Home Blog

‘ಈ ಗೆಳೆಯ ಶಾಶ್ವತ ಅಧ್ಯಾಯ’: ರಕ್ಷಿತ್ ಹುಟ್ಟುಹಬ್ಬಕ್ಕೆ ರಿಷಬ್ ಪೋಸ್ಟ್ ವೈರಲ್

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಆದರೆ ಎಲ್ಲರ ಗಮನ ಸೆಳೆದಿದ್ದು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಂಚಿಕೊಂಡ ವಿಶೇಷ ಪೋಸ್ಟ್.

ರಕ್ಷಿತ್ ಮತ್ತು ರಿಷಬ್ ನಡುವಿನ ಸ್ನೇಹ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಪ್ರಸಿದ್ಧವಾಗಿದೆ. ಆದರೂ ಇತ್ತೀಚೆಗೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಇದೇ ವೇಳೆ ರಿಷಬ್ ಶೆಟ್ಟಿ ಹಂಚಿಕೊಂಡಿರುವ ಭಾವನಾತ್ಮಕ ಪೋಸ್ಟ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

‘ಕಿರಿಕ್ ಪಾರ್ಟಿ’ ದಿನಗಳ ಹಳೆಯ ಫೋಟೋ ಹಂಚಿಕೊಂಡಿರುವ ರಿಷಬ್, “ಬಂದು ಹೋಗುವ ಜನರ ಮಧ್ಯೆ ಈ ಗೆಳೆಯ ಶಾಶ್ವತ ಅಧ್ಯಾಯವಾಗಿದ್ದಾನೆ” ಎಂದು ಬರೆದು ರಕ್ಷಿತ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಈ ಸಾಲುಗಳು ಇಬ್ಬರ ನಡುವಿನ ಸ್ನೇಹ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ಮತ್ತೆ ಸಾಬೀತುಪಡಿಸಿವೆ.

ಪೋಸ್ಟ್ ಪ್ರಕಟವಾದ ಕೆಲವೇ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ‘ಸ್ನೇಹಕ್ಕೆ ಇದಕ್ಕಿಂತ ದೊಡ್ಡ ಉತ್ತರ ಬೇಕಿಲ್ಲ’ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಇದರ ಜೊತೆಗೆ ರಕ್ಷಿತ್ ಶೆಟ್ಟಿ ಅವರ ಮುಂದಿನ ಸಿನಿಮಾ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ರಿಷಬ್, “ಅವರು ಶೀಘ್ರದಲ್ಲೇ ಮರಳಲಿದ್ದಾರೆ” ಎಂದು ಹೇಳಿದ್ದು, ಹೊಸ ಸಿನಿಮಾ ಘೋಷಣೆಯ ನಿರೀಕ್ಷೆಯಲ್ಲಿರುವ ಅಭಿಮಾನಿಗಳಿಗೆ ಪರೋಕ್ಷ ಸುಳಿವು ನೀಡಿದಂತಾಗಿದೆ.

CET 2026 Result: ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ: ನೋಡುವುದು ಹೇಗೆ? ಡೈರೆಕ್ಟ್ ಲಿಂಕ್ ಇಲ್ಲಿದೆ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಅಧಿಕೃತವಾಗಿ ಪ್ರಕಟಿಸಿದೆ.

ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹಾಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಮಧ್ಯಾಹ್ನ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪರೀಕ್ಷೆಯ ಒಟ್ಟಾರೆ ವಿವರಗಳು ಹಾಗೂ ವಿವಿಧ ವಿಭಾಗಗಳ ಸಾಧನೆ ಕುರಿತ ಮಾಹಿತಿಯನ್ನೂ ಹಂಚಿಕೊಳ್ಳಲಾಯಿತು.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರ ಮಾಹಿತಿ ಪ್ರಕಾರ, ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಆನ್‌ಲೈನ್ ಮೂಲಕ ತಮ್ಮ ಫಲಿತಾಂಶ, ರ‍್ಯಾಂಕ್ ಹಾಗೂ ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಬಹುದಾಗಿದೆ.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಂದೇ ವೇಳೆ ವೆಬ್‌ಸೈಟ್‌ಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಸರ್ವರ್ ಮೇಲಿನ ಒತ್ತಡ ಕಡಿಮೆ ಮಾಡಲು ಕೆಇಎ ಹಲವು ಅಧಿಕೃತ ವೆಬ್‌ಸೈಟ್‌ಗಳನ್ನು ಫಲಿತಾಂಶ ವೀಕ್ಷಣೆಗೆ ಲಭ್ಯಗೊಳಿಸಿದೆ.

