತ ಸಿಗುತ್ತದೆ ಎನ್ನುವ ವಿಶ್ವಾಸ ಜನರಲ್ಲಿ ಉಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳಗಿನ ಗೊಂದಲ ರಾಜ್ಯ ಆಡಳಿತದ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ರಾಜ್ಯಪಾಲರ ಭೇಟಿಗೆ ಅನುಮತಿ ಕೇಳಿದರೆ ಅದು ಮುಖ್ಯಮಂತ್ರಿಗಳ ಟಿಪ್ಪಣಿಯಲ್ಲೇ ಇರುತ್ತದೆ. ಸಿಎಂ ಬದಲಾವಣೆ ವಿಚಾರವನ್ನು ಬಿಜೆಪಿ ಯಾವುದೇ ರೀತಿಯಲ್ಲಿ ಬಳಸಿಕೊಳ್ಳುವುದಿಲ್ಲ,” ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿ ಸ್ಥಿರ ಸರ್ಕಾರ ರಚಿಸಲು ಅವಕಾಶ ನೀಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಬಿಜೆಪಿ ಯಾವುದೇ ರೀತಿಯ ರಾಜಕೀಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ವಿಜಯೇಂದ್ರ ಹೇಳಿದರು.

ಆದರೆ ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಬೇಗ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ ಎಂದು ಟೀಕಿಸಿದ ಅವರು, ಕಳೆದ ಒಂದು ವರ್ಷದಿಂದ ಕಾಂಗ್ರೆಸ್‌ನ ಒಳಕಚ್ಚಾಟದಿಂದ ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.

ಕಳೆದ ಎರಡು-ಮೂರು ದಿನಗಳಿಂದ ನಡೆದಿರುವ ರಾಜಕೀಯ ಬೆಳವಣಿಗೆಗಳು ರಾಜ್ಯದಲ್ಲಿ ಅನಿಶ್ಚಿತ ವಾತಾವರಣ ನಿರ್ಮಾಣ ಮಾಡಿವೆ. ಮುಖ್ಯಮಂತ್ರಿ ರಾಜೀನಾಮೆ ಕುರಿತು ನಡೆಯುತ್ತಿರುವ ಚರ್ಚೆಗಳು ಜನರಲ್ಲಿ ಗೊಂದಲ ಸೃಷ್ಟಿಸಿವೆ ಎಂದು ಹೇಳಿದರು.

9ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಚಿತ್ರಮಂದಿರ ಮಾಲೀಕನ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಜೊತೆಗೆ ಜಾತಿ ನಿಂದನೆ ಹಾಗೂ ಆ್ಯಸಿಡ್ ದಾಳಿ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ 52 ವರ್ಷದ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಎನ್. ಮಂಜುನಾಥ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್ ಅಭಿಪ್ರಾಯವೇನು?

ಸಂತ್ರಸ್ತೆ ನೀಡಿರುವ ಹೇಳಿಕೆಗಳು ಹಾಗೂ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಆರೋಪಿಯ ವಿರುದ್ಧ ಮೇಲ್ನೋಟಕ್ಕೆ ಗಂಭೀರ ಸಾಕ್ಷ್ಯಾಧಾರಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯಪಟ್ಟಿದೆ.

ದೂರು ದಾಖಲಿಸಿದ ಹಿನ್ನೆಲೆ ಆರೋಪಿಯು ಕೆಲವರನ್ನು ಮನೆಗೆ ಕಳುಹಿಸಿ ಜಾತಿ ನಿಂದನೆ ಮಾಡಿಸಿ ಬೆದರಿಕೆ ಹಾಕಿರುವ ಆರೋಪವೂ ಇದೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ಮೇಲ್ನೋಟಕ್ಕೆ ಅಪರಾಧ ದೃಢಪಟ್ಟರೆ ನಿರೀಕ್ಷಣಾ ಜಾಮೀನು ನೀಡಲು ಅವಕಾಶವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಆದರೆ, ಆರೋಪಿಯು ವಿಚಾರಣಾ ನ್ಯಾಯಾಲಯದಲ್ಲಿ ನಿಯಮಿತ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು. ಅಂತಹ ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಪ್ರಕರಣದ ಹಿನ್ನೆಲೆ

ರಾಮನಗರದ ಶಂಕರ ಚಿತ್ರಮಂದಿರದ ಮಾಲೀಕ ಹಾಗೂ ಕೃಷಿಕನಾಗಿರುವ ಮಂಜುನಾಥ, 9ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಶಾಲೆ ಬಳಿ ನಿಂತು ಆಕೆಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನಿರಂತರ ಕಿರುಕುಳದಿಂದ ಬೇಸತ್ತ ಬಾಲಕಿ 2024-25ನೇ ಸಾಲಿನಲ್ಲಿ ಶಾಲೆಗೆ ಹೋಗುವುದನ್ನೇ ನಿಲ್ಲಿಸಿದ್ದಳು ಎಂದು ತಿಳಿದುಬಂದಿದೆ.

