Home Blog

ಶಿಕ್ಷಣವೇ ಸಮಾಜ ಪರಿವರ್ತನೆಯ ಶಕ್ತಿ: ಶಾಸಕ ಡಾ. ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸೋಮವಾರ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹3 ಕೋಟಿ 58 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಲ್ಲ; ಉತ್ತಮ ವ್ಯಕ್ತಿತ್ವ, ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಶಕ್ತಿಯಾಗಿದೆ. ವಿದ್ಯಾರ್ಥಿನಿಯರು ವಸತಿ ನಿಲಯದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ಕುಟುಂಬ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಮಾತನಾಡಿ, ಸರ್ಕಾರವು ಹಿಂದುಳಿದ ಹಾಗೂ ಬಡ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳ ಮೂಲಕ ಉತ್ತೇಜನ ನೀಡುತ್ತಿದೆ. 100 ವಿದ್ಯಾರ್ಥಿನಿಯರಿಗೆ ಊಟ, ವಸತಿ ಸೇರಿದಂತೆ ಅಗತ್ಯ ಸೌಲಭ್ಯಗಳೊಂದಿಗೆ ಈ ನಿಲಯವನ್ನು ಇಲಾಖೆಯ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಗೋಪಾಲ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳ, ಮುತ್ತಣ್ಣ ಸಂಕನೂರ, ಎಂ.ಆರ್. ಪಾಟೀಲ, ಪ್ರವೀಣ ಬಾಳಿಕಾಯಿ, ಜಗದೀಶ ಪುರಾಣಿಕಮಠ ಸೇರಿದಂತೆ ವಿವಿಧ ಗಣ್ಯರು, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮತಗಟ್ಟೆಗಳ ಪುನರಸಂಘಟನೆಗೆ ವೇಗ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗಳ ಸಮಗ್ರ ವಿಶೇಷ ಪರಿಷ್ಕರಣೆ–2026ರ ಅಂಗವಾಗಿ 1200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳ ಪುನರಸಂಘಟನೆ ಕಾರ್ಯವನ್ನು ಆಗಸ್ಟ್ 8ರೊಳಗೆ ಪೂರ್ಣಗೊಳಿಸಬೇಕು ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಶಿರಹಟ್ಟಿ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆ ವಿತರಿಸಿ, ಸ್ವೀಕರಿಸಿದ ನಮೂನೆಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈಗ ಮತದಾರರ ಸಂಖ್ಯೆಯನ್ನು ಆಧರಿಸಿ 1200ಕ್ಕೂ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ವಿಭಜಿಸಿ ಪುನರಸಂಘಟನೆ ಮಾಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಶಿವಾಜಿನಗರ, ಕೋಗನೂರ, ಕುಂದ್ರಳ್ಳಿ, ರಾಮಗೇರಿ, ಆದರಹಳ್ಳಿ, ಹರದಗಟ್ಟಿ, ಹುಲ್ಲೂರು ಸೇರಿದಂತೆ ಹಲವು ಮತಗಟ್ಟೆಗಳನ್ನು ಪುನರಸಂಘಟನೆ ಮಾಡಲಾಗುತ್ತಿದ್ದು, ಲಕ್ಷ್ಮೇಶ್ವರ, ಸೂರಣಗಿ ಹಾಗೂ ಬಾಲೇಹೊಸೂರ ಭಾಗಗಳ ಕೆಲ ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಶಿರಹಟ್ಟಿ ತಹಸೀಲ್ದಾರ್ ಎ.ಎ. ಮುಳಗುಂದಮಠ, ಲಕ್ಷ್ಮೇಶ್ವರ ತಹಸೀಲ್ದಾರ್ ಧನಂಜಯ, ಬಿಜೆಪಿ ಮುಖಂಡ ಶಂಕರ ಮರಾಠೆ, ಜೆಡಿಎಸ್ ಮುಖಂಡ ಶರಣಪ್ಪ ಹೂಗಾರ, ಕಾಂಗ್ರೆಸ್ ಮುಖಂಡ ಬುಡನಶ್ಯಾ ಮಕಾನದಾರ, ಶಿರಸ್ತೇದಾರ ಜಮೀರ್ ಮನಿಯಾರ, ಎಸ್.ಎಸ್. ಅಸ್ಕಿ, ವಿನೋದಕುಮಾರ ಪಾಟೀಲ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಡಾ. ಬಿ.ಎಫ್. ದಂಡಿನ ಸ್ಮಾರಕ ಭವನಕ್ಕೆ ಆಗಸ್ಟ್ 5ರಂದು ಭೂಮಿಪೂಜೆ