ಫಲಿತಾಂಶ ಪರಿಶೀಲಿಸುವ ವಿಧಾನ

  • ಕೆಇಎ ಸೂಚಿಸಿರುವ ಯಾವುದೇ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣಿಸುವ “UGCET 2026 Result” ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು (Registration Number) ನಮೂದಿಸಿ.
  • ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ದೊಡ್ಡ ಅಕ್ಷರಗಳಲ್ಲಿ (Capital Letters) ದಾಖಲಿಸಿ.
  • ‘Submit’ ಬಟನ್ ಒತ್ತಿದ ಬಳಿಕ ಫಲಿತಾಂಶ ಸ್ಕ್ರೀನ್ ಮೇಲೆ ಪ್ರದರ್ಶನವಾಗುತ್ತದೆ.
  • ಸ್ಕೋರ್‌ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ಪಡೆಯಬಹುದು.

ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ಮುಂದಿನ ಕೌನ್ಸೆಲಿಂಗ್, ದಾಖಲೆ ಪರಿಶೀಲನೆ ಹಾಗೂ ಸೀಟು ಹಂಚಿಕೆ ಪ್ರಕ್ರಿಯೆಗಳಲ್ಲಿ KCET ಸ್ಕೋರ್‌ಕಾರ್ಡ್ ಅತ್ಯಂತ ಪ್ರಮುಖ ದಾಖಲೆ ಆಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಫಲಿತಾಂಶದ ಪ್ರತಿಯನ್ನು ಸುರಕ್ಷಿತವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಕೆಇಎ ಸಲಹೆ ನೀಡಿದೆ.

ಫಲಿತಾಂಶ ಪ್ರಕಟಣೆಯೊಂದಿಗೆ ರಾಜ್ಯದ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ವೆಟರ್ನರಿ ಹಾಗೂ ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿದೆ.

ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಭೂಮಿಯ ಮೇಲೆ ಕೇಂದ್ರ ಸರ್ಕಾರದ ಕಣ್ಣು!?

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ 100 ಎಕರೆ ಭೂಮಿಯನ್ನು ಒಲಿಂಪಿಕ್ಸ್ ತರಬೇತಿ ಕೇಂದ್ರ ಸ್ಥಾಪನೆಗಾಗಿ ನೀಡುವಂತೆ ಕೇಂದ್ರ ಸರ್ಕಾರ ಮನವಿ ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಪ್ರಸ್ತಾವನೆಗೆ ವಿಶ್ವವಿದ್ಯಾಲಯ ಆಡಳಿತ ಹಾಗೂ ವಿದ್ಯಾರ್ಥಿ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಸುಮಾರು 1,200 ಎಕರೆ ಪ್ರದೇಶದಲ್ಲಿ ಸ್ಥಾಪನೆಯಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯವು ಕಳೆದ ಹಲವು ದಶಕಗಳಲ್ಲಿ ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸಂಸ್ಥೆಗಳಿಗೆ ಭೂಮಿ ಹಸ್ತಾಂತರಿಸಿರುವ ಪರಿಣಾಮ ತನ್ನ ವ್ಯಾಪ್ತಿಯನ್ನು ಕಳೆದುಕೊಂಡಿದೆ. ಈಗಾಗಲೇ 300ಕ್ಕೂ ಹೆಚ್ಚು ಎಕರೆ ಜಾಗವನ್ನು ವಿವಿಧ ಸಂಸ್ಥೆಗಳಿಗೆ ನೀಡಲಾಗಿದ್ದು, ಕ್ಯಾಂಪಸ್ ವಿಸ್ತೀರ್ಣ ಗಣನೀಯವಾಗಿ ಕಡಿಮೆಯಾಗಿದೆ.