ಬಾಲಕಿ ಪೊಲೀಸರಿಗೆ ದೂರು ನೀಡಲು ಮುಂದಾದ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ, 2026ರ ಮಾರ್ಚ್ 14ರಂದು ಬಾಲಕಿಯ ಮನೆ ಬಳಿ ತೆರಳಿ ಜಾತಿ ನಿಂದನೆ ಮಾಡಿದ್ದಲ್ಲದೆ, ತನ್ನೊಂದಿಗೆ ಬಂದ ಕೆಲವರ ಮೂಲಕ ಬಾಲಕಿ ಹಾಗೂ ಆಕೆಯ ಅಜ್ಜಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ ಮುಖಕ್ಕೆ ಆ್ಯಸಿಡ್ ಎರಚುವುದಾಗಿ ಹಾಗೂ ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ಬಾಲಕಿಗೆ ನಿರಂತರವಾಗಿ ಕರೆ ಮಾಡಿ ತನ್ನೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಲ್ಲದೆ, ಆಕೆಯ ಸ್ನೇಹಿತೆಯರನ್ನೂ ಕರೆತರಲು ಒತ್ತಾಯಿಸಿದ್ದಾನೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ವಾದ-ಪ್ರತಿವಾದ

ವಿಚಾರಣೆ ವೇಳೆ ಆರೋಪಿಯ ಪರ ವಕೀಲರು, ಬಾಲಕಿ ಮತ್ತು ಆಕೆಯ ಸ್ನೇಹಿತರು ಸಿನಿಮಾ ಟಿಕೆಟ್ ವಿಚಾರವಾಗಿ ಆರೋಪಿಯನ್ನು ಸಂಪರ್ಕಿಸುತ್ತಿದ್ದರು. ಬಳಿಕ ಹಣ ಹಾಗೂ ಆಸ್ತಿ ಕಸಿದುಕೊಳ್ಳಲು ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಸುಳ್ಳು ದೂರು ನೀಡಲಾಗಿದೆ ಎಂದು ವಾದಿಸಿದರು.

ಇದಕ್ಕೆ ಸರ್ಕಾರದ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಂತ್ರಸ್ತೆ ಅಪ್ರಾಪ್ತೆಯಾಗಿದ್ದು, ಆರೋಪಿಯ ವಿರುದ್ಧ ಸ್ಪಷ್ಟ ಸಾಕ್ಷ್ಯಗಳಿವೆ. ಬಾಲಕಿ ಪರಿಶಿಷ್ಟ ಜಾತಿಗೆ ಸೇರಿರುವುದರಿಂದ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 18ರ ಅನ್ವಯ ನಿರೀಕ್ಷಣಾ ಜಾಮೀನು ನೀಡಲು ಅವಕಾಶವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮೊನ್ನೆ ಹೈಕಮಾಂಡ್ ನಾಯಕರು ನನಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಅವರು ಹೇಳಿದ ತಕ್ಷಣವೇ ನಾನು ‘ನಾಡಿದ್ದು ಕೊಡುತ್ತೇನೆ’ ಎಂದು ತಿಳಿಸಿದ್ದೆ. ಅದರಂತೆ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಹೇಳಿದರು.

“ನಾನು ಮೊದಲಿನಿಂದಲೂ ಹೇಳುತ್ತಿದ್ದೆ, ಹೈಕಮಾಂಡ್ ಯಾವಾಗ ಸೂಚನೆ ನೀಡುತ್ತದೆಯೋ ಆಗ ನಾನು ರಾಜೀನಾಮೆ ಕೊಡುತ್ತೇನೆ ಎಂದು. ಈಗ ಅದೇ ರೀತಿಯಲ್ಲಿ ನಡೆದುಕೊಂಡಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ರಾಜೀನಾಮೆ ಪ್ರಕ್ರಿಯೆ ಕುರಿತು ವಿವರಿಸಿದ ಅವರು, ನಾನು ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇನೆ. ಆದರೆ ರಾಜ್ಯಪಾಲರು ಸದ್ಯ ಬೆಂಗಳೂರಿನಲ್ಲಿ ಇಲ್ಲ ಎಂದು ಅಲ್ಲಿನ ಕಚೇರಿಯಲ್ಲಿ ತಿಳಿಸಿದರು. ಅವರು ಇಂದು ರಾತ್ರಿ ವಾಪಸ್ ಬರುತ್ತಾರೆ ಎಂದರು. ಹೀಗಾಗಿ ನನ್ನ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ರಾಜ್ಯಪಾಲರು ಮರಳಿದ ಬಳಿಕ ಸಂವಿಧಾನದ ಪ್ರಕಾರ ಪ್ರಕ್ರಿಯೆ ನಡೆಸಿ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ರಾಜ್ಯದ ರಾಜಕೀಯ ಸ್ಥಿತಿಗತಿ ಕುರಿತು ಮಾತನಾಡಿದ ಸಿದ್ದರಾಮಯ್ಯ, ನಮ್ಮ ಪಕ್ಷ 135ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಜೊತೆಗೆ ಇಬ್ಬರು ಪಕ್ಷೇತರ ಶಾಸಕರು ಕೂಡ ನಮ್ಮ ಬೆಂಬಲದಲ್ಲಿದ್ದಾರೆ. ರಾಜ್ಯದಲ್ಲಿ ನಮಗೆ ಸ್ಪಷ್ಟ ಬಹುಮತವಿದೆ ಎಂದು ಹೇಳಿದರು.