0

ವಿಜಯಸಾಕ್ಷಿ ಸುದ್ದಿ, ಗದಗ: ಕನಕದಾಸ ಶಿಕ್ಷಣ ಸಮಿತಿ ಹಾಗೂ ಡಾ. ಬಿ.ಎಫ್. ದಂಡಿನ ವಿದ್ಯಾರ್ಥಿ ಬಳಗದ ಆಶ್ರಯದಲ್ಲಿ ಅಗಲಿದ ಶಿಕ್ಷಣ ತಜ್ಞ ಡಾ. ಬಿ.ಎಫ್. ದಂಡಿನ ಹಾಗೂ ಶಕುಂತಲಾಬಾಯಿ ದಂಡಿನ ಅವರ ಸ್ಮರಣಾರ್ಥ ಸಾರ್ವಜನಿಕ ನುಡಿನಮನ ಸಭೆ ಹಾಗೂ ಸ್ಮಾರಕ ಭವನದ ಭೂಮಿಪೂಜೆ ಕಾರ್ಯಕ್ರಮ ಆಗಸ್ಟ್ 5ರಂದು ಬೆಳಿಗ್ಗೆ 10.30ಕ್ಕೆ ನಗರದ ಗಾಣಿಗ ಭವನದಲ್ಲಿ ನಡೆಯಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದರು.

ಸೋಮವಾರ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎನ್. ಕಾಮನಹಳ್ಳಿ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಮಹಾಸಂಸ್ಥಾನದ ನಿರಂಜನಾನಂದ ಪುರಿ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಾಧೀಶರು ವಹಿಸಲಿದ್ದು, ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಡಾ. ಡಿ.ಬಿ. ಗವಾನಿ ಮಾತನಾಡಿ, ಡಾ. ಬಿ.ಎಫ್. ದಂಡಿನ ಅವರು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ನೀಡಿದ ಮಹನೀಯರು. ಅವರ ಸೇವೆಯನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ಸ್ಮಾರಕ ಭವನ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಹಾಲುಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಮಾತನಾಡಿ, ಶಿಕ್ಷಕರಾಗಿ ಆರಂಭಿಸಿದ ಡಾ. ದಂಡಿನ ಅವರು 65ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಜೀವನದ ಕೊನೆಯ ಕ್ಷಣದವರೆಗೂ ಶಿಕ್ಷಣ ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಬದುಕಿದ ಅವರ ಆದರ್ಶ ಸಮಾಜಕ್ಕೆ ಮಾದರಿಯಾಗಿದೆ ಎಂದು ಸ್ಮರಿಸಿದರು.

ಸುದ್ದಿಗೋಷ್ಠಿಯಲ್ಲಿ ರವಿ ದಂಡಿನ, ಪ್ರೊ. ಅನಿಲ ವೈದ್ಯ, ಡಾ. ಎನ್.ಎಂ. ಅಂಬನಿ, ಬಸವರಾಜ ಬಿಂಗಿ, ಯಲ್ಲಪ್ಪ ಗುರಿಕಾರ ಹಾಗೂ ವೈ.ಡಿ. ಜಡದೇಲಿ ಉಪಸ್ಥಿತರಿದ್ದರು.

ಜಕ್ಕಲಿ ಮಾರ್ಗವಾಗಿ ರೋಣ–ಬೆಂಗಳೂರು ಬಸ್ ಸಂಚಾರ ಪುನರಾರಂಭ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮ ಮಾರ್ಗವಾಗಿ ರೋಣ–ಬೆಂಗಳೂರು ಬಸ್ ಸೇವೆ ಸೋಮವಾರದಿಂದ ಪುನರಾರಂಭಗೊಂಡಿದ್ದು, ಹಲವು ವರ್ಷಗಳ ಸಾರ್ವಜನಿಕರ ಹೋರಾಟಕ್ಕೆ ಕೊನೆಗೂ ಯಶಸ್ಸು ದೊರೆತಿದೆ. ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಚಾಲಕ ಹಾಗೂ ನಿರ್ವಾಹಕರಿಗೆ ಮಾಲಾರ್ಪಣೆ ಮಾಡಿ ಆತ್ಮೀಯವಾಗಿ ಸ್ವಾಗತಿಸಿದರು.