ಇದೀಗ ಜ್ಞಾನಭಾರತಿ ಆವರಣದಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಕೇಂದ್ರಕ್ಕೆ ಹೊಂದಿಕೊಂಡಿರುವ 100 ಎಕರೆ ಭೂಮಿಯನ್ನು ಒಲಿಂಪಿಕ್ಸ್ ತರಬೇತಿ ಕೇಂದ್ರ ನಿರ್ಮಾಣಕ್ಕಾಗಿ ನೀಡುವಂತೆ ಕೇಂದ್ರ ಸರ್ಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಮೂಲಕ ಬೇಡಿಕೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ಆದರೆ, ಈ ಪ್ರಸ್ತಾವನೆಗೆ ವಿಶ್ವವಿದ್ಯಾಲಯ ಆಡಳಿತ ವಿರೋಧ ವ್ಯಕ್ತಪಡಿಸಿದ್ದು, ಈಗಾಗಲೇ ಕ್ಯಾಂಪಸ್ ವಿಸ್ತೀರ್ಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಭೂಮಿ ಹಸ್ತಾಂತರಿಸುವುದು ಶೈಕ್ಷಣಿಕ ಚಟುವಟಿಕೆಗಳಿಗೆ ಹಾನಿಕಾರಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಿದ್ಯಾರ್ಥಿ ಸಮುದಾಯವೂ ಈ ನಿಲುವಿಗೆ ಬೆಂಬಲ ಸೂಚಿಸಿದ್ದು, ಜ್ಞಾನಭಾರತಿ ಆವರಣದಲ್ಲಿರುವ ಭೂಮಿಯನ್ನು ವಿಶ್ವವಿದ್ಯಾಲಯದ ಶೈಕ್ಷಣಿಕ, ಸಂಶೋಧನಾ ಮತ್ತು ವಿದ್ಯಾರ್ಥಿ ಕಲ್ಯಾಣ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು ಎಂದು ಆಗ್ರಹಿಸಿದೆ.

ಕ್ಯಾಂಪಸ್‌ನಲ್ಲಿನ ಹಸಿರು ವಾತಾವರಣ, ಸಂಶೋಧನಾ ಮೂಲಸೌಕರ್ಯ ಹಾಗೂ ಭವಿಷ್ಯದ ವಿಸ್ತರಣಾ ಯೋಜನೆಗಳ ದೃಷ್ಟಿಯಿಂದ ಜಾಗವನ್ನು ಉಳಿಸಿಕೊಳ್ಳುವುದು ಅಗತ್ಯ ಎಂದು ವಿದ್ಯಾರ್ಥಿಗಳು ಮತ್ತು ಕೆಲ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿನಿ ಜೊತೆ ಸಂಬಂಧ ಆರೋಪ: ಪ್ರೊಫೆಸರ್‌ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು

0

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಇದೀಗ ವಿಶ್ವವಿದ್ಯಾಲಯ ಆಡಳಿತದ ಗಮನ ಸೆಳೆದಿದೆ.

ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜ ತಂಗುದೊರೈ ವಿರುದ್ಧ ಪಿಎಚ್‌ಡಿ ವಿದ್ಯಾರ್ಥಿಯೊಬ್ಬ ದೂರು ನೀಡಿದ್ದು, ತಮ್ಮ ಮಾರ್ಗದರ್ಶಕರಿಂದ ನಿರಂತರ ಕಿರುಕುಳ ಮತ್ತು ಒತ್ತಡ ಎದುರಿಸಬೇಕಾಯಿತು ಎಂದು ಆರೋಪಿಸಿದ್ದಾರೆ. ದೂರುದಾರರ ಪ್ರಕಾರ, ಹಿಂದೆ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳೊಂದಿಗೆ ಪ್ರಾಧ್ಯಾಪಕರು ವೈಯಕ್ತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ.