“ನನ್ನ ರಾಜೀನಾಮೆಯನ್ನು ಅಂಗೀಕರಿಸಿ ಮುಂದಿನ ಮುಖ್ಯಮಂತ್ರಿಗೆ ಆಡಳಿತ ನಡೆಸಲು ಅವಕಾಶ ಕಲ್ಪಿಸುವುದು ರಾಜ್ಯಪಾಲರ ಜವಾಬ್ದಾರಿಯಾಗಿದೆ. ಯಾವುದೇ ಗೊಂದಲವಿಲ್ಲದೆ ಮುಂದಿನ ಸರ್ಕಾರದ ರಚನೆಗೆ ಅವಕಾಶ ಮಾಡಿಕೊಡಬೇಕು” ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

‘ಒಂದು ಮಾತು ಆಡಿದ್ರೆ ಆಟವೇ ಹಾಳು!’: ಸಿಎಂ ಕುರ್ಚಿ ಮುನ್ನ ಡಿಕೆಶಿಗೆ ಸೈಲೆನ್ಸ್ ವಾರ್ನಿಂಗ್

0

ತುಮಕೂರು: ಕರ್ನಾಟಕ ರಾಜಕೀಯದ ಅತ್ಯಂತ ನಿರ್ಣಾಯಕ ಘಟ್ಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ನೊಣವಿನಕೆರೆ ಅಜ್ಜಯ್ಯರಿಂದ ಮಹತ್ವದ ಸೂಚನೆ ಸಿಕ್ಕಿದೆ. “ಈಗ ಮಾತಾಡಿದರೆ ಎಲ್ಲವೂ ಕೈ ತಪ್ಪಬಹುದು” ಎಂಬ ಸ್ಪಷ್ಟ ಎಚ್ಚರಿಕೆಯನ್ನು ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ನೀಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ತೀವ್ರ ರಾಜಕೀಯ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಪ್ರಮಾಣವಚನ ಪೂರ್ಣಗೊಳ್ಳುವವರೆಗೂ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ಶ್ರೀಗಳು ಸೂಚಿಸಿದ್ದಾರೆ. “ಮಾತು ಆಡಿದರೆ ಮುತ್ತು ಒಡೆದು ಹೋಗುತ್ತದೆ” ಎಂಬ ರೂಪಕದ ಮೂಲಕ ರಾಜಕೀಯವಾಗಿ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಡಿಕೆಶಿಗೆ ಸಂದೇಶ ರವಾನಿಸಲಾಗಿದೆ.

ಈ ಸೂಚನೆಯ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸದೆ ನೇರವಾಗಿ ತೆರಳಿದ್ದು ಗಮನ ಸೆಳೆದಿದೆ. ಅಲ್ಲದೆ, ಡಿಕೆಶಿ ಆಪ್ತ ವಲಯಕ್ಕೂ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಇದೀಗ ನೊಣವಿನಕೆರೆ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಡಿಕೆ ಶಿವಕುಮಾರ್ ಅವರನ್ನು ಖಾಸಗಿವಾಗಿ ಭೇಟಿಯಾಗಲಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದೆ.

ದೆಹಲಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಅವರು ನೊಣವಿನಕೆರೆ ಮಠಕ್ಕೆ ಎರಡು ಬಾರಿ ಭೇಟಿ ನೀಡಿ ವಿಶೇಷ ಆಶೀರ್ವಾದ ಪಡೆದಿದ್ದರು. “ಅಜ್ಜಯ್ಯ ಹೇಳಿದ ಮಾತು ನನಗೆ ಅಂತಿಮ” ಎಂದು ಡಿಕೆಶಿ ಈ ಹಿಂದೆ ಹೇಳಿದ್ದನ್ನು ಇದೀಗ ಅವರ ಮೌನವೇ ಮತ್ತೆ ಸಾಬೀತುಪಡಿಸುತ್ತಿದೆ.

ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮೂಲದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಸಿಗಂದೂರು ಸೇತುವೆ ಬಳಿ ನಡೆದಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ಉಮೇಶ್ (35) ಎಂದು ಗುರುತಿಸಲಾಗಿದೆ. ಅವರು ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕಿನ ಗಲಗಲಿ ಗ್ರಾಮದ ನಿವಾಸಿಯಾಗಿದ್ದರು.

ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ದೇವಿಯ ದರ್ಶನ ಮುಗಿಸಿಕೊಂಡ ಬಳಿಕ ಸೇತುವೆ ವೀಕ್ಷಣೆಗಾಗಿ ತೆರಳಿದ್ದ ಉಮೇಶ್, ಬಳಿಕ ಈಜಲು ನೀರಿಗೆ ಇಳಿದ ವೇಳೆ ಆಕಸ್ಮಿಕವಾಗಿ ಮುಳುಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!