ಕೋವಿಡ್-19 ಅವಧಿಯಲ್ಲಿ ಸ್ಥಗಿತಗೊಂಡಿದ್ದ ಈ ಬಸ್ ಸೇವೆಯಿಂದ ಜಕ್ಕಲಿ, ನರೇಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಬೆಂಗಳೂರಿಗೆ ತೆರಳಲು ಗದಗ, ಹಾವೇರಿ ಅಥವಾ ಹುಬ್ಬಳ್ಳಿಗೆ ತೆರಳಿ ಬಸ್ ಹತ್ತಬೇಕಾದ ಅನಿವಾರ್ಯತೆ ಎದುರಾಗಿತ್ತು.

ಬಸ್ ಸೇವೆ ಪುನರಾರಂಭಕ್ಕೆ ಆಗ್ರಹಿಸಿ ಜಕ್ಕಲಿ ಬಸ್ ಹೋರಾಟಗಾರರ ಸಮಿತಿ ಹಲವು ಬಾರಿ ರೋಣ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತ್ತು. ಇತ್ತೀಚೆಗೆ ಜಿಲ್ಲೆಯ ಜನಪ್ರತಿನಿಧಿಗಳ ಮಧ್ಯಪ್ರವೇಶದ ಬಳಿಕ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಬಸ್ ಸೇವೆ ಪುನರಾರಂಭಿಸಲು ಒಪ್ಪಿಗೆ ನೀಡಿದರು.

ಬಸ್ ಆಗಮಿಸಿದ ವೇಳೆ ಗ್ರಾಮಸ್ಥರು ತೆಂಗಿನಕಾಯಿ ಒಡೆದು, ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಬಳಿಕ ಚಾಲಕ ಮತ್ತು ನಿರ್ವಾಹಕರಿಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಬಸ್ ಸೇವೆ ಪುನರಾರಂಭಗೊಂಡಿರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಬೆಂಗಳೂರಿಗೆ ತೆರಳುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೀರಭದ್ರಪ್ಪ ಗಾಣಿಗೇರ, ಅನಿಲಕುಮಾರ ಹೊಸಮನಿ, ವಿನಾಯಕ ಉಮತಾರ, ಅನಿಲಕುಮಾರ ತಳವಾರ, ಮಂಜುನಾಥ ವಾಲಿ, ಜಗದೀಶ ಪಲ್ಲೇದ, ಸಂತೋಷ ಕೋರಿ, ಮಲ್ಲಪ್ಪ ಪಲ್ಲೇದ, ಪ್ರಕಾಶ ವಾಲಿ, ಎಸ್.ಕೆ. ತಮ್ಮಿನಾಳ, ರಮೇಶ ತಳವಾರ, ವೀರೇಶ ಪಟ್ಟಣಶೆಟ್ಟಿ, ಮಂಜುನಾಥ ಪಲ್ಲೇದ, ಗೌಸುಸಾಬ ನಮಾಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಠಾಣೆ ಸಾವು ಪ್ರಕರಣಕ್ಕೆ ನ್ಯಾಯಾಂಗ ತನಿಖೆಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಖಲೀಲುಲ್ಲಾ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ, ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು ಎಂದು ಸಿಪಿಐ(ಎಂ) ಹಾಗೂ ಸಿಐಟಿಯು ಮುಖಂಡರು ಆಗ್ರಹಿಸಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಉಪತಹಶೀಲ್ದಾರ್ ಕೆ. ಶಿವಕುಮಾರ ಗೌಡ ಅವರಿಗೆ ತಹಶೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಿಐಟಿಯು ಮುಖಂಡ ಆರ್.ಎಸ್. ಬಸವರಾಜ್, ವಿಜಯನಗರ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಪೊಲೀಸ್ ಠಾಣೆಯಲ್ಲಿ ಲಾಕಪ್ ಸಾವು ಸಂಭವಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸ ಕುಸಿದಿದ್ದು, ಅನ್ಯಾಯವಾದಾಗ ಠಾಣೆಗೆ ಹೋಗುವುದಕ್ಕೂ ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಸಿಪಿಐ(ಎಂ) ಮುಖಂಡ ಜಗನ್ನಾಥ್ ಮಾತನಾಡಿ, ಕುಟುಂಬ ಕಲಹದ ಹಿನ್ನೆಲೆಯಲ್ಲಿ ಠಾಣೆಗೆ ಕರೆತರಲಾಗಿದ್ದ ಮೆಹಬೂಬ್ ನಗರದ ಕಟ್ಟಡ ಕಾರ್ಮಿಕ ಖಲೀಲುಲ್ಲಾ ಮೇಲೆ ಹಲ್ಲೆ ನಡೆಸಿದ ಪರಿಣಾಮವೇ ಅವರು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದ್ದರಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸತ್ಯಾಂಶ ಹೊರತರಬೇಕು ಎಂದು ಒತ್ತಾಯಿಸಿದರು.

ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಬಿ. ಮಾಳಮ್ಮ ಮಾತನಾಡಿ, ಇಲಾಖೆಯ ತನಿಖೆಯಿಂದ ನ್ಯಾಯ ಸಿಗುವ ವಿಶ್ವಾಸ ಇಲ್ಲ. ಬಡ ಕುಟುಂಬದ ಆಧಾರಸ್ತಂಭವಾಗಿದ್ದ ಖಲೀಲುಲ್ಲಾ ಸಾವಿನಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ₹50 ಲಕ್ಷ ಪರಿಹಾರ ನೀಡಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆ. ರಮೇಶ್, ಸರ್ದಾರ್ ಹುಲಿಗೆಮ್ಮ, ಕೆ. ಗಾಳೆಪ್ಪ, ಕೆ. ಬಸವರಾಜ, ರಂಗಪ್ಪ ದಾಸರ, ಪಿ. ಚಾಂದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

“ಅನ್ಯಾಯಕ್ಕೊಳಗಾದ ಜನರು ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಹೋಗುವುದೇ ತಪ್ಪಾ ಎಂಬ ಪ್ರಶ್ನೆ ಇಂದು ಸಾರ್ವಜನಿಕರನ್ನು ಕಾಡುತ್ತಿದೆ. ಖಲೀಲುಲ್ಲಾ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.”