ಆ ವಿದ್ಯಾರ್ಥಿನಿ ವ್ಯಾಸಂಗವನ್ನು ಅರ್ಧದಲ್ಲೇ ನಿಲ್ಲಿಸಿ ತೆರಳಿದ ಬಳಿಕ, ಆಕೆಯನ್ನು ಮತ್ತೆ ಸಂಪರ್ಕಿಸುವಂತೆ ಮತ್ತು ಕರೆಸುವಂತೆ ತಮ್ಮ ಮೇಲೆ ಒತ್ತಡ ಹೇರಲಾಗಿದೆ ಎಂದು ಪಿಎಚ್‌ಡಿ ವಿದ್ಯಾರ್ಥಿ ವೇದವ್ಯಾಸ್ ಚೌಹಾಣ್ ಆರೋಪಿಸಿದ್ದಾರೆ. ಇದಕ್ಕೆ ಒಪ್ಪದಿದ್ದರೆ ಸಂಶೋಧನಾ ಪ್ರಕ್ರಿಯೆಗೆ ಅಡ್ಡಿಪಡಿಸುವ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಸಂಬಂಧ ವಿದ್ಯಾರ್ಥಿ ವಿಶ್ವವಿದ್ಯಾಲಯದ ಕುಲಸಚಿವರಿಗೆ ಹಾಗೂ ವಿದ್ಯಾರ್ಥಿ ಸಂಘಟನೆಗಳಿಗೆ ದೂರು ಸಲ್ಲಿಸಿದ್ದು, ಕೆಲವು ಆಡಿಯೋ ಮತ್ತು ಇತರ ದಾಖಲೆಗಳನ್ನೂ ಒದಗಿಸಿರುವುದಾಗಿ ತಿಳಿದುಬಂದಿದೆ.

ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಧ್ಯಾಪಕ ದೇವರಾಜ ತಂಗುದೊರೈ, “ಇದು ಅಕಾಡೆಮಿಕ್ ವಿಷಯವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟಪಡುವುದಿಲ್ಲ” ಎಂದು ಹೇಳಿದ್ದಾರೆ.

ಪ್ರಕರಣ ಇದೀಗ ವಿಶ್ವವಿದ್ಯಾಲಯದ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಆಡಳಿತ ತೀರ್ಮಾನ ಕೈಗೊಳ್ಳಬೇಕಿದೆ. ವಿದ್ಯಾರ್ಥಿ ಸಂಘಟನೆಗಳು ಮಾತ್ರ ಪ್ರಕರಣದ ಸಮಗ್ರ ತನಿಖೆ ನಡೆಸಿ ಸೂಕ್ತ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿವೆ.

ಜಿ.ಪಂ–ತಾ.ಪಂ ಚುನಾವಣೆ ವಿಳಂಬಕ್ಕೆ ನ್ಯಾಯಾಲಯದ ಕ್ಷಮೆ ಕೇಳಿದ ಸರ್ಕಾರ: ಮೀಸಲಾತಿ ನಿಗದಿಗೆ ಮತ್ತಷ್ಟು ಸಮಯದ ಬೇಡಿಕೆ

ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಜಿಲ್ಲಾ ಪಂಚಾಯಿತಿ (ಜಿ.ಪಂ) ಹಾಗೂ ತಾಲೂಕು ಪಂಚಾಯಿತಿ (ತಾ.ಪಂ) ಚುನಾವಣೆ ನಡೆಸುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ವಿಳಂಬಕ್ಕೆ ರಾಜ್ಯ ಸರ್ಕಾರ ಹೈಕೋರ್ಟ್ ಎದುರು ಕ್ಷಮೆಯಾಚಿಸಿದ್ದು, ಕ್ಷೇತ್ರಗಳ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 8 ವಾರಗಳ ಕಾಲಾವಕಾಶ ಕೋರಿದೆ.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗವು ಸರ್ಕಾರದ ವಿರುದ್ಧ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ ನಡೆಸಿತು.

ರಾಜ್ಯ ಸರ್ಕಾರವು 2023ರ ಡಿಸೆಂಬರ್ 19ರಂದು ಹೈಕೋರ್ಟ್‌ಗೆ ಲಿಖಿತ ಭರವಸೆ ನೀಡಿ, 12 ವಾರಗಳೊಳಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿತ್ತು. ಆದರೆ, ಆ ಭರವಸೆಯನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು 2024ರಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ವಿಚಾರಣೆ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ. ರಂದೀಪ್ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ ವಿಳಂಬದ ಕಾರಣಗಳನ್ನು ವಿವರಿಸಿದರು.

ಪ್ರಮಾಣಪತ್ರದಲ್ಲಿ, ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿಲ್ಲ ಹಾಗೂ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವ ಉದ್ದೇಶವೂ ಇರಲಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದಾಗ್ಯೂ, ಪ್ರಕ್ರಿಯೆ ವಿಳಂಬಗೊಂಡಿರುವುದಕ್ಕೆ ಸರ್ಕಾರದ ಪರವಾಗಿ ಕ್ಷಮೆಯಾಚಿಸಲಾಗಿದೆ.

ಕಂದಾಯ ಇಲಾಖೆಯು ವಿಜಯಪುರ ಜಿಲ್ಲೆಯ ನಾಲ್ಕು ತಾಲೂಕುಗಳು ಹಾಗೂ ಬಾಗಲಕೋಟೆ ಜಿಲ್ಲೆಯ ಕೆಲವು ತಾಲೂಕುಗಳ ಗಡಿಗಳನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಿದ್ದರಿಂದ, ಆ ಭಾಗಗಳ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಗಡಿಗಳನ್ನು ಮರುನಿಗದಿಪಡಿಸುವ ಅಗತ್ಯ ಎದುರಾಯಿತು ಎಂದು ಸರ್ಕಾರ ತಿಳಿಸಿದೆ.

ಈ ಪೈಕಿ ವಿಜಯಪುರ ಜಿಲ್ಲೆಯ ನಾಲ್ಕು ತಾಲೂಕುಗಳ ಕ್ಷೇತ್ರ ಮರುನಿಗದಿ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಆದರೆ ಬಾಗಲಕೋಟೆ ಜಿಲ್ಲೆಯ ತಾಲೂಕುಗಳ ಗಡಿ ಮರುನಿಗದಿ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ 12 ವಾರಗಳ ಅವಧಿ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಇನ್ನುಳಿದ ಜಿಲ್ಲೆಗಳ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆ ಕಾರ್ಯ ಪೂರ್ಣಗೊಂಡಿದ್ದು, ಅವುಗಳಿಗೆ ಮೀಸಲಾತಿ ನಿಗದಿಪಡಿಸಲು 8 ವಾರಗಳ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿದೆ.

ಸರ್ಕಾರದ ಈ ಮನವಿಯನ್ನು ದಾಖಲಿಸಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 11ಕ್ಕೆ ಮುಂದೂಡಿದೆ.

ಅಥಣಿಯಲ್ಲಿ ತಪ್ಪಿದ ಭಾರೀ ಅನಾಹುತ: ಮಳೆ ಅಬ್ಬರಕ್ಕೆ ಧರೆಗುರುಳಿದ ಬೃಹತ್ ಕಟ್ಟಡ

0

ಚಿಕ್ಕೋಡಿ: ಭಾರೀ ಮಳೆಯ ಅಬ್ಬರಕ್ಕೆ ಅಥಣಿ ಪಟ್ಟಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬೃಹತ್ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಟ್ಟಡ ನೆಲಕ್ಕುರುಳುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಈ ಕಟ್ಟಡ ರಾವಸಾಬ ಐಹೊಳೆ ಅವರಿಗೆ ಸೇರಿದ್ದು, ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ.

ಅದೃಷ್ಟವಶಾತ್ ಕಟ್ಟಡ ಕುಸಿಯುವ ವೇಳೆ ಒಳಗಾಗಲಿ, ಸುತ್ತಮುತ್ತಲಿನ ಪ್ರದೇಶದಲ್ಲಾಗಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.

ಸ್ಥಳೀಯರು ಕಟ್ಟಡ ಕುಸಿತದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಅಪಾಯಕಾರಿಯಾಗಿ ನಿಂತಿರುವ ಶಿಥಿಲ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಿರ್ಮಾಪಕರ ವಿರುದ್ಧದ ಮಾನನಷ್ಟ ಮೊಕದ್ದಮೆ: ಇಂದು ಸುದೀಪ್‌ಗೆ ಕೋರ್ಟ್‌ನಲ್ಲಿ ಕ್ರಾಸ್ ಎಕ್ಸಾಮಿನೇಷನ್

ಬೆಂಗಳೂರು: ಸಿನಿಮಾ ಕಾಲ್‌ಶೀಟ್ ವಿವಾದದಿಂದ ಆರಂಭವಾಗಿ ನ್ಯಾಯಾಲಯದ ಮೆಟ್ಟಿಲೇರಿರುವ ಮಾನನಷ್ಟ ಪ್ರಕರಣದಲ್ಲಿ ಇಂದು ನಟ ಸುದೀಪ್ ಮಹತ್ವದ ವಿಚಾರಣೆಗೆ ಹಾಜರಾಗಲಿದ್ದಾರೆ. ಬೆಂಗಳೂರಿನ ಎಸಿಜೆಎಂ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ನಿರ್ಮಾಪಕರ ಪರ ವಕೀಲರು ಸುದೀಪ್ ಅವರನ್ನು ಪ್ರಶ್ನಿಸಲಿದ್ದಾರೆ.