– ಆರ್.ಎಸ್. ಬಸವರಾಜ್, ಸಿಐಟಿಯು ಮುಖಂಡ

ಚರಂಡಿ ನೀರಿಗೆ 160 ಎಕರೆ ಜಮೀನು ಬಲಿ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಚರಂಡಿ ನೀರು ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿ ಸುಮಾರು 160 ಎಕರೆ ಫಲವತ್ತಾದ ಕೃಷಿ ಭೂಮಿ ಹಲವು ವರ್ಷಗಳಿಂದ ಪಾಳು ಬೀಳುತ್ತಿದ್ದು, ಸಮಸ್ಯೆ ಪರಿಹರಿಸದಿದ್ದರೆ ಒಂದು ವಾರದ ಬಳಿಕ ಪಾಳಾ–ಬದಾಮಿ ರಾಜ್ಯ ಹೆದ್ದಾರಿ ತಡೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಪುರಸಭೆಗೆ ಮನವಿ ಸಲ್ಲಿಸಿದ ರೈತರು, ಕಳೆದ ಹಲವು ವರ್ಷಗಳಿಂದ ಪಟ್ಟಣದ ಚರಂಡಿ ನೀರು ಲಂಡಿಹಳ್ಳದ ಮೂಲಕ ಹರಿದು ಹೊಲಗಳಿಗೆ ಸೇರುತ್ತಿದ್ದು, ಜಮೀನಿನಲ್ಲಿ ಆಳೆತ್ತರದ ಜವುಳು ಮತ್ತು ಕಸ ಬೆಳೆದು ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ರೈತ ಮುಖಂಡ ಮಂಜುನಾಥ ಮಾಗಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಂಗಪ್ಪ ಪ್ಯಾಟಿ ಹಾಗೂ ಮುತ್ತಣ್ಣ ಗಡೆಪ್ಪನವರ ಮಾತನಾಡಿ, ಕಳೆದ ತಿಂಗಳು ಮನವಿ ಸಲ್ಲಿಸಿದಾಗ ಒಂದು ವಾರದಲ್ಲಿ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಲಾಗಿತ್ತು. ಆದರೆ 15 ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಮತ್ತೊಮ್ಮೆ ಮನವಿ ಸಲ್ಲಿಸಲಾಗಿದ್ದು, ಒಂದು ವಾರದೊಳಗೆ ರೈತರು ಹಾಗೂ ಸಂಬಂಧಿತ ಅಧಿಕಾರಿಗಳ ಸಭೆ ಕರೆದು ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಸಮಗ್ರ ರೈತರು ಸೇರಿ ಲಕ್ಷ್ಮೇಶ್ವರ ಮೂಲಕ ಹಾದು ಹೋಗುವ ಪಾಳಾ–ಬದಾಮಿ ರಾಜ್ಯ ಹೆದ್ದಾರಿಯನ್ನು ತಡೆದು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ ಅವರಿಗೆ ರೈತರು ಮನವಿ ಸಲ್ಲಿಸಿದರು. ರೈತ ಮುಖಂಡರಾದ ಸಿದ್ದಣ್ಣ ಹವಳದ, ಯಲ್ಲಪ್ಪ ಗಡೆಪ್ಪನವರ, ಸಿದ್ದು ಚಿಕ್ಕಣ್ಣವರ, ಲೋಹಿತ ಹಳೆಮನಿ, ಮಾಂತೇಶ ಲಿಂಗಶೆಟ್ಟಿ, ಮೌನೇಶ ಗಡೆಪ್ಪನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಹಲವು ವರ್ಷಗಳಿಂದ ಫಲವತ್ತಾದ ಭೂಮಿ ಚರಂಡಿ ನೀರಿನಿಂದ ಹಾಳಾಗುತ್ತಿದೆ. ಇನ್ನೂ ನಿರ್ಲಕ್ಷ್ಯ ಮುಂದುವರಿದರೆ ರೈತರು ರಸ್ತೆಗಿಳಿದು ಹೋರಾಟ ನಡೆಸುವುದು ಅನಿವಾರ್ಯ.”

– ಮಂಜುನಾಥ ಮಾಗಡಿ, ರೈತ ಮುಖಂಡ

ಅಧಿಕಾರಿಗಳ ದರ್ಪಕ್ಕೆ ರೈತರ ಆಕ್ರೋಶ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತದ ಅಧಿಕಾರಶಾಹಿ ಧೋರಣೆ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಬಸವರಾಜ ಸವಳಿ ಹೇಳಿದರು.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಟುಮಚಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೆಳೆ ವೀಕ್ಷಣೆಗೆ ಬಂದ ಅಧಿಕಾರಿಗಳು ರೈತರೊಂದಿಗೆ ನಿರ್ಲಕ್ಷ್ಯವಾಗಿ ವರ್ತಿಸಿದ್ದು, ಕಾಟಾಚಾರಕ್ಕೆ ಬೆಳೆ ವೀಕ್ಷಣೆ ನಡೆಸಿದ್ದಾರೆ ಎಂದು ಆರೋಪಿಸಿದರು.

ಜುಲೈ 21ರಂದು ಬೆಳೆ ವಿಮೆ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಹೋದ ವೇಳೆ ರೈತರೊಂದಿಗೆ ಅವಮಾನಕರವಾಗಿ ವರ್ತಿಸಿ ಪೊಲೀಸರನ್ನು ಕರೆಸುವ ಮೂಲಕ ಅಧಿಕಾರದ ದರ್ಪ ಪ್ರದರ್ಶಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