ನಟ ಸುದೀಪ್ ವಿರುದ್ಧ ನಿರ್ಮಾಪಕರಾದ ಎಂ.ಎನ್. ಕುಮಾರ್ ಹಾಗೂ ಎಂ.ಎನ್. ಸುರೇಶ್, ಸಿನಿಮಾ ಕಾಲ್‌ಶೀಟ್ ನೀಡುವುದಾಗಿ ಹೇಳಿ 9 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಆರೋಪ ಮಾಡಿದ್ದರು. ಈ ಆರೋಪಗಳು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಗೌರವಕ್ಕೆ ಧಕ್ಕೆ ತಂದಿವೆ ಎಂದು ಆರೋಪಿಸಿ ಸುದೀಪ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

2023ರಲ್ಲಿ ದಾಖಲಾಗಿದ್ದ ಈ ಪ್ರಕರಣ ಇದೀಗ ಸಾಕ್ಷ್ಯಾಧಾರಗಳ ಹಂತದಲ್ಲಿದ್ದು, ನ್ಯಾಯಾಲಯದಲ್ಲಿ ಪ್ರಮುಖ ದಾಖಲೆಗಳು ಮತ್ತು ಹೇಳಿಕೆಗಳ ಪರಿಶೀಲನೆ ನಡೆಯುತ್ತಿದೆ. ಈ ಹಿಂದೆ ಸುದೀಪ್ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಸಾಕ್ಷ್ಯವನ್ನು ನೀಡಿದ್ದರು.

ಇಂದಿನ ವಿಚಾರಣೆಯಲ್ಲಿ ನಡೆಯಲಿರುವ ಕ್ರಾಸ್ ಎಕ್ಸಾಮಿನೇಷನ್ ಪ್ರಕರಣದ ಮುಂದಿನ ದಿಕ್ಕನ್ನು ನಿರ್ಧರಿಸುವ ಸಾಧ್ಯತೆ ಇದ್ದು, ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಸುದೀಪ್ ಮತ್ತು ನಿರ್ಮಾಪಕರ ನಡುವಿನ ಬಹುಚರ್ಚಿತ ಕಾನೂನು ಹೋರಾಟದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ಎಚ್‌.ಕೆ. ಪಾಟೀಲರಿಗೆ ಅನ್ಯಾಯ: ಕಾರ್ಯಕರ್ತರ ಆಕ್ರೋಶ

ಗದಗ: ರಾಜ್ಯ ರಾಜಕೀಯದಲ್ಲಿ ನಾಲ್ಕು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ, ಗದಗ ಶಾಸಕ ಹಾಗೂ ಮಾಜಿ ಸಚಿವ ಎಚ್. ಕೆ. ಪಾಟೀಲ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದು ಉತ್ತರ ಕರ್ನಾಟಕಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹಿರಿಯ ಮುಖಂಡ ಉಮರ್ ಫಾರೂಕ್ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಚ್‌.ಕೆ. ಪಾಟೀಲ ಅವರು ತಮ್ಮ ರಾಜಕೀಯ ಜೀವನದಲ್ಲಿ ಜವಳಿ, ನೀರಾವರಿ, ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳಂತಹ ಹಲವು ಮಹತ್ವದ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ರಾಜ್ಯದ ಆಡಳಿತ ವ್ಯವಸ್ಥೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಾವಿರಾರು ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಿ ರಾಜ್ಯಕ್ಕೆ ಮಾದರಿಯಾದ ಕಾರ್ಯ ಮಾಡಿದ್ದಾರೆ. 2013ರಿಂದ 2018ರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ವೇಳೆ ಕರ್ನಾಟಕ ಪಂಚಾಯತ್‌ರಾಜ್ ಕ್ಷೇತ್ರದಲ್ಲಿ ಮಾಹಿತಿ ತಂತ್ರಜ್ಞಾನ ಬಳಕೆಗೆ ರಾಷ್ಟ್ರಮಟ್ಟದ ಮಾನ್ಯತೆ ದೊರಕುವಂತೆ ಇಲಾಖೆಯನ್ನು ಮುನ್ನಡೆಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿ ವಿಧಾನಮಂಡಲದ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದು, ಸರ್ಕಾರದ ಅನೇಕ ಮಹತ್ವದ ಮಸೂದೆಗಳನ್ನು ಯಶಸ್ವಿಯಾಗಿ ಮಂಡಿಸಿ ಅಂಗೀಕಾರಗೊಳಿಸುವಲ್ಲಿ ಸಮರ್ಥ ನಾಯಕತ್ವ ತೋರಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ರಾಜ್ಯದ ಗಡಿ ವಿವಾದ, ಕಾನೂನು ಸುಧಾರಣೆ ಹಾಗೂ ಅಕ್ರಮ ಗಣಿಗಾರಿಕೆ ತನಿಖೆ ಸೇರಿದಂತೆ ಹಲವಾರು ಸೂಕ್ಷ್ಮ ವಿಷಯಗಳಲ್ಲಿ ಸರ್ಕಾರದ ಪರವಾಗಿ ಸಮರ್ಥವಾಗಿ ನಿಂತು ಸಂವಿಧಾನಾತ್ಮಕ ನೆಲೆಯಲ್ಲಿ ಸರ್ಕಾರದ ನಿಲುವುಗಳನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಚ್ಛ ರಾಜಕಾರಣಿ, ಅಧ್ಯಯನಶೀಲ ನಾಯಕ ಹಾಗೂ ಆಡಳಿತ ಪರಿಣಿತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಎಚ್‌.ಕೆ. ಪಾಟೀಲ ಅವರು ಕಾಂಗ್ರೆಸ್ ಪಕ್ಷದ ಸಂಕಷ್ಟದ ದಿನಗಳಲ್ಲಿಯೂ ಪಕ್ಷದ ಸಿದ್ಧಾಂತದ ಪರ ದೃಢವಾಗಿ ನಿಂತಿದ್ದಾರೆ. ಇಂತಹ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಉತ್ತರ ಕರ್ನಾಟಕ ಭಾಗದ ಜನರಲ್ಲಿ ಬೇಸರ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಉಮರ್ ಫಾರೂಕ್ ಹುಬ್ಬಳ್ಳಿ ಆಗ್ರಹಿಸಿದ್ದಾರೆ.

ನೊಣವಿನಕೆರೆ ಮಠಕ್ಕೆ ಡಿಕೆಶಿ ಭೇಟಿ: ಆರಾಧ್ಯ ದೈವ ಅಜ್ಜಯ್ಯನ ಸನ್ನಿಧಿಯಲ್ಲಿ ವಿಶೇಷ ಪೂಜೆ

0

ತುಮಕೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ತಮ್ಮ ಆರಾಧ್ಯ ದೈವ ಅಜ್ಜಯ್ಯನ ಪೀಠದಲ್ಲಿ ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆಯಲಿದ್ದಾರೆ.

ಧಾರ್ಮಿಕ ಆಚರಣೆಗಳು ಮತ್ತು ದೇವಸ್ಥಾನ ಭೇಟಿಗಳಿಗೆ ಹೆಚ್ಚಿನ ಮಹತ್ವ ನೀಡುವ ಡಿ.ಕೆ. ಶಿವಕುಮಾರ್, ಇತ್ತೀಚೆಗೆ ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿಯ ದರ್ಶನ ಪಡೆದ ಬೆನ್ನಲ್ಲೇ ಇದೀಗ ನೊಣವಿನಕೆರೆ ಮಠದತ್ತ ಮುಖ ಮಾಡಿದ್ದಾರೆ.

ಸಂಜೆ 5 ಗಂಟೆಗೆ ಮಠಕ್ಕೆ ಆಗಮಿಸಲಿರುವ ಅವರು, ರಾತ್ರಿ 8 ಗಂಟೆಯವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಲಿದ್ದಾರೆ. ಮಠದ ಪೂಜಾ ವಿಧಾನಗಳ ಪ್ರಕಾರ ವಿಶೇಷ ಸೇವೆಗಳನ್ನು ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿದೆ.