2025-26ನೇ ಸಾಲಿನ ಬೆಳೆ ಹಾನಿಗೆ ಸಮರ್ಪಕ ಪರಿಹಾರ ನೀಡಬೇಕು, ಗದಗ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರೈತರ ಸಮಸ್ಯೆಗಳಿಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ನರಗುಂದ ಬಂಡಾಯದ ಮಾದರಿಯಲ್ಲೇ ಗದಗ ಜಿಲ್ಲೆಯಲ್ಲೂ ರೈತರ ಬೃಹತ್ ಹೋರಾಟಕ್ಕೆ ನಾಂದಿ ಹಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಗಮೇಶ ಪವಾಡಶೆಟ್ಟಿ, ವಿಜಯಕುಮಾರ ಸುಂಕದ, ಮುತ್ತನಗೌಡ ಚೌಡರಡ್ಡಿ, ವೀರಪ್ಪ ಕಾಳಗಿ, ಮುತ್ತಪ್ಪ ಜಗಲ್, ಯಲ್ಲಪ್ಪ ಗುರಿಕಾರ, ಗುರುಲಿಂಗಪ್ಪ ತಿಪ್ಪಶೆಟ್ಟಿ ಹಾಗೂ ಶರಣಪ್ಪ ಫಕ್ಕೀರಪ್ಪ ಉಪಸ್ಥಿತರಿದ್ದರು.


ಠಾಣೆಯಲ್ಲೇ ಯುವಕ ಸಾವು!? ಖಾಕಿಗೆ ಕಂಟಕ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ವಶದಲ್ಲಿದ್ದ ಯುವಕ ಮೃತಪಟ್ಟಿರುವ ಘಟನೆ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಿ ಎಫ್‌ಐಆರ್ ದಾಖಲಿಸಲಾಗಿದೆ.

ಪಟ್ಟಣದ ಮೆಹಬೂಬನಗರ ನಿವಾಸಿ ಖಲೀಲುಲ್ಲಾ (38) ಎಂಬಾತ ಶನಿವಾರ ರಾತ್ರಿ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪತ್ನಿ 112 (ERSS)ಗೆ ನೀಡಿದ ದೂರಿನ ಮೇರೆಗೆ ಪೊಲೀಸರು ಠಾಣೆಗೆ ಕರೆತಂದಿದ್ದರು. ಈ ವೇಳೆ ಪೊಲೀಸರು ದೈಹಿಕ ಹಲ್ಲೆ ನಡೆಸಿದ ಪರಿಣಾಮ ಖಲೀಲುಲ್ಲಾ ಮೃತಪಟ್ಟಿದ್ದಾರೆ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.

ಠಾಣೆಯಲ್ಲಿ ಅಸ್ವಸ್ಥಗೊಂಡ ಖಲೀಲುಲ್ಲಾ ಅವರನ್ನು ಪೊಲೀಸರು ಮುಂಜಾನೆ ಸುಮಾರು 3 ಗಂಟೆ ವೇಳೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾನ್ಹವಿ ಅವರು ಠಾಣೆಯ ಮುಖ್ಯ ಪೇದೆ ರಾಘವೇಂದ್ರ ಹಾಗೂ ಪೇದೆ ವೆಂಕಟೇಶ್ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನೂ ಅಮಾನತುಗೊಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಡಿಎಸ್ಪಿಗೆ ವಹಿಸಲಾಗಿದ್ದು, ಠಾಣೆಯ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ತಜ್ಞರ ತಂಡದಿಂದ ಪರಿಶೀಲಿಸಲಾಗುತ್ತಿದೆ.

ಘಟನೆ ತಿಳಿಯುತ್ತಿದ್ದಂತೆ ಶಾಸಕ ಕೆ. ನೇಮಿರಾಜ ನಾಯ್ಕ ಆಸ್ಪತ್ರೆಗೆ ಹಾಗೂ ಠಾಣೆಗೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಹರಪನಹಳ್ಳಿ ಅಂಜುಮನ್ ಸಮಿತಿಯ ನೂರ್ ಮಹಮ್ಮದ್ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕೂಡ ಕುಟುಂಬಕ್ಕೆ ಧೈರ್ಯ ತುಂಬಿದರು.

ಇನ್ನೊಂದೆಡೆ, ಬಳ್ಳಾರಿ ವಲಯ ಐಜಿಪಿ ಡಾ. ಹರ್ಷ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಎಸ್‌ಆರ್‌ಪಿ, ಡಿಎಆರ್ ಸೇರಿದಂತೆ ವಿವಿಧ ಠಾಣೆಗಳ ಸುಮಾರು 150ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾನ್ಹವಿ ಅವರು ಭಾನುವಾರ ಹಾಗೂ ಸೋಮವಾರವೂ ಠಾಣೆಯಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದರು.