ಈ ಭೇಟಿ ಮೇ 28ರಂದು ನಿಗದಿಯಾಗಿದ್ದರೂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಮರುನಿಗದಿಯಂತೆ ಡಿ.ಕೆ. ಶಿವಕುಮಾರ್ ಮಠಕ್ಕೆ ಭೇಟಿ ನೀಡುತ್ತಿದ್ದಾರೆ.

ಇತ್ತೀಚೆಗೆ ಕಾಡಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಕುರಿತು ಮಾತನಾಡಿ, ಅವರು ಜನಪರ ನಾಯಕನಾಗಿ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಆಶೀರ್ವಾದ ವ್ಯಕ್ತಪಡಿಸಿದ್ದರು. ಇದೇ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಈ ಭೇಟಿ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಗಮನ ಸೆಳೆದಿದೆ.

ನನ್ನ ನಿರ್ಧಾರವನ್ನು ಈಗಾಗಲೇ ತಿಳಿಸಿದ್ದೇನೆ, ಏನು ಮಾಡ್ತಾರೆ ನೋಡೋಣ: ತಮ್ಮ ನಿಲುವು ಬಹಿರಂಗಪಡಿಸದ ರಾಮಲಿಂಗಾರೆಡ್ಡಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದೊಳಗಿನ ಅಸಮಾಧಾನ ಬಹಿರಂಗಗೊಂಡಿದ್ದು, ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಖಾತೆ ಹಂಚಿಕೆ ಕುರಿತ ಅಸಮಾಧಾನ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಮಲಿಂಗಾರೆಡ್ಡಿ, “ನನ್ನ ನಿರ್ಧಾರವನ್ನು ಈಗಾಗಲೇ ತಿಳಿಸಿದ್ದೇನೆ. ಮುಂದೆ ಏನು ಮಾಡುತ್ತಾರೆ ಎಂಬುದನ್ನು ನೋಡೋಣ” ಎಂದು ಪ್ರತಿಕ್ರಿಯಿಸಿದ್ದಾರೆ.

ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಡರಾತ್ರಿವರೆಗೂ ಮನವೊಲಿಕೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕಾಂಗ್ರೆಸ್ ನಾಯಕರು ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ.

ಈ ಬೆಳವಣಿಗೆಗಳ ಬಳಿಕ ಅಂತಿಮ ನಿರ್ಧಾರವನ್ನು ಇಂದು ತಿಳಿಸುವುದಾಗಿ ರಾಮಲಿಂಗಾರೆಡ್ಡಿ ಹೇಳಿದ್ದರು. ಇದರ ನಡುವೆಯೇ ಅವರು ತಮ್ಮ ನಿವಾಸಕ್ಕೆ ಬೆಂಬಲಿಗರನ್ನು ಆಹ್ವಾನಿಸಿ ಮಹತ್ವದ ಸಭೆ ನಡೆಸಿದ್ದಾರೆ.

ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಸೇರಿದಂತೆ ಹಲವು ಬೆಂಬಲಿಗರು ರಾಮಲಿಂಗಾರೆಡ್ಡಿ ಅವರ ಕೊರಮಂಗಲ ನಿವಾಸಕ್ಕೆ ಭೇಟಿ ನೀಡಿ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಬೆಂಬಲಿಗರ ಅಭಿಪ್ರಾಯಗಳನ್ನು ಆಲಿಸಿದ ಬಳಿಕ ಮುಂದಿನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಹಿಂಪಡೆಯುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ಬಹುತೇಕ ವಾಪಸ್ ಪಡೆಯಲು ಒಲವು ತೋರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಈ ಕುರಿತು ಇನ್ನೂ ಯಾವುದೇ ಅಧಿಕೃತ ಘೋಷಣೆ ಹೊರಬಂದಿಲ್ಲ.

ಇನ್ನೊಂದೆಡೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವೊಲಿಕೆ ಪ್ರಯತ್ನದ ನಂತರ ರಾಮಲಿಂಗಾರೆಡ್ಡಿ ಅವರು ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯಲಿದ್ದಾರೆಯೇ ಅಥವಾ ಬೇರೆ ಯಾವುದೇ ತೀರ್ಮಾನ ಕೈಗೊಳ್ಳಲಿದ್ದಾರೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

error: Content is protected !!