“ಘಟನೆಗೆ ಸಂಬಂಧಿಸಿದಂತೆ ಮುಖ್ಯ ಪೇದೆ ರಾಘವೇಂದ್ರ ಹಾಗೂ ಪೇದೆ ವೆಂಕಟೇಶ್ ವಿರುದ್ಧ ಎಫ್‌ಐಆರ್ ದಾಖಲಿಸಿ ಅಮಾನತುಗೊಳಿಸಲಾಗಿದೆ. ಡಿಎಸ್ಪಿ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.”

– ಎಸ್. ಜಾನ್ಹವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯನಗರ

ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ; ವಿಶ್ವನಾಥ ಖಾನಾಪೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಜಲಕ್ಷಾಮದ ಆತಂಕ ಎದುರಾಗಿದ್ದು, ಗದಗ ನಗರದ ಭೀಷ್ಮ ಕೆರೆ ಸೇರಿದಂತೆ ಜಿಲ್ಲೆಯ ಎಲ್ಲ ಕೆರೆಗಳನ್ನು ಮಲಪ್ರಭಾ ಹಾಗೂ ತುಂಗಭದ್ರಾ ನದಿಯ ನೀರಿನಿಂದ ಭರ್ತಿ ಮಾಡಲು ಜಿಲ್ಲಾಡಳಿತ, ನಗರಸಭೆ ಹಾಗೂ ನೀರಾವರಿ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಆಗ್ರಹಿಸಿದ್ದಾರೆ.

ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಜಿಲ್ಲೆಯಲ್ಲಿರುವ 32 ಕೆರೆಗಳಿಗೆ ನೀರು ತುಂಬಿಸಿದರೆ ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗುವುದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ಬಹುತೇಕ ನಿವಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಗದಗ ನಗರದ ಮಧ್ಯಭಾಗದಲ್ಲಿರುವ ಭೀಷ್ಮ ಕೆರೆಯಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಅದನ್ನು ಕೂಡಲೇ ತುಂಬಿಸಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆಬಾವಿ ಹಾಗೂ ಬಾವಿಗಳಲ್ಲಿ ನೀರಿನ ಸಂಗ್ರಹ ವೃದ್ಧಿಯಾಗಲಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕನಿಷ್ಠ ಆರು ತಿಂಗಳವರೆಗೆ ನೀರಿನ ಸಮಸ್ಯೆ ತಪ್ಪಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ಕುರಿತು ಈಗಾಗಲೇ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಜನಪ್ರತಿನಿಧಿಗಳು ಈ ಯೋಜನೆಯನ್ನು ಗದಗ ಜಿಲ್ಲೆಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದಾರೆ.

“ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಿದರೆ ರೈತರಿಗೆ ನೀರಾವರಿ ಸೌಲಭ್ಯ ಹೆಚ್ಚುವುದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆಯೂ ಗಣನೀಯವಾಗಿ ಕಡಿಮೆಯಾಗಲಿದೆ.”

– ವಿಶ್ವನಾಥ ಖಾನಾಪೂರ, ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ

ವಿದ್ಯಾರ್ಥಿನಿ ವೀಣಾ ಹಾನಾಪೂರ ಪ್ರಕರಣಕ್ಕೆ ಹೊಸ ತಿರುವು?

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಡಾ. ವೀಣಾ ಹಾನಾಪೂರ ಅವರ ಸಂಶಯಾಸ್ಪದ ಸಾವಿನ ಪ್ರಕರಣದಲ್ಲಿ ಹೊಸ ಅನುಮಾನಗಳು ಮೂಡಿದ್ದು, ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ಸಿಸಿಟಿವಿ ಕ್ಯಾಮೆರಾಗಳು ಕಳೆದ ಒಂದು ತಿಂಗಳಿಂದ ಕಾರ್ಯನಿರ್ವಹಿಸದಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರನ್ನು ಮೃತ ವಿದ್ಯಾರ್ಥಿನಿಯ ಪಾಲಕರೊಂದಿಗೆ ಭೇಟಿ ಮಾಡಿದ ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ಹಿರಿಯ ವಕೀಲ ರವಿಕಾಂತ ಅಂಗಡಿ, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಸುರಕ್ಷತೆಯ ಹೊಣೆ ಹೊತ್ತಿರುವ ವಿಶ್ವವಿದ್ಯಾಲಯದಲ್ಲಿ ಒಂದು ತಿಂಗಳಿಂದ ಸಿಸಿಟಿವಿ ವ್ಯವಸ್ಥೆ ಸ್ಥಗಿತಗೊಂಡಿರುವುದು ಗಂಭೀರ ಆಡಳಿತಾತ್ಮಕ ವೈಫಲ್ಯವಾಗಿದೆ. ಇಂತಹ ಪ್ರಕರಣದಲ್ಲಿ ಸತ್ಯವನ್ನು ಮುಚ್ಚಿಹಾಕುವ ಯಾವುದೇ ಪ್ರಯತ್ನವನ್ನು ಉತ್ತರ ಕರ್ನಾಟಕ ಮಹಾಸಭಾ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ವಿದ್ಯಾರ್ಥಿನಿಯ ಸಾವಿನಂತಹ ಗಂಭೀರ ಘಟನೆ ನಡೆದಿದ್ದರೂ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳ ಸ್ಪಂದನೆ ತೃಪ್ತಿಕರವಾಗಿಲ್ಲ. ಪ್ರಕರಣದಲ್ಲಿ ಯಾರನ್ನಾದರೂ ರಕ್ಷಿಸುವ ಅಥವಾ ಸಾಕ್ಷ್ಯಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಪ್ರಕರಣವನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಿ, ಡಿಜಿಟಲ್ ಸಾಕ್ಷ್ಯಗಳು, ಮೊಬೈಲ್ ಕರೆ ವಿವರಗಳು, ಸಿಸಿಟಿವಿ ತಾಂತ್ರಿಕ ದಾಖಲೆಗಳು, ವಸತಿ ನಿಲಯದ ಹಾಜರಾತಿ ದಾಖಲೆಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಪಾತ್ರವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಸಿಸಿಟಿವಿ ವ್ಯವಸ್ಥೆ ಕಾರ್ಯನಿರ್ವಹಿಸದಿರುವುದು ಮೇಲ್ನೋಟಕ್ಕೆ ಗಂಭೀರ ಆಡಳಿತಾತ್ಮಕ ಲೋಪವಾಗಿದ್ದು, ಈ ಕುರಿತು ಪ್ರತ್ಯೇಕ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಗೃಹ ಸಚಿವರನ್ನು ಭೇಟಿ ಮಾಡಿ ಯಾವುದೇ ಪ್ರಭಾವಕ್ಕೆ ಅವಕಾಶ ನೀಡದೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಕುಲಪತಿ, ರಿಜಿಸ್ಟ್ರಾರ್, ವಸತಿ ನಿಲಯದ ವಾರ್ಡನ್ ಸೇರಿದಂತೆ ಕರ್ತವ್ಯಲೋಪ ಎಸಗಿರುವುದು ಸಾಬೀತಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಡಾ. ವೀಣಾ ಹಾನಾಪೂರ ಅವರ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ರವಿಕಾಂತ ಅಂಗಡಿ ಸ್ಪಷ್ಟಪಡಿಸಿದರು.

“ಒಂದು ತಿಂಗಳಿಂದ ಸಿಸಿಟಿವಿ ಕಾರ್ಯನಿರ್ವಹಿಸದಿರುವುದು ಸಾಮಾನ್ಯ ಲೋಪವಲ್ಲ. ವೀಣಾ ಹಾನಾಪೂರ ಪ್ರಕರಣದ ಸತ್ಯ ಹೊರಬರಲು ನಿಷ್ಪಕ್ಷಪಾತ ತನಿಖೆಯೇ ಏಕೈಕ ಮಾರ್ಗ.”

– ರವಿಕಾಂತ ಅಂಗಡಿ, ರಾಜ್ಯಾಧ್ಯಕ್ಷರು, ಉತ್ತರ ಕರ್ನಾಟಕ ಮಹಾಸಭಾ